ವಿಜಯಸಾಕ್ಷಿ ಸುದ್ದಿ, ತುಮಕೂರು: ಯುವಶಕ್ತಿ ದೇಶದ ಬಲು ದೊಡ್ಡ ಶಕ್ತಿ ಮತ್ತು ಆಸ್ತಿ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಲು ದೊಡ್ಡದು. ಬಾಳೆಗೊಂದು ಗೊನೆಯಿರುವಂತೆ ಯುವಕರ ಬಾಳಿಗೊಂದು ಗುರಿಯಿರಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ನಿಂದ ಸಂಘಟಿಸಿದ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜಾ, ಜನ ಜಾಗೃತಿ ಧರ್ಮ ಸಮಾರಂಭದ 3ನೇ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಭೂಮಿಯ ವ್ಯಾಸ ಇದ್ದಷ್ಟೇ ಇದೆ. ಆದರೆ ಮನುಷ್ಯನ ಹವ್ಯಾಸಗಳು ಮಾತ್ರ ಬೆಳೆಯುತ್ತಲೇ ಇವೆ. ದೈಹಿಕವಾಗಿ ನಾವೆಷ್ಟೇ ಸದೃಢವಾಗಿದ್ದರೂ ಮನಸ್ಸು ದೃಢವಾಗಿರದಿದ್ದರೆ ಯಾವ ಪ್ರಯೋಜನವು ಇಲ್ಲ. ಬೆಳೆಯುವ ಯುವ ಜನಾಂಗದಲ್ಲಿ ಕರ್ತವ್ಯಶೀಲತೆ ಮತ್ತು ಪ್ರಾಮಾಣಿಕತೆ ಬೆಳೆದು ಬರುವ ಅವಶ್ಯಕತೆಯಿದೆ. ಯುವ ಜನಾಂಗಕ್ಕೆ ಇತಿಹಾಸದ ಅರಿವು ಅಗತ್ಯ. ಯುವ ಜನಾಂಗ ಈ ರಾಷ್ಟ್ರದ ಅಮೂಲ್ಯ ಸಂಪತ್ತು. ಆಲಸ್ಯ ಮತ್ತು ದುರ್ವ್ಯಸನಗಳಿಂದ ದೂರವಾಗಿ ಸದೃಢ ಸಮಾಜ ಕಟ್ಟಿ ಬೆಳೆಸುವುದರಲ್ಲಿ ಯುವಕರು ಶ್ರಮಿಸುವ ಅವಶ್ಯಕತೆಯಿದೆ. ಯುವಾವಸ್ಥೆಯಲ್ಲಿ ಧರ್ಮಾಚರಣೆ ಪಾಲಿಸಿದರೆ ಜೀವನ ಉಜ್ವಲವಾಗುವುದರಲ್ಲಿ ಅನುಮಾನವಿಲ್ಲ ಎಂದರು.
ಯುವ ಸಾಹಿತಿ, ಪತ್ರಕರ್ತ ಪ್ರಶಾಂತ ರಿಪ್ಪನ್ಪೇಟೆ ಮಾತನಾಡಿ, ಯುವ ಜನಾಂಗದಲ್ಲಿ ಅದ್ಭುತ ಶಕ್ತಿಯಿದೆ. ಆ ಶಕ್ತಿಯನ್ನು ಒಳ್ಳೆಯ ಕಾರ್ಯಕ್ಕೆ ಬಳಸಿಕೊಂಡರೆ ಬಲು ದೊಡ್ಡ ಸಾಧನೆ ಮಾಡಲು ಸಾಧ್ಯವಿದೆ. ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಕೊಡುವ ಕೆಲಸ ಎಲ್ಲರೂ ಮಾಡಬೇಕಾಗಿದೆ. ವಿನಯವಿಲ್ಲದ ವಿದ್ಯೆ, ಪ್ರತಿಭೆಯಿಲ್ಲದ ವ್ಯಕ್ತಿಯ ಜೀವನ ವ್ಯರ್ಥ. ಕಾಯಕದ ಮೂಲಕ ಜೀವನದಲ್ಲಿ ಕಳಾ ಚೈತನ್ಯ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಮಂಜುಳಾ ಲೋಕೇಶ್, ಟಿ.ಸಿ. ಓಹಿಲೇಶ್ವರ, ಜಿ.ಮಲ್ಲಿಕಾರ್ಜುನಯ್ಯ, ಗಂಗಾಧರ ಶಾಸ್ತ್ರಿಗಳು, ಸಿ.ವಿ. ಮಹದೇವಯ್ಯ, ಎಂ.ಎಸ್. ಉಮೇಶ್, ಹೆಚ್.ನೀಲೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಜಿ.ನಾಗರಾಜು ಸೇರಿದಂತೆ ಹಲವಾರು ಗಣ್ಯರು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಗೌರವ ಗುರುರಕ್ಷೆ ಸ್ವೀಕರಿಸಿದರು.
ತೆವಡೆಹಳ್ಳಿ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯರು ಉಪಸ್ಥಿತರಿದ್ದರು. ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಸಮಾರಂಭದ ನೇತೃತ್ವ ವಹಿಸಿದ್ದರು. ಜಿ.ಎಸ್. ಸಿದ್ಧರಾಜು ಸ್ವಾಗತಿಸಿದರು. ಓಂಕಾರಸ್ವಾಮಿ ನಿರೂಪಿಸಿದರು. ಆರ್.ಶಿವಕುಮಾರ್ ಮತ್ತು ಕುಟುಂಬ ವರ್ಗದವರು ಪೂಜಾ ಸೇವೆಯನ್ನು ಸಲ್ಲಿಸಿದರು.
ಕೇಂದ್ರ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ಆಗಮಿಸಿ ಶ್ರೀ ರಂಭಾಪುರಿ ಜಗದ್ಗುರುಗಳಿಂದ ಆಶೀರ್ವಾದ ಪಡೆದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ಸಂಸದ ಜಿ.ಎಸ್. ಬಸವರಾಜ ಮಾತನಾಡಿ, ಸುಖ-ಶಾಂತಿಯ ಬದುಕಿಗೆ ಧರ್ಮಾಚರಣೆಯೊಂದೇ ಮೂಲ. ಭಾರತೀಯ ಆದರ್ಶ ಸಂಸ್ಕೃತಿ ಸಭ್ಯತೆ ಜನ ಮರೆಯುತ್ತಿರುವುದರಿಂದ ಅನೇಕ ತಾಪತ್ರಯಗಳನ್ನು ಎದುರಿಸಬೇಕಾಗಿದೆ. ವೀರಶೈವ ಧರ್ಮ ಸಂಸ್ಕೃತಿಯಲ್ಲಿ ಉತ್ಕೃಷ್ಟವಾದ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದೆ ಎಂದರು.

