ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಹೊಸೂರು ಗ್ರಾಮದ 14 ರೈತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ, 2013ರ ಭೂಸ್ವಾಧೀನ ಕಾಯ್ದೆಯ ನಿಯಮಗಳನ್ನು ಸರ್ಕಾರ ಸಮರ್ಪಕವಾಗಿ ಪಾಲಿಸಿರುವುದೇ? ಎಂದು ಖಾರವಾಗಿ ಪ್ರಶ್ನೆ ಮಾಡಿದೆ.
ಅರ್ಜಿದಾರ ರೈತರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಎಚ್. ಪ್ರಕಾಶ್, “ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸದೇ ಸರ್ಕಾರ ಭೂಸ್ವಾಧೀನಕ್ಕೆ ಮುಂದಾಗಿದೆ. ಈ ಯೋಜನೆಯ ಮೂಲಕ ಸರ್ಕಾರವೇ ಸುಮಾರು ₹34,000 ಕೋಟಿ ಲಾಭ ಪಡೆಯುವ ಉದ್ದೇಶ ಹೊಂದಿದೆ” ಎಂದು ವಾದಿಸಿದರು.
ಈ ವೇಳೆ ನ್ಯಾಯಪೀಠ, “ಈ ಯೋಜನೆಗೆ 2013ರ ಭೂಸ್ವಾಧೀನ ಕಾಯ್ದೆಯ ಎಲ್ಲ ನಿಯಮಗಳನ್ನು ಪಾಲಿಸಲಾಗಿದೆಯೇ? ಸೆಕ್ಷನ್ 10ಎ ಅಡಿಯಲ್ಲಿ ವಿನಾಯಿತಿ ಪಡೆಯಲು ಇದು ನಿಜವಾಗಿಯೂ ಗ್ರಾಮೀಣ ವಸತಿ ಯೋಜನೆಯೇ?” ಎಂದು ಸರ್ಕಾರವನ್ನು ಪ್ರಶ್ನಿಸಿತು.
ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, “ಬಹುತೇಕ ರೈತರು ಈಗಾಗಲೇ ಭೂಸ್ವಾಧೀನಕ್ಕೆ ಸಮ್ಮತಿ ನೀಡಿದ್ದಾರೆ. ಸೆಕ್ಷನ್ 10ಎ ಅಡಿಯಲ್ಲಿ ಅಗತ್ಯ ವಿನಾಯಿತಿ ಪಡೆಯಲಾಗಿದೆ. ಪರಿಹಾರದ ಮೊತ್ತ ಇನ್ನೂ ಅಂತಿಮವಾಗಿಲ್ಲ. ಅಂತಿಮ ತೀರ್ಮಾನವಾಗುವವರೆಗೂ ಅರ್ಜಿದಾರ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ” ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.
ಸರ್ಕಾರದ ಈ ಭರವಸೆಯನ್ನು ದಾಖಲಿಸಿಕೊಂಡ ಹೈಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.

