Home Blog Page 285

ಸಿನಿಮಾ–ಸರ್ಜರಿ ಎರಡರಲ್ಲೂ ಸಕ್ಸಸ್: ವೈದ್ಯ ಪದವಿ ಸ್ವೀಕರಿಸಿದ ಕನ್ನಡತಿ ಶ್ರೀಲೀಲಾ

ಬಹುಭಾಷಾ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರೀಲೀಲಾ ಇದೀಗ ಜೀವನದ ಮತ್ತೊಂದು ಮಹತ್ವದ ಗುರಿಯನ್ನು ಸಾಧಿಸಿದ್ದಾರೆ. ಸಿನಿಮಾ ಮತ್ತು ನೃತ್ಯದ ನಡುವೆಯೇ ಎಂಬಿಬಿಎಸ್ ಪೂರ್ಣಗೊಳಿಸಿದ ಅವರು, ಡಿವೈ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಅಧಿಕೃತವಾಗಿ ವೈದ್ಯ ಪದವಿ ಪಡೆದಿದ್ದಾರೆ.

ಕನ್ನಡ ಸಿನಿಮಾಗಳಿಂದ ತೆಲುಗು ಚಿತ್ರರಂಗಕ್ಕೆ ಹೋಗಿ ಅಲ್ಲಿ ಟಾಪ್ ಹೀರೋಯಿನ್ ಪಟ್ಟಕ್ಕೇರಿದ ಶ್ರೀಲೀಲಾ, ಬಾಲಿವುಡ್‌ನಲ್ಲೂ ಒಟ್ಟಿಗೆ ಹಲವು ಸಿನಿಮಾಗಳನ್ನು ಒಪ್ಪಿಕೊಂಡು ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದ್ದಾರೆ. ತಮಿಳು ಚಿತ್ರರಂಗದಲ್ಲೂ ಅವರು ಬೇಡಿಕೆಯ ನಟಿಯಾಗಿ ಹೊರಹೊಮ್ಮುತ್ತಿದ್ದಾರೆ.

ಪದವಿ ಸಮಾರಂಭದಲ್ಲಿ ವೈದ್ಯರ ಪ್ರತಿಜ್ಞೆ ಸ್ವೀಕರಿಸುತ್ತಿರುವ ಹಾಗೂ ಅಧಿಕೃತ ಘೋಷಣೆ ನಂತರ ಸಂತಸದಿಂದ ನಗುತ್ತಿರುವ ಅವರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸಿನಿಮಾ ಕ್ಷೇತ್ರದಲ್ಲಿ ಓದಿನ ಹಿನ್ನೆಲೆ ಕಡಿಮೆ ಎನ್ನುವ ಕಲ್ಪನೆಗೆ ಅವರು ಮತ್ತೊಮ್ಮೆ ಸವಾಲು ಹಾಕಿದ್ದಾರೆ.

ದಕ್ಷಿಣ ಭಾರತದ ನಟಿ ಸಾಯಿ ಪಲ್ಲವಿ ನಂತರ ಇದೀಗ ಶ್ರೀಲೀಲಾ ಸಹ ವೈದ್ಯೆಯಾಗಿರುವುದು ವಿಶೇಷ. ಚಿತ್ರರಂಗದಲ್ಲಿ ಎಂಜಿನಿಯರ್ ಹಾಗೂ ವೈದ್ಯ ಪದವಿಧರರ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಇದು ಮತ್ತೊಂದು ಉದಾಹರಣೆ.

ಪ್ರಸ್ತುತ ಅವರು ತೆಲುಗಿನಲ್ಲಿ ಪವನ್ ಕಲ್ಯಾಣ್ ಜೊತೆ, ತಮಿಳಿನಲ್ಲಿ ಧನುಶ್ ಹಾಗೂ ಪ್ರದೀಪ್ ರಂಗನಾಥನ್ ಜೊತೆ, ಹಿಂದಿಯಲ್ಲಿ ‘ಆಶಿಖಿ 3’ ಹಾಗೂ ರಣ್ವೀರ್ ಸಿಂಗ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಒಂದೆಡೆ ವೈದ್ಯೆ, ಮತ್ತೊಂದೆಡೆ ಸ್ಟಾರ್ ನಟಿ — ಎರಡೂ ಜಗತ್ತನ್ನೂ ಸಮತೋಲನಗೊಳಿಸುತ್ತಿರುವ ಶ್ರೀಲೀಲಾ ಇದೀಗ ಯುವಜನತೆಗೆ ಪ್ರೇರಣೆಯಾಗಿದ್ದಾರೆ.

ರಾಯಚೂರು| ಕಾರು-ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಚಾಲಕ ಗಂಭೀರ, ವಾಹನ ನಜ್ಜುಗುಜ್ಜು

0

ರಾಯಚೂರು: ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ರೀನ್ ಲೈನ್ಸ್ ಖಾಸಗಿ ಬಸ್ ಮತ್ತು ಕಾರಿನ ನಡುವೆ ಆಂಧ್ರಪ್ರದೇಶದ ಕರ್ನೂರು ಜಿಲ್ಲೆಯ ಆಲೂರು ಸಮೀಪ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಸಮಯಪ್ರಜ್ಞೆ ತೋರಿಸಿ ಬೆಂಕಿಯನ್ನು ಆರಿಸಿದ್ದಾರೆ.

ಸ್ವಲ್ಪ ಯಾಮಾರಿದ್ದರೆ ಬೆಂಕಿ ಬಸ್‌ಗೆ ತಗಲುವ ಸಾಧ್ಯತೆ ಇತ್ತು ಎನ್ನಲಾಗಿದೆ. ಘಟನೆಯಿಂದ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಪ್ರಯಾಣಿಕರು ಸುಮಾರು ಎರಡು ಗಂಟೆಗಳ ಕಾಲ ಚಳಿಯಲ್ಲಿ ಒದ್ದಾಡಿದ ಸ್ಥಿತಿ ನಿರ್ಮಾಣವಾಯಿತು.

ಈ ಘಟನೆ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಸಾಜ್ ಪಾರ್ಲರ್‌ನ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ಸಾಧು ಕೋಕಿಲ, ಮಂಡ್ಯ ರಮೇಶ್ ವಿರುದ್ಧದ ಪ್ರಕರಣ‌ ರದ್ದು

ಬೆಂಗಳೂರು: ಏಳು ವರ್ಷಗಳ ಹಿಂದೆ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಇಬ್ಬರು ಪ್ರಮುಖ ನಟರಿಗೆ ಕರ್ನಾಟಕ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ.

ಸಾಧು ಕೋಕಿಲಾ ಮತ್ತು ಮಂಡ್ಯ ರಮೇಶ್ ವಿರುದ್ಧ 2017ರಲ್ಲಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಸಾಜ್ ವೇಳೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ದೂರು ನೀಡಿದ್ದರು. ಈ ಪ್ರಕರಣದಲ್ಲಿ ನಟರಿಗೆ ಸಮನ್ಸ್ ಜಾರಿಯಾಗಿದ್ದು, ವಿಚಾರಣೆ ಆರಂಭವಾಗುವ ಹಂತದಲ್ಲಿತ್ತು.

2019ರಲ್ಲಿ ಹೈಕೋರ್ಟ್ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿತ್ತು. ನಂತರ ಪ್ರಕರಣ ರದ್ದುಗೊಳಿಸುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ಪೀಠ, ಎಫ್‌ಐಆರ್‌ನಲ್ಲಿ ಸ್ಪಷ್ಟ ಆರೋಪಗಳ ಕೊರತೆ ಹಾಗೂ ಸಮರ್ಪಕ ಸಾಕ್ಷ್ಯಾಧಾರಗಳ ಅಭಾವವನ್ನು ಉಲ್ಲೇಖಿಸಿ ಪ್ರಕರಣವನ್ನು ರದ್ದುಪಡಿಸಿದೆ.

ನಟರ ಪರವಾಗಿ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ವಾದ ಮಂಡಿಸಿದ್ದರು. ಆರೋಪ ಸಾಬೀತುಪಡಿಸಲು ಅಗತ್ಯವಾದ ಕಾನೂನು ಮಾನದಂಡಗಳು ಪೂರೈಸಲಾಗಿಲ್ಲ ಎಂದು ವಾದಿಸಲಾಯಿತು.

ಈ ತೀರ್ಪು ಸಿನಿಮಾ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ಅಂತ್ಯಕ್ಕೆ ತೆರೆ ಬಿದ್ದಂತಾಗಿದೆ.

ಪಿರಿಯಾಪಟ್ಟಣದಲ್ಲಿ ಅಕ್ರಮ ಕೇರಳ ಲಾಟರಿ ಜಾಲ ಭೇದಿಸಿದ ಪೊಲೀಸ್ ವಿಶೇಷ ತಂಡ: ಇಬ್ಬರ ಬಂಧನ!

0

ಮೈಸೂರು:- ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಪತ್ತೆಹಚ್ಚಿ ಭರ್ಜರಿ ಕಾರ್ಯಾಚರಣೆ ನಡೆಸಿದೆ.

ಪಿರಿಯಾಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಅರುಣ್ ಕುಮಾರ್ ಮತ್ತು ಸ್ವಾಮಿ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್‌ನ್ನು ವೆಂಕಟೇಶ್ವರ ವೇ ಬ್ರಿಡ್ಜ್ ಬಳಿ ಲಾಟರಿ ಮಾರಾಟ ಮಾಡುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದ್ದು, ಸ್ವಾಮಿಯನ್ನು ಸಿಂಚನ ಹೋಟೆಲ್‌ನಲ್ಲಿ ಬಂಧಿಸಲಾಗಿದೆ.

ಬಂಧಿತರಿಂದ ಒಟ್ಟು 78,130 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಅದರಲ್ಲಿ 55,200 ರೂ. ಮೌಲ್ಯದ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳು ಮತ್ತು 22,930 ರೂ. ನಗದು ಹಣ ಸೇರಿವೆ. ಮೈಸೂರು ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ ಹಾಗೂ ಅಡಿಷನಲ್ ಎಸ್‌ಪಿ ಮಲ್ಲಿಕ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಯೂನಿಯನ್ ಬ್ಯಾಂಕ್ ATM ದರೋಡೆ: ಗ್ಯಾಸ್ ಕಟರ್ ಬಳಸಿ 5 ಲಕ್ಷ ಲೂಟಿ!

0

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹನುಮರಹಳ್ಳಿ ಗ್ರಾಮದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ATM ಯಲ್ಲಿ ದರೋಡೆ ನಡೆದಿದೆ.

ಅಪರಿಚಿತರು ಗ್ಯಾಸ್ ಕಟರ್ ಬಳಸಿ ATM ಯಂತ್ರವನ್ನು ಕತ್ತರಿಸಿ, ಒಳಗಿದ್ದ ಸುಮಾರು 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ದರೋಡೆ ವೇಳೆ ಆರೋಪಿಗಳು ಸಿಸಿಟಿವಿ ಕ್ಯಾಮೆರಾಗಳಿಗೆ ಬಿಳಿ ಬಣ್ಣ ಸಿಂಪಡಿಸಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಘಟನೆ ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

ಸೈಬರ್ ವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ: ಲೋಕಾಯುಕ್ತ ಸಿಪಿಐ ಪರಮೇಶ್ವರ ಕವಟಗಿ

0

ವಿಜಯಸಾಕ್ಷಿ ಸುದ್ದಿ, ರೋಣ: ಸರಕಾರಿ ನೌಕರರು ಸೇರಿದಂತೆ ಸಾರ್ವಜನಿಕರು ಸೈಬರ್ ವಂಚಕರಿಂದ ಎಚ್ಚರಿಕೆಯಿಂದಿರುವುದು ಸೂಕ್ತ. ಇಲ್ಲದಿದ್ದರೆ ಇಬ್ಬರ ಮೇಲೂ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಲೋಕಾಯುಕ್ತ ಸಿಪಿಐ ಪರಮೇಶ್ವರ ಕವಟಗಿ ಹೇಳಿದರು.

ಅವರು ಬುಧವಾರ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಿದರು.

ಸೈಬರ್ ವಂಚಕರು ಪರಿಚಯದವರ ಸೋಗಿನಲ್ಲಿ ಮೋಸ ಮಾಡುವ ಹೊಸ ವಿಧಾನವನ್ನು ಬಳಕೆ ಮಾಡಿಕೊಂಡಿದ್ದಾರೆ. ಕಾರಣ ನಿಮ್ಮ ಹೆಸರಿನಲ್ಲಿ ನಿಮಗೆ ಪರಿಚಯ ಇರುವ ವ್ಯಕ್ತಿಗಳ ಮೊಬೈಲ್‌ಗೆ ಲಿಂಕ್ ಕಳಿಸುತ್ತಾರೆ. ಆಗ ನಮಗೆ ಪರಿಚಯ ಇರುವ ವ್ಯಕ್ತಿ ಎಂದು ಭಾವಿಸಿ ಮೊಬೈಲ್‌ಗೆ ಬಂದಿರುವ ಲಿಂಕ್‌ನ್ನು ಒತ್ತಿದರೆ ನಿಮ್ಮ ಮೊಬೈಲ್‌ನಲ್ಲಿರುವ ಎಲ್ಲ ದಾಖಲೆಗಳು ಸೈಬರ್ ವಂಚಕರಿಗೆ ಲಭ್ಯವಾಗುತ್ತವೆ. ಜೊತೆಗೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವೂ ಇಲ್ಲದಂತಾಗುತ್ತದೆ ಎಂದು ಎಚ್ಚರಿಸಿದರು.

ಗಜೇಂದ್ರಗಡ ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿದ್ದು, ಅಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಅರಣ್ಯ ಇಲಾಖೆಯವರು ನಡೆಸಬೇಕು. ಇಲಾಖೆಯವರು ನಿಷ್ಕಾಳಜಿ ವಹಿಸದೆ ಹಸಿರೀಕರಣಕ್ಕೆ ಒಲವು ತೋರಬೇಕು. ಅತಿಕ್ರಮಣವಾದ ಅರಣ್ಯ ಇಲಾಖೆಯ ಜಾಗಗಳನ್ನು ಗುರುತಿಸಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರು ಇಲಾಖೆಗಳ ವಿರುದ್ಧ ದಾಖಲಿಸಿರುವ ದೂರಗಳ ಬಗ್ಗೆ ಇಲಾಖೆಗಳ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿದರು.

ತಹಸೀಲ್ದಾರ ನಾಗರಾಜ ಕೆ, ತಾ.ಪಂ ಇಒ ಚಂದ್ರಶೇಖರ ಖಂದಕೂರ, ಬಿಇಒ ಎ.ಎನ್. ಕಂಬೋಗಿ, ಪಿಎಸ್‌ಐ ಪ್ರಕಾಶ ಬಣಕಾರ, ಕೃಷಿ ಅಧಿಕಾರಿ ಎಸ್.ಎಫ್. ತಹಸೀಲ್ದಾರ, ಜೆ.ಟಿ. ಕೊಪ್ಪದ, ಆರ್.ಎಲ್. ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಾಯುಕ್ತ ಪಿಎಸ್‌ಐ ಎಸ್.ಎಚ್. ತೇಲಿ ಮಾತನಾಡಿ, ಸರಕಾರಿ ಕೆಲಸಕ್ಕೆ ಬರುವ ಸಾರ್ವಜನಿಕರನ್ನು ಸುಖಾಸುಮ್ಮನೆ ತಿರುಗಾಡಿಸಬೇಡಿ. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುವುದು ಸರಕಾರಿ ನೌಕರರ ಆದ್ಯ ಕರ್ತವ್ಯವಾಗಿರುತ್ತದೆ ಎಂಬುದನ್ನು ಮರೆಯಬಾರದು ಎಂದರು.

ಫಲಿತಾಂಶ ಸುಧಾರಣೆಗೆ ಕ್ರಾಂತಿಕಾರಿ ಕ್ರಮ!

0

ವಿಜಯಸಾಕ್ಷಿ ಸುದ್ದಿ, ಗದಗ: ಪರೀಕ್ಷಾ ಸಮಯ ಹತ್ತಿರವಾಗುತ್ತಿದ್ದಂತೆ ಮಕ್ಕಳ ಓದಿಗೆ ಅಡ್ಡಿಯಾಗುತ್ತಿರುವ ಮೊಬೈಲ್ ಮತ್ತು ಟಿವಿಗಳನ್ನು ನಿಯಂತ್ರಿಸಲು ಗದಗ ತಾಲೂಕು ಪಂಚಾಯಿತಿ ಕೈಗೊಂಡ ಕ್ರಮವೊಂದು ಈಗ ರಾಜ್ಯದ ಗಮನ ಸೆಳೆಯುತ್ತಿದೆ.

ಗದಗ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಜೆ 7ರಿಂದ ರಾತ್ರಿ 9ರವರೆಗೆ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಮತ್ತು ಟಿವಿಗಳನ್ನು ಸ್ವಿಚ್ ಆಫ್ ಮಾಡಬೇಕು. ಅಷ್ಟೇ ಅಲ್ಲದೆ, ಗ್ರಾಮದ ಬೀದಿಗಳಲ್ಲಿ ಟ್ರ‍್ಯಾಕ್ಟರ್‌ಗಳಲ್ಲಿ ಜೋರಾಗಿ ಹಾಡು ಹಾಕಿಕೊಂಡು ಓಡಾಡುವುದನ್ನು ನಿಷೇಧಿಸಿ ಡಂಗುರ ಸಾರುವಂತೆ ಗದಗ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ಈ ಕ್ರಾಂತಿಕಾರಿ ಸೂಚನೆಗೆ ನಾಂದಿ ಹಾಡಿದ್ದು ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ಮತ್ತು ಮಕ್ಕಳ ಏಕಾಗ್ರತೆ ಹೆಚ್ಚಿಸಲು ಪೋಷಕರಲ್ಲಿ ಶಿಸ್ತು ಮೂಡಿಸುವುದು ಅನಿವಾರ್ಯ ಎಂಬ ದೂರದೃಷ್ಟಿಯೊಂದಿಗೆ ಅವರು ನೀಡಿದ ವಿನಂತಿ ಪತ್ರವನ್ನು ಆಧರಿಸಿ, ತಾ.ಪಂ ಇಒ ಈ ಸೂಚನೆ ನೀಡಿದ್ದಾರೆ. ಶಿಕ್ಷಣಾಧಿಕಾರಿಗಳ ಈ ಸಂವೇದನಾಶೀಲ ನಿರ್ಧಾರಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಹಳ್ಳಿಗಳಲ್ಲಿ ಮೊಬೈಲ್‌ನಿಂದ ವಿದ್ಯಾರ್ಥಿಗಳು ಕೆಲಕಾಲ ದೂರ ಉಳಿಯಲಿ ಎನ್ನುವ ಉದ್ದೇಶದಿಂದ ಮೊಟ್ಟ ಮೊದಲ ಬಾರಿಗೆ ಮಹಾರಾಷ್ಟçದ ಸಾಂಗ್ಲಿ ಸಮೀಪದ ಮೋಹಿತೆ ವಡ್ಗಾಂವ್ ಗ್ರಾಮದಲ್ಲಿ ‘ಸೈರನ್’ ಪದ್ಧತಿ ಜಾರಿಗೆ ಬಂದಿತು. ಅದಾದ ನಂತರ ದಕ್ಷಿಣ ಕನ್ನಡ ಕೆಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಫೋನ್ ಬಿಡಿ ಓದಿಗೆ ಸಮಯ ಕೊಡಿ’ ಎಂಬ ಅಭಿಯಾನಗಳು ನಡೆದಿದ್ದವು. ಈಚೆಗಷ್ಟೆ ಬೆಳಗಾವಿ ಜಿಲ್ಲೆಯ ಕೆಲ ಹಳ್ಳಿಗಳಲ್ಲಿ ಸ್ವಯಂಪ್ರೇರಿತವಾಗಿ ಜನರು ಸಂಜೆ ವೇಳೆ ಟಿವಿ ಬಂದ್ ಮಾಡಿ ಮಕ್ಕಳಿಗೆ ಓದಿಸಲು ಸಹಕರಿಸುತ್ತಿದ್ದಾರೆ. ಆದರೆ, ಸರ್ಕಾರಿ ಮಟ್ಟದಲ್ಲಿ ಅಧಿಕೃತವಾಗಿ ಡಂಗುರ ಸಾರಿಸಿ, ಮೊಬೈಲ್, ಟಿವಿಯಿಂದ ಎರಡು ಗಂಟೆ ದೂರ ಇರುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿರುವುದು ಗದಗ ಜಿಲ್ಲೆಯ ವಿಶೇಷತೆ.

ಗದಗ ತಾಲೂಕು ಪಂಚಾಯಿತಿ ಇಒ ಹೊರಡಿಸಿರುವ ಈ ಆದೇಶದ ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಗದಗ ಬಿಇಒ ಅವರ ಈ ಕಾರ್ಯ ಇತರ ಜಿಲ್ಲೆಗಳಿಗೂ ಮಾದರಿಯಾಗಲಿ ಎಂಬ ಒತ್ತಾಯ ಕೇಳಿಬರುತ್ತಿದೆ. ಒಂದು ವೇಳೆ ಈ ಪ್ರಯೋಗ ಗದಗದಲ್ಲಿ ಯಶಸ್ವಿಯಾದರೆ, ಮುಂಬರುವ ದಿನಗಳಲ್ಲಿ ಇಡೀ ರಾಜ್ಯಕ್ಕೆ ಇದು ಪಸರಿಸುವುದರಲ್ಲಿ ಅನುಮಾನವಿಲ್ಲ ಎನ್ನುತ್ತಾ ಗದಗ ಗ್ರಾಮೀಣ ವಲಯದ ಶಿಕ್ಷಕರು.

“ಕೇವಲ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡಿದರೆ ಸಾಲದು, ಮನೆಯಲ್ಲಿಯೂ ಪೂರಕ ವಾತಾವರಣ ಇರಬೇಕು. ಸಂಜೆಯ ಎರಡು ಗಂಟೆಗಳ ಕಾಲ ಡಿಜಿಟಲ್ ಉಪವಾಸ ಮಾಡುವುದರಿಂದ ಮಕ್ಕಳಲ್ಲಿ ಓದಿನ ಆಸಕ್ತಿ ಹೆಚ್ಚುವುದರ ಜೊತೆಗೆ ಪೋಷಕರು ಮತ್ತು ಮಕ್ಕಳ ನಡುವಿನ ಸಂಬಂಧವೂ ಸುಧಾರಿಸಲಿದೆ ಎನ್ನುವ ಉದ್ದೇಶದಿಂದ ತಾ.ಪಂ ಇಒ ಅವರಿಗೆ ಮನವಿ ಮಾಡಿಕೊಂಡಿದೆ. ಮನವಿಗೆ ತಕ್ಷಣ ಸ್ಪಂದಿಸಿ, ಎಲ್ಲ ಪಿಡಿಒಗಳಿಗೆ ಸೂಚನೆ ನೀಡುವ ಮೂಲಕ ಶೈಕ್ಷಣಿಕ ಕಾಳಜಿ ಮೆರೆದಿದ್ದಾರೆ”

  • ವಿ.ವಿ. ನಡುವಿನಮನಿ.
    ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ.

ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿನಂತಿ ಮೇರೆಗೆ ಫೆ. 3ರಂದು ಎಲ್ಲ ಪಿಡಿಒಗಳಿಗೆ ಪತ್ರ ಬರೆಯಲಾಗಿದೆ. ಕಸ ವಿಲೇವಾರಿ ವಾಹನದ ಮೂಲಕ ಎರಡು ಗಂಟೆ ಮೊಬೈಲ್, ಟಿವಿಯಿಂದ ದೂರ ಉಳಿಯುವಂತೆ ಡಂಗುರ ಸಾರಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಗಂಭೀರ ಕ್ರಮಗಳನ್ನು ಕೈಗೊಳ್ಳುವ ಚಿಂತನೆ ಮೂಡಿದೆ.

  • ಮಲ್ಲಯ್ಯ ಕೊರವನವರ.
    ತಾ.ಪಂ ಇಒ, ಗದಗ.

ಹೆಚ್‌ಪಿವಿ ಲಸಿಕೆಯಿಂದ ಅಡ್ಡ ಪರಿಣಾಮವಿಲ್ಲ: ಶಾಸಕ ಜಿ.ಎಸ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ರೋಣ: ಮಹಿಳೆಯರ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಚ್‌ಪಿವಿ ಲಸಿಕೆ ರಾಮಬಾಣವಾಗಿದ್ದು, ವಿದ್ಯಾರ್ಥಿನಿಯರು ಲಸಿಕೆಯಿಂದಾಗುವ ಆರೋಗ್ಯದ ಲಾಭವನ್ನು ಪಡೆದುಕೊಳ್ಳಬೇಕು ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.

ಅವರು ಬುಧವಾರ ಪಟ್ಟಣದ ಗುರುಭವನದಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮ, ಜಿಲ್ಲಾ ಆರೋಗ್ಯ ಹಾಗೂ ಶಿಕ್ಷಣ ಇಲಾಖೆ, ಎಸ್.ಆರ್. ಪಾಟೀಲ ಪ್ರತಿಷ್ಠಾನ, ರಾಜೀವಗಾಂಧಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಪ್ರಾಜೆಕ್ಟ್ ಶೀಲ್ಡ್ರಾವರ ಆಶ್ರಯದಲ್ಲಿ ಜರುಗಿದ ಹೆಚ್.ಪಿ.ವಿ 2ನೇ ಹಂತದ ಉಚಿತ ಲಸಿಕೆ ವಿತರಣಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಚ್.ಪಿ.ವಿ ಲಸಿಕೆಯನ್ನು ಮೊದಲು ನಾನು ನಮ್ಮ ಮೊಮ್ಮಕ್ಕಳ ಮೆೇಲೆ ಪ್ರಯೋಗ ಮಾಡಿಸಿದ್ದೇನೆ. ಅವರ ಮೆೇಲೆ ಯಾವುದೇ ರೀತಿಯ ಅಡ್ಡ ಪರಿಣಾಮ ಆಗದಿದ್ದಲ್ಲಿ ಮಾತ್ರ ಬೇರೆ ಹೆಣ್ಣು ಮಕ್ಕಳಿಗೆ ಉಚಿತವಾಗಿ ವಿತರಿಸುವಂತೆ ತಿಳಿಸಿದೆ. ಇಂತಹ ಮಹತ್ವದ ಕಾರ್ಯಕ್ಕೆ ಶಿಕ್ಷಣ, ಆರೋಗ್ಯ ಇಲಾಖೆಗಳು ಸಂಪೂರ್ಣವಾಗಿ ಪ್ರೋತ್ಸಾಹಿಸಿದ್ದು ಸ್ವಾಗತಾರ್ಹವಾಗಿದೆ ಎಂದರು.

ಮತಕ್ಷೇತ್ರದಲ್ಲಿನ ಎಲ್ಲ ಸರಕಾರಿ ಶಾಲೆಗಳ ಹೆಣ್ಣು ಮಕ್ಕಳಿಗೆ ಉಚಿತವಾಗಿ ಲಸಿಕೆಯನ್ನು ನೀಡಲು ಈಗಾಗಲೇ ಸೂಚಿಸಿದ್ದೇನೆ. ಮುಖ್ಯವಾಗಿ ಹೆಣ್ಣು ಮಕ್ಕಳ ಪಾಲಕರು ಲಸಿಕೆ ಪಡೆಯುವಂತೆ ತಮ್ಮ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಕಾರಣ ಹೆಣ್ಣು ಮಕ್ಕಳ ಆರೋಗ್ಯವನ್ನು ಸದೃಢಗೊಳಿಸಲು ಹೆಚ್.ಪಿ.ವಿ ಲಸಿಕೆ ಅಸ್ತ್ರವಾಗಿದ್ದು, ಗರ್ಭಕಂಠದ ಕ್ಯಾನ್ಸರ್‌ನ್ನು ತಡೆಗಟ್ಟಬಹುದು. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿನ ಖಾಸಗಿ ಶಾಲೆಗಳ ಹೆಣ್ಣು ಮಕ್ಕಳಿಗೂ ಹೆಚ್.ಪಿ.ವಿ ಲಸಿಕೆಯನ್ನು ವಿತರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಆರೋಗ್ಯ ಇಲಾಖೆಯ ಕೆ.ಎಲ್. ಹಾದಿಮನಿ ಹೆಚ್.ಪಿ.ವಿ ಲಸಿಕೆಯಿಂದಾಗುವ ಲಾಭದ ಕುರಿತು ಉಪನ್ಯಾಸ ನೀಡಿದರು. ಟಿ.ಈಶ್ವರ, ಐ.ಎಸ್. ಪಾಟೀಲ, ವಿ.ಆರ್. ಗುಡಿಸಾಗರ, ಬಿಇಒ ಎ.ಎನ್. ಕಂಬೋಗಿ, ಡಾ. ಶಕೀಲಅಹ್ಮದ್ ದುಂದರಗಿ, ಡಾ. ಬಿ.ಎಸ್. ಭಜಂತ್ರಿ, ಡಾ. ಎಲ್.ಡಿ. ಬಾಕಳೆ, ಬಸವರಾಜ ನವಲಗುಂದ, ಯೂಸುಫ್ ಇಟಗಿ, ಸಂಜಯ ದೊಡ್ಡಮನಿ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

ಹೆಚ್.ಪಿ.ವಿ ಲಸಿಕೆಯನ್ನು ಮೊದಲ ಹಂತದಲ್ಲಿ 864 ಹೆಣ್ಣು ಮಕ್ಕಳಿಗೆ ವಿತರಣೆ ಮಾಡಲಾಗಿದೆ. ಈಗ ಮೊದಲ ಲಸಿಕೆಯನ್ನು ಪಡೆದಿರುವ ಎಲ್ಲ 864 ಮಕ್ಕಳಿಗೂ ಎರಡನೇ ಲಸಿಕೆಯನ್ನು ವಿತರಿಸಲಾಗುತ್ತಿದೆ. ಯಾವ ಹೆಣ್ಣು ಮಕ್ಕಳ ಆರೋಗ್ಯದ ಮೆೇಲೆಯೂ ಲಸಿಕೆ ಕೆಟ್ಟ ಪರಿಣಾಮ ಬೀರಿಲ್ಲ ಎನ್ನುವುದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯ ಗದಗ ಜಿಲ್ಲಾ ಪ್ರಗತಿ ವಿಮರ್ಶೆ; 650 ಫಲಾನುಭವಿಗಳಿಗೆ ಶೀಘ್ರ ಸೌಲಭ್ಯ ಕಲ್ಪಿಸಲು ನಿರ್ದೇಶನ

0

ವಿಜಯಸಾಕ್ಷಿ ಸುದ್ದಿ, ಗದಗ: ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಪ್ರಗತಿಯಲ್ಲಿ ಇರುವ ತಾಂತ್ರಿಕ ಸಮಸ್ಯೆಗಳ ಪರಿಹಾರ ಕಾರ್ಯವನ್ನು ವೇಗಗೊಳಿಸಲು ಸಚಿವ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರಿನ ವಿಧಾನಸಭೆ ಸಚಿವರ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಗದಗ ಜಿಲ್ಲೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿದಾರರ ಒಟ್ಟು ಸಂಖ್ಯೆ 2543 ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು. ಗೃಹಲಕ್ಷ್ಮೀ ಯೋಜನೆ ಪಡೆಯಲು ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಪಾವತಿಸದಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ 650 ಫಲಾನುಭವಿಗಳಿಗೆ ಶೀಘ್ರದಲ್ಲಿ ಯೋಜನೆಯ ಸೌಲಭ್ಯ ಕಲ್ಪಿಸುವಂತೆ ಸಚಿವರು ಸೂಚಿಸಿದರು.

ಯೋಜನೆಯ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ಸಚಿವ ಡಾ. ಎಚ್.ಕೆ. ಪಾಟೀಲ ಸೂಚಿಸಿದರು.

ಗದಗ ತಾಲೂಕಿನ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನಕ್ಕೆ ಇರುವ ತಾಂತ್ರಿಕ ಸಮಸ್ಯೆಗಳ ಕುರಿತು ಸಭೆಯ ಗಮನಕ್ಕೆ ತರುವ ಮೂಲಕ ಪರಿಹಾರ ಮಾರ್ಗ ನೀಡುವಂತೆ ಕೋರಿದರು.

ಸಭೆಯಲ್ಲಿ ಗದಗ ತಾಲೂಕಿನ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ದಯಾನಂದ ಪವಾರ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾ ನಿರ್ದೇಶಕರಾದ ಅನಿತಾ ಲಕ್ಷ್ಮೀ ಹಾಗೂ ರೋಜಲೀನ್, ಸಹಾಯಕ ನಿರ್ದೇಶಕರಾದ ಹೇಮಾ ಎಚ್, ರೀಜು, ಗದಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಅಧೀಕ್ಷಕ ರಾಜು ಕಂಟಿಗೊಣ್ಣವರ ಸೇರಿದಂತೆ ಗದಗ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.

ಬಾಕ್ಸ್

ಕುಟುಂಬದ ಮುಖ್ಯಸ್ಥ ಮರಣ ಹೊಂದಿದ ಸಂದರ್ಭಗಳಲ್ಲಿ ರೇಷನ್ ಕಾರ್ಡ್ ನವೀಕರಣಕ್ಕೆ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜನರಿಗೆ ತೊಂದರೆ ಆಗದಂತೆ ಪ್ರಕ್ರಿಯೆ ಸರಳಗೊಳಿಸುವುದು ಅಗತ್ಯ. ಸರ್ಕಾರದ ಮಹತ್ತರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಕುಟುಂಬಗಳ ಆರ್ಥಿಕ ನಿರ್ವಹಣೆಗೆ ನೇರ ಸಹಕಾರಿಯಾಗಿದ್ದು, ದೈನಂದಿನ ಕುಟುಂಬ ನಿರ್ವಹಣೆಗೆ ಶಕ್ತಿಯನ್ನು ನೀಡುತ್ತಿದೆ ಎಂದು ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.

ಅಭಿವೃದ್ಧಿ ಕಾರ್ಯಗಳಲ್ಲಿ ಹಿನ್ನಡೆಯಾಗದಂತೆ ನಿಗಾ ವಹಿಸಿ: ಶಾಸಕ ಜಿ.ಎಸ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕು ಸೇರಿದಂತೆ ಮತಕ್ಷೇತ್ರದಾದ್ಯಂತ ಪ್ರತಿ ಗ್ರಾಮಗಳಿಗೂ ಅನುದಾನವನ್ನು ನೀಡಲಾಗಿದ್ದು, ಸಮರ್ಪಕವಾಗಿ ಕೆಲಸಗಳಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಅನುದಾನದ ಲಭ್ಯತೆಯಿದ್ದರೂ ಸಹ ಅಭಿವೃದ್ಧಿ ಕಾರ್ಯಗಳು ಏಕೆ ನಿಧಾನಗತಿಯಲ್ಲಿ ಸಾಗುತ್ತಿವೆ ಎಂದು ಶಾಸಕ ಜಿ.ಎಸ್. ಪಾಟೀಲ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅವರು ಬುಧವಾರ ತಾ.ಪಂ ಸಭಾಭವನದಲ್ಲಿ ಜರುಗಿದ ಮತಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿ.ಪಂ, ಪಿಡಬ್ಲುಡಿ, ಆರ್‌ಡಬ್ಲುಎಸ್ ಇಲಾಖೆಗಳಿಗೆ ಅನುದಾನವನ್ನು ಒದಗಿಸಲಾಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳು ನಡೆದಿರುವ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಂದಾಗ ಮಾತ್ರ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಲು ಸಾಧ್ಯ ಎಂದರು.

ಗ್ರಾಮೀಣ ಭಾಗಗಳ ರಸ್ತೆಗಳು ಸೇರಿದಂತೆ ಮುಖ್ಯ ರಸ್ತೆಗಳು ಅತಿಯಾದ ಮಳೆಯಿಂದ ಹಾಳಾಗಿದ್ದು, ಅವುಗಳನ್ನು ದುರಸ್ತಿಗೊಳಿಸಿ ಎಂದು ಎರಡು ತಿಂಗಳ ಹಿಂದೆಯೇ ಸೂಚಿಸಲಾಗಿತ್ತು. ಆದರೆ ಈಗ ಕೆಲಸ ಆರಂಭಿಸಿದ್ದೀರಿ. ಈ ರೀತಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾದರೆ ನೀವು ನಮಗೆ ಬೇಡ ಎಂದು ಕೆಲ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಬೇಗನೆ ಎಲ್ಲ ಕೆಲಸಗಳು ಮುಗಿಯಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಲಕ್ಕಲಕಟ್ಟಿ, ನಾಗೇಂದ್ರಗಡ, ಹರ್ಲಾಪೂರ, ಉಮಚಗಿ, ನಾರಾಯಣಪೂರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಸಿಸಿ ರಸ್ತೆಗಳ ನಿರ್ಮಾಣ ಕಾರ್ಯ ನಿಧಾನಗತಿಯಲ್ಲಿ ನಡೆದಿದ್ದು, ಈ ವಿಷಯ ನಿಮ್ಮ ಗಮನಕ್ಕೆ ಬಂದಿಲ್ಲವೇ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರ ಆರ್.ಎನ್. ಪುರೋಹಿತರನ್ನು ಪ್ರಶ್ನಿಸಿದ ಶಾಸಕರು, ಅಭಿವೃದ್ಧಿ ಕಾರ್ಯಗಳ ಬಗ್ಗೆ ನಿಷ್ಕಾಳಜಿ ವಹಿಸಬೇಡಿ ಎಂದರು.

ಇದೇ ಸಂಧರ್ಭದಲ್ಲಿ ಆರ್‌ಡಬ್ಲುಎಸ್ ಮುಖ್ಯ ಅಭಿಯಂತರ ಚಂದ್ರ ನೇರಲೆಕರವರಿಗೂ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತಿ ಕ್ರಮ ವಹಿಸಿ ಎಂದು ಸೂಚಿಸಿದರು. ನಂತರ ಅವರು ವಿವಿಧ ಇಲಾಖೆಗಳ ಪ್ರಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರುಗಳಾದ ಸಂಗನಗೌಡ ಪಾಟೀಲ, ಶರಣಪ್ಪ ಬೆಟಗೇರಿ, ರೋಣ, ಗಜೇಂದ್ರಗಡ, ಮುಂಡರಗಿ, ಗದಗ ತಾ.ಪಂ ಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಮತಕ್ಷೇತ್ರದಲ್ಲಿ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಗೊಂಡಿದೆ. ಅವುಗಳಿಗೆ ಶೀಘ್ರವೇ ಚಾಲನೆ ನೀಡಿ. ಇನ್ನು ಪಿಎಂಜಿಎಸ್‌ಆರ್‌ವಾಯ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಅನುಮತಿ ದೊರತಿದ್ದು, ಅಧಿಕಾರಿಗಳು ಎಲ್ಲ ಕಾಮಗಾರಿಗಳ ಪ್ರಗತಿಗೆ ಶ್ರಮಿಸಬೇಕು. ಮಾರನಬಸರಿ ಗ್ರಾಮಕ್ಕೆ ಮತ್ತೆ 35 ಲಕ್ಷ ರೂಗಳ ಅನುದಾನವನ್ನು ನೀಡಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಿ”

  • ಜಿ.ಎಸ್. ಪಾಟೀಲ.
    ಶಾಸಕರು.

error: Content is protected !!