Home Blog Page 291

ಚಿತ್ರಕಲಾ ಶಿಕ್ಷಕರು ಇಲಾಖೆಯ ಆಸ್ತಿ: ಆರ್.ಎಸ್. ಬುರಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಶಾಲೆಯಲ್ಲಿ ಮಕ್ಕಳ ಕಲಿಕೆ ಮತ್ತು ಶಾಲಾ ವಾತಾವರಣವನ್ನು ನಿರ್ಮಿಸುವಲ್ಲಿ ಚಿತ್ರಕಲಾ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚಿತ್ರಕಲಾ ಶಿಕ್ಷಕರು ಇಲಾಖೆಯ ಆಸ್ತಿ ಎಂದು ಶಾಲಾ ಶಿಕ್ಷಣ ಇಲಾಖೆ (ಆಡಳಿತ)ಯ ಉಪನಿರ್ದೇಶಕ ಆರ್.ಎಸ್. ಬುರಡಿ ಅಭಿಪ್ರಾಯಪಟ್ಟರು.

2025-26ನೇ ಸಾಲಿನ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಯ ಸ್ಪರ್ಧೆಯ ಬಹುಮಾನವನ್ನು ವಿತರಿಸಿ ಮಾತನಾಡಿದ ಅವರು, ಚಿತ್ರಕಲೆಯಿಂದ ಸೃಜನಶೀಲತೆ, ಕ್ರಿಯಾಶೀಲತೆಯನ್ನು ಹೆಚ್ಚಿಸಿಕೊಳ್ಳಬಹುದು. ಚಿತ್ರಕಲೆ ಐತಿಹಾಸಿಕ ಮಹತ್ವ ಮತ್ತು ದಾಖಲೆಯನ್ನು ಸಾರುತ್ತದೆ. ಕಲಾವಿದ ಮಾನವ ಕುಲದ ಶಾಸನಕಾರ ಎಂದರು.

ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯ ಕಿರೇಸೂರ ಮಾತನಾಡಿ, ಇಲಾಖೆಯ ಸಹಪಠ್ಯ ಚಟುವಟಿಕೆಯ ಕಾರ್ಯಕ್ರಮಗಳು ಶಿಕ್ಷಕರ ಆತ್ಮವಿಶ್ವಾಸ ಹೆಚ್ಚಿಸಿ ಅವರ ಆಂತರ್ಯದಲ್ಲಿನ ಕಲೆಯನ್ನು ಹೊರತರುವಲ್ಲಿ ಸಹಕಾರಿಯಾಗಿದೆ. ಶಿಕ್ಷಣದ ಗುಣಮಟ್ಟವನ್ನು ಹೆಚ್ಚು ಸುಧಾರಿಸಲು ಸಾಧ್ಯವಾಗಿಸುತ್ತದೆ ಎಂದರು.

ವೃತ್ತಿ ಶಿಕ್ಷಣ ವಿಷಯ ವೀಕ್ಷಕರಾದ ಗೀತಾ ಕುಲಕರ್ಣಿ ಮಾತನಾಡಿ, ಸಹಪಠ್ಯ ಚಟುವಟಿಕೆ, ಸ್ಪರ್ಧೆಯಿಂದ ಶಿಕ್ಷಕರಲ್ಲಿ ಹೊಸದೊಂದು ಅನುಭವ ಹಾಗೂ ವಿಶೇಷತೆಯನ್ನು ಅಳವಡಿಸಿಕೊಳ್ಳುವಲ್ಲಿ ಸಹಾಯಕವಾಗಿದೆ ಎಂದರು.

ಚಿತ್ರಕಲೆ ಸ್ಪರ್ಧೆಯಲ್ಲಿ ಕಾಳಪ್ಪ ಬಡಿಗೇರ ಪ್ರಥಮ, ಪ್ರವೀಣ ಮನೋಹರ್ ಗಾಯಕರ ದ್ವಿತೀಯ, ನಾಗರಾಜ ಚಿತ್ರಗಾರ ಮತ್ತು ಜೆ.ಕೆ. ಭಾಗವಾನರ್ ತೃತೀಯ ಸ್ಥಾನ, ಟಿ.ಆರ್. ಬೇವಿನಮರದ ಮತ್ತು ಮಲ್ಲಿಕಾರ್ಜುನ ಮುಂಡರಗಿ ಸಮಾಧಾನಕರ ಬಹುಮಾನ ಪಡೆದರು.

ಬಿ.ಎಲ್. ಚವ್ಹಾಣ, ಬಸವರಾಜ ನೆಲಜೇರಿ, ಬಸವರಾಜ ಕುತ್ನಿ ಸ್ಪರ್ಧೆಯ ನಿರ್ಣಾಯಕರಾಗಿ ಆಗಮಿಸಿದ್ದರು. ಶರಣಯ್ಯ ವಸ್ತ್ರದ ನಿರೂಪಿಸಿ ವಂದಿಸಿದರು.

ಗುರುಗಳು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿ: ಪ್ರಭುಲಿಂಗ ದೇವರು

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪ್ರತಿಯೊಬ್ಬ ವಿದ್ಯಾರ್ಥಿಯ ಸುಂದರ ಬದುಕು ನಿರ್ಮಿಸುವಾತ ಗುರು. ವಿದ್ಯಾರ್ಥಿ ಜೀವನಕ್ಕೆ ರೂಪ ಕೊಟ್ಟ ಗುರುವನ್ನು ಎಂದೂ ಮರೆಯದಿರಿ ಎಂದು ನೀಲಗುಂದ ಗುದ್ನೇಶ್ವರಮಠದ ಪ್ರಭುಲಿಂಗ ದೇವರು ಹೇಳಿದರು.

ಅವರು ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿ ಶಿಕ್ಷಣ ಸಮಿತಿಯ ಎಸ್‌ಜೆಜೆಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ 2002-03ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದ ಬಾಲಲೀಲಾ ಮಹಾಂತ ಶಿವಯೋಗಿ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಪ್ರತಿಯೊಂದು ಕಾರ್ಯಕ್ಕೂ ಗುರು ಬೇಕು. ಅದರಂತೆ ವಿದ್ಯಾರ್ಥಿ ಜೀವನಕ್ಕೆ ಗುರು ತುಂಬಾ ಅವಶ್ಯವಾಗಿದ್ದು, ಗುರುವಿನ ಮಾರ್ಗದರ್ಶನದಲ್ಲಿ ನಡೆದರೆ ಸನ್ಮಾರ್ಗ ಪ್ರಾಪ್ತಿಯಾಗುವುದರ ಜೊತೆಯಲ್ಲಿ ಸಮಾಜವೂ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯವಾಗುವುದು. ವಿದ್ಯಾರ್ಥಿಗಳು ಗುರುಗಳು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದಾಗ ಸುಂದರ ಸಮಾಜ ನಿರ್ಮಿಸಲು ಸಾಧ್ಯ ಎಂದರು.

ವಿದ್ಯಾರ್ಥಿ ಮಹೇಶ ಶಿರಹಟ್ಟಿ ಮಾತನಾಡಿ, 23 ವರ್ಷಗಳ ಹಿಂದೆ ನಾವು ಒಂದು ಮಣ್ಣಿನ ಮುದ್ದೆಯಂತಿದ್ದೆವು. ನಮಗೆ ರೂಪ ಕೊಟ್ಟು ಮೂರ್ತಿಯನ್ನಾಗಿ ರೂಪಿಸಿದವರು ಗುರುಗಳು. ಅವರ ಋಣವನ್ನು ಎಂದಿಗೂ ತೀರಿಸಲಾಗದು ಎಂದರು.

ಕಲಿಸಿದ ಗುರುಗಳನ್ನು ಬಾಲಲೀಲಾ ಮಹಾಂತ ಶಿವಯೋಗಿ ಗವಿಮಠದಿಂದ ಬಾಲಲೀಲಾ ಮಹಾಂತ ಶಿವಯೋಗಿ ಕಲಾ ಭವನದವರೆಗೂ ವಿಶೇಷವಾಗಿ ಹೂವಿನ ಸುರಿಮಳೆಯೊಂದಿಗೆ ಗೌರವದಿಂದ ಬರಮಾಡಿಕೊಂಡರು. ಕಲಿಸಿದ ಗುರುಗಳನ್ನು ಹಾಗೂ ಸಂಸ್ಥೆಯ ಆಡಳಿತ ಮಂಡಳಿಯವರನ್ನು ಸನ್ಮಾನಿಸಲಾಯಿತು.

ಸಾನ್ನಿಧ್ಯವನ್ನು ನೀಲಗುಂದದ ಗುದ್ನೇಶ್ವರ ಮಠದ ಪ್ರಭುಲಿಂಗದೇವರು ವಹಿಸಿದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎಂ.ಡಿ. ಬಟ್ಟೂರ ವಹಿಸಿದ್ದರು. ಶಿಕ್ಷಣ ಪ್ರೇಮಿಗಳಾದ ಗೌರಮ್ಮ ಬಡ್ನಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಎಸ್.ಸಿ. ಚವಡಿ, ಬಿ.ಸಿ. ಬಡ್ನಿ, ಎಂ.ಎಂ. ಅದರಗುಂಚಿ, ಎಫ್.ಎಸ್. ಅಮೋಘಿಮಠ, ಎಸ್.ಸಿ. ಕುರ್ತಕೋಟಿ, ವಿಜಯ ನೀಲಗುಂದ, ಕಾಲೇಜಿನ ಪ್ರಾಚಾರ್ಯ ಎ.ಎಂ. ಅಂಗಡಿ, ಮುಖ್ಯೋಪಾಧ್ಯಾಯ ಇ.ಎಂ. ಗುಳೇದಗುಡ್ಡ, ಬಿ.ಜಿ. ಯಳವತ್ತಿ, ವಾಯ್.ಎಚ್. ಚಲವಾದಿ, ಚಂದ್ರಶೇಖರ ಎಸ್, ಎಸ್.ಎಫ್. ಮುದ್ದಿನಗೌಡ್ರ, ಆರ್.ಆರ್. ಪಟ್ಟಣ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಇದ್ದರು.

ಅಧ್ಯಕ್ಷತೆ ವಹಿಸಿದ್ದ ಎಂ.ಡಿ. ಬಟ್ಟೂರ ಮಾತನಾಡಿ, ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ಹಾದಿಯಲ್ಲಿ ಸಾಗಲು ಪ್ರತಿಯೊಬ್ಬ ವಿದ್ಯಾರ್ಥಿಗೆ ಗುರುವಿನ ಮಾರ್ಗದರ್ಶನ ಬೇಕು. ವಿದ್ಯಾರ್ಥಿ ಜೀವನ ಬಂಗಾರದ ಜೀವನವಾಗಲು ಗುರುವಿನ ಅನುಗ್ರಹ ಇರಬೇಕು ಎಂದರು.

ಶ್ರವಣ ಯಂತ್ರ ವಿತರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಗದೀಶ ಭಟ್ ಜೋಶಿ ಇವರಿಗೆ ಶ್ರವಣ ಸಾಧನ ಯಂತ್ರವನ್ನು ವಿತರಿಸಿದರು.

ನಂತರ ಮಾತನಾಡಿದ ಎಸ್.ವಿ. ಸಂಕನೂರ, ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಸೌಲಭ್ಯ ಹಾಗೂ ಯೋಜನೆಗಳನ್ನು ನೀಡುತ್ತಿದೆ. ಅವುಗಳನ್ನು ಅರ್ಹರು ಇಲಾಖೆಗೆ ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಲು ಮುಂದಾಗಬೇಕು. ಇಲಾಖಾಧಿಕಾರಿಗಳು ಬಂದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹರಿಗೆ ಯೋಜನೆಗಳ ಲಾಭ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಮಹಾಂತೇಶ್ ಕೆ ಮುಂತಾದವರು ಹಾಜರಿದ್ದರು.

ಪಲ್ಸ್ ಪೋಲಿಯೋ ಅಭಿಯಾನ

0

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ದೇಶವನ್ನು ಪೋಲಿಯೋ ಮುಕ್ತವಾಗಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ತಾಲೂಕಿನಾದ್ಯಂತ ಯಶಸ್ವಿಯಾಗಿ ನಡೆಯಿತು.

ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯವನ್ನು ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿಗಳು ಹಾಗೂ ಬೂತ್ ಕೇಂದ್ರಗಳಲ್ಲಿ ನಡೆಸಲಾಯಿತು.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದ ಈ ಅಭಿಯಾನಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸಹಕಾರ ನೀಡಿದರು. ಕೊಡಗಾನೂರ ಗ್ರಾಮದ ಅಂಗನವಾಡಿ ಲಸಿಕಾ ಬೂತ್‌ನಲ್ಲಿ ಲಸಿಕೆ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ರೇಖಾ ಕಳ್ಳಿಮಠ ಮಾತನಾಡಿ, ಪೋಲಿಯೋ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ಮುಂದಾಗಬೇಕು. ಈ ಲಸಿಕೆ ಸುರಕ್ಷಿತವಾಗಿದ್ದು, ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಹೇಳಿದರು.

ತಪ್ಪದೇ ಪೋಲಿಯೋ ಹನಿ ಹಾಕಿಸಿ: ಡಾ. ಪ್ರವೀಣ ತುಪ್ಪದ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಕ್ಕಳು ದೇಶದ ಸಂಪತ್ತು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪಲ್ಸ್ ಪೋಲಿಯೋ ಹನಿ ತಪ್ಪದೇ ಹಾಕಿಸಬೇಕು ಎಂದು ಮುಳಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರವೀಣ ತುಪ್ಪದ ಹೇಳಿದರು.

ಅವರು ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. 1ರಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳೇ ಭವಿಷ್ಯದ ಉತ್ತಮ ಪ್ರಜೆಗಳು. ಮಕ್ಕಳ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಯಾವುದೇ ಆತಂಕ ಪಡದೇ ಪೋಷಕರು 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಹನಿ ಹಾಕಿಸಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಎಂದರು.

ನಿವೃತ್ತ ಆರ್‌ಟಿಓ ಬಿ.ಡಿ. ಹರ್ತಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿ ಮಾತನಾಡಿ, ಪೋಲಿಯೋ ಒಂದು ಮಾರಕ ಖಾಯಿಲೆಯಾಗಿದ್ದು, ಈ ಖಾಯಿಲೆಗೆ ಹೋಗಲಾಡಿಸಲು ಪಲ್ಸ್ ಪೋಲಿಯೋ ಹನಿಯನ್ನು ಹಾಕಿಸುವ ಮೂಲಕ ಮಕ್ಕಳ ಉತ್ತಮ ಭವಿಷ್ಯಕ್ಕೆ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಡಾ. ಎಸ್.ಸಿ. ಚವಡಿ, ಎಸ್.ಸಿ. ಬಡ್ನಿ, ಅಂಗನವಾಡಿ ಶಿಕ್ಷಕಿ ಎಂ.ಎಂ. ಅಬ್ಬುನವರ, ರೇಣುಕಾ ಯಲಿಗಾರ, ಆರೋಗ್ಯ ಸಿಬ್ಬಂದಿ ನಜೀರ ನದಾಫ್, ಶಿವಾನಂದ ಆಪ್ತಗೇರಿ, ಮುತ್ತು ಬಳ್ಳಾರಿ, ಸುಮಿತ್ರಾ ಹೊಂಬಳ, ಮಂಜುನಾಥ ದೇಸಾಯಿ, ಕಲ್ಲಪ್ಪ ಚಿನ್ನಿ, ಎಚ್.ಎನ್. ಗದಗ, ಮುನೀರ್ ನದ್ದಿಮುಲ್ಲಾ ಇದ್ದರು.

Crime News; ಮೊಬೈಲ್ ಅಂಗಡಿಗೆ ನುಗ್ಗಿ ಯುವಕನಿಗೆ ಚಾಕು ಇರಿದ ಕಿಡಿಗೇಡಿಗಳು!

0

ಶಿವಮೊಗ್ಗ:- ಮೊಬೈಲ್ ಅಂಗಡಿ ಮಾಲೀಕನಿಗೆ ಕಿಡಿಗೇಡಿಗಳು ಚಾಕು ಇರಿದಿರುವ ಘಟನೆ ಶಿವಮೊಗ್ಗದ ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ಜರುಗಿದೆ.

ಸಯ್ಯದ್ ಬರ್ಕತ್ (32) ಚಾಕು ಇರಿತಕ್ಕೊಳಗಾದ ಯುವಕ. ಗಾಯಾಳು ಸಯ್ಯದ್ ಬರ್ಕತ್, ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಹಳೇ ದ್ವೇಷದ ಹಿನ್ನೆಲೆಯಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು, ಯುವಕನಿಗೆ ಚಾಕು ಇರಿದು ಎಸ್ಕೇಪ್ ಆಗಿದ್ದಾರೆ.

ಗಾಯಾಳು ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕೈಗೊಂಡಿದ್ದಾರೆ.

ಗಾಂಧೀಜಿ ಹೆಸರಿಗೆ ಕತ್ತರಿ; ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆ ಶಿವಕುಮಾರ್ ವಾಗ್ದಾಳಿ

0

ಬೆಂಗಳೂರು: ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆದುಹಾಕುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಅಂತಿಮ ದಿನಗಳು ಆರಂಭವಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಕಲಂ 21ರಡಿ ಕಾಂಗ್ರೆಸ್ ತಂದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಬಡವರ ವಿರೋಧಿ ಕ್ರಮವಾಗಿದ್ದು, ಯೋಜನೆಯನ್ನು ಸಾಯಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದರು.

ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೆ ಹೋರಾಟ ನಡೆಸಲಾಗುವುದು ಎಂದ ಅವರು, ಕೇಂದ್ರ ಸರ್ಕಾರದ ಅನುದಾನ ಅನುಪಾತ ಬದಲಾವಣೆ ಮೂಲಕ ಯೋಜನೆಗೆ ‘ಸಮಾಧಿ’ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರ ಹಾಗೂ ಪಕ್ಷ ಒಟ್ಟಾಗಿ ದೇಶವ್ಯಾಪಿ ಆಂದೋಲನ ರೂಪಿಸಿ ಜನಾಭಿಪ್ರಾಯ ನಿರ್ಮಿಸಲಿದೆ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ಕರಾಟೆ ತರಬೇತಿ ಹೆಸರಲ್ಲಿ ಲಂಚ: 4 ಸಾವಿರ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ ಉಪ ಪ್ರಾಂಶುಪಾಲ!

0

ಗದಗ:- ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಆತ್ಮವಿಶ್ವಾಸ ವೃದ್ಧಿಗಾಗಿ ನಡೆಯಬೇಕಾದ ಕರಾಟೆ ತರಬೇತಿ ಕಾರ್ಯಕ್ರಮವನ್ನೇ ಲಂಚದ ದಂಧೆಗೆ ಬಳಸಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮುಶಿಗೇರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ರೋಣ ಬಿಇಒ ಕಚೇರಿ ವ್ಯಾಪ್ತಿಯ ಮುಶಿಗೇರಿ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಹಾಗೂ ಮುಖೋಪಾಧ್ಯಾಯರಾದ ಕಳಕಪ್ಪ ಸಿದ್ದಪ್ಪ ರಾಜೂರು ಅವರು, ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಿದ ಗೌರವಧನ ಮಂಜೂರಿಗಾಗಿ ಲಂಚ ಬೇಡಿಕೆ ಇಟ್ಟು ರೂ.4,000 ಸ್ವೀಕರಿಸುವ ವೇಳೆ ಕರ್ನಾಟಕ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಗದಗದ ಆನಂದ ವಿರುಪಾಕ್ಷಪ್ಪ ವಾಲ್ಮೀಕಿ ಎಂಬವರು ನೀಡಿದ ದೂರಿನ ಮೇರೆಗೆ ಡಿಸೆಂಬರ್ 22ರಂದು ರೂಪಿಸಿದ ಬಲೆಗೆ ರಾಜೂರು ಸಿಲುಕಿದ್ದು, ಲಂಚದ ಹಣವನ್ನು ಸ್ವೀಕರಿಸುವ ಕ್ಷಣದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.

ಈ ಕಾರ್ಯಾಚರಣೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಗದಗ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕ ವಿಜಯ್ ಬಿರಾದಾರ್, ಪೊಲೀಸ್ ನಿರೀಕ್ಷಕ ಪರಮೇಶ್ವರ ಜಿ. ಕವಟಗಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆಸಿತು. ತಂಡದಲ್ಲಿ ಸಿಹೆಚ್‌ಸಿ ಎಮ್.ಎಮ್. ಅಯ್ಯನಗೌಡರ್, ವಿ.ಎಸ್. ದೀಪಾಲಿ, ಯು.ಎನ್. ಸಂಗನಾಳ, ಸಿಪಿಸಿ ಹೆಚ್.ಐ. ದೇಪುರವಾಲಾ, ಎಮ್.ಬಿ. ಬಾರಡ್ಡಿ, ಪಿ.ಎಲ್. ಪಿರಿಮಾಳ, ಎಪಿಸಿ ಎಸ್.ವಿ. ನೈನಾಪೂರ ಹಾಗೂ ಎಮ್.ಆರ್. ಹಿರೇಮಠ ಸೇರಿದಂತೆ ಹಲವು ಸಿಬ್ಬಂದಿಗಳು ಭಾಗವಹಿಸಿದ್ದರು.

ಗದಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಹಳದಿ ಮಾರ್ಗದ ಮೆಟ್ರೋಗೆ ಮತ್ತೊಂದು ರೈಲು; ಪ್ರಯಾಣ ಮತ್ತಷ್ಟು ಸುಲಭ

0

ಬೆಂಗಳೂರು: ಹಳದಿ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ.

ಮಂಗಳವಾರ ಯೆಲ್ಲೋ ಲೈನ್‌ಗೆ 6ನೇ ರೈಲು ಸೇರ್ಪಡೆಯಾಗಲಿದ್ದು, ಇದರೊಂದಿಗೆ ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಈಗಿರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳಿಗೊಮ್ಮೆ ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ ತಿಳಿಸಿದೆ.

ಭಾನುವಾರಗಳಲ್ಲಿ ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷಗಳಾಗಿಯೇ ಮುಂದುವರಿಯಲಿದ್ದು, ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಈ ಯೆಲ್ಲೋ ಲೈನ್‌ ಆರ್.ವಿ. ರಸ್ತೆ–ಬೊಮ್ಮಸಂದ್ರ ನಡುವಿನ ಸಂಪರ್ಕವನ್ನು ಒದಗಿಸುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದೆ.

ಗೃಹಲಕ್ಷ್ಮೀ ಯೋಜನೆಯ ₹5000 ಕೋಟಿ ಎಲ್ಲಿ ಹೋಯಿತು?: ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

0

ಹಾಸನ: ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷ್ಮೀ ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಹಾಸನದಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು; ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಕೊಡಬೇಕಿದ್ದ ಗೃಹಲಕ್ಷ್ಮಿ‌ ಹಣ ಎಲ್ಲಿ ಹೋಗಿದೆ? ಆ ಹಣ ಖಜಾನೆಯಲ್ಲಿ ಇದೆಯಾ? ಇಲ್ಲವಾ? ಎನ್ನುವ ಅಂಶವನ್ನು ಸ್ವತಃ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಬೇಕು. ಅವರು ಮತ್ತು ಅವರ ಅವರ ಇಲಾಖೆಯ ಅಧಿಕಾರಿಗಳೇ ಇದಕ್ಕೆ ಜವಾಬ್ದಾರರು ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಗೃಹಲಕ್ಷ್ಮೀ ಯೋಜನೆಯ 5 ಸಾವಿರ ಕೋಟಿ ಹಣದ ಬಗ್ಗೆ ಮಾಹಿತಿ ಸರಿಯಾಗಿ ನೀಡಿಲ್ಲ. ಇದು ಸಣ್ಣ ವಿಚಾರವಲ್ಲ. ಇದು ಹೇಗಾಯಿತು ಎಂದು ಸಂಬಂಧಿತ ಸಚಿವರಿಂದ ಮಾಹಿತಿ ಪಡೆದಿದ್ದೀರಾ? ಆ ಸಚಿವರ ರಾಜೀನಾಮೆ ಕೇಳಿದ್ದೀರಾ? ಹೋಗಲಿ, ಯಾರಾದರೂ ಅಧಿಕಾರಿಯನ್ನು ಇದಕ್ಕೆ ಹೊಣೆ ಮಾಡಿ ಅಮಾನತು ಮಾಡಿದ್ದೀರಾ? ಇಷ್ಟು ದೊಡ್ಡ ಮೊತ್ತದ ಹಣದ ಬಗ್ಗೆ ಎಷ್ಟು ಹಗುರವಾಗಿ ನಡೆದುಕೊಂಡಿದ್ದೀರಿ! ನೀವು ಪ್ರಖ್ಯಾತ ‌ಹಣಕಾಸು ಸಚಿವರು! ನಿಮ್ಮಂತ ಹಣಕಾಸು ಸಚಿವರು ಅಮೆರಿಕದಲ್ಲೂ ಇಲ್ಲ‌. ಡೊನಾಲ್ಡ್ ಟ್ರಂಪ್ ಅವರಿಗೂ ಇಂಥ ಹಣಕಾಸು ಮಂತ್ರಿ ಸಿಗಲ್ಲವೇನೋ ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ಕೇಂದ್ರ ಸಹಕಾರ ನೀಡುತ್ತಿಲ್ಲ ಎನ್ನುವುದು ಸುಳ್ಳು:

ಕೇಂದ್ರ ಸಹಕಾರ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳುವ ಬದಲು, ಕೇಂದ್ರದ ಮನವೊಲಿಸಲು ನೀವೇನು ಮಾಡಿದ್ದೀರಿ ಎಂಬುದನ್ನು ಹೇಳಿ ಎಂದು ಹೆಚ್.ಡಿ‌ ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು. ರಾಜ್ಯದಲ್ಲಿ ಸರ್ಕಾರ ನಡೆಸುತ್ತಿರುವವರು ಸುಖಾಸುಮ್ಮನೆ ತಮ್ಮ ಹುಳುಕು ಮುಚ್ಚಿಟ್ಟುಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ತಾವು ಮಾಡುತ್ತಿರುವ ತಪ್ಪುಗಳನ್ನು ಮುಚ್ಚಿಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ತರಾಟೆಗೆ ತೆಗೆದುಕೊಂಡರು.

ಎತ್ತಿನಹೊಳೆ ಯೋಜನೆಯಲ್ಲಿ ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಮಂತ್ರಿಗಳು ಆರೋಪ ಮಾಡುತ್ತಿದ್ದಾರೆ. ಆದರೆ, ಪರಿಸರಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿ, ಕಾನೂನು ಮೀರಿ ಅನೇಕ ಅನಧಿಕೃತ ಕಾಮಗಾರಿಗಳನ್ನು ನಡೆಸಿದ್ದಾರೆ. ಕೇಂದ್ರ ಪರಿಸರ ಸಚಿವಾಲಯ ಅದನ್ನು ಪ್ರಶ್ನೆ ಮಾಡಿದೆ. ಅದು ತಪ್ಪಾ? ನಾವು ಅಂತಹ ಕಾಮಗಾರಿಗಳನ್ನು ಮಾಡಿಲ್ಲ ಎಂದು ಸಂಬಂಧಿಸಿದ ಸಚಿವರು, ಅಧಿಕಾರಿಗಳು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲಿ. ಬೇಡ ಎಂದವರು ಯಾರು? ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಕೇಂದ್ರದಿಂದ ಅನುದಾನ ಬರುತ್ತಿದೆ. ಅದರ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ಪಾರದರ್ಶಕವಾಗಿಲ್ಲ. ಕೇಂದ್ರದಿಂದ ಬರುತ್ತಿರುವ ಅನುದಾನವನ್ನು ಸರಿಯಾಗಿ ಬಳಕೆ ಮಾಡುತ್ತಿಲ್ಲ ಹಾಗೂ ಅದಕ್ಕೆ ಪೂರಕವಾಗಿ ಮ್ಯಾಚಿಂಗ್ ಗ್ರಾಂಟ್ ಗಳನ್ನು ಕೊಡುತ್ತಿಲ್ಲ. ಹೋಗಲಿ, ಆ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ನೀಡಿದ್ದಾರ? ಅದೂ ಇಲ್ಲ. ತಪ್ಪು ತಮ್ಮ ಕಡೆ ಇಟ್ಟುಕೊಂಡು ನರೇಂದ್ರ ಮೋದಿ ಅವರ ಸರ್ಕಾರವನ್ನು ಟೀಕೆ ಮಾಡಿದರೆ ಏನು ಬರುತ್ತದೆ ಎಂದು ಅವರು ವಾಗ್ದಾಳಿ ನಡೆಸಿದರು.

ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಘೋರ ವೈಫಲ್ಯ ಅನುಭವಿಸಿದೆ. ರೈತರಿಗೆ ನೆರವಾಗುವಲ್ಲಿ ಕೂಡ ವಿಫಲವಾಗಿದೆ. ಬೆಂಗಳೂರು ನಗರದಲ್ಲಿ ಮೂಲಭೂತ ಸೌಲಭ್ಯಗಳ ಬಗ್ಗೆ ಹೇಜುವಂತೆಯೇ ಇಲ್ಲ. ದೇವರಿಗೆ ಪ್ರೀತಿ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದರು.

ಇವರ ಹಣೆಬರಕ್ಕೆ ಕೆಲಸ ಮಾಡುವ ಯೋಗ್ಯತೆ ಇಲ್ಲ. ಆದರೆ ಮಾತಿನಲ್ಲಿ ಎಲ್ಲವನ್ನು ತೋರಿಸುತ್ತಿದ್ದಾರೆ. ಹಾಸನ ಜಿಲ್ಲೆಗೆ ಲಗ್ಗೆ ಹಾಕಲು ಕಾಂಗ್ರೆಸ್ ಬಹಳ ವೇಗವಾಗಿದೆ. ಸ್ಟೇಜ್ ಗಳಲ್ಲಿ ಹಲವು ರೀತಿಯ ಬಾಣ ಬಿರುಸುಗಳನ್ನ ನೋಡುತ್ತಿದ್ದೇವೆ. ಯಾರು ಮಾಡದೇ ಇರುವ ಕಾರ್ಯ ಮಾಡಿದ್ದೇವೆ ಎಂಬ ಹೇಳಿಕೆ ನೀಡಿದ್ದಾರೆ. ಫಲಾನುಭವಿಗಳಿಗೆ ಎಲ್ಲವನ್ನೂ ನೀಡಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ನಾನು ಇಡ್ಲಿ, ವಡೆ ನಾಟಿ ಕೋಳಿ ತಿಂದಿದ್ದರ ಬಗ್ಗೆ ಮಾತಾಡೊಲ್ಲ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಕೇಂದ್ರ ಸಚಿವರು ಕಾಂಗ್ರೆಸ್ ಸರಕಾರದ ವಿರುದ್ಧ ಚಾಟಿ ಬೀಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದಬುದು ನನಗೆ ಬೇಕಾಗಿಲ್ಲ. ರಾಜ್ಯದ ಜನ ಅವರಿಗೆ 140ಸೀಟು ನೀಡಿದ್ದಾರೆ. ಇಂತಹ ಬಹುಮತದ ಸರಕಾರ ಇಟ್ಟುಕೊಂಡು ಜನರ ಕೆಲಸ ಮಾಡುವುದು ಬಿಟ್ಟು ಕೇಂದ್ರ ಸರಕಾರದ ಮೇಲೆ ಬಿದ್ದಿದ್ದಾರೆ. ಜನರ ಗಮನ ಬೇರೆಡೆಗೆ ಹೊರಳಿಸಲು ಈ ಸ್ಟಂಟ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

error: Content is protected !!