Home Blog Page 29

ಅರ್ಹರಿಗೆ ಪಂಚ ಗ್ಯಾರಂಟಿ ಸೌಲಭ್ಯ ಸಕಾಲಕ್ಕೆ ತಲುಪಲಿ: ಅಶೋಕ ಮಂದಾಲಿ

0

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪಬೇಕು. ಸೌಲಭ್ಯ ವಿತರಣೆಯಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲಗೊಳಿಸುವ ಉದ್ದೇಶ ಹೊಂದಿವೆ. ಯಾವುದೇ ಅರ್ಹ ಫಲಾನುಭವಿ ಸೌಲಭ್ಯದಿಂದ ವಂಚಿತನಾಗದಂತೆ ಅಧಿಕಾರಿಗಳು ಕ್ರಿಯಾಶೀಲತೆ ಹಾಗೂ ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕೃಷ್ಣಗೌಡ ಎಚ್. ಪಾಟೀಲ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಿಂದ ಯಾವುದೇ ಅರ್ಹ ಮಹಿಳೆ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮರಣ ಹೊಂದಿದವರ ಖಾತೆಗೆ ಹಣ ಜಮೆಯಾಗುವ ಪ್ರಕರಣಗಳನ್ನು ತಡೆಗಟ್ಟಬೇಕು. ಯುವನಿಧಿ ಯೋಜನೆಯಿಂದ ಅರ್ಹರು ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು. ಅನ್ನಭಾಗ್ಯ ಯೋಜನೆಯ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಯುವನಿಧಿ ಯೋಜನೆಯಡಿ ಜೂನ್ 2026ರವರೆಗೆ ಗದಗ ತಾಲೂಕಿನಲ್ಲಿ 3,112 ಅಭ್ಯರ್ಥಿಗಳು ನೋಂದಣಿಯಾಗಿದ್ದು, 2,819 ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಿದೆ.

ಗೃಹಲಕ್ಷ್ಮೀ ಯೋಜನೆಯಡಿ ಏಪ್ರಿಲ್ 2026ರವರೆಗೆ 84,037 ಅರ್ಜಿಗಳು ನೋಂದಣಿಯಾಗಿದ್ದು, 75,133 ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಪಾವತಿಸಲಾಗಿದೆ. ಮೇ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ.

ಗೃಹಜ್ಯೋತಿ ಯೋಜನೆಯಡಿ ಜುಲೈ 31ರವರೆಗೆ ಗದಗ ಶಹರದಲ್ಲಿ ಅರ್ಹ 46,484 ಸ್ಥಾವರಗಳ ಪೈಕಿ 46,260 ನೋಂದಣಿಯಾಗಿದ್ದು, ಶೇ.99.52ರಷ್ಟು ಪ್ರಗತಿ ಸಾಧಿಸಲಾಗಿದೆ. ಗದಗ ಗ್ರಾಮೀಣ ಉಪವಿಭಾಗದಲ್ಲಿ ಅರ್ಹ 53,324 ಸ್ಥಾವರಗಳ ಪೈಕಿ 53,110 ನೋಂದಣಿಯಾಗಿದ್ದು, ಶೇ.99.60ರಷ್ಟು ಪ್ರಗತಿ ಸಾಧಿಸಲಾಗಿದೆ.

ಶಕ್ತಿ ಯೋಜನೆಯಡಿ 2023ರ ಜೂನ್ 11ರಿಂದ 2026ರ ಆಗಸ್ಟ್ 3ರವರೆಗೆ ಗದಗ ಘಟಕದಲ್ಲಿ ಮಹಿಳಾ ಪ್ರಯಾಣಿಕರಿಂದ ₹10,625.33 ಲಕ್ಷ ಹಾಗೂ ಬೆಟಗೇರಿ ಘಟಕದಲ್ಲಿ ₹6,297.67 ಲಕ್ಷ ಆದಾಯವಾಗಿದೆ.

ಅನ್ನಭಾಗ್ಯ ಯೋಜನೆಯಡಿ ಜುಲೈ 2026ರಲ್ಲಿ ಗದಗ ಶಹರದ 32,699 ಪಡಿತರ ಕಾರ್ಡುದಾರರಿಗೆ ಕೇಂದ್ರದ ಎನ್‌ಎಸ್‌ಎಫ್‌ಎ ಅಡಿ 2,250.98 ಕ್ವಿಂಟಲ್ ಅಕ್ಕಿ ಹಾಗೂ ಗ್ರಾಮೀಣ ಭಾಗದ 48,483 ಕಾರ್ಡುದಾರರಿಗೆ 3,578.82 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಅನ್ನಭಾಗ್ಯ ಅಕ್ಕಿ ಹಂಚಿಕೆ ಯೋಜನೆಯಡಿ ಗದಗ ಶಹರದ 32,699 ಕಾರ್ಡುದಾರರಿಗೆ 5,360.95 ಕ್ವಿಂಟಲ್ ಹಾಗೂ ಗ್ರಾಮೀಣ ಭಾಗದ 48,483 ಕಾರ್ಡುದಾರರಿಗೆ 7,521.35 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ನೀಲಮ್ಮ ಬೋಳನವರ, ತಾಲೂಕು ಸಮಿತಿ ಸದಸ್ಯರಾದ ಮೀನಾಕ್ಷಿ ಬೆನಕಣ್ಣವರ, ದಯಾನಂದ ಪವಾರ, ಸಂಗು ಕರಕಲಮಟ್ಟಿ, ಎನ್.ಬಿ. ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ, ಸಾವಿತ್ರಿ ಹೂಗಾರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಎಚ್.ಎಸ್. ಜಿನಗ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಪಂಚ ಗ್ಯಾರಂಟಿ ಯೋಜನೆಗಳು ಬಡಜನರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಯಾಗಿವೆ. ಯಾವುದೇ ಅರ್ಹ ಫಲಾನುಭವಿ ಸೌಲಭ್ಯದಿಂದ ವಂಚಿತರಾಗದಂತೆ ಅಧಿಕಾರಿಗಳು ಪ್ರಾಮಾಣಿಕತೆ ಹಾಗೂ ಶಿಸ್ತಿನಿಂದ ಕಾರ್ಯನಿರ್ವಹಿಸಿ, ಅನುಷ್ಠಾನದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು.”

— ಅಶೋಕ ಮಂದಾಲಿ, ಅಧ್ಯಕ್ಷರು, ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ

ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಮುಖಂಡ ಶಂಕರಗೌಡ ಜಯನಗೌಡ್ರ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಕೈಕೊಟ್ಟು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ ಮುಖಂಡ ಶಂಕರಗೌಡ ಜಯನಗೌಡ್ರ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಪಾದಯಾತ್ರೆ ನಡೆಸಿದ ರೈತರು, ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಂಕರಗೌಡ ಜಯನಗೌಡ್ರ, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ನಷ್ಟವಾಗಿವೆ. ಬಿತ್ತನೆ, ಬೀಜ, ಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹಣ ಖರ್ಚು ಮಾಡಿರುವ ರೈತರು ಇದೀಗ ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಬರಪೀಡಿತ ಪ್ರದೇಶದ ನಿಯಮದಂತೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ ಪ್ರತಿ ಹೋಬಳಿ ಮಟ್ಟದಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯಬೇಕು. ರೈತರು ಕೃಷಿ ಚಟುವಟಿಕೆಗಳಿಗಾಗಿ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ಪಡೆದಿರುವ ಬೆಳೆ ಸಾಲವನ್ನು ಬರಗಾಲದ ಹಿನ್ನೆಲೆಯಲ್ಲಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

2025–26ನೇ ಸಾಲಿನ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಹಲವು ರೈತರು ವಿಮೆ ಪಾವತಿಸಿದ್ದರೂ, ತಾಂತ್ರಿಕ ಹಾಗೂ ಇತರೆ ಕಾರಣಗಳಿಂದ ಕೆಲವರಿಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಈ ಕುರಿತು ಕೂಡಲೇ ಪರಿಶೀಲನೆ ನಡೆಸಿ, ಅರ್ಹ ರೈತರಿಗೆ ಸಂಪೂರ್ಣ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ವಿಮೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಪುನರ್‌ಪರಿಶೀಲಿಸಿ ಅರ್ಹರಿಗೆ ನ್ಯಾಯ ದೊರಕಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

1978ರಿಂದ ಅರಣ್ಯ ಒತ್ತುವರಿದಾರರು ಹಾಗೂ ಬಗರಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ದೊರೆಯದೆ ಇರುವ ಪ್ರಕರಣಗಳನ್ನು ತ್ವರಿತವಾಗಿ ಪರಿಶೀಲಿಸಿ, ಅರ್ಹರಿಗೆ ಅರಣ್ಯ ಹಕ್ಕುಪತ್ರ ಹಾಗೂ ಪಟ್ಟಾ ನೀಡಬೇಕು. ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಹಾಗೂ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರೇಷ್ಮೆ ಬೆಳೆಗಾರರಿಗೆ ಸರ್ಕಾರದಿಂದ ದೊರೆಯಬೇಕಾದ ಸಹಾಯಧನ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಅಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸಿ ಅರ್ಹ ರೇಷ್ಮೆ ಬೆಳೆಗಾರರಿಗೆ ಕೂಡಲೇ ಸಹಾಯಧನ ಒದಗಿಸಬೇಕು ಎಂದು ಆಗ್ರಹಿಸಿದರು.

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವು ಉತ್ತಮ ಯೋಜನೆಗಳನ್ನು ಜಾರಿಗೊಳಿಸಿದ್ದರೂ, ಭ್ರಷ್ಟ ಅಧಿಕಾರಿಗಳಿಂದಾಗಿ ಅವು ನಿಜವಾದ ರೈತರಿಗೆ ತಲುಪದಿರುವುದು ವಿಪರ್ಯಾಸ. ರೈತರಿಗೆ ಸಿಗಬೇಕಾದ ಸೌಲಭ್ಯಗಳು ಮಧ್ಯವರ್ತಿಗಳ ಪಾಲಾಗದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.”

— ಶಂಕರಗೌಡ ಜಯನಗೌಡ್ರ, ರೈತ ಸಂಘದ ಜಿಲ್ಲಾಧ್ಯಕ್ಷ

‘ಭೂಮಾನಂದ ಹಂತಕರಿಗೆ ಗಲ್ಲು ಶಿಕ್ಷೆ ನೀಡಿ’: ಮಾದಿಗ ಮಹಾಸಭಾದಿಂದ ಸರ್ಕಾರಕ್ಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಯಚೂರು ಜಿಲ್ಲೆಯ ಸಂಕೇಶ್ವರಹಾಳದಲ್ಲಿ ಮಾದಿಗ ಸಮಾಜದ ಮುಖಂಡ ಭೂಮಾನಂದ ಹಬ್ಬಿನಹಾಳ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಉಡಚಪ್ಪ ಹಳ್ಳಿಕೇರಿ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಾನಂದ ಹಬ್ಬಿನಹಾಳ ಅವರ ಹತ್ಯೆ ಖಂಡನೀಯ. ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶೀಘ್ರ ತೀರ್ಪು ನೀಡುವ ಮೂಲಕ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಮೃತರ ಕುಟುಂಬಕ್ಕೆ ಸರ್ಕಾರದಿಂದ ₹50 ಲಕ್ಷ ಪರಿಹಾರ, 10 ಎಕರೆ ಜಮೀನು ಮಂಜೂರು ಮಾಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ರಾಯಚೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ರೋಣ ತಾಲೂಕಿನಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳನ್ನು ಗಡಿಪಾರು ಮಾಡಬೇಕು. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕುಂಬಾರಕೊಪ್ಪದಲ್ಲಿ ಮಾದಿಗ ಸಮಾಜದ ವ್ಯಕ್ತಿಯ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ದಾವಣಗೆರೆಯಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸವಡಿಯ ಮರುಳಸಿದ್ದ ಸ್ವಾಮೀಜಿ, ಮಾದಿಗ ಮಹಾಸಭಾದ ಗೌರವಾಧ್ಯಕ್ಷ ವಿಜಯ ಕಲ್ಮನಿ, ಮೈಲಾರಪ್ಪ, ಚಂದ್ರು, ಸುನಿಲ್ ಬಂಡೆನ್ನವರ, ರಾಘವೇಂದ್ರ ಹಾಗೂ ವಿನಾಯಕ ಕಟ್ಟಿಮನಿ ಉಪಸ್ಥಿತರಿದ್ದರು.

“ದೇಶಕ್ಕೆ ಸ್ವಾತಂತ್ರ್ಯ ದೊರೆತು ಹಲವು ವರ್ಷಗಳು ಕಳೆದರೂ ದಲಿತರ ಮೇಲಿನ ದೌರ್ಜನ್ಯಗಳು ಮುಂದುವರಿದಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸರ್ಕಾರ ಹಾಗೂ ಆಡಳಿತ ವ್ಯವಸ್ಥೆ ಶಾಂತಿಸಭೆ, ಮುಂಜಾಗ್ರತಾ ಕ್ರಮ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.”

— ಉಡಚಪ್ಪ ಹಳ್ಳಿಕೇರಿ, ಅಧ್ಯಕ್ಷರು, ಮಾದಿಗ ಮಹಾಸಭಾ ಜಿಲ್ಲಾ ಘಟಕ

30 ವರ್ಷಗಳ ಬಳಿಕ ಒಂದಾದ ಗುರು–ಶಿಷ್ಯರು

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ಜಿವಿಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 1996–99ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಸ್ನೇಹಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ಗುರು–ಶಿಷ್ಯರ ಭಾವನಾತ್ಮಕ ಸಮ್ಮಿಲನಕ್ಕೆ ಸಾಕ್ಷಿಯಾಯಿತು.

ಸುಮಾರು ಮೂರು ದಶಕಗಳ ಬಳಿಕ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರುಗಳನ್ನು ಆತ್ಮೀಯವಾಗಿ ಬರಮಾಡಿಕೊಂಡು ಪಾದಪೂಜೆ ನೆರವೇರಿಸಿ, ಸನ್ಮಾನಿಸಿ ಗೌರವಿಸಿದರು. ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಗುರು–ಶಿಷ್ಯರು ಪರಸ್ಪರ ಭಾವುಕರಾದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ತು.ಕ. ಶಂಕ್ರಯ್ಯ, ಅಂದಿನ ವಿದ್ಯಾರ್ಥಿಗಳ ಕಲಿಕೆಯ ಆಸಕ್ತಿ ಹಾಗೂ ಕ್ರಿಯಾಶೀಲತೆಯಿಂದ ಉಪನ್ಯಾಸಕರು ಕೂಡ ಹೆಚ್ಚು ಅಧ್ಯಯನಶೀಲರಾಗುತ್ತಿದ್ದೆವು. ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಇದೇ ಮೊದಲು ಎಂಬುದು ಸಂತಸದ ಸಂಗತಿ ಎಂದರು.

ವಾಣಿಜ್ಯ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಕೆ. ಪನ್ನಂಗದರ ಮಾತನಾಡಿ, ಹಗರಿಬೊಮ್ಮನಹಳ್ಳಿಯಲ್ಲಿ ಅಂದಿನ ಕಾಲದಲ್ಲಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣ ಹಾಗೂ ಬೆಳವಣಿಗೆಯಲ್ಲಿ ನಿವೃತ್ತ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ ಎಂದು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸ್ತುತ ಪ್ರಾಂಶುಪಾಲ ಮಂಜುನಾಥ ಉಲವತ್ತಿ ಶೆಟ್ಟರ್ ವಹಿಸಿದ್ದರು. ನಿವೃತ್ತ ಪ್ರಾಚಾರ್ಯರಾದ ಎನ್.ವಿ. ಹನುಮಂತಯ್ಯ, ಹುರಕಡ್ಲಿ ಬಸಪ್ಪ, ಬಿ. ಮಾರುತೇಶ್, ಜಿ. ಮಲ್ಲಿಕಾರ್ಜುನ, ಅಪ್ಪೇನಹಳ್ಳಿ ಹೇಮರೆಡ್ಡಿ, ನಿವೃತ್ತ ಗ್ರಂಥಪಾಲಕ ಕೆ. ರಾಮಲಿಂಗಪ್ಪ, ಕಾಲೇಜಿನ ಪ್ರಸ್ತುತ ಸೂಪರಿಂಟೆಂಡೆಂಟ್ ಸುರೇಶ್, ದಿವಂಗತ ಕೃಷ್ಣ ನಾಯಕ್ ಅವರ ಧರ್ಮಪತ್ನಿ ಪುಷ್ಪಾ ಕೃಷ್ಣ ನಾಯಕ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.

ವಾಣಿಶ್ರೀ ಹಾಗೂ ನಾಗಲಕ್ಷ್ಮಿ ಸ್ವಾಗತಿಸಿದರು. ಎಂ.ಪಿ.ಎಂ. ಮಂಜುನಾಥ್ ಪ್ರಾಸ್ತಾವಿಕ ಮಾತನಾಡಿದರು. ಕೆ.ಎಂ. ಶಿವಕುಮಾರ್ ವಂದಿಸಿದರು. ಉಪನ್ಯಾಸಕ ಬೆಟ್ಟಪ್ಪ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಮುಖಂಡ ಎನ್.ಎಂ. ಗೌಸ್ ಕಾರ್ಯಕ್ರಮದ ಆಯೋಜನೆ ಹಾಗೂ ಅಂದಿನ ವಿದ್ಯಾರ್ಥಿ ಜೀವನದ ನೆನಪುಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ನೀಲಪ್ಪ, ಗುಡ್ಡಪ್ಪ, ರೇವಣಸಿದ್ದನಗೌಡ, ಡಿ. ಇಬ್ರಾಹಿಂ, ಡಿ.ಕೆ. ಕೊಟ್ರೇಶ್, ಅಕ್ಕಿ ಮಲ್ಲಿಕಾರ್ಜುನ, ಬಿ. ಶ್ರೀನಿವಾಸ್, ಸಿ.ಎಂ. ಶ್ರೀನಿವಾಸ್, ಮಮತಾ, ವಾಸಂತಿ, ಎಸ್. ಬಾನು, ಎ. ಯಶೋಧ, ಭದ್ರವಾಡಿ ನಾಗವೇಣಿ, ಎಸ್.ಎಂ. ಶೈಲಜಾ ಸೇರಿದಂತೆ ಹಲವು ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

“30 ವರ್ಷಗಳ ಬಳಿಕ ನಮ್ಮನ್ನೆಲ್ಲ ಕರೆಸಿ ಗುರುಭಕ್ತಿಯನ್ನು ಮೆರೆದಿರುವುದು ನಮ್ಮ ವೃತ್ತಿ ಜೀವನವನ್ನೇ ಸಾರ್ಥಕಗೊಳಿಸಿದೆ. ವಿದ್ಯಾರ್ಥಿಗಳ ಈ ಪ್ರೀತಿ ಮತ್ತು ಗೌರವ ಎಂದಿಗೂ ಮರೆಯಲಾಗದು.”

— ಐ. ಬಸವರಾಜ್, ನಿವೃತ್ತ ಪ್ರಾಚಾರ್ಯ

ದೇವದಾಸಿ ಮಹಿಳೆಯರ ಗಣತಿ ಪೂರ್ಣಗೊಳಿಸಿ: ಕೆ. ಅಂಜಿನಮ್ಮ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಒಂದು, ಎರಡು ಮತ್ತು ಮೂರು ತಲೆಮಾರುಗಳ ಕುಟುಂಬ ಸದಸ್ಯರ ಗಣತಿ ಕಾರ್ಯವನ್ನು ಸರ್ಕಾರ ಸಮಗ್ರವಾಗಿ ಪೂರ್ಣಗೊಳಿಸಿ, ಅರ್ಹ ಎಲ್ಲ ಕುಟುಂಬಗಳನ್ನು ಅಧಿಕೃತವಾಗಿ ಗುರುತಿಸಬೇಕು ಎಂದು ತಾಲೂಕು ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಅಧ್ಯಕ್ಷೆ ಕೆ. ಅಂಜಿನಮ್ಮ ಒತ್ತಾಯಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ದೇವದಾಸಿ ಮಹಿಳೆಯರ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಇತ್ತೀಚೆಗೆ ಕೈಗೊಂಡಿರುವ ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಮೂರು ತಲೆಮಾರುಗಳ ಕುಟುಂಬ ಸದಸ್ಯರ ಗಣತಿ ಕಾರ್ಯ ಇನ್ನೂ ಅಪೂರ್ಣವಾಗಿದ್ದು, ಸಮಗ್ರವಾಗಿ ನಡೆದಿಲ್ಲ ಎಂದು ಆರೋಪಿಸಿದರು.

2007ರಲ್ಲಿ ನಡೆದ ಗಣತಿ ಅಸಮರ್ಪಕವಾಗಿದ್ದು, ಆಗ ಸುಮಾರು 46,800 ಮಹಿಳೆಯರನ್ನು ಗುರುತಿಸಲಾಗಿತ್ತು. ಆದರೆ ಅಂದಾಜು 20 ಸಾವಿರಕ್ಕೂ ಅಧಿಕ ಮಹಿಳೆಯರು ಗಣತಿಯಿಂದ ಹೊರಗುಳಿದಿದ್ದರು. 1982ರಲ್ಲಿ ಅಥವಾ ನಂತರ ದೇವದಾಸಿ ಮಹಿಳೆಯರಾಗಿದ್ದವರನ್ನೂ ಆ ಗಣತಿಯಲ್ಲಿ ಪರಿಗಣಿಸಿರಲಿಲ್ಲ ಎಂದು ಅವರು ಹೇಳಿದರು.

ಮಾಜಿ ದೇವದಾಸಿ ಮಹಿಳೆಯರಿಗೆ ಸಮರ್ಪಕ ವಸತಿ ಸೌಲಭ್ಯ ಕಲ್ಪಿಸಬೇಕು. ಪಿಂಚಣಿ ಮೊತ್ತವನ್ನು ತಿಂಗಳಿಗೆ ₹6,000ಕ್ಕೆ ಹೆಚ್ಚಿಸಬೇಕು. ಮಾಜಿ ದೇವದಾಸಿಯರ ಮಕ್ಕಳಿಗೆ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಭದ್ರತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಹಗರಿಬೊಮ್ಮನಹಳ್ಳಿ ತಾಲೂಕೊಂದರಲ್ಲೇ ಸುಮಾರು 1,950 ಮಾಜಿ ದೇವದಾಸಿ ಮಹಿಳೆಯರು ಇದ್ದು, ಅವರ ಯೋಗಕ್ಷೇಮ ಹಾಗೂ ಕುಂದುಕೊರತೆಗಳನ್ನು ಸರ್ಕಾರ ತಕ್ಷಣ ಪರಿಹರಿಸಬೇಕು ಎಂದು ಒತ್ತಾಯಿಸಿದರು.

ನಂತರ ತಾಲೂಕು ಉಪ ತಹಶೀಲ್ದಾರ್ ಕೆ. ಶಿವಕುಮಾರ್ ಗೌಡ ಅವರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ದೇವದಾಸಿ ವಿಮೋಚನಾ ಸಂಘದ ಕಾರ್ಯದರ್ಶಿ ಪಿ. ಚಾಂದ್, ತಾಲೂಕು ಸಮಿತಿ ಮುಖಂಡರಾದ ಸತ್ಯಮ್ಮ, ಕೆ. ಹನುಮಂತಮ್ಮ, ತಿಮ್ಮಕ್ಕ, ನೀಲಮ್ಮ, ದುರ್ಗಮ್ಮ, ಪದ್ಮಮ್ಮ, ಶಿವಗಂಗಮ್ಮ, ದೊಡ್ಡಬಸಮ್ಮ, ಎಂ. ಗಂಗಮ್ಮ, ಜಿ. ಪಾರ್ವತಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸರ್ಕಾರ ನಡೆಸುತ್ತಿರುವ ಗಣತಿ ಕಾರ್ಯವನ್ನು ಯಾವುದೇ ಲೋಪವಿಲ್ಲದೆ ಸಮಗ್ರವಾಗಿ ಪೂರ್ಣಗೊಳಿಸಬೇಕು. ಗಣತಿಯಿಂದ ಹೊರಗುಳಿದಿರುವ ಮಾಜಿ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬ ಸದಸ್ಯರನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು.”

— ಕೆ. ಅಂಜಿನಮ್ಮ, ಅಧ್ಯಕ್ಷೆ, ತಾಲೂಕು ದೇವದಾಸಿ ಮಹಿಳೆಯರ ವಿಮೋಚನಾ ಸಂಘ

ವೀರಣ್ಣ ಪವಾಡದ ಅವರಿಗೆ ಶ್ರೇಷ್ಠ ಉದ್ಯಮಿ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮದ ಉದ್ಯಮಿ ವೀರಣ್ಣ ಹಾಲಪ್ಪ ಪವಾಡದ ಅವರು 2026–27ನೇ ಸಾಲಿನ ಶ್ರೇಷ್ಠ ಉದ್ಯಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಆ.14ರಿಂದ 18ರವರೆಗೆ ಗದಗ ಎಪಿಎಂಸಿ ಯಾರ್ಡ್‌ನ ಶ್ರೀ ಸ್ವಾಮಿ ವಿವೇಕಾನಂದ ಸಭಾಭವನ ಹಾಗೂ ಕೆ.ಎಚ್. ಪಾಟೀಲ ಸಭಾಭವನದಲ್ಲಿ ನಡೆಯಲಿರುವ ‘ಗದಗ ಉತ್ಸವ–2026’ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಶಿಗ್ಲಿ ಗ್ರಾಮದ ಶ್ರೀಮದ್ ರಂಭಾಪುರಿ ಟೆಕ್ಸ್‌ಟೈಲ್ಸ್ ಮಾಲೀಕರಾಗಿರುವ ವೀರಣ್ಣ ಹಾಲಪ್ಪ ಪವಾಡದ ಅವರು ಕೈಮಗ್ಗದ ಸೀರೆ ಉದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ವಿಶೇಷ ಸಾಧನೆ ಮಾಡಿದ್ದಾರೆ. ಅವರ ಉದ್ಯಮ ಕ್ಷೇತ್ರದ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಶ್ರೇಷ್ಠ ಉದ್ಯಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಗದಗದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಗಣ್ಯರು, ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳಿಂದ ವೀರಣ್ಣ ಪವಾಡದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ವೀರಣ್ಣ ಪವಾಡದ ಅವರಿಗೆ ಶ್ರೇಷ್ಠ ಉದ್ಯಮಿ ಪ್ರಶಸ್ತಿ ಲಭಿಸಿರುವುದಕ್ಕೆ ಶಿಗ್ಲಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ರಷ್ಯಾ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: ಮಗು ಸೇರಿ 13 ಮಂದಿ ಸಾವು, ಹಲವರಿಗೆ ಗಾಯ

0

ಮಾಸ್ಕೋ: ರಷ್ಯಾದ ಟಾಟರ್ಸ್ತಾನ್ ಪ್ರದೇಶದ ಮೇಲೆ ಉಕ್ರೇನ್ ನಡೆಸಿದ ಭೀಕರ ಡ್ರೋನ್ ದಾಳಿಯಲ್ಲಿ ಮಗು ಸೇರಿದಂತೆ 13 ಮಂದಿ ಮೃತಪಟ್ಟಿದ್ದು, 75 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಆರಂಭವಾದ ಬಳಿಕ ಉಕ್ರೇನ್ ನಡೆಸಿದ ಅತ್ಯಂತ ಭೀಕರ ದಾಳಿಗಳಲ್ಲಿ ಇದು ಒಂದಾಗಿದೆ ಎಂದು ಹೇಳಲಾಗಿದೆ.

ಮಧ್ಯ ರಷ್ಯಾದ ಟಾಟರ್ಸ್ತಾನ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ದಾಳಿಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನಾ ಸ್ಥಳದಿಂದ ಮುಗಿಲೆತ್ತರಕ್ಕೆ ದಟ್ಟ ಹೊಗೆ ಏಳುತ್ತಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ.

ಉಕ್ರೇನ್ ಕೂಡ ದಾಳಿಯನ್ನು ದೃಢಪಡಿಸಿದ್ದು, ತನ್ನ ಗಡಿಯಿಂದ 1,000 ಕಿಲೋಮೀಟರ್‌ಗೂ ಹೆಚ್ಚು ದೂರದಲ್ಲಿರುವ ಕೈಗಾರಿಕಾ ನಗರ ನಿಜ್ನೆಕಾಮ್ಸ್ಕ್‌ನಲ್ಲಿರುವ ತೈಲ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ.

ರಷ್ಯಾದ ಮಿಲಿಟರಿ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ತೈಲ ಘಟಕಗಳನ್ನು ನಿಯಂತ್ರಿಸುವ ಟನೆಕೊ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಉಕ್ರೇನ್‌ನ ಜನರಲ್ ಸ್ಟಾಫ್ ಹೇಳಿದೆ ಎಂದು ವರದಿಯಾಗಿದೆ.

ರಷ್ಯಾದ ತನಿಖಾ ಸಮಿತಿ, ಉಕ್ರೇನ್ ನಡೆಸಿದ ದಾಳಿಯಲ್ಲಿ ಮೃತಪಟ್ಟವರಲ್ಲಿ ಒಂದು ಮಗು ಕೂಡ ಸೇರಿದೆ ಎಂದು ತಿಳಿಸಿದೆ. ಇದೇ ವೇಳೆ, ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 465 ಉಕ್ರೇನ್ ಡ್ರೋನ್‌ಗಳನ್ನು ಹೊಡೆದುರುಳಿಸಿರುವುದಾಗಿ ರಷ್ಯಾ ಹೇಳಿಕೊಂಡಿದೆ.

ಈ ವರ್ಷ ರಷ್ಯಾ ಮತ್ತು ಉಕ್ರೇನ್ ಎರಡೂ ಪರಸ್ಪರ ದಾಳಿಗಳನ್ನು ಗಣನೀಯವಾಗಿ ಹೆಚ್ಚಿಸಿವೆ. ಇದರ ಪರಿಣಾಮವಾಗಿ ನಾಗರಿಕರ ಸಾವು-ನೋವು ಹೆಚ್ಚಾಗುತ್ತಿರುವ ಬಗ್ಗೆ ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ಇದೇ ವೇಳೆ, ಸೋಮವಾರ ರಷ್ಯಾ ಕೂಡ ಉಕ್ರೇನ್ ಮೇಲೆ ಮಾರಕ ದಾಳಿ ನಡೆಸಿದೆ. ಈಶಾನ್ಯ ಉಕ್ರೇನ್‌ನ ಖಾರ್ಕಿವ್ ಪ್ರದೇಶದ ಗ್ರಾಮವೊಂದರ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಉಕ್ರೇನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳ ಅವಧಿಯಲ್ಲಿ ಉಕ್ರೇನ್‌ನ ರಾಜಧಾನಿ ಕೈವ್‌ನಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಗಳಲ್ಲೂ ಹಲವಾರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿದಿರುವ ಬೆನ್ನಲ್ಲೇ ಎರಡೂ ದೇಶಗಳು ದಾಳಿಗಳ ತೀವ್ರತೆಯನ್ನು ಹೆಚ್ಚಿಸಿರುವುದು ನಾಗರಿಕರ ಸುರಕ್ಷತೆ ಕುರಿತು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ವಿರಾಟ್ ಕೊಹ್ಲಿ ಇಲ್ಲದೆ 16 ವರ್ಷಗಳ ಬಳಿಕ ಶ್ರೀಲಂಕಾ ಪ್ರವಾಸ: ಮೊದಲ ಟೆಸ್ಟ್ ಗೆದ್ದು ಪ್ರಾಬಲ್ಯ ಮುಂದುವರಿಸಲು ಟೀಂ ಇಂಡಿಯಾ ಸಜ್ಜು

0

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15ರಿಂದ ಆರಂಭವಾಗಲಿದೆ. ಸರಣಿ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದ್ದು, ಇದೀಗ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಗೆ ಉತ್ತಮ ಆರಂಭ ನೀಡುವ ಉತ್ಸಾಹದಲ್ಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ದೃಷ್ಟಿಯಿಂದ ಈ ಸರಣಿ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲೂ ಉತ್ತಮ ಪ್ರದರ್ಶನ ನೀಡಿ ಸರಣಿ ಗೆಲ್ಲುವ ಗುರಿಯನ್ನು ಟೀಂ ಇಂಡಿಯಾ ಹೊಂದಿದೆ.

ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಹಿಂದಿನ ಪ್ರವಾಸಕ್ಕೆ ಹೋಲಿಸಿದರೆ ಸಾಕಷ್ಟು ಬದಲಾವಣೆಗಳಾಗಿವೆ. ಈ ಪೈಕಿ ಪ್ರಮುಖ ಬದಲಾವಣೆಯೆಂದರೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡದಲ್ಲಿ ಇಲ್ಲದಿರುವುದು.

ಕಳೆದ 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಇಲ್ಲದೆ ಭಾರತ ತಂಡ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿಯನ್ನು ಆಡುತ್ತಿದೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡದಿದ್ದ 2010ರಲ್ಲಿ ಭಾರತ ತಂಡ ಕೊನೆಯ ಬಾರಿಗೆ ಕೊಹ್ಲಿ ಇಲ್ಲದೆ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿ ಆಡಿತ್ತು. ಇದಾದ ಬಳಿಕ ಭಾರತ ತಂಡ ಶ್ರೀಲಂಕಾಕ್ಕೆ ಟೆಸ್ಟ್ ಸರಣಿಗಾಗಿ ಪ್ರವಾಸ ಕೈಗೊಂಡಾಗಲೆಲ್ಲಾ ಕೊಹ್ಲಿ ತಂಡದ ಭಾಗವಾಗಿದ್ದರು. ಹಲವು ಸಂದರ್ಭಗಳಲ್ಲಿ ಅವರು ತಂಡದ ನಾಯಕತ್ವವನ್ನೂ ವಹಿಸಿದ್ದರು.

ಕೊಹ್ಲಿ ನಾಯಕತ್ವದ ಅವಧಿಯಲ್ಲಿ ಶ್ರೀಲಂಕಾ ನೆಲದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿತ್ತು. 2015ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿತ್ತು. ಇದಾದ ಎರಡು ವರ್ಷಗಳ ಬಳಿಕ, 2017ರಲ್ಲಿ ಶ್ರೀಲಂಕಾವನ್ನು 3-0 ಅಂತರದಲ್ಲಿ ವೈಟ್‌ವಾಶ್ ಮಾಡುವ ಮೂಲಕ ಐತಿಹಾಸಿಕ ಸಾಧನೆ ಮಾಡಿತ್ತು.

ಇನ್ನು ಶ್ರೀಲಂಕಾ ತಂಡದ ದಾಖಲೆಯನ್ನು ಗಮನಿಸಿದರೆ, 2008ರಲ್ಲಿ ತವರಿನಲ್ಲೇ ಭಾರತವನ್ನು ಕೊನೆಯ ಬಾರಿಗೆ ಟೆಸ್ಟ್ ಸರಣಿಯಲ್ಲಿ ಮಣಿಸಿತ್ತು. ಇದೀಗ ಕೊಹ್ಲಿ ಅನುಪಸ್ಥಿತಿಯಲ್ಲಿ ಭಾರತ ತಂಡ ಶ್ರೀಲಂಕಾ ನೆಲದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.

ಆಗಸ್ಟ್ 15ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವಿನೊಂದಿಗೆ ಸರಣಿಗೆ ಚಾಲನೆ ನೀಡುವ ಗುರಿ ಹೊಂದಿದೆ. ಕೊಹ್ಲಿ ಇಲ್ಲದ ಹೊಸ ತಂಡವು ಶ್ರೀಲಂಕಾದಲ್ಲಿ ತನ್ನ ಸಾಮರ್ಥ್ಯವನ್ನು ಹೇಗೆ ಪ್ರದರ್ಶಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಅಭಿಷೇಕ್ ಬ್ಯಾನರ್ಜಿಗೆ ಸುಪ್ರೀಂ ಬಿಗ್ ರಿಲೀಫ್: ಕಣ್ಣಿನ ಚಿಕಿತ್ಸೆಗಾಗಿ ಮೂರು ವಾರ ವಿದೇಶಕ್ಕೆ ತೆರಳಲು ಅನುಮತಿ

0

ನವದೆಹಲಿ: ತೃಣಮೂಲ ಕಾಂಗ್ರೆಸ್ (TMC) ಸಂಸದ ಹಾಗೂ ಪಕ್ಷದ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಕಣ್ಣಿನ ಚಿಕಿತ್ಸೆಗಾಗಿ ಮೂರು ವಾರಗಳ ಕಾಲ ವಿದೇಶಕ್ಕೆ ತೆರಳಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ವಿದೇಶ ಪ್ರಯಾಣಕ್ಕೆ ಅನುಮತಿ ನೀಡಲು ನಿರಾಕರಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೊಯ್ಮಾಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಅಭಿಷೇಕ್ ಬ್ಯಾನರ್ಜಿ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕವೇ ವಿದೇಶಕ್ಕೆ ಪ್ರಯಾಣಿಸಬೇಕು ಎಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ.

ಅಲ್ಲದೆ, ವಿದೇಶ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಹಾಗೂ ತಂಗುವ ಸ್ಥಳದ ವಿವರಗಳನ್ನು ತನಿಖಾ ಸಂಸ್ಥೆಯೊಂದಿಗೆ ಹಂಚಿಕೊಳ್ಳಬೇಕು ಎಂದು ಪೀಠ ನಿರ್ದೇಶಿಸಿದೆ. ಆದರೆ ಈ ಮಾಹಿತಿಯನ್ನು ತನಿಖಾ ಸಂಸ್ಥೆಯು ಗೌಪ್ಯವಾಗಿ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ವೇಳಾಪಟ್ಟಿ ಹಾಗೂ ವಾಸ್ತವ್ಯದ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಅಭಿಷೇಕ್ ಬ್ಯಾನರ್ಜಿ ಅವರ ವಿದೇಶ ಪ್ರಯಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಅಭಿಷೇಕ್ ಬ್ಯಾನರ್ಜಿ ವಿರುದ್ಧ 16 ಪ್ರಕರಣಗಳಿವೆ. ಅವರು ವಿದೇಶಕ್ಕೆ ತೆರಳಿದ ಬಳಿಕ ಮರಳಿ ಭಾರತಕ್ಕೆ ಬಾರದಿರುವ ಸಾಧ್ಯತೆಯಿದೆ ಎಂದು ಅವರು ವಾದಿಸಿದರು. ಅಲ್ಲದೆ, ವಿದೇಶದಲ್ಲಿ ಚಿಕಿತ್ಸೆ ಪಡೆಯುವ ಅಗತ್ಯವಿದೆಯೇ ಎಂಬುದನ್ನು ಸರ್ಕಾರಿ ವೈದ್ಯಕೀಯ ಮಂಡಳಿ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಜೊಯ್ಮಾಲ್ಯ ಬಾಗ್ಚಿ, ಪ್ರತಿಯೊಬ್ಬ ವ್ಯಕ್ತಿಗೂ ವಿದೇಶಕ್ಕೆ ತೆರಳುವ ಹಾಗೂ ತನಗೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ ಎಂದು ಅಭಿಪ್ರಾಯಪಟ್ಟರು. ಈ ಪ್ರಕರಣವು ಚುನಾವಣಾ ಭಾಷಣಕ್ಕೆ ಸಂಬಂಧಿಸಿದ್ದಾಗಿದೆ ಎಂಬುದನ್ನೂ ಪೀಠ ಉಲ್ಲೇಖಿಸಿತು.

ಅಭಿಷೇಕ್ ಬ್ಯಾನರ್ಜಿ ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ವಾದ ಮಂಡಿಸಿದರು. ಅಭಿಷೇಕ್ ಬ್ಯಾನರ್ಜಿ ಲೋಕಸಭಾ ಸಂಸದರಾಗಿದ್ದು, ಪ್ರಮುಖ ರಾಜಕೀಯ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅವರ ಕುಟುಂಬ ಭಾರತದಲ್ಲೇ ಇರುವುದರಿಂದ ಅವರು ತಲೆಮರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ವಾದಿಸಿದರು.

ಅಲ್ಲದೆ, ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಪ್ರಯಾಣಿಸುವುದರಿಂದ ಸಂಬಂಧಿತ ರಾಯಭಾರ ಕಚೇರಿಗಳು ಅವರ ಚಲನವಲನಗಳನ್ನು ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದಿಂದ ತಡೆ ನೀಡುವ ಸಂದರ್ಭದಲ್ಲಿ ಕಲ್ಕತ್ತಾ ಹೈಕೋರ್ಟ್ ಅಭಿಷೇಕ್ ಬ್ಯಾನರ್ಜಿ ಅವರ ವಿದೇಶ ಪ್ರಯಾಣಕ್ಕೆ ನಿರ್ಬಂಧ ವಿಧಿಸಿತ್ತು.

ಅಮೆರಿಕದಲ್ಲಿ ಈ ಹಿಂದೆ ತಮ್ಮ ಶಸ್ತ್ರಚಿಕಿತ್ಸೆ ನಡೆಸಿದ್ದ ತಜ್ಞ ವೈದ್ಯರ ಬಳಿಯೇ ಮುಂದಿನ ಚಿಕಿತ್ಸೆಯನ್ನು ಪಡೆಯಲು ಅವಕಾಶ ನೀಡುವಂತೆ ಅಭಿಷೇಕ್ ಬ್ಯಾನರ್ಜಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಹೈಕೋರ್ಟ್, ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ವೈದ್ಯಕೀಯ ಮಂಡಳಿ ಮುಂದೆ ಹಾಜರಾಗುವಂತೆ ಸೂಚಿಸಿ, ಆಗಸ್ಟ್ 5ರಂದು ಅವರ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಅಭಿಷೇಕ್ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಮೂರು ವಾರಗಳ ಕಾಲ ವಿದೇಶಕ್ಕೆ ತೆರಳಿ ಚಿಕಿತ್ಸೆ ಪಡೆಯಲು ಅನುಮತಿ ನೀಡಿದ್ದು, ಷರತ್ತುಗಳೊಂದಿಗೆ ಅಭಿಷೇಕ್ ಬ್ಯಾನರ್ಜಿಗೆ ರಿಲೀಫ್ ದೊರೆತಿದೆ.

ಬಿಡದಿ ಪಾದಯಾತ್ರೆ ರಾಜಕೀಯಕ್ಕಾಗಿ ನಡೆಯುತ್ತಿದೆ: CM ಸ್ಪಷ್ಟನೆ ನೀಡಿದ ಬಳಿಕವೂ ಹೋರಾಟ ಸರಿಯಲ್ಲ ಎಂದ ಮಧು ಬಂಗಾರಪ್ಪ

0

ಬೆಂಗಳೂರು: ಬಿಡದಿ ಟೌನ್‌ಶಿಪ್ ವಿಚಾರವಾಗಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆ ನಡೆಸುವುದು ಜೆಡಿಎಸ್‌ನ ಹಕ್ಕು. ಹೀಗಾಗಿ ಅವರು ಬಿಡದಿ ಪಾದಯಾತ್ರೆ ನಡೆಸುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಈಗಾಗಲೇ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ತೊಂದರೆ ನೀಡುವುದಿಲ್ಲ ಹಾಗೂ ಒತ್ತಾಯಪೂರ್ವಕವಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಹೀಗಿದ್ದರೂ ರಾಜಕೀಯ ಉದ್ದೇಶಕ್ಕಾಗಿ ಪಾದಯಾತ್ರೆ ನಡೆಸುವುದು ಸರಿಯಲ್ಲ ಎಂದು ಹೇಳಿದರು.

ಬಿಡದಿ ವಿಚಾರದಲ್ಲಿ ಬೇರೆ ಯಾವುದೇ ವಿಷಯವಿದ್ದರೆ ಅದನ್ನು ಸದನದಲ್ಲಿ ಚರ್ಚಿಸಲಿ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿಚಾರ್ಜ್ ಮಾಡಿಸಲಾಗಿತ್ತು. ಆದರೆ ಈಗ ಪಾದಯಾತ್ರೆ ಮಾಡಬೇಡಿ ಎಂದು ನಾವು ಹೇಳುತ್ತಿಲ್ಲ. ಹೋರಾಟ ನಡೆಸುವ ಹಕ್ಕು ಅವರಿಗಿದೆ. ಆದರೆ ಸಿಎಂ ಈಗಾಗಲೇ ಸ್ಪಷ್ಟವಾಗಿ ಹೇಳಿರುವ ಹಿನ್ನೆಲೆಯಲ್ಲಿ ರಾಜಕೀಯಕ್ಕಾಗಿ ಪಾದಯಾತ್ರೆ ನಡೆಸುವುದು ಸೂಕ್ತವಲ್ಲ ಎಂದು ಮಧು ಬಂಗಾರಪ್ಪ ತಿಳಿಸಿದರು.

ಖಾತೆ ಹಂಚಿಕೆ ಬಗ್ಗೆ ಇನ್ನೂ ಸೂಚನೆ ಬಂದಿಲ್ಲ

ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಇದುವರೆಗೆ ಯಾವುದೇ ಹೊಸ ಸೂಚನೆ ಬಂದಿಲ್ಲ ಎಂದು ಮಧು ಬಂಗಾರಪ್ಪ ಹೇಳಿದರು. ಈಗಾಗಲೇ ಸಚಿವರಿಗೆ ಸಾಕಷ್ಟು ಜವಾಬ್ದಾರಿ ನೀಡಲಾಗಿದೆ. ಬರ ಹಾಗೂ ಅತಿವೃಷ್ಟಿ ಪರಿಸ್ಥಿತಿಯ ಪರಿಶೀಲನೆಯ ಜವಾಬ್ದಾರಿಯನ್ನೂ ನೀಡಲಾಗಿತ್ತು. ತಾವು ಮೂರು ದಿನಗಳ ಕಾಲ ವಿವಿಧ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ಮಾಡಿರುವುದಾಗಿ ತಿಳಿಸಿದರು.

ಕೆಲವು ಪ್ರದೇಶಗಳಲ್ಲಿ ಮೂರು ಮಂದಿ ಮೃತಪಟ್ಟಿರುವ ಘಟನೆಗಳೂ ನಡೆದಿದ್ದು, ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಪರಿಶೀಲಿಸಿ ಬಂದಿದ್ದೇನೆ ಎಂದು ಸಚಿವರು ಹೇಳಿದರು.

ಈಗಾಗಲೇ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಉಳಿದ ಸಚಿವರಿಗೆ ಖಾತೆ ಹಂಚಿಕೆ ಮಾಡಬೇಕಿದೆ. ಮುಖ್ಯಮಂತ್ರಿ ನಿನ್ನೆ ಈ ಕುರಿತು ತಾವೇ ಎಲ್ಲವನ್ನೂ ತಿಳಿಸುವುದಾಗಿ ಹೇಳಿದ್ದಾರೆ. ದೆಹಲಿಗೆ ತೆರಳಿರುವ ಸಿಎಂ ವರಿಷ್ಠ ನಾಯಕರನ್ನು ಭೇಟಿ ಮಾಡಿ ಬಳಿಕ ಖಾತೆ ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.