ದರ್ಶನ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್ ಇದೀಗ ಕಾನೂನು ಕ್ರಮದ ಹಂತ ತಲುಪಿದ್ದು, ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದ ಬಳಸಿ ನಿಂದಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಾದ ನಾಗರಾಜ್ ತಳವಾರ ಮತ್ತು ಪ್ರಶಾಂತ್ ತಳವಾರ ಕ್ರಮವಾಗಿ ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ಮ್ಯಾನೇಜರ್ ಹಾಗೂ ಧಾರವಾಡದ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದರು. ಇವರ ಬಂಧನದೊಂದಿಗೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆ ಚಂದ್ರು ಎಂಬ ಚಿಕ್ಕಬಾಣಾವರದ ಆಟೋ ಚಾಲಕ ಹಾಗೂ ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳನ್ನು ಬಳಸಿ ವಿಜಯಲಕ್ಷ್ಮಿ ದರ್ಶನ್ ಅವರನ್ನು ಗುರಿಯಾಗಿಸಿಕೊಂಡಿದ್ದವರ ವಿರುದ್ಧ ತನಿಖೆ ಮುಂದುವರಿದಿದೆ.
ಅಶ್ಲೀಲ ಕಾಮೆಂಟ್ಗಳ ಸ್ಕ್ರೀನ್ಶಾಟ್ಗಳನ್ನು ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಬಳಿಕ ಅಧಿಕೃತವಾಗಿ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ನಂತರವೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅವರು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಪ್ರಕರಣವು ಈ ಮೊದಲು ನಟಿ ರಮ್ಯಾ ವಿರುದ್ಧ ನಡೆದ ಸಾಮಾಜಿಕ ಜಾಲತಾಣದ ಅಶ್ಲೀಲ ಕಮೆಂಟ್ ಪ್ರಕರಣವನ್ನು ನೆನಪಿಸುವಂತಿದ್ದು, ಆ ವೇಳೆ ಕೂಡ ಪೊಲೀಸರು ತ್ವರಿತ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದರು. ಈಗ ವಿಜಯಲಕ್ಷ್ಮಿ ದರ್ಶನ್ ಪ್ರಕರಣದಲ್ಲೂ ಸಿಸಿಬಿ ತನಿಖೆ ಚುರುಕುಗೊಂಡಿದ್ದು, ಇನ್ನಷ್ಟು ಬಂಧನಗಳ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

