ವಿಜಯಪುರ: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿಯೊಬ್ಬರು ಬಲಿಯಾದ ಹೃದಯವಿದ್ರಾವಕ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಬಂಗಾರ ಮತ್ತು ಹಣಕ್ಕಾಗಿ ನಿರಂತರವಾಗಿ ಕಿರುಕುಳ ನೀಡಿದ್ದ ವೈದ್ಯನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಗೃಹಿಣಿಯನ್ನು ಸವಿತಾ ಶಿರಶ್ಯಾಡ್ (30) ಎಂದು ಗುರುತಿಸಲಾಗಿದೆ. ಘಟನೆ ವಿಜಯಪುರ ನಗರದ ಗೌರಿ ಶಂಕರ ಬಡಾವಣೆಯಲ್ಲಿ ನಡೆದಿದೆ. ಸುಮಾರು 10 ವರ್ಷಗಳ ಹಿಂದೆ ಸವಿತಾ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮದುವೆಯಾದ ಬಳಿಕವೂ ವರದಕ್ಷಿಣೆಗಾಗಿ ಪತಿ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ.
ವೈದ್ಯ ಡಾ. ರಾಜಶೇಖರ ಶಿರಶ್ಯಾಡ ಬಂಗಾರ ಹಾಗೂ ಹಣ ತರಬೇಕೆಂದು ಪತ್ನಿಯನ್ನು ನಿರಂತರವಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಗೃಹಿಣಿ ಸವಿತಾರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ಪತಿ ಹಾಗೂ ಆತನ ಕುಟುಂಬಸ್ಥರ ಮೇಲೆ ಕೇಳಿಬಂದಿದೆ.
ಘಟನೆ ನಡೆದ ನಂತರ ಸವಿತಾ ತವರು ಮನೆಯವರಿಗೆ ವೈದ್ಯನ ಕುಟುಂಬಸ್ಥರು ಕರೆ ಮಾಡಿ, ಸವಿತಾ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿಸಿರುವುದಾಗಿ ಆರೋಪಿಸಲಾಗಿದೆ. ಆದರೆ ಬಳಿಕ ಗೃಹಿಣಿ ಸಾವನ್ನಪ್ಪುತ್ತಿದ್ದಂತೆ ವೈದ್ಯ ಮತ್ತು ಆತನ ಕುಟುಂಬಸ್ಥರು ಮನೆ ಹಾಗೂ ಆಸ್ಪತ್ರೆಗೆ ಹೋಗಿ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸವಿತಾ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ನಂತರ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಪ್ರಕರಣ ವಿಜಯಪುರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

