ಹುಬ್ಬಳ್ಳಿ: ಮರ್ಯಾದೆ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ಹತ್ಯೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಕಾನೂನು ತರುವುದಕ್ಕಿಂತ, ಈಗಾಗಲೇ ಜಾರಿಯಲ್ಲಿರುವ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಹಿರಿಯ ನಾಯಕ ಚೆಲುವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರ ರಕ್ಷಣೆಗೆ ಅನೇಕ ಕಾನೂನುಗಳಿವೆ. ಆದರೆ ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಜನರ ಜೀವ ಮತ್ತು ಗೌರವವನ್ನು ರಕ್ಷಿಸುವುದು ಸರ್ಕಾರದ ಪ್ರಾಥಮಿಕ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.
ಮರ್ಯಾದೆ ಹೆಸರಿನಲ್ಲಿ ನಡೆದಿರುವ ಹತ್ಯೆ ಸಮಾಜ ತಲೆ ತಗ್ಗಿಸುವಂತಹ ಘಟನೆ. ಸಮಾಜ ಬಹಳಷ್ಟು ಪ್ರಗತಿ ಸಾಧಿಸಿದ್ದರೂ, ಸಮಾಜವನ್ನು ಅರಿಯದ ಕೆಲವರು ಇಂತಹ ಅಮಾನವೀಯ ಕೃತ್ಯಗಳಲ್ಲಿ ತೊಡಗುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬುದ್ಧ, ಬಸವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ಮಹಾನ್ ಚಿಂತಕರು ಬದುಕಿದ ನಾಡು ಇದು. ಬಸವಣ್ಣನವರು ಜಾತಿರಹಿತ ಸಮಾಜದ ಪರಿಕಲ್ಪನೆಯನ್ನು ಕಟ್ಟಿಕೊಟ್ಟಿದ್ದರು. ಇಂತಹ ನೆಲದಲ್ಲಿ ಮರ್ಯಾದೆ ಹೆಸರಿನಲ್ಲಿ ಹಿಂಸಾಚಾರ ನಡೆಯುವುದು ಅತ್ಯಂತ ದುಃಖಕರ ಸಂಗತಿ ಎಂದು ಹೇಳಿದರು.
ಹೊಸ ಕಾನೂನು ತರುವ ಮೂಲಕ ಸಮಸ್ಯೆ ಬಗೆಹರಿಯುವುದಿಲ್ಲ. ಈಗಿರುವ ಕಾನೂನುಗಳನ್ನು ಕಠಿಣವಾಗಿ ಜಾರಿಗೊಳಿಸಿದರೆ ಮಾತ್ರ ಇಂತಹ ಘಟನೆಗಳನ್ನು ತಡೆಯಲು ಸಾಧ್ಯ ಎಂದು ಚೆಲುವಾದಿ ನಾರಾಯಣಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

