Home Blog Page 24

ಯುವಜನರು ಸರ್ಕಾರಿ ಉದ್ಯೋಗಕ್ಕೆ ಮಾತ್ರ ಸೀಮಿತವಾಗಬಾರದು: ಜಿಲ್ಲಾಧಿಕಾರಿ ಸ್ನೇಹಲ್ ಆರ್.

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಯುವಜನರು ಸರ್ಕಾರಿ ಉದ್ಯೋಗವನ್ನೇ ಗುರಿಯಾಗಿಸಿಕೊಳ್ಳದೆ ಖಾಸಗಿ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳನ್ನೂ ಬಳಸಿಕೊಳ್ಳಬೇಕು. ಶಾಲಾ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಜೀವನದ ಗುರಿ, ಕೌಶಲ್ಯ ಹಾಗೂ ಕ್ರೀಡಾಸಕ್ತಿಯನ್ನು ಬೆಳೆಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯ ಎಲ್ಲ ಇಲಾಖೆಗಳ ಪ್ರಗತಿ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಓದುವ ಕೌಶಲ್ಯ ಕಡ್ಡಾಯವಾಗಿ ಬರಬೇಕು. ‘ಒಂದು ಶಾಲೆ–ಒಂದು ಕಲೆ–ಒಂದು ಕ್ರೀಡೆ’ ಎಂಬ ಆಶಯದೊಂದಿಗೆ ಅಧಿಕಾರಿಗಳು ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಒಂದೇ ಸರ್ಕಾರಿ ಉದ್ಯೋಗದ ಹಿಂದೆ ಬೀಳದೆ ಖಾಸಗಿ ಉದ್ಯೋಗಗಳಿಗೂ ಪ್ರಯತ್ನಿಸಬೇಕು. ಸರ್ಕಾರದ ಯೋಜನೆಗಳ ಜತೆಗೆ ಉದ್ಯೋಗಾವಕಾಶಗಳ ಮಾಹಿತಿ ಹಾಗೂ ಪ್ರೇರಣೆ ನೀಡುವ ಕಾರ್ಯ ನಡೆಯಬೇಕು ಎಂದು ಹೇಳಿದರು.

ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು ಹಾಗೂ ತರಬೇತಿ ಕುರಿತು ಮಾಹಿತಿ ನೀಡಬೇಕು ಎಂದರು.

ಯುವಜನರು ಇಂಟರ್ನೆಟ್ ಅನ್ನು ದುರ್ಬಳಕೆ ಮಾಡದೆ ತಮ್ಮ ಗುರಿ ಸಾಧನೆಗೆ ಬಳಸಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ದಿನಪತ್ರಿಕೆ ಓದುವ ಅಭ್ಯಾಸ ಬೆಳೆಸಬೇಕು. ಎಲ್ಲ ಶಾಲಾ-ಕಾಲೇಜುಗಳಲ್ಲಿ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಕಡ್ಡಾಯವಾಗಿರಬೇಕು ಎಂದು ಸೂಚಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆಗಳಲ್ಲಿ ಡಿಜಿಟಲ್ ಕೌಶಲ್ಯ ತರಬೇತಿ ನೀಡಬೇಕು ಹಾಗೂ ಪ್ರೌಢಶಾಲಾ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಅರಿವು ಮೂಡಿಸಬೇಕು ಎಂದರು.

ಪ್ರೋಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರಾದೇಶಿಕ ಉಪಅರಣ್ಯ ಸಂರಕ್ಷಣಾಧಿಕಾರಿ ಶೇಕ್ ಅಲಿಂ ಸಿದ್ದಿಕ್ಕಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ಪ್ರತಿಯೊಬ್ಬ ಮಗುವಿಗೂ ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ಜೀವನದ ಗುರಿಯ ಅರಿವು ಮೂಡಬೇಕು. ಅಧಿಕಾರಿಗಳು ಒಂದೊಂದು ಶಾಲೆ ಅಥವಾ ವಸತಿ ನಿಲಯವನ್ನು ದತ್ತು ಪಡೆದು ತಿಂಗಳಲ್ಲಿ ಒಂದು ದಿನ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಅರಿತು ಪರಿಹರಿಸಬೇಕು. ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳ ಕುರಿತು ಜಾಗೃತಿ ಮೂಡಿಸಬೇಕು.”

                         — ಸ್ನೇಹಲ್ ಆರ್., ಜಿಲ್ಲಾಧಿಕಾರಿ

ಸ್ನೇಹದ ಬಂಧ ಗಟ್ಟಿಗೊಳಿಸಿದ ಇನ್ನರ್ ವೀಲ್ ಕ್ಲಬ್ ಸದಸ್ಯೆಯರು

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಕ್ಲಬ್ ಆವರಣದಲ್ಲಿ ಸ್ನೇಹಿತರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸದಸ್ಯೆಯರು ಉತ್ಸಾಹದಿಂದ ಪಾಲ್ಗೊಂಡು ಪರಸ್ಪರ ಫ್ರೆಂಡ್ಶಿಪ್ ಬ್ಯಾಂಡ್ ಧರಿಸಿ, ಸ್ವತಃ ತಯಾರಿಸಿದ ಶುಭಾಶಯ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಅಧ್ಯಕ್ಷೆ ಮಂಜುಳಾ ಅಕ್ಕಿ ಅವರು ಸ್ನೇಹಿತರ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದರು. ಸದಸ್ಯೆಯರು ಜೀವನದಲ್ಲಿ ಸ್ನೇಹ ಹಾಗೂ ಬಾಂಧವ್ಯದ ಮಹತ್ವದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಸ್ನೇಹಿತರ ದಿನದ ಅಂಗವಾಗಿ ವಿವಿಧ ಮನರಂಜನಾ ಆಟಗಳು ಹಾಗೂ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಆಟಗಳಲ್ಲಿ ವಿಜೇತರಾದ ವಿದ್ಯಾ ಗಂಜಿಹಾಳ ಹಾಗೂ ಪ್ರೀತಿ ಹೊನಗುಡಿ ಅವರಿಗೆ ಬಹುಮಾನ ವಿತರಿಸಲಾಯಿತು.

ಸ್ನೇಹ, ಸಂತೋಷ ಹಾಗೂ ಒಗ್ಗಟ್ಟಿನ ಸಂದೇಶ ಸಾರಿದ ಕಾರ್ಯಕ್ರಮವು ಸದಸ್ಯೆಯರಲ್ಲಿ ಆತ್ಮೀಯತೆ ಹಾಗೂ ಹೊಸ ಉತ್ಸಾಹ ಮೂಡಿಸಿತು.

ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷೆ ಮಂಜುಳಾ ಅಕ್ಕಿ, ಕಾರ್ಯದರ್ಶಿ ಪೂಜಾ ಭೂಮಾ ಸೇರಿದಂತೆ ಕ್ಲಬ್‌ನ ಸದಸ್ಯೆಯರು ಉಪಸ್ಥಿತರಿದ್ದರು.

ಹಾಲಕೆರೆಯಲ್ಲಿ ಬೆಳ್ಳಿ ರಥೋತ್ಸವದ ಸಂಭ್ರಮಕ್ಕೆ ಮುನ್ನುಡಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ಆ.24ರಂದು ನಡೆಯಲಿರುವ ಬೆಳ್ಳಿ ರಥೋತ್ಸವಕ್ಕೆ ಧಾರ್ಮಿಕ ಸಂಭ್ರಮದ ಮುನ್ನುಡಿ ಬಿದ್ದಿದೆ. ಜಗದ್ಗುರು ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಮಂಗಳವಾರ ಪುರಪ್ರವೇಶ ಮಾಡುವ ಮೂಲಕ ರಥೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಗ್ರಾಮದ ಹೊರವಲಯಕ್ಕೆ ಆಗಮಿಸಿದ ಶ್ರೀಗಳನ್ನು ಗ್ರಾಮಸ್ಥರು ವಿವಿಧ ವಾದ್ಯಮೇಳಗಳೊಂದಿಗೆ ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಬಳಿಕ ಅಲಂಕೃತ ಚಕ್ಕಡಿಯಲ್ಲಿ ಶ್ರೀಗಳನ್ನು ಕೂರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಅನ್ನದಾನೇಶ್ವರ ಸಂಸ್ಥಾನ ಮಠಕ್ಕೆ ಕರೆತರಲಾಯಿತು. ಶ್ರೀಗಳು ರಥೋತ್ಸವದ ಸಿದ್ಧತೆಗಳನ್ನು ಪರಿಶೀಲಿಸಿದರು.

‘ಸದಾಚಾರ–ಸದ್ವಿಚಾರವೇ ಬದುಕಿನ ಬೆಳಕು’

ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು, ಮನುಷ್ಯನ ಜೀವನದಲ್ಲಿ ಸದಾಚಾರ ಬಹಳ ಮುಖ್ಯ. ಸದ್ವಿಚಾರಗಳನ್ನು ನಿರಂತರವಾಗಿ ಮೈಗೂಡಿಸಿಕೊಳ್ಳಬೇಕು. ಶಿವಾನುಭವ ಚಿಂತನೆಯಿಂದ ಮನಸ್ಸಿನ ಮೈಲಿಗೆಯನ್ನು ದೂರ ಮಾಡಿಕೊಂಡು ಆತ್ಮಸ್ಥೈರ್ಯ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಭಕ್ತಿಯಿಂದ ಗುರುವಿನಲ್ಲಿ ಪ್ರಾರ್ಥಿಸಿದಾಗ ಮನೋಭಿಲಾಷೆಗಳು ಫಲಿಸುತ್ತವೆ ಎಂದರು.

ಹಾಲಕೆರೆ ಗ್ರಾಮದ ಭಕ್ತರು ಪ್ರತಿವರ್ಷ ತಪ್ಪದೇ ಪುರಪ್ರವೇಶ ಮಾಡಿಸುವ ಮೂಲಕ ಮಠದ ಮೇಲಿನ ಭಕ್ತಿಯನ್ನು ಮೆರೆದಿದ್ದಾರೆ ಎಂದು ಶ್ರೀಗಳು ಹೇಳಿದರು.

ಆ.14ರಿಂದ 11 ದಿನ ಪುರಾಣ ಪ್ರವಚನ

ಅನ್ನದಾನೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ಆ.14ರಿಂದ 24ರವರೆಗೆ ಪ್ರತಿದಿನ ಸಂಜೆ 7.30ರಿಂದ ರಾತ್ರಿ 9ರವರೆಗೆ ನಾಲತ್ವಡ ಶ್ರೀ ವೀರೇಶ್ವರ ಶರಣರ ಪುರಾಣ ಪ್ರವಚನ ನಡೆಯಲಿದೆ.

ಪುರಾಣ ಪ್ರಾರಂಭೋತ್ಸವದ ಸಾನ್ನಿಧ್ಯವನ್ನು ಜಗದ್ಗುರು ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ವಹಿಸಲಿದ್ದು, ದರುರ ಸಂಗಮೇಶ್ವರ ಮಠದ ಶ್ರೀ ಕೊಟ್ಟೂರು ಮಹಾಸ್ವಾಮಿಗಳು ಹಾಗೂ ಬನವಾಸಿಯ ಶ್ರೀ ಶಿವಲಿಂಗೇಶ್ವರ ದೇವರು ಸಮ್ಮುಖ ವಹಿಸಲಿದ್ದಾರೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಜಕ್ಕಲಿಯಲ್ಲಿ ಆ.14ರಂದು ಮಧ್ಯರಾತ್ರಿ ಧ್ವಜಾರೋಹಣ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಮೀಪದ ಜಕ್ಕಲಿ ಗ್ರಾಮದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಯುವಸೇವಾ ಸಂಘದ ವತಿಯಿಂದ ಆ.14ರಂದು ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಿಥುನ್ ಗಾಣಿಗೇರ ತಿಳಿಸಿದರು.

ನರೇಗಲ್ಲ ಹಿರೇಮಠದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೊಪ್ಪಳ ಜಿಲ್ಲೆಯ ಕುಣಿಕೇರಿ ಗ್ರಾಮದ ಸಮಾಜಸೇವಕಿ ಹಾಗೂ ದಾನಿ ಹುಚ್ಚಮ್ಮ ಚೌದ್ರಿ ಪಾಲ್ಗೊಳ್ಳಲಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆ ನಿರ್ಮಿಸಲು ತಮ್ಮ ಎರಡು ಎಕರೆ ಜಮೀನು ದಾನ ಮಾಡಿರುವ ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಆಹ್ವಾನಿಸಲಾಗಿದೆ ಎಂದರು.

ಹುಚ್ಚಮ್ಮ ಚೌದ್ರಿ ಅವರು ತಮ್ಮೂರಿನ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಆಶಯದಿಂದ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೋಟ್ಯಂತರ ರೂಪಾಯಿ ಮೌಲ್ಯದ ಎರಡು ಎಕರೆ ಜಮೀನನ್ನು ಸರ್ಕಾರಿ ಶಾಲೆ ನಿರ್ಮಾಣಕ್ಕೆ ನೀಡಿದ್ದಾರೆ. ಹಲವು ವರ್ಷ ಇದೇ ಶಾಲೆಯಲ್ಲಿ ಬಿಸಿಯೂಟದ ಅಡುಗೆ ಕೆಲಸ ಮಾಡಿದ್ದ ಅವರು, ಇಂದಿಗೂ ಸರಳ ಜೀವನ ನಡೆಸುತ್ತ ಕೂಲಿ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಆ.14ರಂದು ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯರಾತ್ರಿ 12ಕ್ಕೆ ಧ್ವಜಾರೋಹಣ ನೆರವೇರಲಿದೆ. ಇದೇ ವೇಳೆ ಅಮೋಘ ಭಾರತ, ಪ್ರಥಿಕ್ ಕುಂದಗೋಳ, ಮಾಜಿ ಸೈನಿಕರಾದ ಮಲ್ಲಪ್ಪ ಮುಗಳಿ, ಬಸವರಾಜ ಕೋರಿ, ಮಹೇಶ್ವರಯ್ಯ ಹಿರೇಮಠ, ಯುವ ಸಾಧಕಿಯರಾದ ಪ್ರೀತಿ ಬುಳ್ಳಾ ಹಾಗೂ ಸೃಷ್ಟಿ ಮೇಟಿ ಅವರನ್ನು ಸನ್ಮಾನಿಸಲಾಗುವುದು.

ಗ್ರಾಮದ ಮಕ್ಕಳು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಿಥುನ ಗಾಣಿಗೇರ ಮನವಿ ಮಾಡಿದರು.

ಬಾಕಿ ಬಿಲ್‌ಗೆ ನ್ಯಾಯಾಲಯದ ಚಾಟಿ: ಗದಗ ಡಿಸಿ ಕಚೇರಿಯ ಕಂಪ್ಯೂಟರ್, ಪೀಠೋಪಕರಣ ಜಪ್ತಿ

0

ಗದಗ: ನಗರೋತ್ಥಾನ ಕಾಮಗಾರಿಯ ಬಿಲ್ ಬಾಕಿ ಉಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿಯ ಕಂಪ್ಯೂಟರ್ ಹಾಗೂ ಪೀಠೋಪಕರಣಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ.

2012–13ರ ಅವಧಿಯಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ, ಮುಂಡರಗಿ ಹಾಗೂ ಮುಳಗುಂದ ಪಟ್ಟಣಗಳಲ್ಲಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು. ಗುತ್ತಿಗೆದಾರ ಎಸ್.ಎಸ್. ಪೊಲೀಸ್ ಪಾಟೀಲ ಅವರು ಸುಮಾರು ₹15 ಕೋಟಿ ವೆಚ್ಚದ ಕಾಮಗಾರಿಗಳನ್ನು ನಿರ್ವಹಿಸಿದ್ದರು ಎನ್ನಲಾಗಿದೆ.

ಈ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಸುಮಾರು ₹18 ಲಕ್ಷ ಬಿಲ್ ಬಾಕಿ ಉಳಿದಿತ್ತು. ಬಾಕಿ ಮೊತ್ತ ಪಾವತಿಯಾಗದ ಹಿನ್ನೆಲೆಯಲ್ಲಿ ಗುತ್ತಿಗೆದಾರರು ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ಬಳಿಕ ಬಾಕಿ ಮೊತ್ತದ ಹಿನ್ನೆಲೆಯಲ್ಲಿ ಸುಮಾರು ₹40 ಲಕ್ಷ ಪಾವತಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಈ ಮೊತ್ತ ಪಾವತಿಯಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಪ್ತಿ ಆದೇಶ ನೀಡಿದೆ ಎನ್ನಲಾಗಿದೆ. ಕಚೇರಿಯ ಕಂಪ್ಯೂಟರ್, ಪೀಠೋಪಕರಣ ಜಪ್ತಿ
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದ ಕಂಪ್ಯೂಟರ್ ಹಾಗೂ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ.

ಬಿಲ್ ಪಾವತಿಗೆ ಸಂಬಂಧಿಸಿದ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲೇ ಜಪ್ತಿ ಕ್ರಮ ನಡೆದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ.13ರಂದು ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆ ಕುರಿತು ಅರಿವು ಹಾಗೂ ವೃತ್ತಿಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಗದಗ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ಸದುಪಯೋಗ ಪಡೆದುಕೊಂಡು ಭವಿಷ್ಯ ರೂಪಿಸಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಯಿತು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿಗಳು ಯೋಜನೆಯ ಅರ್ಹತೆ, ನೋಂದಣಿ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. 2023ರಿಂದ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರುವ, ಕನಿಷ್ಠ ಆರು ತಿಂಗಳ ಕಾಲ ಉದ್ಯೋಗವಿಲ್ಲದಿರುವ ಅರ್ಹ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.

ಪದವೀಧರರಿಗೆ ತಿಂಗಳಿಗೆ ₹3,000 ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ₹1,500 ಭತ್ಯೆ ದೊರೆಯಲಿದ್ದು, ಗರಿಷ್ಠ ಎರಡು ವರ್ಷಗಳವರೆಗೆ ಸೌಲಭ್ಯ ಪಡೆಯಬಹುದು. ಅರ್ಹರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಅಪ್ಪಣ್ಣ ಹಂಜಿ, ಸಹಾಯಕ ಉದ್ಯೋಗಾಧಿಕಾರಿ ಎಚ್ಚರಪ್ಪ ಬಡಿಗೇರ, ಆಪ್ತ ಸಮಾಲೋಚಕ ಆನಂದ ಹೊಂಬಳ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಬ್‌ ಕಾರ್ಡ್‌ ಮೇಳಕ್ಕೆ ರೋಣ–ಗಜೇಂದ್ರಗಡ ತಾಪಂ ಸಜ್ಜು

0

ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ಜಾಬ್‌ ಕಾರ್ಡ್‌ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಆ.15ರಿಂದ ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಿಳಿಸಿದ್ದಾರೆ.

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಆ.15ರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್‌ ಕಾರ್ಡ್‌ ಮೇಳ ಆಯೋಜಿಸಲಾಗುತ್ತಿದ್ದು, ರೋಣ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವುದರ ಜತೆಗೆ ಹೆಚ್ಚಿನ ಮಾನವ ದಿನಗಳ ಸೃಷ್ಟಿಗೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

ಜಾಬ್‌ ಕಾರ್ಡ್‌ ಪರಿಶೀಲನೆ, ಹೊಸ ಕಾರ್ಡ್‌ಗೆ ಅವಕಾಶ

ಜಾಬ್‌ ಕಾರ್ಡ್ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರಿಶೀಲಿಸುವುದು, ಅರ್ಹರಿಗೆ ಹೊಸ ಜಾಬ್‌ ಕಾರ್ಡ್‌ ಮಾಡಿಸಿಕೊಡುವುದು, ಹಳೆಯ ಕಾರ್ಡ್‌ ನವೀಕರಣ, e-KYC ಪೂರ್ಣಗೊಳಿಸುವುದು ಹಾಗೂ ಉದ್ಯೋಗದ ಬೇಡಿಕೆ ಸ್ವೀಕರಿಸುವುದಕ್ಕೆ ಮೇಳದಲ್ಲಿ ಆದ್ಯತೆ ನೀಡಲಾಗುವುದು.

ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆಯನ್ನೂ ಗ್ರಾಮ ಪಂಚಾಯಿತಿಗಳಲ್ಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದರ ಜತೆಗೆ ಮನೆ-ಮನೆಗೆ ಭೇಟಿ ನೀಡಿ ಯೋಜನೆಯ ಕುರಿತು ಮಾಹಿತಿ ನೀಡುವುದು, ಗ್ರಾಮಮಟ್ಟದಲ್ಲಿ ಸಭೆ ನಡೆಸುವುದು, ಪೋಸ್ಟರ್‌–ಬ್ಯಾನರ್‌ಗಳ ಮೂಲಕ ಜಾಗೃತಿ ಮೂಡಿಸುವುದು ಹಾಗೂ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ ಎಂದರು.

ಕಾರ್ಮಿಕರ ಹಾಜರಾತಿ, ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿತ ದಾಖಲೆಗಳನ್ನು ಡಿಜಿಟಲ್‌ ವ್ಯವಸ್ಥೆಯ ಮೂಲಕ ನಿರ್ವಹಿಸಲು ಒತ್ತು ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಬಂಧಿತ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ ಅರ್ಹ ಕುಟುಂಬಗಳಿಗೆ ಯೋಜನೆಯ ಸೌಲಭ್ಯ ತಲುಪಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

“ಉದ್ಯೋಗದ ಅವಕಾಶವನ್ನು ಅರ್ಹ ಕುಟುಂಬಗಳ ಮನೆಬಾಗಿಲಿಗೆ ತಲುಪಿಸುವುದು ನಮ್ಮ ಮುಖ್ಯ ಉದ್ದೇಶ. ಜಾಬ್‌ ಕಾರ್ಡ್‌, e-KYC ಹಾಗೂ ಉದ್ಯೋಗದ ಬೇಡಿಕೆ ಸಲ್ಲಿಕೆ ಕುರಿತು ಮಾಹಿತಿ ಅಗತ್ಯವಿರುವವರು ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬೇಕು. ಜಾಬ್‌ ಕಾರ್ಡ್‌ ಮೇಳದ ಸದುಪಯೋಗ ಪಡೆದು ಉದ್ಯೋಗದ ಬೇಡಿಕೆ ಸಲ್ಲಿಸಿ, ಸ್ಥಳೀಯ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.”

ಚಂದ್ರಶೇಖರ ಬಿ. ಕಂದಕೂರ

ಕಾರ್ಯನಿರ್ವಾಹಕ ಅಧಿಕಾರಿ, ತಾಪಂ ರೋಣ–ಗಜೇಂದ್ರಗಡ

ವಿಂಡ್‌ ಕಂಪನಿಗಳ ಹಾವಳಿಗೆ ಬ್ರೇಕ್‌ ಹಾಕಿ

0

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಗಜೇಂದ್ರಗಡ–ರೋಣ ತಾಲೂಕು ವ್ಯಾಪ್ತಿಯಲ್ಲಿ ವಿಂಡ್‌ ಹಾಗೂ ಸೋಲಾರ್‌ ಕಂಪನಿಗಳ ಭಾರಿ ವಾಹನಗಳ ಸಂಚಾರದಿಂದ ಗ್ರಾಮೀಣ ರಸ್ತೆಗಳು ಹದಗೆಟ್ಟಿದ್ದು, ರೈತರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಅಭಿವೃದ್ಧಿ ವೇದಿಕೆ ಆ.18ರಿಂದ ಗಜೇಂದ್ರಗಡದಲ್ಲಿ ವಿಂಡ್‌ ಕಂಪನಿಗಳ ವಾಹನಗಳನ್ನು ತಡೆದು ಅಹೋರಾತ್ರಿ ಹಾಗೂ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಮುಂದಾಗಿದೆ.

ಈ ಕುರಿತು ವೇದಿಕೆಯ ಪದಾಧಿಕಾರಿಗಳು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ವೇದಿಕೆಯ ರಾಜ್ಯಾಧ್ಯಕ್ಷ ವಿನಾಯಕ ಜರತಾರಿ ಮಾತನಾಡಿ, ಗಜೇಂದ್ರಗಡ–ರೋಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಹುರಾಷ್ಟ್ರೀಯ ಪವನ ವಿದ್ಯುತ್ ಕಂಪನಿಗಳು, ಸೋಲಾರ್ ಕಂಪನಿಗಳು ಹಾಗೂ ಆರ್‌ಎಂಸಿ ಕಾಂಕ್ರೀಟ್ ಘಟಕಗಳ ಹಾವಳಿ ಮಿತಿಮೀರಿದೆ ಎಂದು ಆರೋಪಿಸಿದರು.

ವಿಂಡ್ ಕಂಪನಿಗಳ ಅತಿಭಾರದ ಹಾಗೂ ಅತಿಉದ್ದದ ವಾಹನಗಳು ಹಗಲು–ರಾತ್ರಿ ಗ್ರಾಮೀಣ ರಸ್ತೆಗಳ ಮೂಲಕ ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹದಗೆಟ್ಟು, ತಗ್ಗು–ಗುಂಡಿಗಳು ನಿರ್ಮಾಣವಾಗಿವೆ. ರೈತರು ಜಮೀನುಗಳಿಗೆ ತೆರಳುವುದಕ್ಕೂ, ಗ್ರಾಮಸ್ಥರು ನಿತ್ಯ ಸಂಚಾರ ನಡೆಸುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

CSR ಹಣದಲ್ಲಿ ರಸ್ತೆಗಳ ಅಭಿವೃದ್ಧಿಗೆ ಆಗ್ರಹ

ವಿಂಡ್ ಕಂಪನಿಗಳ ವಾಹನ ಸಂಚಾರದಿಂದ ಹದಗೆಟ್ಟಿರುವ ಎಲ್ಲ ಗ್ರಾಮೀಣ ರಸ್ತೆಗಳನ್ನೂ ಕಂಪನಿಗಳ ಸಿಎಸ್‌ಆರ್‌ ನಿಧಿಯಲ್ಲಿ ದುರಸ್ತಿ ಹಾಗೂ ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ಕ್ರಿಯಾ ಯೋಜನೆ ರೂಪಿಸಿ, ಅಂದಾಜು ವೆಚ್ಚ ಹಾಗೂ ಕಾಮಗಾರಿ ಪೂರ್ಣಗೊಳಿಸುವ ಕಾಲಮಿತಿಯನ್ನು ನಿಗದಿಪಡಿಸಬೇಕು. ಕಂಪನಿಗಳು ತಮ್ಮ ಲೆಟರ್‌ಹೆಡ್‌ನಲ್ಲಿ ಈ ವಿವರಗಳಿಗೆ ಸಹಿ ಹಾಗೂ ಮುದ್ರೆ ಹಾಕಿ ಜಿಲ್ಲಾಧಿಕಾರಿಗೆ ಸಲ್ಲಿಸುವ ಜತೆಗೆ ಅದರ ಪ್ರತಿಯನ್ನು ಸಾರ್ವಜನಿಕರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಬೇಡಿಕೆ ಈಡೇರುವವರೆಗೆ ವಿಂಡ್ ಕಂಪನಿಗಳ ವಾಹನಗಳಿಗೆ ತಾಲೂಕು ವ್ಯಾಪ್ತಿಯಲ್ಲಿ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಒಂದು ಲಕ್ಷ ಗಿಡ ನೆಡಲು ಬೇಡಿಕೆ

ವಿಂಡ್ ಕಂಪನಿಗಳ ಕಾಮಗಾರಿಯಿಂದ ಹಾನಿಗೊಳಗಾಗಿರುವ ಪರಿಸರವನ್ನು ಮರುಸ್ಥಾಪಿಸಬೇಕು. ಕಡಿದಿರುವ ಗಿಡಮರಗಳ ಬದಲಿಗೆ ಗಜೇಂದ್ರಗಡ–ರೋಣ ತಾಲೂಕುಗಳಲ್ಲಿ ಒಂದು ಲಕ್ಷ ಗಿಡಗಳನ್ನು ನೆಟ್ಟು, 10 ವರ್ಷಗಳ ಕಾಲ ಅವುಗಳ ಸಂರಕ್ಷಣೆ ಜವಾಬ್ದಾರಿಯನ್ನು ಕಂಪನಿಗಳೇ ವಹಿಸಬೇಕು ಎಂದು ಆಗ್ರಹಿಸಿದರು.

ಗಿಡಗಳ ರಕ್ಷಣೆ ಹಾಗೂ ಪೋಷಣೆಗಾಗಿ 100ಕ್ಕೂ ಹೆಚ್ಚು ಸ್ಥಳೀಯರನ್ನು 10 ವರ್ಷಗಳ ಅವಧಿಗೆ ನೇಮಿಸಿ, ಪ್ರತಿ ಕಾರ್ಮಿಕರಿಗೆ ತಿಂಗಳಿಗೆ ₹30 ಸಾವಿರ ವೇತನ ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.

ಹಳ್ಳ–ಕೊಳ್ಳ, ಚೆಕ್‌ಡ್ಯಾಂ ನಿರ್ಮಾಣಕ್ಕೂ ಒತ್ತಾಯ

ವಿಂಡ್ ಕಂಪನಿಗಳ ಕಾಮಗಾರಿಯಿಂದ ಹಾನಿಗೊಳಗಾಗಿರುವ ಹಳ್ಳ–ಕೊಳ್ಳ, ಸರುವೆ, ಕಿರುಹಳ್ಳ, ಒಳಗಟ್ಟಿ ಹಾಗೂ ಸೇತುವೆಗಳನ್ನು ಮರುನಿರ್ಮಿಸಬೇಕು. ತಾಲೂಕು ವ್ಯಾಪ್ತಿಯ ಅಗತ್ಯ ಸ್ಥಳಗಳಲ್ಲಿ ಚೆಕ್‌ಡ್ಯಾಂ ಹಾಗೂ ಸೇತುವೆಗಳನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಇದರ ಜತೆಗೆ ರೈತರ ಜಮೀನಿನಲ್ಲಿ ಉತ್ಪಾದನೆಯಾಗುವ ವಿದ್ಯುತ್‌ನಿಂದ ರೋಣ–ಗಜೇಂದ್ರಗಡ ತಾಲೂಕಿನ ರೈತರ ಹೊಲ–ತೋಟಗಳಿಗೆ ನಿರಂತರವಾಗಿ ಉಚಿತ ತ್ರಿಫೇಸ್ ವಿದ್ಯುತ್ ನೀಡಬೇಕು. ರೈತರ ಜಮೀನಿನಲ್ಲಿ ಅಳವಡಿಸಿರುವ ವಿದ್ಯುತ್‌ ಘಟಕಗಳಿಂದ ರೈತರಿಗೆ ಶೇರ್ ನೀಡಬೇಕು ಎಂದು ಒತ್ತಾಯಿಸಿದರು.

ಅಗ್ರಿಮೆಂಟ್‌ ಕನ್ನಡದಲ್ಲೇ ಇರಲಿ

ವಿಂಡ್ ಕಂಪನಿಗಳಿಗೆ ಸಂಬಂಧಿಸಿದ ವ್ಯವಹಾರ ಹಾಗೂ ನೋಂದಣಿ ಪ್ರಕ್ರಿಯೆಗಳನ್ನು ಕನ್ನಡದಲ್ಲೇ ನಡೆಸಬೇಕು. ಈಗಾಗಲೇ ಮಾಡಿರುವ ಒಪ್ಪಂದಗಳ ಕನ್ನಡ ಪ್ರತಿಯನ್ನು ರೈತರಿಗೆ ನೀಡಬೇಕು. ಇದರಿಂದ ರೈತರಿಗೆ ಬಾಂಡ್ ಹಾಗೂ ಅಗ್ರಿಮೆಂಟ್‌ನಲ್ಲಿರುವ ಷರತ್ತುಗಳು ಸ್ಪಷ್ಟವಾಗಿ ತಿಳಿಯಲಿವೆ ಎಂದು ವಿನಾಯಕ ಜರತಾರಿ ಹೇಳಿದರು.

ಆ.18ರಿಂದ ಆರಂಭವಾಗಲಿರುವ ಹೋರಾಟದಲ್ಲಿ 100ಕ್ಕೂ ಹೆಚ್ಚು ಸಂಘಟನೆಗಳ ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದು ವೇದಿಕೆ ತಿಳಿಸಿದೆ.

ಲಕ್ಷ್ಮಣ ಬಂಕದ, ಹೂವಾಜಿ ಚಂದೂಕರ, ನೀಲಪ್ಪ ಛಲವಾದಿ, ರಾಘು ಚವ್ಹಾಣ, ಪ್ರಕಾಶ ರಾಠೋಡ, ಚಂದ್ರು ಭೂಷಟ್ಟಿ, ಕುಬೇರ ನಾಯಕ, ಮುತ್ತು ರಾಠೋಡ, ಜೀವನಸಭಾ ಸರ್ಕಾವಾಸ, ಮುತ್ತು ಕಲಾಲ್, ಕುಮಾರ ನಂದಿಕೆಶ್ವರ, ವೀರೇಶ ಮಾಟಲದಿನ್ನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ರೈತರ ಜಮೀನಿನಲ್ಲಿ ವಿದ್ಯುತ್ ಉತ್ಪಾದಿಸಿ ಕಂಪನಿಗಳು ಲಾಭ ಪಡೆಯುತ್ತಿವೆ. ಆದರೆ ಅದೇ ಭಾಗದ ರೈತರು ರಸ್ತೆ, ಪರಿಸರ, ನೀರು ಹಾಗೂ ವಿದ್ಯುತ್ ಸಮಸ್ಯೆ ಎದುರಿಸುವಂತಾಗಬಾರದು. ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಆ.18ರಿಂದ ಅಹೋರಾತ್ರಿ ಹಾಗೂ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು.”

— ವಿನಾಯಕ ಜರತಾರಿ, ರಾಜ್ಯಾಧ್ಯಕ್ಷ, ಕರ್ನಾಟಕ ಅಭಿವೃದ್ಧಿ ವೇದಿಕೆ

ಜನಮನಸೂರೆಗೊಂಡ ‘ಶ್ರೀದೇವಿ ಮಹಾತ್ಮೆ’ ದೊಡ್ಡಾಟ!

0

ವಿಜಯಸಾಕ್ಷಿ ಸುದ್ದಿ, ಗದಗ: ಉತ್ತರ ಕರ್ನಾಟಕದ ಜನಪದ ರಂಗಕಲೆಯ ವೈಶಿಷ್ಟ್ಯವನ್ನು ಸಾರುವ ‘ಶ್ರೀದೇವಿ ಮಹಾತ್ಮೆ’ ದೊಡ್ಡಾಟ ಪ್ರದರ್ಶನ ಕಲಾಪ್ರೇಮಿಗಳ ಮನಸೂರೆಗೊಂಡಿತು.

ಮುಳಗುಂದ ನಾಕಾ ಬಳಿಯ ಶ್ರೀ ಅಡವೀಂದ್ರಸ್ವಾಮಿ ಮಠದಲ್ಲಿ ಬೆಟಗೇರಿಯ ಬಿ.ಬಿ. ಬಣ್ಣದ ಜನಪದ ಕಲಾ ಮೇಳ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಹಾಗೂ ಶ್ರೀ ಅಡವೀಂದ್ರಸ್ವಾಮಿ ಮಠದ ಶಿವಾನುಭವ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ದೊಡ್ಡಾಟ ಪ್ರದರ್ಶನಕ್ಕೆ ಗದಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ, ಸಾಹಿತಿ ಹಾಗೂ ಸಂಶೋಧಕ ಡಾ. ರಾಜೇಂದ್ರ ಎಸ್. ಗಡಾದ ಮದ್ದಳೆ ಬಾರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೊಡ್ಡಾಟ, ಸಣ್ಣಾಟ, ತೊಗಲುಗೊಂಬೆಯಾಟ ಸೇರಿದಂತೆ ಜನಪದ ಕಲೆಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಜೀವಂತ ಪ್ರತೀಕಗಳಾಗಿವೆ. ಜನಪದೀಯರು ಆತ್ಮೀಯತೆ, ನಂಬಿಕೆ ಹಾಗೂ ಭಾವನಾತ್ಮಕತೆಯಿಂದ ಇವುಗಳನ್ನು ತಲೆಮಾರಿನಿಂದ ತಲೆಮಾರಿಗೆ ಉಳಿಸಿಕೊಂಡು ಬಂದಿದ್ದಾರೆ ಎಂದರು.

ಜಾಗತೀಕರಣ, ನಗರೀಕರಣ ಹಾಗೂ ಕೈಗಾರೀಕರಣದ ಪರಿಣಾಮ ಅನೇಕ ಜನಪದ ಕಲೆಗಳು ನಶಿಸುವ ಹಂತದಲ್ಲಿವೆ. ಕಲಾತಂಡಗಳು ಹಾಗೂ ಕಲಾವಿದರ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಲಾವಿದರನ್ನು ಪ್ರೋತ್ಸಾಹಿಸಿ, ಕಲಾತಂಡಗಳಿಗೆ ಬೆಂಬಲ ನೀಡುವ ಮೂಲಕ ದೊಡ್ಡಾಟದಂತಹ ಅಪರೂಪದ ಕಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಜನಪದೀಯರದ್ದಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಜನಪದರಂಗ ಕಲೆಗಳಲ್ಲಿ ದೊಡ್ಡಾಟವು ವಿಶಿಷ್ಟ ಸ್ಥಾನ ಹೊಂದಿದೆ. ಭವ್ಯ ರಂಗಸಜ್ಜಿಕೆ, ವೀರೋಚಿತ ಕುಣಿತ, ಸಂಗೀತ, ವರ್ಣರಂಜಿತ ವೇಷಭೂಷಣ ಹಾಗೂ ವೀರ–ರೌದ್ರ ಪ್ರಧಾನ ಕಥಾವಸ್ತು ಇದರ ವೈಶಿಷ್ಟ್ಯವಾಗಿದೆ. ಹಿಂದೆ ರಾತ್ರಿಯಿಂದ ಬೆಳಗಿನವರೆಗೆ ನಡೆಯುತ್ತಿದ್ದ ದೊಡ್ಡಾಟಗಳು ಇದೀಗ ಕಾಲಕ್ಕೆ ತಕ್ಕಂತೆ ಸಂಕ್ಷಿಪ್ತ ರೂಪ ಪಡೆದುಕೊಂಡಿರುವುದು ಸ್ವಾಗತಾರ್ಹ. ಯುವ ಪೀಳಿಗೆ ಹಾಗೂ ಮಕ್ಕಳು ಇಂತಹ ಕಲೆಗಳನ್ನು ನೋಡಿ, ಅದರ ಮಹತ್ವ ಅರಿಯಬೇಕು ಎಂದರು.

ಶ್ರೀ ಅಡವೀಂದ್ರಸ್ವಾಮಿ ಮಠದ ದಸರಾ ಮಹೋತ್ಸವ ಸಮಿತಿ ಅಧ್ಯಕ್ಷೆ ಸುವರ್ಣ ಮದರಿಮಠ ಹಾಗೂ ಕಲಾಪೋಷಕ ಶ್ರೀನಿವಾಸ ಹುಬ್ಬಳ್ಳಿ ಮಾತನಾಡಿ, ಗದಗ–ಬೆಟಗೇರಿ ಭಾಗದಲ್ಲಿ ದೊಡ್ಡಾಟದಂತಹ ವಿಶಿಷ್ಟ ರಂಗಕಲೆ ಇನ್ನೂ ಜೀವಂತವಾಗಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ. ಇದರ ಉಳಿವಿಗೆ ಎಲ್ಲರೂ ಶ್ರಮಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿ.ಬಿ. ಬಣ್ಣದ ಜನಪದ ಕಲಾ ಮೇಳದ ಅಧ್ಯಕ್ಷ ಅಶೋಕ ಬಣ್ಣದ ಅವರು ಕಲಾ ಮೇಳ ಬೆಳೆದು ಬಂದ ಹಾದಿ ಹಾಗೂ ಮಠಮಾನ್ಯಗಳ ಸಹಕಾರವನ್ನು ಸ್ಮರಿಸಿದರು.

ಶ್ರೀಮಠದ ಧರ್ಮದರ್ಶಿ ವೇ. ಮಹೇಶ್ವರ ಸ್ವಾಮೀಜಿ ಮಾತನಾಡಿ, ಮೈಸೂರು ಅರಸರು ಹಾಗೂ ನಾಡಿನ ಮಠಮಾನ್ಯಗಳು ಜನಪದ ಕಲೆಗಳಿಗೆ ನೀಡಿದ ಪ್ರೋತ್ಸಾಹವನ್ನು ಸ್ಮರಿಸಿದರು. ಜನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಬೇಕು ಎಂದರು.

ಬಳಿಕ ಬೆಟಗೇರಿಯ ಶ್ರೀರಂಗಪ್ಪ ನಾರಾಯಣಕೇರಿ ಹಾಗೂ ಸಂಗಡಿಗರು ‘ಶ್ರೀದೇವಿ ಮಹಾತ್ಮೆ’ ದೊಡ್ಡಾಟವನ್ನು ಮನೋಜ್ಞವಾಗಿ ಪ್ರದರ್ಶಿಸಿ ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾದರು.

ಅನ್ವಿಕಾ ಬಣ್ಣದ ಪ್ರಾರ್ಥಿಸಿದರು. ಜಿ.ಎಂ. ಯಾನಮಶೆಟ್ಟಿರು. ಬಿ.ಎಂ. ಬಿಳೆಯಲಿ ದೊಡ್ಡಾಟದ ಕುರಿತು ಅನಿಸಿಕೆ ಹಂಚಿಕೊಂಡರು. ಕಿರಣ ಬಣ್ಣದ ನಿರೂಪಿಸಿದರು. ಗೀತಾ ಹೂಗಾರ ವಂದಿಸಿದರು.

ಇನ್ನರ್ ವೀಲ್ ಕ್ಲಬ್ ಸೇವಾ ಚಟುವಟಿಕೆಗಳಿಗೆ ಮತ್ತಷ್ಟು ವೇಗ

0

ವಿಜಯಸಾಕ್ಷಿ ಸುದ್ದಿ, ಗದಗ: ಇನ್ನರ್ ವೀಲ್ ಕ್ಲಬ್ ಗದಗ–ಬೆಟಗೇರಿಯ ಸೇವಾ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡುವ ಕುರಿತು ನಗರದ ರೋಟರಿ ಐ ಕೇರ್ ಸೆಂಟರ್‌ನ ಕುಷ್ಟಗಿ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಮಾಸಿಕ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯ ಆರಂಭದಲ್ಲಿ ಶ್ರೀಮತಿ ವೀಣಾ ಕಾವೇರಿ ಹಾಗೂ ಶ್ರೀಮತಿ ಮೀನಾಕ್ಷಿ ಕೊರವನವರ ಇನ್ನರ್ ವೀಲ್ ಪ್ರಾರ್ಥನೆ ನೆರವೇರಿಸಿದರು. ಕಾರ್ಯದರ್ಶಿ ಶ್ರೀಮತಿ ಪೂಜಾ ಭೂಮಾ ಹಿಂದಿನ ಸಭೆಯ ನಡಾವಳಿಗಳನ್ನು ಮಂಡಿಸಿ ಅನುಮೋದನೆ ಪಡೆದರು.

ಕ್ಲಬ್ ವತಿಯಿಂದ ಕಳೆದ ತಿಂಗಳಲ್ಲಿ ಕೈಗೊಂಡ ವಿವಿಧ ಸೇವಾ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಫಲಿತಾಂಶಗಳನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.

ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ವಿವಿಧ ಯೋಜನೆಗಳ ಕುರಿತು ಸದಸ್ಯರು ಚರ್ಚಿಸಿ ಸಲಹೆಗಳನ್ನು ನೀಡಿದರು.

ಪಿ.ಡಿ.ಸಿ. ಪ್ರೇಮಾ ಗುಳಗೌಡರ ಅವರು ಕ್ಲಬ್‌ನ ಆಡಳಿತ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವ ವಿಧಾನ, ಕಚೇರಿ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವುದು ಹಾಗೂ ಕಾರ್ಯಕ್ರಮಗಳನ್ನು ಯೋಜನಾಬದ್ಧವಾಗಿ ರೂಪಿಸುವ ಕುರಿತು ಸದಸ್ಯರಿಗೆ ಮಾರ್ಗದರ್ಶನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಅಕ್ಕಿ ಮಾತನಾಡಿ, ಪಿ.ಡಿ.ಸಿ. ಪ್ರೇಮಾ ಗುಳಗೌಡರ ಮಾರ್ಗದರ್ಶನವು ಕ್ಲಬ್‌ನ ಮುಂದಿನ ಕಾರ್ಯಚಟುವಟಿಕೆಗಳಿಗೆ ಸಹಕಾರಿಯಾಗಲಿದೆ. ಸದಸ್ಯರ ಸಹಕಾರದೊಂದಿಗೆ ಇನ್ನರ್ ವೀಲ್‌ನ ಸೇವೆ ಮತ್ತು ಸ್ನೇಹದ ಧ್ಯೇಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲಾಗುವುದು ಎಂದರು.

ಸಭೆಯಲ್ಲಿ ಮಾಜಿ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.