ವಿಜಯಸಾಕ್ಷಿ ಸುದ್ದಿ, ಗದಗ: ಪ್ರಯಾಣಿಕರ ಆರೋಗ್ಯ ರಕ್ಷಣೆಗಾಗಿ ಬಸ್ ನಿಲ್ದಾಣ ಆವರಣದ ಸ್ವಚ್ಛತೆಗೆ ಪ್ರಥಮಾದ್ಯತೆ ನೀಡಬೇಕು ಎಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಸೂಚಿಸಿದರು.
ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಸೋಮವಾರ ಶಿರಹಟ್ಟಿ ನಗರದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ವ್ಯವಸ್ಥೆಯ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಜುಲೈ 20ರಂದು ಪುನಃ ಬಸ್ ನಿಲ್ದಾಣದ ಸ್ವಚ್ಛತೆಯ ಪರಿಶೀಲನೆಗಾಗಿ ಆಗಮಿಸುವುದಾಗಿ ತಿಳಿಸಿದ ಅವರು, ಈಗ ನೀಡಿರುವ ಎಲ್ಲ ಸೂಚನೆಗಳು ಕಾರ್ಯರೂಪಕ್ಕೆ ಬರುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಸಂಬAಧಿತ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹಿಸಲಾಗುವುದು. ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕೂರಲು ಉತ್ತಮ ಆಸನಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಪ್ಲಾಸ್ಟಿಕ್ ಮುಕ್ತ ನಿಲ್ದಾಣ ಆಗಬೇಕು. ಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮಗಳಿಂದ ಶಿರಹಟ್ಟಿಗೆ ಬಂದು ಹೋಗಲು ಸರಿಯಾದ ಬಸ್ಸಿನ ವ್ಯವಸ್ಥೆ ಮಾಡಬೇಕು ಎಂದು ಬಿ.ಬಿ. ಅಸೂಟಿ ನಿರ್ದೇಶನ ನೀಡಿದರು.
ನಿಲ್ದಾಣದ ಆವರಣದಲ್ಲಿರುವ ಶಿಶು ಆರೈಕೆ ವಿಶ್ರಾಂತಿ ಕೊಠಡಿಗೆ ಭೇಟಿ ನೀಡಿದ ಅವರು, ವಿಶ್ರಾಂತಿ ಕೊಠಡಿಯಲ್ಲಿ ಶುದ್ಧ ಗಾಳಿ, ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಸ್ವಚ್ಛವಾಗಿರುವಂತೆ ನೋಡಿಕೊಳ್ಳಲು ಸಾರಿಗೆ ಸಂಸ್ಥೆಯ ಅಧಿಕಾರಿ ಡಿ.ಸಿ. ದೇವರಾಜ ಅವರಿಗೆ ನಿರ್ದೇಶನ ನೀಡಿದರು.
ಶಿರಹಟ್ಟಿ ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಮಾತನಾಡಿ, ಪ್ರತಿ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಭೆಗಳನ್ನು ನಡೆಸಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡಬೇಕೆಂದರು.
ಜಿಲ್ಲಾ ಸಮಿತಿಯ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಸರ್ಕಾರದ ಮಹಾತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ದುರ್ಬಲರನ್ನು ಆರ್ಥಿಕ ಸಬಲರನ್ನಾಗಿ ಮಾಡುತ್ತಿವೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಶಿವನಗೌಡ ಪಾಟೀಲ, ಮಲ್ಲಪ್ಪ ಹುಯಲಗೋಳ, ಬುಡೆನಸಾಬ್ ಮಕಾನದಾರ, ದೇವಪ್ಪ ಲಮಾಣಿ, ವಿಶಾಲ ಹೊನ್ನಣ್ಣವರ, ಸುರೇಶರಡ್ಡಿ ಕೆಂಚರೆಡ್ಡಿ, ಶಕುಂತಲಾ ವಿಭೂತಿಮಠ, ಹೊನ್ನೇಶ್ ಪೋಟಿ, ಮಹಾವೀರ್ ಮಂಟಗನ್ನಿ, ಅಂದನಗೌಡ ಪಾಟೀಲ್, ಸೋಮನಗೌಡ ಮರಿಗೌಡ, ಪ್ರಮುಖರಾದ ಹೂಮಾಯನ್ ಮಾಗಡಿ, ಪವನ್ ಈಳಿಗೇರ, ಹಸನ್ ಸಾಬ್ ನದಾಫ್, ಸಂತೋಷ್ ಕುರಿ, ಸಂಗಪ್ಪ ಕೆರಕಲಮಟ್ಟಿ, ಚಾಂದಸಾಬ ಕೊಟ್ಟೂರ ಮತ್ತಿತರರು ಹಾಜರಿದ್ದರು.
“ಶಕ್ತಿ ಯೋಜನೆ ಮಹಿಳೆಯರ ಸಬಲತೆಗೆ ಶಕ್ತಿಯಾಗಿ ನಿಂತಿರುವುದು ಅಕ್ಷರಶಃ ಸತ್ಯ ಎಂದು ಫಲಾನುಭವಿಗಳು ತಮ್ಮ ಮನದಾಳದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಕೆ. ಪಾಟೀಲ ಸೇರಿದಂತೆ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು”
ನಿಲ್ದಾಣದ ಆವರಣದಲ್ಲಿರುವ ಶೌಚಾಲಯದ ಪರಿಶೀಲನೆ ನಡೆಸಿ, ಅಲ್ಲಿಯೂ ಸಹ ಸ್ವಚ್ಛತೆ ಅಗತ್ಯವಾಗಿದೆ. ವಿಕಲಚೇತನರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಬೇಕು. ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದಿದ್ದು, ಪುನಃ ದೂರುಗಳು ಬರದಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ನಿಗಾ ವಹಿಸಲು ಬಿ.ಬಿ. ಅಸೂಟಿ ಸೂಚಿಸಿದರು.