Home Blog Page 3

ಎಸ್ಸಿ-ಎಸ್ಟಿ ಸಮುದಾಯಗಳ ಮಾರಾಮಾರಿ ಕೇಸ್: 21ಜನ ವಶಕ್ಕೆ, ಗ್ರಾಮದಲ್ಲಿ ಆತಂಕದ ಛಾಯೆ!

0

ಗದಗ:- ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕ್ಷುಲ್ಲಕ ನೀರಿನ ವಿಚಾರಕ್ಕೆ ಕಿರಿಕ್ ಉಂಟಾಗಿ ಎಸ್ಸಿ-ಎಸ್ಟಿ ಸಮುದಾಯಗಳ ನಡುವೆ ಭೀಕರ ಮಾರಾಮಾರಿ ನಡೆದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಸೋಮವಾರ ಜರುಗಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಒಟ್ಟು 33 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಮುಂಡರಗಿ ತಾಲೂಕು ಆಸ್ಪತ್ರೆ ಮತ್ತು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬೆನ್ನಲ್ಲೇ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭಾರೀ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಎಸ್, ಸೋಮವಾರ ಸಂಜೆ, ಎಸ್ಸಿ ಸಮುದಾಯದ ಯುವಕನೋರ್ವ, ಎಸ್ಟಿ ಸಮುದಾಯದ ಜಮೀನಿನಲ್ಲಿರುವ ಬೋರ್‌ವೆಲ್ ಬಳಿ ನೀರು ಕುಡಿಯಲು ತೆರಳಿದ ವೇಳೆ ಮಾತಿನ ಚಕಮಕಿ ಉಂಟಾಗಿದೆ. ಈ ಸಣ್ಣ ಗಲಾಟೆ ಕೆಲವೇ ಕ್ಷಣಗಳಲ್ಲಿ ತೀವ್ರ ಸ್ವರೂಪ ಪಡೆದು ಎರಡು ಸಮುದಾಯಗಳ ನಡುವೆ ಕಿಚ್ಚನ್ನು ಹಬ್ಬಿಸಿದೆ. ಅಲ್ಲದೇ ಗಲಾಟೆಯಲ್ಲಿ ಜನರು, ಪರಸ್ಪರ ಕಲ್ಲು ತೂರಾಟ, ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯಿಂದಾಗಿ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಇನ್ನೂ ಘರ್ಷಣೆಯಲ್ಲಿ ಗಾಯಗೊಂಡ ಎಸ್ಟಿ ಸಮುದಾಯದ 9 ಜನರು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಎಸ್ಸಿ ಸಮುದಾಯದ 24 ಜನರು ಚಿಕಿತ್ಸೆ ಪಡೆಯುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೂ ಗಾಯಾಳುಗಳನ್ನು ನೋಡಲು ಆಸ್ಪತ್ರೆಗೆ ಭೇಟಿ ನೀಡಿದವರ ಮನಸ್ಸು ಮರುಕ ಹುಟ್ಟುವಂತೆ ಮಾಡಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಗದಗ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಜೊತೆಗೆ ಘಟನೆಯ ಕುರಿತು ಸಮಾಜ ಕಲ್ಯಾಣ ಇಲಾಖೆಗೆ ಸವಿಸ್ತಾರ ವರದಿ ಸಲ್ಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣ ವರದಿ ಕೇಳಿದೆ.

ಘಟನೆ ಬಳಿಕ ಚಿಕ್ಕವಡ್ಡಟ್ಟಿ ಗ್ರಾಮವು ಬೂದಿ ಮುಚ್ಚಿದ ಕೆಂಡದಂತಿದ್ದು, ಯಾವುದೇ ಅನಾಹುತ ಸಂಭವಿಸದಿರಲು ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಿ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಗ್ರಾಮದಲ್ಲಿ ಪೊಲೀಸರು ಸತತ ಗಸ್ತು ತಿರುಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಡಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು, ಪ್ರಕರಣ ಸಂಬಂಧ 21 ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧನ ಭೀತಿಯಿಂದ ಕೆಲ ಯುವಕರು ಗ್ರಾಮ ತೊರೆದು ಹೋಗಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ. ಇನ್ನೂ ಕೆಲ ಶಂಕಿತರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಘಟನೆ ಬಗ್ಗೆ ಗದುಗಿನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, “ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದ ಈ ಘರ್ಷಣೆ ಪ್ರಕರಣದಲ್ಲಿ ಎರಡು ಕಡೆಯಿಂದ ದೂರು ದಾಖಲಾಗಿದ್ದು, ಈಗಾಗಲೇ 21 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹಳೆ ವೈಷಮ್ಯ ಹಾಗೂ ನೀರಿನ ವಿಚಾರವೇ ಈ ಗಲಾಟೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಸವಿಸ್ತಾರ ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆರ್‌ಸಿಬಿಗೆ ಕೆಎಂಎಫ್ ಸಾಥ್: ನಂದಿನಿಗೆ ಅಂತಾರಾಷ್ಟ್ರೀಯ ವೇದಿಕೆ! ಸಿದ್ದರಾಮಯ್ಯ ಸಂತಸ

ಬೆಂಗಳೂರು: ಐಪಿಎಲ್ ಹಬ್ಬದ ಸಂಭ್ರಮ ಶುರುವಾಗುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳ ಉತ್ಸಾಹ ಹೆಚ್ಚಾಗಿದೆ.

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರರಾಗಿದ್ದಾರೆ.  ಈ ನಡುವೆ ಕನ್ನಡಿಗರ ಹೆಮ್ಮೆಯ ಕೆಎಂಎಫ್ 2026ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಗೆ ಪ್ರಾಯೋಜಕತ್ವ ನೀಡಿದ್ದು, ನಂದಿನಿ ಉತ್ಪನ್ನಗಳಿಗೆ ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ವೇದಿಕೆ ಸಿಕ್ಕಂತಾಗಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಮಾತನಾಡಿ, 2026ರ ಆವೃತ್ತಿಯಲ್ಲಿ ಆರ್​ಸಿಬಿಗೆ KMF ಪ್ರಾಯೋಜಕತ್ವ ನೀಡಿದೆ. ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ. ಆರ್​ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ, ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯವಾಗಲಿದೆ. ವಿರಾಟ್​ ​ಕೊಹ್ಲಿ, ರಜತ್​ ಪಾಟಿದಾರ್, ದೇವದತ್ತ ಪಡಿಕಲ್​ರಿಂದ KMF ಉತ್ಪನ್ನ ಪ್ರಚಾರಕ್ಕೆ ಮುಂದಾಗಿದ್ದೇವೆ.​ 4 ಕೋಟಿ ರೂ ವೆಚ್ಚದಲ್ಲಿ KMF ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕರ್ನಾಟಕದ ಹೆಮ್ಮೆಯ ನಂದಿನಿ ಬ್ರ್ಯಾಂಡ್, ಕಳೆದ ಐಪಿಎಲ್ ಸೀಸನ್‌ನ ಚಾಂಪಿಯನ್ ತಂಡ ಆರ್‌ಸಿಬಿಯ ಅಧಿಕೃತ ಡೈರಿ ಪಾಲುದಾರನಾಗಿದೆ. ನಂದಿನಿಯ ವಿಶ್ವಾಸಾರ್ಹತೆ ಮತ್ತು ಆರ್‌ಸಿಬಿಯ ಕ್ರೀಡಾ ಬದ್ಧತೆ ಈ ಬಾರಿಯ ಐಪಿಎಲ್‌ನ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ ಮೂರು ಗಂಟೆಗಳೊಳಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಭಾರೀ ಮಳೆಯ ಹಿನ್ನೆಲೆ ಕಲಬುರಗಿ, ಯಾದಗಿರಿ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ʼಗೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ

0

ನವದೆಹಲಿ: ದೆಹಲಿ ವಿಧಾನಸಭೆ ಸಂಕೀರ್ಣ ಹಾಗೂ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ ಸುಮಾರು 7:28ರ ಸುಮಾರಿಗೆ ವಿಧಾನಸಭೆ ಸಂಕೀರ್ಣಕ್ಕೆ ಮೊದಲ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಇದರ ಜೊತೆಗೆ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಅಧಿಕೃತ ಇಮೇಲ್ ಖಾತೆಗೂ ಇದೇ ರೀತಿಯ ಸಂದೇಶ ಬಂದಿದೆ. ಸಂದೇಶದಲ್ಲಿ ವಿಧಾನಸಭಾ ಮೆಟ್ರೋ ನಿಲ್ದಾಣದ ಹೆಸರನ್ನೂ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ವಿಧಾನಸಭೆ ಆವರಣ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳಮತ್ತು ಪೊಲೀಸ್ ತಂಡಗಳನ್ನು ತಕ್ಷಣವೇ ನಿಯೋಜಿಸಲಾಗಿದೆ.

ಘಟನೆಯ ಹಿನ್ನೆಲೆ ದೆಹಲಿ ನಗರಾದ್ಯಂತ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಸಾರ್ವಜನಿಕ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಇಮೇಲ್ ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ಭದ್ರತಾ ಸಂಸ್ಥೆಗಳು ತನಿಖೆ ಆರಂಭಿಸಿವೆ. ಬೆದರಿಕೆ ನಿಜವಾಗಿದೆಯೇ ಅಥವಾ ವದಂತಿಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

0

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಈ ಘಟನೆ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ ಅವರನ್ನೇ ಕೊಲೆ ಮಾಡಿ, ಕಾರಿನಲ್ಲಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆದಿಂದ ರಾಜು ಬೋಳಶೆಟ್ಟಿ ನಾಪತ್ತೆಯಾಗಿರುವುದು ಈ ಅನುಮಾನಕ್ಕೆ ಕಾರಣವಾಗಿದೆ.

ರಾಜು ಬೋಳಶೆಟ್ಟಿ ಅವರಿಗೆ ಸೇರಿದ ಕಾರು ರಾಮಾಪುರದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಪತ್ತೆಯಾಗಿದೆ. ಕಾರಿನೊಳಗಿನ ಶವ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಗುರುತಿಸಲು ಅಸಾಧ್ಯವಾಗಿರುವ ಸ್ಥಿತಿಯಲ್ಲಿದೆ. ಕಿಡಿಗೇಡಿಗಳು ಬೇರೆಡೆ ಕೊಲೆ ಮಾಡಿ, ಬಳಿಕ ಶವವನ್ನು ಇಲ್ಲಿ ತಂದು ಪೆಟ್ರೋಲ್ ಸುರಿದು ಸುಟ್ಟಿರಬಹುದೆಂದು ಶಂಕಿಸಲಾಗಿದೆ. ಘಟನೆಯು ಪೂರ್ವ ಯೋಜಿತವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಘಟನೆ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಗುಂಜನ್ ಆರ್ಯ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಬೆರಳಚ್ಚು ತಜ್ಞರ ತಂಡ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಕಾರಿನಲ್ಲಿದ್ದ ಶವ ಸಂಪೂರ್ಣ ಸುಟ್ಟುಹೋಗಿರುವುದರಿಂದ ಅದು ಯಾರದ್ದು ಎಂಬುದು ಇನ್ನೂ ಖಚಿತವಾಗಿಲ್ಲ. ವಿಧಿವಿಜ್ಞಾನ ವರದಿ ಬಂದ ಬಳಿಕವೇ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಕೀಯದಲ್ಲಿ ಸಕ್ರಿಯವಾಗಿರದ ರಾಜು ಬೋಳಶೆಟ್ಟಿ ಪ್ರಗತಿಪರ ರೈತನಾಗಿ ಗುರುತಿಸಿಕೊಂಡಿದ್ದರು. ಗ್ರಾಮದಲ್ಲಿ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆತು ಬದುಕುತ್ತಿದ್ದರು. ಮಕ್ಕಳ ವಿದ್ಯಾಭ್ಯಾಸಕ್ಕೂ ಸಹಾಯ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ರಾಜು ಬೋಳಶೆಟ್ಟಿ ಅವರ ಸ್ನೇಹಿತ ಶ್ರೀಧರ್, ಪತ್ತೆಯಾದ ಕಾರು ರಾಜು ಅವರದ್ದೇ ಎಂದು ದೃಢಪಡಿಸಿದ್ದಾರೆ. ಒಟ್ಟಾರೆ, ಈ ಘಟನೆ ಹತ್ಯೆಯೋ ಅಥವಾ ಇನ್ನಾವುದೋ ಕಾರಣವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಂಪೂರ್ಣ ತನಿಖೆ ಬಳಿಕವೇ ನಿಜಾಂಶ ಹೊರಬೀಳಲಿದೆ.

ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ!

0

ಬೀದರ್: ಬೀದರ್ ನಲ್ಲಿ ಘೋರ ದುರಂತ ಸಂಭವಿಸಿದ್ದು, ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.

ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿಯಾಗಿದ್ದು, ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿಯಾಗಿದ್ದ ಅನಿಷ್ಕಾರ್ ಚೌಹಾಣ್, ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.

ಸದ್ಯ ಬ್ರಿಮ್ಸ್ ವಸತಿ ನಿಲಯಕ್ಕೆ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ವಿಧಿವಿಜ್ಞಾನ ತಂಡ ಕೂಡ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

ಇ-ಖಾತೆಯಲ್ಲಿ ಲಂಚಾವತಾರ? ಸದನದಲ್ಲಿ ಫೋನ್ ಪೇ ದಾಖಲೆ ಪ್ರದರ್ಶನ ಮಾಡಿದ ಆರ್ ಅಶೋಕ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪಾಲಿಕೆಯಲ್ಲಿ ಇ-ಖಾತಾ ಪ್ರಕ್ರಿಯೆಯಲ್ಲಿ ಲಂಚಾವತಾರ ನಡೆಯುತ್ತಿದೆ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಆರೋಪಕ್ಕೆ ಸಾಕ್ಷಿಯಾಗಿ ಸದನದಲ್ಲೇ ಫೋನ್ ಪೇ ಹಣ ವರ್ಗಾವಣೆಯ ದಾಖಲೆಗಳನ್ನು ಪ್ರದರ್ಶಿಸಿದರು.

ರಾಜ್ಯ ಸರ್ಕಾರದಲ್ಲಿ ಲಂಚವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿದ ಅಶೋಕ್, “ಇಲ್ಲಿದೆ ಲಂಚದ ಸಾಕ್ಷಿ” ಎಂದು ಸದನದಲ್ಲಿ ಅಧಿಕಾರಿಗಳ ವಿರುದ್ಧ ಆರೋಪ ಹೊರಿಸಿದರು.

ಬಿಬಿಎಂಪಿಯ ರಮೇಶ್ ಎಂಬ ಅಧಿಕಾರಿಯು 30,000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಿ, ಫೋನ್ ಪೇ ಮೂಲಕ ಹಣ ವರ್ಗಾವಣೆಗೊಂಡಿರುವ ದಾಖಲೆಗಳನ್ನು ಬಿಡುಗಡೆ ಮಾಡಿದರು.

15,000 ರೂಪಾಯಿ ಲಂಚ ನೀಡಿದರೂ ಇ-ಖಾತಾ ಅರ್ಜಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿದರು. ಇದು ಸರ್ಕಾರದ ಲಂಚಾವತಾರದ ಸ್ಪಷ್ಟ ಉದಾಹರಣೆ ಎಂದು ಅಶೋಕ್ ಹೇಳಿದರು.

ಇನ್ನೂ, ಎಆರ್‌ಒ ನಂಜುಡಪ್ಪ ಎಂಬ ಅಧಿಕಾರಿ ಲೇಔಟ್ ಮಾಡುವವರಿಗೆ ಪ್ರತಿ ಸೈಟ್‌ಗೆ 30 ರಿಂದ 40 ಸಾವಿರ ರೂಪಾಯಿ ವಸೂಲಿ ಮಾಡುತ್ತಿರುವ ಬಗ್ಗೆ ಪೆನ್ ಡ್ರೈವ್ ಮೂಲಕ ದಾಖಲೆಗಳನ್ನು ಪ್ರದರ್ಶಿಸಿದರು.

ಪ್ರತಿಯೊಂದು ವಾರ್ಡ್‌ನಲ್ಲೂ ಇ-ಖಾತಾ ಪ್ರಕ್ರಿಯೆಗೆ ಲಂಚದ ಬೇಡಿಕೆ ಇಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ದಂಧೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ, ತೆರಿಗೆ ಕಟ್ಟದ ಪ್ರಭಾವಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಬಡವರ ಮೇಲೆ ಮಾತ್ರ ಕಠಿಣ ಕ್ರಮ ಜಾರಿಯಾಗಿದೆ ಎಂದು ಟೀಕಿಸಿದರು. ಎರಡು ವರ್ಷಗಳಿಂದ ತೆರಿಗೆ ಕಟ್ಟದ ಮನೆ ಮಾಲೀಕರಿಗೆ ನೋಟಿಸ್ ನೀಡಿ ಮನೆ ಹರಾಜು ಮಾಡುವ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಅಶೋಕ್ ವಿವರಿಸಿದರು.

Gold Price: ಮತ್ತೆ ಕುಸಿಯಿತು ಚಿನ್ನದ ಬೆಲೆ! ತಡ ಬೇಡ, ಬಂಗಾರ ಖರೀದಿ ಇಂದೇ ಮಾಡಿ 

ಬೆಂಗಳೂರು: ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ನಡುವೆಯೂ ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸತತ ಏರಿಕೆಯಲ್ಲಿ ಸಾಗುತ್ತಿದ್ದ ಚಿನ್ನದ ದರ ಇದೀಗ ಗಣನೀಯವಾಗಿ ಕುಸಿದು, 1 ಲಕ್ಷ ರೂಪಾಯಿ ಗಡಿಯತ್ತ ಚಲಿಸುತ್ತಿದೆ.

ಯುದ್ಧದ ಪರಿಣಾಮದಿಂದ ಗಗನಕ್ಕೇರಿದ್ದ ಚಿನ್ನದ ಬೆಲೆ ಈಗ ಇಳಿಕೆಯಾಗಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಈ ದರ ಕುಸಿತದಿಂದ ವಿಶೇಷವಾಗಿ ಆಭರಣ ಖರೀದಿಸಲು ಕಾಯುತ್ತಿದ್ದವರ ಮುಖದಲ್ಲಿ ಮಂದಹಾಸ ಮೂಡಿದೆ. ಇಂದು ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ:

  • 22 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹2,700 ಇಳಿಕೆ (ಪ್ರತಿ ಗ್ರಾಂ ₹270 ಕುಸಿತ)
  • 24 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹2,940 ಇಳಿಕೆ (ಪ್ರತಿ ಗ್ರಾಂ ₹294 ಕುಸಿತ)

ಪ್ರಸ್ತುತ ದರಗಳು:

  • 22 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹1,28,650
  • 24 ಕ್ಯಾರೆಟ್ ಚಿನ್ನ: 10 ಗ್ರಾಂಗೆ ಸುಮಾರು ₹1,40,350

ಜಾಗತಿಕ ಮಾರುಕಟ್ಟೆಯಲ್ಲಿ ಯುದ್ಧ ಪರಿಸ್ಥಿತಿ, ಡಾಲರ್ ಮೌಲ್ಯದ ಏರಿಳಿತ ಮತ್ತು ಹೂಡಿಕೆದಾರರ ಮನೋಭಾವದ ಬದಲಾವಣೆಗಳಿಂದ ಚಿನ್ನದ ಬೆಲೆಯಲ್ಲಿ ಈ ರೀತಿಯ ಕುಸಿತ ಕಂಡುಬರುತ್ತಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. ಒಟ್ಟಾರೆ, ಇತ್ತೀಚಿನ ದಿನಗಳಲ್ಲಿ ನಿರಂತರ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಇದೀಗ ಚಿನ್ನದ ದರ ಇಳಿಕೆ ಸ್ವಲ್ಪ ನಿರಾಳತೆ ತಂದಿದೆ.

ವಯನಾಡು ಸಂತ್ರಸ್ತರಿಗೆ ಮತ್ತೆ ₹10 ಕೋಟಿ: ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

ಬೆಂಗಳೂರು: ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ₹10 ಕೋಟಿ ಹೆಚ್ಚುವರಿ ಅನುದಾನ ನೀಡಿದ ವಿಚಾರ ಇದೀಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಭಾರತೀಯ ಜನತಾ ಪಕ್ಷ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ನೀರಗಂಟಿಗಳ ಸಂಬಳ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾದ ಸರ್ಕಾರ, ಇತರ ರಾಜ್ಯಕ್ಕೆ ಅನುದಾನ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಬಳಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ವಿಶೇಷವಾಗಿ, ಪ್ರಿಯಾಂಕ ಗಾಂಧಿ ಪ್ರತಿನಿಧಿಸುವ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಅನುದಾನ ನೀಡಿರುವುದನ್ನು ಪಕ್ಷ ಪ್ರಶ್ನಿಸಿದೆ.

ರಾಜ್ಯದ ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿ, ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವಂತಹ ಒಳರಾಜ್ಯ ಸಮಸ್ಯೆಗಳತ್ತ ಮೊದಲಿಗೆ ಗಮನ ಹರಿಸಬೇಕು. ನಂತರ ಇತರ ರಾಜ್ಯಗಳಿಗೆ ಸಹಾಯ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಬಜೆಟ್ ಅಧಿವೇಶನ ಮಾ.26ಕ್ಕೆ ಮೊಟಕುಗೊಳಿಸಲು ತೀರ್ಮಾನ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಮಾರ್ಚ್ 26ರಂದು ಮುಕ್ತಾಯಗೊಳಿಸಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಪ್ರಕಟಿಸಿದ್ದಾರೆ.

ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನಗಳ ಕುರಿತು ಸದನದಲ್ಲಿ ಮಾಹಿತಿ ನೀಡಿದ ಅವರು, ಬಜೆಟ್ ಮೇಲಿನ ಚರ್ಚೆ ಇಂದು ಕೊನೆಗೊಳ್ಳಲಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆಗೆ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

ಮಾರ್ಚ್ 27ರವರೆಗೆ ಅಧಿವೇಶನ ಮುಂದುವರಿಸುವ ಯೋಜನೆ ಇದ್ದರೂ, ಇದೀಗ ಒಂದು ದಿನ ಮೊಟಕುಗೊಳಿಸಿ ಮಾರ್ಚ್ 26ಕ್ಕೆ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ.

ಎರಡು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಹಿನ್ನೆಲೆ, ಪ್ರಚಾರ ಕಾರ್ಯಕ್ಕೆ ಸದಸ್ಯರು ತೆರಳಬೇಕಿರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಎಲ್ಲಾ ಪಕ್ಷಗಳ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ.

ಈ ಮೂಲಕ 13 ದಿನಗಳ ಕಾಲ ನಡೆಯಬೇಕಿದ್ದ ಅಧಿವೇಶನವನ್ನು 12 ದಿನಗಳಿಗೆ ಸೀಮಿತಗೊಳಿಸಿ ಮುಕ್ತಾಯಗೊಳಿಸಲಾಗುತ್ತಿದೆ.

error: Content is protected !!