Home Blog Page 3

ಬಾಗಲಕೋಟೆ ಉಪಚುನಾವಣೆ: ‘ಕೈ’ ಅಭ್ಯರ್ಥಿಯಾಗಿ ಹೆಚ್.ವೈ ಮೇಟಿ ಪುತ್ರ ಉಮೇಶ್ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ನಾಮಪತ್ರ ಸಲ್ಲಿಸಿದರು.

ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರ ಸಾಥ್‌ನಲ್ಲಿ, ಬಾಗಲಕೋಟೆ ಎಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ನಡೆಯಿತು.

ನಾಮಪತ್ರ ಸಲ್ಲಿಕೆಗೂ ಮುನ್ನ ಉಮೇಶ್ ಮೇಟಿ ಅವರು ಹೊಳೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ರಾಘವೇಂದ್ರ ರಾಯರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಆನಂತರ ದಿವಂಗತ ತಂದೆ ಹೆಚ್.ವೈ. ಮೇಟಿ ಅವರ ಸಮಾಧಿಗೆ ತೆರಳಿ ಆಶೀರ್ವಾದ ಪಡೆದರು.

ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ದಾವಣಗೆರೆ ಟಿಕೆಟ್ ವಿಚಾರ: ಅಲ್ಪಸಂಖ್ಯಾತರನ್ನು ಮನವೊಲಿಸುತ್ತೇವೆ – ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಅಲ್ಪಸಂಖ್ಯಾತರಲ್ಲಿ ಉಂಟಾಗಿರುವ ಅಸಮಾಧಾನವನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರನ್ನು ಮನವೊಲಿಸಿ, ಸಮಾಧಾನಪಡಿಸಲಾಗುತ್ತದೆ. ಅವರಿಗೆ ಪರ್ಯಾಯ ಅವಕಾಶಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ಉಪಚುನಾವಣೆ ಕುರಿತು ಮಾತನಾಡಿದ ಸಿಎಂ, ಎರಡೂ ಕ್ಷೇತ್ರಗಳಲ್ಲಿ ಶೇ.100 ಗೆಲುವು ಸಾಧಿಸುವ ವಿಶ್ವಾಸವಿದೆ. ಬಿಜೆಪಿಯವರು ಹಿಂದೆಯೂ ಇದೇ ರೀತಿಯ ಭರವಸೆ ನೀಡಿದ್ದರು. ಬಸವರಾಜ್ ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಪುತ್ರ ಗೆಲ್ಲುತ್ತಾರೆ ಎಂದು ಹೇಳಿದ್ದರು, ಆದರೆ ಸೋಲು ಕಂಡರು ಎಂದು ಟೀಕಿಸಿದರು.

ನಾವು ನುಡಿದಂತೆ ನಡೆದುಕೊಂಡಿದ್ದೇವೆ. ಜನರಿಗೆ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಬೈಎಲೆಕ್ಷನ್ ಗೆದ್ದು ಅದನ್ನು ಸಾಬೀತುಪಡಿಸಿದ್ದೇವೆ ಎಂದರು.

ಬಡವರು, ಅಲ್ಪಸಂಖ್ಯಾತರು ಹಾಗೂ ರಾಜ್ಯದ ಜನರು ನಮ್ಮ ಪರವಾಗಿದ್ದಾರೆ. ಈ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ನಾವು ಅಧಿಕಾರದಲ್ಲಿದ್ದೇವೆ, ಸಂಪೂರ್ಣ ಗೆಲುವಿನ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಂಚರಾಜ್ಯ ಚುನಾವಣೆಯಲ್ಲಿಯೂ ಬಿಜೆಪಿ ಎಲ್ಲಾ ಕಡೆ ಸೋಲು ಕಾಣಲಿದೆ ಎಂದು ಹೇಳಿದರು.

ದಾವಣಗೆರೆ ಉಪಚುನಾವಣೆ: BJP ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ಮೆರವಣಿಗೆಯಲ್ಲಿ BSY ಭಾಗಿ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ದಿನೇದಿನೇ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು.

ಮೆರವಣಿಗೆಗೂ ಮುನ್ನ ಪತ್ನಿ ಹಾಗೂ ಬಿಜೆಪಿ ಮುಖಂಡರೊಂದಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು. ಬಳಿಕ ದುರ್ಗಾಂಬಿಕಾ ದೇವಸ್ಥಾನದಿಂದ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ಭಾಗವಹಿಸಿದರು.

ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಶ್ರೀನಿವಾಸ್ ಕರಿಯಪ್ಪ, ಬಾರಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬದಲಾವಣೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಹಮಾಲಿ ಕಾರ್ಮಿಕನ ಮಗನೂ ವಿಧಾನಸಭೆಗೆ ಪ್ರವೇಶ ಮಾಡುವ ಕಾಲ ಬಂದಿದೆಎಂದು ಹೇಳಿದರು.

ತಮ್ಮ ಎದುರಾಳಿಯಾಗಿ ಕಾಂಗ್ರೆಸ್ ಪಕ್ಷವನ್ನೇ ಗುರುತಿಸಿದ ಅವರು, ಬಿಜೆಪಿ ಬಾರಿ ಗೆಲುವು ಸಾಧಿಸಲಿದೆ ಎಂಬ ನಂಬಿಕೆ ವ್ಯಕ್ತಪಡಿಸಿದರು. ಬಿಜೆಪಿಗೆ ಮತದಾನ ಮಾಡಲು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉತ್ಸುಕರಾಗಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ಒಳಜಗಳದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: 10,000 ಕಮರ್ಷಿಯಲ್ ಸಿಲಿಂಡರ್ ಪೂರೈಕೆ – ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ರಾಜ್ಯದ ಹೋಟೆಲ್ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿ ಸಿಕ್ಕಿದೆ. ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಇಂದು ಗ್ಯಾಸ್ ಕಂಪನಿಗಳು ಹಾಗೂ ಹೋಟೆಲ್ ಸಂಘದ ಜೊತೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಈಗಾಗಲೇ ಪೂರೈಕೆ ಆಗುತ್ತಿರುವ ಸಿಲಿಂಡರ್‌ಗಳಿಗೆ ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಮಾಡುವುದಾಗಿ ಹೇಳಿದರು.

ಕಮರ್ಷಿಯಲ್ ಗ್ಯಾಸ್ ಬಳಕೆದಾರರಿಗೆ ನೋಂದಣಿ ಕಡ್ಡಾಯ ಮಾಡಲಾಗಿದೆ. ಗೇಲ್ ಕಂಪನಿಯಲ್ಲಿ ಒಂದು ವಾರದೊಳಗೆ ನೋಂದಣಿ ಮಾಡಿಸಬೇಕು. ನೋಂದಣಿ ಮಾಡಿಸದಿದ್ದರೆ ಗ್ಯಾಸ್ ಪೂರೈಕೆ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಕ್ರಮ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ 10,000 ಸಿಲಿಂಡರ್‌ಗಳನ್ನು ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್, ಪಿಜಿ ಸೇರಿದಂತೆ ವಿವಿಧ ವಲಯಗಳಿಗೆ ಹಂಚಿಕೆ ಮಾಡಲಾಗುತ್ತದೆ. ಕಳೆದ ವಾರ 1,000 ಸಿಲಿಂಡರ್‌ಗಳನ್ನು ಮಾತ್ರ ಹೋಟೆಲ್‌ಗಳಿಗೆ ನೀಡಲಾಗುತ್ತಿತ್ತು ಎಂದು ಮಾಹಿತಿ ನೀಡಿದರು.

ಮುಂದಿನ ಸೋಮವಾರ ಮತ್ತೆ ಹೋಟೆಲ್ ಮಾಲೀಕರ ಜೊತೆ ಸಭೆ ನಡೆಸಲಾಗುವುದು ಎಂದೂ ಹೇಳಿದರು. ಇನ್ನು ಹೋಟೆಲ್ ಮಾಲೀಕರ ವಿದ್ಯುತ್ ಬಿಲ್ ಕಡಿತದ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದ್ದು, ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಪ್ರತಿ ಯೂನಿಟ್‌ಗೆ 2 ರೂ. ಕಡಿಮೆ ಮಾಡುವಂತೆ ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ.

ಇರಾನ್-ಇಸ್ರೇಲ್-ಅಮೆರಿಕ ಯುದ್ದ: ನರಗುಂದ ಪೆಟ್ರೋಲ್ ಬಂಕ್ʼಗಳಲ್ಲಿ ನೋ ಸ್ಟಾಕ್ ಬೋರ್ಡ್!

0

ಗದಗ: ಇರಾನ್-ಇಸ್ರೇಲ್-ಅಮೇರಿಕ ನಡುವೆ ಯುದ್ಧ ಹಿನ್ನಲೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಪೆಟ್ರೋಲ್ ಅಭಾವ ಉಂಟಾಗಿದೆ.

ಪಟ್ಟಣದ ಶಿವಾಜಿ ಸರ್ಕಲ್ ಸಮೀಪದ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಸಂಪೂರ್ಣ ಖಾಲಿಯಾಗಿದ್ದು, ನೋ ಸ್ಟಾಕ್ ಬೋರ್ಡ್ ಅಳವಡಿಸಲಾಗಿದೆ.

ನಿನ್ನೆ ರಾತ್ರಿ ಪೆಟ್ರೋಲ್ ಖಾಲಿಯಾಗಿದ್ದು, ಬಂಕ್ ಗೆ ಬಂದ ಗ್ರಾಹಕರನ್ನು ಸಿಬ್ಬಂದಿ ವಾಪಸ್ ಕಳುಹಿಸುತ್ತಿದ್ದಾರೆ.
ಇದಲ್ಲದೆ, ಇನ್ನೂ ಎರಡು ಪೆಟ್ರೋಲ್ ಬಂಕ್‌ಗಳಲ್ಲೂ ಪೆಟ್ರೋಲ್ ಲಭ್ಯವಿಲ್ಲ ಎನ್ನಲಾಗಿದ್ದು, ಇದರಿಂದ ಬೈಕ್ ಹಾಗೂ ಕಾರ್ ಮಾಲಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹುಬ್ಬಳ್ಳಿ ರಸ್ತೆಯಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ದೊರೆಯುತ್ತಿರುವ ಹಿನ್ನೆಲೆಯಲ್ಲಿ ವಾಹನಗಳು ಮುಗಿಬಿದ್ದಿದ್ದು, ಸರತಿ ಸಾಲಿನಲ್ಲಿ ನಿಂತು ಬೈಕ್ ಗೆ ಸವಾರರು ಪೆಟ್ರೋಲ್ ಹಾಕಿಸುತ್ತಿದ್ದಾರೆ. ಯುದ್ಧದ ಎಫೆಕ್ಟ್ ಬೈಕ್ ಹಾಗೂ ಕಾರ್ ಸವಾರರಿಗೂ ತಟ್ಟಿದೆ.

ಗದಗದಲ್ಲಿ ದನದ ಶೆಡ್ಡಿಗೆ ಭೀಕರ ಬೆಂಕಿ: ಆಕಳು-ಕರು ಸಾವು, ಎರಡು ಹಸುಗಳಿಗೆ ಗಂಭೀರ ಗಾಯ

0

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯರ್ಥದ ಬಳಿ ದನದ ಶೆಡ್ಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಭೀಕರ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಶೆಡ್ಡಿನಲ್ಲಿದ್ದ ಆಕಳು ಹಾಗೂ ಕರುಗಳು ಜೀವಂತವಾಗಿ ಸುಟ್ಟು ಸಾವನ್ನಪ್ಪಿದ್ದು, ಇನ್ನೂ ಎರಡು ಹಸುಗಳು ಗಂಭೀರವಾಗಿ ಗಾಯಗೊಂಡಿವೆ.

ಮಲ್ಲಪ್ಪ ಉಮಚುಗಿ ಎಂಬ ರೈತನಿಗೆ ಸೇರಿದ ಈ ದನದ ಶೆಡ್ಡಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ, ಒಳಗಿದ್ದ ಪಶುಗಳು ಪಾರಾಗಲು ಸಾಧ್ಯವಾಗದೆ ಸಂಪೂರ್ಣ ಸುಟ್ಟು ಕರಕಲಾಗಿವೆ. ಜೊತೆಗೆ ಶೆಡ್ಡಿನಲ್ಲಿದ್ದ ಶೇಂಗಾ ಹೊಟ್ಟು ಮತ್ತು ಮೇವು ಸಹ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಭಸ್ಮವಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಈ ಘಟನೆ ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಡಿಜೆ ಹಳ್ಳಿಯಲ್ಲಿ ಅಪ್ರಾಪ್ತೆ ಕೊಲೆ ಪ್ರಕರಣ: ಅಜ್ಮೀರನಲ್ಲಿ ಆರೋಪಿ ಬಂಧನ

ಬೆಂಗಳೂರು: ನಗರದ ಡಿ.ಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ದಾರುಣ ಕೊಲೆ ಪ್ರಕರಣದಲ್ಲಿ, ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತೆಯನ್ನೇ ಹತ್ಯೆಗೈದ ಆರೋಪಿ ಸೈಯದ್ ಶಬೀಲ್ ನನ್ನು ಅಜ್ಮೀರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗಬೇಕಿದ್ದ ಯುವತಿಯ ಮೇಲಿನ ಅನುಮಾನವೇ ಈ ಕ್ರೂರ ಕೃತ್ಯಕ್ಕೆ ಕಾರಣವೆಂದು ತಿಳಿದುಬಂದಿದೆ. ಮಾರ್ಚ್ 17ರಂದು ಆಕೆಯನ್ನು ಭೇಟಿಯಾಗುವ ನೆಪದಲ್ಲಿ ಕರೆಸಿಕೊಂಡು, ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದ.

ಘಟನೆ ನಂತರ ಪ್ರಕರಣ ದಾಖಲಿಸಿಕೊಂಡ ಡಿ.ಜೆ ಹಳ್ಳಿ ಪೊಲೀಸರು ವಿವಿಧ ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಅಂತಿಮವಾಗಿ ಆರೋಪಿ ಅಜ್ಮೀರ್ ದರ್ಗಾ ಬಳಿ ಇರುವುದನ್ನು ಪತ್ತೆಹಚ್ಚಿದರು.

ಪಶ್ಚಾತ್ತಾಪದಿಂದ ದರ್ಗಾಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ನಂತರ ಹೊರಬರುವಾಗಲೇ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂಧಿತನನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಈ ಘಟನೆ ನಗರದಲ್ಲಿ ಆಘಾತ ಮೂಡಿಸಿದೆ.

ಪಶುವೈದ್ಯೆ ಸಾವಿಗೆ ಗೌರವ ನಮನ: ಬನ್ನೇರುಘಟ್ಟದ ಆನೆ ಮರಿಗೆ ಸಮೀಕ್ಷಾ ರೆಡ್ಡಿ ಹೆಸರು

0

ಶಿವಮೊಗ್ಗ: ಮೃಗಾಲಯದಲ್ಲಿ ನಡೆದ ದಾರುಣ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸ್ಮರಣಾರ್ಥ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಅವರು, ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಯಿಗೆ ಸಮೀಕ್ಷಾ ರೆಡ್ಡಿ ಅವರ ಹೆಸರನ್ನು ಇಡುವುದಾಗಿ ಘೋಷಿಸಿದ್ದಾರೆ. ಮೃಗಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿ, “ಈ ಘಟನೆ ನಮ್ಮನ್ನೆಲ್ಲ ಆಘಾತಕ್ಕೀಡಾಗಿಸಿದೆ. ಇಂತಹ ಘಟನೆ ಮರುಕಳಿಸಬಾರದು,” ಎಂದು ಹೇಳಿದ್ದಾರೆ.

ಸಮೀಕ್ಷಾ ರೆಡ್ಡಿ ಅವರಿಗೆ ಹುತಾತ್ಮ ಪಟ್ಟ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ. ಘಟನೆಯ ಕುರಿತು ಪೊಲೀಸ್ ಹಾಗೂ ಅರಣ್ಯ ಇಲಾಖೆಗಳಿಂದ ಸಮಗ್ರ ತನಿಖೆ ನಡೆಯುತ್ತಿದ್ದು, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ದಾಳಿ ನಡೆಸಿದ ನೀರಾನೆ ಎರಡು ಬಾರಿ ಮರಿ ಕಳೆದುಕೊಂಡಿದ್ದ ಹಿನ್ನೆಲೆ, ಮೂರನೇ ಗರ್ಭಧಾರಣೆಯ ಸಮಯದಲ್ಲಿ ಹೆಚ್ಚು ಸಂವೇದನಾಶೀಲವಾಗಿ ವರ್ತಿಸಿ, ಮರಿಯನ್ನು ಕಾಪಾಡುವ ಸಹಜ ಪ್ರವೃತ್ತಿಯಿಂದ ದಾಳಿ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಸಹೋದರರು ಸಾವು: ತಂದೆ ಕಣ್ಣೆದುರೇ ಕೊಚ್ಚಿಹೋದ ಮಕ್ಕಳು

0

ದಾವಣಗೆರೆ: ಜಿಲ್ಲೆಯಲ್ಲಿ ನಡೆದ ದಾರುಣ ಘಟನೆಯಲ್ಲಿ, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ನಡೆದ ಈ ಘಟನೆ ಎಲ್ಲರ ಮನಸ್ಸನ್ನೂ ಕಲಕಿದೆ. ಮನು (19) ಮತ್ತು ಪ್ರಜ್ವಲ್ (18) ಮೃತರಾಗಿದ್ದು, ತಮ್ಮ ತಂದೆಯ ಕಣ್ಣೆದುರಲ್ಲೇ ಈ ದುರ್ಘಟನೆ ನಡೆದಿದೆ.

ತಂದೆ ಮಂಜಪ್ಪ ಅವರೊಂದಿಗೆ ಮೂವರು ಮಕ್ಕಳು ನದಿಗೆ ತೆರಳಿದ್ದಾಗ, ನೀರಿನ ಪ್ರವಾಹದಲ್ಲಿ ಇಬ್ಬರು ಸಹೋದರರು ನಿಯಂತ್ರಣ ಕಳೆದುಕೊಂಡು ಕೊಚ್ಚಿಕೊಂಡು ಹೋಗಿದ್ದಾರೆ.

ಆಪತ್ತಿನ ಕ್ಷಣದಲ್ಲಿ ಮಂಜಪ್ಪ ಅವರ ಸಮಯಪ್ರಜ್ಞೆಯಿಂದ ಮೂರನೇ ಮಗ ಚಿರಂಜೀವಿ ಜೀವಾಪಾಯದಿಂದ ಪಾರಾಗಿದ್ದಾನೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಇಡೀ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಅನಾರೋಗ್ಯದಿಂದ ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ!

ಕೊಪ್ಪಳ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಗಟಿ (60) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

error: Content is protected !!