Home Blog Page 24

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಬರ್ಬರ ಹತ್ಯೆ!

0

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಹೊತ್ತಲ್ಲೇ ಹಿಂದೂ ಸಮುದಾಯದ ಮೇಲೆ ಮತ್ತೊಂದು ಭೀಕರ ಹಲ್ಲೆ ನಡೆದಿದೆ.

ಮೌಲ್ವಿಬಜಾರ್ ಜಿಲ್ಲೆಯಲ್ಲಿ 28 ವರ್ಷದ ಹಿಂದೂ ಯುವಕನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದ್ದು, ಅಲ್ಪಸಂಖ್ಯಾತರ ಸುರಕ್ಷತೆ ಕುರಿತು ತೀವ್ರ ಆತಂಕ ಉಂಟಾಗಿದೆ. ಮೃತ ಯುವಕನನ್ನು ರತನ್ ಸಾಹುಕರ್ ಎಂದು ಗುರುತಿಸಲಾಗಿದ್ದು, ಅವರು ಚಂಪಾ ಪ್ರದೇಶದ ಚಹಾ ತೋಟದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು.

ಬುಧವಾರ ಬೆಳಗ್ಗೆ ಸುಮಾರು 10 ಗಂಟೆಗೆ ರತನ್ ಅವರ ಶವ ಪತ್ತೆಯಾಗಿದ್ದು, ಕೈ-ಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿತ್ತು. ದೇಹದ ಮೇಲೆ ತೀವ್ರ ಗಾಯಗಳಿದ್ದು, ಹೆಚ್ಚಿನ ರಕ್ತಸ್ರಾವವಾಗಿರುವುದು ಕಂಡುಬಂದಿದೆ. ರತನ್ ಜೊತೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇದು ಅಪಘಾತವಲ್ಲ, ಪೂರ್ವನಿಯೋಜಿತ ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಕೈ-ಕಾಲುಗಳನ್ನು ಕಟ್ಟಿರುವ ವಿಧಾನ ಹಾಗೂ ಗಾಯಗಳ ಸ್ವರೂಪವೇ ಇದೊಂದು ಪಿತೂರಿಯ ಕೃತ್ಯ ಎಂಬುದನ್ನು ಸೂಚಿಸುತ್ತವೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಈ ಹತ್ಯೆ ಚುನಾವಣೆಗೆ ಸಂಬಂಧಿತವೇ ಅಥವಾ ಬೇರೆ ಉದ್ದೇಶವಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ.

ಚೀಲ ಬದಲಾಯಿಸಿ ಕೇರಳಕ್ಕೆ ಯೂರಿಯಾ ಸಾಗಾಟ: ಬಳ್ಳಾರಿಯಲ್ಲಿ ಅಕ್ರಮ ಜಾಲ ಬಯಲು-7 ಮಂದಿ ಬಂಧನ

0

ಬಳ್ಳಾರಿ: ರೈತರಿಗೆ ಸಬ್ಸಿಡಿ ದರದಲ್ಲಿ ಸಿಗಬೇಕಿದ್ದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ, ಚೀಲ ಬದಲಾಯಿಸಿ ಅನ್ಯ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ದಂಧೆ ಬಳ್ಳಾರಿಯಲ್ಲಿ ಬಯಲಾಗಿದೆ. ಇಂಡಸ್ಟ್ರೀಸ್ ಏರಿಯಾದ ಗೋಡೌನ್‌ನಲ್ಲಿ 3,575 ಚೀಲ ಯೂರಿಯಾ ಜಪ್ತಿ ಮಾಡಲಾಗಿದೆ.

ಕೇಂದ್ರ ಸರ್ಕಾರದಿಂದ ರೈತರಿಗೆ ನೀಡುವ ಯೂರಿಯಾವನ್ನು ಮಾರುಕಟ್ಟೆಯಿಂದ ವಿಲೇವಾರಿ ಮಾಡಿ, ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿತ್ತು. ಟೆಕ್ನಿಕಲ್ ಗ್ರೇಡ್ ಯೂರಿಯಾ ಎಂದು ಲೇಬಲ್ ಬದಲಾಯಿಸಿ ಕಾರ್ಖಾನೆಗಳಿಗೆ ಪೂರೈಕೆ ಮಾಡಲಾಗುತ್ತಿತ್ತು.

ಈ ಪ್ರಕರಣದಲ್ಲಿ ಕೇರಳ ಮೂಲದ ವಿಪಿನ್ ಅಲಿಯಾಸ್ ಕಾರ್ತಿಕ್ ಸಿಂಗ್ ಸೇರಿದಂತೆ ಏಳು ಮಂದಿ ಬಂಧಿತರಾಗಿದ್ದಾರೆ. ಬಂಧಿತರಲ್ಲಿ ಇಬ್ಬರು ಗೊಬ್ಬರ ವ್ಯಾಪಾರಿಗಳಿದ್ದಾರೆ.

ಮುಂಗಾರು ಮತ್ತು ಹಿಂಗಾರು ಬಿತ್ತನೆ ಸಮಯದಲ್ಲಿ ರೈತರು ಗೊಬ್ಬರದ ಕೊರತೆಯಿಂದ ಪರದಾಡಿದ್ದ ಹಿನ್ನೆಲೆ ಈ ಅಕ್ರಮ ಜಾಲ ಗಂಭೀರತೆ ಹೆಚ್ಚಿಸಿದೆ. ಕೃಷಿ ಇಲಾಖೆ ಅಧಿಕಾರಿಗಳ ಪಾತ್ರದ ಕುರಿತೂ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಬೂಸ್ಟ್ ತುಂಬಿದ ಕೇಕ್ ಮಾರಾಟ ಆರೋಪ: ಶಿರೋಳ ಬೇಕರಿ ವಿರುದ್ಧ ಗಂಭೀರ ದೂರು, ಫುಡ್ ಇಲಾಖೆ ಮೌನ?

0

ಗದಗ: ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿರುವ ಬೆಂಗಳೂರು ಬೇಕರಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬೂಸ್ಟ್ ಪೌಡರ್ ತುಂಬಿದ ಕೇಕ್ ಅನ್ನು ಮಾರಾಟ ಮಾಡಲಾಗುತ್ತಿದೆ ಎಂಬ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವ ಆಹಾರ ಪದಾರ್ಥಗಳನ್ನು ಈ ರೀತಿಯಾಗಿ ಮಾರಾಟ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಆಗಿದೆಯೇ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ.

ಘಟನೆ ಬೆಳಕಿಗೆ ಬಂದಿದ್ದರೂ ನರಗುಂದ ತಾಲೂಕಿನ ಫುಡ್ ಇಲಾಖೆ ಅಧಿಕಾರಿಗಳು ಇನ್ನೂ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದು ಸಾರ್ವಜನಿಕರಲ್ಲಿ ಅನುಮಾನ ಹುಟ್ಟಿಸಿದೆ.
ಆಹಾರ ಸುರಕ್ಷತೆ ಎಂಬುದು ಜನಜೀವನಕ್ಕೆ ಸಂಬಂಧಿಸಿದ ಗಂಭೀರ ವಿಷಯ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಮಾದರಿಗಳನ್ನು ಪರೀಕ್ಷಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಗಾಡಿ ಟಚ್ ಆಗಿದ್ದಕ್ಕೆ ಗಲಾಟೆ: ಬೆಂಗಳೂರಿನಲ್ಲಿ ಕಾರು ಚಾಲಕನ ಹುಚ್ಚಾಟ, ವೈರಲ್ ವಿಡಿಯೋ

0

ಬೆಂಗಳೂರು: ಹೆಚ್‌ಎಎಲ್ ಪ್ರದೇಶದಲ್ಲಿ ನಡೆದ ರೋಡ್ ರೇಜ್ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಗಾಡಿ ಟಚ್ ಆದ ವಿಚಾರದಲ್ಲಿ ಆರಂಭವಾದ ಗಲಾಟೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಾರು ಚಾಲಕ ಗೂಡ್ಸ್ ವಾಹನ ಚಾಲಕನನ್ನು ಕಾರಿನ ಬ್ಯಾನೆಟ್ ಮೇಲೆಯೇ ಎಳೆದುಕೊಂಡು ಹೋಗಿರುವ ಘಟನೆ ಬುಧವಾರ ಮಧ್ಯಾಹ್ನ 12:45ರ ಸುಮಾರಿಗೆ ನಡೆದಿದೆ.

ಕೆಎ 03 ಎನ್‌ಎನ್ 4501 ನೋಂದಣಿಯ ಮಾರುತಿ ಸುಜುಕಿ ಕಾರು ಚಾಲಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ವ್ಯಕ್ತಿ ಕಿರುಚಾಡುತ್ತಿದ್ದರೂ ಕಾರು ನಿಲ್ಲಿಸದೆ ಸುಮಾರು ಒಂದು ಕಿಲೋಮೀಟರ್ ದೂರ ಚಲಾಯಿಸಲಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಘಟನೆಗಳು ಸಂಚಾರ ಶಿಸ್ತು ಹಾಗೂ ಸಾರ್ವಜನಿಕ ಸುರಕ್ಷತೆ ಕುರಿತು ಮತ್ತೊಮ್ಮೆ ಪ್ರಶ್ನೆ ಎತ್ತಿವೆ.

ರಸ್ತೆ ಅಪಘಾತ| 9 ವರ್ಷದ ಬಾಲಕಿ ಸಾವು!

0

ಚಿಕ್ಕೋಡಿ:- ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ.

ವೈಷ್ಣವಿ ತೇರದಾಳೆ (9) ಮೃತ ಬಾಲಕಿ. ಈಕೆ ಅಳಗವಾಡಿ ಗ್ರಾಮದ ನಿವಾಸಿ ಎನ್ನಲಾಗಿದೆ. ಶಿಕ್ಷಣ ಸಂಯೋಜಕ ವಿಠಲ ತೇರದಾಳೆ ಅವರ ಸುಪುತ್ರಿ ವೈಷ್ಣವಿ ಇತ್ತೀಚೆಗೆ ಅಳಗವಾಡಿ ಗ್ರಾಮದ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೆ ಬೆಳಗಾವಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಮಾದಕವಸ್ತು ಮುಕ್ತ ಮೈಸೂರು ಗುರಿ; ಮೂರು ಪ್ರಕರಣಗಳಲ್ಲಿ ಐವರು ಆರೋಪಿಗಳು ಅರೆಸ್ಟ್!

0

ಮೈಸೂರು:- ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇಧಿಸುವ ಉದ್ದೇಶದಿಂದ ಸಿಸಿಬಿ ಹಾಗೂ ಮಂಡಿ ಪೊಲೀಸರು ಸಂಯುಕ್ತವಾಗಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಾದಕವಸ್ತು ಮುಕ್ತ ಮೈಸೂರಿಗಾಗಿ ಪೊಲೀಸರು ಕಾರ್ಯಾಚರಣೆಗಳನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಮೊದಲ ಪ್ರಕರಣದಲ್ಲಿ ಮೊಹಮ್ಮದ್ ಕರೀಂ ಹಾಗೂ ನಿಷಾದ್ ಪಾಷಾ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಕರೀಂ ವಿರುದ್ಧ ಈಗಾಗಲೇ ಐದು ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದರೆ, ನಿಷಾದ್ ಪಾಷಾ ವಿರುದ್ಧ ಐದು ಕ್ರಿಮಿನಲ್ ಪ್ರಕರಣಗಳಿವೆ. ಇವರಿಂದ 3.14 ಗ್ರಾಂ ಎಂಡಿಎಂಎ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದ ಡ್ರಗ್ಸ್ ಪತ್ತೆಯಾದ ಹಿನ್ನೆಲೆ ಕರ್ನಾಟಕದಲ್ಲಿಯೂ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದು ಪ್ರಕರಣದಲ್ಲಿ ಸಂಜಯ್ ಹಾಗೂ ರಾಜ್‌ಕುಮಾರ್ ಎಂಬುವರನ್ನು ಬಂಧಿಸಲಾಗಿದ್ದು, ಇವರಿಂದ 585 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಗಾಂಜಾ ಸಾಗಾಟಕ್ಕೆ ಬಳಸಲಾಗುತ್ತಿದ್ದ ಟಿವಿಎಸ್ ಬೈಕ್ ಕೂಡ ಜಪ್ತಿ ಮಾಡಲಾಗಿದೆ.

ಮೂರನೇ ಪ್ರಕರಣದಲ್ಲಿ ರಾಜೀವ್ ನಗರದ ನಿವಾಸಿ ಮೊಹಮ್ಮದ್ ಅಫಾಕ್ ಎಂಬುವನನ್ನು ಬಂಧಿಸಲಾಗಿದ್ದು, ಈತ ಡ್ರಗ್ಸ್ ಜಾಲದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಡ್ರಗ್ಸ್ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಮೈಸೂರು ಪೊಲೀಸರು ‘ವಿಮುಕ್ತಿ’ ಹೆಸರಿನಲ್ಲಿ ವಿಶೇಷ ಸಹಾಯವಾಣಿ (8277948080) ಆರಂಭಿಸಿದ್ದಾರೆ. ಡ್ರಗ್ಸ್ ಮಾರಾಟ, ಸೇವನೆ ಅಥವಾ ಸಾಗಾಟದ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ಕರೆ ಮಾಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರ ವಿವರಗಳನ್ನು ಸಂಪೂರ್ಣವಾಗಿ ರಹಸ್ಯವಾಗಿಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ನಗರದಾದ್ಯಂತ ಡ್ರಗ್ಸ್ ಪೆಡ್ಲರ್‌ಗಳ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಕಾಲೇಜುಗಳು ಹಾಗೂ ಹಾಸ್ಟೆಲ್‌ಗಳ ಸುತ್ತಮುತ್ತ ಗಸ್ತು ಹೆಚ್ಚಿಸಲಾಗಿದೆ. ಮಾದಕ ವಸ್ತು ಚಟುವಟಿಕೆಯಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಬೆಂಗಳೂರು| ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ; 3 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ಸೀಜ್

0

ಬೆಂಗಳೂರು:- ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಲಗೇಜ್ ತಪಾಸಣೆ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪ್ರಯಾಣಿಕನನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬಂದಿದ್ದ ಮತ್ತೊಬ್ಬ ಪ್ರಯಾಣಿಕ ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಅಡಗಿಸಿ ಮಾದಕ ವಸ್ತು ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಲಾಗಿದೆ. ಈ ವೇಳೆ ಸುಮಾರು 1.7 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು 4.7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಬಾಂಗ್ಲಾದೇಶದಲ್ಲಿ ನಿರ್ಣಾಯಕ ಮತದಾನ: 15 ವರ್ಷಗಳ ಹಸೀನಾ ಆಡಳಿತದ ಬಳಿಕ ಹೊಸ ಅಧ್ಯಾಯಕ್ಕೆ ಮತದಾರರ ತೀರ್ಪು

0

ಢಾಕಾ: ಬಾಂಗ್ಲಾದೇಶದಲ್ಲಿ ಇಂದು (ಫೆ.12) ನಿರ್ಣಾಯಕ ರಾಷ್ಟ್ರೀಯ ಚುನಾವಣೆ ನಡೆಯುತ್ತಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತ ಕುಸಿತ ಕಂಡು 18 ತಿಂಗಳ ಬಳಿಕ, ದೇಶದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಚುನಾವಣೆ ಬಾಂಗ್ಲಾದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಘಟ್ಟವಾಗಿ ಪರಿಣಮಿಸಿದೆ.

ಇಂದು ಬೆಳಗ್ಗೆ 7:30ರಿಂದ ದೇಶದಾದ್ಯಂತ 42,700 ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ಪ್ರಾರಂಭವಾಗಿದೆ. ಸಂಜೆ 4:30ರವರೆಗೆ ಮತದಾನ ನಡೆಯಲಿದ್ದು, ಫೆ.13ರಂದು ಬೆಳಿಗ್ಗೆ ಅಧಿಕೃತ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಮೊದಲ ಬಾರಿಗೆ ಮತದಾರರಾಗಿರುವ ಯುವಕರೂ ಸೇರಿ ಒಟ್ಟು 12.77 ಕೋಟಿ ಮತದಾರರು ನೋಂದಾಯಿತರಾಗಿದ್ದಾರೆ.

ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಆಡಳಿತ ಸಾಗುತ್ತಿದೆ. ಆದರೆ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇತ್ತೀಚೆಗೆ ದೇಶದಲ್ಲಿ ಭಾರತ ವಿರೋಧಿ ಪ್ರತಿಭಟನೆಗಳು ಹೆಚ್ಚಾಗಿದ್ದು, ಕೆಲವು ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಹಿಂಸಾಚಾರ ನಡೆದಿರುವ ವರದಿಗಳು ಹೊರಬಿದ್ದಿವೆ.

ರಾಜಕೀಯ ಸಮೀಕರಣಗಳ ಪ್ರಕಾರ, ಖಲೀದಾ ಜಿಯಾ ಅವರ ಬಾಂಗ್ಲಾದೇಶ ರಾಷ್ಟ್ರೀಯ ಪಕ್ಷ (ಬಿಎನ್‌ಪಿ) ಪ್ರಮುಖ ಪೈಪೋಟಿದಾರವಾಗಿದ್ದು, ತಾರಿಕ್ ರೆಹಮಾನ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ಮುನ್ನಡೆಯಲ್ಲಿದ್ದಾರೆ. ಬಿಎನ್‌ಪಿಗೆ ಎದುರಾಳಿ ಆಗಿರುವ ಜಮಾತ್-ಇ-ಇಸ್ಲಾಮಿ ಕೂಡ ಬಲಿಷ್ಠ ಪೈಪೋಟಿ ನೀಡುವ ನಿರೀಕ್ಷೆ ಇದೆ. ಸಮೀಕ್ಷೆಗಳ ಪ್ರಕಾರ ಎರಡೂ ಪಕ್ಷಗಳ ನಡುವೆ ನೆಕ್-ಟು-ನೆಕ್ ಪೈಪೋಟಿ ಸಾಧ್ಯತೆ ಇದೆ.

ಕಳೆದ ವರ್ಷ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ಬಳಿಕ, ಅವಾಮಿ ಲೀಗ್ ಪಕ್ಷವನ್ನು ವಿಸರ್ಜಿಸಲಾಗಿದ್ದು, ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿಷೇಧಿಸಲಾಗಿದೆ. ಇದೀಗ ಮತದಾರರ ತೀರ್ಪು ಬಾಂಗ್ಲಾದೇಶದ ಹೊಸ ರಾಜಕೀಯ ಯುಗಕ್ಕೆ ದಾರಿ ಮಾಡಿಕೊಡಲಿದೆಯೇ ಎಂಬುದರ ಮೇಲೆ ಎಲ್ಲರ ಕಣ್ಣೂ ನೆಟ್ಟಿದೆ.

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಬೆಂಗಳೂರು–ಮೈಸೂರು ಸೇರಿ 11 ಕಡೆ ದಾಳಿ

0

ಬೆಂಗಳೂರು/ಮೈಸೂರು/ದಾವಣಗೆರೆ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಸಮನ್ವಯಿತ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆದ ಈ ಕಾರ್ಯಾಚರಣೆ ಗಮನಸೆಳೆದಿದೆ.

PWD ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಅವರಿಗೆ ಸಂಬಂಧಿಸಿದಂತೆ ಒಟ್ಟು 11 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಮೈಸೂರಿನಲ್ಲಿ 5 ಕಡೆ ಹಾಗೂ ಬೆಂಗಳೂರಿನಲ್ಲಿ 6 ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದೆ. ಆಸ್ತಿ ವಿವರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೋಧನೆ ಮುಂದುವರಿದಿದೆ.

ಇದೇ ವೇಳೆ, ದಾವಣಗೆರೆ ಹಾಗೂ ಶಿವಮೊಗ್ಗದಲ್ಲೂ ಲೋಕಾಯುಕ್ತ ದಾಳಿ ವಿಸ್ತರಿಸಲಾಗಿದೆ. ದಾವಣಗೆರೆಯ ಬೆಸ್ಕಾಂ ಸಿವಿಲ್ ವಿಭಾಗದ ಇಂಜಿನಿಯರ್ ಆರ್.ಹೆಚ್. ಅರ್ಜುನ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ. ಆದಾಯ ಮೀರಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ನೇತೃತ್ವದ ತಂಡ ದಾವಣಗೆರೆ ನಗರದ ನಿಟ್ಟುವಳ್ಳಿಯಲ್ಲಿರುವ ಅರ್ಜುನ್ ಅವರ ವಾಸಸ್ಥಳ, ಕಚೇರಿ ಹಾಗೂ ಶಿವಮೊಗ್ಗದ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಶಿವಮೊಗ್ಗದ ಮನೆಯಲ್ಲಿ ಆಸ್ತಿ ದಾಖಲೆಗಳು ಹಾಗೂ ಚಿನ್ನ-ಬೆಳ್ಳಿ ಪತ್ತೆಯಾಗಿದ್ದು, ಇನ್ನಷ್ಟು ದಾಖಲೆಗಳಿಗಾಗಿ ಶೋಧ ಮುಂದುವರಿದಿದೆ.

ಬಿಕ್ಲು ಶಿವ ಹತ್ಯೆ ಪ್ರಕರಣ| ಹೈಕೋರ್ಟ್‌ನಲ್ಲಿ ಜಾಮೀನು ತಿರಸ್ಕಾರ, ಭೈರತಿ ಬಸವರಾಜ್​​​ ದುಬೈಗೆ ಪರಾರಿ!

0

ಬೆಂಗಳೂರು: ಜುಲೈ 15ರಂದು ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಸಂಕಷ್ಟ ಹೆಚ್ಚಾಗಿದೆ.

ಜಾಗದ ವಿವಾದಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಹೆಸರು ಕೇಳಿಬಂದಿದ್ದು, ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಭೈರತಿ ಬಸವರಾಜ್ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸಿಐಡಿ ತಂಡ ಬೆಂಗಳೂರು ನಗರಾದ್ಯಂತ ಶೋಧ ಕಾರ್ಯ ನಡೆಸಿದೆ.

ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ದುಬೈಗೆ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಸ್ತುತ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ನಡುವೆ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸುವ ಸಿದ್ಧತೆ ನಡೆಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಲಭಿಸದಿದ್ದಲ್ಲಿ, ಅವರು ಶರಣಾಗುವುದು ಅನಿವಾರ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!