ಬೆಂಗಳೂರು: ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬ ವದಂತಿಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಳ್ಳಿಹಾಕಿದ್ದಾರೆ. ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ತಮಿಳುನಾಡು ಕಾಂಗ್ರೆಸ್ ಶಾಸಕರು ಈಗಲ್ಟನ್ ರೆಸಾರ್ಟ್ಗೆ ಬಂದಿದ್ದಾರೆ ಎನ್ನುವ ಮಾಹಿತಿ ಸಂಪೂರ್ಣ ತಪ್ಪು ಎಂದು ಹೇಳಿದರು.
ಈಗಲ್ಟನ್ ರೆಸಾರ್ಟ್ಗೆ ಯಾರೂ ಬಂದಿಲ್ಲ. ಆ ರೆಸಾರ್ಟ್ ಸದ್ಯ ದುರಸ್ತಿ ಕಾಮಗಾರಿಗಾಗಿ ಮುಚ್ಚಲಾಗಿದೆ. ಶಾಸಕರು ಹೈದರಾಬಾದ್ಗೆ ಹೋಗಿದ್ದಾರೆ ಎಂದು ಟಿವಿಯಲ್ಲಿ ನೋಡಿದ್ದೇನೆ ಅಷ್ಟೇ. ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಪಕ್ಷದ ಹೈಕಮಾಂಡ್ನವರೂ ಸಹ ನನ್ನೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ತಿಳಿಸಿದರು.
ಪಕ್ಷದ ಹೈಕಮಾಂಡ್ ಮಾತನಾಡಿದ್ದರೆ ಅದು ಬೇರೆ ವಿಚಾರವಾಗುತ್ತಿತ್ತು. ಆಗ ನಾನು ಪಕ್ಷದ ನಿರ್ಧಾರದಂತೆ ನಡೆದುಕೊಳ್ಳುತ್ತಿದ್ದೆ. ಆದರೆ ಈ ವಿಚಾರದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ. ಪ್ರಚಾರಕ್ಕೆ ಹೋಗಲು ಹೇಳಿದ್ದರು, ಹೋಗಿದ್ದೆ. ಪ್ರಣಾಳಿಕೆ ಬಿಡುಗಡೆಗೆ ಕರೆದಿದ್ದರು, ಅದಕ್ಕೂ ಹೋಗಿದ್ದೆ. ಇದನ್ನು ಬಿಟ್ಟರೆ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ರಾಜ್ಯಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಜನ್ಮದಿನ ಇದ್ದರೆ ಒಳ್ಳೆಯದಾಗಲಿ. ಭಗವಂತ ಅವರಿಗೆ ಆರೋಗ್ಯ ಮತ್ತು ಸುಖ ನೀಡಲಿ ಎಂದು ಹಾರೈಸಿದರು.
ಆದರೆ ರಾಜಕೀಯವಾಗಿ ಅವರ ವಿಚಾರಧಾರೆ ಬೇರೆ, ನಮ್ಮ ವಿಚಾರಧಾರೆ ಬೇರೆ ಎಂದು ಡಿಸಿಎಂ ಹೇಳಿದರು. ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ನಾಯಕರನ್ನು ಕರೆದು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಇದೇ ರೀತಿಯ ಪ್ರಕ್ರಿಯೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.

