Home Blog Page 3

ಏಷ್ಯನ್ ಗೇಮ್ಸ್ 2026: ಭಾರತ ಮಹಿಳಾ ಕ್ರಿಕೆಟ್ ತಂಡದ ಸಂಪೂರ್ಣ ಪಟ್ಟಿ ಬಿಡುಗಡೆ!

0

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಟೂರ್ನಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ.

15 ಸದಸ್ಯರ ಈ ಬಲಿಷ್ಠ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈ ಬಾರಿ ತಂಡದಲ್ಲಿ 17 ವರ್ಷದ ಯುವ ವಿಕೆಟ್ ಕೀಪರ್–ಬ್ಯಾಟರ್ ಜಿ. ಕಮಲಿನಿ ಅವರಿಗೆ ಸ್ಥಾನ ದೊರೆತಿದ್ದು, ಇದು ಪ್ರಮುಖ ಆಯ್ಕೆಯಾಗಿ ಗಮನ ಸೆಳೆದಿದೆ. ಮತ್ತೊಂದೆಡೆ, ಮಹಿಳಾ ಟಿ20 ವಿಶ್ವಕಪ್ ತಂಡದಲ್ಲಿದ್ದ ಯಾಸ್ತಿಕಾ ಭಾಟಿಯಾ ಅವರನ್ನು ಈ ಬಾರಿ ತಂಡದಿಂದ ಕೈಬಿಡಲಾಗಿದೆ.

ಬಿಸಿಸಿಐ ಮೂಲಗಳ ಪ್ರಕಾರ, ಕ್ರಾಂತಿ ಗೌಡ್, ರೇಣುಕಾ ಠಾಕೂರ್, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್ ಸೇರಿದಂತೆ ಅನುಭವ ಹಾಗೂ ಯುವಶಕ್ತಿಯ ಸಂಯೋಜನೆಯೊಂದಿಗೆ ಬಲಿಷ್ಠ ತಂಡವನ್ನು ರೂಪಿಸಲಾಗಿದೆ.

ಗಾಯದ ಕಾರಣದಿಂದ ಟಿ20 ವಿಶ್ವಕಪ್ ವೇಳೆ ಹೊರಗಿದ್ದ ಶ್ರೇಯಾಂಕಾ ಪಾಟೀಲ್ ಅವರನ್ನು ಕೂಡ ಆಯ್ಕೆ ಮಾಡಲಾಗಿದೆ. ಆದರೆ ಅವರು ಟೂರ್ನಿಗೆ ಮೊದಲು ಫಿಟ್‌ನೆಸ್ ಕ್ಲಿಯರೆನ್ಸ್ ಪಡೆಯಬೇಕಿದ್ದು, ಇಲ್ಲವಾದರೆ ಅವರ ಬದಲಿಗೆ ಮತ್ತೊಬ್ಬರನ್ನು ಆಯ್ಕೆ ಮಾಡಲಾಗುತ್ತದೆ.

ಭಾರತ ಮಹಿಳಾ ತಂಡ:

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ. ಕಮಲಿನಿ (ವಿಕೆಟ್ ಕೀಪರ್), ಭಾರತಿ ಫುಲ್ಮಾಲಿ, ಶ್ರೀ ಚರಣಿ, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಅರುಂಧತಿ ರೆಡ್ಡಿ, ರಾಧಾ ಯಾದವ್, ನಂದಿನಿ ಶರ್ಮಾ, ಶ್ರೇಯಾಂಕಾ ಪಾಟೀಲ್.

ಈ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಗಳು 2026ರ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 3ರವರೆಗೆ ಟಿ20 ಸ್ವರೂಪದಲ್ಲಿ ನಡೆಯಲಿವೆ. ಮಹಿಳಾ ವಿಭಾಗದಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಭಾರತ ತಂಡ ನೇರವಾಗಿ ಕ್ವಾರ್ಟರ್ ಫೈನಲ್‌ನಿಂದ ತನ್ನ ಅಭಿಯಾನ ಆರಂಭಿಸಲಿದೆ.

ಮೊದಲ ಪಂದ್ಯದಲ್ಲಿ ಭಾರತ ತಂಡವು ಕ್ವಾಲಿಫೈಯರ್ ಹಂತದಿಂದ ಬಂದ ಕಡಿಮೆ ಶ್ರೇಯಾಂಕದ ತಂಡದ ವಿರುದ್ಧ (ಥಾಯ್ಲೆಂಡ್, ಮಲೇಷ್ಯಾ ಅಥವಾ ಚೀನಾ) ಎದುರಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಮನೆಯಿಂದಲೇ ಎಸ್​ಐಆರ್​ಗೆ ಸಿಎಂ ಡಿಕೆಶಿ ಚಾಲನೆ!

ಬೆಂಗಳೂರು: ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯವು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ.

ಈ ಅಭಿಯಾನದಲ್ಲಿ ಪ್ರತಿಯೊಬ್ಬ ನಾಗರಿಕರೂ ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ಅಧಿಕಾರಿಗಳಿಂದ ಗಣತಿ ನಮೂನೆ ಪಡೆದು ಭರ್ತಿ ಮಾಡುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವೂ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಮುಂದಿನ 7 ದಿನಗಳಲ್ಲಿ ಎಲ್ಲ ಮತದಾರರಿಗೂ ಫಾರ್ಮ್‌ಗಳನ್ನು ವಿತರಿಸಲಾಗುವುದು. ಜೊತೆಗೆ ನಾಗರಿಕರು ತಮ್ಮ ಫೋನ್ ಸಂಖ್ಯೆ, ಆಧಾರ್ ಸೇರಿದಂತೆ ಅಗತ್ಯ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮತದಾನ ಹಕ್ಕು ಅತ್ಯಂತ ಮುಖ್ಯವಾಗಿದ್ದು, ಅದನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಭಾಗಿಯಾಗಬೇಕು. ಮತದಾನ ಇಲ್ಲದೆ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳ ಕುರಿತು ಪ್ರಶ್ನೆಗಳು ಉದ್ಭವಿಸುವ ಸಾಧ್ಯತೆ ಇದೆ ಎಂಬುದನ್ನು ಕೂಡ ಅವರು ಉಲ್ಲೇಖಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಅಭಿಯಾನವನ್ನು ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ.

ಮುಟ್ಟಿನ ಸಮಯದಲ್ಲಿ ಪ್ಯಾಡ್ ಎಷ್ಟು ಬಾರಿ ಬದಲಾಯಿಸಬೇಕು? ವೈದ್ಯರ ಸಲಹೆ ತಿಳಿಯಿರಿ!

0

ಮುಟ್ಟು ಅಥವಾ ಪಿರಿಯಡ್ಸ್ ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ನಡೆಯುವ ಸಹಜ ದೈಹಿಕ ಪ್ರಕ್ರಿಯೆಯಾಗಿದ್ದು, ಈ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ವೈದ್ಯರ ಪ್ರಕಾರ, ಮುಟ್ಟಿನ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್‌ಗಳನ್ನು ಸರಿಯಾದ ಅವಧಿಯಲ್ಲಿ ಬದಲಾಯಿಸದಿದ್ದರೆ ಮೂತ್ರನಾಳದ ಸೋಂಕು, ಖಾಸಗಿ ಭಾಗಗಳಲ್ಲಿ ಸುಡುವಿಕೆ, ತುರಿಕೆ ಹಾಗೂ ಅಸಹಜ ವಾಸನೆಯಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಾಗುತ್ತದೆ. ಆದ್ದರಿಂದ ಪ್ಯಾಡ್ ಬಳಕೆಯ ಸಮಯದ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ತಜ್ಞರ ಸಲಹೆಯಂತೆ, ಪಿರಿಯಡ್ ಬ್ಲೀಡಿಂಗ್ ಕಡಿಮೆಯಿದ್ದರೆ ಪ್ರತಿ 5 ರಿಂದ 6 ಗಂಟೆಗಳಿಗೊಮ್ಮೆ ಪ್ಯಾಡ್ ಬದಲಾಯಿಸುವುದು ಸೂಕ್ತ. ಮಧ್ಯಮ ಪ್ರಮಾಣದ ರಕ್ತಸ್ರಾವವಿದ್ದರೆ ಪ್ರತಿ 4 ರಿಂದ 5 ಗಂಟೆಗಳಿಗೊಮ್ಮೆ ಬದಲಾಯಿಸಬೇಕು. ಅದೇ ರೀತಿ ಮೊದಲ ಎರಡು ದಿನಗಳಲ್ಲಿ ರಕ್ತಸ್ರಾವ ಹೆಚ್ಚು ಇರುವ ಸಂದರ್ಭಗಳಲ್ಲಿ ಪ್ರತಿ 3 ರಿಂದ 4 ಗಂಟೆಗಳಿಗೊಮ್ಮೆ ಪ್ಯಾಡ್ ಬದಲಾಯಿಸುವುದು ಉತ್ತಮ ಎಂದು ತಿಳಿಸಲಾಗಿದೆ.

ರಾತ್ರಿ ಸಮಯದಲ್ಲಿ ನೈಟ್ ಪ್ಯಾಡ್ ಬಳಸುವುದು ಮತ್ತು ಬೆಳಿಗ್ಗೆ ಎದ್ದ ತಕ್ಷಣ ಅದನ್ನು ಬದಲಾಯಿಸುವುದು ಅಗತ್ಯವಾಗಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಸಾಮಾನ್ಯ ಪರಿಸ್ಥಿತಿಯಲ್ಲಿ 24 ಗಂಟೆಗಳ ಅವಧಿಯಲ್ಲಿ ಕನಿಷ್ಠ ಮೂರು ಬಾರಿ ಪ್ಯಾಡ್ ಬದಲಾಯಿಸುವುದು ಆರೋಗ್ಯಕರ ಅಭ್ಯಾಸವೆಂದು ಅವರು ಹೇಳಿದ್ದಾರೆ.

ಮುಟ್ಟಿನ ಸಮಯದಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದೂ ಅತ್ಯಂತ ಮುಖ್ಯವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಖಾಸಗಿ ಭಾಗಗಳನ್ನು ಶುದ್ಧ ನೀರಿನಿಂದ ಸ್ವಚ್ಛಗೊಳಿಸುವುದು, ಕೈಗಳನ್ನು ಪ್ಯಾಡ್ ಬದಲಾಯಿಸುವ ಮೊದಲು ಮತ್ತು ನಂತರ ಚೆನ್ನಾಗಿ ತೊಳೆಯುವುದು ಹಾಗೂ ಹತ್ತಿ ಒಳಉಡುಪುಗಳನ್ನು ಬಳಸುವುದು ಉತ್ತಮ ಅಭ್ಯಾಸಗಳಾಗಿವೆ.

ತಜ್ಞರ ಪ್ರಕಾರ, ತುಂಬಾ ಬಿಗಿಯಾದ ಬಟ್ಟೆಗಳನ್ನು ತಪ್ಪಿಸುವುದರಿಂದ ಅಸೌಕರ್ಯ ಮತ್ತು ಸೋಂಕಿನ ಅಪಾಯವನ್ನು ಕಡಿಮೆ ಮಾಡಬಹುದು. ಮುಟ್ಟಿನ ಸಮಯದಲ್ಲಿ ಸರಿಯಾದ ನೈರ್ಮಲ್ಯ ಪಾಲಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಬಹುದು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಫುಟ್ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು: ನಾಳೆಯಿಂದ ತೆರವು ಕಾರ್ಯ ಶುರು!

ಬೆಂಗಳೂರು: ನಗರದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಲು ಇಂದು ಅಂತಿಮ ಗಡುವು ನೀಡಲಾಗಿದ್ದು, ಜುಲೈ 1ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ ಹಾಗೂ ಐದು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೃಹತ್ ಕಾರ್ಯಾಚರಣೆ ಆರಂಭವಾಗಲಿದೆ.

ಸಚಿವ ಕೃಷ್ಣ ಭೈರೇಗೌಡ ಅವರು ಈಗಾಗಲೇ ಎರಡು ಸುತ್ತಿನ ಸಭೆಗಳನ್ನು ನಡೆಸಿ, ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ನಿಲ್ಲಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೈಸೆನ್ಸ್ ಹೊಂದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

ಫುಟ್‌ಪಾತ್‌ಗಳು ಪಾದಚಾರಿಗಳ ಸಂಚಾರಕ್ಕೆ ಮಾತ್ರ ಮೀಸಲಾಗಿರಬೇಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ಸೂಚನೆಯನ್ನು ಸಹ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಪಾರ್ಕಿಂಗ್, ಬೀದಿಬದಿ ವ್ಯಾಪಾರ, ಕಟ್ಟಡ ಸಾಮಗ್ರಿಗಳ ಸಂಗ್ರಹ ಹಾಗೂ ಬಿಡಾಡಿ ವಾಹನ ನಿಲುಗಡೆ ಸೇರಿದಂತೆ ವಿವಿಧ ಅತಿಕ್ರಮಣಗಳ ತೆರವಿಗೆ ಸಿದ್ಧತೆ ನಡೆದಿದೆ.

ಇದಕ್ಕೆ ವಿರುದ್ಧವಾಗಿ ಬೀದಿಬದಿ ವ್ಯಾಪಾರಿಗಳು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಜಿಬಿಎ ಯಾವುದೇ ರಾಜಿ ಇಲ್ಲದೆ ನಗರದಲ್ಲಿ ಸುಮಾರು 2,000 ಕಿಲೋಮೀಟರ್ ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್‌ಗಳನ್ನು ಮುಕ್ತಗೊಳಿಸಲು ನಿರ್ಧರಿಸಿದೆ.

ಕ್ರಾಸ್‌ ವೋಟಿಂಗ್ ಆರೋಪದ ಬೆನ್ನಲ್ಲೇ ಆಣೆ-ಪ್ರಮಾಣ ರಾಜಕೀಯ! ಬೇಲೂರಿನಿಂದ ಧರ್ಮಸ್ಥಳದತ್ತ ಹೆಚ್‌.ಕೆ. ಸುರೇಶ್ ಪಯಣ

0

ಹಾಸನ: ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನ ಆರೋಪದ ಸುತ್ತ ರಾಜಕೀಯ ಕಾವು ಹೆಚ್ಚಿರುವ ನಡುವೆಯೇ ಬೇಲೂರು ಬಿಜೆಪಿ ಶಾಸಕ ಹೆಚ್‌.ಕೆ. ಸುರೇಶ್ ಅವರು ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುವ ಮೂಲಕ ಆರೋಪಗಳಿಗೆ ಉತ್ತರ ನೀಡಲು ಮುಂದಾಗಿದ್ದಾರೆ. ತಾವು ಯಾವುದೇ ಕ್ರಾಸ್‌ ವೋಟಿಂಗ್ ಮಾಡಿಲ್ಲ ಎಂದು ಘೋಷಿಸಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಗೆ ತೆರಳಿದ್ದಾರೆ.

ಧರ್ಮಸ್ಥಳಕ್ಕೆ ಹೊರಡುವ ಮೊದಲು ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್, ದೇವಾಲಯದ ಬಲಿಕಲ್ಲಿನ ಮೇಲೆ ಆಣೆ ಮಾಡಿ ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದರು. ಬಳಿಕ ಕರ್ಪೂರ ಹಚ್ಚಿ ನೂರಾರು ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಧರ್ಮಸ್ಥಳದತ್ತ ಪ್ರಯಾಣ ಆರಂಭಿಸಿದರು.

ಆರೋಪ ಕೇಳಿಬಂದ ದಿನವೇ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಆಣೆ-ಪ್ರಮಾಣ ಮಾಡುವುದಾಗಿ ಸುರೇಶ್ ಘೋಷಿಸಿದ್ದರು. ಅದರಂತೆ ಇಂದು ಅವರು ಧರ್ಮಸ್ಥಳದಲ್ಲಿ ದೇವರ ಮುಂದೆ ಪ್ರಮಾಣ ಮಾಡಲಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತ್ನಿಗೆ ಕಬ್ಬಿಣದ ರಾಡ್‌ನಿಂದ ಬರ್ಬರ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

0

ಬೀದರ್, ಜೂ.29: ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕಬ್ಬಿಣದ ರಾಡ್‌ನಿಂದ ಬರ್ಬರವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತ ದುರ್ದೈವಿ. ಆರೋಪಿ ಪತಿ ಭಗವತ್ ಜ್ಞಾನೇಶ್ವರ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈತನ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಎರಡು ವರ್ಷಗಳ ಹಿಂದೆ ಸಂಜನಾ ಮತ್ತು ಭಗವತ್ ವಿವಾಹವಾಗಿದ್ದರು. ದಂಪತಿ ಬೀದರ್ ನಗರದ ಶಿವನಗರದಲ್ಲಿ ವಾಸವಾಗಿದ್ದರು. ಈ ನಡುವೆ ಭಗವತ್ ಪಕ್ಕದ ಮನೆಯ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎನ್ನಲಾಗಿದೆ. ಇದನ್ನು ಪತ್ನಿ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿತ್ತು.

ಬಳಿಕ ಸಂಜನಾಳನ್ನು ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಸಮೀಪದ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದ ಆರೋಪಿ, ಕಬ್ಬಿಣದ ರಾಡ್‌ನಿಂದ ತಲೆ ಹಾಗೂ ಕತ್ತಿನ ಭಾಗಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ತೀವ್ರವಾಗಿ ಗಾಯಗೊಂಡಿದ್ದ ಸಂಜನಾಳನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಬ್ರಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ!

 

ದಾವಣಗೆರೆ: ಇಲ್ಲಿನ ಚಿಗಟೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ ಕಾರಣ ಭಾರಿ ದುರಂತವೊಂದು ತಪ್ಪಿದೆ.

ಅಗ್ನಿಶಾಮಕ ಸಿಬ್ಬಂದಿ ಆಸ್ಪತ್ರೆಯ ಗಾಜು ಒಡೆದು ಒಳನುಗ್ಗಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಇನ್ನೂ ಹಲವು ಆಕ್ಸಿಜನ್ ಸಿಲಿಂಡರ್‌ಗಳಿದ್ದವು. ಅವು ಸ್ಫೋಟಗೊಂಡಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಸಿಲಿಂಡರ್ ಸ್ಫೋಟ ಸಮಯದಲ್ಲಿ ಯಾವುದೇ ರೋಗಿಗಳು ಒಳಗೆ ಇರಲಿಲ್ಲ. ಇಂದು ಒಂಬತ್ತು ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯಲ್ಲಿದ್ದ 22 ವೈದ್ಯಕೀಯ ಸಿಬ್ಬಂದಿ, ರೋಗಿಗಳು ಹಾಗೂ ಸಂಬಂಧಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಘಟನೆಯಿಂದ ದೊಡ್ಡ ಅನಾಹುತ ತಪ್ಪಿರುವುದರಿಂದ ಸ್ಥಳೀಯರು ಮತ್ತು ಆಸ್ಪತ್ರೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.

Gold Rate: ಇಳಿಕೆಯತ್ತ ಚಿನ್ನದ ದರ! ಇಂದಿನ ಗ್ರಾಂ ಬೆಲೆ ತಿಳಿಯಲು ಈ ಸುದ್ದಿ ಓದಿ!

0

ನವದೆಹಲಿ: ಚಿನ್ನದ ಬೆಲೆ ಸತತ ಎರಡನೇ ದಿನವೂ ಇಳಿಕೆಯಾಗಿದ್ದು, ಮಂಗಳವಾರ ಬರೋಬ್ಬರಿ ₹265ರಷ್ಟು ಕುಸಿತ ಕಂಡಿದೆ.

ನಿನ್ನೆ ₹85 ಇಳಿಕೆಯಾಗಿದ್ದ ಬಂಗಾರದ ದರ ಇದೀಗ ಮತ್ತಷ್ಟು ಕಡಿಮೆಯಾಗಿದ್ದು, ಆಭರಣ ಚಿನ್ನದ ಬೆಲೆ ಮತ್ತೆ ₹13,000 ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,28,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,40,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,28,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,013 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,845 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,510 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,013 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,845 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ.

ಅಂಗಡಿಗೆ ಬೆಂಕಿ ಹೊತ್ತಿಕೊಂಡ ಆಘಾತ; ಬೆಂಕಿ ಆರಿಸಿದ ಕೆಲವೇ ಕ್ಷಣಗಳಲ್ಲಿ ಮಿಲ್ಕ್ ಪಾರ್ಲರ್ ಮಾಲೀಕ ಹೃದಯಾಘಾತಕ್ಕೆ ಬಲಿ

ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪದ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಬಳಿಕ ಹೃದಯವಿದ್ರಾವಕ ಘಟನೆ ನಡೆದಿದೆ. ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಸ್ಥಳೀಯರ ನೆರವಿನಿಂದ ನಂದಿಸಿದ ಮಾಲೀಕ ವೆಂಕಟೇಶ್ (55) ಅವರು ತೀವ್ರ ಮಾನಸಿಕ ಆಘಾತದಿಂದ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಣಜೇನಹಳ್ಳಿ ನಿವಾಸಿಯಾಗಿದ್ದ ವೆಂಕಟೇಶ್ ಹಲವು ವರ್ಷಗಳಿಂದ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದರು. ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಮಾಹಿತಿ ತಿಳಿಯುತ್ತಿದ್ದಂತೆ ಅವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದರು. ಸ್ಥಳೀಯರೊಂದಿಗೆ ಸೇರಿ ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತಂದಿದ್ದರು.

ಆದರೆ ಬೆಂಕಿ ಆರಿಸಿದ ಕೆಲವೇ ಕ್ಷಣಗಳಲ್ಲಿ ಅಂಗಡಿ ಎದುರೇ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ವೈದ್ಯರು ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆಯಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮಿಲ್ಕ್ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಅಗ್ನಿ ಅವಘಡದ ಮೂಲವನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

ಸ್ನೇಹಿತನ ಪತ್ನಿ ಜೊತೆ ಪರಾರಿಯಾದ ಯುವಕ: ಮನೆ ಮೇಲೆ 200 ಮಂದಿಯ ಅಟ್ಟಹಾಸ, ಕುರಿ-ಚಿನ್ನ ದೋಚಿ ಪರಾರಿ

0

ಬೆಳಗಾವಿ: ಜಿಲ್ಲೆಯ ಯಮಕನಮರಡಿ ಕ್ಷೇತ್ರದ ಭರಮ್ಯಾನಟ್ಟಿ ಗ್ರಾಮದಲ್ಲಿ ವೈಯಕ್ತಿಕ ವಿಚಾರವೊಂದು ಸಾಮೂಹಿಕ ಹಿಂಸಾಚಾರಕ್ಕೆ ತಿರುಗಿದೆ. ವಿವಾಹಿತೆ ನಾಗವ್ವ ಯುವಕ ಯಲ್ಲಪ್ಪನೊಂದಿಗೆ ಪರಾರಿಯಾಗಿದ್ದ ಘಟನೆಗೆ ಆಕ್ರೋಶಗೊಂಡ ಮಹಿಳೆಯ ಪೋಷಕರು ಹಾಗೂ ಪತಿಯ ಸಂಬಂಧಿಕರು ಸೇರಿ ಸುಮಾರು 200ಕ್ಕೂ ಅಧಿಕ ಮಂದಿ ಯಲ್ಲಪ್ಪನ ಮನೆ ಮೇಲೆ ದಾಳಿ ನಡೆಸಿ ಭೀಕರ ದಾಂಧಲೆ ನಡೆಸಿದ್ದಾರೆ.

ನಾಗವ್ವ ಕಳೆದ ವರ್ಷ ಬಸಪ್ಪ ನಾಯಕ ಅವರನ್ನು ವಿವಾಹವಾಗಿದ್ದರು. ಬಸಪ್ಪ ಹಾಗೂ ಯಲ್ಲಪ್ಪ ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರೂ ನಾಗವ್ವ ಜೊತೆಗೆ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಯಲ್ಲಪ್ಪ ಮತ್ತು ನಾಗವ್ವ ನಡುವೆ ಸಲುಗೆ ಬೆಳೆದು, ಇಬ್ಬರೂ ಮನೆ ಬಿಟ್ಟು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಯ ಬೆನ್ನಲ್ಲೇ ಶಸ್ತ್ರಾಸ್ತ್ರಗಳನ್ನು ಹಿಡಿದು ಬಂದ ದುಷ್ಕರ್ಮಿಗಳ ಗುಂಪು ಯಲ್ಲಪ್ಪನ ಮನೆಗೆ ನುಗ್ಗಿ ಮನೆಯ ಹಂಚು, ಗೋಡೆ, ಪೀಠೋಪಕರಣಗಳು, ಟಿವಿ, ಅಲ್ಮಾರಿ ಸೇರಿದಂತೆ ಎಲ್ಲ ವಸ್ತುಗಳನ್ನು ಧ್ವಂಸಗೊಳಿಸಿದೆ. ಯಲ್ಲಪ್ಪನ ಪೋಷಕರು ಸೇರಿದಂತೆ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲು ಯತ್ನಿಸಿದ್ದರೂ, ಅವರು ಪರಾರಿಯಾಗಿದ್ದರಿಂದ ಪ್ರಾಣಾಪಾಯ ತಪ್ಪಿದೆ.

ದಾಳಿಕೋರರು ಮನೆಯಿಂದ ಚಿನ್ನಾಭರಣ, ನಗದು ಹಣ ದೋಚಿಕೊಂಡು, ಕೊಟ್ಟಿಗೆಯಲ್ಲಿದ್ದ 25 ಕುರಿಗಳನ್ನೂ ಕೊಂಡೊಯ್ದಿರುವ ಆರೋಪ ಕೇಳಿಬಂದಿದೆ.

ಪ್ರಕರಣದ ಬಳಿಕ ಸಂತ್ರಸ್ತ ಕುಟುಂಬ ಬೆಳಗಾವಿ ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಿ, ದಾಳಿಯಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಮನವಿ ಮಾಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.