ನವದೆಹಲಿ: ಬೆಂಗಳೂರಿನ ಮಹತ್ವದ ನಗರಾಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುಮತಿ ಹಾಗೂ ಬೆಂಬಲ ಕೋರಿ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಅವರಿಗೆ ಪತ್ರ ಬರೆದಿದ್ದಾರೆ.
ದೆಹಲಿಯಲ್ಲಿ ಮಂಗಳವಾರ ಸಚಿವ ಮನೋಹರ್ ಲಾಲ್ ಅವರನ್ನು ಭೇಟಿ ಮಾಡಿದ ಶಿವಕುಮಾರ್ ಅವರು, ಮೆಟ್ರೋ 2ನೇ ಹಂತದ ಪರಿಷ್ಕೃತ ವೆಚ್ಚಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತದ ಯೋಜನೆಗೆ ಅನುಮೋದನೆ, RRTS ಯೋಜನೆಗೆ ಬೆಂಬಲ ಹಾಗೂ ಮಿಟ್ಟಗಾನಹಳ್ಳಿ ಕೆರೆ ಬಳಿ ಲೆಗಸಿ ಲೀಚೇಟ್ ತ್ಯಾಜ್ಯ ವಿಲೇವಾರಿ ಯೋಜನೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.
ಪತ್ರದಲ್ಲಿ ಏನಿದೆ?
ಬೆಂಗಳೂರು ದೇಶದ ಪ್ರಮುಖ ಮಹಾನಗರವಾಗಿದ್ದು, ಹಲವು ನಗರಾಭಿವೃದ್ಧಿ ಯೋಜನೆಗಳು ಪ್ರಗತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಬಾಕಿ ಪ್ರಸ್ತಾವನೆಗಳಿಗೆ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ಶೀಘ್ರ ಅನುಮತಿ ನೀಡಬೇಕು ಎಂದು ಅವರು ಕೋರಿದ್ದಾರೆ.
ಮೆಟ್ರೋ 2ನೇ ಹಂತದ ಯೋಜನೆಯ ಪರಿಷ್ಕೃತ ಪೂರ್ಣಗೊಳಿಸುವ ವೆಚ್ಚ ₹26,405 ಕೋಟಿಯಿಂದ ₹40,425 ಕೋಟಿಗೆ ಏರಿಕೆಯಾಗಿದ್ದು, ಇದಕ್ಕೆ ರಾಜ್ಯ ಸರ್ಕಾರವು 2025 ಜೂನ್ 5ರಂದು ಅನುಮೋದನೆ ನೀಡಿದೆ. ಈ ಪ್ರಸ್ತಾವನೆಯನ್ನು 2025 ಜೂನ್ 9ರಂದು ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ತಕ್ಷಣ ಒಪ್ಪಿಗೆ ನೀಡುವಂತೆ ಮನವಿ ಮಾಡಿದ್ದಾರೆ.
ಇನ್ನು ಮೆಟ್ರೋ 3ಎ ಹಂತದ ಯೋಜನೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದವಿದ್ದು, 28 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಮಾರ್ಗವಿದ್ದು, ಒಟ್ಟು ವೆಚ್ಚವನ್ನು ₹28,405 ಕೋಟಿ ಎಂದು ಅಂದಾಜಿಸಲಾಗಿದೆ. ಈ ಯೋಜನೆಗೆ ರಾಜ್ಯ ಸರ್ಕಾರವು 2025 ಜನವರಿ 10ರಂದು ಒಪ್ಪಿಗೆ ನೀಡಿದ್ದು, ಜನವರಿ 15ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರದ ಅನುಮೋದನೆ ಇನ್ನೂ ಬಾಕಿ ಇರುವುದರಿಂದ ಶೀಘ್ರ ಅನುಮತಿ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

