ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಇಲ್ಲಿನ ಎಫ್.ಎಂ. ಡಬಾಲಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶಿಕ್ಷಣಶಾಸ್ತ್ರ ವಿಷಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪ್ರಶ್ನೆಪತ್ರಿಕೆ ಬಿಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎಂ.ಸಿ. ಭಜಂತ್ರಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಧೈರ್ಯದಿಂದ ಪರೀಕ್ಷೆಯನ್ನು ಬರೆಯಬೇಕು. ಹೊಸ ಪ್ರಶ್ನೆಪತ್ರಿಕೆಯ ಮಾದರಿಯನ್ನು ಸರಿಯಾಗಿ ಅರ್ಥೈಸಿಕೊಂಡು ಪರೀಕ್ಷೆಗೆ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ಸಫಲತೆಯನ್ನು ಪಡೆಯಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಗದುಗಿನ ಎಚ್ಸಿಇಎಸ್ ಪದವಿಪೂರ್ವ ಕಾಲೇಜಿನ ಶಿಕ್ಷಣಶಾಸ್ತ್ರ ಉಪನ್ಯಾಸಕರಾದ ಸುನಂದಾ ಪವಾರ್ ಮಾತನಾಡುತ್ತಾ, ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಎಫ್.ಎಂ. ಡಬಾಲಿ ಕಾಲೇಜಿನ ಶಿಕ್ಷಣಶಾಸ್ತ್ರ ಉಪನ್ಯಾಸಕರಾದ ಸುಧಾ ಹುಚ್ಚಣ್ಣವರ ಮಾತನಾಡಿ, ವಿದ್ಯಾರ್ಥಿಗಳು ಎಲ್ಲ ವಿಷಯಗಳ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಅಂಕ ಗಳಿಕೆಯೊಂದೇ ಮುಖ್ಯವಲ್ಲ. ಅಂಕಗಳ ಜೊತೆಗೆ ನೈತಿಕ ಮೌಲ್ಯಗಳು ಜೀವನದಲ್ಲಿ ಅನ್ವಯವಾಗಬೇಕು. ಎಲ್ಲ ವಿದ್ಯಾರ್ಥಿಗಳು ವ್ಯವಸ್ಥಿತವಾಗಿ ಅಧ್ಯಯನಶೀಲರಾಗಿ, ಆತಂಕವಿಲ್ಲದೆ ಪರೀಕ್ಷೆಯನ್ನು ಬರೆಯಬೇಕು ಎಂದರು.
ಕಾಲೇಜಿನ ಉಪನ್ಯಾಸಕರಾದ ಎನ್. ಹನುಮರೆಡ್ಡಿ, ವಾಯ್.ಎಸ್. ಪಂಗಣ್ಣವರ್, ಪಿ.ಎನ್. ಕುಲಕರ್ಣಿ, ಎಂ.ಎನ್. ನದಾಫ್, ಎಫ್.ಎ. ಬಾಬುಖಾನವರ, ಪಿ.ವಿ. ಹೊಸೂರ್ ಮುಂತಾದವರು ಉಪಸ್ಥಿತರಿದ್ದರು. ಉಪನ್ಯಾಸಕ ಬಸವರಾಜ್ ಶಿರುಂದ ವಂದಿಸಿದರು. ಕಾಲೇಜಿನ ಪ್ರಾಚಾರ್ಯರಾದ ಎಂ.ಸಿ. ಭಜಂತ್ರಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುನಂದಾ ಪವಾರ್ ಅವರನ್ನು ಗೌರವಿಸಲಾಯಿತು.

