Home Blog Page 235

ಅಕ್ರಮ ಮರಳು ಗಣಿಗಾರಿಕೆ ಪ್ರಕರಣ: ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲು, ಸರ್ಕಾರಕ್ಕೆ ನೋಟಿಸ್

0

ಬೆಂಗಳೂರು: ರಾಜ್ಯದ ಎಲ್ಲ ರಾಜಕೀಯ ಪಕ್ಷಗಳಲ್ಲಿನ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿಧಾನಸಭಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ ಆರೋಪ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಿಕೊಂಡಿದೆ.

ಮರಳು ಮಾಫಿಯಾಗಳ ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ಸರ್ಕಾರ ಅಸಹಾಯಕತೆ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವ ಅಗತ್ಯವಿದೆ ಎಂದು ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ತಾರಾ ವಿತಾಸ್ತ ಗಂಜು ಅವರನ್ನೊಳಗೊಂಡ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮೂರು ವಾರಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಇದೇ ವೇಳೆ, ಅರ್ಜಿಯ ವಿಚಾರಣೆಯನ್ನು ಸೂಕ್ತ ನ್ಯಾಯಪೀಠದ ಮುಂದೆ ನಿಯೋಜಿಸುವಂತೆ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ.

ನ್ಯಾಯಪೀಠ ತನ್ನ ಆದೇಶದಲ್ಲಿ, 2026ರ ಜನವರಿ 27ರಂದು ನಡೆದ ವಿಧಾನಸಭಾ ಕಲಾಪದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದೆ. ಅಕ್ರಮ ಮರಳು ಗಣಿಗಾರಿಕೆ ದೊಡ್ಡ ದಂಧೆಯಾಗಿದೆ. ಈ ಪ್ರಕರಣದಲ್ಲಿ ಯಾರ ಹೆಸರನ್ನೂ ಪ್ರಸ್ತಾಪಿಸುವುದಿಲ್ಲ, ಯಾರನ್ನೂ ನೇರವಾಗಿ ದೂಷಿಸುವುದಿಲ್ಲ. ಇದು ಅತ್ಯಂತ ಮುಜುಗರದ ವಿಷಯವಾಗಿದ್ದು, ಅನೇಕ ಪ್ರಭಾವಿ ವ್ಯಕ್ತಿಗಳು ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಚಿವರು ಹೇಳಿರುವುದನ್ನು ನ್ಯಾಯಾಲಯ ಗಮನಿಸಿದೆ. ಈ ಹೇಳಿಕೆಗಳು ಜನವರಿ 28ರಂದು ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿವೆ ಎಂದು ನ್ಯಾಯಪೀಠ ತಿಳಿಸಿದೆ.

ಅಲ್ಲದೆ, ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ರಾತ್ರಿ ವೇಳೆ ನಿರಂತರವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಕುರಿತು ಮಾಧ್ಯಮ ವರದಿಗಳನ್ನು ನ್ಯಾಯಾಲಯ ಉಲ್ಲೇಖಿಸಿದೆ. ಗಣಿಗಾರಿಕೆಯಿಂದ ಉಂಟಾಗುವ ಧೂಳಿನಿಂದ ಈ ಭಾಗದ ರೈತರು ಬೆಳೆಯುವ ಬೆಳೆಗಳಿಗೆ ತೀವ್ರ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ರೈತರು ಮಾಡಿರುವುದನ್ನೂ ನ್ಯಾಯಪೀಠ ದಾಖಲಿಸಿದೆ.

ಈ ಹಿನ್ನೆಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಮೌನ ಮನೆ ಹಿಂದೆ ಡ್ರಗ್ಸ್ ಸಂಚು! ರಾತ್ರಿ ಮಾತ್ರ ತೆರೆಯುತ್ತಿದ್ದ ಗೋಡೌನ್ ಮೇಲೆ ಪೊಲೀಸ್ ದಾಳಿ- ಉತ್ತರ ಪ್ರದೇಶ ಮೂಲದ ದಂಪತಿ ಬಂಧನ

0
ಮೈಸೂರು: ನಗರದ ಹೊರವಲಯದ ಯಾಂಡಳ್ಳಿ ಪ್ರದೇಶದಲ್ಲಿದ್ದ ಶಾಂತ ಹಾಗೂ ನಿರ್ಜನ ಮನೆಯೊಂದರೊಳಗೆ ಭಾರೀ ಡ್ರಗ್ಸ್ ತಯಾರಿಕಾ ಸಂಚು ರೂಪುಗೊಂಡಿದ್ದದ್ದು ಇದೀಗ ಬಯಲಾಗಿದೆ. ಉತ್ತರ ಪ್ರದೇಶ ಮೂಲದ ದಂಪತಿಯು ಮನೆ ಕೆಳ ಅಂತಸ್ತಿನಲ್ಲಿ ಗೋಡೌನ್ ಸ್ಥಾಪಿಸಿ, ಡ್ರಗ್ಸ್ ತಯಾರಿಕೆಗೆ ಬೇಕಾದ ಅಪಾರ ಪ್ರಮಾಣದ ಕೆಮಿಕಲ್ಸ್ ಸಂಗ್ರಹಿಸಿದ್ದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ನಾಲ್ಕು ತಿಂಗಳ ಹಿಂದೆ ದಂಪತಿ ಎರಡು ಮನೆಗಳನ್ನು ಬಾಡಿಗೆ ಪಡೆದಿದ್ದು, ಕೇವಲ ಇಬ್ಬರಿದ್ದರೂ ಎರಡು ಮನೆ ಬೇಕೆಂದು ಹೇಳಿಕೊಂಡಿದ್ದದ್ದು ಸ್ಥಳೀಯರಲ್ಲಿ ಮೊದಲಿನಿಂದಲೇ ಅನುಮಾನ ಹುಟ್ಟಿಸಿತ್ತು. ರಾತ್ರಿ ಸಮಯದಲ್ಲಿ ಮಾತ್ರ ಗೋಡೌನ್ ಬಾಗಿಲು ತೆರೆಯುತ್ತಿದ್ದು, ದಿನದ ವೇಳೆಯಲ್ಲಿ ಸಂಪೂರ್ಣ ಮೌನ ವಹಿಸುತ್ತಿದ್ದರು. ಮಾತನಾಡಲು ಪ್ರಯತ್ನಿಸಿದಾಗ ಕೈ ಸನ್ನೆಯಲ್ಲೇ ತಪ್ಪಿಸಿಕೊಳ್ಳುತ್ತಿದ್ದರು ಎಂಬುದು ಸ್ಥಳೀಯರ ಹೇಳಿಕೆ.

ಗೋಡೌನ್ ಒಳಗೆ ಡ್ರಗ್ಸ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಬ್ಯಾರೆಲ್‌ಗಳಲ್ಲಿ ಸಂಗ್ರಹಿಸಿದ್ದು, ಅಂತಿಮ ಹಂತದ ಸಿದ್ಧತೆ ಮಾಡಿಕೊಂಡಿದ್ದುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಡೆದ ದಾಳಿಯಿಂದ ಭಾರೀ ಅನಾಹುತ ತಪ್ಪಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನು ಎರಡು ತಿಂಗಳ ಹಿಂದೆ ಇದೇ ಮನೆಯಲ್ಲಿ ನಡೆದ 17 ಲಕ್ಷ ರೂ. ಕಳ್ಳತನ ಪ್ರಕರಣದಲ್ಲಿಯೂ ದಂಪತಿ ಪೊಲೀಸರನ್ನು ಸಂಪರ್ಕಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ದೆಹಲಿ ನೋಂದಣಿಯ ಕಾರು ಬಳಕೆ, ಸ್ಥಳೀಯರೊಂದಿಗೆ ಸಂಪರ್ಕ ಕಡಿತ — ಇವೆಲ್ಲವೂ ಡ್ರಗ್ಸ್ ಜಾಲದ ಗಂಭೀರತೆಯನ್ನು ಸೂಚಿಸುತ್ತಿವೆ.

ಮೈಸೂರಿನ ರಿಂಗ್ ರಸ್ತೆಯಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ಡ್ರಗ್ಸ್ ಜಾಲದ ಪ್ರಕರಣದ ಬಳಿಕ, ಇದೀಗ ಯಾಂಡಳ್ಳಿಯಲ್ಲಿ ನಡೆದ ಈ ದಾಳಿ ನಗರ ಸುತ್ತಮುತ್ತ ಮಾದಕ ವಸ್ತು ಮಾಫಿಯಾ ಬೇರೂರಿರುವ ಭೀತಿ ಹೆಚ್ಚಿಸಿದೆ. ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದು, ಡ್ರಗ್ಸ್ ಜಾಲದ ಹಿಂದಿರುವ ಲಿಂಕ್‌ಗಳ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಹೆಚ್ಚಾಯ್ತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ: ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ

ಹಾಸನ: ನಟ ಯಶ್ ತಾಯಿ ಪುಷ್ಪಾ ಅರುಣ್‌ಕುಮಾರ್ ಮನೆ ಸಮೀಪದ ನಿವೇಶನಕ್ಕೆ ಸಂಬಂಧಿಸಿದ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹಾಸನ ನಗರದ ವಿದ್ಯಾನಗರದಲ್ಲಿ ಇರುವ ಪುಷ್ಪಾ ಅವರ ಮನೆ ಬಳಿಯ ಸೈಟ್‌ನಲ್ಲಿ ಕಾಂಪೌಂಡ್ ವಿಚಾರವಾಗಿ ಪುಷ್ಪಾ ಮತ್ತು ಮೂಲ ಮಾಲೀಕ ದೇವರಾಜು ನಡುವೆ ವಾಗ್ವಾದ ನಡೆದಿದೆ.

ಸೈಟ್ ಬಳಿ ಪುಷ್ಪಾ ಆಗಮಿಸಿ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಿದ್ದಾಗ ದೇವರಾಜು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ದಾಖಲೆಗಳನ್ನು ತೋರಿಸುವಂತೆ ಪುಷ್ಪಾ ಕೇಳಿದ್ದಾರೆ. “ಸೆಲೆಬ್ರಿಟಿ ನನ್ನ ಮಗ, ನಾನಲ್ಲ. ನಾನು ಇಲ್ಲಿ ಹುಟ್ಟಿ ಬೆಳೆದವಳು” ಎಂದು ಪುಷ್ಪಾ ಹೇಳಿದ್ದಾರೆ ಎನ್ನಲಾಗಿದೆ. ಇದಕ್ಕೆ ದೇವರಾಜು ಆಕ್ಷೇಪ ವ್ಯಕ್ತಪಡಿಸಿದ್ದು, ಮಾತಿನ ಚಕಮಕಿ ನಡೆದಿದೆ.

ಪುಷ್ಪಾ ಅವರು ದೇವರಾಜು ವಿರುದ್ಧ ಗಂಭೀರ ಆರೋಪ ಮಾಡುತ್ತಾ, “ರೌಡಿಗಳನ್ನು ಕರೆದುಕೊಂಡು ಬಂದು ರೌಡಿಸಂ ಮಾಡ್ತೀಯಾ? ನಾನು ಎಸ್ಪಿಗೆ ದೂರು ಕೊಡ್ತೀನಿ. ಮತ್ತೆ ಇಲ್ಲಿಗೆ ಕಾಲಿಟ್ಟರೆ ಸುಮ್ಮನಿರಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಏನಿದು ಪ್ರಕರಣ?

ಈ ಹಿಂದೆ ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ ಸಂಬಂಧ ಯಶ್ ತಾಯಿ ಪುಷ್ಪಾ ಅವರಿಗೆ ಕೋರ್ಟ್‌ನಿಂದ ದೊಡ್ಡ ಶಾಕ್ ಎದುರಾಗಿತ್ತು. ಸುಮಾರು 1,500 ಚದರ ಅಡಿ ಜಾಗವನ್ನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕೋರ್ಟ್ ಅನುಮತಿಯ ಮೇರೆಗೆ ಕಾಂಪೌಂಡ್ ಅನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಲಾಗಿತ್ತು. ಮೂಲ ಮಾಲೀಕ ದೇವರಾಜು ಈ ಕಾಂಪೌಂಡ್ ತೆರವುಗೊಳಿಸಿದ್ದರು.

ಈ ಪ್ರಕರಣ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ್ದು, ಇತ್ತೀಚಿನ ವಾಗ್ವಾದದಿಂದ ಮತ್ತೆ ಸಾರ್ವಜನಿಕ ಗಮನ ಸೆಳೆದಿದೆ.

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಪ್ರಾಥಮಿಕ ತನಿಖಾ ವರದಿ ಬಳಿಕ ಮುಂದಿನ ಕ್ರಮ – ಸಚಿವ ಜಿ. ಪರಮೇಶ್ವರ್

0

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸದ್ಯ ಆತ್ಮಹತ್ಯೆ ಆಯಾಮದಲ್ಲೇ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಡಿಸೆಂಬರ್‌ನಲ್ಲಿ ಕೇರಳದ ಐಟಿ ಅಧಿಕಾರಿಗಳು ಸಿ.ಜೆ. ರಾಯ್ ಅವರ ಗ್ರೂಪ್ ಮೇಲೆ ದಾಳಿ ನಡೆಸಿದ್ದರು. ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಗಡುವಿನ ಹಿನ್ನೆಲೆಯಲ್ಲಿ, ದುಬೈನಲ್ಲಿದ್ದ ರಾಯ್ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡಿದ್ದರು.

ಐಟಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ರಾಯ್ ಅವರ ಕಚೇರಿಗೆ ತೆರಳಿ ಹೇಳಿಕೆ ದಾಖಲಿಸಿಕೊಂಡಿದ್ದರು ಎಂದು ಸಚಿವರು ತಿಳಿಸಿದ್ದಾರೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕಚೇರಿಗೆ ಅಧಿಕಾರಿಗಳು ತೆರಳಿದ್ದ ವೇಳೆ, ರಾಯ್ ಅವರು ಐದು ನಿಮಿಷದಲ್ಲಿ ಬರುತ್ತೇನೆ ಎಂದು ಹೇಳಿ ಕೊಠಡಿಯೊಳಗೆ ತೆರಳಿದ್ದರು.

20 ನಿಮಿಷವಾದರೂ ಹೊರಬಾರದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ, ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಆತ್ಮಹತ್ಯೆಗೆ ಕಾರಣವೇನು, ಯಾವ ಒತ್ತಡಗಳು ಇದ್ದವು ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಹಲವು ವಿಚಾರಗಳು ಬೆಳಕಿಗೆ ಬರಲಿವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಐಟಿ ದಾಳಿಯಿಂದ ಉದ್ಯಮಿಗಳಿಗೆ ಕಿರುಕುಳ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಈ ಹಂತದಲ್ಲಿ ಕಿರುಕುಳ ಆಯಾಮದ ಬಗ್ಗೆ ಯೋಚಿಸಿಲ್ಲ ಎಂದರು. ಸದ್ಯ ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ಮಾತ್ರ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಯ್ ಅವರ ಸಹೋದರ ಬಾಬು ಅವರು, ಐಟಿ ಅಧಿಕಾರಿಗಳ ದಾಳಿ ಮತ್ತು ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಪ್ರಾಥಮಿಕ ವಿಚಾರಣೆ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.

Gold Rate: ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ: ಎರಡು ದಿನದಲ್ಲಿ ₹1,500ಕ್ಕೂ ಹೆಚ್ಚು ಇಳಿಕೆ!

0

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಭಾರೀ ಕುಸಿತ ಮುಂದುವರಿದಿದೆ. ನಿನ್ನೆ ಪ್ರತಿ ಗ್ರಾಂಗೆ ಸುಮಾರು ₹800 ಇಳಿಕೆಯಾಗಿದ್ದ ಚಿನ್ನದ ಬೆಲೆ, ಇಂದು (ಶನಿವಾರ) ಮತ್ತೊಮ್ಮೆ ₹920 ರಷ್ಟು ಕಡಿಮೆಯಾಗಿದೆ. ಹೀಗೆ ಎರಡು ದಿನಗಳಲ್ಲಿ ಚಿನ್ನದ ಬೆಲೆ ಒಟ್ಟಾರೆ ₹1,500ಕ್ಕೂ ಅಧಿಕ ಇಳಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆ ಹಲವು ದೇಶಗಳಲ್ಲಿ ಕುಸಿತ ಕಂಡಿದೆ. ಇದರ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ತೀವ್ರವಾಗಿ ಇಳಿಕೆಯಾಗಿದೆ.

ಇನ್ನು ಬೆಳ್ಳಿ ಬೆಲೆಯೂ ಮಹಾಕುಸಿತ ಅನುಭವಿಸಿದೆ. ಒಂದೇ ದಿನದಲ್ಲಿ ಪ್ರತಿ ಗ್ರಾಂಗೆ ₹45 ರಷ್ಟು ಇಳಿಕೆಯಾದರೆ, ಕಳೆದ ಎರಡು ದಿನಗಳಲ್ಲಿ ಒಟ್ಟಾರೆ ₹60 ರಷ್ಟು ಬೆಳ್ಳಿ ಬೆಲೆ ಕುಸಿದಿದೆ.

ಪ್ರಸ್ತುತ ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,47,200 ಆಗಿದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ₹1,60,580 ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹35,000 ಇದೆ.

ಬೆಂಗಳೂರಿನಲ್ಲೂ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಇಳಿಕೆ ದಾಖಲಾಗಿದ್ದು, 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,47,200 ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹35,000 ಇದೆ. ತಮಿಳುನಾಡು, ಕೇರಳ ಸೇರಿದಂತೆ ಕೆಲ ರಾಜ್ಯಗಳಲ್ಲೂ ಬೆಳ್ಳಿ ಬೆಲೆ ಇದೇ ಮಟ್ಟದಲ್ಲಿ ಮುಂದುವರಿದಿದೆ.

ಭಾರತದಲ್ಲಿ ಚಿನ್ನ–ಬೆಳ್ಳಿ ಬೆಲೆ (ಜನವರಿ 31):

  • 24 ಕ್ಯಾರಟ್ ಚಿನ್ನ (1 ಗ್ರಾಂ): ₹16,058
  • 22 ಕ್ಯಾರಟ್ ಚಿನ್ನ (1 ಗ್ರಾಂ): ₹14,720
  • 18 ಕ್ಯಾರಟ್ ಚಿನ್ನ (1 ಗ್ರಾಂ): ₹12,044
  • ಬೆಳ್ಳಿ (1 ಗ್ರಾಂ): ₹350

ಬೆಂಗಳೂರಿನಲ್ಲಿ ಚಿನ್ನ–ಬೆಳ್ಳಿ ಬೆಲೆ:

  • 24 ಕ್ಯಾರಟ್ ಚಿನ್ನ (1 ಗ್ರಾಂ): ₹16,058
  • 22 ಕ್ಯಾರಟ್ ಚಿನ್ನ (1 ಗ್ರಾಂ): ₹14,720
  • ಬೆಳ್ಳಿ (1 ಗ್ರಾಂ): ₹350

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಂ):

  • ಬೆಂಗಳೂರು: ₹14,720
  • ಚೆನ್ನೈ: ₹14,900
  • ಮುಂಬೈ: ₹14,720
  • ದೆಹಲಿ: ₹14,735
  • ಕೋಲ್ಕತಾ: ₹14,720
  • ಕೇರಳ: ₹14,720
  • ಅಹ್ಮದಾಬಾದ್: ₹14,725
  • ಜೈಪುರ್: ₹14,735
  • ಲಕ್ನೋ: ₹14,735
  • ಭುವನೇಶ್ವರ: ₹14,720

ತುಮಕೂರು: 40ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI..!

0

ತುಮಕೂರು: ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನವನ್ನು ಬಿಡುಗಡೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ಮೂಲದ ವಕೀಲರ ವಾಹನವನ್ನು ಬಿಡುಗಡೆ ಮಾಡಲು ಪಿಎಸ್ಐ ಚೇತನ್ ಕುಮಾರ್ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು.

ನಿನ್ನೆ ರಾತ್ರಿ ಸುಮಾರು 11:30ರ ವೇಳೆಗೆ ಕ್ಯಾತಸಂದ್ರ ಸಮೀಪದ ನಮಸ್ತೆ ತುಮಕೂರು ಹೋಟೆಲ್‌ನಲ್ಲಿ 40 ಸಾವಿರ ರೂ. ಲಂಚ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಪಿಎಸ್ಐ ಚೇತನ್ ಕುಮಾರ್ ಅವರನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಾಯುಕ್ತ ಪೊಲೀಸರು ಪಿಎಸ್ಐಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೊನ್ನೆಯಷ್ಟೆ ಚೀಟಿ ಅವ್ಯವಹಾರ ಪ್ರಕರಣದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಂಗಳೂರಿನಲ್ಲಿ ಇನ್ಸ್ಪೆಕ್ಟರ್ ಒಬ್ಬರು ಇತ್ತೀಚೆಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಸಿನಿಮೀಯ ರೀತಿಯಲ್ಲಿ ಲೋಕಾಯುಕ್ತ ತಂಡ ಟ್ರ್ಯಾಪ್ ನಡೆಸಿ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿತ್ತು.

ಚೀಟಿ ವ್ಯವಹಾರದಲ್ಲಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು, 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ 1 ಲಕ್ಷ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದರು.

ಮೋಳಕೇರಾದಲ್ಲಿ ಮತ್ತೆ ಸ್ಫೋಟ: ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರ ಗಾಯ- ಸ್ಥಳದಲ್ಲಿ ಭಯದ ವಾತಾವರಣ

0

ಬೀದರ್: ಮೋಳಕೇರಾ ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಸಂಭವಿಸಿದ ಅನುಮಾನಾಸ್ಪದ ಸ್ಫೋಟ ಗ್ರಾಮದಲ್ಲಿ ಆತಂಕವನ್ನು ಮೂಡಿಸಿದೆ. ಮೋಳಗಿ ಮಾರಯ್ಯ ದೇವಸ್ಥಾನ ಕಡೆ ಹೋಗುತ್ತಿದ್ದ ಶಾಲಾ ಮಕ್ಕಳ ಮೇಲೆ ಈ ಸ್ಫೋಟ ಪರಿಣಾಮ ಬೀರಿದೆ.

ಘಟನೆಯಲ್ಲಿಯೇ ಅನ್ವರ್ ಸಾಬ್ (18) ಮತ್ತು ಜಬ್ಬಾರ್ ಸಾಬ್ (65) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್‌ಗೆ ರವಾನಿಸಲಾಗಿದೆ. ಪರಿಜಾರ್ (8), ಅಜೀಜ್ (5), ಬುಶ್ರಾ (4) ಮಕ್ಕಳಿಗೆ ಸಣ್ಣ ಗಾಯಗಳಾದರೂ ತಕ್ಷಣ ಚಿಕಿತ್ಸೆ ನೀಡಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಫೋಟಕ್ಕೆ ಕಾರಣವಾದ ವಸ್ತು ಮಾದರಿಗಳನ್ನು ಸಂಗ್ರಹಿಸಲು ಸೋಕೋ (SOCO) ತಂಡ ಸ್ಥಳಕ್ಕೆ ಕರೆಯಲಾಗಿದೆ. ಹುಮ್ನಾಬಾದ್ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವುದು, ಭದ್ರತಾ ವ್ಯವಸ್ಥೆ ಕಠಿಣಗೊಳಿಸಿರುವುದು ಗಮನಾರ್ಹ.

ಕಳೆದ ಆರು ತಿಂಗಳಲ್ಲಿ ಇದೇ ಗ್ರಾಮದಲ್ಲಿ ಇದು ಎರಡನೇ ಸ್ಫೋಟ, ಇದರಿಂದ ಸ್ಥಳೀಯರು ಆತಂಕ ಮತ್ತು ಭಯದಲ್ಲಿ ಬದುಕುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಂಪೂರ್ಣ ಕಾರಣ ಮತ್ತು ಪೈಪೋಟಿ/ಸಂಬಂಧಿತ ವ್ಯಕ್ತಿಗಳನ್ನು ಗುರುತಿಸಲು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಮುರುಘಾಶ್ರೀಗೆ ಮತ್ತೊಂದು ಕಾನೂನು ಸಂಕಷ್ಟ: ಮಠದ 4 ನಿವೇಶನ ಅಕ್ರಮ ಮಾರಾಟ ಆರೋಪ

0

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮುರುಘಾಮಠದ ಮಾಜಿ ಪೀಠಾಧಿಪತಿ ಮುರುಘಾಶ್ರೀ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪದಡಿ ಮುರುಘಾಶ್ರೀ ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.

ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರು ಈ ಸಂಬಂಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಸರ್ಕಾರದಿಂದ ನೇಮಕಗೊಂಡಿರುವ ಮಠದ ಆಡಳಿತ ಸಮಿತಿಗೆ ಪ್ರಕಾಶ್ ಎಂಬುವರಿಂದ ನಿವೇಶನ ಮಾರಾಟದ ಕುರಿತು ದೂರು ಬಂದ ಹಿನ್ನೆಲೆ ವಿಷಯವನ್ನು ಪರಿಶೀಲಿಸಲಾಗಿದ್ದು, ಬಳಿಕ ನ್ಯಾಯಾಲಯವನ್ನು ಸಂಪರ್ಕಿಸಲಾಗಿದೆ.

ಕೋರ್ಟ್‌ನಿಂದ ನಿರ್ಬಂಧ ಇದ್ದರೂ ಮುರುಘಾಶ್ರೀ ಅವರು ಹೊಸದುರ್ಗದ ಎಂ. ಮಂಜುನಾಥ್ ಅವರಿಗೆ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ನೀಡಿದ್ದು, ಅದರ ಮೂಲಕ ಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಮಮತಾ ಮತ್ತು ನಳಿನಿ ಎಂಬವರಿಗೆ ಮಾರಾಟ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜನವರಿ 30ರಂದು ಮುರುಘಾಮಠದ ಆಡಳಿತ ಸಮಿತಿ ಅಧಿಕೃತವಾಗಿ ಹೊಸದುರ್ಗ ನ್ಯಾಯಾಲಯವನ್ನು ಸಂಪರ್ಕಿಸಿದ್ದು, ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿಯಲಿದೆ.

ಮುರುಘಾಶ್ರೀ ವಿರುದ್ಧ ಈಗಾಗಲೇ ಫೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದ್ದು, ಆ ಪ್ರಕರಣದಲ್ಲಿ ಅವರು ಎ1 ಆರೋಪಿಯಾಗಿದ್ದಾರೆ. ಈ ಹಿನ್ನೆಲೆ ಅವರ ಮೇಲೆ ಆಸ್ತಿ ವಹಿವಾಟಿಗೆ ಸಂಬಂಧಿಸಿದಂತೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಆ ನಿರ್ಬಂಧವನ್ನು ಉಲ್ಲಂಘಿಸಿ ನಿವೇಶನ ಮಾರಾಟ ಮಾಡಲಾಗಿದೆ ಎಂಬುದು ಆಡಳಿತ ಸಮಿತಿಯ ಆರೋಪವಾಗಿದೆ.

ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಪಲ್ಟಿ: 8 ಕರುಗಳು ಸ್ಥಳದಲ್ಲೇ ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಪುಟ್ಟ ಕರುಗಳ ದೇಹ

0

ಮಂಡ್ಯ: ನಾಗಮಂಗಲದಿಂದ ಮೈಸೂರಿನ ಕಸಾಯಿಖಾನೆಗೆ 34 ಎಳೆ ಕರುಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ 8 ಎಳೆ ಕರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾಗಮಂಗಲ ತಾಲೂಕಿನ ಬಸರಾಳು ನಾಗಮಂಗಲ ರಸ್ತೆಯ ಎಗ್ಗಟ್ಟಿ ಗೇಟ್ ಬಳಿ ನಡೆದಿದೆ.

ಸ್ಕಾರ್ಪಿಯೋ ವಾಹನದಲ್ಲಿ ಅಕ್ರಮವಾಗಿ ಹೆಚ್ಚಿನ ಸಂಖ್ಯೆಯ ಎಳೆ ಕರುಗಳನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ವಾಹನ ಪಲ್ಟಿಯಾದ ಪರಿಣಾಮ 34 ಕರುಗಳ ಪೈಕಿ 8 ಕರುಗಳು ಸಾವನ್ನಪ್ಪಿದ್ದು, ಹಲವು ಕರುಗಳಿಗೆ ಗಾಯಗಳಾಗಿವೆ.

ಮೃತ ಕರುಗಳ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಘಟನೆ ಸಂಭವಿಸಿದ ತಕ್ಷಣ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.

ಕೊಟ್ಟೂರಿನಲ್ಲಿ ಭೀಕರ ಟ್ರಿಪಲ್ ಮರ್ಡರ್: ಮಗನಿಂದಲೇ ತಂದೆ–ತಾಯಿ–ತಂಗಿ ಹತ್ಯೆ, ಆರೋಪಿಯನ್ನು ಸ್ಥಳಕ್ಕೆ ಕರೆತಂದ ಪೊಲೀಸರು

0

ವಿಜಯನಗರ: ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಮಗನಿಂದಲೇ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆ ಮಾಡಿದ ಭೀಕರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿ ಅಕ್ಷಯ್‌ನನ್ನು ಬೆಂಗಳೂರಿನಿಂದ ಕೊಟ್ಟೂರಿಗೆ ಕರೆತಂದು ಪೊಲೀಸರು ಮಹತ್ವದ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ವಿಜಯನಗರ ಜಿಲ್ಲೆಯ ಕೊಟ್ಟೂರಿಗೆ ಕರೆತಂದಿದ್ದಾರೆ. ಆರೋಪಿ ಅಕ್ಷಯ್‌ನ್ನು ಕೊಟ್ಟೂರಿನ ಎಲ್.ಬಿ. ಬಡಾವಣೆಯಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಆತಂಕಕಾರಿ ಬೆಳವಣಿಗೆಗಳು ಕಂಡುಬಂದಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯ ಹಾಲ್‌ನಲ್ಲೇ ತಂದೆ–ತಾಯಿ–ತಂಗಿಯ ಮೂರು ಶವಗಳನ್ನು ಹೂತು ಹಾಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಸಹಾಯಕ ಆಯುಕ್ತ (ಎಸಿ) ಹಾಗೂ ತಹಸೀಲ್ದಾರ್ ಅವರ ಸಮ್ಮುಖದಲ್ಲಿ ಮೃತದೇಹಗಳನ್ನು ಹೊರತೆಗೆಯಲು ಸಿದ್ಧತೆ ನಡೆಸಲಾಗಿದೆ.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದು, ಫೊರೆನ್ಸಿಕ್ ತಂಡ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಈ ಭೀಕರ ಪ್ರಕರಣ ಕೊಟ್ಟೂರು ಪಟ್ಟಣದಲ್ಲಿ ಭಯ ಮತ್ತು ಆತಂಕವನ್ನು ಮೂಡಿಸಿದೆ.

error: Content is protected !!