ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಬ್ಬಳ್ಳಿ ಘಟಕದ ಅಧ್ಯಕ್ಷರು ಹಾಗೂ ಸಂಘಟನಾ ಚತುರರೆಂದೇ ಗುರುತಿಸಿಕೊಂಡಿರುವ ಎಂ.ಎಚ್. ಜಂಗ್ಲಿ ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ವೆಂಕಪ್ಪ ಬಳ್ಳಾರಿ ಅವರು ಜಂಗ್ಲಿಯವರನ್ನು ಸನ್ಮಾನಿಸಿ ಮಾತನಾಡಿ, ಶಿಕ್ಷಕರ ಸಂಘಟನೆ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಅವರು ಸಲ್ಲಿಸಿರುವ ಸೇವೆ ಅನನ್ಯವಾಗಿದೆ ಎಂದು ಶ್ಲಾಘಿಸಿದರು.
ಜಂಗ್ಲಿಯವರು ತಮ್ಮ ಸೇವಾವಧಿಯಲ್ಲಿ ಶಿಕ್ಷಕರ ಹಿತಾಸಕ್ತಿಗಳ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸಿದ್ದು, ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ಶಿಕ್ಷಕರ ಸಮುದಾಯದ ವಿಶ್ವಾಸ ಗಳಿಸಿದ್ದಾರೆ. ಅವರ ನಿಸ್ವಾರ್ಥ ಸೇವಾ ಮನೋಭಾವ ಹಾಗೂ ನಾಯಕತ್ವ ಗುಣಗಳು ಇತರರಿಗೆ ಮಾದರಿಯಾಗಿವೆ ಎಂದು ಹೇಳಿದರು.
ನಿವೃತ್ತಿ ಜೀವನವು ಜಂಗ್ಲಿಯವರಿಗೆ ಆರೋಗ್ಯ, ನೆಮ್ಮದಿ, ಸಂತೋಷ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಜು ಕಂಟಿಗೊಣ್ಣವರ, ಪ್ರಲ್ಹಾದ ಗೆಜ್ಜಿ, ಅಮೀರನಾಯಕ, ಮುತ್ತು ಮಲಕಶೆಟ್ಟಿ, ರಾಜು ನರಗುಂದ, ಕರೀಮಸಾಬ ಸುಣಗಾರ, ಎಸ್.ಎಸ್. ಪಾರ್ವತಿಮಠ, ರಾಜಕುಮಾರ ಸೊಪಡ್ಲ, ಎಸ್.ಎಚ್. ಬಾದನಹಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಜಂಗ್ಲಿಯವರಿಗೆ ಶುಭ ಹಾರೈಕೆಗಳನ್ನು ಸಲ್ಲಿಸಿದರು.
“ಶಿಕ್ಷಕರ ಹಕ್ಕುಗಳ ರಕ್ಷಣೆ ಹಾಗೂ ಸಂಘಟನೆಯ ಬಲವರ್ಧನೆಗೆ ಎಂ.ಎಚ್. ಜಂಗ್ಲಿಯವರ ಕೊಡುಗೆ ಗಮನಾರ್ಹವಾಗಿದೆ. ಅವರ ಸೇವೆ ಶಿಕ್ಷಕರ ಸಮುದಾಯಕ್ಕೆ ಸದಾ ಸ್ಮರಣೀಯ.”
– ಬಸವರಾಜ ವೆಂಕಪ್ಪ ಬಳ್ಳಾರಿ, ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

