Home Blog Page 29

ಕಾಂಗ್ರೆಸ್ ಸರ್ಕಾರ ಹಿಂದಿ ವಿಚಾರದಲ್ಲಿ ದೇಶದ್ರೋಹದ ಕೆಲಸ ಮಾಡುತ್ತಿದೆ: ಅಶ್ವತ್ಥ್ ನಾರಾಯಣ್

ಬೆಂಗಳೂರು: ಹಿಂದಿ ಭಾಷೆ ಕುರಿತ ರಾಜ್ಯ ಸರ್ಕಾರದ ನಿಲುವಿಗೆ ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದಿ ವಿಚಾರದಲ್ಲಿ ದೇಶದ್ರೋಹದ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ತ್ರಿಭಾಷಾ ನೀತಿ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ಸರ್ಕಾರ ದ್ವಿಭಾಷಾ ನೀತಿಗೆ ಒತ್ತು ನೀಡುತ್ತಿದ್ದು, ಇಂಗ್ಲಿಷ್ ಬೇಕು ಆದರೆ ಹಿಂದಿ ಬೇಡ ಎಂಬ ನಿಲುವು ತಾಳಿದೆ. ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.

ತ್ರಿಭಾಷಾ ನೀತಿಯಲ್ಲಿ ಹಿಂದಿಯನ್ನು ಕಡ್ಡಾಯವಾಗಿ ಕಲಿಯಲೇಬೇಕು ಎಂಬುದಿಲ್ಲ. ಆದರೂ ಸರ್ಕಾರ ವಿಷಯದಲ್ಲಿ ಸಣ್ಣತನ ತೋರಿಸಿದೆ. ಇಂತಹ ನಿರ್ಧಾರಗಳಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ಅಶ್ವತ್ಥ್ ನಾರಾಯಣ್ ಆಕ್ಷೇಪಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಕೋಟಿ ಕೋಟಿ ಅನುದಾನ ಖರ್ಚು ಮಾಡಿದರೂ, ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ವಿಫಲವಾಗಿದೆ. ಹಿಂದಿಯನ್ನು ತೆಗೆದು ದೇಶದ ಏಕತೆ ಹೇಗೆ ಸಾಧಿಸುತ್ತಾರೆ? ದೇಶದ ಮಟ್ಟದಲ್ಲಿ ಸಂಪರ್ಕ ಸಾಧಿಸಲು ಹಿಂದಿ ಅಗತ್ಯ ಎಂದು ಹೇಳಿದರು.

ಇನ್ನೊಂದೆಡೆ, ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಖ್ ತಪ್ಪೊಪ್ಪಿಕೊಂಡಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, ಪ್ರಕರಣದಲ್ಲಿ ಕಾಂಗ್ರೆಸ್ ಮೊದಲು ಸಮರ್ಥನೆ ಮಾಡಲು ಪ್ರಯತ್ನಿಸಿತ್ತು. ಈಗ ಏನು ಹೇಳುತ್ತಾರೆ ಎಂಬುದು ನೋಡಬೇಕು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಓಲೈಕೆ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: ಮೂವರಿಗೆ ಕೈಕಾಲು ಮುರಿತ, ಹಲವರಿಗೆ ಗಾಯ

0

ಶಿವಮೊಗ್ಗ: ಭದ್ರಾವತಿ ತಾಲೂಕಿನ ಕಾಗೇಹಳ್ಳದ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಬಸ್, ಕಾಗೇಹಳ್ಳದ ಬಳಿ ಇಂದು ಮಧ್ಯಾಹ್ನ ಸುಮಾರು 12:30ರ ವೇಳೆಗೆ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ಚಾಲಕ ಹಾಗೂ ಕಂಡಕ್ಟರ್ ಸೇರಿದಂತೆ ಒಟ್ಟು 35 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಅಪಘಾತದಲ್ಲಿ ಮೂವರು ಪ್ರಯಾಣಿಕರಿಗೆ ಕೈ ಮತ್ತು ಕಾಲು ಮುರಿದು ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ಅತಿವೇಗ ಮತ್ತು ನಿಯಂತ್ರಣ ಕಳೆದುಕೊಂಡದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ಎತ್ತಿಗೆ ಮೈ ತೊಳೆಯಲು ಹೋಗಿ ಯುವಕ ದುರಂತ ಸಾವು: ಸಂಬಂಧಿಕರ ಆಕ್ರಂದನ

ಗದಗ: ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮುತ್ತಪ್ಪ ಅಲಿಯಾಸ್ ಫಕ್ಕೀರೇಶ್ ದೇವಪ್ಪ ಮುರ್ಲಾಪುರ (23) ಮೃತ ಯುವಕ ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಿಗ್ಗೆ ಎತ್ತಿಗೆ ಮೈ ತೊಳೆಯಲು ಕೆರೆಗೆ ತೆರಳಿದ್ದ ವೇಳೆ, ಆಯಾತಪ್ಪಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಗದಗ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕೆರೆಯಲ್ಲಿ ಮುಳುಗಿದ್ದ ಯುವಕನ ಮೃತದೇಹವನ್ನು ಹೊರತೆಗೆದರು.

ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ದುಃಖದ ವಾತಾವರಣ ನಿರ್ಮಾಣವಾಗಿತ್ತು.

ಗದಗ ಗ್ರಾಮೀಣ ಠಾಣೆಯ ಹಿರಿಯ ಪೊಲೀಸ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮರಕ್ಕೆ ಬಸ್ ಡಿಕ್ಕಿ–ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

0

ಹಗರಿಬೊಮ್ಮನಹಳ್ಳಿ: ಹೊಸಪೇಟೆ–ಹರಿಹರ ಮುಖ್ಯ ರಸ್ತೆಯಲ್ಲಿ ಬರುವ ಪಿಂಜಾರ ಹೆಗ್ಡಾಳ್ ಗ್ರಾಮದ ಬಳಿ ಕೆಕೆಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

ಬಸ್ ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿ ಒಟ್ಟು 16 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ.

ಮಾಹಿತಿಯಂತೆ, ಬಸ್ಸಿನ ಪಾಟಾ (ಪ್ಲೇಟ್ ಕಟ್) ಆಗಿರುವುದರಿಂದ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಈ ಘಟನೆ ವೇಳೆ ಚಾಲಕ ಶಂಕರಲಿಂಗ ಹಾಗೂ ನಿರ್ವಾಹಕ ಹನುಮಂತಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಾರಿಗೆ ಬಸ್ ಹಗರಿಬೊಮ್ಮನಹಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಡಿಪೋ ಅಧಿಕಾರಿಯಾದ ಸಂತೋಷ್ ಕುಮಾರ್ ಮಾಹಿತಿ ನೀಡಿದ್ದು, ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿರುವುದಾಗಿ ತಿಳಿಸಿದ್ದಾರೆ.

ಗ್ಯಾಸ್ ಸಮಸ್ಯೆ ಕುರಿತು ಕೇಂದ್ರ ಸ್ಪಷ್ಟನೆ ನೀಡಲಿ: ಕೆ.ಹೆಚ್ ಮುನಿಯಪ್ಪ ಒತ್ತಾಯ

ಬೆಂಗಳೂರು: ಗ್ಯಾಸ್ ಕೊರತೆ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಸ್ಪಷ್ಟನೆ ನೀಡಬೇಕು ಮತ್ತು ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೋಟೆಲ್‌ಗಳಲ್ಲಿ ಸಿಲಿಂಡರ್ ಕೊರತೆ ಉಂಟಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ನಿನ್ನೆ ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಆದೇಶ ಹೊರಡಿಸಿದೆ ಎಂದು ಹೇಳಿದರು. ಇವು ಇಂದು ಡಿಸ್ಟ್ರಿಬ್ಯೂಟರ್‌ಗಳಿಗೆ ತಲುಪಲಿದ್ದು, ನಾಳೆಯಿಂದ ಹೋಟೆಲ್‌ಗಳಿಗೆ ವಿತರಣೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ನಾವು ತಿಳಿಸಿದಂತೆ 17,500 ಸಿಲಿಂಡರ್‌ಗಳನ್ನು ಹೋಟೆಲ್‌ಗಳಿಗೆ ಪೂರೈಸಲಾಗುತ್ತದೆ. ಹೀಗಾಗಿ ಯಾರೂ ಆತಂಕಪಡಬೇಕಾಗಿಲ್ಲ ಎಂದು ಭರವಸೆ ನೀಡಿದ್ದಾರೆ.

ಇನ್ನೂ ಕೇಂದ್ರ ಸರ್ಕಾರವನ್ನು ಉದ್ದೇಶಿಸಿ ಮಾತನಾಡಿದ ಮುನಿಯಪ್ಪ, “ಹಿಂದೆ ಬೇಕಾದಷ್ಟು ಕಮರ್ಷಿಯಲ್ ಗ್ಯಾಸ್ ಬಳಸಿ ಎಂದು ಹೇಳಿದ್ದ ಕೇಂದ್ರ, ಈಗ ಏಕಾಏಕಿ ಪೂರೈಕೆಯನ್ನು ನಿಲ್ಲಿಸಿರುವುದು ಸಮಸ್ಯೆಗೆ ಕಾರಣವಾಗಿದೆ. ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಗ್ಯಾಸ್ ಕೊರತೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಈ ಸಮಸ್ಯೆಗೆ ತಕ್ಷಣ ಪರಿಹಾರ ಒದಗಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ್ದೇ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಮಾರ್ಚ್ 30ರಿಂದ ಏಪ್ರಿಲ್ 3ರವರೆಗೆ ಬೆಂಗಳೂರಿನಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಈ ಅವಧಿಯಲ್ಲಿ ನಗರದಲ್ಲಿ ಗರಿಷ್ಠ ಉಷ್ಣಾಂಶ 35-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ ಸುಮಾರು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಇದೇ ಅವಧಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 39-40 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.

ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ 37-39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದ್ದು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ 34-36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.

ಇದೇ ವೇಳೆ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 36-38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಗುಡುಗು-ಮಿಂಚಿನ ವೇಳೆ ಗಾಳಿಯ ವೇಗ ಗಂಟೆಗೆ 40ರಿಂದ 50 ಕಿಲೋಮೀಟರ್‌ವರೆಗೆ ಬೀಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಶಾಸಕರು ಐಪಿಎಲ್ ಉಚಿತ ಟಿಕೆಟ್ ಕೇಳುವುದು ತಪ್ಪು: ಡಿ.ಕೆ. ಸುರೇಶ್

ಬೆಂಗಳೂರು: ಉಚಿತವಾಗಿ ಟಿಕೆಟ್ ಕೇಳಿರುವುದು ತಪ್ಪು. ಪಂದ್ಯ ವೀಕ್ಷಣೆ ಮಾಡುವ ಆಸೆ ಇರುವವರು ವೈಯಕ್ತಿಕವಾಗಿ ಹಣ ಕೊಟ್ಟು ಹೋಗಿ ನೋಡಲಿ. ಇದು ಉತ್ತಮವಾದುದು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು.

ಶಾಸಕರಿಗೆ ಉಚಿತವಾಗಿ ಐಪಿಎಲ್ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, “ಈ ಬಗ್ಗೆ ಯಾರು ಮಾತನಾಡುತ್ತಿದ್ದಾರೆ ಅದು ಮಹಾಪರಾಧ. ಐಪಿಎಲ್ ದುರ್ಘಟನೆ ಸಂದರ್ಭದಲ್ಲಿ ಅವರು ಯಾವ ರೀತಿ ವಾಗ್ದಾಳಿ ಮಾಡಿದ್ದರು, ಪದ ಬಳಸಿದ್ದರು ಎಂದು ತೆಗೆದು ನೋಡಲಿ.

ಮೊದಲಿನಿಂದಲೂ ಟಿಕೆಟ್ ನೀಡುತ್ತಾ ಬಂದಿದ್ದಾರೆ. ಇದನ್ನು ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿ ಶಾಸಕರು ಕೂಡ ಐಪಿಎಲ್ ಟಿಕೆಟ್ ಪಡೆದಿದ್ದಾರೆ. ಐಪಿಎಲ್ ರಾಷ್ಟ್ರವನ್ನು ಪ್ರತಿನಿಧಿಸುವ ಪಂದ್ಯಾವಳಿ ಅಲ್ಲ. ವಾಣಿಜ್ಯ ಉದ್ದೇಶಿತ ಪಂದ್ಯಾವಳಿ. ಇವುಗಳ ಬಗ್ಗೆ ಜನಪ್ರತಿನಿಧಿಗಳು ಹೆಚ್ಚು ಗಮನಹರಿಸುವುದು ಒಳ್ಳೆಯದಲ್ಲ” ಎಂದು ಹೇಳಿದರು.

ಬೆಂಗಳೂರಿನ ನಾಲ್ಕು ಕಡೆ ಕ್ರೀಡಾಂಗಣಗಳನ್ನು ನಿರ್ಮಿಸಬೇಕು

ಚಿನ್ನಸ್ವಾಮಿ ಕ್ರೀಡಾಂಗಣ ಬೇರೆಡೆ ಸ್ಥಳಾಂತರ ಮಾಡಬೇಕು ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಈಗಾಗಲೇ ನಾನು ಆಯ್ಕೆ ಮಾಡಿ, ಸೂಚಿಸಿದ ಜಾಗದಲ್ಲಿ ಹೊಸ ಕ್ರೀಡಾಂಗಣ ಮಾಡಲು ಸರ್ಕಾರ ಮನ್ನಣೆ ನೀಡಿದೆ. ಸೂರ್ಯ ಸಿಟಿಯಲ್ಲಿ ಕ್ರೀಡಾಂಗಣ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು ನಾನೇ. ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ನಾಲ್ಕು ಕ್ರೀಡಾಂಗಣ ಮಾಡಬೇಕು. ಕಂಠೀರವ ಕ್ರೀಡಾಂಗಣ, ಕೆಎಸ್ ಸಿಎ, ಫುಟ್ಬಾಲ್ ಕ್ರೀಡಾಂಗಣ ಹೊರತಾಗಿ ಬೇರೆ ಯಾವುದೇ ಕ್ರೀಡಾಂಗಣವಿಲ್ಲ.

ಇಷ್ಟು ದೊಡ್ಡ ಜನಸಂಖ್ಯೆ ಇರುವ ನಗರದಲ್ಲಿ ಯುವಕರಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ನೀಡಬೇಕಾದರೆ ನಾಲ್ಕು ದಿಕ್ಕಿನಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಎಂದು ಸಲಹೆ ನೀಡಿದ್ದೆ. ನಾನು ಲೋಕಸಭೆ ಸದಸ್ಯನಾಗಿದ್ದಾಗ, ನನ್ನದೇ ಕ್ಷೇತ್ರದ ಸೂರ್ಯ ಸಿಟಿಯಲ್ಲಿ 100 ಎಕರೆ ಮೀಸಲಿಡಬೇಕು ಎಂದು ಹೇಳಿದ್ದೆ. ನಂತರ ಅದನ್ನು ಮೀಸಲಿಟ್ಟು, ಯೋಜನೆ ಅನುಮೋದನೆ ಪಡೆಯಲಾಗಿತ್ತು. ಈ ಬಗ್ಗೆ ನಾನು ಸಚಿವರಾದ ಜಮೀರ್ ಅಹ್ಮದ್, ಅಧ್ಯಕ್ಷರಾದ ಶಿವಲಿಂಗೇಗೌಡರನ್ನು ಭೇಟಿ ಮಾಡಿ ನಾನು ಹಾಗೂ ಶಾಸಕರಾದ ಶಿವಣ್ಣ ಅವರು ಚರ್ಚೆ ಮಾಡಿದ್ದೆವು.

ಈಗ ಈ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲೂ ಅನುಮೋದನೆ ನೀಡಲಾಗಿದೆ. 50-60 ಎಕರೆ ಪ್ರದೇಶದಲ್ಲಿ ಅತ್ಯುತ್ತಮ ಕ್ರೀಡಾಂಗಣ ಆಗಲಿದೆ. ಬಿಡಿಎ ಮೂಲಕ ಶಿವರಾಮ ಕಾರಂತ ಬಡಾವಣೆಯಲ್ಲೂ ಕ್ರೀಡಾಂಗಣ ಮಾಡಬೇಕು ಎಂದು ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಅಲ್ಲೂ 40 ಎಕರೆ ಮೀಸಲಿಡಲಾಗಿದೆ. ಬಿಡದಿಯಲ್ಲೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ಮೀಸಲಿಡಲು ಸಂಬಂಧಪಟ್ಟವರ ಜತೆ ಚರ್ಚೆ ಮಾಡುವೆ” ಎಂದು ತಿಳಿಸಿದರು.

ದ್ವಿಭಾಷಾ ನೀತಿ ತೀರ್ಮಾನ ಉತ್ತಮ:

ದ್ವಿಭಾಷಾ ನೀತಿ ತೀರ್ಮಾನದ ಬಗ್ಗೆ ಕೇಳಿದಾಗ, “ಮಕ್ಕಳ ಮೇಲೆ ಮೂರು ಭಾಷೆಗಳ ಕಲಿಕೆ ಒತ್ತಡ ಹಾಕಿದರೆ, ಅವರ ಕಲಿಗೆ ಹಾಗೂ ಗ್ರಹಿಕೆ ಕಡಿಮೆಯಾಗುತ್ತದೆ. ಈ ದೃಷ್ಟಿಯಿಂದ ಶಿಕ್ಷಕರು ಕೈಗೊಂಡಿರುವ ತೀರ್ಮಾನ ಉತ್ತಮವಾಗಿದೆ. ಮಕ್ಕಳು ಎರಡು ಭಾಷೆ ಕಡ್ಡಾಯವಾಗಿ ಕಲಿಯಬೇಕು ಎಂಬುದು ಉತ್ತಮ ನಿರ್ಧಾರ. ಮೂರು ಭಾಷೆ ಕಲಿಯುವುದು ಅವರವರ ವೈಯಕ್ತಿಕ ಅಭಿಲಾಷೆ” ಎಂದರು.

ಬಿಜೆಪಿ ನಾಯಕರು ಈ ನಿರ್ಧಾರ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಸರ್ಕಾರ ಯಾವುದೇ ತೀರ್ಮಾನ ಕೈಗೊಂಡರೂ ವಿರೋಧ ಮಾಡಬೇಕು ಎಂಬುದೊಂದೇ ಬಿಜೆಪಿ ನಾಯಕರ ಗುರಿ. ಅವರ ಕೇಂದ್ರ ನಾಯಕರನ್ನು ಮೆಚ್ಚಿಸಲು, ಮನವೊಲಿಸಲು ಹಿಂದಿ ಪರವಾಗಿರಬೇಕು. ಬಿಜೆಪಿ ನಾಯಕರು ತಮ್ಮ ಕೇಂದ್ರ ನಾಯಕರಿಗೆ ಕನ್ನಡವನ್ನು ಎಲ್ಲಾ ರಾಜ್ಯಗಳಲ್ಲಿ ಅಳವಡಿಸಿಕೊಳ್ಳುವಂತೆ ಮಾಡಬೇಕು ಎಂದು ಮನವರಿಕೆ ಮಾಡಬೇಕು” ಎಂದು ತಿಳಿಸಿದರು.

ತ್ರಿಭಾಷಾ ನೀತಿ ಜಾರಿಗೆ ತಂದಿದ್ದು ಕಾಂಗ್ರೆಸ್, ಈ ನಿರ್ಧಾರ ರಾಜಕೀಯವೇ ಎಂದು ಕೇಳಿದಾಗ, “ಅವತ್ತಿನ ಪರಿಸ್ಥಿತಿ ಬೇರೆ, ಈಗಿನ ಪರಿಸ್ಥಿತಿ ಬೇರೆ. ಇಂದು ಗುಣಮಟ್ಟದ ಅಗತ್ಯವಿದ್ದು, ಎರಡು ಭಾಷೆಗಳಲ್ಲಿ ಕಲಿಕೆ ಆಗಬೇಕು. ಕನ್ನಡವನ್ನು ಪ್ರಧಾನ ಭಾಷೆಯಾಗಿಟ್ಟುಕೊಂಡು ಉಳಿದ ಮತ್ತೊಂದು ಭಾಷೆ ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗಿದ್ದು, ಇದು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಬಿಟ್ಟ ವಿಚಾರ” ಎಂದರು.

ವರ್ಷಪೂರ್ತಿ ಓದಿದ ಬಳಿಕ ಈಗ ಈ ನಿರ್ಧಾರ ಗೊಂದಲ ಮೂಡಿಸುವುದಿಲ್ಲವೇ ಎಂದು ಕೇಳಿದಾಗ, “ಬಹುತೇಕರು ತೃತೀಯ ಭಾಷೆಯಲ್ಲಿ ಅನುತ್ತೀರ್ಣರಾಗುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತೀರ್ಮಾನ ಮಾಡಿದೆ” ಎಂದು ತಿಳಿಸಿದರು.

MS Dhoni: CSKಗೆ ಶಾಕ್ ಮೇಲೆ ಶಾಕ್: RCB ವಿರುದ್ಧದ ಪಂದ್ಯಕ್ಕೆ ಧೋನಿ ಅಲಭ್ಯ..!

0

ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ, ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಏಪ್ರಿಲ್ 5ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಆದರೆ ಈ ಪಂದ್ಯಕ್ಕೆ ಸಿಎಸ್‌ಕೆ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ ಗಾಯದ ಕಾರಣದಿಂದ ಅಲಭ್ಯರಾಗಲಿದ್ದಾರೆ. ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ, ಇಂದಿನ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನೂ ಮಿಸ್ ಮಾಡಲಿದ್ದಾರೆ.

ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಮಾಹಿತಿ ಪ್ರಕಾರ, ಧೋನಿ ಕನಿಷ್ಠ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಬೇಕಿದ್ದು, ಇದರಿಂದ ಅವರು ಸುಮಾರು 6 ಪಂದ್ಯಗಳಿಗೆ ಹೊರಗುಳಿಯುವ ಸಾಧ್ಯತೆ ಇದೆ. ಹೀಗಾಗಿ ಆರ್‌ಸಿಬಿ ವಿರುದ್ಧದ ಏಪ್ರಿಲ್ 5ರ ಪಂದ್ಯಕ್ಕೂ ಅವರು ಲಭ್ಯರಾಗುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಧೋನಿ ಗೈರು ಇರುವ ಹಿನ್ನೆಲೆ, ಚೆನ್ನೈ ತಂಡದಲ್ಲಿ ವಿಕೆಟ್ ಕೀಪರ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ನಿರ್ವಹಿಸಲಿದ್ದಾರೆ. ಅವರು ಸಿಎಸ್‌ಕೆ ಪರ ವಿಕೆಟ್ ಕೀಪರ್-ಬ್ಯಾಟರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇನ್ನು ಧೋನಿ ಸಂಪೂರ್ಣ ಫಿಟ್ ಆಗಿದ್ದರೆ, ಏಪ್ರಿಲ್ 23ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆ ಇದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್‌ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಎಂಎಸ್ ಧೋನಿ, ಸಂಜು ಸ್ಯಾಮ್ಸನ್, ಡೆವಾಲ್ಡ್ ಬ್ರೆವಿಸ್, ಉರ್ವಿಲ್ ಪಟೇಲ್, ಶಿವಂ ದುಬೆ, ಜೇಮಿ ಓವರ್‌ಟನ್, ರಾಮಕೃಷ್ಣ ಘೋಷ್, ನೂರ್ ಅಹ್ಮದ್, ಖಲೀಲ್ ಅಹ್ಮದ್, ಅನ್ಶುಲ್ ಕಂಬೋಜ್, ಗುರ್ಜಪ್ನೀತ್ ಸಿಂಗ್, ಶ್ರೇಯಸ್ ಗೋಪಾಲ್, ಮುಖೇಶ್ ಚೌಧರಿ, ಅಕೇಲ್ ಹೊಸೈನ್, ಪ್ರಶಾಂತ್ ವೀರ್, ಕಾರ್ತಿಕ್ ಶರ್ಮಾ, ಮ್ಯಾಥ್ಯೂ ಶಾರ್ಟ್, ಅಮನ್ ಖಾನ್, ಸರ್ಫರಾಝ್ ಖಾನ್, ಮ್ಯಾಟ್ ಹೆನ್ರಿ, ರಾಹುಲ್ ಚಹರ್, ಝಾಕ್ ಫೌಲ್ಕ್ಸ್, ಸ್ಪೆನ್ಸರ್ ಜಾನ್ಸನ್.

ಲಂಚ ಕೇಳಿದ ಕಮರ್ಷಿಯಲ್ ಟ್ಯಾಕ್ಸ್ ಆಡಿಟ್ ಡಿಸಿ ಭರತ್ ಹೆಗಡೆ ಲೋಕಾ ಬಲೆಗೆ!

ಹುಬ್ಬಳ್ಳಿ: GST ಬಾಕಿ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಆಡಿಟ್ ವಿಭಾಗದ ಡೆಪ್ಯುಟಿ ಕಮಿಷನರ್ ಭರತ್ ಹೆಗಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ.

ಪೆಟ್ರೋಲ್ ಬಂಕ್ ಮಾಲೀಕರೊಬ್ಬರಿಂದ ಬಂದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು. ಭರತ್ ಹೆಗಡೆ ಅವರು ವಿಶ್ವನಾಥ್ ನಾಯಕ್ ಎಂಬ ವ್ಯಾಪಾರಿಗೆ ಸುಮಾರು 60 ಲಕ್ಷ ರೂಪಾಯಿ ಜಿಎಸ್ಟಿ ಬಾಕಿ ಪಾವತಿಸಬೇಕೆಂದು ನೋಟಿಸ್ ನೀಡಿದ್ದು, ಪ್ರಕರಣವನ್ನು ಸುಗಮಗೊಳಿಸಲು ಲಂಚ ಕೇಳಿದ್ದರೆಂದು ಆರೋಪಿಸಲಾಗಿದೆ.

ಕುರಿತು ವಿಶ್ವನಾಥ್ ನಾಯಕ್ ಲೋಕಾಯುಕ್ತ ಕಚೇರಿಗೆ ದೂರು ನೀಡಿದ ಬಳಿಕ, ಎಸ್ಪಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ವಿಶೇಷ ತಂಡ ಟ್ರ್ಯಾಪ್ ಕಾರ್ಯಾಚರಣೆ ರೂಪಿಸಿತು. ಗುರುವಾರ ಬೆಳಗ್ಗೆ ಸುಮಾರು 11:30 ವೇಳೆಗೆ ಹುಬ್ಬಳ್ಳಿ ನವನಗರದಲ್ಲಿರುವ ಕಚೇರಿಯಲ್ಲಿ ದಾಳಿ ನಡೆಸಿ ಭರತ್ ಹೆಗಡೆಯನ್ನು ಬಲೆಗೆ ಬೀಳಿಸಲಾಯಿತು. ಘಟನೆ ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Nitish Kumar: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ MLC ಸ್ಥಾನಕ್ಕೆ ರಾಜೀನಾಮೆ

0

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 16ರಂದು ರಾಜ್ಯಸಭೆಗೆ ಆಯ್ಕೆಯಾದ ಬಳಿಕ, ನಿಯಮಾನುಸಾರ 14 ದಿನಗಳೊಳಗೆ ಒಂದು ಹುದ್ದೆಯನ್ನು ತ್ಯಜಿಸಬೇಕಾಗಿದ್ದು, ಅದರಂತೆ ಅವರು ಇಂದು ರಾಜೀನಾಮೆ ಸಲ್ಲಿಸಿದರು. ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ವಿಧಾನಪರಿಷತ್ ಅಧ್ಯಕ್ಷ ಅವಧೇಶ್ ನಾರಾಯಣ್ ಸಿಂಗ್ ಅವರಿಗೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಅವರು ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ.

ಹೊಸ ಮುಖ್ಯಮಂತ್ರಿ ನೇಮಕ ಹಾಗೂ ಸರ್ಕಾರ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುವ ನಿರೀಕ್ಷೆ ಇದೆ. ಬಿಜೆಪಿ ಅಥವಾ ಜೆಡಿಯು ಪಕ್ಷಗಳಿಂದ ಇನ್ನೂ ಅಧಿಕೃತ ಘೋಷಣೆ ಆಗಿಲ್ಲದಿದ್ದರೂ, ನಿತೀಶ್ ಕುಮಾರ್ ಅವರ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಬರಬಹುದೆಂಬ ಸೂಚನೆಗಳು ಲಭ್ಯವಾಗಿವೆ.

ಈ ನಡುವೆ, ಉಪಮುಖ್ಯಮಂತ್ರಿಯಾಗಿರುವ ಸಾಮ್ರಾಟ್ ಚೌಧರಿ ಅವರ ಹೆಸರು ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಜೊತೆಗೆ, ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯೂ ಚರ್ಚೆಯಲ್ಲಿದೆ.

ಸಂವಿಧಾನದ ಪ್ರಕಾರ, ಒಬ್ಬ ವ್ಯಕ್ತಿ ಏಕಕಾಲದಲ್ಲಿ ಎರಡು ಸದನಗಳ ಸದಸ್ಯತ್ವವನ್ನು ಹೊಂದಲು ಅವಕಾಶವಿಲ್ಲ. ಈ ಕಾರಣದಿಂದ ನಿತೀಶ್ ಕುಮಾರ್ ಅವರು ವಿಧಾನಪರಿಷತ್ ಸದಸ್ಯತ್ವವನ್ನು ತ್ಯಜಿಸಿದ್ದಾರೆ.

error: Content is protected !!