ಇತ್ತೀಚೆಗೆ ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಹಂದಿಗಳ ಹಾವಳಿ ತುಸು ಹೆಚ್ಚಾಗಿದೆ. ಇದರಿಂದ ಜನರು ಹೈರಾಣಾಗುತ್ತಿದ್ದಾರೆ.
ರೈತ ಬಿತ್ತನೆ ಮಾಡಿದಾಗಿನಿಂದ ಮಳೆ ಕೊರತೆ, ಅತಿವೃಷ್ಟಿ, ಕೀಟಬಾಧೆ, ಇಳುವರಿ ಕುಂಠಿತ, ಬೆಲೆ ಕುಸಿತ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಲೇ ಬರುತ್ತಿದ್ದಾನೆ. ಇದರೊಂದಿಗೆ ಹಂದಿ ಹಾವಳಿಯೂ ಹೊಸದಾಗಿ ಸೇರಿಕೊಂಡಂತೆ ಕಾಣುತ್ತಿದೆ.
ತಾಲ್ಲೂಕಿನ ಗೋವನಾಳ ಗ್ರಾಮದ ರೈತ ಚಂದ್ರಗೌಡ್ರ ಕರೆಗೌಡ್ರ ಅವರು ತಮ್ಮ ಎರಡು ಎಕರೆ ಹೊಲದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಗೋವಿನಜೋಳ ಇನ್ನೇನೂ ಫಲ ಕೊಡುವ ಹಂತಕ್ಕೆ ಬಂದಿತ್ತು. ಆದರೆ, ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನ ಹಂದಿಗಳು ರಾತ್ರೋರಾತ್ರಿ ತಿಂದು ಹಾಳು ಮಾಡಿವೆ. ಇದರಿಂದ ರೈತ ಸಂಕಷ್ಟಕೀಡಾಗಿದ್ದಾನೆ.
ತಾಲೂಕಿನಲ್ಲಿ ಹಲವು ರೈತರ ಜಮೀನುಗಳಲ್ಲಿ ಹಂದಿಗಳ ಕಾಟ ಹೆಚ್ಚಾಗಿದೆ. ಬೆಳೆದು ನಿಂತ ಅಳಿದುಳಿದ ಬೆಳೆ ಸಂರಕ್ಷಿಸಿಕೊಳ್ಳಲು ರೈತರು ಹಗಲು ರಾತ್ರಿ ಹಂದಿ ಕಾಯುವ ಕೆಲಸ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ತಾಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕು. ರೈತರ ಹೊಲದಲ್ಲಿರುವ ಬೆಳೆ ನಾಶ ಮಾಡುತ್ತಿರುವ ಹಂದಿಗಳಿಂದ ಮುಕ್ತಿ ನೀಡಬೇಕೆಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ, ಅವುಗಳು ಯಶಸ್ವಿಯಾಗಲು ಯೋಜನೆ ಎಷ್ಟು ಜನರಿಗೆ ತಲುಪುತ್ತಿದೆ? ಜನರು ಎಷ್ಟರಮಟ್ಟಿಗೆ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ? ಎಂಬುವುದೂ ಬಹುಮುಖ್ಯ. ಅದರಲ್ಲಿ ಬಡವರ ಹಸಿವು ನೀಗಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಪ್ರಮುಖವಾಗಿದೆ.
ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಉಚಿತವಾಗಿ ಅಕ್ಕಿ ವಿತರಿಸುತ್ತಿದೆ. ಇದರಿಂದ ಲಕ್ಷಾಂತರ ಬಡ ಜನರ ಹೊಟ್ಟೆ ತುಂಬುತ್ತಿದೆ. ಒಂದು ಹೊತ್ತು ಊಟಕ್ಕೂ ಪರದಾಡುತ್ತಿದ್ದ ಜನರು ಹೊಟ್ಟೆ ತುಂಬಾ ಊಟ ಮಾಡುವಂತಾಗಿದೆ. ಆದರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆದ ಅಕ್ಕಿಯನ್ನು ಪಡಿತರದಾರರು ಸಮೀಪದ ನಗರಗಳಿಗೆ ತೆರಳಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ನಗರ ಪ್ರದೇಶಗಳಲ್ಲಿ ಅಕ್ಕಿ ಖರೀದಿಸುವ ದಲ್ಲಾಳಿಗಳ ಸಂಖ್ಯೆ ಹೆಚ್ಚುತ್ತಿದೆ.
ಅನ್ನಭಾಗ್ಯ ಯೋಜನೆ ಫ್ಲಾಪ್?
ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿಸುವ ಸದುದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 2013ರ ಜುಲೈನಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿತು. ಈ ದಿಶೆಯಲ್ಲಿ ಸರ್ಕಾರ ದಿಟ್ಟ ಹೆಜ್ಜೆಯನ್ನಿಡುತ್ತಿದೆ. ಆದರೆ, ಸರ್ಕಾರದ ಹೆಜ್ಜೆಯ ಗುರುತು ಅಳಿಸಿ ಹಾಕುವತ್ತ ದಲ್ಲಾಳಿಗಳು, ಪಡಿತರದಾರರು ಕೆಲಸ ಮಾಡುತ್ತಿರುವುದು ದುರದೃಷ್ಟಕರ. ಇದರಿಂದಾಗಿ ಸರ್ಕಾರದ ಜನಪರ ಯೋಜನೆಗಳು ಹಳ್ಳ ಹಿಡಿಯುತ್ತಿವೆ.
ಜಿಲ್ಲೆಯಲ್ಲಿ ರೇಶನ್ ಅಕ್ಕಿ ಮಾರಾಟದ ಹಾವಳಿ ಜೋರಾಗಿದ್ದು, ಸರ್ಕಾರದ ಬಹುದೊಡ್ಡ ಯೋಜನೆಯ ಆಶಯ ನೆಲಕಚ್ಚಿದಂತಾಗುತ್ತಿದೆ.
ಹೊರ ರಾಜ್ಯಕ್ಕೆ ಅಕ್ಕಿ ಸಾಗಾಟ
ಪಡಿತರದಾರರಿಂದ ಕೇವಲ 12 ರೂ.ಗೆ ಅನ್ನಭಾಗ್ಯ ಅಕ್ಕಿ ಖರೀದಿಸುವ ದಲ್ಲಾಳಿಗಳು ಖರೀದಿಸಿದ ಅಕ್ಕಿಯನ್ನು ಪಾಲಿಶ್ ಮಾಡಿಸಿ ಗುಜರಾತ್, ಗೋವಾ, ಮಹಾರಾಷ್ಟ್ರ ಮುಂತಾದ ರಾಜ್ಯಗಳಿಗೆ ಸಾಗಿಸುತ್ತಾರೆ. ಪಾಲಿಶ್ ಮಾಡಿದ ಅದೇ ಅಕ್ಕಿಯನ್ನು ಗ್ರಾಹಕರಿಗೆ 42 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಕ್ರಮ ಅಕ್ಕಿ ಸಾಗಾಟದಿಂದ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಅಧೋಗತಿಯತ್ತ ಸಾಗುತ್ತಿದೆ.
ಗದಗ ಅಕ್ರಮ ಅಕ್ಕಿ ಖರೀದಿ ಕೇಂದ್ರ?
ಅಕ್ಕಿ ಖರೀದಿ ಮತ್ತು ಅಕ್ರಮ ಸಾಗಾಟದ ವಹಿವಾಟು ಗದಗ, ಗಜೇಂದ್ರಗಡ, ಲಕ್ಷ್ಮೇಶ್ವರ, ಮುಳಗುಂದ ಸಹಿತ ಜಿಲ್ಲೆಯ ಬಹುತೇಕ ಪಟ್ಟಣ ಪ್ರದೇಶಗಳಲ್ಲಿ ಸದ್ದು ಮಾಡುತ್ತಿದೆ. ಯಾರೊಬ್ಬರ ಭಯವಿಲ್ಲದೆ ಅಕ್ರಮ ಅಕ್ಕಿ ವ್ಯವಹಾರ ನಡೆಸುತ್ತಿದ್ದಾರೆ. ನಗರ ಪ್ರದೇಶಗಳ ಸುತ್ತಲಿನ ಗ್ರಾಮಗಳಿಂದ ಅಕ್ಕಿ ತರುವ ಪಡಿತರದಾರರು ಅತೀ ಕಡಿಮೆ ದರದಲ್ಲಿ ದಲ್ಲಾಳಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಜಿಲ್ಲೆಯು ಅಕ್ಕಿ ಮಾರಾಟ ಕೇಂದ್ರವಾದಂತಾಗಿದೆ.
ಇತ್ತೀಚೆಗಷ್ಟೇ ಗಜೇಂದ್ರಗಡದ ಸುಖಸಾಗರ ಬಳಿ ಅನ್ನಭಾಗ್ಯ ಯೋಜನೆಯ ಅಕ್ರಮ ಅಕ್ಕಿ ಚೀಲಗಳನ್ನು ಸಾಗಾಟ ಮಾಡುತ್ತಿದ್ದ ಲಾರಿ ವಶಪಡಿಸಿಕೊಳ್ಳಲಾಗಿತ್ತು. ಅಷ್ಟಾದರೂ, ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮತ್ತು ಸಾಗಣೆ ನಿಲ್ಲುತ್ತಿಲ್ಲ. ಇದರಿಂದ ಅಧಿಕಾರಿಗಳು ಅಕ್ಕಿ ದಂಧೆಕೋರರ ಜೊತೆ ಪಾಲುದಾರರಾಗಿದ್ದಾರೆಯೇ? ಎಂಬ ಗುಮಾನಿಯೂ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ.
ಮುಳಗುಂದ ಪಟ್ಟಣದ ಮಾರುಕಟ್ಟೆಯ ಮುಖ್ಯ ರಸ್ತೆಯಲ್ಲಿಯೇ ಅಡುಗೆ ಎಣ್ಣೆ ವ್ಯಾಪಾರಸ್ಥರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ರಾಜಾರೋಷವಾಗಿ ಖರೀದಿಸುತ್ತಿದ್ದಾರೆ. ಖರೀದಿಸಿದ ಅಕ್ಕಿಯನ್ನು ನಗರದ ಶ್ರೀಕೃಷ್ಣ ದೇವಸ್ಥಾನದ ಹತ್ತಿರ ಸಂಗ್ರಹಿಸಿಟ್ಟು, ನಸುಕಿನ ಜಾವದಲ್ಲಿ ಗಾಡಿಯ ಮೂಲಕ ಬೇರೆಡೆ ಸಾಗಿಸುತ್ತಾರೆ ಎನ್ನಲಾಗಿದೆ.
ಜನಪ್ರತಿನಿಧಿಯೊಬ್ಬರ ಆಪ್ತನ ದಂಧೆ?
ಗಜೇಂದ್ರಗಡಲ್ಲಿ ಸಿಕ್ಕಿರುವ ಅನ್ನಭಾಗ್ಯ ಅಕ್ಕಿ ಚೀಲಗಳು ಎಲ್ಲಿಯವು? ಅಕ್ಕಿ ಎಲ್ಲಿಂದ ಎಲ್ಲಿಗೆ ಸಾಗಾಟವಾಗುತ್ತಿತ್ತು? ಗಜೇಂದ್ರಗಡದಲ್ಲಿ ನಡೆಯುವ ದಂದೆಯ ಹಿಂದೆ ಯಾರಿದ್ದಾರೆ? ಪ್ರಭಾವಿ ರಾಜಕಾರಣಿಯೊಬ್ಬರ ಆಪ್ತ ಈ ದಂಧೆಯಲ್ಲಿ ತೊಡಗಿದ್ದಾರಾ? ಆ ಕಾರಣಕ್ಕಾಗಿಯೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರಾ? ಎಂಬ ಪ್ರಶ್ನೆಗಳಿಗೆ ಪೊಲೀಸರ ನಿಷ್ಪಕ್ಷಪಾತ ತನಿಖೆ ನಡೆಸಿದಾಗಲೇ ಉತ್ತರ ಸಿಗಲಿದೆ.
ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾನೂನು ಕುರಿತು ಪರ ವಿರೋಧದ ಚರ್ಚೆಗಳು ಶುರುವಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರ ಪ್ರಾರಂಭವಾಗಿದೆ.
ಲವ್ ಜಿಹಾದ್ ವಿಚಾರವಾಗಿ ಉಡುಪಿಯಲ್ಲಿ ಗುರುವಾರ ಪ್ರತಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಸಿದ್ದರಾಮಯ್ಯನವರು ಮೊಘಲ್ ಶಕೆಯಲ್ಲಿ ಬದುಕುತ್ತಿದ್ದಾರೆ. ಮುನ್ನೂರು ವರ್ಷದಿಂದ ಲವ್ ಜಿಹಾದ್ ಇದೆ ಎಂದು ಅವರೇ ಹೇಳಿದ್ದಾರೆ. ಅದಕ್ಕೆ ಅವರಿನ್ನೂ ಮೊಘಲ್ ಶಕೆಯಲ್ಲಿ ಇದ್ದಾರೆ ಎಂದರು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ಜಾರಿಗೆ ತರಲು ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ. ಈ ಬಗ್ಗೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಮಧ್ಯಪ್ರದೇಶ ಸರ್ಕಾರಗಳು ಲವ್ ಜಿಹಾದ್ ಕಾನೂನು ಜಾರಿಗೆ ಚಿಂತನೆ ಮಾಡಿವೆ. ಅದೇ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎಂದರು.
ಲವ್ ಜಿಹಾದ್ ಕಾನೂನು ಹೇಗೆ ಜಾರಿಗೊಳಿಸಬೇಕು, ಯಾವ ಅಂಶಗಳನ್ನು ಸೇರಿಸಬೇಕೆಂಕು ಎಂಬುವುದು ಮುಖ್ಯವಾಗಿದೆ. ಲವ್ ಜಿಹಾದ್ ಕಾನೂನು ಕುರಿತು ಉತ್ತರಪ್ರದೇಶ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆಯ ಪ್ರತಿಗಳನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಇದನ್ನು ಘೋಷಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಡಿ.5 ರಂದು ಎಲ್ಲಾ ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತದೆ. ಬಂದ್ ಮಾಡಬಾರದು ಎಂದು ಸುಪ್ರೀಂಕೋರ್ಟ್ ನ ಸ್ಪಷ್ಟ ಆದೇಶವಿದ್ದು, ಬಂದ್ ಮಾಡಿದರೆ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿದಂತೆ ಆಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಡಿ.5 ರ ಕರ್ನಾಟಕ ಬಂದ್ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಅವರೊಂದಿಗೆ ನಾನು ಮನವಿ ಮಾಡಿಕೊಳ್ಳುತ್ತೇನೆ. ಇಷ್ಟರ ಮೇಲೆಯೂ ಬಂದ್ ಮಾಡಿದರೆ ಪೊಲೀಸ್ ಇಲಾಖೆ ಕರ್ತವ್ಯ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಭದ್ರತೆಗೆ ಬೇಕಾದ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ಹೊಸ ವರ್ಷಾಚರಣೆಗೆ ತಡೆ ವಿಚಾರವಾಗಿ ಮಾತನಾಡಿದ ಅವರು, ನೈಟ್ ಕರ್ಪ್ಯೂ ಬಗ್ಗೆ ಯಾವುದೇ ಸಭೆ ಕರೆದಿಲ್ಲ. ಜನ ಸೇರದಂತೆ ನೋಡಿಕೊಳ್ಳಲು ತಜ್ಞರು ತಿಳಿಸಿದ್ದಾರೆ. ಇವತ್ತು ಅಥವಾ ನಾಳೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ನೈಟ್ ಕರ್ಪ್ಯೂ ಬಗ್ಗೆ ಯಾವುದೇ ಚಿಂತನೆ ಇಲ್ಲ. ಬದಲಾಗಿ ಹೊಸ ವರ್ಷಾಚರಣೆಯಲ್ಲಿ ಜನ ಸಂದಣಿಯಾಗದಂತೆ ನೋಡುವ ಜವಾಬ್ದಾರಿ ಇದೆ. ನೈಟ್ ಕರ್ಪ್ಯೂ ಹೊರತಾಗಿಯೂ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದರು.
ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಮಾಜಿ ಕಾರ್ಪೋರೇಟರ ಜಾಕೀರ್ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಜಾಕೀರ್ ಬಂಧನವಾಗಿದೆ. ಇವತ್ತು ರಜೆ ಇರುವುದರಿಂದ ನಾಳೆ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ. ಜಾಕೀರ್ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.
ಮಾಜಿ ಶಾಸಕ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಕುರಿತು ಕೋಲಾರ ಪೊಲೀಸರು ತನಿಖೆ ಆರಂಭಿಸಿದ್ದು, ಸ್ಥಳ ಭೇಟಿ, ಟವರ್ ಡಂಪಿಂಗ್ ಮಾಡಿ ಸೇರಿದಂತೆ ಪ್ರತಿಯೊಂದರ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಜೆಪಿ ಸರ್ಕಾರದ ಜೊತೆ ಚೆನ್ನಾಗಿದ್ದು, ಕ್ಷೇತ್ರದ ಜನರಿಗೆ ಒಳ್ಳೆಯ ಸುದ್ದಿ ನೀಡಲು ಬಿಜೆಪಿಯವರೊಂದಿಗೆ ಚೆನ್ನಾಗಿದ್ದೇನೆ ಎಂದು ಬಿಎಸ್ಪಿ ಉಚ್ಚಾಟಿತ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕೊಳ್ಳೆಗಾಲದಲ್ಲಿ ಮಾತನಾಡಿದ ಅವರು, ಬಿಜೆಪಿ ಸೇರುವ ಆಪ್ಶನ್ ಯಾವತ್ತಿಗೂ ತೆರೆದಿದ್ದು, 2008 ರಿಂದ ಯಡಿಯೂರಪ್ಪ ಅವರು ನನ್ನೊಂದಿಗೆ ಚೆನ್ನಾಗಿದ್ದಾರೆ ಎಂದರು.
ಕ್ಷೇತ್ರದ ಅಭಿವೃದ್ಧಿಯಾದ ದಿನವೇ ನನ್ನ ಕ್ಷೇತ್ರದ ಜನರಿಗೆ ಒಳ್ಳೆಯ ಸುದ್ದಿ. ಸಂಕ್ರಾಂತಿ ಹಬ್ಬಕ್ಕೆ ಸಾಕಷ್ಟು ಅನುದಾನ ಕೊಟ್ಟರೆ ಪಕ್ಕಾ ಒಳ್ಳೆಯ ಸುದ್ದಿ ಕೊಡುತ್ತೇನೆ. ಅಲ್ಲದೇ, ನನ್ನ ಕ್ಷೇತ್ರದ ಬಸ್ ನಿಲ್ದಾಣ, ಅಂಬೇಡ್ಕರ್ ಭವನ, ವಾಲ್ಮೀಕಿ ಭವನ ಲೋಕಾರ್ಪಣೆಗೊಳ್ಳಬೇಕು ಎಂದು ಶಾಸಕ ಎನ್.ಮಹೇಶ್ ಹೇಳಿದರು.
ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನವಾಗಿರುವ ಬಗ್ಗೆ ಮಾಹಿತಿ ಇದ್ದು, ಇದರಿಂದ ನನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.
ತಮ್ಮ ಡಿ.ಜೆ.ಹಳ್ಳಿಯಲ್ಲಿನ ಮನೆಯ ಮೇಲಿನ ದಾಳಿಯಿಂದಾಗಿ ಆತಂಕಕ್ಕೆ ಒಳಗಾಗಿದ್ದ ಶಾಸಕರು, ಮಾಜಿ ಕಾರ್ಪೊರೇಟರ್ ಜಾಕೀರ್ ಬಂಧನದ ವಿಚಾರವಾಗಿ ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ್ದಾರೆ.
ಮಾಜಿ ಮೇಯರ್ ಸಂಪತ್ ರಾಜ್ ಮತ್ತು ಜಾಕೀರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದೆ. ಅವರು ಶಿಸ್ತು ಸಮಿತಿಗೆ ವಹಿಸುವ ಭರವಸೆ ಕೊಟ್ಟಿದ್ದರು. ಆದರೆ ಅವರು ಈವರೆಗೆ ಡಿ.ಜೆ.ಹಳ್ಳಿ ಗಲಭೆ ಪ್ರಕರಣವನ್ನು ಶಿಸ್ತು ಸಮಿತಿಗೆ ವಹಿಸಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಅಲ್ಲದೇ, ಇದು ನನ್ನ ಮನೆಗೆ ಸಂಬಂಧಿಸಿದ ವಿಷಯವಾಗಿದ್ದು, ಹಾಗಾಗಿ ನಾನು ಏಕಾಂಗಿಯಾಗಿ ಹೋರಾಡುತ್ತಿದ್ದೇನೆ. ಒಂದು ವೇಳೆ ಶಿಸ್ತು ಸಮಿತಿ ಸ್ಪಂದಿಸದಿದ್ದಲ್ಲಿ ಎಐಸಿಸಿಗೆ ಪತ್ರ ಬರೆಯುತ್ತೇನೆ. ಒಟ್ಟಿನಲ್ಲಿ ನನಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ ಶಾಸಕರು, ಅರವಿಂದ ಲಿಂಬಾವಳಿ ಅವರು ನನಗೆ ಸಂಬಂಧಿಕರು ಹಾಗಾಗಿ ನನಗೆ ಬೆಂಬಲ ನೀಡಿದ್ದಾರೆ. ನಾನು ಪಕ್ಷ ಬಿಡುವುದಿಲ್ಲ. ಬಿಜೆಪಿ ಸೇರುವ ಪ್ರಶ್ನೆ ಇಲ್ಲ. ನನ್ನ ತಂದೆ ಕಾಲದಿಂದ ನಾವು ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಮುಂದೆಯೂ ಕಾಂಗ್ರೆಸ್ ನಲ್ಲಿಯೇ ಇರುತ್ತೇವೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸ್ಪಷ್ಟನೆ ನೀಡಿದ್ದಾರೆ.
ಇಲ್ಲಿನ ಹೊಸನಗರ ತಾಲೂಕಿನ ಬಾವಿಯೊಂದರಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 3 ಲಕ್ಷಕ್ಕೂ ಅಧಿಕ ಮೌಲ್ಯದ 38 ಕೆ.ಜಿ. ಶ್ರೀಗಂಧ ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಶ್ರೀಗಂಧದ ತುಂಡುಗಳನ್ನು ಬಾಣಿಗ ವಾಸಿ ಹನೀಫ್ ಸಾಬ್ ಎಂಬಾತ ಅಕ್ರಮವಾಗಿ ಯಾರಿಗೂ ಗೊತ್ತಾಗದಂತೆ ಬಾವಿಯೊಳಗೆ ಪಂಪ್ ಸೆಟ್ ಇಳಿಸುವಂತೆ ಶ್ರೀಗಂಧವನ್ನು ಚೀಲದೊಳಗೆ ತುಂಬಿ ಬಾವಿಗೆ ಇಳಿಸಿ ಸಂಗ್ರಹಿಸಿಟ್ಟಿದ್ದ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿವಮೊಗ್ಗದ ಅರಣ್ಯ ಸಂಚಾರಿ ದಳ ಮತ್ತು ಹೊಸನಗರ ಅರಣ್ಯ ವಲಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಹೊಸನಗರ ಅರಣ್ಯ ವಲಯ ವ್ಯಾಪ್ತಿಯ ಬಾಣಿಗ ಗ್ರಾಮದಲ್ಲಿ ಬಾವಿಯಲ್ಲಿ ಬಚ್ಚಿಟ್ಟಿದ್ದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಅರಣ್ಯಾಧಿಕಾರಿಗಳು ಮೊದಲು ಆರೋಪಿ ಹನೀಫ್ ನನ್ನು ಬಂಧಿಸಿದ್ದು, ಬಳಿಕ ಆತನ ಹೇಳಿಕೆ ಆಧರಿಸಿ ಕೃತ್ಯದಲ್ಲಿ ಭಾಗಿಯಾದ ತಾಲೂಕಿನ ದುಮ್ಮಾ ನಿವಾಸಿ ಮಂಜುನಾಥ್, ಹೊಸಕೆಸರೆ ಹಾಲೇಶ್, ಸಾಗರದ ಶಿವಪ್ಪನಾಯಕ ಮತ್ತು ರಸ್ತೆ ವಾಸಿಯಾದ ಮಂಜುನಾಥ್ ಎಂಬುವವರನ್ನು ಬಂಧಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಕೃಷ್ಣಯ್ಯಗೌಡ ಸ್ಪಷ್ಟನೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಅರಣ್ಯ ಸಂಚಾರಿದಳದ ಎಸಿಎಫ್ ಬಾಲಚಂದ್ರ, ಹೊಸನಗರ ಎಸಿಎಫ್ ಶಿವಮೂರ್ತಿ, ವಲಯ ಅರಣ್ಯಾಧಿಕಾರಿ ಕೃಷ್ಣಯ್ಯಗೌಡ ಅರಣ್ಯ ಸಿಬ್ಬಂದಿಗಳು ಭಾಗಿಯಾಗಿದ್ದರು.
ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಕಾಯ್ದೆ ಜಾರಿಗೆ ತರುವುದನ್ನು ನಿಲ್ಲಿಸಲು ಆಗುವುದಿಲ್ಲ: ಶೋಭಾ
ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು
‘ಕ್ರಾಸ್ ಬ್ರೀಡ್ ಬಗ್ಗೆ ಸಿದ್ದರಾಮಯ್ಯನವರಿಗೆ ತುಂಬಾ ಆಸಕ್ತಿ ಇದೆ. ಕಾಂಗ್ರೆಸ್ ನವರದ್ದು ಕ್ರಾಸ್ ಬ್ರೀಡ್ ಸಂತತಿ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಹಿಂದೂ ಮುಸ್ಲಿಂ ಕ್ರಾಸ್ ಆಗಿ ಬಹಳ ಜನ ಹುಟ್ಟಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಪ್ರತಿಕ್ರಿಯಿಸಿದ ಅವರು, ಲವ್ ಜಿಹಾದ್ ಬ್ಯಾನ್ ಮಾಡಬೇಕೆಂಬ ಚಿಂತನೆ ಇರುವುದು ನಿಜ. ಸಿದ್ದರಾಮಯ್ಯನವರ ಹೇಳಿಕೆಯೇ ಮೂರ್ಖತನದ್ದು. ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು. ಮುಸಲ್ಮಾನರನ್ನು ಓಲೈಸುವುದು ಇನ್ನಾದರೂ ಬಿಡಬೇಕು ಎಂದು ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ಕುಟುಕಿದರು.
‘ಲವ್ ಜಿಹಾದಿಗೆ ಕಾನೂನು ಬರಲೇಬೇಕು, ಅದು ಬರುತ್ತದೆ. ಲವ್ ಜಿಹಾದ್ ಕೇವಲ ಪ್ರೀತಿಯ ಸಂಗತಿಯಲ್ಲ ಮತಾಂತರದ ಷಡ್ಯಂತ್ರ, ದೇಶಾಂತರದ ಷಡ್ಯಂತ್ರ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಕಾಯ್ದೆ ಜಾರಿಗೆ ತರುವುದನ್ನು ನಿಲ್ಲಿಸಲು ಆಗುವುದಿಲ್ಲ. ಸಿದ್ದರಾಮಯ್ಯನವರು ಹಗುರವಾಗಿ, ಕೇವಲವಾಗಿ ಮಾತನಾಡಿದ್ದಾರೆ. ಅವರು ಯಾವ ಕ್ರಾಸ್ ಬಗ್ಗೆ ಮಾತನಾಡಿದ್ದಾರೆ? ಅವರಿಗೆ ಯಾವ ಕ್ರಾಸ್ ಬಗ್ಗೆ ಗೊತ್ತಿದೆ.? ಅದರಲ್ಲಿ ಅವರ ಪಾತ್ರವೇನು? ಈ ಬಗ್ಗೆ ನನಗೆ ಗೊತ್ತಿಲ್ಲ.ಹಾಗಾಗಿ ಅವರೇ ಉತ್ತರಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದರು.
ಲವ್ ಜಿಹಾದ್ ನಿಷೇಧದ ಕುರಿತ ವಿಚಾರಕ್ಕೆ ಸಿಟ್ಟಾದ ಸಿದ್ದರಾಮಯ್ಯ ಮದುವೆ ಎಂಬುವುದು ಪ್ರತಿಯೊಬ್ಬರ ವೈಯಕ್ತಿಕ ವಿಚಾರ. ಇಂತವರನ್ನೇ ಮದುವೆಯಾಗಿ ಎಂಬುವುದು ಸರಿಯಲ್ಲ. ಹಿಂದೂ ಮುಸ್ಲಿಂ ಕ್ರಾಸ್ ಆಗಿ ಬಹಳ ಜನ ಜನಿಸಿದ್ದಾರೆ. ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ತರಲು ನಮ್ಮ ವಿರೋಧವಿದೆ ಎಂದಿದ್ದರು.
-ಬೆಳಗಾವಿಯಿಂದ ಬಳ್ಳಾರಿವರೆಗೆ ಕೆಆರ್ಎಸ್ನಿಂದ ಚಲಿಸು ಕರ್ನಾಟಕ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರಾಜ್ಯ ಕೊರೋನಾ ವೈರಸ್ನಿಂದ ನಲುಗಿದಂತೆ ಭ್ರಷ್ಟ ರಾಜಕೀಯ ಮತ್ತು ಆಡಳಿತ ವ್ಯವಸ್ಥೆಯಿಂದ ಸೊರಗಿದೆ. ರಾಜ್ಯ ಸರಕಾರದ ದುರಾಡಳಿತ, ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಬೆಳಗಾವಿಯಿಂದ ಬಳ್ಳಾರಿವರೆಗೆ ಸುಮಾರು 300 ಕಿ.ಮೀ. ಸೈಕಲ್ ಯಾತ್ರೆ ಹಮ್ಮಿಕೊಂಡಿದೆ ಎಂದು ಕೆಆರ್ಎಸ್ಪಿ ಮುಖಂಡ ಪ.ಯ.ಗಣೇಶ ತಿಳಿಸಿದರು.
ಕೊಪ್ಪಳ ಮೀಡಿಯಾ ಕ್ಲಬ್ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 30ರಂದು ಕಿತ್ತೂರಿನಿಂದ ಆರಂಭಗೊಂಡಿರುವ ಸೈಕಲ್ ಯಾತ್ರೆಗೆ ಹಿರಿಯ ಸಾಮಾಜಿಕ ಹೋರಾಟಗಾರ, ಚಿಂತಕ ಎಸ್.ಆರ್.ಹಿರೇಮಠ ಚಾಲನೆ ನೀಡಿದರು. ಡಿಸೆಂಬರ್ 3ರಂದು ಭಾನಾಪುರದವರೆಗೆ ಆಗಮಿಸುವ ಸೈಕಲ್ ಯಾತ್ರೆ ಡಿಸೆಂಬರ್ 4ರಂದು ಕೊಪ್ಪಳಕ್ಕೆ ಆಗಮಿಸಿ ನಗರದ ಮೂರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮುಖಂಡರು ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಡಿಸೆಂಬರ್ 7ರಂದು ಬಳ್ಳಾರಿಯಲ್ಲಿ ಸೈಕಲ್ ಯಾತ್ರೆ ಸಮಾರೋಪಗೊಳ್ಳಲಿದ್ದು, ಆನಂತರ ನಮ್ಮ ಪಕ್ಷವು ಗ್ರಾಪಂ ಚುನಾವಣೆಯತ್ತ ಗಮನ ಹರಿಸಲಿದೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಎಸ್ಆರ್ಪಿಯ ಮುಖಂಡ ಪ್ರಶಾಂತ್ ಕೆ. ಇದ್ದರು.