Home Blog Page 3029

ಮಳೆಗೆ ಕುಸಿದ ಮನೆ, ವೃದ್ಧೆ ಸಾವು

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ರೋಣ: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಪರಿಣಾಮ ವೃದ್ಧೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ನಡೆದಿದೆ.

ಶಂಕ್ರವ್ವ ನಿಂಗನಗೌಡ ಭೀಮನಗೌಡ್ರೆ(70) ಮೃತ ದುರ್ದೈವಿಯಾಗಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಗೆ ಹಳೆಯ ಮನೆ ಕುಸಿದಿದೆ.

ನಸುಕಿನ ವೇಳೆ ಮನೆ ಕುಸಿದ ಪರಿಣಾಮ ವೃದ್ಧೆ ಬಚಾವಾಗಲು ಸಾಧ್ಯವಾಗಿಲ್ಲ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶಿರಹಟ್ಟಿಯಲ್ಲಿ ಖರೀದಿ ನೊಂದಣಿಗೆ ಒಂದು ತಿಂಗಳು ಬೇಕಂತೆ…?

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಶಿರಹಟ್ಟಿ
ಕೊವಿಡ್-19ನಿಂದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವುದಕ್ಕೆ ಸರಕಾರ ಖರೀದಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಉತ್ತೇಜಿಸುತ್ತಿರುವುದರಿಂದ ಸರಕಾರಕ್ಕೂ ಕೂಡಾ ಆದಾಯ ಸಹಜವಾಗಿಯೇ ಬರಲಿದೆ. ಆದರೆ ಇದಕ್ಕೆ ತದ್ವಿರುದ್ದವೆಂಬಂತೆ ಶಿರಹಟ್ಟಿ ತಾಲೂಕಿನಲ್ಲಿ ಮಾತ್ರ ಉಪನೊಂದಣಿ ಅಧಿಕಾರಿ ಕಚೇರಿಯಲ್ಲಿ ಖರೀದಿ ನೊಂದಣಿ ಮಾಡಬೇಕಿದ್ದರೆ ಬರೋಬ್ಬರಿ ಒಂದು ತಿಂಗಳು ಬೇಕಂತೆ… ಹೀಗೆ ಅರ್ಜಿದಾರರು ನೀಡಿದಂತಹ ಅರ್ಜಿಯಲ್ಲಿ ದಿನಾಂಕ ನಮೂದಿಸಿ ಕೊಡುತ್ತಿದ್ದಾರೆ.
ಪರದಾಡುತ್ತಿರುವ ಗ್ರಾಮೀಣ ಪ್ರದೇಶದ ಜನತೆ : ನೊಂದಣಿ ಪ್ರಕ್ರಿಯೆ ಒಂದು ತಿಂಗಳು ಗಟ್ಟಲೇ ವಿಳಂಬವಾಗುತ್ತಿರುವುದರಿಂದ ಸತತ ಬರಗಾಲ ಹಾಗೂ ಅತೀವೃಷ್ಟಿಯಿಂದ ಕಂಗೆಟ್ಟಿರುವಂತಹ ಬಡ ರೈತರು ಹಾಗೂ ಸಾರ್ವಜನಿಕರು ನಿತ್ಯವೂ ಕಚೇರಿಗೆ ಪರದಾಡುವುದು ತಪ್ಪುತ್ತಿಲ್ಲ. ಇದರಿಂದ ಸರಕಾರದ ಬೊಕ್ಕಸಕ್ಕೂ ನಷ್ಟ ಉಂಟಾಗುವುದರ ಜೊತೆಗೆ ವಿವಿಧ ಗ್ರಾಮೀಣ ಪ್ರದೇಶಗಳಿಂದ ಆಗಮಿಸುವಂತಹ ಜನತೆಯು ಇಲ್ಲಿಯ ಆಡಳಿತ ವ್ಯವಸ್ಥೆಗೆ ನಿತ್ಯವೂ ಹಿಡಿಶಾಪ ಹಾಕಿ ತೆರಳುತ್ತಿದ್ದಾರೆ.

ಉಪನೋಂದಣಾಧಿಕಾರಿ ಕಚೇರಿಯಲ್ಲಿ ಖರೀದಿ ಪ್ರಕ್ರಿಯೆ ವಿಳಂಬವಾಗುತ್ತಿರುವುದು ಒಳ್ಳೇಯ ಬೆಳವಣಿಗೆಯಲ್ಲ, ಸರಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಬಾರದು. ನಿಯಮಾನುಸಾರ ಖರೀದಿ ನೊಂದಣಿಯಾಗಬೇಕು. ಇಲ್ಲದೇ ಹೋದಲ್ಲಿ ಇಲ್ಲಿಯ ಅವ್ಯವಸ್ಥೆಯ ಕುರಿತು ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು.
ತಿಪ್ಪಣ್ಣ ಕೊಂಚಿಗೇರಿ, ತಾಪಂ ಸದಸ್ಯ.


ಮಧ್ಯವರ್ತಿಗಳ ದಾರಿ ಸುಗಮ : ನೊಂದಣಿ ಕಚೇರಿಯಲ್ಲಿ ಇತ್ತೀಚಿನ ಕೆಲವು ದಿನಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದ್ದನ್ನು ಇದನ್ನು ಸರಿಪಡಿಸಿಕೊಳ್ಳಬೇಕೆಂದು ಇತ್ತೀಚೆಗೆ ತಾಲೂಕ ಪಂಚಾಯತನಲ್ಲಿ ಜರುಗಿದಂತಹ ಸಭೆಯಲ್ಲಿ ಸದಸ್ಯರು ಉಪನೊಂದಣಾಧಿಕಾರಿಗೆ ಸೂಚನೆ ನೀಡಿದ್ದರೂ ಸಹ ಮಧ್ಯವರ್ತಿಗಳ ಹಾವಳಿ ಕಡಿಮೆಯಾಗಿರುವುದಿಲ್ಲ. ಹೀಗಾಗಿ ಕಚೇರಿಯಲ್ಲಿ ಮಧ್ಯವರ್ತಿಗಳನ್ನು ಹಿಡಿದುಕೊಂಡು ಹೋಗಿ ಹಣ ನೀಡಿದರೆ ಖರೀದಿ ಸುಲಭವಾಗಿಯೇ ಆಗುತ್ತಿದೆ ಎನ್ನುವ ಆರೋಪಗಳು ಸಹ ಇಲ್ಲಿ ಕೇಳಿ ಬರುತ್ತಿವೆ.

ಆಸರೆ, ಮಾರ್ಟಗೇಜ್ ಜಾಸ್ತಿ ಇರುವುದರಿಂದ ಖರೀದಿ ಪ್ರಕ್ರಿಯೆ ವಿಳಂಬವಾಗುತ್ತಿದೆ.
ಎಂ.ವಿ.ಪತ್ತಾರ, ಉಪನೊಂದಣಾಧಿಕಾರಿ.

ತಹಸೀಲ್ದಾರ/ತಾಪಂ ಇಓ ಗಮನ ಹರಿಸಿ :ಕಂದಾಯ ಇಲಾಖೆಯ ಕಚೇರಿಗಳ ಸಂಕೀರ್ಣದಲ್ಲಿಯೇ ಇರುವ ಉಪನೊಂದಣಾಧಿಕಾರಿ ಕಚೇರಿ ಪಕ್ಕದಲ್ಲಿಯೇ ಇದ್ದು ಮಧ್ಯವರ್ತಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತಹಸೀಲ್ದಾರ ಇತ್ತ ಕಡೆ ಗಮನ ಹರಿಸಿ ಇಲ್ಲಿಯ ಅವ್ಯವಸ್ಥೆಯನ್ನು ಸರಿಪಡಿಸುವ ಅವಶ್ಯವಿದೆ. ಇಲಾಖೆಗಳ ಪ್ರಗತಿಪರಿಶೀಲನೆ ನಡೆಸುವ ತಾಲೂಕ ಪಂಚಾಯತ ಕಾರ‍್ಯನಿರ್ವಾಹಕ ಅಧಿಕಾರಿ ಕೇವಲ ಸಭೆಗಳಲ್ಲಿ ಮಾತ್ರ ನಿರ್ದೇಶನ ನೀಡದೇ ವಾಸ್ತವಾಂಶ ತಿಳಿಯಲು ಹಾಗೂ ಬಡ ಜನತೆಗೆ ಅನುಕೂಲ ಕಲ್ಪಿಸುವುದಕ್ಕಾಗಿ ಇಲ್ಲಿ ಭೇಟಿ ನೀಡಿ ಪರಿಶೀಲಿಸಿ ಯೋಗ್ಯ ಕ್ರಮ ವಹಿ ಅವಶ್ಯವಿದೆ.

ಕೃಷಿ ಸಚಿವ ಕೌರವನ ವಿರುದ್ಧ ಕಿಡಿ ಕಾರಿದ ನೌಕರರು!

0

ಬಿಯಸ್ಕೆ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಪೊಲೀಸ್ ಇಲಾಖೆಯಿಂದ ಸಿನಿಮಾ, ಸಿನಿಮಾದಿಂದ ರಾಜಕೀಯಕ್ಕೆ ಬಂದು, ರಾಜಕೀಯದಲ್ಲೂ ಜೆಡಿಎಸ್, ಕಾಂಗ್ರೆಸ್ ಇನ್ನಿಂಗ್ಸ್ ಮುಗಿಸಿ ಇದೀಗ ಬಿಜೆಪಿ ಸರಕಾರದಲ್ಲಿ ಕೃಷಿ ಸಚಿವರಾಗಿರುವ ಬಿ.ಸಿ. ಪಾಟೀಲ ಅಕ್ಷರಶಃ ಇಲಾಖೆಯ ನೌಕರರ ಪಾಲಿಗೆ “ಕೌರವ” ಎನಿಸಿದ್ದಾರೆ.
2020ರ ಜುಲೈ 1ರಂದು ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ವಿನೋದ್.ಆರ್.ಪಿ ಎಂಬುವವರು ನೇರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದ ಪತ್ರದ ಪ್ರತಿಗಳು ಇದೀಗ ವೈರಲ್ ಆಗಿದ್ದು, ಸಚಿವ ಬಿ.ಸಿ.ಪಾಟೀಲ್ ನಡೆ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟು ಹಾಕಿವೆ.
ಜೂನ್ 26, 2020ರ ಸರಕಾರದ ಆದೇಶದಲ್ಲಿ ಜುಲೈ10ರವರೆಗೆ ಇಲಾಖೆಯ ಗ್ರೂಪ್-ಬಿ, ಗ್ರೂಪ್-ಸಿ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆಯ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿತ್ತು.

ಈ ವಿಷಯದಲ್ಲಿ ಅಧಿಕಾರಿಗಳ, ನೌಕರರ ಹಿತ ಕಾಪಾಡಬೇಕಾದ ಕೃಷಿ ಸಚಿವ ಬಿ.ಸಿ.ಪಾಟೀಲ್, ತಮ್ಮ ಇಲಾಖೆಯ ನೌಕರರು ವರ್ಗಾವಣೆ ಬಯಸಿದರೂ ಸರಿ, ಇದ್ದ ಸ್ಥಳದಲ್ಲೇ ಮುಂದುವರಿಯಲು ಇಚ್ಛಿಸಿದರೂ ಸರಿ ಲಕ್ಷಾಂತರ ರೂಪಾಯಿ ಕಡ್ಡಾಯವಾಗಿ ನೀಡಬೇಕು ಎಂದು ಮೌಖಿಕವಾಗಿ ಆದೇಶಿಸಿದ್ದಾರೆ ಎಂಬ ಗಂಭೀರ ಆರೋಪ ಸ್ವತಃ ಕೃಷಿ ಇಲಾಖೆಯ ನೌಕರರೇ ಮಾಡಿದ್ದಾರೆ.

ನಾನು ಯಾವತ್ತೂ ಗಾಳಿಯಲ್ಲಿ ಗುಂಡು ಹೊಡೆಯಲ್ಲ. ಸತ್ಯವನ್ನೇ ಹೇಳ್ತಿನಿ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಪದೇ ಪದೇ ಜಿಲ್ಲೆಗೆ ಬರುವುದು ವಸೂಲಿ ಮಾಡಿ ಸೂಟ್‌ಕೇಸ್ ತುಂಬಿಸಿಕೊಂಡು ಹೋಗೋಕೆ ಅಂತ ಸುಮಾರು ಎರಡು ತಿಂಗಳ ಹಿಂದೆಯೇ ಹೇಳಿದ್ದೆ. ಈಗ ಆ ಸತ್ಯ ನೌಕರರಿಂದಲೇ ಹೊರ ಬಂದಿದಂತಾಗಿದೆ.
-ಶಿವರಾಜ ತಂಗಡಗಿ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಕೊಪ್ಪಳ.

ಕೃಷಿ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಂಥ ಸನ್ನಿವೇಶ ಸೃಷ್ಟಿಯಾಗಿರುವುದು ಅಸಹ್ಯಕರ ಮತ್ತು ದುರದೃಷ್ಟಕರ. ಇಲಾಖೆಯ ಗ್ರೂಪ್ ಬಿ ಮತ್ತು ಸಿ ನೌಕರರಿಗೆ ಇರುವ ವೇತನವಾದರೂ ಎಷ್ಟು? ಹೊರಗಿನಿಂದ ಅವರಿಗೆ ಏನಾದರೂ ಆದಾಯ ಸಿಗುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ನೋ ರೆಸ್ಪಾನ್ಸ್
ಈ ಕುರಿತು ಪ್ರತಿಕ್ರಿಯೆ ಪಡೆಯಲು ಕೃಷಿ ಸಚಿವ ಬಿ.ಸಿ.ಪಾಟೀಲ ಅವರನ್ನು ಸಂಪರ್ಕಿಸಲು ಹಲವು ಸಲ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ.

ಕೃಷಿ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಕೃಷಿ ಸಚಿವರು ಈ ಕುರಿತು ಮಾತನಾಡಿರುವ ಸಾಕ್ಷ್ಯಗಳು ನಮ್ಮ ಬಳಿ ಇದ್ದು, ಮುಖ್ಯಮಂತ್ರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಾಸ್ತವವನ್ನು ಪರಿಶೀಲಿಸಲು ಕೋರಿರುವ ನೌಕರರು, ಆರೋಪ ಸಾಬೀತಾದರೆ ತಕ್ಷಣವೇ ಬಿ.ಸಿ.ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು, ಈ ಪ್ರಕರಣದಲ್ಲಿ ಭಾಗಿಯಾದ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ತಮಗಾಗುತ್ತಿರುವ ಅನ್ಯಾಯವನ್ನು ಒಂದು ವೇಳೆ ತಮ್ಮ ಹಂತದಲ್ಲಿ ಸರಿಪಡಿಸದಿದ್ದರೆ ಪ್ರಧಾನ ಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಗಮನಕ್ಕೂ ವಿಷಯ ತರುವುದಾಗಿಯೂ, ಮತ್ತು ಇಲಾಖೆಯ ನೌಕರರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದಾಗಿಯೂ ಅಳಲು ತೋಡಿಕೊಂಡಿದ್ದಾರೆ.
                                                              ಏಜೆಂಟರ ಮೂಲಕ ಎತ್ತುವಳಿ?
ಸಚಿವರು ನೌಕರರಿಂದ ವಂತಿಗೆ ವಸೂಲಿ ಮಾಡಲು ಕೆಲ ಏಜೆಂಟರನ್ನು ಕಳಿಸುತ್ತಾರೆ. ಯಾವುದೇ ಕೆಲಸಕ್ಕೆ ಬಾರದ ಏಜೆಂಟರು ಅಧಿಕಾರಗಳೊಂದಿಗೆ ದರ್ಪದಿಂದ ವರ್ತಿಸುತ್ತಾರೆ. ತಾವೇ ಸಚಿವರು ಎಂಬಂತೆ ದೌರ್ಜನ್ಯ ಮೆರೆಯುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಸರಕಾರ ಖಾಸಗಿ ಶಾಲಾ ಶಿಕ್ಷಕರಿಗೆ ಗೌರವಧನ ನೀಡಬೇಕು 

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ  
ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 5 ಲಕ್ಷ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಸರಕಾರ ಮಾಸಿಕ 5 ಸಾವಿರದಿಂದ 10 ಸಾವಿರ ರೂ.ವರೆಗೆ ಶಾಲೆ ಆರಂಭವಾಗುವವರೆಗೂ ಪ್ರತಿ ತಿಂಗಳೂ ಗೌರವಧನ ನೀಡಬೇಕು ಮತ್ತು ವಿದ್ಯಾಗಮ ಯೋಜನೆ ಅಡಿಯಲ್ಲಿ ಪಾಠ ಮಾಡಲು ಹೋಗಿ 100 ಕ್ಕೂ ಹೆಚ್ಚು ಮೃತಪಟ್ಟ ಶಿಕ್ಷಕರಿಗೆ ಕೊವಿಡ್-19 ವಾರಿಯರ‍್ಸ್‌ಗೆ  ನೀಡುವ ಪರಿಹಾರ ನೀಡಬೇಕು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ರಾಜ್ಯ ಕಾರ್ಯದರ್ಶಿ ಶಶಿಧರ ದಿಂಡೂರ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ರಾಜ್ಯ ಸರಕಾರ ಶಾಲಾ ಪ್ರಾರಂಭಿಸಲು ಗೊಂದಲದ ಹೇಳಿಕೆ ನೀಡುವ ಮೂಲಕ ಶಿಕ್ಷಣ ಕ್ರಮವನ್ನು ಹಳಿ ತಪ್ಪಿಸುತ್ತಿರುವುದರಿಂದ ಪಾಲಕರು, ಮಕ್ಕಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಡಕ್ಕೆ ಒಳಗಾಗಿವೆ. ಶಾಲಾ ಪ್ರಾರಂಭದ ಬಗ್ಗೆ ಸರಕಾರ ಸ್ಪಷ್ಟ ನಿರ್ದೇಶನ ನೀಡಬೇಕು.
2020-21 ನೇ ಸಾಲಿನ ವಾರ್ಷಿಕ ಪಠ್ಯಕ್ರಮ  ಮತ್ತು ವೇಳಾ ಪಟ್ಟಿಯನ್ನು  ನಿಗಧಿ ಪಡೆಸಬೇಕು. ಶಾಲೆಗಳಲ್ಲಿ ಶುಲ್ಕ ಪಡೆಯುವ ಬಗ್ಗೆ ಸ್ಪಷ್ಟ ಸೂಚನೆ ನೀಡಬೇಕು. ಪಠ್ಯಪುಸ್ತಕಗಳ ಖರೀದಿಗೆ ಖಾಸಗಿ ಶಾಲೆಗಳ ಮೇಲೆ ಒತ್ತಡ ಹೇರಬಾರದು. 2018-19 ಹಾಗೂ 2019-20 ಸಾಲಿನ ಆರ್‌ಟಿಇ ಬಾಕಿ ಶುಲ್ಕವನ್ನು ಮಂಜೂರು ಮಾಡಬೇಕು. ಆನ್‌ಲೈನ್ ಕ್ಲಾಸ್‌ಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಶಾಲಾ ಪುನಾರಂಭಕ್ಕೂ ಮುನ್ನ ಪಾಲಕರ, ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಒಳಗೊಂಡ ಸಮಿತಿಯಲ್ಲಿ ಚರ್ಚಿಸಿ ರೂಪರೇಶ ನಿರ್ದೇರಿಸಬೇಕೆಂದು ಶಶಿಧರ ದಿಂಡೂರ ಸರಕಾರಕ್ಕೆ ಮನವಿ ಮಾಡಿದರು.
ಜಿಲ್ಲಾಧ್ಯಕ್ಷ ಜಯದೇವ ಮೆಣಸಗಿ ಮಾತನಾಡಿ, ಕಳೆದ 6-7 ತಿಂಗಳಿಂದ ಪಾಲಕರು, ಮಕ್ಕಳು ಸರಕಾರದ ಗೊಂದಲದ ನೀತಿಗಳಿಂದ ಒತ್ತಡದಲ್ಲಿದ್ದಾರೆ. ಸಚಿವರು ತಮ್ಮದೇ ಆದ ಗೊತ್ತುವಳಿ, ನಿರ್ದೇಶನ ಮೂಲಕ ಮಕ್ಕಳಿಗೆ, ಪಾಲಕರಿಗೆ ಹಾಗೂ ಶಾಲೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಠ್ಯಕ್ರಮ ಅಳವಡಿಸಬೇಕು. ಸರಕಾರ ತಾರತಮ್ಯ ಮಾಡದೇ ಎಲ್ಲ ಶಾಲೆಗಳಿಗೂ ಒಂದೇರೀತಿ ದಿಕ್ಸೂಚಿ ಸೂಚಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಂ.ಪಿ.ಸೂನಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಕಾನೂನು ಕುರಿತು ಅರಿವು ಮೂಡಿಸುವುದು ಅಗತ್ಯ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಮಗು ಭ್ರೂಣದಲ್ಲಿ ಇರುವಾಗ ಜಾರಿಯಾಗುವ ಕಾನೂನು, ಮರಣದವರೆಗೆ ಅನ್ವಯವಾಗಿರುತ್ತದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂದಾಗಬೇಕಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರಾಜಶೇಖರ ಪಾಟೀಲ ಅವರು ನುಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ, ರಾಜ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ರೋಟರಿ ಗದಗ ಸೆಂಟ್ರಲ್ ಇವರ ಸಹಯೋದಲ್ಲಿ ಜರುಗಿದ ಅರೆ ಕಾಲಿಕ ಸ್ವಯಂ ಸೇವಕರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಕುರಿತು ಅರಿವು ಮೂಡಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿನ ಪ್ರತಿಯೊಬ್ಬ ನಾಗರಿಕರಿಗಾಗಿ ಜಾರಿಯಲ್ಲಿರುವ ಯೋಜನೆ ಹಾಗೂ ಕಾನೂನುಗಳ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಅರೆ ಕಾಲಿಕ ಸ್ವಯಂ ಸೇವಕರಾಗಿ ಆಯ್ಕೆಯಾದ ಪ್ರಶಿಕ್ಷಣಾರ್ಥಿಗಳು ವಿವಿಧ ಕಾನೂನುಗಳ ಕುರಿತು ಮಾಹಿತಿ ಪಡೆದು ಆರ್ಥಿಕವಾಗಿ ದುರ್ಬಲ ಹಾಗೂ ಶೋಷಿತರಿಗೆ ಇವುಗಳ ಅರಿವು ಮೂಡಿಸುವದರ ಜೊತೆಗೆ ಉಚಿತ ಕಾನೂನು ಸೇವೆಗಳನ್ನು ಒದಗಿಸಲು ಮುಂದಾಗುವಂತೆ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಸಾರ್ವಜನಿಕರಲ್ಲಿ ಕಾನೂನಿನ ನೆರವು ಅರಿವು ಕುರಿತು ಜಾಗೃತಿ ಮೂಡಿಸಲು ಕಾನೂನು ಸೇವೆಗಳ ಪ್ರಾಧಿಕಾರವು ಉತ್ತಮ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕಾನೂನುಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಅರೆ ಕಾಲಿಕ ಸ್ವಯಂ ಸೇವಕರನ್ನು ನೇಮಿಸಲಾಗಿದ್ದು ಆಯ್ಕೆಯಾದ ಸ್ವಯಂ ಸೇವಕರು ಈ ತರಬೇತಿಯ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವಂತೆ ತಿಳಿಸಿದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನರಶಿಂಸಾ ಎಂ.ವಿ., ಜಿ.ಪಂ ಸಿಇಒ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ರೋಟರಿ ಗದಗ ಸೆಂಟ್ರಲ್ ಅದ್ಯಕ್ಷ ರಾಜು ಕಂಟಿಗೊಣ್ಣವರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನ್ಯಾಯವಾದಿಗಳು, ನ್ಯಾಯಾಂಗ ಇಲಾಖೆ ಸಿಬ್ಬಂದಿಗಳು, ಸ್ವಯಂ ಸೇವಕರು ಉಪಸ್ಥಿತರಿದ್ದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನ್ಯಾಯವಾದಿಗಳಾದ ಜೆ.ಸಿ.ರಶ್ಮಿ, ಕು.ಸಾವಿತ್ರಿ ಕಬಾಡಿ ವಿವಿಧ ಕಾನೂನುಗಳ ಕುರಿತು ಅರೆ ಕಾಲಿಕ ಸ್ವಯಂ ಸೇವಕರಿಗೆ ಉಪನ್ಯಾಸ ನೀಡಿದರು. ಶ್ರೀಮತಿ ಉಷಾ ನಾಲ್ವಾಡ ಪ್ರಾರ್ಥಿಸಿದರು. ಕು. ಪ್ರಭಾವತಿ ಬೆಟಗೇರಿ ಕಾರ್ಯಕ್ರಮ ನಿರೂಪಿಸಿದರು.

ಹೊರಟ್ಟಿ ಹೇಳಿಕೆಯಲ್ಲಿ ರಾಜಕೀಯ ಪಿತೂರಿ ಅಡಗಿದೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಈ ಹಿಂದೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ಸಿನ ಎಚ್.ಕೆ. ಪಾಟೀಲ ಮತ್ತು ತಮ್ಮ ಮಧ್ಯೆ ಹೊಂದಾಣಿಕೆ ಇತ್ತು ಎನ್ನುವ ಬಸವರಾಜ ಹೊರಟ್ಟಿ ಅವರ ಹೇಳಿಕೆಯಲ್ಲಿ ರಾಜಕೀಯ ಪಿತೂರಿ ಅಡಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಜಿ.ಎಸ್. ಪಾಟೀಲ ಪ್ರತಿಕ್ರಿಯೆ ನೀಡಿದರು.
ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಹೊರಟ್ಟಿ ಅವರು ಶಾಸಕ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಎಚ್.ಕೆ. ಪಾಟೀಲ ಅವರನ್ನು ತೇಜೋವಧೆ ಮಾಡುವುದಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. ಎಚ್.ಕೆ. ಪಾಟೀಲ ಅವರೊಂದಿಗೆ ವಿಷಯಾಧಾರಿತ ಒಪ್ಪಂದ ಇತ್ತು. ಆದರೆ ಈ ಬಾರಿ ಆ ರೀತಿ ಒಪ್ಪಂದ ಇಲ್ಲ. ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎನ್ನುವ ಬಸವರಾಜ ಹೊರಟ್ಟಿ ಅವರ ಹೇಳಿಕೆಯಲ್ಲಿ ಯಾವುದೇ ನಿಜಾಂಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರ ಇಂಥ ಆರೋಪಗಳನ್ನು ಕಾಂಗ್ರೆಸ್ ಪಕ್ಷ ಯಾವುತ್ತೂ ಸಹಿಸುವುದಿಲ್ಲ. ಎಚ್.ಕೆ. ಪಾಟೀಲ ಅವರ ತೇಜೋವಧೆಗೆ ನೀಡಿರುವ ಇಂಥ ಹೇಳಿಕೆಯನ್ನು ಹೊರಟ್ಟಿ ಅವರು ತಕ್ಷಣ ಹಿಂಪಡೆಯಬೇಕು ಮತ್ತು ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಬಸವರಾಜ ಹೊರಟ್ಟಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದ ಚಿತ್ರವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಕಾಂಗ್ರೆಸ್ ಪಕ್ಷ ಮತ್ತು ಸರಕಾರದಲ್ಲಿ ನಾನಾ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಎಚ್.ಕೆ.ಪಾಟೀಲ, ಪ್ರಬುದ್ಧ ರಾಜಕಾರಣಿ ಎಂಬ ಖ್ಯಾತಿ ಹೊಂದಿದ್ದಾರೆ. ಅಂತಹ ನಾಯಕರ ವಿರುದ್ಧ ಇಂತಹ ಸಣ್ಣತನದ ಹೇಳಿಕೆ ನೀಡಿವುದು ಶೋಭೆಯಲ್ಲ. ಒಂದು ವೇಳೆ ಹೊಂದಾಣಿಕೆ ಮಾಡಿಕೊಂಡಿದ್ದೆ ಆದಲ್ಲಿ 2008ರ ಚುನಾವಣೆಯಲ್ಲಿ ಎಚ್.ಕೆ. ಪಾಟೀಲ ಸೋಲುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಮುಖಂಡ ಟಿ.ಈಶ್ವರ ಮಾತನಾಡಿ, ಈ ಹಿಂದೆ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದಲ್ಲಿ ಹೊರಟ್ಟಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೆ. ಆಗ ಹೊರಟ್ಟಿ ಅವರು ಬಿಜೆಪಿಯೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದು ಎಲ್ಲರಿಗೂ ಗೊತ್ತಿರುವುದೇ. ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೂ ಒಳ ಒಪ್ಪಂದಗಳಿವೆ. ಇದೆಲ್ಲವನ್ನೂ ಅರಿತಿರುವ ಜೆಡಿಎಸ್ ವರಿಷ್ಟರು ಹಿಂದಿನ ಸಮ್ಮಿಶ್ರ ಸರಕಾರದಲ್ಲಿ ಹೊರಟ್ಟಿ ಅವರಿಗೆ ಸಚಿವ ಸ್ಥಾನ ನೀಡದೇ, ಅಧಿಕಾರದಿಂದ ದೂರವಿರಿಸಿದರು ಎಂದು ದೂರಿದರು.
ಸಜ್ಜನ ರಾಜಕಾರಣಿ ಎಚ್.ಕೆ.ಪಾಟೀಲ ವಿರುದ್ಧ ಆರೋಪ ಕುರಿತು ನಾಲ್ಕು ದಿನಗಳಲ್ಲಿ ಬಸವರಾಜ ಹೊರಟ್ಟಿ ಅವರು ಕ್ಷಮೆ ಕೋರಬೇಕು. ಇಲ್ಲವೇ ಹೊರಟ್ಟಿಯ ಅವರ ರಾಜಕೀಯ ಒಳಒಪ್ಪಂದಗಳನ್ನು ನಾವು ಬಯಲಿಗೆಳೆಯುತ್ತೇವೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಉಮರ್ ಫಾರೂಕ್ ಹುಬ್ಬಳ್ಳಿ ಉಪಸ್ಥಿತರಿದ್ದರು.

ರೈತ ಸಂಪರ್ಕ ಕೇಂದ್ರದ ಅಧಿಕಾರಿ ವರ್ತನೆಗೆ ಖಂಡನೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ
ಪಟ್ಟಣದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವರ್ತನೆಗೆ ಮತ್ತು ತಾಡಪಲ ವಿತರಣೆಯಲ್ಲಿ ತಾರತಮ್ಯ, ಅವ್ಯವಹಾರ ಖಂಡಿಸಿ ಮಂಗಳವಾರ ಕರ್ನಾಟಕ ರಾಜ್ಯ ದಲಿತ ರೈತ ಸಂಘ ವತಿಯಿಂದ ಉಪತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಕರ್ನಾಟಕ ರಾಜ್ಯ ದಲಿತ ರೈತ ಸಂಘದ ಅಧ್ಯಕ್ಷ ದುರಗೇಶ ಬಂಡಿವಡ್ಡರ ಮಾತನಾಡಿ, ರೈತರ ಅನುಕೂಲಕ್ಕಾಗಿ ಸರ್ಕಾರ ಕೃಷಿ ಇಲಾಖೆಯಿಂದ ಪ್ರತಿ ವರ್ಷ ಸಬ್ಸಿಡಿ ದರದಲ್ಲಿ ತಾಡಪಲಗಳನ್ನು ವಿತರಿಸುತ್ತಿದೆ. ಆದರೆ, ನರೇಗಲ್ಲ ಪಟ್ಟಣದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಾಜಕೀಯ ವ್ಯಕ್ತಿಗಳೊಂದಿಗೆ ಶಾಮೀಲಾಗಿ ನಿಜವಾದ ರೈತರಿಗೆ ತಲುಪಬೇಕಾದ ತಾಡಪತ್ರಿಗಳನ್ನು ರಾಜಕೀಯ, ಗಣ್ಯ ವ್ಯಕ್ತಿಗಳ ಮನೆಗೆ ಸೇರಿಸುತ್ತಿದ್ದಾರೆ.
ಲಾಟರಿ ಮೂಲಕ ಆಯ್ಕೆಯಾದ ಫಲಾನುಭವಿಗಳನ್ನು ಬಿಟ್ಟು, ಕೇವಲ ಎಂಎಲ್‌ಎ, ಸಂಸದರ, ಜಿ.ಪಂ, ತಾ.ಪಂ ಅಧ್ಯಕ್ಷ ಹಾಗೂ ಸದಸ್ಯರ ಮಾತುಗಳನ್ನು ಕೇಳಿ ತಮಗೆ ಬೇಕಾದ ಶ್ರೀಮಂತ ರೈತರಿಗೆ ತಾಡಪತ್ರಿಗಳನ್ನು ನೀಡುತ್ತಿದ್ದಾರೆ. ಕೃಷಿ ಸಾಮಗ್ರಿಗಳ ವಿತರಣೆಯಲ್ಲಿ ಪದೇ ಪದೇ ಕೃಷಿ ಅಧಿಕಾರಿ ಜಾತಿ ತಾರತಮ್ಯ ಮಾಡುತ್ತಿದ್ದಾರೆ. ಆದ್ದರಿಂದ ಕೃಷಿ ಅಧಿಕಾರಿ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು ನರೇಗಲ್ಲ ಸುತ್ತಮುತ್ತಲಿನ ದಲಿತ ರೈತರಿಗೆ ಅನುಕೂಲ ಮಾಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಉಪತಹಸೀಲ್ದಾರ ಅನುಪಸ್ಥಿತಿಯಲ್ಲಿ ನಾಡಕಚೇರಿ ಗಣಕ ಯಂತ್ರ ನಿರ್ವಾಹಕ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ದುರಗಪ್ಪ ಬಂಡಿವಡ್ಡರ, ಯಲ್ಪಪ್ಪ ಮಣ್ಣೊಡ್ಡರ, ರಾಮಣ್ಣ ಹನಮಸಾಗರ, ವೆಂಕಟೇಶ ಬಂಡಿವಡ್ಡರ, ಹನಮಂತಪ್ಪ ಮಣ್ಣೊಡ್ಡರ, ಸುರೇಶ ಮಣ್ಣೊಡ್ಡರ, ಆಂಜನೇಯ ನವಲಗುಂದ, ಕಳೂಳೆಪ್ಪ ಬಂಡಿವಡ್ಡರ, ಹುಚ್ಚಪ್ಪ ಬಂಡಿವಡ್ಡರ, ಅಂಜನೇಯ ಕಟ್ಟಿಮನಿ, ಕಲ್ಲಪ್ಪ ಬಂಡಿವಡ್ಡರ, ದೊಡ್ಡಮರದಪ್ಪ ಕಟ್ಟಿಮನಿ ಸೇರಿದಂತೆ ಇತರರಿದ್ದರು.

ಸ್ಲಂ ಜನರನ್ನು ಕಡೆಗಣಿಸಿದರೆ ಹೋರಾಟ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಡಿಯಲ್ಲಿ ವಸತಿ ಕಲ್ಪಿಸುವಲ್ಲಿ ಸ್ಲಂ ಜನರನ್ನು ಕಡೆಗಣಿಸಿದರೆ ಜಿಲ್ಲಾ ಸ್ಲಂ ಸಮಿತಿಯಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಸಮಿತಿ ಅಧ್ಯಕ್ಷ ಇಮ್ತಿಯಾಜ.ಆರ್.ಮಾನ್ವಿ ಎಚ್ಚರಿಕ್ಕೆ ನೀಡಿದ್ದಾರೆ.
ಅವರು ಜಿಲ್ಲಾ ಸ್ಲಂ ಸಮಿತಿಯ ಆವರಣದಲ್ಲಿ ಕರೆದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಳೆದ ಹಲವಾರು ವರ್ಷಗಳಿಂದ ಗದಗ-ಬೆಟಗೇರಿ ನಗರದ ವಸತಿರಹಿತರಿಗೆ ಹಾಗೂ ಗುಡಿಸಲು ನಿವಾಸಿಗಳಿಗೆ ವಸತಿ ಕಲ್ಪಿಸಲು ಆಗ್ರಹಿಸಿ ಜಿಲ್ಲಾ ಸ್ಲಂ ಸಮಿತಿಯಿಂದ ಹಲವಾರು ಹೋರಾಟಗಳನ್ನು ನಡೆಸಿ ನಮ್ಮ ಭಾಗದ ಜನಪ್ರತಿಗಳಿಗೆ ಹಾಗೂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.
ಆದರೆ ಮೂಲ ವಸತಿರಹಿತರಿಗೆ ಹಾಗೂ ಗುಡಿಸಲು ನಿವಾಸಿಗಳಿಗೆ ವಸತಿ ಕಲ್ಪಿಸಲು ತಾರತಮ್ಯ ನೀತಿ ಅನುಸರಿಸುತ್ತಿರುವುದು ಜಿಲ್ಲಾ ಸ್ಲಂ ಸಮಿತಿಯಿಂದ ಖಂಡಿಸುತ್ತೇವೆ. ಈಗಾಗಲೇ ಘೋಷಿತ ಹಾಗೂ ಅಘೋಷಿತ ಸ್ಲಂಗಳ ಸರ್ವೇ ನಡೆಸಿರುವುದನ್ನು ಪರಿಗಣಿಸಿ ಕನಿಷ್ಠಮಟ್ಟದ ಸೌಲಭ್ಯವಿಲ್ಲದೇ ತಮ್ಮ ಬದುಕನ್ನು ನಡೆಸುತ್ತಿರುವ ಗುಡಿಸಲು ಕುಟುಂಬಗಳಿಗೆ ವಸತಿ ಯೋಜನೆಯನ್ನು ಮಂಜೂರು ಮಾಡಬೇಕು. ಸುಮಾರು ವರ್ಷಗಳಿಂದ ನಿರಂತರವಾಗಿ ಹೋರಾಟಗಳನ್ನು ಮಾಡುತ್ತ ಬಂದಿರುವ ನಗರದ ಮೂಲ ವಸತಿರಹಿತ ಕುಟುಂಬಗಳಿಗೆ ಮನೆಗಳನ್ನು ಹಂಚಿಕೆ ಮಾಡುವ ಕಾರ್ಯ ನಡೆಸಬೇಕೆಂದು ಒತ್ತಾಯಿಸಿದರು.
ಸ್ಲಂ ಸಮಿತಿ ಉಪಾಧ್ಯಕ್ಷ ರವಿಕುಮಾರ ಬೆಳಮಕರ ಮಾತನಾಡಿ, ವಸತಿರಹಿತ ಕುಟುಂಬಗಳ ಹೋರಾಟಗಳ ಮೂಲಕ ಎಚೆತ್ತುಕೊಂಡ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಪ್ರಧಾನ ಮಂತ್ರಿ ಆವಾಸ್ ಯೋಜನೆಡಿಯಲ್ಲಿ ಸಾವಿರಾರು ಮನೆಗಳನ್ನು ಮಂಜೂರು ಮಾಡಿ ಮನೆಗಳು ನಿರ್ಮಾಣ ಹಂತದಲ್ಲಿವೆ. ಮನೆ ಹಂಚಿಕೆಯ ಆಯ್ಕೆ ಪ್ರಕ್ರಿಯ ಸಂದರ್ಭದಲ್ಲಿ ನಿಜವಾದ ವಸತಿರಹಿತರ ಕುಟುಂಬಗಳನ್ನು ಆಯ್ಕೆ ಮಾಡಬೇಕು. ಇಲ್ಲವಾದಲ್ಲಿ ಸ್ಲಂ ಸಮಿತಿಯಿಂದ ಅನಿರ್ದಿಷ್ಟ ಧರಣಿಸತ್ಯಾಗ್ರಹ ನಡೆಸಲಾಗುವುದು ಎಂದರು.
ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ ಮುಂದಿನ ಹೋರಾಟದ ರೂಪರೇಷಗಳ ಕುರಿತು ಮಾತನಾಡಿದರು. ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೆಹರುನಿಸಾ ಢಾಲಾಯತ, ವಿಶಾಲಕ್ಷಿ ಹಿರೇಗೌಡ್ರ, ಭಾರತಿ ಬಗಾಡೆ, ನಜಮುನಿಸಾ ಮುರಗೋಡ, ಪುಷ್ಪಾ ಬಿಜಾಪೂರ, ಹಸೀನಾ ಕೊಪ್ಪಳ, ಮರ್ದಾನಬಿ ಬಳ್ಳಾರಿ, ಯುವ ಸಮಿತಿ ಅಧ್ಯಕ್ಷ ವಿಕ್ರಮ.ಎಫ್.ಜಿ, ಜಾಫರ ಢಾಲಾಯತ, ಸಲೀಮ ಕದಡಿ, ಶರಣಪ್ಪ, ಚಾಂದಸಾಬ ಬದಾಮಿ ಹಾಗೂ ನಗರದ ವಿವಿಧ ಸ್ಲಂ ಪ್ರದೇಶದ ನೂರಾರು ಸ್ಲಂ ನಿವಾಸಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪೈಪ್‌ಲೈನ್ ಕಾಮಗಾರಿಯಿಂದ ಭೂ ಕುಸಿತ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ
ಪಟ್ಟಣದ ವಾರ್ಡ್ ನಂ.12 ಇತ್ತೀಚೆಗೆ ಸುರಿದ ಮಳೆಯಿಂದಾಗಿ ಭೂ ಕುಸಿತ ಕಂಡಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಇತ್ತೀಚಿಗೆ ಪ.ಪಂ ವತಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಪೈಪ್‌ಲೈನ್ ಕಾಮಗಾರಿಗಾಗಿ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಪಡೆದ ಗುತ್ತಿಗೆದಾರ ಕಾಮಗಾರಿ ಮುಗಿದ ನಂತರ ಸರಿಯಾಗಿ ಮಣ್ಣು ಮುಚ್ಚದ ಪರಿಣಾಮ ಮಳೆಯಿಂದಾಗಿ ರಸ್ತೆಯ ಮಧ್ಯದಲ್ಲಿ ಭೂ ಕುಸಿತ ಕಂಡಿದೆ ಎನ್ನಲಾಗುತ್ತಿದೆ.
ಭೂ ಕುಸಿತ ಉಂಟಾಗಿರುವುದರಿಂದ ಸಾರ್ವಜನಿಕರು ಈ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುವುದಕ್ಕೆ ಮತ್ತು ಪಾದಾಚಾರಿಗಳಿಗೆ ಭಯ ಸೃಷ್ಟಿಯಾಗಿದೆ. ಕುಸಿತ ರಸ್ತೆಯಲ್ಲಿ ಹೋಗುವಾಗ ಏನಾದರೂ ಅಪಾಯ ಸಂಭವಿಸಿದರೆ ಯಾರು ಹೊಣೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಅಲ್ಲದೇ ಈ ಭೂ ಕುಸಿತದಿಂದ ಸುತ್ತಮುತ್ತಲಿನ ಮನೆಗಳಲ್ಲಿ ಮಳೆಯ ನೀರು ಒಳಗೆ ಬರುವ ಭಯ ಪ್ರಾರಂಭವಾಗಿದೆ.
ಸುಮಾರು 50 ಕ್ಕೂ ಅಧಿಕ ಅಡಿ ದೂರದ ವರೆಗೆ ಭೂ ಕುಸಿತ ಕಂಡಿದೆ. ಒಂದು ಮಳೆಗೆ ಈ ರೀತಿಯಾದರೆ, ಮುಂದಿನ ದಿನಗಳಲ್ಲಿ ಭಾರಿ ಪ್ರಮಾಣದ ಮಳೆಗಳದರೆ ಗತಿಯೇನು ಎನ್ನುವಂತಾಗಿದೆ.
ಅಪಾಯ ನಿರ್ಮಾಣವಾಗುವ ಮೊದಲೇ ಪ.ಪಂ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಈ ರಸ್ತೆಯನ್ನು ದುರಸ್ತಿ ಕಾರ್ಯ ಮಾಡಿಸಿಬೇಕು ಎಂದು ನರೇಗಲ್ಲ ಪಟ್ಟಣದ ನಿವಾಸಿ ಆನಂದ ಕೊಟಗಿ ಆಗ್ರಹಿಸಿದ್ದಾರೆ.

ಬೆಳೆ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯ ಹೊಸ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ನೆರೆ ಮತ್ತು ಮಳೆಗೆ ಹಾನಿಯುಂಟಾಗಿರುವ ಕುರಿತು ಜಂಟಿ ಬೆಳೆ ಸಮೀಕ್ಷೆ ಕೈಗೊಂಡು ಶೀಘ್ರವೇ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಸರ್ಕಾರದಿಂದ ಸಿಗುವ ಪರಿಹಾರವನ್ನು ರೈತರಿಗೆ ಸಕಾಲಕ್ಕೆ ಸಿಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ನಿರ್ದೇಶನ ನೀಡಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಂಟಿ ಬೆಳೆ ಸಮೀಕ್ಷೆ ಮತ್ತು ಬೆಳೆ ಸಮೀಕ್ಷೆ ಮತ್ತು ಬೆಳೆ ವಿಮೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಹಂಗಾಮಿನಲ್ಲಿ ಆಗಷ್ಟ್ ಹಾಗೂ ಸೆಪ್ಟಂಬರ್ ತಿಂಗಳಲ್ಲಿ ಸುರಿದ ಹೆಚ್ಚಿನ ಮಳೆಯಿಂದಾಗಿ ಜಿಲ್ಲೆಯ ಏಳು ತಾಲೂಕುಗಳನ್ನು ಅತಿವೃಷ್ಠಿ ಹಾಗೂ ಪ್ರವಾಹ ಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಿಸಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿ ಆಗಿರುವ ಪ್ರದೇಶಗಳಿಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಅಲ್ಲದೇ, ಜಂಟಿ ಬೆಳೆ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಮುಕ್ತಾಯಗೊಳಿಸಿ ಬೆಳೆ ಹಾನಿಯ ಬಗ್ಗೆ ಪರಿಹಾರ ಪೋರ್ಟಲ್‌ನಲ್ಲಿ ನಮೂದಿಸಬೇಕು ಎಂದರು.
ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆಗಳು ಹೆಚ್ಚು ಹಾನಿಗೊಳಗಾಗಿವೆ. ಹೀಗಾಗಿ ಜಂಟಿ ಸಮೀಕ್ಷೆ ಕಾರ್ಯದಲ್ಲಿ ಯಾವ ರೈತರು ಬಿಟ್ಟು ಹೋಗದಂತೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು. ಈಗಾಗಲೇ ಬೆಳೆ ವಿಮೆ ತುಂಬಿರುವ ರೈತರ ಬೆಳೆ ಮಳೆಗೆ ಹಾಳಾಗಿದ್ದರೆ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಮಾತನಾಡಿ, ಜಿಲ್ಲೆಯಲ್ಲಿ ಶೇ. 99.2 ರಷ್ಟು ಬೆಳೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ. ರೈತರು ಮಾಡಿರುವ ಸಮೀಕ್ಷೆಯಲ್ಲಿ 13,350 ಮರಳಿ ಸರ್ವೇ ಮಾಡಿದೆ. ಬೆಳೆ ಸಮೀಕ್ಷೆ ಕುರಿತು ಸಲ್ಲಿಕೆ ಆಗಿದ್ದ ಸುಮಾರು 396 ಆಕ್ಷೇಪಣಾ ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 74 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಆಗಿದ್ದು, ಪ್ರತಿ ಎಕರೆಗೆ 15 ರಿಂದ 20 ಕ್ವಿಂಟಾಲ್ ಇಳುವರಿ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.
ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕಂದಾಯ ಇಲಾಖೆಯ ಅಧಿಕಾರಿಗಳು, ಲೀಡ್ ಬ್ಯಾಂಕ್ ಮುಖ್ಯಸ್ಥರು, ವಿಮಾ ಕಂಪನಿಯ ಪ್ರತಿನಿಧಿಗಳು ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.
 

error: Content is protected !!