ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಕಂಡಂತಹ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಹರಿಹರದಲ್ಲಿರುವ ವಾಲ್ಮೀಕಿ ಮಠದಲ್ಲಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರವಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಜನಪ್ರತಿನಿಧಿಯಾಗಿ ಜನರ ಪರ ಧ್ವನಿ ಎತ್ತಿದ್ದಾರೆ ಎಂದು ಹೇಳಿದರು. ಆದರೆ, ಜನರ ತಾಳ್ಮೆಯನ್ನು ಪರೀಕ್ಷಿಸುತ್ತಿರುವ ಈ ಸರ್ಕಾರ, ಪ್ರತಿಭಟನೆಗೆ ಆಗಮಿಸಿದವರನ್ನೇ ಬಂಧಿಸುವ ಮೂಲಕ ತನ್ನ ನೈಜ ಸ್ವರೂಪವನ್ನು ತೋರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವರ್ಷದೊಳಗೆ ಎರಡು ಬಾರಿ ಮೆಟ್ರೋ ದರ ಏರಿಕೆ ಮಾಡಿರುವುದು ಜನರ ತಾಳ್ಮೆಯ ಕಟ್ಟೆಯನ್ನು ಒಡೆದಿದೆ. ಅದನ್ನು ತಡೆಯಲು ಸಂಸದ ತೇಜಸ್ವಿ ಸೂರ್ಯ ಹೋರಾಟ ನಡೆಸಿದ್ದು, ದರ ಏರಿಕೆಯನ್ನು ತಡೆ ಹಿಡಿದಿದ್ದಾರೆ ಎಂದು ಹೇಳಿದರು.
ಮೆಟ್ರೋ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಸಾಕಷ್ಟು ಅನುದಾನ ಬರುತ್ತಿದೆ. ಆದರೆ, ರಾಜ್ಯ ಸರ್ಕಾರ ತನ್ನ ಬಜೆಟ್ನಲ್ಲಿ ಮೆಟ್ರೋಗೆ ಅಗತ್ಯ ಅನುದಾನ ನೀಡದೇ, ಜನರ ಮೇಲೆ ದರ ಏರಿಕೆಯ ಹೊರೆ ಹಾಕಿದೆ ಎಂದು ಆರೋಪಿಸಿದರು. ಈ ಅನ್ಯಾಯದ ವಿರುದ್ಧ ಹೋರಾಟ ಮಾಡಿ ತೇಜಸ್ವಿ ಸೂರ್ಯ ಜನರಿಗೆ ನ್ಯಾಯ ಕೊಡಿಸಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು.

