Home Blog Page 3

ಪತ್ರಿಕೋದ್ಯಮಕ್ಕೆ ಕೃತಕ ಬುದ್ಧಿಮತ್ತೆಯ ಸವಾಲು: ಹಿರಿಯ ಪತ್ರಕರ್ತ ಅನಂತ ಎಸ್. ಕಾರ್ಕಳ

ವಿಜಯಸಾಕ್ಷಿ ಸುದ್ದಿ, ಗದಗ: ಪತ್ರಿಕೋದ್ಯಮವು ಸಾಂಪ್ರದಾಯಿಕ ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮತ್ತು ಸಾಮಾಜಿಕ ಜಾಲತಾಣಗಳತ್ತ ವೇಗವಾಗಿ ಸಾಗುತ್ತಿರುವ ಇಂದಿನ ಸಂದರ್ಭದಲ್ಲಿ, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಯಿಂದ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದೇ ಮಾಧ್ಯಮಗಳಿಗೆ ಅತಿ ದೊಡ್ಡ ಸವಾಲಾಗಿದೆ ಎಂದು ಹಿರಿಯ ಪತ್ರಕರ್ತ ಅನಂತ ಎಸ್. ಕಾರ್ಕಳ ಅಭಿಪ್ರಾಯಪಟ್ಟರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಹಿರಿಯ ಪತ್ರಕರ್ತ ಎಚ್.ಎಂ. ಶರೀಫನವರ ಜನ್ಮದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಅವರ ಆಪ್ತ ಬಳಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಹಾಗೂ ಯೂಟ್ಯೂಬ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳು ಜನರನ್ನು ಹೆಚ್ಚು ಸೆಳೆಯುತ್ತಿರುವ ಪರಿಣಾಮ ಮುಖ್ಯವಾಹಿನಿ ಮಾಧ್ಯಮಗಳು ಓದುಗರಿಂದ ದೂರವಾಗುತ್ತಿರುವುದು ಮಾಧ್ಯಮ ಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತ ಆನಂದ ಸಾಲಿಗ್ರಾಮ ಮಾತನಾಡಿ, ಬಹುತೇಕ ಸುದ್ದಿ ಸಂಸ್ಥೆಗಳು ಡಿಜಿಟಲ್ ವೇದಿಕೆಗಳಿಗೆ ಆದ್ಯತೆ ನೀಡುತ್ತಿರುವುದರಿಂದ ಓದುಗರು ಪತ್ರಿಕೆಗಳಿಗಿಂತ ಮೊಬೈಲ್ ಆ್ಯಪ್‌ಗಳು ಹಾಗೂ ವೆಬ್‌ಸೈಟ್‌ಗಳ ಮೂಲಕ ಸುದ್ದಿಯನ್ನು ಪಡೆಯುತ್ತಿದ್ದಾರೆ. ರೀಲ್ಸ್ ಹಾಗೂ ಕಿರಿದಾದ ವಿಡಿಯೊಗಳ ಮೂಲಕ ಸುದ್ದಿ ನೀಡುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಸಾಂಪ್ರದಾಯಿಕ ಮಾಧ್ಯಮಗಳಿಗೆ ಸವಾಲಾಗಿದೆ ಎಂದು ಹೇಳಿದರು.

ಟಿವಿ9 ಜಿಲ್ಲಾ ವರದಿಗಾರ ಸಂಜಯ್ ಪಾಂಡ್ರೆ ಮಾತನಾಡಿ, ವರದಿಗಳನ್ನು ಸಿದ್ಧಪಡಿಸುವುದು ಹಾಗೂ ಮಾಹಿತಿಯನ್ನು ವಿಶ್ಲೇಷಿಸುವಲ್ಲಿ ಎಐ ಬಳಕೆ ಹೆಚ್ಚುತ್ತಿರುವುದರಿಂದ ಸತ್ಯಾಸತ್ಯತೆ ಪರಿಶೀಲಿಸುವುದು ಕಷ್ಟವಾಗುತ್ತಿದೆ ಎಂದು ತಿಳಿಸಿದರು.

ಜನಶ್ರೀ ಟೈಮ್ಸ್ ಸಂಪಾದಕ ಆನಂದಯ್ಯ ವಿರಕ್ತಿಮಠ ಮಾತನಾಡಿ, ಎಐ ತಂತ್ರಜ್ಞಾನ ನಕಲಿ ಸುದ್ದಿಗಳ (ಫೇಕ್ ನ್ಯೂಸ್) ಹಾವಳಿಯನ್ನು ಹೆಚ್ಚಿಸುವುದರ ಜೊತೆಗೆ ಪತ್ರಕರ್ತರ ಉದ್ಯೋಗಕ್ಕೂ ಆತಂಕ ತಂದೊಡ್ಡಿದೆ ಎಂದರು.

ಗದಗ ಜಿಲ್ಲೆಯ ಬಹುತೇಕ ಪತ್ರಿಕೆಗಳ ಕಾನೂನು ಸಲಹೆಗಾರ ಹಾಗೂ ನ್ಯಾಯವಾದಿ ಟಿ.ಎನ್. ಭಾಂಡಗೆ ಮಾತನಾಡಿ, ಡಿಜಿಟಲ್ ಜಾಹೀರಾತುಗಳ ಆದಾಯ ಗೂಗಲ್ ಹಾಗೂ ಮೆಟಾದಂತಹ ತಂತ್ರಜ್ಞಾನ ಕಂಪನಿಗಳ ಪಾಲಾಗುತ್ತಿರುವುದರಿಂದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಪತ್ರಕರ್ತ ಎಚ್.ಎಂ. ಶರೀಫನವರ, ಡಿಜಿಟಲ್ ಯುಗದಲ್ಲಿ ಸುದ್ದಿ ಸಂಸ್ಥೆಗಳು ಪೇವಾಲ್ (Paywall) ಹಾಗೂ ಚಂದಾದಾರಿಕೆ ಮಾದರಿಗಳತ್ತ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಪತ್ರಿಕೋದ್ಯಮ ಮತ್ತು ಮಾಧ್ಯಮಗಳ ಇಂದಿನ ಸವಾಲುಗಳ ಕುರಿತು ಸರ್ಕಾರ ಹಾಗೂ ಸಮಾಜದಲ್ಲಿ ಗಂಭೀರ ಚರ್ಚೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ತಮ್ಮ ಜನ್ಮದಿನವನ್ನು ಆಚರಿಸಿ ಗೌರವಿಸಿದ ಎಲ್ಲ ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ ಸ್ವಾಗತಿಸಿದರು. ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಸುರೇಶ ಕಡ್ಲಿಮಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ ಪೈ ಕಾರ್ಯಕ್ರಮ ನಿರೂಪಿಸಿದರು. ನ್ಯೂಸ್ 18 ಜಿಲ್ಲಾ ವರದಿಗಾರ ಸಂತೋಷ ಕೊಣ್ಣೂರ ವಂದಿಸಿದರು.

ಕಾರ್ಯಕ್ರಮದಲ್ಲಿ ಸುವರ್ಣ ಟಿವಿ ಜಿಲ್ಲಾ ವರದಿಗಾರ ಗಿರೀಶ ಕಮ್ಮಾರ, ರಿಪಬ್ಲಿಕ್ ಟಿವಿ ವರದಿಗಾರ ಮಂಜು ಪತ್ತಾರ, ಕ್ಯಾಮೆರಾಮೆನ್ ಮಂಜು ಸಾಳೇರ, ಶಂಭುಲಿಂಗಯ್ಯ, ವಿಜಯಸಾಕ್ಷಿ ವರದಿಗಾರ ಗೌಸ್ ಬೆಟಗೇರಿ, ಸ್ನೇಹ ಸುದ್ದಿ ಸಂಪಾದಕ ಗಣೇಶ ದೊಡ್ಡಮನಿ, ಪರಶುರಾಮ ಸೇರಿದಂತೆ ಜಿಲ್ಲೆಯ ವಿವಿಧ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಸೇವಾ ನಿಷ್ಠೆಯೇ ಜನರ ವಿಶ್ವಾಸದ ಅಡಿಪಾಯ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕಂದಾಯ ಇಲಾಖೆಯ ಸಿಬ್ಬಂದಿ ಪ್ರಾಮಾಣಿಕತೆ, ವಿಶ್ವಾಸಾರ್ಹತೆ ಹಾಗೂ ಸೇವಾ ಮನೋಭಾವದಿಂದ ಸಾರ್ವಜನಿಕರಿಗೆ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಜನರ ವಿಶ್ವಾಸ ಗಳಿಸಬೇಕು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಹೇಳಿದರು.

ಬುಧವಾರ ಶಿರಹಟ್ಟಿಯ ತಹಸೀಲ್ದಾರ್ ಕಚೇರಿಯಲ್ಲಿ ಕಂದಾಯ ಇಲಾಖೆ, ವೈದ್ಯರ ಹಾಗೂ ಪತ್ರಕರ್ತರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ಬಳಿಕ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನದ ಅಳವಡಿಕೆ, ಆನ್‌ಲೈನ್ ಸೇವೆಗಳ ವಿಸ್ತರಣೆ, ಭೂ ದಾಖಲೆಗಳ ಡಿಜಿಟಲೀಕರಣ, ಸೇವೆಗಳ ಸರಳೀಕರಣ ಹಾಗೂ ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತ್ವರಿತ ಹಾಗೂ ಸುಲಭ ಸೇವೆ ಒದಗಿಸಲು ಸಾಧ್ಯವಾಗುತ್ತಿದ್ದು, ಇಲಾಖೆ ಇನ್ನಷ್ಟು ಜನಸ್ನೇಹಿಯಾಗಲಿದೆ ಎಂದು ತಿಳಿಸಿದರು.

ವೈದ್ಯರ ಸೇವೆ ದೇವರ ಸೇವೆಗೆ ಸಮಾನವಾಗಿದ್ದು, ರೋಗಿಗಳ ನೋವು ನಿವಾರಿಸಿ ಜೀವ ಉಳಿಸುವ ಪವಿತ್ರ ಕಾರ್ಯವನ್ನು ಅವರು ಹಗಲು-ರಾತ್ರಿ ಎನ್ನದೆ ನಿರ್ವಹಿಸುತ್ತಿದ್ದಾರೆ. ಅವರ ತ್ಯಾಗ, ಸೇವಾ ಮನೋಭಾವ ಮತ್ತು ಕರ್ತವ್ಯನಿಷ್ಠೆಯನ್ನು ಸಮಾಜ ಗೌರವಿಸಬೇಕು ಎಂದು ಹೇಳಿದರು.

ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಸ್ತುನಿಷ್ಠ ಹಾಗೂ ಸಮಾಜದ ಹಿತ ಕಾಪಾಡುವ ವರದಿಗಳನ್ನು ಪ್ರಕಟಿಸುವ ಮೂಲಕ ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಡಾ. ಸುನೀಲ ಬುರಬುರೆ, ಡಾ. ಗೋಪಾಲರಾಜ, ಗ್ರೇಡ್-2 ತಹಸೀಲ್ದಾರ್ ವಿ.ಎ. ಮುಳಗುಂದಮಠ, ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ, ಸಂತೋಷ ಅಸ್ಕಿ, ಎಚ್.ಜೆ. ಭಾವಿಕಟ್ಟಿ, ಶಂಕರ ಮರಾಠೆ, ಸಂತೋಷ ಢೋಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವೈದ್ಯರ ದಿನಾಚರಣೆಗೆ ಮಕ್ಕಳಿಂದ ವಿಶಿಷ್ಟ ಗೌರವ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಪಟ್ಟಣದ ಎಂಜಿಎಂ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ದೀಪಾಲಿ ಪಾಟೀಲ ಅವರ ನೇತೃತ್ವದಲ್ಲಿ ಅಗಡಿ ಸನ್ ರೈಸ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಗೆ ಶುಭಾಶಯ ಕೋರಿದರು.

ಈ ವೇಳೆ ವಿದ್ಯಾರ್ಥಿಗಳು ವೈದ್ಯರೊಂದಿಗೆ ಕೇಕ್ ಕತ್ತರಿಸಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅಮೂಲ್ಯವಾಗಿದೆ ಎಂದು ಅಭಿನಂದಿಸಿದರು.

ಆಸ್ಪತ್ರೆಯ ವೈದ್ಯರು ಮಕ್ಕಳ ಶುಭಾಶಯವನ್ನು ಸ್ವೀಕರಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು, ಸ್ವಚ್ಛತೆ ಪಾಲಿಸುವುದು ಹಾಗೂ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅಗಡಿ ಸನ್ ರೈಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ಎಂಜಿಎಂ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ದೀಪಾಲಿ ಪಾಟೀಲ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಹಕಾರದ ಸಂಭ್ರಮಕ್ಕೆ ಆರೋಗ್ಯದ ಸ್ಪರ್ಶ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದನೇ ವರ್ಷದ ಸಂಭ್ರಮದ ಅಂಗವಾಗಿ ಲಕ್ಷ್ಮೇಶ್ವರದಲ್ಲಿ ಮಂಗಳವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಹಕಾರಿಗಳು ಹಾಗೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸುಮಾರು 100ಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.

ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳ ನಿ., ಬೆಂಗಳೂರು, ಗದಗ ಜಿಲ್ಲಾ ಸಹಕಾರಿ ಯೂನಿಯನ್, ಸಹಕಾರ ಇಲಾಖೆ, ಧಾರವಾಡ ಜಿಲ್ಲಾ ಕೇಂದ್ರ ಸಹಕಾರಿ (ಕೆಸಿಸಿ) ಬ್ಯಾಂಕ್, ಕೆಎಂಎಫ್ ಧಾರವಾಡ, ಲಕ್ಷ್ಮೇಶ್ವರ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ (ಟಿಎಪಿಸಿಎಂಎಸ್) ಹಾಗೂ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಟಿಎಪಿಸಿಎಂಎಸ್ ಅಧ್ಯಕ್ಷ ಸೋಮೇಶ ಉಪನಾಳ, ಸಹಕಾರಿ ಸಂಸ್ಥೆಗಳು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರ ಆರೋಗ್ಯ ಮತ್ತು ಕಲ್ಯಾಣಕ್ಕೂ ಆದ್ಯತೆ ನೀಡುತ್ತಿವೆ. ಉಚಿತ ಆರೋಗ್ಯ ಶಿಬಿರಗಳು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಆರಂಭಿಕ ಹಂತದಲ್ಲೇ ಕಾಯಿಲೆಗಳನ್ನು ಪತ್ತೆಹಚ್ಚಲು ನೆರವಾಗುತ್ತವೆ. ಸಹಕಾರ ಸಂಘಗಳ ಸದಸ್ಯರು ಯಶಸ್ವಿನಿ ಆರೋಗ್ಯ ಯೋಜನೆಯ ಸೌಲಭ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಿಬಿರದಲ್ಲಿ ಡಾ. ಪ್ರಿಯಾಂಕ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಿ, ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಟಿಎಪಿಸಿಎಂಎಸ್ ಉಪಾಧ್ಯಕ್ಷ ಶೇಖಣ್ಣ ಕಾಳೆ, ಹಿರಿಯ ಸಹಕಾರಿಗಳಾದ ಗದಿಗೆಪ್ಪ ಯತ್ನಳ್ಳಿ, ನಿರ್ದೇಶಕರಾದ ವಿರುಪಾಕ್ಷಪ್ಪ ಪಡಿಗೇರಿ, ಜಯಮ್ಮ ಕಳ್ಳಿ, ಈರಣ್ಣ ಮುಳಗುಂದ, ರತ್ನಾ ಗುಂಜಳ, ಬಸವರಾಜ ವಾಲಿಕಾರ, ಸುರೇಶ ಬಂಕಾಪೂರ, ಹಿರಿಯರಾದ ಚಂಬಣ್ಣ ಬಾಳಿಕಾಯಿ, ಪ್ಯಾಕ್ಸ್ ಅಧ್ಯಕ್ಷ ವಿಜಯ ಮೆಕ್ಕಿ, ತಾಲೂಕಿನ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರು ಉಪಸ್ಥಿತರಿದ್ದರು.

ಕೆಸಿಸಿ ಬ್ಯಾಂಕ್ ನಿರ್ದೇಶಕ ಜಿ.ವಿ. ಪಾಟೀಲ, ಗದಗ ಜಿಲ್ಲಾ ಸಹಕಾರಿ ಯೂನಿಯನ್‌ನ ಚಂದ್ರಶೇಖರ ಕರಿಯಪ್ಪನವರ, ರವಿ ಕಲ್ಲನಗೌಡ್ರ, ಕೆ.ಸಿ. ಕೂಸನೂರಮಠ, ಶಾಂತ ಚಂದ್ರಮ್ಮ ಹಿರೇಮಠ ಸೇರಿದಂತೆ ವಿವಿಧ ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

“ಸಹಕಾರಿ ಸಂಸ್ಥೆಗಳು ಆರ್ಥಿಕ ಸೇವೆಯ ಜೊತೆಗೆ ಜನರ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣಕ್ಕೂ ಆದ್ಯತೆ ನೀಡಬೇಕು.”

ಸೋಮೇಶ ಉಪನಾಳ

ತ್ಯಾಗದ ಇತಿಹಾಸವೇ ಸಮಾಜದ ಶಕ್ತಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್

ವಿಜಯಸಾಕ್ಷಿ ಸುದ್ದಿ, ಧಾರವಾಡ: ಸಮಾಜದ ಒಳಿತಿಗಾಗಿ ಪ್ರಾಣವನ್ನೇ ಅರ್ಪಿಸಿದ ಮಹನೀಯರ ತ್ಯಾಗ ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

ನಗರದ ಜಕಣಿಬಾವಿ ರಸ್ತೆಯಲ್ಲಿರುವ ಹುತಾತ್ಮರ ವರ್ತುಲದ ಸ್ಮಾರಕಕ್ಕೆ ಬುಧವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, 1921ರ ಜುಲೈ 1ರಂದು ಸಾರಾಯಿ (ಮದ್ಯ) ಮಾರಾಟ ನಿಷೇಧಕ್ಕೆ ಆಗ್ರಹಿಸಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ಮಲ್ಲಿಕಸಾಬ್ ಬಿನ್ ಮರ್ದಾನಸಾಬ್, ಗೌಸುಸಾಬ್ ಬಿನ್ ಖಾದರಸಾಬ್ ಹಾಗೂ ಅಬ್ದುಲ್ ಗಫಾರ್ ಚೌಕತಾಯಿ ಗುಂಡೇಟಿಗೆ ಬಲಿಯಾಗಿ ಹುತಾತ್ಮರಾಗಿದ್ದರು ಎಂದು ಸ್ಮರಿಸಿದರು.

ಸಮಾಜದ ಹಿತಕ್ಕಾಗಿ ವೈಯಕ್ತಿಕ ಬದುಕಿಗಿಂತ ಜನರ ಕಲ್ಯಾಣವನ್ನೇ ಮುಖ್ಯವೆಂದು ಪರಿಗಣಿಸಿ ಹೋರಾಡಿದ ಈ ಮೂವರು ಮಹನೀಯರ ಬಲಿದಾನ ಇತಿಹಾಸದಲ್ಲಿ ಅಜರಾಮರವಾಗಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಅನೇಕ ಜನರ ತ್ಯಾಗ ಮತ್ತು ಬಲಿದಾನ ಅಗತ್ಯ ಎಂಬುದನ್ನು ಅವರ ಜೀವನವೇ ಸಾರುತ್ತದೆ. ಆದ್ದರಿಂದ ಅವರ ತ್ಯಾಗದ ಸಂದೇಶವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಪ್ರೊಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ ಮಾತನಾಡಿ, ಮದ್ಯ ನಿಷೇಧಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ಆದರ್ಶಗಳು ಇಂದಿಗೂ ಸಮಾಜಕ್ಕೆ ಸ್ಫೂರ್ತಿಯಾಗಿವೆ. ಅವರ ಬಲಿದಾನ ಮದ್ಯಮುಕ್ತ ಸಮಾಜ ನಿರ್ಮಾಣದ ಸಂಕಲ್ಪಕ್ಕೆ ಶಕ್ತಿಯಾಗಿದ್ದು, ಅವರ ಆದರ್ಶಗಳನ್ನು ಜೀವಂತವಾಗಿಡುವುದು ಅಗತ್ಯ ಎಂದು ಹೇಳಿದರು.

ಕಿರಿಯ ನ್ಯಾಯವಾದಿ ಬಸವಪ್ರಭು ಹೊಸಕೇರಿ ಮಾತನಾಡಿ, ಸಮಾಜದ ಒಳಿತಿಗಾಗಿ ಹೋರಾಡಿ ಹುತಾತ್ಮರಾದ ಈ ಮಹನೀಯರ ಸ್ಮರಣಾರ್ಥ ಪ್ರತಿವರ್ಷ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದೆ. ಅವರ ತ್ಯಾಗ ಮತ್ತು ಆದರ್ಶಗಳನ್ನು ಯುವಪೀಳಿಗೆಗೆ ಪರಿಚಯಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ಶಂಕರ ಹಲಗತ್ತಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ಆಕಳವಾಡಿ, ಧಾರವಾಡ ವಾಣಿಜ್ಯೋದ್ಯಮ ಸಂಘದ ಕಾರ್ಯದರ್ಶಿ ಸಂಗಮೇಶ್ವರಯ್ಯ ಲಿಂಬೆಣ್ಣದೇವರಮಠ, ಪಂಡಿತ ಮುಂಜಿ, ವೀರಣ್ಣ ಪತ್ತಾರ, ಚಂದ್ರಶೇಖರ ಅಮಿನಗಡ, ಶಶಿಧರ ನರೇಂದ್ರ, ಮಲ್ಲಿಕಾರ್ಜುನ ಚಿಕ್ಕಮಠ, ಕಾರ್ಯಕ್ರಮ ಸಂಘಟಕ ಉದಯ ಯಂಡಿಗೇರಿ, ಮಹಾಂತೇಶ ಲಿಂಬೆಣ್ಣದೇವರಮಠ, ಬಸವರಾಜ ಅಕ್ಕಿ, ಈರಣ್ಣ ಆಕಳವಾಡಿ, ವಿಜಯಾ ಲಿಂಬೆಣ್ಣದೇವರಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಹುತಾತ್ಮರ ರಕ್ತದಿಂದ ಬರೆದ ಇತಿಹಾಸವನ್ನು ಮರೆಯಬಾರದು; ಅವರ ತ್ಯಾಗವೇ ಉತ್ತಮ ಸಮಾಜ ನಿರ್ಮಾಣದ ಅಡಿಪಾಯ.”

ಸ್ನೇಹಲ್ ಆರ್. ಜಿಲ್ಲಾಧಿಕಾರಿ

ನೂತನ ವ್ಯಾಪಾರಿ ಮಳಿಗೆಗಳ ನಿರ್ಮಾಣಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ವ್ಯಾಪಾರಿ ಮಳಿಗೆಗಳ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ರೋಣ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ನರೇಗಲ್ಲ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದರೂ ವಾಣಿಜ್ಯ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕಿದೆ. ಪಟ್ಟಣದ ವ್ಯಾಪಾರೋದ್ಯಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಶಾಸಕ ಜಿ.ಎಸ್. ಪಾಟೀಲ ಅವರಿಂದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದು ಹೇಳಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ರೋಣದ ಮಹಾಲಕ್ಷ್ಮಿ ಕನ್‌ಸ್ಟ್ರಕ್ಷನ್ ಸಹಯೋಗದಲ್ಲಿ ಮಳಿಗೆಗಳ ನಿರ್ಮಾಣ ನಡೆಯಲಿದ್ದು, ಶೀಘ್ರದಲ್ಲೇ ವ್ಯಾಪಾರಸ್ಥರಿಗೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು. ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ವ್ಯಾಪಾರಸ್ಥರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪಪಂ ಮುಖ್ಯಾಧಿಕಾರಿ ಮಲ್ಲೇಶ ಪಚ್ಚಿ, ಕೆಪಿಸಿಸಿ ಸದಸ್ಯ ಸಂಜಯ ದೊಡ್ಡಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಬೆಟಗೇರಿ, ಎಂ.ಎಸ್. ಧಡೇಸೂರಮಠ, ಕರವೇ ಜಿಲ್ಲಾಧ್ಯಕ್ಷ ಹನುಮಂತಪ್ಪ ಅಬ್ಬಿಗೇರಿ, ಶೇಖಪ್ಪ ಜುಟ್ಲದ, ಸಂತೋಷ ಹನುಮಸಾಗರ, ಸದ್ದಾಂ ನಶೇಖಾನ, ಅಲ್ಲಾಬಕ್ಷಿ ನದಾಫ್, ನಿಂಗನಗೌಡ ಲಕ್ಕನಗೌಡ್ರ, ಕಳಕನಗೌಡ ಪೊಲೀಸ್ ಪಾಟೀಲ, ಶೇಖಪ್ಪ ಕೆಂಗಾರ, ಎ.ಎ. ನವಲಗುಂದ, ಗುತ್ತಿಗೆದಾರ ಮಲ್ಲೇಶ ಯಾದವಾಡ, ಐ.ಎಚ್. ಅಣ್ಣಿಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪರಿಸರ ಸಂರಕ್ಷಣೆಗೆ ಹಸಿರು ಸಂಕಲ್ಪ

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ ಎಂಬ ಸಂದೇಶ ಸಾರುವ ಉದ್ದೇಶದಿಂದ ಗದಗ-ಬೆಟಗೇರಿ ರೋಟರಿ ಕ್ಲಬ್ ಹಾಗೂ ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ರೋಟರಿ 3170ರ ಸಹಾಯಕ ಜಿಲ್ಲಾ ಗವರ್ನರ್ ಶ್ರೀಧರಗೌಡ ಎ. ಧರ್ಮಾಯತ, ಗದಗ-ಬೆಟಗೇರಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ಡಾ. ಪ್ರದೀಪ ಉಗಲಾಟ, ಕಾರ್ಯದರ್ಶಿ ಅಕ್ಷಯ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಡಾ. ಆರ್.ಜಿ. ಗಚ್ಚಿನಮಠ, ನಿಕಟಪೂರ್ವ ಕಾರ್ಯದರ್ಶಿ ಸುರೇಶ ಕುಂಬಾರ, ಶ್ರೀಧರ ಸುಲ್ತಾನಪೂರ, ಡಾ. ಆರ್.ಬಿ. ಉಪ್ಪಿನ ಹಾಗೂ ವಿಶ್ವನಾಥ ಯಳಮಲಿ ಭಾಗವಹಿಸಿ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್‌ನ ಮಂಜುಳಾ ಅಕ್ಕಿ, ಅಶ್ವಿನಿ ಜಗತಾಪ, ಶಿವಲೀಲಾ ಅಕ್ಕಿ, ಸುಶೀಲಾ ಕೋಟಿ, ನೀಲಾಂಭಿಕಾ ಉಗಲಾಟ, ಸವಿತಾ ಧರ್ಮಾಯತ, ಸಂಧ್ಯಾ ಕೋಟಿ, ಶಿಲ್ಪಾ ಅಕ್ಕಿ, ಪುಷ್ಪಾ ಭಂಡಾರಿ, ಮೀನಾಕ್ಷಿ ಕೊರವನವರ, ಸುವರ್ಣಾ ವಸ್ತ್ರದ, ವೀಣಾ ಕಾವೇರಿ ಸೇರಿದಂತೆ ರೋಟ್ರಾಕ್ಟ್ ಕ್ಲಬ್‌ನ ಸನ್ಮತಿ, ಸುಮಾ, ಭಾನುಪ್ರಕಾಶ ಹಾಗೂ ಶ್ರುಜನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಗೆ ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಬೆಳೆಸುವ ಜವಾಬ್ದಾರಿಯನ್ನೂ ಪ್ರತಿಯೊಬ್ಬರೂ ವಹಿಸಬೇಕು ಎಂದು ಕರೆ ನೀಡಲಾಯಿತು.

ಹೆತ್ತವರ ಮಹತ್ವ ಮರೆತರೆ ಮಹಾವಿನಾಶ: ಬಸವರಾಜ ಹೊರಟ್ಟಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಹೆತ್ತವರನ್ನು ಗೌರವಿಸದ ಹಾಗೂ ವೃದ್ಧಾಪ್ಯದಲ್ಲಿ ಅವರನ್ನು ನಿರ್ಲಕ್ಷಿಸುವ ಮಕ್ಕಳು ತಮ್ಮ ಜೀವನದಲ್ಲಿಯೇ ಅದರ ದುಷ್ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಎಚ್ಚರಿಕೆ ನೀಡಿದರು.

ಪಟ್ಟಣದ ಜಗದ್ಗುರು ಅನ್ನದಾನೇಶ್ವರ ಸಂಸ್ಥಾನ ಮಠ ಹಾಗೂ ಅವ್ವ ಸೇವಾ ಟ್ರಸ್ಟ್ (ಹುಬ್ಬಳ್ಳಿ) ಸಂಯುಕ್ತ ಆಶ್ರಯದಲ್ಲಿ ನಡೆದ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಕಾರ್ಯಕ್ರಮ, ಮಾಸಿಕ ಶಿವಾನುಭವ ಹಾಗೂ ಅಕ್ಕನ ಬಳಗದ 50ನೇ ವರ್ಷದ ಸುವರ್ಣ ಮಹೋತ್ಸವದಲ್ಲಿ ಅವರು ಮಾತನಾಡಿದರು.

ತಾಯಿ ತನ್ನ ಮಕ್ಕಳಿಗಾಗಿ ಸರ್ವಸ್ವವನ್ನೇ ತ್ಯಾಗ ಮಾಡಿ ಉತ್ತಮ ಶಿಕ್ಷಣ ನೀಡಿ ಬದುಕು ಕಟ್ಟಿಕೊಡುತ್ತಾಳೆ. ಆದರೆ ಅದೇ ಮಕ್ಕಳು ವೃದ್ಧಾಪ್ಯದಲ್ಲಿ ತಂದೆ-ತಾಯಿಯನ್ನು ಕಡೆಗಣಿಸುತ್ತಿರುವುದು ಸಮಾಜದ ದೊಡ್ಡ ದುರಂತವಾಗಿದೆ. ವೃದ್ಧಾಶ್ರಮಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ತಮ್ಮ ತಾಯಿಯ ಹೆಸರಿನಲ್ಲಿ ಆರಂಭಿಸಿರುವ ಅವ್ವ ಸೇವಾ ಟ್ರಸ್ಟ್ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ನೆರವು, ಸಾಧಕರಿಗೆ ಗೌರವ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇಡೀ ನಾಡಿನ ತಾಯಂದಿರಿಗೆ ಗೌರವ ಸಲ್ಲಿಸುವುದೇ ಟ್ರಸ್ಟ್‌ನ ಪ್ರಮುಖ ಉದ್ದೇಶ ಎಂದು ಹೇಳಿದರು.

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಸುವ ಜವಾಬ್ದಾರಿ ತಾಯಂದಿರ ಮೇಲಿದೆ. ಮಹಿಳೆಯರ ಮೇಲಿನ ಶೋಷಣೆ, ಅನ್ಯಾಯ ಮತ್ತು ತಾರತಮ್ಯ ತಡೆಯಲು ಸರ್ಕಾರ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಗದ್ಗುರು ನಾಡೋಜ ಡಾ. ಅನ್ನದಾನೇಶ್ವರ ಶ್ರೀಗಳು ಆಶೀರ್ವಚನ ನೀಡಿ, ಬಸವರಾಜ ಹೊರಟ್ಟಿ ಅವರು ನಾಲ್ಕೂವರೆ ದಶಕಗಳಿಂದ ಶಿಕ್ಷಕರ ಕಲ್ಯಾಣ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಲ್ಲಿಸಿರುವ ಸೇವೆ ಶ್ಲಾಘನೀಯ ಎಂದರು. ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಮಠಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದರು.

ಅವ್ವ ಸೇವಾ ಟ್ರಸ್ಟ್ ಕಾರ್ಯದರ್ಶಿ ಶಶಿ ಸಾಲಿ ಹಾಗೂ ಗದಗ ಜಿಲ್ಲಾ ಸಂಚಾಲಕ ಡಾ. ಬಸವರಾಜ ಧಾರವಾಡ ಟ್ರಸ್ಟ್‌ನ ಸಮಾಜಮುಖಿ ಕಾರ್ಯಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಡಾ. ಚನ್ನಬಸವ ದೇವರು, ಡಾ. ಬಿ.ಜಿ. ಜವಳಿ, ಕೆ.ವಿ. ಹಂಚಿನಾಳ, ಜೆ.ಟಿ. ಸಾಲಿಮಠ, ಎಸ್.ಎಂ. ಅಗಡಿ, ಶಂಕರ್ ಕೊಲ್ಮಿ, ಜಿ.ಎಸ್. ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಾಗಭೂಷಣ ಹಿರೇಮಠ ಸ್ವಾಗತಿಸಿ, ದೀಪುಶ್ರೀ ಕಣವಿ ಕಾರ್ಯಕ್ರಮ ನಿರೂಪಿಸಿದರು.

“ಒಬ್ಬ ತಾಯಿ ಹತ್ತಾರು ಮಕ್ಕಳನ್ನು ಸಾಕುತ್ತಾಳೆ. ಆದರೆ ಹತ್ತಾರು ಮಕ್ಕಳು ಒಬ್ಬ ತಾಯಿಯನ್ನು ನೋಡಿಕೊಳ್ಳದ ಸ್ಥಿತಿ ನಿರ್ಮಾಣವಾಗಿದೆ. ಹೆತ್ತವರ ಕಣ್ಣೀರಿಗೆ ಕಾರಣವಾದವರಿಗೆ ವಿನಾಶ ತಪ್ಪದು.”

ಬಸವರಾಜ ಹೊರಟ್ಟಿ, ಸಭಾಪತಿ

ಉಭಯ ಗುರುಗಳ ಸೇವೆ ಸಮಾಜಕ್ಕೆ ದಾರಿದೀಪ: ಎಸ್.ವಿ. ಸಂಕನೂರ

ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜಕ್ಕಾಗಿ ಬದುಕಿದವರನ್ನು ಸಮಾಜ ಎಂದಿಗೂ ಮರೆಯುವುದಿಲ್ಲ. ಅಂಧರು, ಅನಾಥರು ಹಾಗೂ ಸಮಾಜದ ಅಂಚಿನಲ್ಲಿದ್ದ ಮಕ್ಕಳಿಗೆ ಆಶ್ರಯ ನೀಡಿ, ಶಿಕ್ಷಣ, ಸಂಗೀತ ಮತ್ತು ಬದುಕಿನ ಭದ್ರ ಬುನಾದಿ ಹಾಕಿದ ಉಭಯ ಗುರುಗಳ ಸೇವೆ ಇಂದಿಗೂ ಸಮಾಜಕ್ಕೆ ಮಾದರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಬುಧವಾರ ನಡೆದ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 82ನೇ ಪುಣ್ಯಾರಾಧನೆ ಹಾಗೂ ಲಿಂ. ಡಾ. ಪಂ. ಪುಟ್ಟರಾಜ ಗವಾಯಿಗಳವರ 16ನೇ ಪುಣ್ಯಾರಾಧನೆ ಮತ್ತು ಸಂಗೀತ ಸಮಾರಾಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುಟ್ಟರಾಜ ಗವಾಯಿಗಳವರು ಅಂಧರಾಗಿದ್ದರೂ ತ್ರಿಭಾಷಾ ಪಂಡಿತರಾಗಿ ಸುಮಾರು 60ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು. ಸಂಗೀತ, ಸಾಹಿತ್ಯ, ಪುರಾಣ, ನಾಟಕ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸೇವೆ ಅಪಾರವಾಗಿದೆ. 16ಕ್ಕೂ ಹೆಚ್ಚು ವಾದ್ಯಗಳನ್ನು ನುಡಿಸುವ ಅಪರೂಪದ ಪ್ರತಿಭೆ ಅವರಲ್ಲಿತ್ತು. ಅವರ ಸೇವೆಯನ್ನು ಗುರುತಿಸಿ ಕೇಂದ್ರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಅನೇಕ ಪ್ರಶಸ್ತಿಗಳನ್ನು ನೀಡಿವೆ. ಇಂತಹ ಮಹಾನ್ ಸಾಧಕರಿಗೆ ಭಾರತ ರತ್ನ ಪ್ರಶಸ್ತಿಯೇ ಸೂಕ್ತ ಗೌರವವಾಗಿತ್ತು. ಮುಂದಿನ ದಿನಗಳಲ್ಲಿ ಆ ಗೌರವ ದೊರೆಯುವ ವಿಶ್ವಾಸವಿದೆ ಎಂದು ಸಂಕನೂರ ಹೇಳಿದರು.

ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಣ ದುರ್ಬಳಕೆ ಕುರಿತು ಕೇಳಿಬರುತ್ತಿರುವ ಆರೋಪಗಳು ಹಿಂದೂ ಸಮಾಜಕ್ಕೆ ಕಪ್ಪುಚುಕ್ಕೆಯಂತಿವೆ. ಯಾವುದೇ ದೇವಸ್ಥಾನ ಅಥವಾ ಧಾರ್ಮಿಕ ಕೇಂದ್ರಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಜಾತ್ರೆಗಳು ಸಮಾಜದಲ್ಲಿ ಸೌಹಾರ್ದ, ಸಹಬಾಳ್ವೆ ಮತ್ತು ಜಾತ್ಯಾತೀತ ಮನೋಭಾವ ಬೆಳೆಸುವ ವೇದಿಕೆಗಳಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕೀರ್ತನ ಸಮ್ಮೇಳನದ ದಿವ್ಯ ಸಾನ್ನಿಧ್ಯವನ್ನು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಮಹಾಪೀಠದ ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಿದ್ದರು.

ಅಧ್ಯಕ್ಷತೆಯನ್ನು ಎಮ್ಮಿಗನೂರಿನ ಪೂಜ್ಯ ಶ್ರೀ ವಾಮದೇವ ಮಹಾಂತ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು. ಚಳಗೇರಿ ಹಿರೇಮಠದ ಪೂಜ್ಯ ಶ್ರೀ ವೀರ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸಿದ್ದರು.

ನೆಗಳೂರು ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹೂವಿನ ಹಡಗಲಿಯ ಪೂಜ್ಯ ಶ್ರೀ ಡಾ. ಹಿರಿಯ ಶಾಂತವೀರ ಮಹಾಸ್ವಾಮಿಗಳು, ಮೈನಹಳ್ಳಿ–ಬಿಕನಹಳ್ಳಿಯ ಪೂಜ್ಯ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ನರೇಗಲ್–ಸವದತ್ತಿಯ ಪೂಜ್ಯ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು, ಅಡ್ನೂರ–ರಾಜೂರ–ಗದಗ ಬ್ರಹನ್ಮಠದ ಪೂಜ್ಯ ಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಅಲಮೇಲದ ಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸೋಲ್ ಟ್ರಸ್ಟ್ ಅಧ್ಯಕ್ಷ ನಿಂಗಪ್ಪ ಕೆಂಗಾರ, ಚಂದ್ರು ಬಾಳಿಹಳ್ಳಿಮಠ, ಮಹೇಶ ಶಾಬಾದಿಮಠ, ವಿ.ಎಸ್. ಮಾಳೇಕೊಪ್ಪಮಠ, ಹೇಮರಾಜ ಶಾಸ್ತ್ರಿ ಹಿರೇಮಠ, ಸೋಲ್ ಟ್ರಸ್ಟ್ ಸದಸ್ಯ ಪರಶುರಾಮ ಕಟ್ಟಿಮನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಈ ವೇಳೆ ಜಗದ್ಗುರುಗಳ ಸಾನ್ನಿಧ್ಯದಲ್ಲಿ ವೀರೇಶ್ವರ ಪುಣ್ಯಾಶ್ರಮದ ನೂತನ ವೆಬ್‌ಸೈಟ್ ಹಾಗೂ ಲೋಗೋವನ್ನು ಲೋಕಾರ್ಪಣೆ ಮಾಡಲಾಯಿತು.

“ಸಮಾಜದ ಅಂಚಿನಲ್ಲಿದ್ದ ಅಂಧ-ಅನಾಥ ಮಕ್ಕಳಿಗೆ ಬದುಕು ಕಟ್ಟಿಕೊಟ್ಟ ಉಭಯ ಗುರುಗಳ ಸೇವೆ ಇತಿಹಾಸದಲ್ಲಿ ಅಚ್ಚಳಿಯದ ಗುರುತು. ಇಂತಹ ಮಹನೀಯರ ಆದರ್ಶವೇ ಮುಂದಿನ ಪೀಳಿಗೆಗೆ ದಾರಿದೀಪ.”

ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ

ನರೇಗಾ ಸವಿ ನೆನಪಿಗೆ ವನಮಹೋತ್ಸವ

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯ ಸವಿ ನೆನಪಿನ ಅಂಗವಾಗಿ ಹಾಗೂ ವಿಬಿ-ಜಿ ರಾಮ್ (ಜಿ) ಯೋಜನೆ ಆರಂಭದ ಹಿನ್ನೆಲೆಯಲ್ಲಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕವು ನಗರದ ಆರ್‌ಡಿಪಿಆರ್ ವಿಶ್ವವಿದ್ಯಾಲಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಯೋಜಿಸಿ 100ಕ್ಕೂ ಹೆಚ್ಚು ವಿವಿಧ ಜಾತಿಯ ಸಸಿಗಳನ್ನು ನೆಟ್ಟಿತು.

ಸಂಘದ ಗೌರವಾಧ್ಯಕ್ಷ ಸಿದ್ದಲಿಂಗೇಶ ಪಾಟೀಲ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಮರವಾಗಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಜಿಲ್ಲಾ ಅಧ್ಯಕ್ಷ ಸುರೇಶ ಬಾಳಿಕಾಯಿ ಮಾತನಾಡಿ, ನರೇಗಾ ಯೋಜನೆಯು ಗ್ರಾಮೀಣಾಭಿವೃದ್ಧಿ, ಜಲ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದೆ. ಹೊಸದಾಗಿ ಆರಂಭವಾಗುತ್ತಿರುವ ವಿಬಿ-ಜಿ ರಾಮ್ (ಜಿ) ಯೋಜನೆಯೂ ಗ್ರಾಮೀಣ ಅಭಿವೃದ್ಧಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು 100ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಅವುಗಳ ಸಂರಕ್ಷಣೆ ಮಾಡುವ ಪ್ರತಿಜ್ಞೆ ಕೈಗೊಂಡರು. ಹೊಸ ಜಿಲ್ಲಾ ಪದಾಧಿಕಾರಿಗಳ ನೇಮಕದ ಬಳಿಕ ನಡೆದ ಮೊದಲ ಸಂಘಟನಾ ಕಾರ್ಯಕ್ರಮ ಇದಾಗಿದ್ದು, ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ನರೇಗಾ ನೌಕರರು ಭಾಗವಹಿಸಿದರು.

ಇದೇ ವೇಳೆ ನೌಕರರ ಹಿತಾಸಕ್ತಿ, ಸಂಘಟನೆಯ ಬಲವರ್ಧನೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಯಿತು. ಭವಿಷ್ಯದಲ್ಲಿಯೂ ಜಿಲ್ಲೆಯಾದ್ಯಂತ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಘ ನಿರ್ಧರಿಸಿದೆ.

“ನರೇಗಾ ಯೋಜನೆಯು ಗ್ರಾಮೀಣ ಅಭಿವೃದ್ಧಿ, ಜಲ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದೆ. ಹೊಸದಾಗಿ ಆರಂಭವಾಗಿರುವ ವಿಬಿ-ಜಿ ರಾಮ್ (ಜಿ) ಯೋಜನೆಯು ಗ್ರಾಮೀಣಾಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ನೆಟ್ಟ ಪ್ರತಿಯೊಂದು ಸಸಿಯನ್ನೂ ಮರವಾಗಿ ಬೆಳೆಸುವ ಸಂಕಲ್ಪ ಮಾಡಬೇಕು.”

– ಸುರೇಶ ಬಾಳಿಕಾಯಿ, ಜಿಲ್ಲಾಧ್ಯಕ್ಷರು, ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ, ಗದಗ ಜಿಲ್ಲೆ