Home Blog Page 3

ಶಿಕ್ಷಕರ ಹಿತಾಸಕ್ತಿಗಾಗಿ ಶ್ರಮಿಸಿದ ನಾಯಕತ್ವ ಎಲ್ಲರಿಗೂ ಮಾದರಿ : ಬಸವರಾಜ ಬಳ್ಳಾರಿ

0

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಬ್ಬಳ್ಳಿ ಘಟಕದ ಅಧ್ಯಕ್ಷರು ಹಾಗೂ ಸಂಘಟನಾ ಚತುರರೆಂದೇ ಗುರುತಿಸಿಕೊಂಡಿರುವ ಎಂ.ಎಚ್. ಜಂಗ್ಲಿ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ವೆಂಕಪ್ಪ ಬಳ್ಳಾರಿ ಅವರು ಜಂಗ್ಲಿಯವರನ್ನು ಸನ್ಮಾನಿಸಿ ಮಾತನಾಡಿ, ಶಿಕ್ಷಕರ ಸಂಘಟನೆ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಅವರು ಸಲ್ಲಿಸಿರುವ ಸೇವೆ ಅನನ್ಯವಾಗಿದೆ ಎಂದು ಶ್ಲಾಘಿಸಿದರು.

ಜಂಗ್ಲಿಯವರು ತಮ್ಮ ಸೇವಾವಧಿಯಲ್ಲಿ ಶಿಕ್ಷಕರ ಹಿತಾಸಕ್ತಿಗಳ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸಿದ್ದು, ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ಶಿಕ್ಷಕರ ಸಮುದಾಯದ ವಿಶ್ವಾಸ ಗಳಿಸಿದ್ದಾರೆ. ಅವರ ನಿಸ್ವಾರ್ಥ ಸೇವಾ ಮನೋಭಾವ ಹಾಗೂ ನಾಯಕತ್ವ ಗುಣಗಳು ಇತರರಿಗೆ ಮಾದರಿಯಾಗಿವೆ ಎಂದು ಹೇಳಿದರು.

ನಿವೃತ್ತಿ ಜೀವನವು ಜಂಗ್ಲಿಯವರಿಗೆ ಆರೋಗ್ಯ, ನೆಮ್ಮದಿ, ಸಂತೋಷ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಜು ಕಂಟಿಗೊಣ್ಣವರ, ಪ್ರಲ್ಹಾದ ಗೆಜ್ಜಿ, ಅಮೀರನಾಯಕ, ಮುತ್ತು ಮಲಕಶೆಟ್ಟಿ, ರಾಜು ನರಗುಂದ, ಕರೀಮಸಾಬ ಸುಣಗಾರ, ಎಸ್.ಎಸ್. ಪಾರ್ವತಿಮಠ, ರಾಜಕುಮಾರ ಸೊಪಡ್ಲ, ಎಸ್.ಎಚ್. ಬಾದನಹಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಜಂಗ್ಲಿಯವರಿಗೆ ಶುಭ ಹಾರೈಕೆಗಳನ್ನು ಸಲ್ಲಿಸಿದರು.

“ಶಿಕ್ಷಕರ ಹಕ್ಕುಗಳ ರಕ್ಷಣೆ ಹಾಗೂ ಸಂಘಟನೆಯ ಬಲವರ್ಧನೆಗೆ ಎಂ.ಎಚ್. ಜಂಗ್ಲಿಯವರ ಕೊಡುಗೆ ಗಮನಾರ್ಹವಾಗಿದೆ. ಅವರ ಸೇವೆ ಶಿಕ್ಷಕರ ಸಮುದಾಯಕ್ಕೆ ಸದಾ ಸ್ಮರಣೀಯ.”

– ಬಸವರಾಜ ವೆಂಕಪ್ಪ ಬಳ್ಳಾರಿ, ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

ನೀಟ್ ಹಗರಣಕ್ಕೆ ವಿದ್ಯಾರ್ಥಿಗಳು ಹೊಣೆಗಾರರಲ್ಲ: ಎಂ. ಶಾಂತಿ

0

ವಿಜಯಸಾಕ್ಷಿ ಸುದ್ದಿ, ಗದಗ: ನೀಟ್-ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೂಲ ಆರೋಪಿಗಳನ್ನು ಪತ್ತೆಹಚ್ಚುವ ಬದಲು ವೈದ್ಯಕೀಯ ವಿದ್ಯಾರ್ಥಿಗಳನ್ನೇ ಹೊಣೆಗಾರರನ್ನಾಗಿ ಬಿಂಬಿಸುತ್ತಿರುವ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ನಡೆ ಖಂಡನೀಯ ಎಂದು ಎಐಡಿಎಸ್ಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಗದಗ ಜಿಲ್ಲಾ ಘಟಕ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸಂಚಾಲಕಿ ಎಂ. ಶಾಂತಿ, ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮರುಪರೀಕ್ಷೆ ಘೋಷಣೆಯಾದ ಬಳಿಕ ದೇಶದಲ್ಲಿ ಹಲವಾರು ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಆತ್ಮಹತ್ಯೆ ಪ್ರಕರಣಗಳೂ ವರದಿಯಾಗಿವೆ. ಆದರೂ ಕೇಂದ್ರ ಸರ್ಕಾರ ಈ ಪ್ರಕರಣದಲ್ಲಿ ತನ್ನ ನೈತಿಕ ಹೊಣೆಗಾರಿಕೆಯನ್ನು ಒಪ್ಪಿಕೊಳ್ಳದೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲವನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಬದಲು, ಟೆಲಿಗ್ರಾಂ ನಿಷೇಧ ಸೇರಿದಂತೆ ವಿವಿಧ ಕ್ರಮಗಳ ಮೂಲಕ ವಿಷಯವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ದೂರಿದರು.

ಇದೇ ವೇಳೆ, ಕೋಚಿಂಗ್ ಮಾಫಿಯಾದ ಹಿಡಿತದಲ್ಲಿ ಸಿಲುಕಿರುವ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ, ಇದೀಗ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನುಮಾನದ ದೃಷ್ಟಿ ಹರಿಸುತ್ತಿದೆ ಎಂದು ಎಐಡಿಎಸ್ಓ ಟೀಕಿಸಿದೆ.

ನೀಟ್-ಯುಜಿ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡಬಾರದು ಹಾಗೂ ಪರೀಕ್ಷೆಯ ಪಾವಿತ್ರ್ಯ ಕಾಪಾಡುವ ಹೆಸರಿನಲ್ಲಿ ಅವರ ಮೇಲೆ ನಿಗಾ ವಹಿಸಬೇಕು ಎಂದು ಎನ್‌ಎಂಸಿ ಹೊರಡಿಸಿರುವ ಸೂಚನೆ ವಿದ್ಯಾರ್ಥಿ ಸಮುದಾಯವನ್ನು ಅಪರಾಧಿಗಳಂತೆ ಕಾಣುವ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಬೃಹತ್ ಕೋಚಿಂಗ್ ಮಾಫಿಯಾದ ಕೈವಾಡವಿರುವುದು ಬಹಿರಂಗ ಸತ್ಯವಾಗಿದ್ದರೂ, ಅದರ ವಿರುದ್ಧ ಕ್ರಮ ಜರುಗಿಸುವ ಬದಲು ವೈದ್ಯಕೀಯ ವಿದ್ಯಾರ್ಥಿಗಳನ್ನು ಗುರಿಯಾಗಿಸಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಮತ್ತು ಶಿಕ್ಷಣ ಕ್ಷೇತ್ರದ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಕ್ರಮವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎನ್‌ಎಂಸಿ ಹೊರಡಿಸಿರುವ ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಜೊತೆಗೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊತ್ತುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಎಐಡಿಎಸ್ಓ ಆಗ್ರಹಿಸಿದೆ.

“ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಕೋಚಿಂಗ್ ಮಾಫಿಯಾದ ಕೈವಾಡವಿರುವುದು ಸ್ಪಷ್ಟವಾಗಿದ್ದರೂ, ವೈದ್ಯಕೀಯ ವಿದ್ಯಾರ್ಥಿಗಳನ್ನೇ ಅಪರಾಧಿಗಳಂತೆ ಬಿಂಬಿಸುವುದು ಅತ್ಯಂತ ಖಂಡನೀಯ. ವಿದ್ಯಾರ್ಥಿಗಳ ಮೇಲೆ ಕಣ್ಗಾವಲು ಇಡುವ ಎನ್‌ಎಂಸಿ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಪ್ರಶ್ನೆ ಪತ್ರಿಕೆ ಸೋರಿಕೆಯ ನೈತಿಕ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊತ್ತುಕೊಳ್ಳಬೇಕು.”

– ಎಂ. ಶಾಂತಿ, ಜಿಲ್ಲಾ ಸಂಚಾಲಕಿ, ಎಐಡಿಎಸ್ಓ ಗದಗ

ಕಣ್ಣೂರು ಸಮುದ್ರದಲ್ಲಿ ನೆಲಮಂಗಲದ ಯುವಕ ಮುಳುಗಿ ಸಾವು!

ನೆಲಮಂಗಲ: ಕೇರಳ ರಾಜ್ಯದ ಕಣ್ಣೂರು ಸಮುದ್ರದಲ್ಲಿ ನೆಲಮಂಗಲದ ಯುವಕನೊಬ್ಬ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ನೆಲಮಂಗಲದ ಬ್ಯಾಡರಹಳ್ಳಿ ನಿವಾಸಿ ಸಂತೋಷ್ (21) ಮೃತ ಯುವಕ ಎಂದು ಗುರುತಿಸಲಾಗಿದೆ. ಸಂತೋಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕೇರಳದ ಕೊಟ್ಟಿಯೂರ್ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದ. ಬಳಿಕ ಅವರು ಕಣ್ಣೂರು ಸಮುದ್ರ ತೀರಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಮೂವರು ಯುವಕರು ಸಮುದ್ರಕ್ಕೆ ಇಳಿದಿದ್ದು, ಅಲೆಯ ಅಬ್ಬರಕ್ಕೆ ಸಿಲುಕಿದ ಸಂತೋಷ್ ನೀರಿನಲ್ಲಿ ಮುಳುಗಿದ್ದಾನೆ. ಸ್ಥಳದಲ್ಲಿದ್ದವರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಯುವಕ ಸಮುದ್ರದಲ್ಲಿ ಮುಳುಗುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಸಂತೋಷ್‌ನ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಯುವಕನ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಶೋಕ ಆವರಿಸಿದೆ.

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:“ಬಿಡದಿಯ ರೈತರು ಒಳ್ಳೆಯವರು, ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಯೋಜನೆಯ ಪಿತಾಮಹ ಕುಮಾರಸ್ವಾಮಿ ಅವರೇ ಅಲ್ಲವೇ? ಇದನ್ನು ಅವರೇ ಒಪ್ಪಿಕೊಂಡಿದ್ದಾರೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ಸಭೆಯಲ್ಲಿ ಬಿಡದಿ ಟೌನ್ ಶಿಪ್ ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, “ಈ ಹಿಂದೆ ಕುಮಾರಸ್ವಾಮಿ ಅವರೇ ರೈತರಿಗೆ ಪರಿಹಾರವಾಗಿ ಅಭಿವೃದ್ಧಿಪಡಿಸಿದ ಭೂಮಿಯಲ್ಲಿ 40% ಕೊಡುತ್ತೇನೆ ಎಂದು ಹೇಳಿದ್ದರು. ನಾವು ಶೇ.50 ರಷ್ಟು ಭೂಮಿ ನೀಡುವುದಾಗಿ ಹೇಳಿದ್ದೇವೆ. ರೈತರಿಗೆ ಒಂದು ಎಕರೆಗೆ 2.50 ಕೋಟಿ ರೂ. ಪರಿಹಾರ ನೀಡುವ ಕೆಲಸ ಶುಕ್ರವಾರ ಆರಂಭವಾಗಿದೆ” ಎಂದರು.

ಕುಮಾರಸ್ವಾಮಿ ಆರಂಭಿಸಿ, ಯಡಿಯೂರಪ್ಪನವರು ಮುಂದುವರಿಸಿದ್ದ ಯೋಜನೆ

“ಕುಮಾರಸ್ವಾಮಿ ಅವರು ನೋಟಿಫಿಕೇಷನ್ ಮಾಡಿದ್ದರು. ಯಡಿಯೂರಪ್ಪ ಅವರು ಈ ಯೋಜನೆ ಮುಂದುವರೆಸಿದ್ದರು. ಅದನ್ನು ನಾವು ಇನ್ನಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆಯೇ ಹೊರತು ಹೊಸದಾಗಿ ನಾವೇನೂ ಮಾಡುತ್ತಿಲ್ಲ. ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಮಾಡಿದವರು ಯಾರು? ಈಗಿರುವ 9 ಸಾವಿರ ಎಕರೆಯಲ್ಲಿ 1 ಸಾವಿರ ಎಕರೆಯನ್ನು ಬಿಜೆಪಿಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ವಾಧೀನ ಮಾಡಿಕೊಡಲಿಲ್ಲವೇ?” ಎಂದರು.

ಎಲ್ಲಿಂದ ಜಮೀನು ಕೊಡಲಿ ಎಂದು ಅವರೇ ಹೇಳಿದ್ದಾರೆ

“ವಿರೋಧ ಪಕ್ಷದವರು ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ಹೊಸ ಕೈಗಾರಿಕೆಗಳು ಬರಬೇಕು ಎಂದು ಹೇಳುತ್ತಾರೆ. ಕೇಂದ್ರ ಬೃಹತ್ ಕೈಗಾರಿಕಾ ಸಚಿವರೇ ಎಲ್ಲಿಂದ ಜಮೀನು ತೆಗೆದುಕೊಡಲಿ ಎಂದು ಹೇಳಿದ್ದಾರೆ. ಹೀಗಿರುವಾಗ ಬಿಡದಿ ಜಮೀನನ್ನು ಡಿನೋಟಿಫಿಕೇಷನ್ ಮಾಡಿ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ” ಎಂದರು.

ರೆಡ್ ಜೋನ್ ಮಾಡಿದ್ದೇಕೆ?

“ಬಿಡದಿ ಪ್ರದೇಶವನ್ನು ರೆಡ್ ಜೋನ್ ಎಂದು ಕುಮಾರಸ್ವಾಮಿ ಅವರು ಏಕೆ ಘೋಷಣೆ ಮಾಡಿದರು ಎಂದು ಅವರು ಮೊದಲು ತಿಳಿಸಲಿ. ನೋಟಿಫಿಕೇಷನ್ ಏಕೆ ಮಾಡಿದರು ಎಂದು ಉತ್ತರಿಸಲಿ. ಯಡಿಯೂರಪ್ಪ ಅವರು ಏಕೆ ಮುಂದುವರೆಸಿದರು, ಅವರ ಕಾಲದಲ್ಲೇ ಡಿನೋಟಿಫಿಕೇಷನ್ ಮಾಡಲು ಅವರಿಗೆ ಅವಕಾಶವಿತ್ತಲ್ಲವೇ? ಯಾಕೆ ಮಾಡಲಿಲ್ಲ” ಎಂದರು.

“ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿದ್ದಾರೆ. ಆದರೆ ನಾನು ಇದಕ್ಕೆ ಬೇಸರ ಮಾಡಿಕೊಳ್ಳುವುದಿಲ್ಲ. ಶೇ 80 ರಷ್ಟು ರೈತರು ಭೂಮಿ ನೀಡಲು ಮುಂದೆ ಬಂದಿದ್ದಾರೆ. ಬೇರೆಯವರು ಮುಂದೆ ಬರಲಿಲ್ಲ ಎಂದರೆ ನಾನು ಏನು ಮಾಡಲು ಸಾಧ್ಯವಿಲ್ಲ. ನಾವು ಕಾನೂನಿನ ಪ್ರಕಾರ ಹೋಗುತ್ತೇವೆ” ಎಂದು ತಿಳಿಸಿದರು.

‘ಕುಮಾರಸ್ವಾಮಿ ಅವರ ರಕ್ತಕ್ರಾಂತಿ ಆಗುತ್ತದೆ ಎನ್ನುವ ಹೇಳಿಕೆಯ ಬಗ್ಗೆ ಕೇಳಿದಾಗ, “ಅವರು ದೊಡ್ಡವರು. ಬೃಹತ್ ಕೈಗಾರಿಕಾ ಸಚಿವರು. ಅವರಿಗೆ ಕೈಗಾರಿಕೆಗಳನ್ನು ತರಬೇಕು ಎನ್ನುವ ಆಸೆಯಿದೆ. ಎಲ್ಲಿಗೆ ಕೈಗಾರಿಕೆಗಳನ್ನು ತರಬೇಕು, ಹೇಗೆ ತರಬೇಕು, ಯಾರ ಜಮೀನಿನಲ್ಲಿ ತರಬೇಕು ಎಂದು ಅವರೇ ಉತ್ತರ ಹೇಳಬೇಕು” ಎಂದರು

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೂನ್ 21ರಂದು (ಭಾನುವಾರ) ಬೃಹತ್ ಪಾದಯಾತ್ರೆ ನಡೆಯಲಿದೆ. ರೈತರ ಭೂಮಿ ಹಾಗೂ ಜೀವನೋಪಾಯವನ್ನು ಉಳಿಸುವ ಉದ್ದೇಶದಿಂದ ಈ ಹೋರಾಟ ಆಯೋಜಿಸಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆಗೆ ಅಂಚಿಪುರ ಗ್ರಾಮದಿಂದ ಆರಂಭವಾಗಲಿರುವ ಪಾದಯಾತ್ರೆಯು ಅಂಚಿಪುರ ಕಾಲೊನಿ, ಬನ್ನಿಗಿರಿ, ಮರೇವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಸೇರಿದಂತೆ ಎಂಟು ಗ್ರಾಮಗಳ ಮೂಲಕ ಹೊಸೂರುವರೆಗೆ ಸಾಗಲಿದೆ. ಪಾದಯಾತ್ರೆಯ ಸಮಾರೋಪ ಹೊಸೂರಿನಲ್ಲಿ ನಡೆಯಲಿರುವ ಬಹಿರಂಗ ಸಭೆಯೊಂದಿಗೆ ಮುಕ್ತಾಯಗೊಳ್ಳಲಿದೆ.

ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, “ನಮ್ಮ ಭೂಮಿ, ನಮ್ಮ ಹಕ್ಕು” ಎಂಬ ಘೋಷಣೆಯೊಂದಿಗೆ ರೈತರ ಬದುಕು ಮತ್ತು ಕೃಷಿ ಚಟುವಟಿಕೆಗಳನ್ನು ಉಳಿಸಲು ಈ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು. ಅಂಚಿಪುರ, ಬನ್ನಿಗಿರಿ, ಗೊಲ್ಲಹಳ್ಳಿ ಸೇರಿದಂತೆ ಎಂಟು ಗ್ರಾಮಗಳ ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆಯಡಿ ಅಂಚಿಪುರ, ಬನ್ನಿಗಿರಿ, ಮರೇವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ 518 ಎಕರೆ ಕೃಷಿ ಭೂಮಿಗೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, ಇದರ ಜೊತೆಗೆ ಹೆಚ್ಚುವರಿ 7,481 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂದು ನಿಖಿಲ್ ಆರೋಪಿಸಿದರು.

ಈ ಯೋಜನೆಯಿಂದ 755 ರೈತ ಕುಟುಂಬಗಳು, ತಿಂಗಳಿಗೆ ಸುಮಾರು 6 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಹೈನುಗಾರಿಕೆ, ರೇಷ್ಮೆ ಹಾಗೂ ತೋಟಗಾರಿಕೆ ಚಟುವಟಿಕೆಗಳಿಗೆ ತೀವ್ರ ಹಾನಿಯಾಗಲಿದ್ದು, ಸುಮಾರು 10 ಲಕ್ಷ ಹಸಿರು ಮರಗಳು ನಾಶವಾಗುವ ಆತಂಕವಿದೆ ಎಂದು ಅವರು ಹೇಳಿದರು.

ಕಳೆದ 450 ದಿನಗಳಿಂದ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಇನ್ನೂ ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಈ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರದೆ, ಪಕ್ಷಾತೀತವಾಗಿ ರೈತರ ಹಕ್ಕುಗಳಿಗಾಗಿ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ರೈತರ ಜಮೀನನ್ನು ಉಳಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ ಅವರು, ಜೂನ್ 21ರಂದು ಅಂಚಿಪುರದಿಂದ ಹೊಸೂರಿಗೆ ನಡೆಯುವ ಪಾದಯಾತ್ರೆಯಲ್ಲಿ ರೈತರು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಬೀದರ್‌ನಲ್ಲಿ ಉಪ ಲೋಕಾಯುಕ್ತರ ದಿಢೀರ್ ದಾಳಿ: ಆಸ್ಪತ್ರೆ ಅವ್ಯವಸ್ಥೆ ಬಯಲು, ಸಿಬ್ಬಂದಿ ಬಳಿ ಲಕ್ಷಾಂತರ ಹಣ ಪತ್ತೆ!

0

ಬೀದರ್: ಸರ್ಕಾರಿ ಸೇವೆಗಳ ಗುಣಮಟ್ಟ ಮತ್ತು ಆಡಳಿತಾತ್ಮಕ ಕಾರ್ಯವೈಖರಿಯನ್ನು ಪರಿಶೀಲಿಸಲು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ತಂಡ ಬೀದರ್‌ನಲ್ಲಿ ನಡೆಸಿದ ದಿಢೀರ್ ಪರಿಶೀಲನೆ ವೇಳೆ ಆಸ್ಪತ್ರೆ ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿನ ಗಂಭೀರ ಲೋಪಗಳು ಬೆಳಕಿಗೆ ಬಂದಿವೆ.

ಬ್ರಿಮ್ಸ್ ಆಸ್ಪತ್ರೆಯ ವಾರ್ಡ್‌ಗಳಲ್ಲಿ ಮೂಲ ಸೌಲಭ್ಯಗಳ ಕೊರತೆ, ಹಳೆಯ ಹಾಗೂ ಕಳಪೆ ಬೆಡ್‌ಗಳು, ದಿಂಬುಗಳ ದುಸ್ಥಿತಿ, ಕುಡಿಯುವ ನೀರಿನ ಅಭಾವ ಮತ್ತು ರೋಗಿಗಳ ಸಂಬಂಧಿಕರಿಗೆ ಸೂಕ್ತ ವ್ಯವಸ್ಥೆಗಳಿಲ್ಲದಿರುವುದನ್ನು ಕಂಡು ನ್ಯಾಯಮೂರ್ತಿ ವೀರಪ್ಪ ಆಸ್ಪತ್ರೆ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಕಾರ್ಯನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಅವರು, ನಿಯಮಿತ ಪರಿಶೀಲನೆಯ ಕೊರತೆಯೇ ಇಂತಹ ಪರಿಸ್ಥಿತಿಗೆ ಕಾರಣ ಎಂದು ಅಭಿಪ್ರಾಯಪಟ್ಟರು.

ಪರಿಶೀಲನೆಯ ವೇಳೆ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಸಂಜುಕುಮಾರ್ ಬಳಿ ₹1 ಲಕ್ಷ ನಗದು ಹಾಗೂ ₹1 ಲಕ್ಷ ಮೊತ್ತದ ಚೆಕ್ ಪತ್ತೆಯಾಗಿದ್ದು, ಹಣದ ಮೂಲದ ಬಗ್ಗೆ ಸ್ಪಷ್ಟನೆ ನೀಡಲು ಆತ ವಿಫಲನಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಪತ್ತೆಯಾದ ಹಣವನ್ನು ವಶಪಡಿಸಿಕೊಳ್ಳುವಂತೆ ಹಾಗೂ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ನಂತರ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತರ ತಂಡ, ಅಲ್ಲಿನ ಅಸ್ವಚ್ಛತೆ, ನಿರ್ವಹಣಾ ವೈಫಲ್ಯ ಹಾಗೂ ಪ್ರಯಾಣಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿತು. ಬಸ್ ನಿಲ್ದಾಣದಲ್ಲಿನ ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆ ತೃಪ್ತಿಕರವಾಗಿಲ್ಲವೆಂದು ಕಂಡುಬಂದ ಹಿನ್ನೆಲೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.

ಉಪ ಲೋಕಾಯುಕ್ತರ ದಿಢೀರ್ ಪರಿಶೀಲನೆಯಿಂದ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಮತ್ತೆ ಪ್ರಶ್ನೆಗೆ ಒಳಗಾಗಿದೆ.

‘ಸೂರ್ಯಂಗೆ ತುಂಬಾ ಹೊತ್ತು ಗ್ರಹಣ ಹಿಡಿಯಲ್ಲ’: ದರ್ಶನ್ ‘ಡೆವಿಲ್’ಗೆ OTT ದಾರಿ

ಬೆಂಗಳೂರು: ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಆರು ತಿಂಗಳು ಕಳೆದ ಬಳಿಕ ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಡಿಜಿಟಲ್ ವೇದಿಕೆಗೆ ಕಾಲಿಡಲು ಸಜ್ಜಾಗಿದೆ. ಚಿತ್ರದ ಒಟಿಟಿ ಮತ್ತು ಸ್ಯಾಟಲೈಟ್ ಹಕ್ಕುಗಳನ್ನು ಜೀ5 ಪಡೆದುಕೊಂಡಿದ್ದು, ಶೀಘ್ರದಲ್ಲೇ ಸಿನಿಮಾ ಪ್ರೇಕ್ಷಕರ ಮನೆಮನೆ ತಲುಪಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ದರ್ಶನ್ ಜೈಲಿನಲ್ಲಿದ್ದಾಗಲೇ ‘ಡೆವಿಲ್’ ಚಿತ್ರ ಬಿಡುಗಡೆಯಾಗಿತ್ತು. ಚಿತ್ರದ ಪ್ರಚಾರ ಜವಾಬ್ದಾರಿಯನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಆಪ್ತರು ಹೊತ್ತುಕೊಂಡಿದ್ದರು. ನಿರೀಕ್ಷಿತ ಮಟ್ಟದ ಯಶಸ್ಸು ಸಿಗದಿದ್ದರೂ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿತ್ತು.

ಜೀ5 ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಆಗಮನದ ಕುರಿತು ಸುಳಿವು ನೀಡಿದ್ದು, ದರ್ಶನ್ ಅವರ ಜನಪ್ರಿಯ ಸಂಭಾಷಣೆಯನ್ನು ಬಳಸಿ ಪ್ರಚಾರ ಆರಂಭಿಸಿದೆ. ಇದರಿಂದ ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ ಮೂಡಿದೆ.

ಚಿತ್ರದ ನಿರ್ಮಾಣ ಹಂತದಲ್ಲೇ ದರ್ಶನ್ ಬಂಧನವಾಗಿದ್ದರಿಂದ ಶೂಟಿಂಗ್ ಸ್ಥಗಿತಗೊಂಡಿತ್ತು. ನಂತರ ಹೈಕೋರ್ಟ್ ನೀಡಿದ ಜಾಮೀನಿನ ಅವಧಿಯಲ್ಲಿ ಅವರು ಉಳಿದ ಕೆಲಸಗಳನ್ನು ಪೂರ್ಣಗೊಳಿಸಿದ್ದರು. ಬಳಿಕ ಜಾಮೀನು ರದ್ದಾದ ಹಿನ್ನೆಲೆ ಮತ್ತೆ ಜೈಲು ಸೇರಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಬಿಡುಗಡೆಯಾದ ‘ಡೆವಿಲ್’ ಇದೀಗ ಒಟಿಟಿ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದೆ.

ಮಿಲನ ಪ್ರಕಾಶ್ ನಿರ್ದೇಶನದ ಈ ಚಿತ್ರದಲ್ಲಿ ರಚನಾ ರೈ ನಾಯಕಿಯಾಗಿ ನಟಿಸಿದ್ದು, ದರ್ಶನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಮುಂದಿನ 3 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮತ್ತೆ ಆರಂಭವಾಗಿದ್ದು, ಮುಂದಿನ ಮೂರು ಗಂಟೆಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ನಗರದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಗಲಿನ ವೇಳೆಯಲ್ಲೇ ಕತ್ತಲೆ ಆವರಿಸಿದಂತ ವಾತಾವರಣ ಕಂಡುಬಂದಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯಂತೆ, ಮುಂದಿನ ಕೆಲ ಗಂಟೆಗಳವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈಗಾಗಲೇ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪೊರೇಷನ್ ಸುತ್ತಮುತ್ತ ಮಳೆ ಆರಂಭವಾಗಿದ್ದು, ಪ್ಯಾಲೆಸ್ ಗ್ರೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕೆಲವೆಡೆ ವಾಹನ ಸಂಚಾರ ನಿಧಾನಗೊಂಡಿದ್ದು, ಪ್ರಮುಖ ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ಪ್ರಕಾರ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮರಗಳ ಕೆಳಗೆ ನಿಲ್ಲುವುದು, ಅಗತ್ಯವಿಲ್ಲದಿದ್ದರೆ ಹೊರಗಡೆ ಸಂಚರಿಸುವುದನ್ನು ತಪ್ಪಿಸುವುದು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸಲಹೆ ನೀಡಲಾಗಿದೆ.

ಜುಲೈ 6ಕ್ಕೆ ಸಿಇಟಿ ಸೀಟು ಹಂಚಿಕೆ ಅಣಕು ಫಲಿತಾಂಶ ಪ್ರಕಟ

ಬೆಂಗಳೂರು: ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಭಾಗವಾಗಿ ಆಪ್ಷನ್ (ಆಯ್ಕೆ/ಇಚ್ಛೆ) ಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದೆ.

ಜೂನ್ 30ರ ಬೆಳಿಗ್ಗೆ 10ರವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜುಲೈ‌ 6ರಂದು ಬೆಳಿಗ್ಗೆ 11ಕ್ಕೆ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟಿಸಲಾಗುತ್ತದೆ. ಜುಲೈ 9ರವರೆಗೆ ಇಚ್ಛೆ/ಆಯ್ಕೆ ಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು ಅವಕಾಶ ನೀಡಲಾಗುತ್ತದೆ. ಅದಾದ ಮೂರು ದಿನಗಳ ನಂತರ ಜುಲೈ 15ರಂದು ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೀಟ್ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ಸೋಮವಾರದ ನಂತರ ಆಪ್ಷನ್ಸ್ ದಾಖಲಿಸಲಿ. ಸದ್ಯ ನೀಟ್ ಪರೀಕ್ಷೆ ಕಡೆಗೆ ಗಮನ ಇರಲಿ ಎಂದು ಅವರು ಸಲಹೆ‌ ನೀಡಿದ್ದಾರೆ. ಕೃಷಿ, ಪಶು ವೈದ್ಯಕೀಯ, ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದೆ.

ಎಂಜಿನಿಯರಿಂಗ್ ಕೋರ್ಸ್ ಗಳ ಕರಡು ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅಂತಿಮ ಪಟ್ಟಿಗೆ ಕಾಯುತ್ತಿದ್ದೇವೆ. ಬಂದ ನಂತರ ಎಲ್ಲ ಮಾಹಿತಿಯನ್ನು ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲಾಗುವುದು. ಅಲ್ಲಿಯವರೆಗೂ ಅಭ್ಯರ್ಥಿಗಳು ಕಾಯುವ ಅಗತ್ಯ ಇಲ್ಲ. ಬದಲಿಗೆ ಪರ್ಯಾಯವಾಗಿ ಕರಡು ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಆಪ್ಷನ್ಸ್ ದಾಖಲಿಸಬಹುದು ಎಂದು ಅವರು ವಿವರಿಸಿದರು.

ಪ್ರೀ ಸುತ್ತಿನ ಕೌನ್ಸೆಲಿಂಗ್ ಇಲ್ಲ:

ನೀಟ್ ಮರು ಪರೀಕ್ಷೆ ಕಾರಣಕ್ಕೆ ವೈದ್ಯಕೀಯ ಅಲ್ಲದೆ ಇತರ ಕೋರ್ಸ್ ಓದುವ ಅಭ್ಯರ್ಥಿಗಳಿಗೆ ಆಗುತ್ತಿದ್ದ ವಿಳಂಬ ತಪ್ಪಿಸಲು ಪ್ರೀ ಸುತ್ತಿನ ಸೀಟು ಹಂಚಿಕೆಗೆ ಮಾಡಿದ್ದ ತೀರ್ಮಾನವನ್ನು ಕೈಬಿಟ್ಟಿದ್ದು, ಈ ಮೊದಲಿನ ಹಾಗೆಯೇ‌ ಮೊದಲ ಸುತ್ತಿನಿಂದಲೇ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಸನ್ನ ಅವರು ತಿಳಿಸಿದ್ದಾರೆ.

ಯಾರಿಗೆ ಇಚ್ಛೆ ಪ್ರಕಾರ ಸೀಟು ಸಿಗುತ್ತದೊ ಅಂತಹವರಿಗೆ ಹೋಗಿ ಪ್ರವೇಶ ಪಡೆಯಲು ಪ್ರೀ ಸುತ್ತಿನಲ್ಲಿ ಅವಕಾಶ ನೀಡುವ ಯೋಜನೆ ಇತ್ತು. ಆದರೆ ಈ ಬಗ್ಗೆ ಅನೇಕರು ಪ್ರೀ ಸುತ್ತಿನಲ್ಲಿ ಸೀಟು ಉನ್ನತೀಕರಣ ಸೇರಿದಂತೆ ಮೊದಲ ಸುತ್ತಿನಲ್ಲಿರುವ ಛಾಯ್ಸ್ ಗೆ ಅವಕಾಶ ನೀಡಬೇಕೆನ್ನುವ ಇಚ್ಚೆ ವ್ಯಕ್ತಪಡಿಸಿದ್ದರಿಂದ ಈ ತೀರ್ಮಾನ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಕೃಷಿ ಅಧಿಕಾರಿ: ದಿನಾಂಕ ವಿಸ್ತರಣೆ:

ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 25ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ. ಬಿ.ಇ ಬಯೊಟೆಕ್ನಾಲಜಿ ಪದವಿಯನ್ನು ಬಿ.ಟೆಕ್ ಬಯೋಟೆಕ್ನಾಲಜಿ ಪದವಿಗೆ ಸಮಾನವೆಂದು ಸರ್ಕಾರ ಪರಿಗಣಿಸಿದೆ. ಹೀಗಾಗಿ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಬಿ.ಇ ಬಯೋ ಟೆಕ್ನಾಲಜಿ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

ಜನರ ಅಹವಾಲುಗಳಿಗೆ ಸರ್ಕಾರದ ಹೊಸ ವೇದಿಕೆ: ‘ಪ್ರಜಾಸೇವೆ ಇಲಾಖೆ’ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಕುಂದುಕೊರತೆಗಳನ್ನು ತ್ವರಿತವಾಗಿ ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಎರಡನೇ ಸಚಿವ ಸಂಪುಟ ಸಭೆಯಲ್ಲಿ ‘ಪ್ರಜಾಸೇವೆ ಇಲಾಖೆ’ ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಈ ಹೊಸ ಇಲಾಖೆಯನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದರು. ಈ ಇಲಾಖೆ ಕೇವಲ ಅಹವಾಲುಗಳನ್ನು ಸಂಗ್ರಹಿಸುವ ಮಟ್ಟಕ್ಕೆ ಸೀಮಿತವಾಗದೆ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ ಎಂದು ಅವರು ಹೇಳಿದರು.

ಸರ್ಕಾರದ ಯೋಜನೆಯಂತೆ, ಪ್ರಜಾಸೇವೆ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು. ಜೊತೆಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಇಲಾಖೆಯ ಆಡಳಿತ ಮತ್ತು ಕಾರ್ಯನಿರ್ವಹಣೆಯ ಜವಾಬ್ದಾರಿ ವಹಿಸಲಿದ್ದಾರೆ. ಈ ಇಲಾಖೆ ‘ಪೋಸ್ಟ್‌ಮ್ಯಾನ್’ ರೀತಿಯಲ್ಲಿ ಕೇವಲ ಅರ್ಜಿಗಳನ್ನು ರವಾನಿಸುವ ಕೆಲಸ ಮಾಡುವುದಿಲ್ಲ. ಬದಲಿಗೆ ಜನರ ಅಹವಾಲುಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಹೊಸ ವ್ಯವಸ್ಥೆಯಡಿ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಚಿವರು ಸ್ಥಳೀಯ ಶಾಸಕರೊಂದಿಗೆ ವಾರಕ್ಕೊಮ್ಮೆ ಸಭೆ ನಡೆಸಲಿದ್ದಾರೆ. ಈ ಸಭೆಗಳಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಕುರಿತು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಬಳಿಕ ಸಂಬಂಧಪಟ್ಟ ಇಲಾಖೆಗಳ ಮೂಲಕ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.

ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಬಗ್ಗೆ ಮುಖ್ಯಮಂತ್ರಿ ಈ ಹಿಂದೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಇದೀಗ ಸಚಿವ ಸಂಪುಟವೂ ಅದಕ್ಕೆ ಅಧಿಕೃತ ಅನುಮೋದನೆ ನೀಡಿದ್ದು, ಇಲಾಖೆಗೆ ‘ಪ್ರಜಾಸೇವೆ ಇಲಾಖೆ’ ಎಂದು ನಾಮಕರಣ ಮಾಡಲಾಗಿದೆ.

ಈ ಇಲಾಖೆಯ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಅಹವಾಲುಗಳು ಹಾಗೂ ಬೇಡಿಕೆಗಳನ್ನು ಅಧಿಕೃತವಾಗಿ ಸಲ್ಲಿಸಲು ಅವಕಾಶ ದೊರೆಯಲಿದೆ. ಅರ್ಜಿಗಳನ್ನು ಹೇಗೆ ಸಲ್ಲಿಸಬೇಕು, ಯಾರನ್ನು ಸಂಪರ್ಕಿಸಬೇಕು, ಇಲಾಖೆಯ ಕಾರ್ಯವೈಖರಿ ಹೇಗಿರಲಿದೆ ಎಂಬುದರ ಕುರಿತು ಸರ್ಕಾರ ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿರುವ ಮುಖ್ಯಮಂತ್ರಿ, ರಾಜ್ಯದಲ್ಲಿ ಪ್ರತಿದಿನ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದಲೇ ಈ ಹೊಸ ಇಲಾಖೆಯನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

error: Content is protected !!