Home Blog Page 25

ರೈತರಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ: ಡಿ.ಕೆ. ಶಿವಕುಮಾರ್

0

ವಿಜಯಸಾಕ್ಷಿ ಸುದ್ದಿ, ಗದಗ: ಭೀಕರ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಗದಗ ಜಿಲ್ಲೆಯ ವಾಸ್ತವಿಕ ಬರ ಪರಿಸ್ಥಿತಿಯ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿ, ಮುಂದಿನ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಜಿಲ್ಲೆಯ ಸಾಧ್ಯವಾದಷ್ಟು ಹೆಚ್ಚಿನ ತಾಲೂಕುಗಳನ್ನು ಸೇರ್ಪಡೆಗೊಳಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಗದಗ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗದಗ ಜಿಲ್ಲೆಯ ಒಂದು ತಾಲೂಕನ್ನು ಮಾತ್ರ ಬರಪೀಡಿತ ತಾಲೂಕು ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಾಗಿದೆ. ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಬೆಳೆ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಶೇ.95ರಷ್ಟು ಪ್ರದೇಶದಲ್ಲಿ ಹಸಿರು ಕಾಣದಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

ಗದಗ ಜಿಲ್ಲೆಯ ವಿವಿಧ ಕಟ್ಟಡಗಳು ವಿಭಿನ್ನ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಜಿಲ್ಲೆ ಮಾದರಿ ಜಿಲ್ಲೆಯಾಗಿ ರೂಪುಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಶ್ಲಾಘಿಸಿದರು. ಜಿಲ್ಲೆಯ ಮಹತ್ವಾಕಾಂಕ್ಷೆಯ ಮುಕ್ತಿವನ ಯೋಜನೆಯನ್ನು ಸರ್ಕಾರದ ನೂರು ದಿನಗಳ ವರದಿಯಲ್ಲಿ ಸೇರಿಸಲಾಗುವುದು ಎಂದರು.

ನಶಾಮುಕ್ತ ದೇಶ ನಿರ್ಮಾಣಕ್ಕೆ ಯುವಜನರನ್ನು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದ ಅವರು, ಈ ಉದ್ದೇಶಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ₹10 ಲಕ್ಷ ಅನುದಾನ ನೀಡಲಾಗುವುದು ಎಂದರು. ಈ ಅನುದಾನವನ್ನು ಬಳಸಿಕೊಂಡು ಯುವಜನರಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದಿಂದ ‘ತೇಗದ ಸಿರಿ’ ಯೋಜನೆ ಜಾರಿಗೆ ತರಲಾಗುತ್ತಿದ್ದು, ರಸ್ತೆ ಬದಿಗಳಲ್ಲಿ ಹಾಗೂ ರೈತರ ಜಮೀನುಗಳಲ್ಲಿ ತೇಗದ ಮರಗಳನ್ನು ಬೆಳೆಸುವ ಮೂಲಕ ಮುಂದಿನ ದಿನಗಳಲ್ಲಿ ರೈತರಿಗೆ ಹೆಚ್ಚುವರಿ ಆದಾಯದ ಮೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ವಿವರಿಸಿದರು.

ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದು ಸೂಚಿಸಿದ ಮುಖ್ಯಮಂತ್ರಿ, ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಸರ್ಕಾರಕ್ಕೂ ಉತ್ತಮ ಹೆಸರು ಬರುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ, ಮುಖ್ಯಮಂತ್ರಿಗಳ ನಿರ್ದೇಶನದಂತೆ ಈಗಾಗಲೇ ಗದಗ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರೋಢೀಕೃತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರ ಬೆಳೆಗಳು ಸಂಪೂರ್ಣವಾಗಿ ಬಾಧಿತವಾಗಿವೆ. ಸಕಾಲಕ್ಕೆ ಮಳೆಯಾಗದ ಕಾರಣ ಹಲವು ರೈತರು ಬಿತ್ತನೆ ಮಾಡಲೂ ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಗದಗ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಶಾಸಕ ಡಾ. ಎಚ್.ಕೆ. ಪಾಟೀಲ ಮಾತನಾಡಿ, ಮುಖ್ಯಮಂತ್ರಿಗಳು ರೈತರ ನೈಜ ಪರಿಸ್ಥಿತಿಯನ್ನು ಅರಿತು ಅವರ ಸಮಸ್ಯೆಗಳ ಪರಿಹಾರಕ್ಕೆ ಅಧ್ಯಯನಶೀಲವಾಗಿ ಸ್ಪಂದಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು. ಕಿತ್ತೂರು ಕರ್ನಾಟಕ ಭಾಗದಲ್ಲಿ ಹೋಬಳಿಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಮನವಿ ಮಾಡಿದ ಅವರು, ರೈತರ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಗದಗ ಭಾಗದ ವಿಶಿಷ್ಟ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಡ್ರೋನ್ ಮೂಲಕ ಮೋಡ ಬಿತ್ತನೆ ನಡೆಸುವ ಸಾಧ್ಯತೆ ಕುರಿತು ಅಧ್ಯಯನ ಮಾಡಲು ಅನುದಾನ ನೀಡುವಂತೆಯೂ ಅವರು ಮನವಿ ಮಾಡಿದರು.

ಶಾಸಕ ಸಿ.ಸಿ. ಪಾಟೀಲ ಅವರು ನರಗುಂದ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಮನವಿ ಮಾಡಿದರು.

ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಶಿರಹಟ್ಟಿ ವಿಧಾನಸಭಾ ಕ್ಷೇತ್ರವು ಮೂರು ತಾಲೂಕುಗಳನ್ನು ಒಳಗೊಂಡಿದ್ದು, ಮಳೆಯ ಅಭಾವದಿಂದ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹9 ಕೋಟಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಮನವಿ ಮಾಡಿದರು. ಗದಗ-ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗಬೇಕು. ಈ ಕುರಿತು ಕೆಡಿಪಿ ಸಭೆಗಳಲ್ಲಿ ಹಲವು ಬಾರಿ ಪ್ರಸ್ತಾಪಿಸಿದ್ದರೂ ಬಹುದಿನಗಳ ಸಮಸ್ಯೆ ಇನ್ನೂ ಇತ್ಯರ್ಥವಾಗಿಲ್ಲ ಎಂದು ತಿಳಿಸಿದರು.

ರಾಜ್ಯ ವಿಕೇಂದ್ರೀಕರಣ, ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಡಿಜಿಟಲೀಕರಣದ ಮೂಲಕ ಪಾವತಿ ವ್ಯವಸ್ಥೆ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರಾಜ್ಯ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ (ಪ್ರಕೃತಿ ವಿಕೋಪ) ವಿಭಾಗದ ಕಾರ್ಯದರ್ಶಿ ಹಾಗೂ ಪರಿಹಾರ ಆಯುಕ್ತ ಮನೋಜ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಗದಗ ಜಿಲ್ಲೆಯ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಬೆಳೆಗಳು ತೀವ್ರ ಹಾನಿಗೊಳಗಾಗಿದ್ದು, ವಾಸ್ತವಿಕ ಪರಿಸ್ಥಿತಿಯ ಸಮಗ್ರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಮುಂದಿನ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಗದಗ ಜಿಲ್ಲೆಯ ಸಾಧ್ಯವಾದಷ್ಟು ಹೆಚ್ಚಿನ ತಾಲೂಕುಗಳನ್ನು ಸೇರ್ಪಡೆಗೊಳಿಸಿ ಸಂಕಷ್ಟದಲ್ಲಿರುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ನಡೆಸಲಿದೆ.

— ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ

ಬರದ ಬವಣೆ ಕಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಗದಗ ಹಾಗೂ ಮುಂಡರಗಿ ತಾಲೂಕಿನ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ ಮತ್ತು ರೈತರ ಸಂಕಷ್ಟವನ್ನು ಪರಿಶೀಲಿಸಿದರು.

ಮುಂಡರಗಿ ತಾಲೂಕಿನ ಕದಾಂಪುರ ಗ್ರಾಮದ ಸರ್ವೇ ನಂ.437/5ರ ಶಂಕರಪ್ಪ ಗಾವರವಾಡ ಅವರ ಜಮೀನಿನ ಸೂರ್ಯಕಾಂತಿ ಬೆಳೆ, ಸರ್ವೇ ನಂ.434/2ಎರ ಸುನೀತಾ ಈರಪ್ಪ ಪೂಜಾರ ಅವರ ಜಮೀನಿನ ಮೆಕ್ಕೆಜೋಳ ಹಾಗೂ ಸರ್ವೇ ನಂ.434/1ಎರ ಕಲ್ಲಪ್ಪ ಕಾಡಪ್ಪಗೋಳ ಅವರ ಜಮೀನಿನ ಹತ್ತಿ ಬೆಳೆಗಳನ್ನು ಮುಖ್ಯಮಂತ್ರಿ ವೀಕ್ಷಿಸಿದರು.

ನಂತರ ಗದಗ ತಾಲೂಕಿನ ಕುರ್ತಕೋಟಿ ಗ್ರಾಮದ ಸರ್ವೇ ನಂ.303ರ ಶ್ರೀನಾಥ್ ಮಾರ್ತಾಂಡಗೌಡ ಅವರ ಜಮೀನಿನ ಶೇಂಗಾ, ಹತ್ತಿ ಹಾಗೂ ಮೆಣಸಿನಕಾಯಿ ಬೆಳೆಗಳನ್ನು ಪರಿಶೀಲಿಸಿದರು. ಹುಲಕೋಟಿ ಗ್ರಾಮದ ಸರ್ವೇ ನಂ.154/12ರ ಹನುಮಂತಪ್ಪ ಸೋಗಿನ ಅವರ ಜಮೀನಿನ ಮೆಕ್ಕೆಜೋಳ ಬೆಳೆಗೂ ಭೇಟಿ ನೀಡಿ, ಸ್ಥಳೀಯ ರೈತರೊಂದಿಗೆ ಚರ್ಚಿಸಿದರು.

ಈ ಬಾರಿ ಮಳೆಯ ಕೊರತೆಯಿಂದ ಬೆಳೆಗಳು ಹಾಳಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಘೋಷಣೆಯಾಗದ ಉಳಿದ ಆರು ತಾಲೂಕುಗಳನ್ನೂ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ರೈತರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕರಾದ ಎಚ್.ಕೆ. ಪಾಟೀಲ, ಸಿ.ಸಿ. ಪಾಟೀಲ, ಎನ್.ಎನ್. ಕೋನರಡ್ಡಿ, ಪ್ರಾದೇಶಿಕ ಆಯುಕ್ತೆ ಜಾನಕಿ ಎಸ್., ಐಜಿಪಿ ಸಂದೀಪ್ ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಪಂ ಸಿಇಒ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಡಿಸಿಎಫ್ ಸಂತೋಷ ಕುಮಾರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗದಗ ಜಿಲ್ಲೆಯ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸುತ್ತಿದ್ದೇವೆ. ಇನ್ನಷ್ಟು ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಅಧ್ಯಯನ ಮಾಡಲಾಗುವುದು. ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ, ಕೇಂದ್ರದ ಮಾರ್ಗಸೂಚಿಯಂತೆ ಬರಪೀಡಿತ ತಾಲೂಕುಗಳ ಘೋಷಣೆ ಕುರಿತು ಕ್ರಮ ಕೈಗೊಳ್ಳಲಾಗುವುದು.

— ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ

ಗದಗಕ್ಕೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್‌ಗೆ ಸ್ವಾಗತ

0

ವಿಜಯಸಾಕ್ಷಿ ಸುದ್ದಿ, ಗದಗ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕ ಡಾ. ಎಚ್.ಕೆ. ಪಾಟೀಲ, ಶಾಸಕ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಡಿ.ಆರ್. ಪಾಟೀಲ, ವಿನಯ ಕುಲಕರ್ಣಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಮಾಜಿ ಶಾಸಕ ಬಿ.ಆರ್. ಯಾವಗಲ್, ರಾಮಣ್ಣ ಲಮಾಣಿ ಸೇರಿದಂತೆ ಮಿಥುನ ಪಾಟೀಲ, ಬಿ.ಬಿ. ಅಸೂಟಿ, ವಾಸಣ್ಣ ಕುರುಡಗಿ ಹಾಗೂ ಇತರ ಗಣ್ಯರು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತೆ ಜಾನಕಿ ಎಸ್., ಐಜಿಪಿ ಸಂದೀಪ್ ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಡಿಸಿಎಫ್ ಸಂತೋಷಕುಮಾರ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ್ ನಾಡಗೌಡರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗದಗ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಪೂರ್ವಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿತ್ತು. ಹೆಲಿಪ್ಯಾಡ್‌ನಲ್ಲಿ ಪೊಲೀಸ್ ಇಲಾಖೆಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ವಿಕಲಚೇತನರ ಪಿಂಚಣಿಗೆ ಲಂಚ ಪಡೆದ ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹40 ಸಾವಿರ ದಂಡ!

0

ಶಿವಮೊಗ್ಗ: ವಿಕಲಚೇತನರ ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಉಪ ತಹಶೀಲ್ದಾರ್‌ಗೆ ನ್ಯಾಯಾಲಯ 4 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಿಹಾಳ ನಾಡಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಷ್ಪಲತಾ ಶಿಕ್ಷೆಗೆ ಗುರಿಯಾದ ಅಧಿಕಾರಿಯಾಗಿದ್ದಾರೆ.

ಡಿ.ಬಿ.ಹಳ್ಳಿ ನಿವಾಸಿ ಗಿರೀಶ್ ಅವರು ತಮ್ಮ ಮೂಕ ಹಾಗೂ ವಿಕಲಚೇತನ ತಂದೆಗೆ ಅಂಗವಿಕಲರ ಪಿಂಚಣಿ ಮಂಜೂರು ಮಾಡಿಸುವ ಉದ್ದೇಶದಿಂದ ಅರ್ಜಿ ಸಲ್ಲಿಸಿದ್ದರು. ಪಿಂಚಣಿ ಮಂಜೂರು ಮಾಡಿಕೊಡಲು ಉಪ ತಹಶೀಲ್ದಾರ್ ಪುಷ್ಪಲತಾ ಅವರು ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು.

ಲಂಚದ ಬೇಡಿಕೆ ಹಿನ್ನೆಲೆಯಲ್ಲಿ ಗಿರೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, 2017ರ ಸೆಪ್ಟೆಂಬರ್ 21ರಂದು ₹5 ಸಾವಿರ ಮುಂಗಡ ಲಂಚ ಸ್ವೀಕರಿಸುತ್ತಿದ್ದ ವೇಳೆ ಪುಷ್ಪಲತಾ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ತನಿಖಾಧಿಕಾರಿ ಹೆಚ್.ಎಸ್. ತಿಪ್ಪೇಸ್ವಾಮಿ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಲಭ್ಯವಿದ್ದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ 4 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಂದರ್ ರಾಜ್ ವಾದ ಮಂಡಿಸಿದ್ದರು. ವಿಕಲಚೇತನರ ಪಿಂಚಣಿ ಮಂಜೂರು ಮಾಡಲು ಲಂಚ ಪಡೆದ ಪ್ರಕರಣದಲ್ಲಿ ಹಲವು ವರ್ಷಗಳ ಬಳಿಕ ನ್ಯಾಯಾಲಯ ಶಿಕ್ಷೆ ವಿಧಿಸಿರುವುದು ಗಮನಾರ್ಹವಾಗಿದೆ.

ಸಂಭ್ರಮ–ಸಡಗರದಲ್ಲಿ ಜಕ್ಕಲಿಯ ಕಲ್ಮೇಶ್ವರ ಹುಚ್ಚಯ್ಯ ತೇರು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದ ರಾಧ್ಯ ದೈವ ಕಲ್ಮೇಶ್ವರ ದೇವರ ಹುಚ್ಚಯ್ಯ ತೇರು ಉತ್ಸವ ಸೋಮವಾರ ನೂರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ-ಭಾವ ಮತ್ತು ಸಂಭ್ರಮ-ಸಡಗರದಿಂದ ಜರುಗಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಕಲ್ಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಮಹಾರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಗ್ರಾಮದ ಮಹಿಳೆಯರು ಮನೆಗಳಲ್ಲಿ ತಯಾರಿಸಿದ ವಿಶೇಷ ಸಿಹಿ ಅಡುಗೆಯ ಎಡೆಯನ್ನು ದೇವರಿಗೆ ಅರ್ಪಿಸಿ ಭಕ್ತಿಭಾವ ಮೆರೆದರು. ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಅನ್ನದಾಸೋಹವೂ ಏರ್ಪಡಿಸಲಾಗಿತ್ತು.

ಸಂಜೆ ವೀರಭದ್ರೇಶ್ವರ ದೇವಸ್ಥಾನದಿಂದ ನಂದಿಕೋಲನ್ನು ಮೆರವಣಿಗೆಯಲ್ಲಿ ಕಲ್ಮೇಶ್ವರ ದೇವಸ್ಥಾನಕ್ಕೆ ತರಲಾಯಿತು. ಬಳಿಕ ಶಿವಶರಣರಾದ ಅಣ್ಣಯ್ಯ–ತಮ್ಮಯ್ಯನವರ ಮನೆಯಿಂದ ಕಳಸವನ್ನು ತಂದು ವಿಶೇಷ ಪೂಜೆ ಸಲ್ಲಿಸಿ ಹುಚ್ಚಯ್ಯ ತೇರಿಗೆ ಜೋಡಿಸಲಾಯಿತು. ಶಿವಶರಣರ ಮರಿ ಮೊಮ್ಮಕ್ಕಳು ಪೂಜೆ ಸಲ್ಲಿಸಿದ ಬಳಿಕ ತೇರು ಎಳೆಯುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು.

ವಿವಿಧ ಬಗೆಯ ಹೂವುಗಳಿಂದ ಅಲಂಕೃತಗೊಂಡ ಭವ್ಯ ತೇರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗುತ್ತಿದ್ದಂತೆ ‘ಶ್ರೀ ಕಲ್ಮೇಶ್ವರ ಮಹಾರಾಜ್ ಕೀ ಜೈ’, ‘ಹರ ಹರ ಮಹಾದೇವ’ ಎಂಬ ಭಕ್ತರ ಜಯಘೋಷಗಳು ಮೊಳಗಿದವು. ಉತ್ತತ್ತಿ ಎಸೆದು, ನಮಸ್ಕರಿಸಿ ಭಕ್ತರು ತೇರನ್ನು ಎಳೆದರು.

ದುರ್ಗಾದೇವಿ ಹಾಗೂ ಬೀರದೇವರ ಡೊಳ್ಳು ಮೇಳದ ಡೊಳ್ಳು ಕುಣಿತ ಉತ್ಸವಕ್ಕೆ ವಿಶೇಷ ಮೆರುಗು ನೀಡಿತು. ಯುವಕರ ತಂಡ ನಂದಿಕೋಲನ್ನು ಒಂದೇ ಕೈಯಲ್ಲಿ ಎತ್ತಿ ಹಿಡಿದು ಪ್ರದರ್ಶಿಸಿದ್ದು ನೆರೆದಿದ್ದವರ ಗಮನ ಸೆಳೆಯಿತು.

ವೀರಭದ್ರೇಶ್ವರ ದೇವಸ್ಥಾನದ ಬಳಿ ಸಾಂಪ್ರದಾಯಿಕ ಒಡಪುಗಳ ಘೋಷ ಮೊಳಗುತ್ತಿದ್ದಂತೆ ಭಕ್ತರು ಭಕ್ತಿಯ ಪರವಶತೆಯಲ್ಲಿ ತೇಲಿದರು. ತಳಿರು-ತೋರಣಗಳು ಹಾಗೂ ದೇವಸ್ಥಾನದ ಗೋಪುರ, ದೀಪಸ್ತಂಭ ಮತ್ತು ನವಗ್ರಹ ಮಂಟಪಕ್ಕೆ ಮಾಡಿದ್ದ ವಿದ್ಯುತ್ ದೀಪಾಲಂಕಾರ ಜಾತ್ರೆಯ ರಾತ್ರಿಯ ಸೊಬಗನ್ನು ಮತ್ತಷ್ಟು ಹೆಚ್ಚಿಸಿತು.

ಗ್ರಾಮದ ಪ್ರಮುಖ ದೇವಸ್ಥಾನಗಳು ಹಾಗೂ ಬೀದಿಗಳಲ್ಲಿ ಸಂಚರಿಸಿದ ಹುಚ್ಚಯ್ಯ ಉತ್ಸವವು ಭೋರ್ಗಲ್‌ವರೆಗೆ ತೆರಳಿ ಮರಳಿ ಸ್ವಸ್ಥಾನ ತಲುಪಿದಾಗ ಭಕ್ತರು ಸಂಭ್ರಮಿಸಿದರು.

ಹುಲಕೋಟಿಗೆ ಸಿಎಂ ಡಿಕೆಶಿ ಭೇಟಿ : ಗ್ರಾಪಂ ಅಧ್ಯಕ್ಷರು, ಸದಸ್ಯರೊಂದಿಗೆ ಮಾತುಕತೆ

ಗದಗ: ತಾಲೂಕಿನ ಹುಲಕೋಟಿ ಗ್ರಾಮ ಪಂಚಾಯಿತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ, ಗದಗ ಶಾಸಕ ಡಾ. ಎಚ್.ಕೆ. ಪಾಟೀಲ, ಹುಲಕೋಟಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಭಕ್ತಿ–ಜ್ಞಾನದ ದಾರಿದೀಪ ಗುರುಸಾರ್ವಭೌಮರು: ಲಕ್ಷ್ಮೇಶ್ವರದಲ್ಲಿ ಆರಾಧನಾ ಮಹೋತ್ಸವಕ್ಕೆ ತೆರೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದ ಮೂರು ದಿನಗಳ ಆರಾಧನಾ ಮಹೋತ್ಸವದ ಸಮಾರೋಪದ ಅಂಗವಾಗಿ ಸೋಮವಾರ ರಾಯರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ನೂರಾರು ಭಕ್ತರ ವೇದಘೋಷ, ವಾದ್ಯವೈಭವ ಹಾಗೂ ಭಕ್ತಿ ಸಂಗೀತದ ನಡುವೆ ನಡೆದ ರಥೋತ್ಸವದಲ್ಲಿ ಭಕ್ತರು ತಾಳಕ್ಕೆ ಹೆಜ್ಜೆ ಹಾಕುತ್ತ ರಥವನ್ನು ಎಳೆದು ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಶ್ರೀಮಠದ ಧರ್ಮದರ್ಶಿ ಹನುಮಂತಾಚಾರ್ಯ ಹೊಂಬಳ, ಶ್ರೀ ರಾಘವೇಂದ್ರ ಗುರುಸಾರ್ವಭೌಮರು ಭಕ್ತಿ, ಜ್ಞಾನ, ಧರ್ಮನಿಷ್ಠೆ ಹಾಗೂ ಸದಾಚಾರದ ದಾರಿದೀಪವಾಗಿದ್ದಾರೆ. ಅವರ ಆರಾಧನೆ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಅವರು ತೋರಿದ ಧರ್ಮಮಾರ್ಗವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪವಾಗಬೇಕು ಎಂದರು.

ರಾಘವೇಂದ್ರ ಸ್ವಾಮಿಗಳು ಪ್ರಹ್ಲಾದರಾಜರಾಗಿ, ಬಳಿಕ ವ್ಯಾಸರಾಜರಾಗಿ ಭಕ್ತಿ–ಜ್ಞಾನವನ್ನು ಪ್ರಸಾರ ಮಾಡಿ, ರಾಘವೇಂದ್ರ ತೀರ್ಥರಾಗಿ ಭಕ್ತರನ್ನು ಅನುಗ್ರಹಿಸುತ್ತಿದ್ದಾರೆ ಎಂದು ತಿಳಿಸಿದರು.

ರಥೋತ್ಸವದ ಬಳಿಕ ಶ್ರೀಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರಾಧನಾ ಮಹೋತ್ಸವಕ್ಕೆ ಸೇವೆ ಸಲ್ಲಿಸಿದ ಮಹನೀಯರನ್ನು ಗೌರವಿಸಲಾಯಿತು.

ಸಮಾಜದ ಹಿರಿಯ ಮುಖಂಡ ಕೃಷ್ಣ ಕುಲಕರ್ಣಿ ಮಾತನಾಡಿ, ನಂಬಿದ ಭಕ್ತರನ್ನು ರಾಯರು ಕೈಬಿಟ್ಟ ಉದಾಹರಣೆಗಳಿಲ್ಲ. 306 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಈ ಮಠದಲ್ಲಿ ಎಲ್ಲ ಸಮಾಜ ಬಾಂಧವರ ಸಹಕಾರದಿಂದ ಆರಾಧನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಸೇವೆ ಸಲ್ಲಿಸುವವರಿಗೆ ರಾಯರು ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಆಶಿಸಿದರು.

ಶನಿವಾರದಿಂದಲೇ ನೂರಾರು ಭಕ್ತರು ಶ್ರೀಮಠಕ್ಕೆ ಆಗಮಿಸಿ ರಾಯರ ದರ್ಶನ ಪಡೆದರು. ಹೊಂಬಳ ಮನೆತನದವರಿಂದ ಪೂಜಿಸಲ್ಪಡುತ್ತಿರುವ ಈ ಮಠದ ಆರಾಧನಾ ಮಹೋತ್ಸವ ವರ್ಷದಿಂದ ವರ್ಷಕ್ಕೆ ವೈಭವ ಪಡೆಯುತ್ತಿದೆ. ವಿವಿಧ ಪುಷ್ಪಗಳಿಂದ ಅಲಂಕರಿಸಲ್ಪಟ್ಟ ರಾಯರ ವೃಂದಾವನದ ದರ್ಶನ ಪಡೆದ ಭಕ್ತರು ಕಣ್ತುಂಬಿಕೊಂಡರು.

ಈ ವೇಳೆ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ರಾಮಣ್ಣ ಲಮಾಣಿ, ಬ್ರಹ್ಮವೃಂದದ ಅಧ್ಯಕ್ಷ ಗೋಪಾಲ ಪಡ್ನಿಸ್, ಚಂಬಣ್ಣ ಬಾಳಿಕಾಯಿ, ಸಿ.ಆರ್. ಲಕ್ಕುಂಡಿಮಠ, ಮಹೇಶ ಹೊಗೆಸೊಪ್ಪಿನ, ಶರಣು ಗೋಡಿ, ನೀಲಪ್ಪ ಕರ್ಜೆಕಣ್ಣವರ, ಎ.ಪಿ. ಕುಲಕರ್ಣಿ, ವೆಂಕಟೇಶ ಗುಡಿ, ಗುರುರಾಜ ಪಾಟೀಲಕುಲಕರ್ಣಿ, ವೇದವ್ಯಾಸ ಹೊಂಬಳ, ಡಿ.ಪಿ. ಹೇಮಾದ್ರಿ, ಅರವಿಂದ ದೇಶಪಾಂಡೆ, ಮನೋಜ ಹೊಂಬಳ, ದಿಗಂಬರ ಪೂಜಾರ, ಅನಿಲ ಕುಲಕರ್ಣಿ, ಬಾಬು ಅಳವಂಡಿ, ಶ್ರೀಪಾದರಾಜ ಹೊಂಬಳ, ಗುರುರಾಜ ಸುಳ್ಳದ, ಪ್ರಾಣೇಶ ಬೆಳ್ಳಟ್ಟಿ, ಗಂಗಾಧರ ಮ್ಯಾಗೇರಿ, ಕಿರಣ ನವಲೆ, ರಾಮು ಪೂಜಾರ, ರಾಘವೇಂದ್ರ ಗೊಗ್ಗಿ, ನಾಗರಾಜ ಪೂಜಾರ, ಕೃಷ್ಣಕುಮಾರ ಕುಲಕರ್ಣಿ, ಬಿ.ಕೆ. ಕುಲಕರ್ಣಿ, ಶ್ರೀನಿವಾಸ ಹುಲಮನಿ, ಶ್ರೀಕಾಂತ ಪೂಜಾರ, ಡಾ. ಪ್ರಸನ್ನ ಕುಲಕರ್ಣಿ, ಗಂಗಾಧರ ಗೋಡಿ, ರಮೇಶ ತೊರಗಲ್, ರವೀಂದ್ರ ರಾಯಚೂರ, ನಿಂಗಪ್ಪ ತಹಸೀಲ್ದಾರ, ಬಸವರಾಜ ಚಕ್ರಸಾಲಿ, ಗಂಗಾಧರ ಹಳ್ಳಿಕೇರಿ, ರಾಘವೇಂದ್ರ ಮಿಸ್ಕಿನ್, ವೆಂಕಟೇಶ ಮಾತಾಡೆ ಸೇರಿದಂತೆ ವಿವಿಧ ಮುಖಂಡರು, ಗಣ್ಯರು ಹಾಗೂ ನೂರಾರು ಮಹಿಳೆಯರು ಮತ್ತು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಗುರುವಿನ ಆರಾಧನೆಯ ನಿಜವಾದ ಅರ್ಥ ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರಲ್ಲಿದೆ. ದುಷ್ಟ ಗುಣಗಳನ್ನು ತ್ಯಜಿಸಿ ಹರಿಭಕ್ತಿ, ಶಾಸ್ತ್ರನಿಷ್ಠೆ ಹಾಗೂ ಧರ್ಮಮಾರ್ಗದಲ್ಲಿ ಸಾಗಿದಾಗ ಮಾತ್ರ ಗುರುರಾಯರ ಆರಾಧನೆ ಸಾರ್ಥಕವಾಗುತ್ತದೆ.

ಹನುಮಂತಾಚಾರ್ಯ ಹೊಂಬಳ

ಶೇರುದಾರರು ಫೋಟ್ ನಿಯಮ ಪಾಲಿಸಿ ಸಹಕಾರಿಯ ಪ್ರಗತಿಗೆ ಕೈಜೋಡಿಸಿ: ಮಹೇಶ ಕೋಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರಿ ಸಂಘ-ಸಂಸ್ಥೆಗಳು ಪ್ರಗತಿ ಹೊಂದಲು ಸದಸ್ಯರು ಹಾಗೂ ಶೇರುದಾರರು ಫೋಟ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅವಶ್ಯವಾಗಿದೆ ಎಂದು ಗದುಗಿನ ಕೃತಪುರ ಅರ್ಬನ್ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ಮಹೇಶ ಕೋಟಿ ಹೇಳಿದರು.

ನಗರದ ಕಲ್ಯಾಣ ಬಸವೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ರವಿವಾರ ಜರುಗಿದ ಕೃತಪುರ ಅರ್ಬನ್ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಹಕಾರಿ ಸಂಘದಲ್ಲಿ ಸಾಲ ಪಡೆದ ಸಾಲಗಾರರಷ್ಟೇ ಜಾಮೀನುದಾರರೂ ಜವಾಬ್ದಾರರಾಗಿರುತ್ತಾರೆ. ಸದಸ್ಯರು ಸಹಕಾರಿಯ ಫೋಟ್ ನಿಯಮಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿದಲ್ಲಿ ಸಹಕಾರಿ ಬೈಲಾ ಪ್ರಕಾರ ಸದಸ್ಯತ್ವದಿಂದ ಅನರ್ಹರಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಸಾಲಗಾರರು ತಾವು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಜಾಮೀನುದಾರರು ಸಹ ಸಾಲ ಮರುಪಾವತಿ ಕುರಿತು ನಿಗಾ ವಹಿಸಬೇಕು. ಹಿರಿಯರ ಪರಿಶ್ರಮದಿಂದ ಸ್ಥಾಪನೆಯಾದ ಈ ಸಹಕಾರಿ ಸಂಸ್ಥೆಯನ್ನು ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯಲು ನಿರ್ದೇಶಕರು ಹಾಗೂ ಶೇರುದಾರರು ಸಹಕರಿಸಬೇಕು ಎಂದು ಮನವಿ ಮಾಡಿದರು.

728 ಶೇರುದಾರರನ್ನು ಹೊಂದಿರುವ ಸಹಕಾರಿಯು 11 ಲಕ್ಷ 26 ಸಾವಿರ ರೂ.ಗಳ ಶೇರು ಬಂಡವಾಳ ಹೊಂದಿದೆ. 2025-26ನೇ ಸಾಲಿನಲ್ಲಿ ಸಹಕಾರಿಯು 3 ಕೋಟಿ 10 ಲಕ್ಷ 57 ಸಾವಿರ ರೂ.ಗಳ ವ್ಯವಹಾರ ನಡೆಸಿ, 11 ಲಕ್ಷ 44 ಸಾವಿರ ರೂ. ನಿವ್ವಳ ಲಾಭ ಗಳಿಸಿದೆ. ಶೇರುದಾರರಿಗೆ ಶೇ.8ರಷ್ಟು ಲಾಭಾಂಶ ನೀಡಲಾಗುವುದು ಎಂದು ವಾರ್ಷಿಕ ವರದಿ ಮಂಡಿಸಿ ಮಹೇಶ ಕೋಟಿ ತಿಳಿಸಿದರು.

ವೇದಿಕೆಯಲ್ಲಿ ನಿರ್ದೇಶಕರಾದ ಬಸವರಾಜ ರಾಮನಕೊಪ್ಪ, ಬಸವರಾಜ ಕೊರ್ಲಹಳ್ಳಿ, ಗಂಗಾಧರ ಮೇಲಗಿರಿ, ತೋಂಟೇಶ ಮಾನ್ವಿ, ಶಂಭು ಕಾರಕಟ್ಟಿ, ಸುಶೀಲಾ ಕೋಟಿ, ಸುರೇಖಾ ಪಿಳ್ಳಿ, ಕಲ್ಯಾಣಪ್ಪ ಕೋಟಿ, ಶರಣಬಸವ ಮಠದ ಹಾಗೂ ಶೈಲೇಶ ಬಾಗಮಾರ ಉಪಸ್ಥಿತರಿದ್ದರು. ಸೌಹಾರ್ದ ಫೆಡರೇಷನ್ ಗದಗ ಜಿಲ್ಲಾ ಸಂಯೋಜಕಿ ಗಂಗಮ್ಮ ನಾಯಕ ಭಾಗವಹಿಸಿದ್ದರು.

ಸುಶೀಲಾ ಕೋಟಿ ಸ್ವಾಗತಿಸಿದರು. ಸುರೇಖಾ ಪಿಳ್ಳಿ ಕಾರ್ಯಕ್ರಮ ನಿರೂಪಿಸಿದರು. ಗಂಗಾಧರ ಮೇಲಗಿರಿ ವಂದಿಸಿದರು.

ಸಭೆಯಲ್ಲಿ ನಗರಸಭೆಯ ಮಾಜಿ ಸದಸ್ಯ ಶರಣಪ್ಪ ಗದ್ದಿಕೇರಿ, ಶಿವಪುತ್ರಪ್ಪ ಕುಂದಗೋಳ, ಸಂಧ್ಯಾ ಕೋಟಿ, ಚೈತ್ರಾ ಕೋಟಿ, ಅಶೋಕ ಕುಡತಿನ್ನಿ, ಈರಪ್ಪ ಕೋಟ್ನೇಕಲ್ಲ, ಎಸ್.ಟಿ. ಪಾಟೀಲ, ಮಹಾರುದ್ರಪ್ಪ ನರಗುಂದ, ಮಲ್ಲಿಕಾರ್ಜುನ ಕೆಂಧೂಳಿ, ರಾಜಣ್ಣ ಬೇಲೇರಿ, ಸಿದ್ಧಮಲ್ಲಪ್ಪ ಕಾವೇರಿ, ರಮೇಶ ಪಿಳ್ಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸಮಾಜವನ್ನು ತಿದ್ದಿ ಮಾರ್ಗದರ್ಶನ ನೀಡುವವರು ಜಂಗಮರು: ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಹಿಂಡಾಗಿರುವ ಗುಂಪಿಗೆ ಸಮಾಜ ಎನ್ನಲಾಗದು. ಸಂಸ್ಕಾರ ಹಾಗೂ ಧರ್ಮಾಚರಣೆ ಇರುವ ಸಮುದಾಯವೇ ನಿಜವಾದ ಸಮಾಜವಾಗಿದ್ದು, ಸಮಾಜವನ್ನು ತಿದ್ದಿ ಸರಿಯಾದ ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿ ಜಂಗಮರ ಮೇಲಿದೆ ಎಂದು ನರೇಗಲ್‌ನ ಪೂಜ್ಯಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

ನಗರದ ಕೆಎಸ್‌ಆರ್‌ಟಿಸಿ ಡಿಪೋ ಹಿಂಭಾಗದಲ್ಲಿರುವ ಶ್ರೀ ಕುಮಾರೇಶ್ವರ ಧಾರ್ಮಿಕ ಪಾಠಶಾಲೆಯಲ್ಲಿ ರವಿವಾರ ಅಖಿಲ ಭಾರತ ಜಂಗಮ ಸೇವಾ ಸಮಿತಿ ಗದಗ ಹಾಗೂ ಪಂಚವಟಿ ಧಾರ್ಮಿಕ ಗುರುಕುಲ ಜನಕಲ್ಯಾಣ ಟ್ರಸ್ಟ್, ನರಸಾಪುರ–ಗದಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪದಾಧಿಕಾರಿಗಳ ಪದಗ್ರಹಣ, ಸಮಿತಿಯ ವಾರ್ಷಿಕೋತ್ಸವ, ‘ಜಂಗಮಶ್ರೀ’ ಪ್ರಶಸ್ತಿ ಪ್ರದಾನ ಹಾಗೂ ಉಡಿ ತುಂಬುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಂಗಮ ಸಮಾಜ ಶೈಕ್ಷಣಿಕ, ಧಾರ್ಮಿಕ ಹಾಗೂ ರಾಜಕೀಯವಾಗಿ ಹಿಂದುಳಿದಿಲ್ಲವಾದರೂ ಆರ್ಥಿಕವಾಗಿ ಹಿಂದುಳಿದಿದೆ. ದುಶ್ಚಟಗಳಿಂದ ಸಮಾಜ ಹಾಳಾಗುತ್ತಿದ್ದು, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು. ಹಳ್ಳಿಗಳಲ್ಲಿರುವ ಹಳೆಯ ಮಠಗಳನ್ನು ಅಭಿವೃದ್ಧಿಪಡಿಸಿ ಧಾರ್ಮಿಕ ಆಚರಣೆಗಳನ್ನು ಮುಂದುವರಿಸಬೇಕು. ಪಾಲಕರು ಮಕ್ಕಳಿಗೆ ಧಾರ್ಮಿಕ ಗ್ರಂಥಗಳನ್ನು ಓದಿಸುವ ಮೂಲಕ ಸಂಸ್ಕಾರ ಹಾಗೂ ಧರ್ಮಾಚರಣೆಯ ಮಹತ್ವ ತಿಳಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಗ್ರಾಹಕ ನ್ಯಾಯ ಪೀಠದ ನಿವೃತ್ತ ಸದಸ್ಯ ಎಫ್.ಪಿ. ಲಕ್ಷ್ಮೇಶ್ವರಮಠ ಮಾತನಾಡಿ, ಜನಸೇವೆಯೇ ಜನಾರ್ಧನ ಸೇವೆಯಾಗಿದ್ದು, ಸಮಾಜಸೇವಕರು ಹಾಗೂ ಸರ್ಕಾರಿ ನೌಕರರು ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಬೇಕು ಎಂದರು.

ಅಖಿಲ ಭಾರತ ಜಂಗಮ ಸೇವಾ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತೋಟಯ್ಯ ಗಡ್ಡಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಿತಿಯು ಮೂರು ವರ್ಷ ಪೂರೈಸಿ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದೆ. ಕಳೆದ ವರ್ಷ 64 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 35 ವಿದ್ಯಾರ್ಥಿಗಳಿಗೆ ಸಂಸ್ಕಾರ ಶಿಬಿರ, 100ಕ್ಕೂ ಹೆಚ್ಚು ವಟುಗಳಿಗೆ ಅಯ್ಯಾಚಾರ–ಲಿಂಗದೀಕ್ಷೆ ನೀಡುವುದರ ಜತೆಗೆ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೂವಿನಹಡಗಲಿ ಗವಿಮಠದ ಪೂಜ್ಯಶ್ರೀ ಡಾ. ಹಿರಿ ಶಾಂತವೀರ ಮಹಾಸ್ವಾಮಿಗಳು ಹಾಗೂ ಅಸೂಟಿಯ ರೇವಣಸಿದ್ದೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಅಖಿಲ ಭಾರತ ಜಂಗಮ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಕುಮಾರಸ್ವಾಮಿ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು.

ರುದ್ರಾರಾಧ್ಯ ಶಾಸ್ತ್ರಿಗಳು ಚೌಕಿಮಠ, ವೀರಯ್ಯ ಶಾಸ್ತ್ರಿಗಳು ಹಿರೇಮಠ, ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ವಸ್ತ್ರದ, ಅಮೃತಹನಿ ಸಂಸ್ಥಾಪಕ ಫಕೀರಯ್ಯ ಹಿರೇಮಠ, ಸಾಮಾಜಿಕ ಕಾರ್ಯಕರ್ತ ಶಿವಾನಂದಯ್ಯ ಹಿರೇಮಠ, ಆನಂದಯ್ಯ ವಿರಕ್ತಮಠ, ಎಂ.ಎನ್. ಶಿರೋಳಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕುಮಾರಸ್ವಾಮಿ ಹಿರೇಮಠ ಹಾಗೂ ತಂಡದವರು ಪ್ರಾರ್ಥಿಸಿದರು. ಉಮಾಪತಿ ಭೂಸನೂರಮಠ ಕಾರ್ಯಕ್ರಮ ನಿರೂಪಿಸಿದರು.

‘ಜಂಗಮಶ್ರೀ’ ಪ್ರಶಸ್ತಿ ಪ್ರದಾನ

ಸಾಹಿತ್ಯ, ಸಾಮಾಜಿಕ ಸೇವೆ, ವೈದಿಕ, ಕೃಷಿ, ಸಂಗೀತ, ಉದ್ಯಮ, ಶಿಕ್ಷಣ, ದಾಸೋಹ, ವೈದ್ಯಕೀಯ, ಕಲೆ, ಕ್ರೀಡೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ರುದ್ರಾರಾಧ್ಯ ಶಾಸ್ತ್ರಿಗಳು ಚೌಕಿಮಠ, ರೇವಣಸಿದ್ದಯ್ಯ ಸ್ವಾಮಿಗಳು ಹಿರೇಮಠ, ವೀರಯ್ಯ ಶಾಸ್ತ್ರಿಗಳು ಹಿರೇಮಠ, ಬಸಯ್ಯ ಸಾಸ್ವಿಹಳ್ಳಿಮಠ, ಡಾ. ಶಿವಬಸಯ್ಯ ಗಡ್ಡದಮಠ, ಕಳಕನಗೌಡ ಪಾಟೀಲ, ವೀರಭದ್ರಯ್ಯ ಹಿರೇಮಠ, ಚಂದ್ರಕಲಾ ಇಟಗಿಮಠ, ವಿನಯಕುಮಾರ ಗಂಧದ, ಈಶ್ವರಯ್ಯ ಹಿರೇಮಠ, ಶಿವಕುಮಾರ ಸ್ವಾಮಿಮಠ, ಶಿವಯ್ಯ ಅಲ್ಲಮಯ್ಯನವರ, ಧನಲಕ್ಷ್ಮೀ ಹಾಲ್ಮಠ, ಡಾ. ತೇಜಸ್ವಿನಿ ಹಿರೇಮಠ, ಅನುಸೂಯ ಹೊಸೂರುಮಠ, ಫಕ್ಕಿರಗೌಡ ಪಾಟೀಲ ಹಾಗೂ ಷಡಕ್ಷರಯ್ಯ ಹಿರೇಮಠ ಅವರಿಗೆ ‘ಜಂಗಮಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದೇಶ, ಸಮಾಜಕ್ಕಾಗಿ ಕೆಲಸ ಮಾಡುವ ಸಂಕಲ್ಪ ಮಾಡಬೇಕು: ವಿನಾಯಕ ತಳಗೇರಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹಿಂದೂಗಳ ಬಗ್ಗೆ ಹಿಂದೂಗಳು ದೇಶವ್ಯಾಪಿ ಜಾಗೃತರಾಗಬೇಕು. ಪ್ರತಿಯೊಬ್ಬ ಹಿಂದೂ ಪ್ರಜೆಯೂ ದೇಶ ಹಾಗೂ ಹಿಂದೂ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂಬ ಸಂಕಲ್ಪ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಸಹ ಕಾರ್ಯದರ್ಶಿ ವಿನಾಯಕ ತಳಗೇರಿ ಹೇಳಿದರು.

ಪಟ್ಟಣದ ಶಂಕರ ಭಾರತಿಮಠದ ಸಮುದಾಯ ಭವನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಲಕ್ಷ್ಮೇಶ್ವರ ಘಟಕದಿಂದ ಶನಿವಾರ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಗಳಿಗೆ ಹಿಂದೂಗಳು ಸಮಯ ನೀಡಬೇಕು ಹಾಗೂ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಪ್ರತಿಯೊಂದು ಮನೆಯಲ್ಲೂ ಹಿಂದೂ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದು ಹೇಳಿದರು.

ಗೋಹತ್ಯೆ, ಮತಾಂತರ ಹಾಗೂ ಲವ್ ಜಿಹಾದ್ ತಡೆಯುವ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ದೇಶದಲ್ಲಿ ಹಿಂದುತ್ವದ ಪರವಾದ ವಾತಾವರಣ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಎದುರಿಸುವ ಪರಿಸ್ಥಿತಿಯೂ ಇದೆ. ಯುವಶಕ್ತಿಯನ್ನು ಬೇರೆಡೆ ಸೆಳೆಯಲು ಷಡ್ಯಂತ್ರಗಳು ನಡೆಯುತ್ತಿದ್ದು, ಇಂತಹ ಪ್ರಯತ್ನಗಳಿಗೆ ಹಿಂದೂ ಸಮಾಜ ಕಡಿವಾಣ ಹಾಕಬೇಕು ಎಂದು ತಿಳಿಸಿದರು.

ರಕ್ಷಾ ಬಂಧನ ಹಬ್ಬವನ್ನು ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಉತ್ಸಾಹದಿಂದ ಆಚರಿಸಲಾಗುತ್ತಿದೆ. ಈ ಹಬ್ಬವು ಪರಸ್ಪರ ಸಹೋದರತ್ವ, ಏಕತೆ ಹಾಗೂ ಎಲ್ಲರೂ ಒಂದೇ ಎಂಬ ಭಾವನೆಯನ್ನು ಸಾರುತ್ತದೆ. ಕಷ್ಟದ ದಿನಗಳಲ್ಲಿಯೂ ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದುಬಂದಿದೆ. ಇಂದು ಸಂಘದ ಚಟುವಟಿಕೆಗಳಿಗೆ ಮುಕ್ತ ಅವಕಾಶ ದೊರೆತಿದ್ದು, ವಿದೇಶಗಳಲ್ಲಿಯೂ ರಾಮನ ಜಪ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಶಾರದಾ ಸಂಗೀತ ಗುರುಕುಲದ ಸಂಸ್ಥಾಪಕ ಕೃಷ್ಣಕುಮಾರ ಕುಲಕರ್ಣಿ ಮಾತನಾಡಿ, ದೇಶ ಹಾಗೂ ಸಮಾಜಕ್ಕೆ ಕಂಟಕ ಎದುರಾದಾಗಲೆಲ್ಲ ರಕ್ಷಾ ಬಂಧನದಂತಹ ಹಬ್ಬಗಳು ಜನರಲ್ಲಿ ಆತ್ಮಸ್ಥೈರ್ಯ ತುಂಬುತ್ತವೆ. ಯುವಜನರು ದೇಶದ ಪ್ರಗತಿಗಾಗಿ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪದೊಂದಿಗೆ ಮುನ್ನಡೆದರೆ ಆದರ್ಶ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರ್‌ಎಸ್‌ಎಸ್ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಚಂದ್ರಶೇಖರ ಹಂಪಣ್ಣವರ, ತಾಲೂಕು ಕಾರ್ಯವಾಹ ಶಿವರಾಜ ಗುಜರಿ, ಸುನೀಲ ಮೆಡ್ಲೇರಿ, ಉಮೇಶ ಮಡಿವಾಳರ, ಪಾಂಡುರಂಗ ಕಾಕಡೆ, ಗುರು ಮೆಡ್ಲೇರಿ, ರಾಜು ಅರಳಿ, ಪ್ರವೀಣ, ವೈ.ಕೆ. ಲಿಂಗಶೆಟ್ಟಿ, ರೋಹಿತ ಬಾಕಳೆ, ಮುರುಗೇಶ ದುಂಡಿ, ಯಲ್ಲಪ್ಪ ಶಿರಬಡಗಿ, ಶಂಕರ ಬ್ಯಾಡಗಿ, ಮಂಜುನಾಥ ಬೆಂಗಳೂರು, ಸಂತೋಷ ಬಡಿಗೇರ ಹಾಗೂ ಕೊಟ್ರೇಶ ಅಳವಂಡಿ ಉಪಸ್ಥಿತರಿದ್ದರು.