Home Blog Page 3088

ಕೊವಿಡ್-19: ಗದಗ ಜಿಲ್ಲೆಯ ಭಾನುವಾರದ ಅಪ್ಡೇಟ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಡಿಸೆಂಬರ್‌ 20 ರವರೆಗಿನ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 156187 ಜನ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು 161750 ಮಾದರಿಗಳಲ್ಲಿ 150746 ಮಾದರಿಗಳು (ನೆಗೆಟಿವ್) ನಕಾರಾತ್ಮಕವಾಗಿವೆ. 143 ಮಾದರಿಗಳ ವರದಿ ಬರಲು ಬಾಕಿ ಇದೆ.

ಜಿಲ್ಲೆಯಲ್ಲಿ ಇಂದಿನ 06 (ಗದಗ-02, ನರಗುಂದ-02, ರೋಣ-02) ಪ್ರಕರಣಗಳು ಸೇರಿದಂತೆ ಒಟ್ಟು 10861 ಕೊವಿಡ್-19 ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿವೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ
ಕೊವಿಡ್ ಸೋಂಕಿಗೆ 141 ಜನ ಮೃತಪಟ್ಟಿದ್ದು, ಇಂದಿನ 05 ಜನ ಸೇರಿದಂತೆ ಒಟ್ಟು 10691 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 29 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಅಬಕಾರಿ ಪೊಲೀಸರ ಕಾರ್ಯಚರಣೆ: ಚುನಾವಣೆಯಲ್ಲಿ ಹಂಚಲು ಒಯ್ಯುತ್ತಿದ್ದ ಮದ್ಯ ವಶ, ಇಬ್ಬರ ಬಂಧನ

ವಿಜಯಸಾಕ್ಷಿ ಸುದ್ದಿ, ಗದಗ

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ
ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಕ್ರಾಸ್ ಬಳಿ ನಡೆದಿದೆ.

ಗದಗನಿಂದ ಅಸುಂಡಿ ಗ್ರಾಮಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುವಾಗ ಜಿಲ್ಲಾ ಅಬಕಾರಿ ವಿಚಕ್ಷಣಾ ದಳದ ಅಬಕಾರಿ ನಿರೀಕ್ಷಕರಾದ ಶಹನಾಜ್ ಬೇಗಂ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಸುಂಡಿ ಗ್ರಾಮದ ಕಾರು ಚಾಲಕ ಮಂಜುನಾಥ ವೆಂಕಪ್ಪ ಪೂಜಾರ, ಈರಣ್ಣ ರಾಮಣ್ಣ ಬಡಿಗೇರ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ದಾಳಿ ವೇಳೆ 5 ಲಕ್ಷ 50 ಸಾವಿರ ಮೌಲ್ಯದ ಕಾರು ಹಾಗೂ 15 ಸಾವಿರ ಮೌಲ್ಯದ 35 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.

ಚುನಾವಣೆಯಲ್ಲಿ ಅಕ್ರಮವಾಗಿ ಹಂಚಲು ಈ ಮದ್ಯ ತೆಗೆದುಕೊಂಡು ಹೋಗುವಾಗ ದಾಳಿ ನಡೆಸಿದ್ದು, ಈ ಕುರಿತು ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿ ವೇಳೆ ಜಿಲ್ಲಾ ಅಬಕಾರಿ ವಿಚಕ್ಷಣಾ ದಳದ ಅಬಕಾರಿ ನಿರೀಕ್ಷಕರಾದ ಶಹನಾಜ್ ಬೇಗಂ ಸೇರಿದಂತೆ ಅಬಕಾರಿ ಇಲಾಖೆ ಸಿಬ್ಬಂದಿಗಳು ಇದ್ದರು.

ಗ್ರಾ.ಪಂ. ಚುನಾವಣೆ; ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿ

ವಿಜಯಸಾಕ್ಷಿ ಸುದ್ದಿ, ಗದಗ

ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೊದಲ ಹಂತದ ಗದಗ, ಶಿರಹಟ್ಟಿ, ಲಕ್ಷ್ಮೇಶ್ವರ ತಾಲ್ಲೂಕುಗಳಲ್ಲಿ ಡಿ.22 ಮತ್ತು ಎರಡನೇ ಹಂತದ ನರಗುಂದ, ರೋಣ, ಗಜೇಂದ್ರಗಡ, ಮುಂಡರಗಿ ತಾಲೂಕುಗಳಲ್ಲಿ 27ರಂದು ಚುನಾವಣೆ ನಡೆಯಲಿವೆ.

ಈ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮೊದಲನೇ ಹಂತದ ಗ್ರಾ.ಪಂ.ವ್ಯಾಪ್ತಿಯಲ್ಲಿ ಡಿ.20 ರ ಸಂಜೆ 5 ಗಂಟೆಯಿಂದ ಡಿ.22 ರ ಮಧ್ಯರಾತ್ರಿಯವರೆಗೆ ಹಾಗೂ ಎರಡನೇ ಹಂತದ ಗ್ರಾ.ಪಂ.ವ್ಯಾಪ್ತಿಯಲ್ಲಿ ಡಿ.25 ರ ಸಂಜೆ 5 ಗಂಟೆಯಿಂದ ಪ್ರಾರಂಭಿಸಿ ಡಿಸೆಂಬರ್ 27 ರ ಮಧ್ಯರಾತ್ರಿಯವರೆಗೆ ಕೆಳಕಂಡ ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶಿಸಿದ್ದಾರೆ.

ಜಿಲ್ಲೆಯ ಚುನಾವಣೆ ಜರುಗುವ ಗ್ರಾ.ಪಂ. ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿಗಳು/ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಬಹುದಾಗಿದ್ದು ಅದರಲ್ಲಿ 5 ಜನರಿಗಿಂತ ಹೆಚ್ಚು ಜನರು ಸೇರತಕ್ಕದ್ದಲ್ಲ. ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಆ ಪ್ರದೇಶದಲ್ಲಿನ ಝೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಫೋಟೋ ಕಾಪಿಯರ್ ಬಂದ್ ಮಾಡಲು ಆದೇಶಿಸಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣಾ ಪ್ರಚಾರ ನಿಷೇಧಿಸಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸಬೇಕು. ಮತಗಟ್ಟೆಗಳ ಸುತ್ತ 200 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್ , ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಡಿಸಿ ಎಂ ಸುಂದರೇಶ್ ಬಾಬು

ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್, ವಾಹನಗಳ ಬಳಕೆ ಮತ್ತು ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಒಂದು ವೇಳೆ ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡನೇ ಹಂತದ ಗ್ರಾ.ಪಂ. ಚುನಾವಣೆ; 2439 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ವಿಜಯಸಾಕ್ಷಿ ಸುದ್ದಿ, ಗದಗ

ಜಿಲ್ಲೆಯಲ್ಲಿ ಎರಡನೇ ಹಂತದ ಗ್ರಾ.ಪಂ.ಚುನಾವಣೆಯಲ್ಲಿ ಅಂತಿಮವಾಗಿ 64 ಗ್ರಾ.ಪಂ.ಗಳ 895 ಸ್ಥಾನಗಳಲ್ಲಿ 36 ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಸದೇ ಖಾಲಿ ಉಳಿದ 9 ಸ್ಥಾನಗಳನ್ನು ಹೊರತುಪಡಿಸಿ ಒಟ್ಟು 850 ಸ್ಥಾನಗಳಿಗೆ 2439 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.

ಎರಡನೇ ಹಂತದಲ್ಲಿ ಮುಂಡರಗಿ ತಾಲ್ಲೂಕಿನ 18 ಗ್ರಾ.ಪಂ.ಗಳ 253 ಸ್ಥಾನಗಳಿಗೆ ಅನುಸೂಚಿತ ಜಾತಿ 154, ಅನುಸೂಚಿತ ಪಂಗಡ 62, ಹಿಂದುಳಿದ ‘ಅ’ ವರ್ಗ 110, ಹಿಂದುಳಿದ ‘ಬ’ ವರ್ಗ 21, ಸಾಮಾನ್ಯ 355 ಸೇರಿ ಒಟ್ಟು 702 ಅಭ್ಯರ್ಥಿಗಳಿದ್ದಾರೆ.

ನರಗುಂದ ತಾಲ್ಲೂಕಿನ 13 ಗ್ರಾ.ಪಂ. 160 ಸ್ಥಾನಗಳಿಗೆ ಅನುಸೂಚಿತ ಜಾತಿ 43, ಅನುಸೂಚಿತ ಪಂಗಡ 30, ಹಿಂದುಳಿದ ‘ಅ’ ವರ್ಗ 77, ಹಿಂದುಳಿದ ‘ಬ’ ವರ್ಗ 22, ಸಾಮಾನ್ಯ 206 ಸೇರಿ ಒಟ್ಟು 378 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.

ರೋಣ ತಾಲ್ಲೂಕಿನ 24 ಗ್ರಾ.ಪಂ. 312 ಸ್ಥಾನಗಳಿಗೆ ಅನುಸೂಚಿತ ಜಾತಿ 132, ಅನುಸೂಚಿತ ಪಂಗಡ 62, ಹಿಂದುಳಿದ ‘ಅ’ ವರ್ಗ 184, ಹಿಂದುಳಿದ ‘ಬ’ ವರ್ಗ 58, ಸಾಮಾನ್ಯ 534 ಸೇರಿ ಒಟ್ಟು 970 ಅಭ್ಯರ್ಥಿಗಳಿದ್ದಾರೆ.

ಗಜೇಂದ್ರಗಡ ತಾಲ್ಲೂಕಿನ 9 ಗ್ರಾ.ಪಂ. 125 ಸ್ಥಾನಗಳಿಗೆ ಅನುಸೂಚಿತ ಜಾತಿ 88, ಅನುಸೂಚಿತ ಪಂಗಡ 27, ಹಿಂದುಳಿದ ‘ಅ’ ವರ್ಗ 52, ಹಿಂದುಳಿದ ‘ಬ’ ವರ್ಗ 18, ಸಾಮಾನ್ಯ 204 ಸೇರಿ ಒಟ್ಟು 389 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣೆ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಚುನಾವಣಾ ಶಾಖೆ ತಿಳಿಸಿದೆ.

ಬಿಜೆಪಿ ಜೊತೆ ಕೈ ಜೋಡಿಸಿದರೆ ಪಕ್ಷ ಬಿಡ್ತೀನಿ; ಜೆಡಿಎಸ್ ಶಾಸಕ ಶ್ರೀನಿವಾಸ್ ಸ್ಪೋಟಕ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ತುಮಕೂರು

ಜೆಡಿಎಸ್, ಬಿಜೆಪಿ‌ ಜೊತೆ ಕೈ ಜೋಡಿಸಿದರೆ ಜೆಡಿಎಸ್ ಕೆಲ ಶಾಸಕರು ಪಕ್ಷ ತೋರೀತಾರಾ? ಎನ್ನುವ ಮೂಲಕ ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಪ್ರಶ್ನೆ ಹುಟ್ಟು ಹಾಕಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಜೊತೆ ಕೈ ಜೋಡಿಸಿದರೆ ಪಕ್ಷ ತೊರೀತೀನಿ. ನಾನು ಬಿಜೆಪಿ ನಿಲುವುಗಳನ್ನು ವಿರೋಧಿಸಿದವನು. ವಾಮ ಮಾರ್ಗದಲ್ಲಿ ಅಧಿಕಾರ ಅನುಭವಿಸುವ ಆಸೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ನಿಲುವಿಗೆ ಅನೇಕ ಶಾಸಕರ ವಿರೋಧವಿದೆ. ನನ್ನ ಸ್ನೇಹಿತರೂ ಇದ್ದಾರೆ, ಅದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ಶ್ರೀನಿವಾಸ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್ ನ ಇತರ ಶಾಸಕರಿಗೆ ಪಕ್ಷ ಬಿಡುವ ಒಲವಿದೆ. ಸುಮಾರು ಜನ ಶಾಸಕರುಗಳಿಗೆ ಆ ಮನಸ್ಥಿತಿ ಇದೆ.
ಅಸಮಾಧಾನವಿದೆ ಎಂದಾಗ ಅನೇಕರು ಪಕ್ಷ ತೊರೆಯುವ ಬಗ್ಗೆ ಚರ್ಚೆಯಾಗಿದೆ ಅಂತಲೇ ಅರ್ಥ.
ಕೆಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆ ಎನ್ನುವ ಮೂಲಕ ರಾಜ್ಯ ರಾಜಕಾರಣದಲ್ಲಿ ಎಸ್.ಆರ್.ಶ್ರೀನಿವಾಸ್ ಹೊಸ ಚರ್ಚೆಗೆ ಮುನ್ನುಡಿ ಬರೆದಿದ್ದಾರೆ.

ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರೂ ಕಾರಣ, ಗೊತ್ತಿದ್ದರೂ ಅಮೇರಿಕಾಕ್ಕೆ ಹೋದರು; ಜಿಟಿಡಿ

ವಿಜಯಸಾಕ್ಷಿ ಸುದ್ದಿ, ಮೈಸೂರು

ಮೈತ್ರಿ ಸರ್ಕಾರ ಪತನಕ್ಕೆ ಇಬ್ಬರೂ ಕಾರಣ‌. ಮೈತ್ರಿ ಸರ್ಕಾರ ಬೀಳುತ್ತೇ ಅಂತ ಗೊತ್ತಿತ್ತು.ಗೊತ್ತಿದ್ದರೂ ಕುಮಾರಸ್ವಾಮಿ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು ಎಂದು
ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಹೇಳಿದರು.

ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ನಡುವೆ ನಡೆದ ವಾಗ್ವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕರು ಪಕ್ಷ ಬಿಟ್ಟು ಹೋಗ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು. ಮನಸ್ಸು ಮಾಡಿದ್ದರೆ ಅದನ್ನು ಸಿದ್ದರಾಮಯ್ಯ ತಡೆಯಬಹುದಿತ್ತು. ಆದರೆ ತಡೆಯುವ ಪ್ರಯತ್ನ ಮಾಡಲಿಲ್ಲ.
ಆದ್ದರಿಂದ ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು‌ ಎಂದು ಆರೋಪಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರ್ಮಾಘಾತವೆಂದ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅವರು ಅವರ ಮನಸ್ಸಿನ ನೋವನ್ನು ಹೇಳಿಕೊಂಡಿದ್ದಾರೆ. ಈ ಮೊದಲು ವರುಣ ಚಾಮುಂಡೇಶ್ವರಿ ಒಂದೇ ಕ್ಷೇತ್ರವಾಗಿತ್ತು ಎಂದರು.

ತಾಲ್ಲೂಕು ಬೋರ್ಡ್ ಮೆಂಬರ್ ನಿಂದ ಹಿಡಿದು ಡಿಸಿಎಂ ಆಗುವವರೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಇದ್ದರು. ವರುಣಾ ಕ್ಷೇತ್ರ ಉದಯವಾದ ನಂತರ ಅಲ್ಲಿಗೆ ಹೋಗಿ ಗೆದ್ದು ಮುಖ್ಯಮಂತ್ರಿಯಾದರು. ಆದರೂ, ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದು ಬಯಸಿದ್ದರು.ಆದರೆ, ಜನ ಅವರನ್ನು ಕೈ ಹಿಡಿಯಲಿಲ್ಲ.
ನೀವೇ ನನ್ನನ್ನು ಕೈ ಬಿಟ್ಟಿರಿ ಎಂದು ಕಾರ್ಯಕರ್ತರ ಬಳಿ ನೋವನ್ನು ಹೇಳಿಕೊಂಡಿದ್ದಾರೆ ಎಂದು ಜಿ‌.ಟಿ.ದೇವೇಗೌಡ ಹೇಳಿದರು.

ಕುಮಾರಸ್ವಾಮಿ ಸಿಎಂ ಆದ ಮೇಲೆ ತಾಜ್ ವೆಸ್ಟೆಂಡ್ ಗೆ ಹೋಗಿಲ್ಲ, ಮುಂಚೆಯೇ ಅಲ್ಲಿ ರೂಮ್ ಮಾಡಿಕೊಂಡಿದ್ದರು; ಸಾರಾಗೆ ಸಿದ್ದರಾಮಯ್ಯ ಮರುತ್ತರ

ವಿಜಯಸಾಕ್ಷಿ ಸುದ್ದಿ, ಮೈಸೂರು

ಸಿದ್ದರಾಮಯ್ಯ ಒಳ ಒಪ್ಪಂದಗಳ ಜನಕ ಎಂಬ ಮಾಜಿ‌‌ ಸಿಎಂ ಕುಮಾರಸ್ವಾಮಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತಿರಿಸಿರುವ ಅವರು, ಅವನು ಹೇಳಿದ್ದಕ್ಕೆಲ್ಲಾ ನಾನು ಪ್ರತಿಕ್ರಿಯೆ ಕೊಡಲ್ಲ. ಚಾಮುಂಡೇಶ್ವರಿಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು ನಿಜ. ನಾನು ಅದನ್ನೇ ಹೇಳಿದ್ದೇನೆ.
ಬಾದಾಮಿಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಆಯ್ಕೆ ಮಾಡಿಕೊಂಡ ಕೆಲವೇ ಕ್ಷೇತ್ರಗಳಲ್ಲಿ ಒಪ್ಪಂದ ಮಾಡಿಕೊಂಡಿದ್ದವು ಎಂದು ಆರೋಪಿಸಿದರು.

ಗೋಪಾಲ್ ಗೆ ಟಿಕೆಟ್ ಕೊಟ್ಟು ನಿಲ್ಲಿಸಿದ್ದು ಯಾರು? ಯಾರು ಒಳ ಒಪ್ಪಂದ ಮಾಡಿಕೊಂಡಿದ್ದರು ಎಂದು ಎಲ್ಲರಿಗೂ ಗೊತ್ತಿದೆ.
ಅವರು ಹೇಳಿದ್ದಕ್ಕೆಲ್ಲಾ ನಾನು ಉತ್ತರ ಕೊಡಲ್ಲ ಎಂದರು.

ತಾಜ್ ವೆಸ್ಟೆಂಡ್ ನಲ್ಲಿ ಇರಲು ಸಿದ್ದರಾಮಯ್ಯ ಕಾರಣವೆಂಬ ಸಾರಾ ಮಹೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,
ಕುಮಾರಸ್ವಾಮಿ ಸಿಎಂ ಆದ ಮೇಲೆ ತಾಜ್ ವೆಸ್ಟೆಂಡ್ ಗೆ ಹೋಗಿದ್ದಲ್ಲ. ಅದಕ್ಕಿಂತ ಮುಂಚೆಯೇ ಅಲ್ಲಿ ರೂಮ್ ಮಾಡಿಕೊಂಡಿದ್ದರು ಎಂದು ಮರುತ್ತರ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಗೆ ಪಕ್ಷದ ಮುಖಂಡರು ಕಾರಣವೆಂದು ಹೇಳಿದ್ದೇನೆ. ಇದು ಚಾಮುಂಡೇಶ್ವರಿ ಕ್ಷೇತ್ರದ ವಿಚಾರ. ಅಲ್ಲಿಯವರ ಬಗ್ಗೆ ನಾನು ಹೇಳಿರುವುದು. ಪಕ್ಷದವರೇ ನನ್ನನ್ನು ಸೋಲಿಸಿದರು ಎಂದು ಮಾಜಿ‌ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಜನವರಿ 1ರಿಂದ ಶಾಲಾ ಕಾಲೇಜು ಆರಂಭ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೋನಾದಿಂದಾಗಿ ಕಳೆದ ಒಂಬತ್ತು ತಿಂಗಳಿನಿಂದ ಬಾಗಿಲು ಮುಚ್ಚಿದ್ದ ಶಾಲಾ ಕಾಲೇಜು ತೆರೆಯಲು ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಹಸಿರು ನಿಶಾನೆ ತೋರಿಸಿದೆ.

ಬೋರ್ಡ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನವರಿ 1 ರಿಂದ 10 ಮತ್ತು 12ನೇ ತರಗತಿಗಳು ಪುನಾರಂಭವಾಗಲಿವೆ. ಹೊಸ ವರ್ಷದಂದು ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ವಾರಕ್ಕೆ ಮೂರು ದಿನ ಮಾತ್ರ ತರಗತಿಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ.

ಶನಿವಾರ ಬೆಂಗಳೂರಿನ ಸಿಎಂ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಜನವರಿ 1 ರಿಂದ 10 ಮತ್ತು 12ನೇ ತರಗತಿಗಳ ಜೊತೆಗೆ 6 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಈ ತರಗತಿಗಳ ಪಾಸ್ ಫೇಲ್ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ರಾಜ್ಯದಲ್ಲಿನ ಕೊವಿಡ್ ಪರಿಸ್ಥಿತಿ ನೋಡಿಕೊಂಡು ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಅದರಂತೆ, ತರಗತಿ ನಡೆಯಬೇಕಾಗಿರುವ ವೇಳಾಪಟ್ಟಿ ಸಿದ್ದಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ವಾರ ವಿದ್ಯಾಗಮ ಬಗ್ಗೆ ರಾಜ್ಯ ಹೈಕೋರ್ಟ್ ಮಾಹಿತಿ ನೀಡುವಂತೆ ಆದೇಶಿಸಿತ್ತು. ಶಿಕ್ಷಣ ಇಲಾಖೆ ಸಂಪೂರ್ಣ ಮಾಹಿತಿ ನೀಡಿತ್ತು. ವಿದ್ಯಾಗಮ ತರಗತಿಗಳನ್ನು ಪುನಾರಂಭಿಸುವಂತೆ ಹೈಕೋರ್ಟ್ ಅಪೇಕ್ಷಿಸಿತ್ತು. ಹಾಗಾಗಿ ಜನವರಿ 1 ರಿಂದ ವಿದ್ಯಾಗಮ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಈ ಬಾರಿ ವಿದ್ಯಾಗಮ ತರಗತಿಗಳು ಶಾಲಾ ಆವರಣದಲ್ಲೇ ನಡೆಯಲಿದ್ದು, ಖಾಸಗಿ ಶಾಲೆಯವರು 6 ರಿಂದ 9 ನೇ ವಿದ್ಯಾರ್ಥಿಗಳಿಗೆ ವಿದ್ಯಾಗಮ ತರಗತಿಗಳನ್ನು ಪ್ರಾರಂಭಿಸಬೇಕು ಎಂದು ಸಚಿವರು ತಿಳಿಸಿದರು.

ವಿದ್ಯಾಗಮ ತರಗತಿಗೆ ಆಗಮಿಸುವ ಮಕ್ಕಳು ಕಡ್ಡಾಯವಾಗಿ ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು. ಪೋಷಕರು ತಮ್ಮ ಮಕ್ಕಳನ್ನು ತರಗತಿಗೆ ಕಳುಹಿಸುವಂತೆ ಒತ್ತಾಯವಿಲ್ಲ. ಮಕ್ಕಳ ಹಾಜರಾತಿಯೂ ಕಡ್ಡಾಯವಿಲ್ಲ. ಮಕ್ಕಳಿಗೆ ಆನ್‌ಲೈನ್‌ನಲ್ಲೂ ಕಲಿಯುವುದಕ್ಕೆ ಅವಕಾಶವಿದ್ದು, ಆಸಕ್ತಿ ಇದ್ದವರೂ ಮಾತ್ರ ವಿದ್ಯಾಗಮ ತರಗತಿಗಳಿಗೆ ಬರಬಹುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದರು.

ಸಿದ್ಧರಾಮಯ್ಯ ಅವರದು ಕಪಟ ನೀತಿ: ಹೆಚ್ ಡಿಕೆ ಟೀಕೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಶುಕ್ರವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದಿದ್ದ ಗ್ರಾ.ಪಂ. ಜನಾಧಿಕಾರ ಸಭೆಯಲ್ಲಿ ಚಾಮುಂಡೇಶ್ವರಿ ಸೋಲಿನ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದ ಸಿದ್ಧರಾಮಯ್ಯ ರಾಜ್ಯ ರಾಜಕಾರಣದಲ್ಲಿ ಬೀರುಗಾಳಿ ಎಬ್ಬಿಸುವ ಮೂಲಕ ಹೊಸ ಚರ್ಚೆಗೆ ಮುನ್ನುಡಿ ಬರೆದಿದ್ದರು. ಅಲ್ಲದೇ, ಹಿಂದಿನ ಮೈತ್ರಿ ಸರ್ಕಾರದ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ‌ನ್ನೇ ಅನುಮಾನದಿಂದ ನೋಡುವಂತೆ ಮಾಡಿತ್ತು.

ಈ ಬಗ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ ಅವರು,
2018 ರಲ್ಲಿ ಮೈತ್ರಿಯಾಗಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದು, ಹೈಕಮಾಂಡ್ ನ ನಿರ್ಧಾರವಾಗಿತ್ತು ಎಂದು ಹಲವು ಬಾರಿ ಸಿದ್ಧ ರಾಮಯ್ಯ ಹೇಳಿದ್ದಾರೆ. ಆದರೆ, ಚಾಮುಂಡೇಶ್ವರಿ ಭಾಷಣದ ವೇಳೆ, ನಾನು ಒಪ್ಪದೇ ಹೋಗಿದಿದ್ದರೆ ಕುಮಾರಸ್ವಾಮಿ ಅವರನ್ನು ಸಿಎಂ ಅಗಲು ಬಿಡುತ್ತಿರಲಿಲ್ಲ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಸಿದ್ಧವನದಲ್ಲಿ ಸರ್ಕಾರ ಬೀಳಿಸುವ ಸಭೆ ನಡೆಸಿದವರು ಸಿದ್ಧರಾಮಯ್ಯ ಅಲ್ಲವೇ? ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿದ ಶಾಸಕರಲ್ಲಿ ಬಹುತೇಕರು ಅವರ ಬೆಂಬಲಿಗರಾಗಿರಲಿಲ್ಲವೇ? ಆದರೂ, ಸರ್ಕಾರ ಬೀಳಿಸಿದ್ದರ ಅಪವಾದದಿಂದ ಪಾರಾಗಲು ಸಿದ್ಧರಾಮಯ್ಯ ಯತ್ನಸುತ್ತಿದ್ದಾರೆ. ಇದು ಅವರ ಕಪಟ ನೀತಿ ಎಂದು ಹೆಚ್ ಡಿಕೆ ಕಟುವಾಗಿ ಟೀಕಿಸಿದ್ದಾರೆ.

ಸಿಎಂ ಸ್ಥಾನದಿಂದ ಇಳಿದ ನಂತರ ಸಿದ್ಧರಾಮಯ್ಯ ಸರ್ಕಾರಿ ನಿವಾಸ ತೊರಯಲಿಲ್ಲ. ಆ ವಿಚಾರದಲ್ಲಿ ಕಿಂಚಿತ್ತೂ ನಾಚಿಕೆ ಪ್ರದರ್ಶಿಸಲಿಲ್ಲ. ತಾವು ಸಿಎಂ ಆಗಿದ್ದಾಗ 6 ಗಂಟೆಗೆ ಹೇಳದೇ ಕೇಳದೇ ಕಚೇರಿ ತೊರೆದು ಅಜ್ಞಾತರಾಗುತ್ತಿದ್ದ ಸಿದ್ಧರಾಮಯ್ಯ, ರಾತ್ರಿ 12 ಗಂಟೆಯವರೆಗೆ ದುಡಿಯುತ್ತಿದ್ದ ನನ್ನ ಬಗ್ಗೆ ಮಾತನಾಡುವ ನೈತಿಕತೆ ಉಳ್ಳವರೇ?

37 ಸ್ಥಾನ ಗೆದ್ದಿದ್ದ ಜೆಡಿಎಸ್ ಗೆ ನಾವು ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟೆವು ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಾರೆ. ಅದು 37 ಸ್ಥಾನವಾಗಲಿ ಅಥವಾ 100 ಸ್ಥಾನಗಳಾದರೂ ಆಗಿರಲಿ. ಅದು ಜನಾದೇಶ. ಆ ವಿಚಾರದಲ್ಲಿ ಮೂದಲಿಕೆ ಮಾಡುವ ಸಿದ್ದರಾಮಯ್ಯ ಅವರಿಗೆ ಜನರ ಆಶಯ, ಅಭಿಪ್ರಾಯಗಳನ್ನು ಒಪ್ಪುವಂಥ ಮನಸ್ಥಿತಿಯೇ ಇಲ್ಲ ಎಂದು ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿ ಕಚೇರಿಗೆ ಬರುತ್ತಿರಲಿಲ್ಲವಂತೆ, ತಾಜ್ ವೆಸ್ಟೆಂಡ್ ‌ನಲ್ಲಿ ಇರುತ್ತಿದ್ದರಂತೆ. ಅಹೋರಾತ್ರಿ‌ ಜನತಾ ದರ್ಶನ ತಾಜ್ ವೆಸ್ಟೆಂಡ್ ನಲ್ಲಿ ನಡೆಯುತ್ತಿತ್ತೋ? ಸಿಎಂ ಕಚೇರಿಯಲ್ಲಿ ನಡೆಯುತ್ತಿತ್ತೋ ಸಿದ್ದರಾಮಯ್ಯನವರೇ? ಬಾದಾಮಿಯಲ್ಲಿ ಈಗ ನಡೆಯುತ್ತಿರುವ 1200 ಕೋಟಿ ಕಾಮಗಾರಿಗಳು ತಾಜ್ ವೆಸ್ಟೆಂಡ್ ನದ್ದ?

ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಬೆಳಗಾವಿ ಲೋಕಸಭೆ ಬೈಎಲೆಕ್ಷನ್; ಬಿಜೆಪಿ ಟಿಕೆಟ್ ನೀಡುವಂತೆ ಪ್ರಮೋದ್ ಮುತಾಲಿಕ್ ಮನವಿ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಸುರೇಶ್ ಅಂಗಡಿಯವರ ನಿಧನದ ಹಿನ್ನೆಲೆಯಲ್ಲಿ ತೆರುವಾಗಿರುವ
ಬೆಳಗಾವಿ ಲೋಕಸಭೆ ಸ್ಥಾನಕ್ಕೆ
ಬಿಜೆಪಿಯಿಂದ ಕಣಕ್ಕಿಳಿಯಲು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಉತ್ಸುಕತೆ ತೋರಿದ್ದಾರೆ.

ಈಗಾಗಲೇ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ , ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬೆಳಗಾವಿ ಲೋಕಸಭೆ ಬಿಜೆಪಿ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಪ್ರಭಾಕರ್ ಕೋರೆ ಕೂಡಾ ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದ್ದಾರೆ ಎನ್ನಲಾಗುತ್ತಿದೆ.

ಬೆಳಗಾವಿ ಲೋಕಸಭೆ ಉಪ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಪರ್ಧಿಸುವ ಆಕಾಂಕ್ಷಿಗಳು ಟಿಕೆಟ್ ಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

error: Content is protected !!