Home Blog Page 29

ವಿಧಾನಪರಿಷತ್ ಚುನಾವಣೆ! ಜೆಡಿಎಸ್‌ಗೆ ಶಾಕ್ ಕೊಟ್ರಾ ಜಿ.ಟಿ ದೇವೇಗೌಡ? ಅಡ್ಡ ಮತದಾನದ ಶಂಕೆ!

ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇಂದು ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ರಾಜಕೀಯ ಲೆಕ್ಕಾಚಾರಗಳು ಗರಿಗೆದರಿವೆ.

ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್‌ಗೆ 4 ಸ್ಥಾನಗಳು ಬಹುತೇಕ ಖಚಿತವಾಗಿರುವಂತೆ ಕಂಡುಬಂದರೂ, ಐದನೇ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಮುಂದುವರಿದಿದೆ.

ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರ ನಡೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಅವರು ಮತದಾನ ಬಳಿಕ “ಆತ್ಮಸಾಕ್ಷಿಗೆ ಮತ ಹಾಕಿದ್ದೇನೆ, ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಹೇಳಿದರೂ, ಯಾರಿಗೆ ಮತ ನೀಡಿದರೆಂಬುದನ್ನು ಬಹಿರಂಗಪಡಿಸದಿರುವುದು ಕ್ರಾಸ್ ವೋಟಿಂಗ್ ಶಂಕೆಗೆ ಕಾರಣವಾಗಿದೆ.

ಮತದಾನ ವೇಳೆ ಜಿಟಿಡಿ ಏಜೆಂಟ್‌ಗಳಿಗೆ ಖಾಲಿ ಮತಪೆಟ್ಟಿಗೆ ತೋರಿಸಿ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ತಮ್ಮ ಮತ ಚಲಾಯಿಸಿದ್ದಾರೆ. ನಂತರ ಬಿಜೆಪಿ ಶಾಸಕರು ವೇದವ್ಯಾಸ ಕಾಮತ್, ಎಸ್.ಆರ್. ವಿಶ್ವನಾಥ್ ಸೇರಿದಂತೆ ಹಲವು ನಾಯಕರು ಮತದಾನ ಮಾಡಿದ್ದಾರೆ.

ಜಿಟಿಡಿ ಕ್ರಾಸ್ ವೋಟ್ ಮಾಡಿದರೆಂಬ ಊಹಾಪೋಹಗಳಿಗೂ ರಾಜಕೀಯ ಕಾರಣಗಳು ಚರ್ಚೆಯಾಗುತ್ತಿವೆ. 2023ರ ಚುನಾವಣೆಯ ಬಳಿಕ ಜೆಡಿಎಸ್ ನಾಯಕರೊಂದಿಗೆ ಅಸಮಾಧಾನ, ಪಕ್ಷದ ಸಭೆಗಳಿಂದ ದೂರವಿರುವುದು, ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಪಕ್ಷದ ಕಾರ್ಯಕ್ರಮಗಳಲ್ಲಿ ಆಹ್ವಾನ ಕೊರತೆ ಸೇರಿದಂತೆ ಹಲವು ಅಸಮಾಧಾನಗಳು ಕಾರಣವಾಗಿರಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಒಟ್ಟು 222 ಶಾಸಕರ ಸಂಖ್ಯಾಬಲದಲ್ಲಿ ಕಾಂಗ್ರೆಸ್ 135, ಬಿಜೆಪಿ 62, ಜೆಡಿಎಸ್ 18 ಸೇರಿದಂತೆ ಇತರರು ಇದ್ದು, 5ನೇ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳು ತಮ್ಮ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸಿ ಕಟ್ಟುನಿಟ್ಟಿನ ನಿಗಾವಹಿಸಿರುವುದು ಗಮನಾರ್ಹವಾಗಿದೆ.

ದಾಖಲೆ ಬರೆದ ಮಾದಪ್ಪನ ಹುಂಡಿ: 27 ದಿನಕ್ಕೆ ₹2.73 ಕೋಟಿ ಸಂಗ್ರಹ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ-ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದ್ದು, ಭಕ್ತರಿಂದ ಕೇವಲ 27 ದಿನಗಳಲ್ಲಿ ಭರ್ಜರಿ ಆದಾಯ ದಾಖಲಾಗಿದೆ.

ಮಲೆ ಮಹದೇಶ್ವರ ಪ್ರಾಧಿಕಾರದ ಮಾಹಿತಿಯ ಪ್ರಕಾರ, ಹುಂಡಿ ಎಣಿಕೆ ವೇಳೆ ಒಟ್ಟು ₹2,73,57,105 ನಗದು ಸಂಗ್ರಹವಾಗಿದ್ದು, ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿ ಕಾಣಿಕೆಯಾಗಿ ದೊರೆತಿದೆ. ವೀಕೆಂಡ್ ಮತ್ತು ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಈ ಆದಾಯಕ್ಕೆ ಕಾರಣವಾಗಿದೆ.

ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ ಹಳೆಯ ನೋಟುಗಳು ಪತ್ತೆಯಾಗಿದ್ದು, ಅವುಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯ ಪ್ರಾಧಿಕಾರದ ಸಿಬ್ಬಂದಿ ಸಮ್ಮುಖದಲ್ಲಿ ಶಾಂತಿಯುತವಾಗಿ ನಡೆದಿದೆ.

ಹಾಸ್ಟೆಲ್ ವಿದ್ಯಾರ್ಥಿಗಳೇ ಕಳ್ಳರು! ಮೂವರು ಅರೆಸ್ಟ್, 15 ಬೈಕ್‌ಗಳು ಜಪ್ತಿ

ರಾಯಚೂರು: ಹಾಸ್ಟೆಲ್‌ಗಳಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ಪದವಿ ವಿದ್ಯಾರ್ಥಿಗಳು ಸ್ಥಳೀಯ ಯುವಕನೊಂದಿಗೆ ಸೇರಿ ದೊಡ್ಡ ಮಟ್ಟದ ಬೈಕ್ ಕಳ್ಳತನ ಜಾಲ ನಡೆಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ರಾಯಚೂರು ನೇತಾಜಿನಗರ ಠಾಣೆ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 15 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತರನ್ನು ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸವಿದ್ದ ಬಿಎ ವಿದ್ಯಾರ್ಥಿ ಆಕಾಶ್, ಬಿಕಾಂ ವಿದ್ಯಾರ್ಥಿ ಕಾರ್ತಿಕ್ ಹಾಗೂ ಸ್ಥಳೀಯ ಯುವಕ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ರಾಯಚೂರು ಮಾತ್ರವಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ತೆಲಂಗಾಣ ರಾಜ್ಯದಲ್ಲೂ ಬೈಕ್ ಕಳ್ಳತನ ನಡೆಸಿ ಮಾರಾಟ ಮಾಡುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಮೇ 25ರಂದು ನಾರಾಯಣ ಎಂಬ ವಿದ್ಯಾರ್ಥಿಯ ಪಲ್ಸರ್ ಬೈಕ್ ಕಳ್ಳತನವಾಗಿದ್ದು, ನಂತರ ಅದೇ ಬೈಕ್ ಮಾರ್ಪಾಡು ಮಾಡಿ ಮಾರಾಟಕ್ಕೆ ಇಟ್ಟಿರುವ ಜಾಹೀರಾತು ಆತನ ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಅದು ತನ್ನದೇ ಬೈಕ್ ಎಂಬುದು ಖಚಿತವಾಗಿದ್ದು, ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಮಾಹಿತಿ ಆಧರಿಸಿ ವಿಶೇಷ ತಂಡ ರಚಿಸಿದ ಪೊಲೀಸರು, ಬೈಕ್ ಮಾರಾಟದ ನೆಪದಲ್ಲಿ ಆರೋಪಿಗಳಿಗೆ ಬಲೆ ಬೀಸಿ ಬಂಧಿಸಿದ್ದಾರೆ. ತೀವ್ರ ವಿಚಾರಣೆಯಲ್ಲಿ ಆರೋಪಿಗಳು ಹಲವು ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ! 5 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೋಗಿಹಳ್ಳಿಯಲ್ಲಿ ದೇವಸ್ಥಾನದ ಬಳಿ ತೆರಳುತ್ತಿದ್ದ ಬಾಲಕನ ಮೇಲೆ ಆರೇಳು ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಬಾಲಕನ ಕುತ್ತಿಗೆ, ಕೈ ಹಾಗೂ ಬೆನ್ನಿನ ಭಾಗಕ್ಕೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಾಹಿತಿಯ ಪ್ರಕಾರ, ಬಾಲಕ ಊರಿನ ಆಂಜನೇಯ ದೇವಸ್ಥಾನದ ಕಡೆ ತೆರಳುತ್ತಿದ್ದ ವೇಳೆ ಏಕಾಏಕಿ ಆರೇಳು ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆಗೆ ಕಚ್ಚಿದಿವೆ. ಈ ವೇಳೆ ಸಮೀಪದಲ್ಲೇ ವಾಕಿಂಗ್ ಮಾಡುತ್ತಿದ್ದವರು ತಕ್ಷಣ ಮಧ್ಯಪ್ರವೇಶಿಸಿ ಬಾಲಕನನ್ನು ನಾಯಿಗಳಿಂದ ರಕ್ಷಿಸಿದ್ದಾರೆ.

ದಾಳಿಯಿಂದ ಬಾಲಕನ ಕುತ್ತಿಗೆ, ಕೈ ಹಾಗೂ ಬೆನ್ನಿನ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಸ್ಥಳೀಯರು ಬೀದಿ ನಾಯಿಗಳ ಹೆಚ್ಚುತ್ತಿರುವ ಸಮಸ್ಯೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ದಾರುಣ ಘಟನೆ! ಕಾಂಪೌಂಡ್ ಗೋಡೆ ಕುಸಿದು 5 ವರ್ಷದ ಬಾಲಕ ಸಾವು

ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆಯಲ್ಲಿ ಕಾಂಪೌಂಡ್ ಗೋಡೆ ಮತ್ತು ಕಬ್ಬಿಣದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 5 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತಪಟ್ಟ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಕೆಲಸದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಸವಿದ್ದು, ಅವರ ಪತ್ನಿ ಹಾಗೂ ಅಫೀನ್ ಕೇವಲ ಕೆಲ ದಿನಗಳ ಹಿಂದಷ್ಟೇ ಬಂಡಿಕೊಡಿಗೇಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಬುಧವಾರ ಸಂಜೆ ಸುಮಾರು 6.30ರ ವೇಳೆಗೆ ಅಫೀನ್ ತನ್ನ ನೆರೆಮನೆಯ ಮಕ್ಕಳೊಂದಿಗೆ ಮನೆಯ ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದ ವೇಳೆ, ಮಕ್ಕಳು ಗೇಟ್ ಅನ್ನು ಹಿಡಿದು ಜೀಕಾಡಿದ ಪರಿಣಾಮ ಗೋಡೆ ಗೇಟ್ ಸಮೇತ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯಿಂದ ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಸ್ಥಳೀಯರು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರೂ, ತೀವ್ರ ಗಾಯಗೊಂಡ ಅಫೀನ್ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ.

ಗಂಭೀರವಾಗಿ ಗಾಯಗೊಂಡಿರುವ ಮತ್ತೊಂದು ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಬಾಗಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಅವೈಜ್ಞಾನಿಕ ನಿರ್ಮಾಣದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

.

ಪೋಕ್ಸೋ ಕೇಸ್ ಕ್ಲೈಮ್ಯಾಕ್ಸ್ ಹಂತಕ್ಕೆ – ವಚನಾನಂದ ಸ್ವಾಮೀಜಿ ಭವಿಷ್ಯ ಇಂದು ನಿರ್ಧಾರ!

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣ ಇದೀಗ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಜಾಮೀನು ರದ್ದುಪಡಿಸುವ ಕುರಿತು ನ್ಯಾಯಾಲಯ ಇಂದು ಮಹತ್ವದ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಈಗಾಗಲೇ 410 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, 63 ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.

ಸ್ವಾಮೀಜಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತೆ ಸರ್ಕಾರಿ ಅಭಿಯೋಜಕರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಹೊರಗಿದ್ದರೆ ಸಾಕ್ಷ್ಯಗಳಿಗೆ ಬೆದರಿಕೆ ಹಾಗೂ ಪ್ರಕರಣ ದಿಕ್ಕು ತಪ್ಪಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಸಂತ್ರಸ್ತರ ಪರವಾಗಿ ಬೆದರಿಕೆ ಕರೆಗಳ ಆಡಿಯೋ ಸೇರಿದಂತೆ ಪೆನ್‌ಡ್ರೈವ್ ದಾಖಲೆಗಳನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಇತ್ತ ಸ್ವಾಮೀಜಿ ಪರ ವಕೀಲರು ಇದು ಮಠದ ಆಂತರಿಕ ಜಟಾಪಟಿಯಿಂದ ಹುಟ್ಟಿದ ಷಡ್ಯಂತ್ರ ಎಂದು ವಾದ ಮಂಡಿಸಿದ್ದಾರೆ. ವಾದ–ಪ್ರತಿವಾದಗಳನ್ನು ಆಲಿಸಿರುವ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದು, ಇಂದು ಮಧ್ಯಾಹ್ನ ಹೊರಬರುವ ತೀರ್ಪು ಪ್ರಕರಣದ ಭವಿಷ್ಯವನ್ನು ನಿರ್ಧರಿಸಲಿದೆ.

ಕರಾವಳಿ ಸೇರಿ ರಾಜ್ಯದ ಹಲವೆಡೆ ಮಳೆಯಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು: ಮುಂಬರುವ ದಿನಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವೆಡೆ ಬಿರುಗಾಳಿ ಸಹ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಕೆಲವೆಡೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಇದೇ ವೇಳೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಕಡೆ ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಜಿ.ಎಸ್.ಪಿಗೆ ಸಚಿವ ಸ್ಥಾನಕ್ಕಾಗಿ ಮಠಾಧೀಶರ ಒತ್ತಡ

0

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಕ್ಷೇತ್ರದ ಶಾಸಕ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಅವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಮತ್ತಷ್ಟು ವಿಳಂಬ ಮಾಡಿದರೆ ಸರ್ಕಾರವೇ ರಾಜಕೀಯ ಸಂಕಷ್ಟ ಎದುರಿಸಬೇಕಾಗಬಹುದು ಎಂದು ಕುದರಿಮೋತಿ ಶ್ರೀಮಠದ ವಿಜಯಮಹಾಂತ ಸ್ವಾಮೀಜಿ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಪಟ್ಟಣದ ಯಾತ್ರಾನಿವಾಸದಲ್ಲಿ ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಧರ್ಮಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಎಸ್. ಪಾಟೀಲರು ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರ ಮತ್ತು ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಇಂತಹ ಅನುಭವಿ ಹಾಗೂ ಜನಪರ ನಾಯಕರಿಗೆ ಸಚಿವ ಸ್ಥಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ರೋಣ ಮತಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆಯಬೇಕು ಎಂಬುದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದಲೂ ಕ್ಷೇತ್ರಕ್ಕೆ ಸಚಿವ ಸ್ಥಾನ ಅಗತ್ಯವಾಗಿದೆ. ಈ ಭಾಗದ ಜನರ ಆಶಯವನ್ನು ಕಾಂಗ್ರೆಸ್ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು ಎಂದು ಶ್ರೀಗಳು ಆಗ್ರಹಿಸಿದರು.

ಜಿ.ಎಸ್. ಪಾಟೀಲರು ಎಲ್ಲ ಜಾತಿ, ಧರ್ಮ ಮತ್ತು ಸಮುದಾಯಗಳನ್ನು ಸಮಾನವಾಗಿ ಕಾಣುವ ನಾಯಕರು. ಪಕ್ಷದ ಸಂಘಟನೆಗೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಹೀಗಿರುವಾಗ ಸಚಿವ ಸ್ಥಾನ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಡಾ. ಹೆಚ್.ಕೆ. ಪಾಟೀಲರು ಹಲವು ಬಾರಿ ಸಚಿವರಾಗಿ ಹಾಗೂ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಬಾರಿ ರೋಣ ಕ್ಷೇತ್ರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅವರು ದೊಡ್ಡಮನಸ್ಸು ತೋರಬೇಕು. ಇದರಿಂದ ಅವರ ಗೌರವ ಮತ್ತಷ್ಟು ಹೆಚ್ಚಾಗುತ್ತದೆ ಎಂದು ವಿಜಯಮಹಾಂತ ಶ್ರೀಗಳು ಹೇಳಿದರು.

ಮಠಾಧೀಶರ ಧ್ವನಿ ಒಂದೇ

ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಿ.ಎಸ್. ಪಾಟೀಲರು ಸರ್ವಧರ್ಮ ಸಮಭಾವದ ನಾಯಕರು. ಇಂತಹ ನಾಯಕತ್ವಕ್ಕೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೂ ಬಲ ಬರುತ್ತದೆ ಎಂದರು.

ಅಭಿನವ ಕೊಟ್ಟೂರೇಶ್ವರ ಸ್ವಾಮೀಜಿ ಮಾತನಾಡಿ, “ಜಿ.ಎಸ್. ಪಾಟೀಲರು ಕೇವಲ ವ್ಯಕ್ತಿಯಲ್ಲ, ಒಂದು ಶಕ್ತಿ. ಅವರ ಸಾಮರ್ಥ್ಯವನ್ನು ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಬಳಸಿಕೊಳ್ಳಬೇಕು” ಎಂದು ಹೇಳಿದರು.

ಕೊತಬಾಳ ಅಂಕಲಿ ಮಠದ ಗಂಗಾಧರ ಶ್ರೀಗಳು, ಜಿಗೇರಿ ಮಠದ ಗುರುಸಿದ್ದ ಶಿವಾಚಾರ್ಯರು ಹಾಗೂ ಇತರ ಮಠಾಧೀಶರು ಸಹ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವೇ.ಮೂ. ರೇವಣಸಿದ್ದೇಶ್ವರ ಶ್ರೀಗಳು, ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಬಿ. ಸೋಮನಕಟ್ಟಿಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ರೋಣ ಕ್ಷೇತ್ರಕ್ಕೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ. ಈ ವಿಚಾರದಲ್ಲಿ ವಿಳಂಬವಾದರೆ ಸರ್ಕಾರ ರಾಜಕೀಯವಾಗಿ ಬೆಲೆ ತೆರಬೇಕಾಗಬಹುದು.”

ವಿಜಯಮಹಾಂತ ಸ್ವಾಮೀಜಿ, ಕುದರಿಮೋತಿ ಶ್ರೀಮಠ

ನೀರು-ನೈರ್ಮಲ್ಯ ಸಮಸ್ಯೆಗೆ ಕಿಡಿಕಾರಿದ ಜನರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ವಾರ್ಡ್ ನಂ. 3ರಲ್ಲಿ ಉಂಟಾಗಿರುವ ಕುಡಿಯುವ ನೀರಿನ ಕೊರತೆ, ಕಾಲುವೆ ಸ್ವಚ್ಛತೆ, ಬೀದಿದೀಪಗಳ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಸಾರ್ವಜನಿಕರು ಹಾಗೂ ಸಮಗ್ರ ರೈತಪರ ಹೋರಾಟ ಸಮಿತಿ ಸದಸ್ಯರು ಬುಧವಾರ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಕುಂದಗೋಳ ಅಭಿನವ ಬಸವಣ್ಣ ಶ್ರೀಗಳು ಹಾಗೂ ದುಮ್ಮವಾಡ ಸರ್ಪಭೂಷಣ ಶ್ರೀಗಳು ಬೆಂಬಲ ಸೂಚಿಸಿದರು.

ಕೆಂಚಲಾಪುರ ಓಣಿಯಿಂದ ಎತ್ತು, ಆಕಳು, ಕೊಡಪಾನ, ಚರಗಿ ಹಾಗೂ ಪೊರಕೆಗಳೊಂದಿಗೆ ವಾದ್ಯಮೇಳದ ಮೂಲಕ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಮುಖ್ಯ ಬಜಾರ್ ರಸ್ತೆಯ ಮೂಲಕ ಪುರಸಭೆ ಕಚೇರಿಗೆ ಆಗಮಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸಮಗ್ರ ರೈತಪರ ಹೋರಾಟ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ, ಪಟ್ಟಣಕ್ಕೆ ತಿಂಗಳಿಗೊಮ್ಮೆ ಮಾತ್ರ ನೀರು ಸರಬರಾಜಾಗುತ್ತಿದೆ. ನದಿ ನೀರಿನ ಪೈಪ್‌ಲೈನ್ ದುರಸ್ತಿ ಹಾಗೂ ವಿದ್ಯುತ್ ವ್ಯತ್ಯಯದ ನೆಪ ಹೇಳಲಾಗುತ್ತಿದೆ. ನೂರಾರು ಕೊಳವೆಬಾವಿಗಳ ನಿರ್ವಹಣೆ ಹಾಗೂ ಪಂಪ್‌ಸೆಟ್‌ಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಳ್ಳದಕೇರಿ ಪ್ರದೇಶದಲ್ಲಿ ಬಹುತೇಕ ರೈತ ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರು ಹಾಗೂ ಸ್ವಚ್ಛತೆಯ ಕೊರತೆಯಿಂದ ಸಂಕಷ್ಟ ಎದುರಿಸುತ್ತಿವೆ. ಅನೇಕ ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಗದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಜೋನ್ ಹಳ್ಳದಿಂದ ಲಂಡಿ ಹಳ್ಳದವರೆಗೆ ಗಿಡಗಂಟಿಗಳು ಬೆಳೆದು ಕೆಸರು ತುಂಬಿಕೊಂಡಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ತೊಂದರೆಯಾಗುತ್ತಿದೆ. ಬೀದಿದೀಪ, ಸಾರ್ವಜನಿಕ ನಳ, ಶೌಚಾಲಯ ಹಾಗೂ ಹಳ್ಳಕ್ಕೆ ಕಲ್ವರ್ಟ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಾಗರಾಜ ಚಿಂಚಲಿ ಮಾತನಾಡಿ, ಪಟ್ಟಣದಲ್ಲಿ ನೀರು, ರಸ್ತೆ, ಆಶ್ರಯ ನಿವೇಶನ ಹಾಗೂ ಸ್ವಚ್ಛತೆಯ ಸಮಸ್ಯೆಗಳು ವರ್ಷಗಳಿಂದ ಮುಂದುವರಿದಿವೆ. ಜನಪ್ರತಿನಿಧಿಗಳು ಸಾಮಾಜಿಕ ಜಾಲತಾಣಗಳ ಪ್ರಚಾರಕ್ಕಿಂತ ಜನರ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಹೇಳಿದರು.

ಸಂಜೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಮನವಿ ಸ್ವೀಕರಿಸಿ ಮಾತನಾಡಿ, ನಾಲ್ಕೈದು ದಿನಗಳಲ್ಲಿ ಹೊಸ ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ನಳ, ಶೌಚಾಲಯ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕಲ್ಪನೆಗೂ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಟಾಕಪ್ಪ ಸಾತಪುತೆ, ಮಲ್ಲಪ್ಪ ಅಂಕಲಿ, ದುಂಡಪ್ಪ ಕೋಟಗಿ, ಹೊನ್ನಪ್ಪ ವಡ್ಡರ, ಶಿವಣ್ಣ ಕಟಗಿ, ಪ್ರಕಾಶ ಗುತ್ತಲ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಸಿಪಿಐ ಬಿ.ವಿ. ನ್ಯಾಮಗೌಡ್ರ, ಪಿಎಸ್‌ಐ ನಾಗರಾಜ ಗಡಾದ ಹಾಗೂ ಟಿ.ಕೆ. ರಾಠೋಡ ಭದ್ರತಾ ವ್ಯವಸ್ಥೆ ನಿರ್ವಹಿಸಿದರು.

“ಹೋರಾಟ ಮಾಡುತ್ತೇವೆ ಎಂದು ತಿಳಿದ ಕೂಡಲೇ ಅಧಿಕಾರಿಗಳು ಸ್ವಚ್ಛತೆ, ನೀರು ಹಾಗೂ ಬೆಳಕಿನ ವ್ಯವಸ್ಥೆಗೆ ಮುಂದಾಗಿದ್ದಾರೆ. ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು.”

ಮಂಜುನಾಥ ಮಾಗಡಿ, ತಾಲೂಕು ಅಧ್ಯಕ್ಷ, ಸಮಗ್ರ ರೈತಪರ ಹೋರಾಟ ವೇದಿಕೆ

ಗ್ರಾಮ ಪಂಚಾಯಿತಿ ಸಿಬ್ಬಂದಿ ಮೇಲೆ ಹಲ್ಲೆ: ಆರೋಪಿಗಳ ತಕ್ಷಣ ಬಂಧನಕ್ಕೆ ನೌಕರರ ಸಂಘ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಚಿಕ್ಕಹಂದಿಗೋಳ ಗ್ರಾಮ ಪಂಚಾಯಿತಿಯ ಪಿಡಿಒ ಶಶಿಧರ ಕಪ್ಪರದ ಹಾಗೂ ವಾಟರ್‌ಮನ್ ಅರ್ಜುನ್ ಓಲೇಕಾರ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಮುಖಂಡರು, ಜೂನ್ 16ರಂದು ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದುಂದೂರ ಗ್ರಾಮದ ಗಂಗಯ್ಯ ಗಣಾಚಾರಿ ಹಾಗೂ ಇತರರು ಹಲ್ಲೆ ನಡೆಸಿರುವುದು ಖಂಡನೀಯ ಮತ್ತು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.

ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಇದು ಸರ್ಕಾರಿ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುವ ಗಂಭೀರ ಅಪರಾಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ಸಾರ್ವಜನಿಕರೊಂದಿಗೆ ನೇರ ಸಂಪರ್ಕದಲ್ಲಿದ್ದು ಸೇವೆ ಸಲ್ಲಿಸುತ್ತಾರೆ. ಇಂತಹ ಘಟನೆಗಳು ಸಿಬ್ಬಂದಿಯಲ್ಲಿ ಭಯದ ವಾತಾವರಣ ಸೃಷ್ಟಿಸುವುದರ ಜೊತೆಗೆ ಸಾರ್ವಜನಿಕ ಸೇವೆಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಹೇಳಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿ ತಕ್ಷಣ ಬಂಧಿಸಬೇಕು. ಜೊತೆಗೆ ಸರ್ಕಾರಿ ನೌಕರರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಡಾ. ರವಿ ಎಲ್. ಗುಂಜೀಕರ, ಡಿ.ಎಸ್. ತಳವಾರ, ಎಂ.ಎಂ. ನಿಟ್ಟಾಲಿ, ಎಂ.ವೈ. ಮಲಕಶೆಟ್ಟಿ, ರಾಜು ಕಂಟಿಗೊಣ್ಣವರ, ಸಿದ್ದಪ್ಪ ಲಿಂಗದಾಳ, ಎಸ್.ಎಸ್. ಪಾರ್ವತಿಮಠ, ಶಿವಪ್ಪ ಹದ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸರ್ಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಗಂಭೀರ ಅಪರಾಧ. ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು.”

– ಡಾ. ಬಸವರಾಜ ಬಳ್ಳಾರಿ, ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ, ಸರ್ಕಾರಿ ನೌಕರರ ಸಂಘ

error: Content is protected !!