Home Blog Page 3

ಆರ್ಥಿಕ ಸಂಕಷ್ಟದಲ್ಲಿ ಏರ್ ಇಂಡಿಯಾ: ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತ!

ನವದೆಹಲಿ: ಏರ್ ಇಂಡಿಯಾ ಸಂಸ್ಥೆ ಜುಲೈವರೆಗೆ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಕಡಿತಗೊಳಿಸುವ ನಿರ್ಧಾರ ಕೈಗೊಂಡಿದೆ.

ವಿಮಾನ ಇಂಧನ ದರ ಏರಿಕೆ ಹಾಗೂ ವಾಯುಪ್ರದೇಶ ನಿರ್ಬಂಧಗಳಿಂದಾಗಿ ಕಾರ್ಯಾಚರಣೆ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ತಿಳಿಸಿದ್ದಾರೆ.

ಸಂಸ್ಥೆ ಈಗಾಗಲೇ ಆರ್ಥಿಕ ನಷ್ಟದಲ್ಲಿದ್ದು, ಹೆಚ್ಚುತ್ತಿರುವ ವೆಚ್ಚದಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೆಲ ಅಂತಾರಾಷ್ಟ್ರೀಯ ವಿಮಾನಗಳನ್ನು ಕಡಿತಗೊಳಿಸಲಾಗಿತ್ತು. ಇದೀಗ ಜುಲೈವರೆಗೆ ಹೆಚ್ಚುವರಿ ಸುಮಾರು 100 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ.

ಈ ಕಡಿತದ ಪರಿಣಾಮವಾಗಿ ಯುರೋಪ್, ಉತ್ತರ ಅಮೆರಿಕಾ, ಆಸ್ಟ್ರೇಲಿಯಾ ಹಾಗೂ ಸಿಂಗಾಪುರ ಮಾರ್ಗಗಳ ವಿಮಾನ ಸೇವೆಗಳಲ್ಲಿ ಇಳಿಕೆ ಆಗಲಿದೆ ಎಂದು ತಿಳಿದುಬಂದಿದೆ. ದಿನನಿತ್ಯ ಸುಮಾರು 1,100 ವಿಮಾನಗಳನ್ನು ನಿರ್ವಹಿಸುತ್ತಿದ್ದ ಸಂಸ್ಥೆ, ಈಗ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಪುನರ್‌ಸಂರಚನೆ ಮಾಡುತ್ತಿದೆ.

ಏರ್ ಇಂಡಿಯಾ 2026ರ ಮಾರ್ಚ್ 31ಕ್ಕೆ ಅಂತ್ಯವಾದ ಹಣಕಾಸು ವರ್ಷದಲ್ಲಿ ಸುಮಾರು 22,000 ಕೋಟಿ ರೂಪಾಯಿಗೂ ಅಧಿಕ ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ. ಇಂಧನ ದರ ಏರಿಕೆ ಮತ್ತು ನಿರ್ಬಂಧಗಳ ಕಾರಣ ಸಂಸ್ಥೆ ಇದೀಗ ಕಠಿಣ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ತಿಳಿಸಿದೆ.

ಮನೆ ಮುಂದೆ ಗಲಾಟೆ ಆರೋಪ: ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌

ಬೆಂಗಳೂರು: ನಟ ಚೇತನ್ ಅಹಿಂಸಾ ನೀಡಿದ ದೂರಿನ ಆಧಾರದ ಮೇಲೆ ಸಿನಿಮಾ ನಿರ್ಮಾಪಕ ಸಾ.ರಾ ಗೋವಿಂದು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆದರಿಕೆ ಹಾಕಿದ ಆರೋಪ ಹಾಗೂ ಮನೆ ಮುಂದೆ ಗಲಾಟೆ ನಡೆಸಿದ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಾ.ರಾಜ್‌ಕುಮಾರ್ ಸಮಾಧಿ ಜಾಗದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ನಟ ಚೇತನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವರು ಮನೆಗೆ ಬಂದು ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ನಟ ಚೇತನ್ ಅಹಿಂಸಾ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿ, ಸಾ.ರಾ ಗೋವಿಂದು, ಶಿವರಾಮೇಗೌಡ ಹಾಗೂ ಶಿವಕುಮಾರ್ ನಾಯ್ಕ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ಚೇತನ್, “ಕಳೆದ ಶನಿವಾರ ಸಾ.ರಾ ಗೋವಿಂದು ಅವರು ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದರು. ಅವರ ವರ್ತನೆ ಗೂಂಡಾಗಿರಿಯಂತಿತ್ತು. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಸಾಕ್ಷ್ಯಾಧಾರಗಳೊಂದಿಗೆ ದೂರು ನೀಡಲಾಗಿದೆ,” ಎಂದು ತಿಳಿಸಿದ್ದಾರೆ.

IPL 2026: CSK ವಿರುದ್ದ ಮುಂಬೈಗೆ ಸೋಲು; IPL ನಿಂದ MI ಭಾಗಶಃ ಔಟ್!

ಐಪಿಎಲ್ 2026 44ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಈ ಆವೃತ್ತಿಯ ಎರಡನೇ ಮುಖಾಮುಖಿಯಲ್ಲೂ ಮುಂಬೈ ತಂಡವನ್ನು ಮಣಿಸಿದ ಸಿಎಸ್‌ಕೆ, ಟೂರ್ನಿಯಲ್ಲಿ ತನ್ನ ನಾಲ್ಕನೇ ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ. ಮತ್ತೊಂದೆಡೆ, ಈ ಸೋಲಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತದಲ್ಲೇ ಹೊರ ಬೀಳುವ ಸಾಧ್ಯತೆ ಹೆಚ್ಚಾಗಿದೆ.

ಮೇ 2ರಂದು ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ, ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 159 ರನ್‌ಗಳಿಗೆ ಸೀಮಿತವಾಯಿತು. ನಮನ್ ಧೀರ್ 57 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರೆ, ರಯಾನ್ ರಿಕಲ್ಟನ್ 37 ರನ್ ಕೊಡುಗೆ ನೀಡಿದರು. ಆದರೆ ನಾಯಕ ಹಾರ್ದಿಕ್ ಪಾಂಡ್ಯ 23 ಎಸೆತಗಳಲ್ಲಿ ಕೇವಲ 18 ರನ್ ಗಳಿಸಿ ನಿರಾಸೆ ಮೂಡಿಸಿದರು.

ಚೆನ್ನೈ ಪರ ಬೌಲಿಂಗ್‌ನಲ್ಲಿ ಅನ್ಶುಲ್ ಕಾಂಬೋಜ್ ಮಿಂಚಿ 4 ಓವರ್‌ಗಳಲ್ಲಿ 32 ರನ್ ನೀಡಿ 3 ವಿಕೆಟ್ ಕಬಳಿಸಿದರು. ನೂರ್ ಅಹ್ಮದ್ 2 ವಿಕೆಟ್ ಪಡೆದುಕೊಂಡರೆ, ಜೇಮೀ ಓವರ್ಟನ್ ಕೂಡ ಉತ್ತಮ ಬೆಂಬಲ ನೀಡಿದರು.

159 ರನ್‌ಗಳ ಗುರಿ ಬೆನ್ನಟ್ಟಿದ ಚೆನ್ನೈ ತಂಡ ಆರಂಭದಲ್ಲೇ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡರೂ, ನಾಯಕ ರುತುರಾಜ್ ಗಾಯಕ್ವಾಡ್ ಜವಾಬ್ದಾರಿಯುತ ಆಟ ಪ್ರದರ್ಶಿಸಿದರು. ಉರ್ವಿಲ್ ಪಟೇಲ್ ಜೊತೆಗೂಡಿ 49 ರನ್‌ಗಳ ಜೊತೆಯಾಟ ಕಟ್ಟಿದ ಅವರು, ಬಳಿಕ ಕಾರ್ತಿಕ್ ಶರ್ಮಾ ಜೊತೆಗೂಡಿ 98 ರನ್‌ಗಳ ಅಮೂಲ್ಯ ಪಾಲುದಾರಿಕೆ ನಿರ್ಮಿಸಿದರು.

ಈ ನಡುವೆ ರುತುರಾಜ್ ಗಾಯಕ್ವಾಡ್ ಸತತ ಎರಡನೇ ಅರ್ಧಶತಕ ಪೂರೈಸಿದರೆ, ಕಾರ್ತಿಕ್ ಶರ್ಮಾ ತಮ್ಮ ಮೊದಲ ಐಪಿಎಲ್ ಅರ್ಧಶತಕ ದಾಖಲಿಸಿದರು. ಇವರ ದಿಟ್ಟ ಆಟದ ನೆರವಿನಿಂದ ಚೆನ್ನೈ ತಂಡ 18.1 ಓವರ್‌ಗಳಲ್ಲಿ ಗುರಿ ತಲುಪಿ ಸುಲಭ ಜಯ ಸಾಧಿಸಿತು.

 

ರಾಜಧಾನಿ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!

ಬೆಂಗಳೂರು: ರಾಜ್ಯದಲ್ಲಿ ಗಾಳಿಯ ಗುಣಮಟ್ಟದಲ್ಲಿ ಭಾಗಶಃ ಸುಧಾರಣೆ ಕಂಡುಬಂದಿದ್ದರೂ, ಕೆಲವು ನಗರಗಳಲ್ಲಿ ಇನ್ನೂ ಅನಾರೋಗ್ಯಕರ ಮಟ್ಟ ಮುಂದುವರಿದಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಏರ್ ಕ್ವಾಲಿಟಿ (AQI) ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಸುಧಾರಣೆ ಕಂಡಿದೆ. ಹುಬ್ಬಳ್ಳಿಯಲ್ಲಿ AQI ಇಂದು 73ರಷ್ಟಿದ್ದು, ಉತ್ತಮ ಮಟ್ಟದಲ್ಲಿದೆ. ಆದರೆ ಬೆಂಗಳೂರಿನಲ್ಲಿ AQI 110ಕ್ಕೆ ತಲುಪಿದರೂ, ಇದು ಇನ್ನೂ ಆರೋಗ್ಯಕ್ಕೆ ಹಾನಿಕರ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ಕೆಲ ತಿಂಗಳ ಹಿಂದೆ AQI 200ರ ಗಡಿ ತಲುಪಿದ್ದು ಆತಂಕ ಮೂಡಿಸಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ, WHO ಮಾನದಂಡಗಳ ಪ್ರಕಾರ ಇಂದಿನ ಮಟ್ಟವೂ ಆರೋಗ್ಯಕ್ಕೆ ಸಂಪೂರ್ಣ ಸುರಕ್ಷಿತವಲ್ಲ ಎಂದು ಹೇಳಲಾಗಿದೆ.

ರಾಜ್ಯದ ಇತರ ನಗರಗಳ ಇಂದಿನ ಗಾಳಿಯ ಗುಣಮಟ್ಟ (AQI) ಹೀಗಿದೆ:

ಬೆಂಗಳೂರು – 110
ಮಂಗಳೂರು – 109
ಮೈಸೂರು – 103
ಬೆಳಗಾವಿ – 68
ಕಲಬುರ್ಗಿ – 73
ಶಿವಮೊಗ್ಗ – 92
ಬಳ್ಳಾರಿ – 112
ಹುಬ್ಬಳ್ಳಿ – 73
ಉಡುಪಿ – 132
ವಿಜಯಪುರ – 84

AQI ಮಟ್ಟಗಳ ವಿವರಣೆ:
0–50 : ಉತ್ತಮ
50–100 : ಮಧ್ಯಮ
100–150 : ಕಳಪೆ
150–200 : ಅನಾರೋಗ್ಯಕರ
200–300 : ಗಂಭೀರ
300 ಮೇಲ್ಪಟ್ಟು : ಅಪಾಯಕಾರಿ

ತಜ್ಞರ ಪ್ರಕಾರ, AQI 100ಕ್ಕಿಂತ ಮೇಲ್ಪಟ್ಟಾಗ ದೀರ್ಘಕಾಲ ಬಾಹ್ಯ ವಾತಾವರಣದಲ್ಲಿ ಇರುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಲಾಗಿದೆ.

 

ಕೂಡ್ಲಿಗಿಯಲ್ಲಿ ಮನಕಲಕುವ ದುರಂತ: ಗೋಡೆ ಕುಸಿದು ಮನೆ ಮಾಲೀಕ ಸಾವು

ವಿಜಯನಗರ:- ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಲ್ಲಿ ಮನಕಲಕುವ ದುರಂತವೊಂದು ಸಂಭವಿಸಿದೆ.

ನಿನ್ನೆ ಸಂಜೆ ಸಂಭವಿಸಿದ ಅವಘಡದಲ್ಲಿ ಮನೆಯ ಗೋಡೆ ಕುಸಿದು, ಬಸವರಾಜಪ್ಪ (54) ಎಂಬುವವರು ಮೃತಪಟ್ಟಿದ್ದಾರೆ. ಮೃತ ಬಸವರಾಜಪ್ಪ ಅವರು ತಮ್ಮ ಹೊಸ ಮನೆಯ ಕಾಮಗಾರಿಯನ್ನು ನಡೆಸುತ್ತಿದ್ದರು. ಹೊಸ ಮನೆಯ ಬೇಸ್‌ಮೆಂಟ್ ಪಕ್ಕದಲ್ಲಿದ್ದ ಹಳೆಯ ಕಲ್ಲಿನ ಗೋಡೆಯ ನಡುವೆ ಪೈಪ್‌ಲೈನ್ ಅಳವಡಿಸಲು ಕಾರ್ಮಿಕರು ಪಾಯ ತೆಗೆದಿದ್ದರು. ಈ ಪಾಯವನ್ನು ಸಮತಟ್ಟು ಮಾಡಲು ಮುಂದಾದ ವೇಳೆ, ಏಕಾಏಕಿ ಹಳೆಯ ಕಲ್ಲಿನ ಗೋಡೆ ಕುಸಿದು ಬಸವರಾಜಪ್ಪ ಅವರ ಮೇಲೆ ಬಿದ್ದಿದೆ.

ಭಾರೀ ಗಾತ್ರದ ಕಲ್ಲು ಮತ್ತು ಮಣ್ಣಿನಡಿ ಸಿಲುಕಿದ ಬಸವರಾಜಪ್ಪ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ಸುದ್ದಿ ತಿಳಿದು ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ರಾಮಪ್ಪ ಬಿದಾರಾಣಿ ಮತ್ತು ತಂಡ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ಸುಮಾರು 45 ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಶವವನ್ನು ಹೊರತೆಗೆದಿದ್ದಾರೆ.

ಈ ಸಂಬಂಧ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ! ಹವಾಮಾನ ವರದಿ ಹೀಗಿದೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಆಲಿಕಲ್ಲು ಮಳೆಯ ಅರ್ಭಟ ಮುಂದುವರಿದಿದ್ದು, ಇಂದೂ ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಇಂದು ಗರಿಷ್ಠ 42 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ದಾಖಲಾಗುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಇದೇ ರೀತಿಯ ಬಿಸಿಗಾಳಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದೇ ವೇಳೆ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದ ಕೆಲ ಭಾಗಗಳಾದ ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಶುಷ್ಕ ವಾತಾವರಣ ಇರಲಿದೆ.

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ರಾಜ್ಯದಲ್ಲಿ ಸಿಎಂ ಬದಲಾವಣೆ ಸಾಧ್ಯತೆ? ಖರ್ಗೆ ಹೇಳಿಕೆ ಬೆನ್ನಲ್ಲೇ ಬಿ.ವೈ. ವಿಜಯೇಂದ್ರ ಹೇಳಿದ್ದೇನು..?

ಮೈಸೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಇತ್ತೀಚಿನ ಹೇಳಿಕೆಯನ್ನು ಗಮನಿಸಿದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ ಎಂಬ ಅನುಮಾನ ಮೂಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸೂತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ ಎಂದು ಹೇಳಿದರು.

ಕೆಲವರು ಮಲ್ಲಿಕಾರ್ಜುನ ಖರ್ಗೆ ಅವರೇ ಮುಖ್ಯಮಂತ್ರಿ ಆಗಲಿ ಎನ್ನುತ್ತಿದ್ದಾರೆ. ಮತ್ತೊಂದೆಡೆ ಡಿ.ಕೆ. ಶಿವಕುಮಾರ್ ಮೇ 15ರಂದು ಸಿಎಂ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು,” ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.

ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಬದುಕಿನ 50 ವರ್ಷದ ಅಭಿಮಾನೋತ್ಸವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು, ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಸಮಾರಂಭಕ್ಕೆ ಸೂತ್ತೂರು ಶ್ರೀಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಸ್ವಾಮೀಜಿಗಳು ಕಾರ್ಯಕ್ರಮಕ್ಕೆ ಆಗಮಿಸಲು ಒಪ್ಪಿದ್ದಾರೆ. ಮೇ 8ರಂದು ಯಡಿಯೂರಪ್ಪ ಅವರು ಚಿತ್ರದುರ್ಗ ಪ್ರವೇಶಿಸಲಿದ್ದು, ಅದ್ಧೂರಿ ಸ್ವಾಗತ ಕೋರಲಾಗುತ್ತದೆ. ಮೇ 9ರಂದು ನಡೆಯುವ ಮುಖ್ಯ ವೇದಿಕೆ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮೇ 14ರಿಂದ ಅಂಡಮಾನ್ʼನಲ್ಲಿ ಮುಂಗಾರು ಪ್ರವೇಶ: ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯ ಮುನ್ಸೂಚನೆ

ನವದೆಹಲಿ: ದೇಶಾದ್ಯಂತ ತೀವ್ರ ಉಷ್ಣಾಂಶದ ನಡುವೆ ಜನತೆಗೆ ತುಸು ನಿರಾಳತೆ ನೀಡುವಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹತ್ವದ ಮುನ್ಸೂಚನೆ ನೀಡಿದೆ. ಮೇ 14ರಿಂದ 16ರ ಅವಧಿಯಲ್ಲಿ ನೈಋತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶಿಸುವ ಸಾಧ್ಯತೆ ಇದ್ದು, ಮೇ ತಿಂಗಳಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಪ್ರಸ್ತುತ ದೇಶದ ಹಲವು ಭಾಗಗಳಲ್ಲಿ ಉರಿಬಿಸಿಲಿನ ವಾತಾವರಣ ಮುಂದುವರಿದಿದ್ದರೂ, ಮುಂಗಾರು ಚಟುವಟಿಕೆಗಳ ಆರಂಭದಿಂದ ಶೀಘ್ರದಲ್ಲೇ ಕೆಲವು ಪ್ರದೇಶಗಳಲ್ಲಿ ಬಿಸಿಲಿನ ತೀವ್ರತೆ ಕಡಿಮೆಯಾಗುವ ನಿರೀಕ್ಷೆ ಇದೆ.

ಐಎಂಡಿ ಬಿಡುಗಡೆ ಮಾಡಿದ ಮಾಸಿಕ ಮುನ್ಸೂಚನೆ ಪ್ರಕಾರ, ಹಿಮಾಲಯದ ತಪ್ಪಲು ಪ್ರದೇಶಗಳ ಕೆಲವು ಭಾಗಗಳು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಮೇ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಗಾಳಿ ದಿನಗಳು ಮುಂದುವರಿಯುವ ಸಾಧ್ಯತೆ ಇದೆ.

ಆದರೆ ದೇಶದ ಸರಾಸರಿ ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚಾಗುವ ನಿರೀಕ್ಷೆ ಇದೆ. ಇದ್ರಲ್ಲೂ ಪೂರ್ವ, ಈಶಾನ್ಯ ಹಾಗೂ ಪೂರ್ವ-ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಮಾತ್ರ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಹವಾಮಾನಶಾಸ್ತ್ರದ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಮಾತನಾಡಿ, ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದರು. ಅದೇ ವೇಳೆ ವಾಯುವ್ಯ ಭಾರತದ ಹಲವು ಪ್ರದೇಶಗಳು, ಮಧ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ದ್ವೀಪಕಲ್ಪ ಪ್ರದೇಶಗಳು ಹಾಗೂ ಈಶಾನ್ಯ ಭಾರತದ ದಕ್ಷಿಣ ಭಾಗಗಳಲ್ಲಿ ಸಾಮಾನ್ಯ ಅಥವಾ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಮುಂಗಾರು ಆಗಮನ ಕುರಿತು ಮಾತನಾಡಿದ ಅವರು, ಮೇ 14ರಿಂದ 16ರೊಳಗೆ ನೈಋತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ಸಾಧ್ಯತೆ ಇದೆ ಎಂದು ಸ್ಪಷ್ಟಪಡಿಸಿದರು.

 ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು: ವಿಧಾನಸಭೆ ಕಾರ್ಯದರ್ಶಿಯಿಂದ ಅಧಿಕೃತ ಆದೇಶ

ಬೆಂಗಳೂರು: ದೀರ್ಘಕಾಲದ ಕಾನೂನು ಹೋರಾಟ ಮತ್ತು ರಾಜಕೀಯ ಬೆಳವಣಿಗೆಗಳ ನಡುವೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಶನಿವಾರ ಮಹತ್ವದ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಕೆಲವೇ ದಿನಗಳಲ್ಲಿ ಈ ಕ್ರಮ ಜಾರಿಯಾಗಿದೆ.

ಭಾರತೀಯ ಸಂವಿಧಾನದ ವಿಧಿ 191(1)(e) ಹಾಗೂ ಜನಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 8ರ ಅನ್ವಯ ಈ ಅನರ್ಹತೆ ಆದೇಶ ಹೊರಡಿಸಲಾಗಿದೆ. ಈ ಕಾನೂನು ಪ್ರಕಾರ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆ ವಿಧಿಸಲ್ಪಟ್ಟರೆ ಅವರು ತಕ್ಷಣದಿಂದಲೇ ಶಾಸಕರಾಗಿ ಮುಂದುವರಿಯಲು ಅರ್ಹರಾಗುವುದಿಲ್ಲ.

ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದ ಬಳಿಕವೂ ಅನರ್ಹತೆ ಆದೇಶ ಹೊರಡಿಸಲು ವಿಧಾನಸಭೆ ಸಚಿವಾಲಯ ವಿಳಂಬ ಮಾಡುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿತ್ತು. ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ಪಡೆಯಲು ಸರ್ಕಾರ ಉದ್ದೇಶಪೂರ್ವಕವಾಗಿ ಸಮಯಾವಕಾಶ ನೀಡುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಟೀಕಿಸಿದ್ದರು.

ಆದರೆ ಇದೀಗ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಅಧಿಕೃತ ಆದೇಶದೊಂದಿಗೆ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಈ ಬೆಳವಣಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗುವ ಸಾಧ್ಯತೆ ಇದೆ.

ಎರಡು ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಬಂದಿತ್ತು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ತಮಗೆ ಎರಡು ಬಾರಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಬಂದಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವು ಕಾರಣಗಳಿಂದಾಗಿ ಆ ಸಂದರ್ಭದಲ್ಲಿ ಆ ಅವಕಾಶವನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.

ನನಗೆ ಎರಡು ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಬಂದಿತ್ತು. ಆದರೆ ಆ ಸಮಯದಲ್ಲಿ ನಾನು ನೀರಾವರಿ ಸಚಿವನಾಗಿದ್ದೆ. ಕೆಲ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ ಎಂದು ಪಾಟೀಲ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಯಸುವ ವಿಚಾರವನ್ನು ಮಾಧ್ಯಮಗಳ ಮುಂದೆ ಹೇಳುವುದಕ್ಕಿಂತ ಪಕ್ಷದ ಸೂಕ್ತ ವೇದಿಕೆಯಲ್ಲಿ ಹೇಳುವುದಾಗಿ ಸ್ಪಷ್ಟಪಡಿಸಿದ ಅವರು, ಅಂತಹ ವಿಷಯವನ್ನು ಹೇಳಬೇಕಾದರೆ ನೇರವಾಗಿ ಹೈಕಮಾಂಡ್ ಮುಂದೆ ಹೇಳುತ್ತೇನೆ. ಪಕ್ಷದ ಹಿರಿಯರು ಚರ್ಚೆ ನಡೆಸುವ ಸಂದರ್ಭದಲ್ಲಿ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇನೆ ಎಂದರು.

ಇದೇ ವೇಳೆ, ನನ್ನ ನೇತೃತ್ವದಲ್ಲಿ ಶಾಸಕರು ಗೆದ್ದಿದ್ದಾರೆ” ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಸರ್ಕಾರದಲ್ಲಿ ಮುಖ್ಯಮಂತ್ರಿ ಅತ್ಯುನ್ನತ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.

ಈ ವಿಚಾರವಾಗಿ ನಾನು ಈಗಾಗಲೇ ಪ್ರತಿಕ್ರಿಯಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರು ಹಾಗೂ ಭೂತ್ ಮಟ್ಟದ ಕಾರ್ಯಕರ್ತರು ಒಟ್ಟಾಗಿ ದುಡಿದ ಪರಿಣಾಮ ಜನರು ಕಾಂಗ್ರೆಸ್‌ಗೆ ಆಶೀರ್ವಾದ ನೀಡಿದ್ದಾರೆ ಎಂದು ಹೇಳಿದರು.

error: Content is protected !!