ವಿಜಯಸಾಕ್ಷಿ ಸುದ್ದಿ, ಕೊಪ್ಪಳ ( ಕನಕಗಿರಿ)
ಕಾರಹುಣ್ಣಿಮೆ ಕರಿ ಬಿಡುವ ಸಮಯದಲ್ಲಿ ಹೋರಿಯ ತಿವಿತಕ್ಕೆ ಒಬ್ಬ ವ್ಯಕ್ತಿ ಬಲಿಯಾಗಿದ್ದಾನೆ.
ಕನಕಗಿರಿ ತಾಲ್ಲೂಕು ನವಲಿ ಗ್ರಾಮದಲ್ಲಿ ಕಾರು ಹುಣ್ಣಿಮೆ ಪ್ರಯುಕ್ತ ರೈತರು ಸಂಪ್ರದಾಯದಂತೆ ಎತ್ತುಗಳ ಕರಿ ಬಿಡುವ ಮೊದಲಿನಿಂದ ಪದ್ದತಿ ಇದೆ.
ನವಲಿ ಗ್ರಾಮದಲ್ಲಿ ಎತ್ತುಗಳ ಕರಿ ಬಿಡುವ ಸಮಯದಲ್ಲಿ ಹೋರಿಯ ಕೊಂಬುಗಳ ತಿವಿತಕ್ಕೆ 47 ವರ್ಷದ ರಾಮಣ್ಣ ನಾರಿನಾಳ ಎಂಬ ವ್ಯಕ್ತಿ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಸಾವನ್ನಪ್ಪಿದ್ದಾರೆ.
ಹೋರಿ ತಿವಿತದಿಂದ ಸಾವು; ಕಾರಹುಣ್ಣಿಮೆ ಸಂಭ್ರಮದಲ್ಲಿ ದುರಂತ
ಕುಷ್ಟಗಿಯ ಮುಂದಿನ ಶಾಸಕ ಬಯ್ಯಾಪುರ!
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಕುಷ್ಟಗಿ ವಿಧಾನಸಭಾ ಕ್ಷೇತ್ರದ ಮುಂದಿನ ಶಾಸಕ ಅಮರೆಗೌಡ ಬಯ್ಯಾಪುರ ಎಂದು ಅವರ ಮೇಲಿನ ಅಭಿಮಾನದಿಂದ ಬಿಜಕಲ್ ಗ್ರಾಮದಲ್ಲಿ ಕರಿ ಹಬ್ಬದಂದು ರುದ್ರಯ್ಯ ಹಿರೇಮಠ ಅವರು ತಮ್ಮ ಎತ್ತುಗಳ ಮೇಲೆ ಬರೆದು ಅಭಿಮಾನ ವ್ಯಕ್ತಪಡಿಸಿದ ಚಿತ್ರಗಳು ಇದೀಗ ಎಲ್ಲೆಡೆ ವೈರಲ್ ಆಗಿವೆ..
ಕೊರೊನಾ; ಗದಗ ಜಿಲ್ಲೆಯಲ್ಲಿ ಮುಂದುವರೆದ ಸಾವಿನ ಸರಣಿ
ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಪ್ರತಿದಿನವೂ ಇಬ್ಬರಂತೆ ಕೋವಿಡ್ ಗೆ ಬಲಿಯಾಗುತ್ತಿರುವುದು ಜಿಲ್ಲೆಯ ಜನರಿಗೆ ಆತಂಕ ಮೂಡಿಸಿದೆ. ಇಂದು 26 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಮಂಗಳವಾರ ಕೂಡ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದು 26 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25796 ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -12, ಮುಂಡರಗಿ-08, ನರಗುಂದ-00, ರೋಣ-00, ಶಿರಹಟ್ಟಿ-06, ಹೊರಜಿಲ್ಲೆಯ-00, ಸೇರಿದಂತೆ 26 ಪ್ರಕರಣಗಳು ದೃಢಪಟ್ಟಿವೆ.
ಮಂಗಳವಾರ ಕೋವಿಡ್ ನಿಂದ ಇಬ್ಬರು ಮೃತಪಟ್ಟ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಹೊರಡಿಸಿದ ವರದಿಯಲ್ಲಿ ಮಾಹಿತಿ ಇದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ನಿಂದಾಗಿ 302 ಜನರು ಮೃತಪಟ್ಟಂತಾಗಿದೆ.
ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ನಿವಾಸಿ 70 ವರ್ಷದ ವ್ಯಕ್ತಿ ಮೇ-21 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಜೂನ್ 27 ರಂದು ಮೃತಪಟ್ಟಿದ್ದಾರೆ.
ಗದಗ ನಗರದ ಹಾತಲಗೇರಿ ನಾಕಾ ನಿವಾಸಿ 68 ವರ್ಷದ ವ್ಯಕ್ತಿ ಜೂನ್ 22 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 28 ರಂದು ಮೃತಪಟ್ಟಿದ್ದಾರೆ.
ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನೆರವೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು 19 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 25269 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 225 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸಿನೆಮಾ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದು ಮಾನಗೇಡಿ ಕೆಲಸ
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಕೇಂದ್ರ ಬಿಜೆಪಿ ಸರಕಾರ ಜನರ ಮೇಲೆ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ. ಇದು ಇಂದಿರಾ ಗಾಂಧಿಗಿಂತಲೂ ಕೆಟ್ಟ ತುರ್ತು ಪರಿಸ್ಥಿತಿ ಎಂದು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಧಾನ ಕಾಯದರ್ಶಿ ಮಂಜುನಾಥ ಜಿ. ಗೊಂಡಬಾಳ ಕೇಂದ್ರದ ನೂತನ ನೀತಿಯನ್ನು ಖಂಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು ಅಂದಿನ ಪರಿಸ್ಥಿತಿಯಲ್ಲಿ ದೇಶ ಕೈ ಮೀರಿದ ಕಾರಣಕ್ಕೆ ಕೆಲವು ತಿಂಗಳು ತುರ್ತು ಪರಿಸ್ಥಿತಿ ಹೇರಿ ಯಾರೂ ಏನೂ ಮಾತಾಡಬಾರದು ಎಂದಿದ್ದರು.
ಅದನ್ನು ಜನ ತಿರಸ್ಕರಿಸಿ ಅವರನ್ನು ಸೋಲಿಸಿದರು. ಹಾಗೂ ಮುಂದೆ ಬೇರೊಂದು ಪಕ್ಷ ಉದಯಿಸಿ ಬೆಳೆದು ಇಂದು ಅಧಿಕಾರಕ್ಕೆ ಬಂದು ಯಾವುದನ್ನು ವಿರೋಧಿಸಿ ಅಧಿಕಾರ ಹಿಡಿದರೋ ಅದನ್ನೇ ಜೀವನಪರ್ಯಂತ ತರಲು ಹೊರಟಿದೆ ಎಂದು ಅವರು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.
ಇದಕ್ಕೆ ತಾಜಾ ಉದಾಹರಣೆ ಅಂದರೆ ನೂತನ ಮಾಹಿತಿ ತಂತ್ರಜ್ಞಾನ ತಿದ್ದುಪಡಿ 2021 ರಲ್ಲಿ ಸಾಮಾಜಿಕ ಜಾಲತಾಣ ನಿಯಂತ್ರಣ ಹಾಗೂ ಮಾಧ್ಯಮ ನಿಯಂತ್ರಿಸುವ ದೂರದೃಷ್ಟಿಯಿಂದ ಸರಕಾರ ತನಗೆ ಅನುಕೂಲವಾಗುವಂತಹ ಬದಲಾವಣೆ ಮಾಡಿಕೊಂಡಿದೆ.
ಒಬ್ಬ ವ್ಯಂಗ್ಯಚಿತ್ರಕಾರನೂ ಸಹ ಮಾತಾಡಬಾರದು. ಕೇಂದ್ರದ ವಿರುದ್ಧ ಯಾರೂ ಮಾತಾಡಬಾರದು. ಮುಂಬರುವ ದಿನಗಳಲ್ಲಿ ಬೇಸತ್ತ ಜನರಿಂದ ಕೇಂದ್ರದ ವಿರುದ್ಧ ಬರಬಹುದಾದ ಜನಾಕ್ರಮಣದ ನಿಯಂತ್ರಣ ಕೆಲಸಕ್ಕೆ ಅದು ಮುಂದಾಗಿದ್ದು, ಅದರ ಮುಂದುವರೆದ ಭಾಗವಾಗಿ ಸಿನೆಮಾ ಮಾಧ್ಯಮ ಮೂಲಕವೂ ಬಿಜೆಪಿ ಮತ್ತು ಅದರ ನಾಯಕರ ಮೇಲೆ ಯಾವುದೇ ಆರೋಪ ಮಾಡಬಾರದು. ಅವರ ವಿರುದ್ಧ ಚಿತ್ರ ನಿರ್ಮಾಣವಾಗದಿರಲಿ ಎಂಬ ಉದ್ದೆಶದಿಂದ ಸಿನೆಮಾಟೋಗ್ರಾಫ್ ಆಕ್ಟ್ 1952ಗೆ ತಿದ್ದುಪಡಿ ತರಲು ನಿರ್ಧರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಫಿಲ್ಮ್ ಸರ್ಟಿಫಿಕೇಟ್ ಆಫ್ ಅಪಾಲೇಟ್ ಟ್ರಿಬ್ಯೂನಲ್ ಅಂದರೆ ತ್ರಿಸದಸ್ಯ ಮೇಲ್ಮನವಿ ನ್ಯಾಯಪೀಠವನ್ನು ರದ್ದುಗೊಳಿಸಿ ಪ್ರಾದೇಶಿಕ ಸೆನ್ಸಾರ್ ಮಂಡಳಿ ವಿರುದ್ಧ ಮೇಲ್ಮನವಿ ಹೋಗದಂತೆ ಮಾಡಿ ಬೆನ್ನಿಗೆ ಬರೆ ಎಳೆದಿದೆ. ಈಗ ಕಾಯ್ದೆಗೆ ತಿದ್ದುಪಡಿ ತಂದು ಕುಂಡಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ನೂತನ ತಿದ್ದುಪಡಿಯಲ್ಲಿ ಇರುವ ಮೂರು ಅಂಶಗಳು ಸಿನೆಮಾ ಕ್ಷೇತ್ರವನ್ನು ಸರ್ವನಾಶ ಮಾಡುವ ಜೊತೆಗೆ ಕೇಂದ್ರದ ಸಂಪೂರ್ಣ ಸಿನೆಮಾ ಸ್ವಾಯತ್ತತೆ ಹೊಂದಲಿದೆ, ಅದು ಒಂದು ರೀತಿ ಸಿನಿಮಾದವರು ತಮ್ಮ ಚಿತ್ರ ಪ್ರದರ್ಶನ ಕಾಣಬೇಕು. ಸರಕಾರದ ಸಹಾಯ ಬೇಕು ಅಂದರೆ ಈಗ ರಾಜಕಾರಣಿಗಳ ರೀತಿ ವಿರೋಧ ಪಕ್ಷವನ್ನು ಬಿಟ್ಟು ಬಿಜೆಪಿ ಪಡಸಾಲೆ ಸೇರಿಕೊಂಡು ಅವರ ಅಣತಿಯಂತೆ ನಡೆದುಕೊಳ್ಳಬೇಕು ಎಂಬ ಸ್ಪಷ್ಟ ಉದ್ದೇಶವಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಎಲ್ಲಾ ಬಹುತೇಕ ಕಾನೂನುಗಳ ಹಿಂದೆ ದಕ್ಷಿಣ ಭಾರತ, ಹಿಂದಿಯೇತರ ಜನರ ನಿಯಂತ್ರಣದ ಹುನ್ನಾರವಿದೆ, ನಮ್ಮನ್ನು ನೋಡಿದರೆ ಅವರ ಮೈ ಕುದಿಯುತ್ತದೆ. ಅದಕ್ಕಾಗಿ ಅವರು ದೇಶ ರಕ್ಷಿಸಿ, ದೇಶ ವಾಸಿಗಳನ್ನು ಉಳಿಸುವ ಬದಲಿಗೆ ಸುಳ್ಳು ದೇಶ ರಕ್ಷಕರೆಂಬ ಭ್ರಮೆ ಹುಟ್ಟಿಸಿದ್ದಾರೆ. ಮುಂದೆ ಜನರು ಮಾತನಾಡದಂತೆ ಫ್ಯಾಸಿಸ್ಟ್ ಆಡಳಿತ ತರುವ ಯೋಜಿತ ಧೀರ್ಘ ಪ್ರಯಾಣ ಆರಂಭಿಸಿದ್ದಾರೆ. ಮೊದಲು ಒಂದೊಂದೆ ಟೊಂಗೆ ಮುರಿದು ಗುಂಡಾರ ಮಾಡುತ್ತಿದ್ದಾರೆ ಎಂದು ಗೊಂಡಬಾಳ ಗುಡುಗಿದ್ದಾರೆ.
ಸಿನಿಮಾ ಸೆನ್ಸಾರ್ ಆದ ಮೇಲೂ ಆಕ್ಷೇಪಣೆ ಇದ್ದಲ್ಲಿ ಚಿತ್ರ ಪ್ರದರ್ಶನ ರದ್ದುಗೊಳಿಸುವ ತೀರ್ಮಾನ ಬಾಲಿಶವಾದದ್ದು, ಕೋಟಿ ಕೋಟಿ ಹಣ ಹಾಕಿ ಬೀದಿಗೆ ಬರುವಂತಾದರೆ ಹೆಂಗೆ ಎಂದು ಕಲಾವಿದರು, ನಿರ್ಮಾಪಕರು ಬಿಜೆಪಿ ಸೇರಬೇಕು, ಅದರ ರಕ್ಷಣೆ ಪಡೆದು ಬದುಕಬೇಕು ಎಂದು ನಿರ್ಧರಿಸಿದೆ. ದಕ್ಷಿಣ ಭಾರತದ ಸಿನೆಮಾ ಮಂದಿ ರಾಜಕಾರಣದಲ್ಲಿ ಉತ್ತಮ ಹಿಡಿತ ಹೊಂದಿದ್ದು ಅದನ್ನು ತಪ್ಪಿಸಲು ಈ ಹೊಸ ಯೋಜನೆ ಎಂಬುದು ಸ್ಪಷ್ಟವಾಗಿದ್ದು, ಇದರ ವಿರುದ್ಧ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ಕಲಾವಿದರು ಹೋರಾಟ ರೂಪಿಸುತ್ತಾರೆ, ಇದನ್ನು ರಾಜ್ಯದ ಮೂಲೆ ಮೂಲೆಗೆ ಶುರು ಮಾಡಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.
ಕೂಡಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಿರ್ಧಾರ ಕೈ ಬಿಡಬೇಕು – ವಿಶ್ವನಾಥ್!
ವಿಜಯಸಾಕ್ಷಿ ಸುದ್ದಿ, ಮೈಸೂರು
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಶಾಸಕ ಎಚ್. ವಿಶ್ವನಾಥ್ ಒತ್ತಾಯ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಇದು ಅವೈಜ್ಞಾನಿಕ ನಿರ್ಧಾರ. ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ. ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆಯಾದರೆ ಯಾರು ಹೊಣೆ? ಎಂದು ಪ್ರಶ್ನಿಸಿದ್ದಾರೆ.
ಜುಲೈನಲ್ಲಿ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರವೇ ಸಿಬಿಎಸ್ ಇಯಲ್ಲಿ ಪಿಯುಸಿ ಪರೀಕ್ಷೆ ನಡೆಸುವುದು ಬೇಡ ಎಂದು ಆದೇಶಿಸಿದೆ. ಆದರೂ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ತಲೆ ಬಾಗಿದೆ. ಕೋವಿಡ್ ಆತಂಕದ ಜೊತೆಗೆ ಇಡೀ ಶಿಕ್ಷಣ ವ್ಯವಸ್ಥೆ ಹಾಳಾಗಿ ಹೋಗಿದೆ. ಪರೀಕ್ಷೆ ನಡೆಸಲು ಹೊರಟಿರುವುದು ಆತುರ, ಅವೈಜ್ಞಾನಿಕ ತೀರ್ಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಪಾಠವನ್ನೇ ಮಾಡದೆ ಪರೀಕ್ಷೆ ಮಾಡುವುದು ಅವೈಜ್ಞಾನಿಕವಾದುದು. ಅವೈಜ್ಞಾನಿಕ ತೀರ್ಮಾನವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ರಾಜ್ಯದಲ್ಲಿ ಯಾವ ಪುರುಷಾರ್ಥಕ್ಕೆ ಪರೀಕ್ಷೆ ನಡೆಸಲು ಸರ್ಕಾರ ಹೊರಟಿದೆ. ಜೀವ ಮತ್ತು ಜೀವನ ಎರಡನ್ನು ತೆಗೆಯಲು ಸುರೇಶ್ ಕುಮಾರ್ ಮುಂದಾಗಿದ್ದಾರೆ. ಪ್ರಧಾನಿ ಮೋದಿ ಜೀವ ಮುಖ್ಯ ನಂತರ ಜೀವನ ಅಂತ ಎಂದು ಹೇಳಿದ್ದಾರೆ. ಆದರೆ, ಸುರೇಶ್ ಕುಮಾರ್ ಗೆ ನನಗೆ ಎಲ್ಲವೂ ಗೊತ್ತು ಎಂಬ ಇಗೋ ಇದೆ. ಈ ಇಗೋ ಇಂತಹ ಸಂದರ್ಭದಲ್ಲಿ ಬಳಕೆಯಾಗಬಾರದು ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಮನೆಯೊಂದು ನೂರು ಬಾಗಿಲು ಆಗಿದೆ; ಪ್ರಿಯಾಂಕ್ ಖರ್ಗೆ!
ವಿಜಯಸಾಕ್ಷಿ ಸುದ್ದಿ, ಕಲಬುರಗಿ
ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು ಅಲ್ಲ, ಮನೆಯೊಂದು ನೂರು ಬಾಗಿಲು ಇದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ವಿಚಾರ ಈಗ ಅಪ್ರಸ್ತುತ. ನಮ್ಮ ಪಕ್ಷ ಬಹುಮತ ಗಳಿಸಿದಾಗ ಸಿಎಲ್ ಪಿಯಲ್ಲಿರುವ ಶಾಸಕರು ಹೈಕಮಾಂಡ್ ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಆಗ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಸದ್ಯ ನಾವು ಜನರಿಗೆ ನೆರವಾಗುವ ಕುರಿತು ಯೋಚನೆ ಮಾಡಬೇಕಿದೆ ಎಂದು ಹೇಳಿದ್ದಾರೆ.
ನಮ್ಮಲ್ಲಿ ಅರ್ಹರು ಬಹಳ ಜನ ಇದ್ದಾರೆ. ಹೀಗಾಗಿಯೇ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಯಾರೂ ಇಲ್ಲ. ಹೀಗಾಗಿ ಬಿಜೆಪಿಯವರು ಮೊದಲು ಅವರ ಮನೆಯಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿ.
ಶಾಸಕ ಜಮೀರ್ ತಮ್ಮ ವ್ಯೆಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಆದರೆ, ಪಕ್ಷ ಕಟ್ಟುವ ಸಾಮರ್ಥ್ಯ, ಜವಾಬ್ದಾರಿ ಇರುವ ನಾಯಕ ಈ ತರಹ ಮಾತನಾಡುವುದಿಲ್ಲ ಎಂದು ಜಮೀರ್ ಗೆ ಟಾಂಗ್ ಕೊಟ್ಟಿದ್ದಾರೆ.
ದಲಿತ ಸಿಎಂ ವಿಚಾರ ಇಂತಹ ಸಂದರ್ಭದಲ್ಲಿ ಕೇಳಿ ಬರುತ್ತದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರಿಗೆ ಸಿಎಂ ಆಗುವ ಅರ್ಹತೆ ಇರಲ್ವಾ? ಮೀಡಿಯಾದಲ್ಲಿ ಬಂದಾಗಲೆ ದಲಿತ ಸಿಎಂ ವಿಚಾರ ಚರ್ಚೆಗೆ ಬರುತ್ತದೆ. ಆದರೆ, ನಮ್ಮ ಸಮಾಜದವರು ಎಚ್ಚೆತ್ತಕೊಂಡಿಲ್ಲವೋ ಗೊತ್ತಿಲ್ಲ. ಮುಖ್ಯಮಂತ್ರಿ ವಿಚಾರ ಬಂದಾಗ ದಲಿತ ಮುಖ್ಯಮಂತ್ರಿ ಅಂತಾ ಹೆಡ್ ಲೈನ್ ಹೊಡಿತ್ತಾರೆ. ಬೇರೆ ಸಮಾಜದವರು ಆದಾಗ ಏಕೆ ಈ ರೀತಿ ಹೆಡ್ ಲೈನ್ ಕೊಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈಗ ನಾವು ಜಡ್ಜಮೆಂಟ್ ಹಂತದಲ್ಲಿದ್ದೇವೆ; ಬಾಂಬ್ ಸಿಡಿಸಿದ ಯೋಗೇಶ್ವರ್!
ವಿಜಯಸಾಕ್ಷಿ ಸುದ್ದಿ, ಕಲಬುರಗಿ
ನಮ್ಮಲ್ಲಿನ ವಾದ – ವಿವಾದ ಮುಗಿದಿದೆ. ಸದ್ಯ ನಾವು ಜಡ್ಜಮೆಂಟ್ ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ನಗರದಲ್ಲಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೊರೊನಾ ಮಾರ್ಗಸೂಚಿಯಂತೆಯೇ ನಮ್ಮ ಹೈಕಮಾಂಡ್ ಮಾರ್ಗಸೂಚಿ ನೀಡುತ್ತದೆ ಎಂಬ ಆಶಾಭಾವನೆ ಇದೆ. ನನ್ನ ಭಾವನೆಗಳನ್ನು ನಾನು ಹೈಕಮಾಂಡ್ ಮುಂದೆ ಹೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಜಡ್ಜ್ ಮೆಂಟ್ ಏನು ಬರುತ್ತದೆಯೋ ಕಾಯ್ದು ನೋಡಬೇಕಿದೆ. ಸದ್ಯಕ್ಕೆ ನಮ್ಮ ಪಕ್ಷದಲ್ಲಿ ಯಾವ ರೀತಿ ಗೊಂದಲಗಳಿಲ್ಲ. ಏನಾದರೂ ಸಮಸ್ಯೆಗಳಿದ್ದರೆ ನಾವೆಲ್ಲ ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.
ಅಕ್ಕನಿಗೆ ಹಿಂಸೆ ನೀಡಿದ್ದಕ್ಕೆ ಭಾವನ ಕೊಲೆ!
ವಿಜಯಸಾಕ್ಷಿ ಸುದ್ದಿ, ಮೈಸೂರು
ಅಕ್ಕನಿಗೆ ಚಿತ್ರಹಿಂಸೆ ನೀಡಿದ್ದಾನೆ ಎಂಬ ಕಾರಣಕ್ಕೆ ಬಾಮೈದನೇ ಭಾವನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಕೆಂಪಶೆಟ್ಟಿ(40) ಮೃತ ದುರ್ದೈವಿ. ಬಾಮೈದ ಕೆಂಡಗಣ್ಣ ಶೆಟ್ಟಿ ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ. ಕಳೆದ 10 ವರ್ಷಗಳ ಹಿಂದೆ ಶಶಿರೇಖಾ ಎಂಬುವವರನ್ನು ಕೆಂಪಶೆಟ್ಟಿಯೊಂದಿಗೆ ಮದುವೆ ಮಾಡಲಾಗಿತ್ತು. ಆದರೆ, ಇತ್ತೀಚೆಗೆ ಕೆಂಪಶೆಟ್ಟಿ ಕುಡಿತದ ದಾಸನಾಗಿದ್ದ.
ನಿತ್ಯವೂ ಕುಡಿದು ಬಂದು ಪತ್ನಿ ಶಶಿರೇಖಾಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಕುರಿತು ಹಲವು ಬಾರಿ ನ್ಯಾಯ ಪಂಚಾಯ್ತಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗಷ್ಟೇ ಕುಡಿಯಲು ಹಣ ನೀಡುವಂತೆ ಪತ್ನಿಯನ್ನು ಕೆಂಪಶೆಟ್ಟಿ ಪೀಡಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಬಾಮೈದ ಕೆಂಡಗಣ್ಣ ಶೆಟ್ಟಿ, ಕೆಂಪಶೆಟ್ಟಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ.
ಚಾಕು ಇರಿಯುತ್ತಿದ್ದಂತೆ ಕೆಂಪಶೆಟ್ಟಿಯನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತು. ಆದರೆ, ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಕೆಂಡಗಣ್ಣ ಶೆಟ್ಟಿ, ಪತ್ನಿ ಶಶಿರೇಖಾ, ಷಡ್ಕ ರಮೇಶ್ ನನ್ನು ಬಂಧಿಸಿದ್ದಾರೆ. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಫುಟ್ ಪಾತ್ ಅಂಗಡಿಗಳ ತೆರವಿಗೆ ತಹಸೀಲ್ದಾರ ಸೂಚನೆ
ವಿಜಯಸಾಕ್ಷಿ ಸುದ್ದಿ, ಕೊಟ್ಟೂರು
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಫುಟ್ಪಾತನ್ನು ಆಕ್ರಮಿಸಿಕೊಂಡು ಅಂಗಡಿಗಳನ್ನಿಟ್ಟುಕೊಂಡವರು ಸೋಮವಾರದೊಳಗೆ ತೆರವುಗೊಳಿಸುವಂತೆ ತಹಸೀಲ್ದಾರ್ ಜಿ. ಅನಿಲ್ ಕುಮಾರ್ ಸೂಚಿಸಿದ್ದಾರೆ. ಪಟ್ಟಣದ ತಹಸೀಲ್ದಾರ್ ಕಛೇರಿಯ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಪಟ್ಟಣದ ಎಪಿಎಂಸಿ ರಸ್ತೆ, ಸರ್ಕಾರಿ ಬಸ್ ನಿಲ್ದಾಣ, ಗಾಂಧಿ ಸರ್ಕಲ್ ಮುಂಭಾಗ, ಇಟಗಿ ರಸ್ತೆ, ಉಜ್ಜಿನಿ ಸರ್ಕಲ್ ನ ಚಿರಬಿ ರಸ್ತೆ ಸೇರಿದಂತೆ ಫುಟ್ ಪಾತ್ ಅಕ್ರಮಿಸಿಕೊಂಡು ಡಬ್ಬಾ ಅಂಗಡಿ, ಸ್ಟಾಲ್ ಗಳನ್ನು ನಿರ್ಮಿಸಿಕೊಂಡವರು ಸೋಮವಾರದೊಳಗೆ ತೆರವುಗೊಳಿಸಬೇಕು ಎಂದರು.
ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಅತಿಕ್ರಮಣ ಮಾಡಿಕೊಂಡ ರಸ್ತೆಗಳನ್ನು ತೆರವುಗೊಳಿಸದಿದ್ದರೆ ಜೆಸಿಬಿ ಮೂಲಕ ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ತಕ್ಷಣ ಈ ಅಂಗಡಿಗಳಿಗೆ ಕಲ್ಪಿಸಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಜೆಸ್ಕಾಂ ಇಂಜಿನಿಯರ್ ಎಸ್. ಚೇತನ್ ಕುಮಾರ್ ಗೆ ಆದೇಶಿಸಿದರು. ಪೊಲೀಸ್, ಅಗ್ನಿ ಶಾಮಕ ದಳ, ಕಂದಾಯ, ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಜಂಟಿಯಾಗಿ ಜೆಸಿಬಿ, ಕ್ರೈನ್ ಮೂಲಕ ಅತಿಕ್ರಮಣ ತೆರವುಗೊಳಿಸುವುದಾಗಿ ಎಚ್ಚರಿಸಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಟಿ.ಎಸ್. ಗಿರೀಶ್ ಮಾತನಾಡಿ, ಕೊಟ್ಟೂರು ಐತಿಹಾಸಿಕವಾದ ಧಾರ್ಮಿಕ ಕ್ಷೇತ್ರವಾಗಿದೆ. ಪಟ್ಟಣವನ್ನು ಸ್ಚಚ್ಚವಾಗಿ ಇಟ್ಟುಕೊಳ್ಳಬೇಕು. ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ. ನಾನು ಈಗಾಗಲೇ ವರ್ಗಾವಣೆ ಆದರೂ ಚಿಂತೆ ಇಲ್ಲ. ತೆರವು ಕಾರ್ಯಚರಣೆ ನಿಲ್ಲಿಸುವುದಿಲ್ಲವೆಂದು ಖಡಕ್ಕಾಗಿ ಹೇಳಿದರು.
ಸಭೆಯಲ್ಲಿ ಎಎಸ್ ಐ ರುದ್ರಮುನಿ, ಲೋಕೋಪಯೋಗಿ ಇಲಾಖೆ ಖಾಜಸಾಹೇಬ್, ಆರೋಗ್ಯ ಕಿರಿಯ ಸಹಾಯಕಿ ಅನುಷಾ, ಅಗ್ನಿಶಾಮಕದಳದ ವಾಸುದೇವಪ್ಪ ಸೇರಿದಂತೆ ನೂರಕ್ಕೂ ಹೆಚ್ಚು ವ್ಯಾಪಾರಿಗಳು ಸಭೆಯಲ್ಲಿ ಹಾಜರಿದ್ದರು.
ಸಿಎಂ ಗುದ್ದಾಟದ ಮಧ್ಯೆ ಕೇಳಿ ಬರುತ್ತಿದೆ ಎಚ್.ಕೆ. ಹೆಸರು!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು/ಗದಗ
ಅಧಿಕಾರದಲ್ಲಿ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಪೈಪೋಟಿ ನಡೆದಿದೆ. ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರು ಬಹಿರಂಗವಾಗಿಯೇ ತಮ್ಮ ನಾಯಕರ ಪರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇನ್ನೂ ಕೆಲವರು ದಲಿತರು ಮುಖ್ಯಮಂತ್ರಿಯಾಗಲಿ, ಅದಕ್ಕೆ ಮಲ್ಲಿಕಾರ್ಜುನ ಖರ್ಗೆಯವರೇ ಸೂಕ್ತ ಎನ್ನುತ್ತಿದ್ದಾರೆ. ಈ ಇಬ್ಬರೂ ನಾಯಕರು ನಾವು ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಸಿಲ್ಲ ಎಂದು ಹೇಳಿದ್ದರೂ ಅವರ ಬೆಂಬಲಿಗರು ಮಾತ್ರ ತಮ್ಮ ನಾಯಕರ ಪರ ಬ್ಯಾಟಿಂಗ್ ಮಾಡುವುದನ್ನು ನಿಲ್ಲಿಸಿಲ್ಲ. ಹಲವು ಶಾಸಕರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿದ್ದಾರೆ. ಹಲವರು ಡಿಕೆಶಿ ಪರ ಮಾತನಾಡಿದ್ದಾರೆ. ಸ್ವತಃ ಡಿಕೆಶಿ, ಇದನ್ನೆಲ್ಲ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ. ಜತೆಗೆ, ಸಿದ್ದು ಆಂಡ್ ಟೀಂಗೆ ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ, ಕಾಂಗ್ರೆಸ್ ಶಿಸ್ತುಸಮಿತಿಯ ಅಧ್ಯಕ್ಷ ರಹೆಮಾನ್ ಕಾನ್ ಅವರು, ನಾಯಕತ್ವದ ಬಗ್ಗೆ ಯಾರೂ ಬಹಿರಂಗವಾಗಿ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ.
ಮುನ್ನೆಲೆಗೆ ಬಂದ ಉತ್ತರ ಕರ್ನಾಟಕದ ಹುಲಿ
ಇದೆಲ್ಲರದರ ಮಧ್ಯೆ ಈಗ ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ. ಪಾಟೀಲರ ಹೆಸರೂ ಮುನ್ನೆಲೆಗೆ ಬಂದಿದೆ. ಎಚ್.ಕೆ. ಪಾಟೀಲರ ತಂದೆ ಕೆ.ಎಚ್. ಪಾಟೀಲರೂ ಶಾಸಕರು ಹಾಗೂ ಸಚಿವರಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದರು. ಅಂದು ಅವರು ಕಾಂಗ್ರೆಸ್ನ ಸಿಎಂ ರೇಸ್ನಲ್ಲಿದ್ದರು. ಆದರೆ, ಆಸೆ ಕೈಗೂಡಿರಲಿಲ್ಲ.
ಈ ಮೊದಲು ಗ್ರಾಮೀಣಾಭಿವೃದ್ಧಿ, ಜಲಸಂಪನ್ಮೂಲ ಸಹಿತ ಹಲವು ಖಾತೆಗಳ ಸಚಿವರಾಗಿ ಅನುಭವ ಹೊಂದಿರುವ ಎಚ್.ಕೆ. ಪಾಟೀಲ ಹಿರಿಯರಾಗಿದ್ದು, ಪಕ್ಷದಲ್ಲೂ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್ ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ಎಚ್.ಕೆ. ಪಾಟೀಲ್ ರನ್ನು ಸಿಎಂ ಮಾಡಬೇಕೆಂದು ಅವರ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಒತ್ತಾಯ ಸಾಕಷ್ಟು ವೈರಲ್ ಆಗುತ್ತಿದೆ.
ಅಭಿಮಾನಿಗಳ ಅಭಿಮತವೇನು?
ರಾಜ್ಯದ ಸಂಭಾವಿತ ರಾಜಕಾರಣಿಗಳಲ್ಲಿ ಎಚ್.ಕೆ. ಪಾಟೀಲ್ ಕೂಡ ಒಬ್ಬರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಸುದೀರ್ಘ ಕಾಲ ಕಾರ್ಯ ನಿರ್ವಹಿಸಿ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. ಉತ್ತರ ಕರ್ನಾಟಕದ ಹುಲಿ ಎಂದೇ ಬಿಂಬಿಸಿಕೊಂಡಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
1985ರ ಚುನಾವಣೆ ಸಂದರ್ಭದಲ್ಲಿ ಎಚ್.ಕೆ. ಪಾಟೀಲರ ತಂದೆ ಕೆ.ಎಚ್. ಪಾಟೀಲ್ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಭಾವೀ ಸಿಎಂ ಎಂದೇ ಬಿಂಬಿತವಾಗಿದ್ದರು. ಆದರೆ, ಅದೃಷ್ಟ ಒದಗಿ ಬರಲಿಲ್ಲ. 1989ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಕೆ.ಎಚ್. ಪಾಟೀಲರು ಸಚಿವ ಸ್ಥಾನಕ್ಕಷ್ಟೇ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಸದ್ಯ ತಂದೆಯ ಬಯಕೆಯನ್ನು ಅವರ ಮಗ ಎಚ್.ಕೆ. ಪಾಟೀಲರು ಸಿಎಂ ಆಗಿ ಈಡೇರಿಸಬಲ್ಲರು ಎಂಬ ನಂಬಿಕೆ ರಾಜ್ಯದ ಜನತೆಗೆ ಇದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಸಾಕಷ್ಟು ಚರ್ಚೆಯಾಗುತ್ತಿದೆ.

