Home Blog Page 3075

ದಲಿತ ಮುಖಂಡನ ಬರ್ಬರ ಹತ್ಯೆ: ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮುಖಂಡ

ವಿಜಯಸಾಕ್ಷಿ ಸುದ್ದಿ, ಚಿಕ್ಕಬಳ್ಳಾಪುರ: ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ, ದಲಿತ ಸಂಘರ್ಷ ಸಮಿತಿ ಮುಖಂಡರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೋಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೋಗೇನಹಳ್ಳಿ ನರಸಿಂಹಪ್ಪ (45) ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯಲಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ರಿಯಲ್ ಎಸ್ಟೇಟ್ ಉದ್ಯಮದಲ್ಲಿನ ವ್ಯವಹಾರ ಅಥವಾ ಹಳೆ ವೈಷಮ್ಯ ಕಾರಣವಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಸ್ಥಳಕ್ಕೆ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನೂತನ ಗ್ರಾ.ಪಂ.ಅಧ್ಯಕ್ಷೆ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು!

0

ವಿಜಯಸಾಕ್ಷಿ ಸುದ್ದಿ, ಕೋಲಾರ: ಗ್ರಾಮ ಪಂಚಾಯತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯೆಯ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಆರೋಪ ಕೇಳಿಬಂದಿದೆ.

ಚುನಾವಣೆ ಮುಗಿದರೂ ಅದರ ಕಾವು ಆರಿಲ್ಲ ಎನ್ನುವಂತಹ ಈ ಘಟನೆ ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ರಾಜೆಂದ್ರಹಳ್ಳಿಯಲ್ಲಿ ನಡೆದಿದೆ.

ಶನಿವಾರ ನೂತನವಾಗಿ ಗ್ರಾಮಪಂಚಾಯತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ನೂರ್ ಜಹಾನ್ ಎಂಬುವವರ ಮನೆಗೆ ಬೆಂಕಿ ಹಚ್ಚಲಾಗಿದೆ. ಇವರು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲದಿಂದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ವಿರೋಧಿ ಗುಂಪಿನವರು ಬೆಂಕಿ ಹಚ್ಚಿದ್ದಾರೆ ಎಂದು ನೂರ್ ಜಹಾನ್ ಆರೋಪ ಮಾಡಿದ್ದಾರೆ.

ಹೆಂಚಿನ ಮನೆಯಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉದ್ದೇಶ ಪೂರ್ವಕವಾಗಿ ಕಿಟಕಿ ಮೂಲಕ ಒಣ ಹುಲ್ಲನ್ನು ಹಾಕಿ ಬೆಂಕಿ ಹಾಕಲಾಗಿದೆ.

ಸ್ಥಳಕ್ಕೆ ಮುಳಬಾಗಲು ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ನಂಗಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರೈತರಿಗೆ ಸ್ವಾತಂತ್ರ್ಯ ಸಿಕ್ಕಿಲ್ಲವೆಂದ ಕೇಂದ್ರ ಸಚಿವ ಸದಾನಂದಗೌಡ

ವಿಜಯಸಾಕ್ಷಿ ಸುದ್ದಿ, ಮೈಸೂರು

ರಿಹಾನ ಏನಾದರೂ ಭತ್ತದ ಗದ್ದೆ ನೋಡಿದ್ದಾರಾ?. ಬಹುಶಃ ಅವರು ಭತ್ತದ ಗದ್ದೆ ಮುಂದೆ ನಿಂತು ಪೋಟೋ ತೆಗೆಸಿಕೊಂಡು ಹೋಗಿರಬಹುದು ಎಂದು ಪಾಪ್ ಸಿಂಗರ್ ರಿಹಾನ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ರಿಹಾನಗೆ ರೈತರ ಶ್ರಮದ ಬಗ್ಗೆ ಏನು ಗೊತ್ತಿದೆ. ರೈತರು ಮಾರಾಟ ಹೇಗೆ ಮಾಡ್ತಾರೆ ಅಂತಾ ರಿಹಾನಗೆ ಗೊತ್ತಾ? ಎಂದು ಪ್ರಶ್ನಿಸಿರುವ ಅವರು,
ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಅವರು ಯಾವತ್ತಾದರೂ ಭತ್ತದ ಗದ್ದೆಯನ್ನಾದ್ರೂ ನೋಡಿದ್ರೆ ಹೇಳಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಆದರೆ ರೈತನಿಗೆ ಇನ್ನು ಸ್ವಾತಂತ್ರ್ಯ ಸಿಕ್ಕಿಲ್ಲ.
ರೈತನಿಗೆ ಆತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ನಾವು ಸ್ವಾತಂತ್ರ್ಯ ನೀಡುತ್ತಿದ್ದೇವೆ ಎಂದು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.

ರೈತರು ಈಗ ಸರ್ಕಾರದ ಕೈಗೊಂಬೆಯಾಗಿದ್ದಾರೆ.
ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ.
ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುತ್ತಾರೆ ಎಂದರೆ ಕೊಡಲಿ ಬಿಡಿ.
ಸುಮ್ಮನೆ ಏಕೆ ಹಠ ಮಾಡುತ್ತೀರಾ?
ರೈತರಿಗೆ ಬೆಂಬಲ ಬೆಲೆ ನೀಡಿದ್ದು ಮೋದಿ ಸರ್ಕಾರ ಎಂದರು.

ಪ್ರತಿಭಟನೆಗಳು ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆಯುತ್ತಿವೆ. ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ನಾವು ಹೊಂದಾಣಿಕೆಯಾಗಿದ್ದೀವಿ, ಮಾತುಕತೆಗೂ ಸಿದ್ಧರಿದ್ದೀವಿ.
ಆದರೆ ರೈತರೇ ಹಠ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.

ಪಿಎಸ್ಐಗೆ ಮೋಸ ಮಾಡಿದ ಖತರ್ನಾಕ್ ಖದೀಮ!

0

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಪೊಲೀಸರ ಬಳಿ ಮೋಸ ಹೋದವರು ಹೋಗಿ ದೂರು ನೀಡುವುದು ಎಲ್ಲೆಡೆ ಕಾಮನ್. ಆದರೆ ಇಲ್ಲೊಬ್ಬ ಪಿಎಸ್ಐ ಅವರು ಸ್ವತಃ ತಾವೇ ಖತರ್ನಾಕ್ ಖದೀಮನ ವಂಚನೆಗೊಳಗಾಗಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ.

ಹೌದು ಈ ಘಟನೆ ನಡೆದಿರೋದು ಕಲಬುರಗಿಯಲ್ಲಿ ಇಲ್ಲಿನ ಡಿಸಿಬಿ ಪಿಎಸ್ಐ ಮಂಜುನಾಥ ಹೂಗಾರ ಮೋಸಗಾರನ ಮಾತು ನಂಬಿ ಹಣ ಕೊಟ್ಟು ಮೋಸ ಹೋಗಿದ್ದಾರೆ‌. ಇನ್ನು ಸ್ಥಳೀಯ ಚಾನಲ್ ವೊಂದರ ವರದಿಗಾರ ಎಂದು ಹೇಳಿಕೊಂಡಿರುವ ಖಾಸಿಂ ಪಟೇಲ್ ಪಿಎಸ್ಐ ಮಂಜುನಾಥ್ ಅವರಿಗೆ ಚಳ್ಳೆ ಹಣ್ಣು ತಿನಿಸಿರುವ ಖತರ್ನಾಕ್ ಖದೀಮನಾಗಿದ್ದಾನೆ.

ಮೋಸಕ್ಕೊಳಗಾದ ಪಿಎಸ್ಐ ಮಂಜುನಾಥ್

ಕಲಬುರಗಿ ಎಸ್ಪಿ ನನಗೆ ತುಂಬಾ ಕ್ಲೋಸ್ ಅಂತ ಹೇಳಿ ಪಿಎಸ್ಐ ಕಡೆಯಿಂದಲೇ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ ಖತರ್ನಾಕ್ ಆಸಾಮಿ ಖಾಸೀಂ ಪಟೇಲ್ ಈಗ ಅಂದರ್ ಆಗಿದ್ದಾನೆ.

ಇದು SP ಮೇಡಂ ಮೇಡಂರ ಪರ್ಸನಲ್ ನಂಬರ್ ಅಂತ ಬೇರೊಂದು ನಂಬರ್ ನೀಡಿದ್ದ. ಎಸ್ಪಿ ಅವರ ಡಿಪಿ ನೋಡಿ ಎಸ್ಪಿ ಎಂದೇ ನಂಬಿ ಚಾಟ್ ಮಾಡಿದ್ದ ಪಿಎಸ್ಐ ಮಂಜುನಾಥ ಹೂಗಾರ 8 ಲಕ್ಷ 50 ಸಾವಿರ ರೂಪಾಯಿ ಕೊಟ್ಟಿದ್ದ. ನಂತರ ಅನುಮಾನಗೊಂಡು ಎಸ್ಪಿ ಅವರನ್ನು ಭೇಟಿ ಮಾಡಿದಾಗ ನಿಜಾಂಶ ಬಯಲಾಗಿದ್ದು, ತಾನು ಮೋಸ ಹೋಗಿದ್ದಾಗಿ ತಿಳಿದ ಪಿಎಸ್ಐ ಮಂಜುನಾಥ್ ದೂರು ನೀಡಿದ್ದರು.

ಪಿಎಸ್ಐ ನೀಡಿದ ದೂರು ಆಧರಿಸಿ ಆರೋಪಿ ಖಾಸಿಂ ಪಟೇಲ್ ನನ್ನು ಕಲಬುರಗಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಪಿಎಸ್ಐ ಮಂಜುನಾಥ್ ಎಸ್ಪಿ ಗೆಸರು ಹೇಳಿದ ಕೂಡಲೇ ಲಕ್ಷಾಂತರ ರೂಪಾಯಿ ಹಣ ನೀಡಿದ ಉದ್ದೇಶವೇನು ಎನ್ನೋ ವಿಚಾರ ಮಾತ್ರ ಹೊರಬರಬೇಕಿದೆ.

ಟೈಯರ್, ಟ್ಯೂಬ್ ಕದ್ದವರ ಬಂಧನ: 2 ಲಕ್ಷ ರೂ. ಸರಕು ಜಪ್ತಿ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಇಲ್ಲಿನ ಗೋಕುಲ ರಸ್ತೆಯ ಇಂಡಸ್ಟ್ರೀಯಲ್ ಎಸ್ಟೇಟ್‌ನಲ್ಲಿನ ಶ್ರೀಶಿವಶಕ್ತಿ ಎಂಟರ್‌ಪ್ರೈಜಿಸ್ ಗೋಡೌನನಲ್ಲಿದ್ದ ಟೈಯರ್, ಟ್ಯೂಬ್ ಮತ್ತು ಪ್ಲ್ಯಾಪ್‌ಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಖದೀಮರನ್ನು ಬಂಧಿಸುವಲ್ಲಿ ಗೋಕುಲ್ ರಸ್ತೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಗೋಕುಲ ರಸ್ತೆಯ ಮಾರುತಿನಗರದ ಹಳ್ಳೆಪ್ಪ ದೇವಪ್ಪ ಪೂಜಾರ ಹಾಗೂ ಗದಗ-ಬೆಟಗೇರಿ ನರಸಾಪೂರದ ವಸೀಂ ಮಕ್ತುಮಸಾಬ್ ಸೈದಾಪೂರ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಸುಮಾರು 2 ಲಕ್ಷ 10 ಸಾವಿರ ರೂ.ಮೌಲ್ಯದ ಟ್ರಕ್‌ನ(ಲಾರಿ) 11 ಟೈಯರ್, ಟ್ಯೂಬ್ ಹಾಗೂ ಪ್ಲ್ಯಾಪ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಗೋಡೌನದ ಸಿಮೆಂಟ್ ಸೀಟಿನ ನಟ್ ಬೋಲ್ಟ್ ಬಿಚ್ಚಿ ಗೋಡೌನದಲ್ಲಿ ಇಳಿದು ಕಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ಖದಿಮರು ಬಾಯಿ ಬಿಟ್ಟಿದ್ದಾರೆ. ಇನ್ನು ಕಳ್ಳತನಕ್ಕೆ ಸಹಾಯ ಸಹಕಾರ ನೀಡಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರೆಸಿದ್ದಾರೆ.

ನಾಯಕತ್ವ ಬದಲಾವಣೆಗೆ ಮೀಸಲಾತಿ ಹೋರಾಟ ಕಾರಣವಾಗಬಹುದು: ಸಿದ್ಧರಾಮಶ್ರೀ ಎಚ್ಚರಿಕೆ

ವಿಜಯಸಾಕ್ಷಿ ಸುದ್ದಿ, ಗದಗ

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸುವಂಥದ್ದು ಸರಕಾರದ ಕರ್ತವ್ಯ ಎಂದು ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.

ಪಂಚಮಸಾಲಿ ೨ಎ ಮೀಸಲಾತಿ ಹೋರಾಟ ಕುರಿತು ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಮೀಸಲಾತಿ ಹೋರಾಟ ಇಂದು ನಿನ್ನೆಯದಲ್ಲ. ಮೀಸಲಾತಿಗಾಗಿ ಹಲವು ದಶಕಗಳಿಂದ ಹೋರಾಟ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಈ ಬಗ್ಗೆ ಮೀನಾಮೇಷ ಎಣಿಸಬಾರದು. ಕಾಲಹರಣ ಮಾಡದೇ ಬೇಗನೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಜಾತಿಸಂಘಟನೆ ವಿಷಯಗಳನ್ನು ಸರಕಾರ ನಿರ್ಲಕ್ಷಿಸಬಾರದು.
ಜಾತಿ ಸಂಘರ್ಷ ನಿರ್ಲಕ್ಷಿಸಿದರೆ, ದೊಡ್ಡ ಅನಾಹುತಕ್ಕೆ ಕಾರಣವಾಗುತ್ತದೆ.
ಸಮುದಾಯದವರು ರೊಚ್ಚಿಗೇಳುತ್ತಾರೆ. ಇದರಿಂದ ಸಾರ್ವಜನಿಕ ಆಸ್ತಿ, ಪಾಸ್ತಿಗಳು ಹಾನಿಯಾಗಬಹುದು. ಅಂತಹ ಘಟನೆಗಳಿಗೆ ಸರಕಾರ ಹೊಣೆಯಾಗಬಾರದು ಎಂದು ಕಿವಿಮಾತು ಹೇಳಿದರು.

ಮೀಸಲಾತಿ ಪಡೆಯುವದು ಅವರ ಹಕ್ಕು, ಅದೇನೂ ಭಿಕ್ಷೆ ಅಲ್ಲ.
ಮುಂದಿನ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು.
ಸಮುದಾಯ ಒಟ್ಟಾಗಿ ಕೆಲಸ ಮಾಡಿದಲ್ಲಿ ಸರಕಾರ ಬಿದ್ದು ಹೋಗುವ ಸಂದರ್ಭ ಬರಬಹುದು. ಸಮಾಜದ ಎಲ್ಲ ಶಾಸಕರು ಪಕ್ಷಭೇದ ಮರೆತು ರಾಜೀನಾಮೆಗೆ ತಯಾರಾದರೆ, ಮೀಸಲಾತಿ ಕೊಡಲೇಬೇಕಾಗುತ್ತದೆ.
ನಾಯಕತ್ವ ಬದಲಾವಣೆಗೆ ಸಾಕಷ್ಟು ಕಾರಣಗಳಿರುತ್ತವೆ. ಮುಂದೊಂದು ದಿನ ಮೀಸಲಾತಿ ವಿಷಯವೂ ನಾಯಕತ್ವ ಬದಲಾವಣೆಗೆ ಕಾರಣವಾಗಬಹುದು ಎಂದು ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.

ಎಸಿಬಿ ಬಲೆಗೆ ತೋಟಗಾರಿಕಾ ಸಹಾಯಕ ನಿರ್ದೇಶಕ

0

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ: ಹನಿ ನೀರಾವರಿ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಹಣ ಮಂಜೂರಾತಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಗುಂಡ್ಲುಪೇಟೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಅಧಿಕಾರಿಯಾಗಿದ್ದಾರೆ.

ಎಸಿಬಿ ಅಧಿಕಾರಿಗಳಿಂದ ಕಡತ ಪರಿಶೀಲನೆ

ಹನಿ‌ನೀರಾವರಿ ಯೋಜನೆಯ ಸಲಕರಣೆಗಳ ವಿತರಕ ಕಡಬೂರು ಮಂಜು ರವರ ಬಳಿ 50 ಸಾವಿರ ರೂಪಾಯಿ ಬೇಡಿಕೆಯಿಟ್ಟಿದ್ದ ಶಿವಲಿಂಗಪ್ಪರವರಿಂದ ಬೇಸತ್ತ ಕಡಬೂರು ಮಂಜು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಎಸಿಬಿಗೆ ಬಂದ ದೂರಿನನ್ವಯ ಡಿವೈಎಸ್ಪಿ ಸದಾನಂದ, ಇನ್ಸ್ ಪೆಕ್ಟರ್ ದೀಪಕ್, ಕಿರಣ್, ಸಿಬ್ಬಂದಿಗಳಾದ ಸತೀಶ್, ಮಹದೇವಸ್ವಾಮಿ, ಕಾರ್ತಿಕ್, ನಾಗೇಂದ್ರ ರವರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದರೆ.

ಗುಂಡ್ಲುಪೇಟೆ ತಾಲೂಕಿನ ರೈತರಿಗೆ ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣ ಮಂಜೂರು ಮಾಡಲು ಪ್ರತಿ ಘಟಕಕ್ಕೆ ಇಂತಿಷ್ಟು ಎಂದು ಲಂಚದ ಹಣ ನಿಗದಿಪಡಿಸಿದ್ದ ಶಿವಲಿಂಗಪ್ಪ ಎಸಿಬಿ ದಾಳಿಗೆ ಬೆಚ್ಚಿ ಬಿದಿದ್ದಾರೆ.

ಕುಡಿದು ಬೈಕ್ ಚಲಾಯಿಸಿದ ಸವಾರನಿಗೆ 10 ಸಾವಿರ ದಂಡ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಟ್ರಾಫಿಕ್ ರೂಲ್ಸ್ ಗಳನ್ನು ಕಟ್ಟು ನಿಟ್ಟಾಗಿ ಜಾರಿತರಲಾಗುತ್ತಿದೆ. ಕೊಪ್ಪಳ ಸಬ್ ಡಿವಿಷನ್ ನಲ್ಲಿ ಇದೇ ತಿಂಗಳ 2ರಂದು 22 ಡ್ರಂಕ್ ಆಂಡ್ ಡ್ರೈವ್ ಕೇಸ್ ಗಳನ್ನು ಪೊಲೀಸರು ದಾಖಲಿಸಿದ್ದರು. ಆ ಕೇಸ್ ನಲ್ಲಿ ಕುಡಿದು ಬೈಕ್ ಚಲಾಯಿಸುತ್ತಿದ್ದ ವಾಹನ ಸವಾರನಿಗೆ ಕೊಪ್ಪಳ ಪಿ. ಸಿವಿಲ್ ಜಡ್ಜ್ & ಜೆಎಮ್ ಎಫ್ ಸಿ ಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ 10ಕ್ಕೂ ಹೆಚ್ಚು ವಾಹನಗಳ ಅಪಘಾತ ಸಂಭವಿಸಿವೆ. ಅದರಲ್ಲಿ ಬೈಕ್ ಆಕ್ಸಿಡೆಂಟ್ ಗಳೇ ಹೆಚ್ಚು. ಅದರಲ್ಲಿ 8 ಜನ ಸವಾರರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಲ್ಮೆಟ್ ಧರಿಸದೇ ಇರುವುದಕ್ಕೆ ಸಂಭವಿಸಿದ ಸಾವುಗಳೇ ಹೆಚ್ಚು. ಹೀಗಾಗಿ ಕಳೆದ ಹಲವಾರು ದಿನಗಳಿಂದ ಕಟ್ಟು ನಿಟ್ಟಾಗಿ ಎಲ್ಲ ವಾಹನಗಳ ಪರಿಶೀಲನೆ ಮಾಡಲಾಗುತ್ತಿದೆ.

ದಿ.2ರಂದು ಕೊಪ್ಪಳ ಸಬ್ ಡಿವಿಜನ್ ನಲ್ಲಿ 275 ಹೆಲ್ಮೆಟ್ ರಹಿತ ಸವಾರರಿಗೆ ದಂಡ ವಿಧಿಸಲಾಗಿದ್ದು. 1,35,500/- ರೂ ಗಳನ್ನು ವಸೂಲಿ ಮಾಡಲಾಗಿದೆ. ಡ್ರಂಕ್ ಆಂಡ್ ಡ್ರೈವ್ 22 ಕೇಸ್ ಗಳ ದಂಡವನ್ನು ನ್ಯಾಯಾಲಯವು ವಿಧಿಸುತ್ತದೆ. ವಾಹನವನ್ನು ವಶಕ್ಕೆ ಪಡೆಯಲಾಗಿರುತ್ತದೆ. ದಂಡ ಕಟ್ಟಿಬಂದು ವಾಹನ ಬಿಡಿಸಿಕೊಂಡು ಹೋಗಬೇಕು. ದಂಡ ವಸೂಲಿ ಮಾಡುವುದು ಮುಖ್ಯವಲ್ಲ . ಜನರಲ್ಲಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಬೇಕಿದೆ. ಈ ಕಾರಣಕ್ಕಾಗಿ ಕೇಸ್ ಗಳನ್ನು ದಾಖಲಿಸಲಾಗುತ್ತಿದೆ. ಜನರ ಪ್ರಾಣ ರಕ್ಷಣೆ ಬಹಳ ಮುಖ್ಯ ಜನರೂ ಸಹ ಜಾಗೃತರಾಗಬೇಕು ಎಂದು ಕೊಪ್ಪಳ ಡಿವೈಎಸ್ಪಿ ವೆಂಕಟಪ್ಪ ನಾಯಕ್ ಹೇಳಿದ್ದಾರೆ.

‘ಪಶು ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರೇ ಇಲ್ಲ! ಕಾಲೇಜು ಅಭಿವೃದ್ಧಿಗಾಗಿ 67 ಕೋಟಿ ರೂ. ಪ್ರಸ್ತಾವನೆ: ಬೋಧಕ ಸಿಬ್ಬಂದಿ ಕೊರತೆ, ಪ್ರವೇಶಕ್ಕೆ ಹಿಂದೇಟು?

ದುರ್ಗಪ್ಪ ಹೊಸಮನಿ
ವಿಜಯಸಾಕ್ಷಿ ವಿಶೇಷ, ಗದಗ

ತಾಲೂಕಿನ ಹೊಂಬಳ ರಸ್ತೆಯಲ್ಲಿ ಸುಮಾರು 162 ಎಕರೆ ವಿಸ್ತೀರ್ಣದ ಜಾಗದಲ್ಲಿ ನಿರ್ಮಾಣಗೊಂಡಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಸೂಕ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯಿಲ್ಲದೆ ನರಳುತ್ತಿದೆ. ಅನುದಾನದ ಅಭಾವದಿಂದಾಗಿ ಮೂಲಸೌಲಭ್ಯಗಳ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಆರಂಭದಿಂದಲೂ ಮಹಾವಿದ್ಯಾಲಯ ಹಲವು ಸಮಸ್ಯೆಗಳನ್ನು ಎದುರಿಸುತ್ತಲೇ ಇದೆ.
ಬೀದರ್‌ನಲ್ಲಿರುವ ರಾಜ್ಯದ ಏಕೈಕ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಕೆವಿಎಎಫ್‌ಎಸ್‌ಯು) ಸಹಿತ ರಾಜ್ಯದ ಬಹುತೇಕ ಪಶು ಮಹಾವಿದ್ಯಾಲಯಗಳದ್ದು ಇದೇ ಗೋಳಾಗಿದೆ ಎನ್ನಲಾಗಿದೆ.

ಮೂಲ ಸೌಲಭ್ಯಗಳ ಹಾಗೂ ಬೋಧಕ ಸಿಬ್ಬಂದಿಯ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಗದಗದಲ್ಲಿ ಪಶುವೈದ್ಯಕೀಯ ಕಾಲೇಜು ಇದ್ದೂ ಇಲ್ಲದಂತೆ ಭಾಸವಾಗುತ್ತಿದೆ.

ಪ್ರಸಕ್ತ ಸಾಲಿನಲ್ಲಿ ಗದಗ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮೊದಲ ಸೆಮಿಸ್ಟರ್‌ಗೆ 50 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಎರಡನೇ ಸೆಮಿಸ್ಟರ್‌ನಲ್ಲಿ 50, ಮೂರನೇ ಸೆಮಿಸ್ಟರ್‌ನಲ್ಲಿ 48, ನಾಲ್ಕನೇ ಸೆಮಿಸ್ಟರ್‌ನಲ್ಲಿ 45 ಸೇರಿ ಸುಮಾರು 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಉಪನ್ಯಾಸಕರ ಕೊರತೆ:
ಭಾರತೀಯ ಪಶುವೈದ್ಯಕೀಯ ಮಂಡಳಿ (ವಿಸಿಐ) ಪ್ರಕಾರ ಪಶುವೈದ್ಯಕೀಯ ಮಹಾವಿದ್ಯಾಲಕ್ಕೆ ಒಟ್ಟು 76 ಬೋಧಕ ಸಿಬ್ಬಂದಿಯ ಅವಶ್ಯಕತೆ ಇದೆ. ಆದರೆ, ಇಲ್ಲಿ ಕೇವಲ 22 ಜನ ನಿಯಮಿತ, 10-12 ಜನ ಉಪನ್ಯಾಸಕರು ಒಪ್ಪಂದದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾಲೇಜಿನಲ್ಲಿ ಪರ‍್ಯಾಪ್ತ ಸಂಖ್ಯೆಯ ಬೋಧಕ ಸಿಬ್ಬಂದಿ ಇಲ್ಲದಿದ್ದರೂ ಇದ್ದವರೇ ಅದು ಹೇಗೋ ಪಾಠ ಪ್ರವಚನಗಳನ್ನು ನಿರ್ವಹಿಸುತ್ತಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬಹುದೊಡ್ಡ ಪೆಟ್ಟು ಬೀಳುವ ಸಾಧ್ಯತೆಗಳಿವೆ.

17 ಬೋಧನಾ ವಿಭಾಗಗಳು:
ಪಶುವೈದ್ಯಕೀಯ ಮಹಾವಿದ್ಯಾಲಯ 2005ರಲ್ಲಿ ಮಂಜೂರಾಗಿದ್ದರೂ, 2017ರಲ್ಲಿ 50 ವಿದ್ಯಾರ್ಥಿಗಳೊಂದಿಗೆ ಪ್ರಾರಂಭಗೊಂಡಿದ್ದು, ಇದರಲ್ಲಿ ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರ, ಪಶುವೈದ್ಯಕೀಯ ಶರೀರ ಶಾಸ್ತ್ರ ಮತ್ತು ಜೀವರಾಸಾಯನಿಕತೆ, ಪಶುವೈದ್ಯಕೀಯ ಪರಾವಲಂಬಿ ಶಾಸ್ತ್ರ ಸಹಿತ ಒಟ್ಟು 17 ಬೋಧನಾ ವಿಭಾಗಗಳಿವೆ.

ನೇಮಕಾತಿ ಆದೇಶಿಸದಿದ್ದರೆ ಕಷ್ಟ:
ಸರ್ಕಾರ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಬೋಧಕ ಸಿಬ್ಬಂದಿಯನ್ನು ಭರ್ತಿ ಮಾಡಲು ಅನುಮತಿ ನೀಡದಿದ್ದರೆ, ಬಹಳಷ್ಟು ಕಷ್ಟಕ್ಕೆ ಸಿಲುಕಿಕೊಳ್ಳಬೇಕಾಗುತ್ತದೆ. ವಿಶ್ವವಿದ್ಯಾಲಯ ಹಾಗೂ ಮಹಾವಿದ್ಯಾಲಯಗಳಲ್ಲಿ ನೌಕರರ ನೇಮಕಾತಿ ಬಹಳ ಮುಖ್ಯವಾಗಿದೆ. ಇಲ್ಲದಿದ್ದರೆ, ಭಾರತೀಯ ಪಶುವೈದ್ಯಕೀಯ ಪರಿಷತ್ ಮಹತ್ವವನ್ನು ಕಳೆದುಕೊಳ್ಳಬೇಕಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಬೀದಿ ಪಾಲಾಗುವ ಸಾಧ್ಯತೆಗಳಿವೆ ಎಂದು ಸ್ವತಃ ಪಶುವೈದ್ಯಕೀಯ ಕುಲಸಚಿವರೇ ಅಳಲು ತೋಡಿಕೊಂಡಿದ್ದಾರೆ.

67 ಕೋಟಿ ರೂ.ಗೆ ಪ್ರಸ್ತಾವನೆ
ಪಶುವೈದ್ಯಕೀಯ ಕಾಲೇಜಿನ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಂಡಿದ್ದು, ಎರಡನೇ ಹಂತದ ಕಾಮಗಾರಿಗೆ ಅನುದಾನದ ಆವಶ್ಯಕತೆ ಇದೆ. ಮಹಾವಿದ್ಯಾಲಯದಿಂದ ಒಟ್ಟು 67 ಕೋಟಿ ರೂ. ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ ಅವರಿಗೂ ಮನವಿ ಮಾಡಲಾಗಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯಕ್ಕೆ 360 ಕೋಟಿ ರೂ. ಅನುದಾನ ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಿದೆ.

ಗದಗನಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಪ್ರಾರಂಭಿಸಲಾಗಿದ್ದು, ಅಲ್ಲಿ ಪಾಠ ಮಾಡಲು ಸಹಿತ ಬೋಧಕ ಸಿಬ್ಬಂದಿಗಳಿಲ್ಲ. ಬಹಳ ಕಷ್ಟಪಟ್ಟು ಇರುವವರಲ್ಲಿಯೇ ನಿರ್ವಹಿಸಿಕೊಂಡು ಹೋಗಲಾಗುತ್ತಿದೆ.

ಪ್ರೊ|ನಾರಾಯಣಸ್ವಾಮಿ, ಕುಲಪತಿ, ಪಶು ವೈದ್ಯಕೀಯ ವಿವಿ ಬೀದರ

ಬದುಕಿದ್ದವನನ್ನೇ ಶವ ಅಂದ್ರಾ ವೈದ್ಯರು? : ಕೆ. ಎಸ್. ಆಸ್ಪತ್ರೆಯಲ್ಲಿ ಉದ್ವಿಗ್ನತೆ

0

-ಅಪಘಾತದಿಂದಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ: ಸಂಬಂಧಿಕರ ಆರೋಪ

-ವ್ಯಕ್ತಿಯ ಆರೋಗ್ಯ ಸಲಹೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎನ್ನುತ್ತಿವೆ ಆಸ್ಪತ್ರೆಯ ಮೂಲಗಳು

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಬುಧವಾರ ರಾತ್ರಿ ನಡೆದ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ಇಬ್ಬರನ್ನು ನಗರದ ಕೆ.ಎಸ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಓರ್ವನನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತೀವ್ರವಾಗಿ ತಲೆಗೆಗಾಯವಾಗಿದ್ದ ಫಕೀರಪ್ಪ (26)ನಿಗೆ ಕೆ.ಎಸ್.ಆಸ್ಪತ್ರೆಯ ಸಿಬ್ಬಂದಿ ಚಿಕಿತ್ಸೆ ನೀಡಿದರು. ಬೆಳಗ್ಗೆ ಫಕೀರಪ್ಪ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿರುವುದಾಗಿ ಸಂಬಂಧಿಕರು ಹೇಳಿದರು. ಸುಮಾರು ನಲವತ್ತು ಸಾವಿರ ರೂಪಾಯಿ ಪಾವತಿಸಿದ ನಂತರ ಫಕೀರಪ್ಪನನ್ನು ಸಂಬಂಧಿಕರ ಸುಪರ್ದಿಗೆ ಒಪ್ಪಿಸಿದರು. ಅಚ್ಚರಿ ಎಂದರೆ ಫಕೀರಪ್ಪ ಇನ್ನೂ ಉಸಿರಾಡುತ್ತಿದ್ದ. ಹಾಗಾಗಿ ಕೆ.ಎಸ್.ಆಸ್ಪತ್ರೆ ಸಿಬ್ಬಂದಿ ಜೊತೆ ಫಕೀರಪ್ಪನ ಕೆಲ ಸಂಬಂಧಿಕರು ವಾಗ್ವಾದ ನಡೆಸಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ರೋಗಿ ಬದುಕಿರುವುದು ಗೊತ್ತಾದ ನಂತರವೂ ಜಿಲ್ಲಾ ಆಸ್ಪತ್ರೆಗೆ ರೋಗಿಯನ್ನು ಸಾಗಿಸಲು ಆಸ್ಪತ್ರೆಯವರು ಆ್ಯಂಬುಲೆನ್ಸ್ ನೀಡದೇ ಅಮಾನವೀಯವಾಗಿ ವರ್ತಿಸಿದ್ದಾರೆ. ಬದುಕಿದ್ದವನನ್ನೇ ಸಾಯಿಸಿದ ಈ ಆಸ್ಪತ್ರೆಯ ಸಿಬ್ಬಂದಿಗೆ ಮನುಷ್ಯತ್ವ ಎಲ್ಲಿಂದ ಬರಬೇಕು ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

ಕೊನೆಗೆ ಫಕೀರಪ್ಪನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಸುಮಾರು ಒಂದು ಗಂಟೆಗಳ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಫಕೀರಪ್ಪ ಕೊನೆಯುಸಿರೆಳೆದ.

ಜೀವ ಇರುವಾಗಲೇ ಸಾವು ಎಂದು ಕೆ.ಎಸ್. ಆಸ್ಪತ್ರೆಯ ವೈದ್ಯರು ಹೇಳಿದ್ದರಿಂದ ಆಘಾತವಾಗಿದೆ. ಈ ಆಸ್ಪತ್ರೆಯಲ್ಲಿ ಇಂಥ ಪ್ರಕರಣ ಇದೊಂದೇ ಅಲ್ಲ, ಈ ಹಿಂದೆಯೂ ಇಂಥ ಪ್ರಕರಣಗಳು ನಡೆದಿವೆ. ಬಡವರ ಜೀವದ ಜೊತೆ ಚಲ್ಲಾಟ ಆಡುವ ಕೆ.ಎಸ್.ಆಸ್ಪತ್ರೆಯ ವೈದ್ಯ ಸಿಬ್ಬಂದಿ ವಿರುದ್ಧ ಕ್ರಮ ಜರುಗಲಿ.

ರಮೇಶ್ ಕಲ್ಲತಾವರಗೆರೆ, ಮೃತನ ಮಾವ

ಬೆಳಗ್ಗೆ 9-30ಕ್ಕೆ ಬನ್ನಿ…
ಒಟ್ಟಾರೆ ಪ್ರಕರಣದ ಸತ್ಯಾಂಶ ತಿಳಿಯಲು ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದಾಗ ಆಸ್ಪತ್ರೆಯ ಸಿಇಒ ಅನೌಪಚಾರಿಕವಾಗಿ ಪ್ರಕರಣದ ಹಿನ್ನೆಲೆ ತಿಳಿಸಿದರು. ಅಧಿಕೃತ ಮಾಹಿತಿಗೆ ಶುಕ್ರವಾರ ಬೆಳಗ್ಗೆ 9-30ಕ್ಕೆ ಬನ್ನಿ. ವೈದ್ಯರೇ ಪ್ರಕರಣದ ಕುರಿತು ಮಾಧ್ಯಮಗಳಿಗೆ ವಿವರಣೆ ನೀಡುತ್ತಾರೆ ಎಂದರು.

ಗೊಂದಲಕ್ಕೆ ಕಾರಣವಾಯ್ತಾ “ಡೆತ್” ಎನ್ನುವ ಪದ..
ರೋಗಿಯ ವೈದ್ಯಕೀಯ ಸಲಹೆ ಮತ್ತು ಬಿಡುಗಡೆ ನಮೂನೆಯ ರೋಗಿಯ ವೈದ್ಯಕೀಯ ರಿಸ್ಕ್ ಎನ್ನುವ ಕಾಲಂನಲ್ಲಿದ್ದ “ಡೆತ್” ಎನ್ನುವ ಪದ ಗೊಂದಲಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಆಸ್ಪತ್ರೆ ಮೂಲಗಳ ಪ್ರಕಾರ, ರೋಗಿಯ ಕಂಡೀಷನ್ ವಿವರಿಸುವಾಗ ಸಾವು ಸಂಭವಿಸಬಹುದು ಎಂದು ಬರೆದಿರುವುದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರಿಂದ ಇಷ್ಟೆಲ್ಲಾ ರಾದ್ಧಾಂತವಾಗಿದೆ. ಎಲ್ಲೂ ಸಹ ಸಾವು ಎಂದು ಡೀಕ್ಲೇರ್ ಮಾಡಿಲ್ಲ. ಬಹುಶಃ ನಮೂನೆ ಕನ್ನಡದಲ್ಲಿದ್ದು ವಿವರಣೆ ನೀಡಿದ್ದರೆ ಹೀಗಾಗುತ್ತಿರಲಿಲ್ಲವೇನೋ ಎಂದು ಪ್ರಕರಣವನ್ನು ವಿಶ್ಲೇಷಿಸಲಾಗುತ್ತಿದೆ. ಜೊತೆಗೆ ಪರ ಮತ್ತು ವಿರುದ್ಧ ಪ್ರಕರಣಗಳು ದಾಖಲಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

error: Content is protected !!