Home Blog Page 3093

ಫೋನ್ ನಲ್ಲಿ ಮಾತನಾಡಬೇಡ ಎಂದಿದ್ದಕ್ಕೆ ಪತ್ನಿ ಮಾಡಿದ್ದೇನು?

ವಿಜಯಸಾಕ್ಷಿ ಸುದ್ದಿ, ಕಾರವಾರ

ಪತ್ನಿ ಮೊಬೈಲ್ ನಲ್ಲಿಯೇ ಮಾತನಾಡುತ್ತ ಹೆಚ್ಚು ಕಾಲ ಕಳೆಯುತ್ತಿದ್ದಕ್ಕೆ ಬುದ್ಧಿ ಹೇಳಿದ್ದಕ್ಕೆ ಸುಫಾರಿ ಕೊಟ್ಟು ಪತಿಯನ್ನೇ ಕೊಲೆ ಮಾಡಲು ಪ್ರಯತ್ನಿಸಿರುವ ಘಟನೆ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ಪತಿಯನ್ನೇ ಕೊಲ್ಲಲು ರೂ. 30 ಸಾವಿರಕ್ಕೆ ಸುಫಾರಿ ನೀಡಿ ಈಗ ಹೆಂಡತಿ ಸಿಕ್ಕು ಬಿದಿದ್ದಾರೆ.

ಸರಸ್ವತಿ ಸುತಾರ ಎಂಬ ಮಹಿಳೆಯೇ ಈ ಕೃತ್ಯ ಎಸಗಿದ್ದವಳು. ಈ ಮಹಿಳೆ ದಾಂಡೇಲಿಯ ಅಂಕುಷ ರಾಮಾ ಸುತಾರ ಎಂಬ ವ್ಯಕ್ತಿಯೊಂದಿಗೆ ಕಳೆದ 6 ವರ್ಷಗಳ ಹಿಂದೆ ವಿವಾಹವಾಗಿದ್ದಳು. ಇವರಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಮನೆಯಲ್ಲಿ ಸಮಯ ಕಳೆಯುವುದಕ್ಕಾಗಿ ನೆಂಟರು ಹಾಗೂ ಪರಿಚಯಸ್ಥರೊಂದಿಗೆ ಮೊಬೈಲ್ ನಲ್ಲಿ ಕಾಲಹರಣ ಮಾಡುತ್ತಿದ್ದಳು.
ಆದರೆ, ಮಡದಿಯ ವರ್ತನೆಯಿಂದ ಪತಿ, ಮೊಬೈಲ್ ನಲ್ಲಿ ಹರಟದಂತೆ ಬುದ್ದಿ ಹೇಳಿದ್ದರು. ಇದರಿಂದ ಕೆಂಡಾಮಂಡಲವಾದ ಪತ್ನಿ, ಪರಿಚಯದ ಗಣೇಶ ಶಾಂತರಾಂ ಎಂಬುವವನಿಗೆ ರೂ. 30 ಸಾವಿರ ಕೊಟ್ಟು ಹತ್ಯೆ ಮಾಡುವಂತೆ ಸುಫಾರಿ ಕೊಟ್ಟಿದ್ದಾಳೆ ಎನ್ನಲಾಗಿದೆ.

ಸುಫಾರಿ ಪಡೆದ ಗಣೇಶ ಶಾಂತರಾಂ ಹಾಗೂ ಇಬ್ಬರು ಅಪ್ರಾಪ್ತ ಬಾಲಕರು ಮನೆಗೆ ಆಗಮಿಸಿ, ಅಂಕುಷ ರಾಮಾ ಸುತಾರ ಅವರ ಕತ್ತು ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಿದ್ದಾರೆ. ಆಗ ಅಂಕುಷ ಕೂಗಾಟ ನಡೆಸಿದ್ದಾರೆ. ಕೂಡಲೇ ಪಕ್ಕದ ಮನೆಯಲ್ಲಿದ್ದ ಸಹೋದರರು ಓಡಿ ಬಂದಿದ್ದಾರೆ. ಈ ಸಂದರ್ಭದಲ್ಲಿ ಹತ್ಯೆ ಮಾಡಲು ಬಂದಿದ್ದ ಇಬ್ಬರು ಅಪ್ರಾಪ್ತರು ಓಡಿಹೋಗಿದ್ದು, ಸುಪಾರಿ ತೆಗೆದುಕೊಂಡ ಗಣೇಶ್ ಶಾಂತರಾಂ ಸಿಕ್ಕಿಬಿದ್ದಿದ್ದಾನೆ.

ಈ ಕುರಿತು ದಾಂಡೇಲಿಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಸ್ವತಿ ಸುತಾರ ಮತ್ತು ಬೆಳಗಾವಿ ಮೂಲದ ಗಣೇಶ ಶಾಂತರಾಂನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಭಾರತೀಯ ಟೀಮ್ ನಲ್ಲಿ ಆತ್ಮವಿಶ್ವಾಸ ಮೂಡಿಸಿದ ರಿಷಬ್ ಪಂತ್!

ವಿಜಯಸಾಕ್ಷಿ ಸುದ್ದಿ, ಸೌತಾಂಪ್ಟನ್

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಕ್ವಾರಂಟೈನ್ ಮುಗಿಸಿ ,4 ದಿನಗಳ ಇಂಟ್ರಾ ಸ್ಕ್ವಾಡ್ ಅಭ್ಯಾಸ ಪಂದ್ಯ ಆಡುತ್ತಿದೆ.
ಈ ಅಭ್ಯಾಸ ಪಂದ್ಯದಲ್ಲಿ ರಿಷಭ್ ಪಂತ್ ಅರ್ಧ ಶತಕ ಬಾರಿಸಿ ತಮ್ಮ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದಾರೆ.

ಜೂ. 18ರಿಂದ 22ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ನಡೆಯಲಿದೆ. ಹೀಗಾಗಿ ವಿರಾಟ್ ಕೊಹ್ಲಿ ಪಡೆ ತಂಡದೊಳಗೆ ಅಭ್ಯಾಸ ನಡೆಸುತ್ತಿದೆ. ಇನ್ನೊಂದೆಡೆ ಭಾರತ ತಂಡವನ್ನು ಫೈನಲ್ ನಲ್ಲಿ ಎದುರಿಸಲಿರುವ ನ್ಯೂಜಿಲೆಂಡ್‌ ತಂಡ ಇಂಗ್ಲೆಂಡ್‌ ವಿರುದ್ಧ ದ್ವಿತೀಯ ಟೆಸ್ಟ್‌ ಪಂದ್ಯ ಆಡುತ್ತಿದೆ.

ವಿಕೆಟ್ ಕೀಪರ್, ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಅಭ್ಯಾಸ ವೇಳೆಯೂ ಬಿರುಸಿನ ಬ್ಯಾಟಿಂಗ್‌ ನಡೆಸಿದ್ದಾರೆ. ಹೀಗಾಗಿ ಅವರು ಟೆಸ್ಟ್ ಚಾಂಪಿಯನ್‌ ಶಿಪ್‌ ನಲ್ಲಿ ಉತ್ತಮ ಬ್ಯಾಟಿಂಗ್‌ ನ ನಿರೀಕ್ಷೆ ಮೂಡಿಸಿದ್ದಾರೆ. ಇದು ಭಾರತೀಯ ತಂಡದ ಆತ್ಮವಿಶ್ವಾಸಕ್ಕೆ ಕಾರಣವಾಗುತ್ತಿದೆ.

ರಾಜ್ಯದಲ್ಲಿಯೂ ಮಕ್ಕಳ ಮೇಲೆ ಪ್ರಯೋಗ!

ವಿಜಯಸಾಕ್ಷಿ ಸುದ್ದಿ, ಮೈಸೂರು

ರಾಜ್ಯದಲ್ಲಿಯೂ ಮಕ್ಕಳ ಮೇಲೆ ಲಸಿಕೆ ಪ್ರಯೋಗ ನಡೆಯುತ್ತಿದೆ.
ಇಲ್ಲಿಯ ಚೆಲುವಾಂಬ ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಮೊದಲ ಡೋಸ್ ಪ್ರಯೋಗ ನಡೆಯುತ್ತಿದೆ. ಮೊದಲ ಹಂತದಲ್ಲಿ 30 ಮಕ್ಕಳ ಮೇಲೆ ಪ್ರಯೋಗ ಮಾಡಲಾಗಿದೆ.

ವ್ಯಾಕ್ಸಿನ್ ಪಡೆದ ಮಕ್ಕಳು ಕಳೆದ 6 ದಿನಗಳಿಂದ ಆರೋಗ್ಯವಾಗಿದ್ದಾರೆ. 30 ಮಕ್ಕಳಲ್ಲಿ ಇಬ್ಬರಿಗೆ ಜ್ವರ ಬಂದಿದ್ದು, ಕೆಲವರಿಗೆ ಸೂಜಿ ಚುಚ್ಚಿದ ಜಾಗದಲ್ಲಿ ಮಾತ್ರ ಸ್ವಲ್ಪ ನೋವು ಕಂಡು ಬಂದಿದೆ. ವಯಸ್ಕರಿಗೆ ನೀಡಿದ ಪ್ರಮಾಣದಲ್ಲಿಯೇ ಮಕ್ಕಳಿಗೂ ಲಸಿಕೆ ನೀಡಲಾಗಿದೆ. ವೈದ್ಯರು ಮಕ್ಕಳ ಆರೋಗ್ಯದ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ಒಂದು ತಿಂಗಳ ನಂತರ ವ್ಯಾಕ್ಸಿನ್ ಪಡೆದ ಮಕ್ಕಳ ರಕ್ತದ ಮಾದರಿ ಸಂಗ್ರಹ ಮಾಡಿ, ಮಕ್ಕಳ ದೇಹದ ಮೇಲೆ ವ್ಯಾಕ್ಸಿನ್ ಪರಿಣಾಮದ ಬಗ್ಗೆ ಟೆಸ್ಟ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.

ಸದ್ಯ ರಾಜ್ಯದಲ್ಲಿ 175 ಮಕ್ಕಳ ಮೇಲೆ ಪ್ರಯೋಗ ನಡೆದಿದೆ. ಇದು ಯಶಸ್ವಿಯಾದ ನಂತರವಷ್ಟೇ 6 ರಿಂದ 12 ಹಾಗೂ 2 ರಿಂದ 6 ವಯಸ್ಸಿನ ಮಕ್ಕಳ ಮೇಲೆ ಪ್ರಯೋಗ ನಡೆಯಲಿದೆ.

ಈ ಪ್ರಯೋಗವು ರಾಜ್ಯದಲ್ಲಿ 7 ತಿಂಗಳ ಕಾಲ ನಡೆಯಲಿದೆ. ಈಗ ರಾಜ್ಯದಲ್ಲಿ ಏಕೈಕ ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ವಾಕ್ಸಿನ್ ಪ್ರಯೋಗವಾಗಿದ್ದು, ದೇಶದಲ್ಲಿ ಒಟ್ಟು 10 ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ಪ್ರಯೋಗವಾಗಿದೆ.

ಗದಗ ಸೇರಿದಂತೆ ರಾಜ್ಯದಲ್ಲಿ ನಾಲ್ಕು ದಿನ ಅಬ್ಬರಿಸಲಿದ್ದಾನೆ ಮಳೆರಾಯ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚೆ ನೀಡಿದೆ.
ಕರಾವಳಿ, ಮಲೆನಾಡು, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಜೂ. 16ರ ವರೆಗ ಮಳೆ ಸುರಿಯುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಅಸಮಾಧಾನದ ಹೊಗೆ! ಬ್ಯಾನರ್‌ನಲ್ಲಿ ಫೋಟೋ ಇಲ್ಲದ್ದಕ್ಕೆ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ

ಜಿಲ್ಲೆಯ ಯುವ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಭುಗಿಲೆದ್ದಿದೆ. ಯುವ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಮಾಜಿಕ ಮಾಧ್ಯಮಗಳ ಮೂಲಕ ಜಗಜ್ಜಾಹೀರಾಗುತ್ತಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಹೀಗಾಗಿ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಯುತ್ತಿವೆ.

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯೂ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಜಿಲ್ಲೆಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವುದಕ್ಕಾಗಿ ಬ್ಯಾನರ್ ಸಿದ್ಧಪಡಿಸಲಾಗಿತ್ತು. ಅದಕ್ಕಾಗಿಯೇ ಎಲ್ಲ ನಾಯಕರ ಭಾವಚಿತ್ರಗಳನ್ನು ಬ್ಯಾನರ್‌ನಲ್ಲಿ ಹಾಕಲಾಗಿತ್ತು. ಆದರೆ, ಅಲ್ಪಸಂಖ್ಯಾತರ ಅಧ್ಯಕ್ಷರ ಭಾವಚಿತ್ರ ಅದರಲ್ಲಿ ಹಾಕಿರಲಿಲ್ಲ. ಇದರಿಂದಾಗಿ ಕೆಲವು ಅಲ್ಪಸಂಖ್ಯಾತ ಕಾರ್ಯಕರ್ತರು ಸೋಶಿಯಲ್ ಮೀಡಿಯಾದಲ್ಲಿ ಅಧ್ಯಕ್ಷ ಅಶೋಕ ಮಂದಾಲಿ ಅವರ ಕಾಲೆಳೆದಿದ್ದಾರೆ.

ಫೇಸ್‌ಬುಕ್ ಸಾಮಾಜಿಕ ಜಾಲತಾಣದ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಅಧ್ಯಕ್ಷರು ಇದ್ದಾರೋ ಅಥವಾ ಇಲ್ಲವೋ ಎಂಬುವುದಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಕ್ರೋಶ ಹೊರಹಾಕಲಾಗಿದೆ. ಹಲವರು ಇದಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಜಿಲ್ಲಾಧ್ಯಕ್ಷರನ್ನೇ ಮರೆತಿದ್ದಾರೆ!

ಒಬ್ಬ ಜಿಲ್ಲಾಧ್ಯಕ್ಷರನ್ನೇ ಮರೆಯಲಾಗಿದೆ. ಹಿಂದುಳಿದ ವರ್ಗದ ನಾಯಕರು ತುಂಬಾ ಜನ ಇದ್ದಾರೆ. ಅವರಿಗೆ ತಮ್ಮದೇ ಆದ ಸಿದ್ಧಾಂತಗಳು ಇವೆ. ಆದರೆ, ಒಬ್ಬ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಇವರ ಕೊಡುಗೆ ಏನು? ಪಕ್ಷದ ಕಾರ್ಯಕರ್ತರನ್ನು ಸರಿಯಾಗಿ ಮಾತನಾಡಿಸುವುದಿಲ್ಲ. ಗೌರವ ಕೊಡುವುದಿಲ್ಲ. ಹೀಗಾಗಿ ಕಾರ್ಯಕರ್ತರು ಇವರ ಕಾರ್ಯಕ್ರಮಗಳಿಗೆ ಬರುವುದು ಕಡಿಮೆಯಾಗುತ್ತಿದೆ. ಇವರ ವರ್ತನೆಯಿಂದ ನಾಯಕರು ಹಾಗೂ ಕಾರ್ಯಕರ್ತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ಗಂಗಿಮಡಿ ಕುಮಾರ್ ಮೌರ್ಯ ಎಂಬುವವರು ಕಮೆಂಟ್ ಮಾಡಿದ್ದಾರೆ. ಅಲ್ಲದೆ, ನವೀನ್ ಭಂಡಾರಿ ಎಂಬುವರು ಎಲ್ಲರನ್ನೂ ಕರೆದುಕೊಂಡು ಹೋಗುವ ಮನಸ್ಥಿತಿ ಹೊಂದಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಹಲವು ಬಗೆಯಲ್ಲಿ ಚರ್ಚೆ

ಈ ಕುರಿತು ಹಲವಾರು ಚರ್ಚೆಗಳು ನಡೆಯುತ್ತಿವೆ. ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು. ಕುಟುಂಬದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಹಲವರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಯುಥ್ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಈ ವೈಮನಸ್ಸು ಇಲ್ಲಿಗೆ ನಿಲ್ಲುತ್ತದೋ ಅಥವಾ ಮುಂದುವರೆಯುತ್ತೋ ಎಂಬುದನ್ನು ಕಾದು ನೋಡಬೇಕು.

ಕೊರೊನಾ; ಶನಿವಾರವೂ ಮುಂದುವರಿದ ಶುಭ ಸುದ್ದಿ, 60 ಜನರಿಗೆ ಸೋಂಕು, ಇಬ್ಬರ ಸಾವು

0

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯ ಜನರಿಗೆ ಶನಿವಾರವೂ ಶುಭ ಸುದ್ದಿ ಮುಂದುವರೆದಿದೆ.

ಇಂದು 60 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ ಇಬ್ಬರು ಮೃತಪಟ್ಟಿದ್ದಾರೆ.

ಇಂದು 60 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 25324 ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -33, ಮುಂಡರಗಿ-05, ನರಗುಂದ-00, ರೋಣ-08, ಶಿರಹಟ್ಟಿ-09, ಹೊರಜಿಲ್ಲೆಯ-05 ಸೇರಿದಂತೆ 60 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 287 ಕ್ಕೇರಿದೆ.

ಗದಗ ತಾಲೂಕಿನ ಬೆಟಗೇರಿ ನಿವಾಸಿ 87 ವರ್ಷದ ವ್ಯಕ್ತಿ ಮೇ 30 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -10 ರಂದು ಮೃತಪಟ್ಟಿದ್ದಾರೆ.

ಜಿಲ್ಲೆಯ ಶಿರಹಟ್ಟಿ ತಾಲೂಕಿನ ಯಳವತ್ತಿ ನಿವಾಸಿ 50 ವರ್ಷದ ವ್ಯಕ್ತಿ ಮೇ-26 ರಂದು ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 09 ರಂದೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ.

ಇಂದು 133 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 24167 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 870 ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 95 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಜೂನ್ 14 ರಿಂದ 21 ರವರೆಗೆ ನಿಷೇಧಾಜ್ಞೆ, ನೈಟ್‌, ವೀಕೆಂಡ್ ಕರ್ಫ್ಯೂ ಜಾರಿ, ಕೆಲ ಮಾರ್ಗಸೂಚಿಗಳಲ್ಲಿ ಸಡಿಲಿಕೆ

0

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್-19 ಸೋಂಕು ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಜಾರಿ ಮಾಡಿದ ಕಠಿಣ ಮಾರ್ಗಸೂಚಿಗಳನ್ನು ಸಡಿಲು ಮಾಡಿ ಆದೇಶ ಹೊರಡಿಸಿರುತ್ತದೆ. ಈ ಮಾರ್ಗಸೂಚಿಗಳು ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಜೂನ್ 21 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ.

ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ  ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡಂತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಲಾಗಿದೆ. ಅದೇ ರೀತಿ ಅಗತ್ಯ ವಸ್ತು, ಮದ್ಯ ಖರೀದಿಗೆ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಶೇಕಡ 50 ರಷ್ಟು ಸಿಬ್ಬಂದಿಯೊಂದಿಗೆ ಕೈಗಾರಿಕೆಗಳು ಕಾರ್ಯ ನಿರ್ವಹಿಸಬಹುದಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಿದ್ದು, ಬೆಳಗ್ಗೆ 5 ರಿಂದ 10 ಗಂಟೆಯ ವರಗೆ ಪಾರ್ಕ್ ಗಳನ್ನು ತೆರೆಯಬಹುದು. ಅಂತ್ಯ ಸಂಸ್ಕಾರಕ್ಕೆ 5 ಜನ, ಮದುವೆಗೆ 40 ಜನ ಭಾಗವಹಿಸಲು ಸಮ್ಮತಿ ನೀಡಲಾಗಿದೆ.
ಪ್ರತಿದಿನ ಸಂಜೆ 7 ರಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಪ್ರತಿಬಂಧಕಾಜ್ಞೆ ಜಾರಿ

ಗದಗ ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ  ರೋಗ ಕಾಯ್ದೆ 1897  ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ  ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ. ಆದೇಶದಲ್ಲಿ  ಹೊರಡಿಸಿರುವ ಷರತ್ತುಗಳಿಗೆ ಒಳಪಟ್ಟು  ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜೂನ 14 ರ ಬೆಳಗಿನ 6 ಗಂಟೆಯವರೆಗೆ ಜಾರಿಗೊಳಿಸಲಾದ  ಪ್ರತಿಬಂಧಕಾಜ್ಞೆಯನ್ನು ಜೂನ್ 21 ಬೆಳಗಿನ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100  ದಂಡವನ್ನು ವಿಧಿಸಲಾಗುವುದು ಹಾಗೂ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾದಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಕೊರೊನಾ ಎರಡನೇ ಅಲೆಯಿಂದಾಗಿ ದೇಶಕ್ಕೆ ಆದ ನಷ್ಟ ಎಷ್ಟು?

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಕೊರೊನಾ ಹೆಮ್ಮಾರಿಯಿಂದಾಗಿ ಇಡೀ ದೇಶದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿತ್ತು. ಇದರಿಂದಾಗಿ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಎರಡನೇ ಅಲೆಯಲ್ಲಿಯೇ ಹೀಗಾದರೆ, ಮೂರನೇ ಅಲೆಯಲ್ಲಂತೂ ಇದರ ಪರಿಸ್ಥಿತಿ ಕೆಟ್ಟದ್ದಾಗಿರುತ್ತದೆ. ಇದರಿಂದಾಗಿ ದೇಶದ ಆರ್ಥಿಕತೆ ತೀವ್ರ ಹಿನ್ನಡೆ ಅನುಭವಿಸಲಿದೆ.

ಲಾಕ್‌ ಡೌನ್‌ ನಿಂದಾಗಿ ದೇಶದಲ್ಲಿ ಬರೋಬ್ಬರಿ ರೂ. 5.4 ಲಕ್ಷ ಕೋಟಿ ನಷ್ಟ ಉಂಟಾಗಿದೆ. ಇದು ಕೊರೊನಾ ಎರಡನೇ ಅಲೆಯಿಂದಾಗಿ ಉಂಟಾದ ನಷ್ಟವಾಗಿದೆ. ಇದನ್ನು ಬರ್ಕಲೇ ಸಂಸ್ಥೆ ಅಂದಾಜು ಮಾಡಿದೆ.

2ನೇ ಅಲೆಯಿಂದ ದೇಶದಲ್ಲಿ ನಿರುದ್ಯೋಗ ಸಂಖ್ಯೆ ಕೂಡ ಹೆಚ್ಚಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲಾಕ್‌ ಡೌನ್ ನಿಂದಾಗಿ 2.7 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಉದ್ಯೋಗ ನಷ್ಟದಿಂದಾಗಿ ದೇಶದಲ್ಲಿ ತೀವ್ರ ಆರ್ಥಿಕ ಸಂಕಷ್ಟ ಎದುರಾಗಿದೆ. ಇದರಿಂದಾಗಿ ದೇಶದ ಆರ್ಥಿಕತೆಗೆ ದೊಡ್ಡ ಹೊಡೆತ ಬಿದ್ದಿದೆ ಎನ್ನಲಾಗಿದೆ.

ಕೇಂದ್ರ ಸರ್ಕಾರ, ಆರ್ಥಿಕತೆ ಚೇತರಿಕೆಗೆ ಯಾವ ಪ್ಯಾಕೇಜ್ ಕೂಡ ಘೋಷಿಸಿಲ್ಲ. ಜನರ ಕೈಗೆ ನೇರ ದುಡ್ಡು ಸಿಗುವಂತಾಗಬೇಕು ಎಂದು ಬರ್ಕಲೇ ಸಂಸ್ಥೆ ಸಲಹೆ ನೀಡಿದೆ.
ಕೊವಿಡ್ ನ ಎರಡನೇ ಅಲೆಯಿಂದಾಗಿ ಪ್ರಸಕ್ತ ಸಾಲಿನಲ್ಲಿ ಜಿಡಿಪಿ ಬೆಳವಣಿಗೆ ಶೇ. 0.8ರಷ್ಟು ಕುಗ್ಗಿದೆ. ಮೂರನೆ ಅಲೆ ಬಂದರಂತೂ ಆರ್ಥಿಕತೆಗೆ ಇನ್ನೂ ಪೆಟ್ಟು ಬೀಳಲಿದೆ. ಮೂರನೆ ಅಲೆ ಕನಿಷ್ಠ 8 ವಾರಗಳ ಕಾಲವಾದರೂ ಇರಲಿದೆ ಎಂದು ಅಂದಾಜಿಸಿದರೂ ದೇಶದ ಆರ್ಥಿಕತೆ 3.1 ಲಕ್ಷ ಕೋಟಿಯಷ್ಟು ನಷ್ಟವಾಗಬಹುದು ಆಗ ದೇಶದ ಜಿಡಿಪಿ ಶೇ. 7.7ಕ್ಕೆ ಕುಸಿಯಲಿದೆ ಎಂದು ಸಂಸ್ಥೆ ಅಂದಾಜಿಸಿದೆ.

ಮತ್ತೆ ದೆಹಲಿಗೆ ಟೂರ್ ಹೋದ ಅತೃಪ್ತ ಶಾಸಕರು!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಇನ್ನು ಎರಡು ವರ್ಷಗಳ ಕಾಲ ತಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡಿದ್ದ ಸಿಎಂ, ಎಲ್ಲ ವಿಷಯಗಳಿಗೆ ಫುಲ್ ಸ್ಟಾಪ್ ಇಡಲು ಪ್ರಯತ್ನಿಸಿದ್ದರು. ಆದರೆ, ಮತ್ತೆ ಅತೃಪ್ತ ಶಾಸಕರು ದೆಹಲಿಗೆ ಟೂರ್ ಹೋಗಿದ್ದಾರೆ. ಇದರೊಂದಿಗೆ ಸಿಎಂ ಬದಲಾವಣೆ ವಿಚಾರ ತೆರೆ ಮರೆಗೆ ಸರಿಯುತ್ತದೆ ಎನ್ನುವಾಗಲೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರೋಧಿ ಬಣ ಫುಲ್ ಆ್ಯಕ್ಟಿವ್ ಆದಂತಿದೆ. ಇದೀಗ ಶಾಸಕ ಅರವಿಂದ್ ಬೆಲ್ಲದ್ ಕೂಡ ದೆಹಲಿಗೆ ಹಾರಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗಾಗಿ ಅರವಿಂದ್ ಬೆಲ್ಲದ್, ದೆಹಲಿಗೆ ತೆರಳಿದ್ದಾರೆ. ಜೂನ್ 16 ಅಥವಾ 17 ರಂದು ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ ನೀಡುವುದಾಗಿ ಹೇಳಿದ್ದಾರೆ. ಆ ವೇಳೆ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಎಂದು ಅರವಿಂದ್ ಬೆಲ್ಲದ್ ಒತ್ತಾಯಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಶಾಸಕಾಂಗ ತಪ್ಪಿಸಲು ಕೊರೊನಾ ನೆಪ ಹೇಳಬಹುದು. ಅದಕ್ಕೆ ಹೈಕಮಾಂಡ್ ಕೇರ್ ಮಾಡದೇ ಪಕ್ಷದ ಹಿತದೃಷ್ಟಿಯಿಂದ ಶಾಸಕಾಂಗ ಪಕ್ಷದ ಸಭೆ ನಡೆಸಬೇಕು ಎಂದು ಅರುಣ್ ಸಿಂಗ್ ಅವರ ಮನವಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅರವಿಂದ್ ಬೆಲ್ಲದ್ ದೆಹಲಿಗೆ ಹೋದ ಬೆನ್ನಲ್ಲಿಯೇ ಇತ್ತ ರಾಜ್ಯದಲ್ಲಿಯೂ ಯಡಿಯೂರಪ್ಪ ವಿರೋಧಿ ಬಣ ಫುಲ್ ಆ್ಯಕ್ಟಿವ್ ಆಗಿದೆ.

ದೆಹಲಿ ಭೇಟಿ ಬಗ್ಗೆ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಭೇಟಿ ನೀಡುತ್ತಿದ್ದು, ನನ್ನ ದೆಹಲಿಯ ಭೇಟಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೂ ಸಿಎಂ ಬದಲಾವಣೆ ಸುದ್ದಿ ಮಾತ್ರ ಹೆಚ್ಚಿನ ಸದ್ದು ಮಾಡುತ್ತಿದೆ.

ಸಿಎಂ ಬದಲಾವಣೆ ವಿಚಾರದಲ್ಲಿ ಅರವಿಂದ್ ಬೆಲ್ಲದ್ ಹೆಸರು ಕೇಳಿ ಬಂದಿತ್ತು. ಈ ಹಿಂದೆ ಉಪಚುನಾವಣೆಯ ಬಳಿಕ ಯಡಿಯೂರಪ್ಪ ಅವರಿಗೆ ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆ ಸೇರಿದಾಗ ಬೆಲ್ಲದ್, ಯತ್ನಾಳ್ ಹಾಗೂ ಕೆಲವು ನಾಯಕರು ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಅದೇ ರೀತಿ, ಯಡಿಯೂರಪ್ಪ ನಂತರದಲ್ಲಿ ಕರ್ನಾಟಕದ ಬಿಜೆಪಿಗೆ ಪರ್ಯಾಯ ನಾಯಕ ಯಾರು ಎಂಬ ಪ್ರಶ್ನೆಗೆ ಜಾತಿವಾರು ಲೆಕ್ಕಾಚಾರದಲ್ಲಿ ಅರವಿಂದ್ ಬೆಲ್ಲದ್ ಗೆ ಒಂದಷ್ಟು ಅವಕಾಶಗಳಿವೆ. ಹೀಗಾಗಿ ಅವರು ಸಿಎಂ ಗದ್ದುಗೆಗೆ ಟವೆಲ್ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಊಹಾಪೋಹಗಳು ಕೂಡ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

ಅನ್ನಭಾಗ್ಯ ಅಕ್ಕಿ ದಂಧೆಕೋರರನ್ನ ಗಡಿಪಾರು ಮಾಡಿ; ಗವಳಿ

ವಿಜಯಸಾಕ್ಷಿ ಸುದ್ದಿ, ಗದಗ

ಸರ್ಕಾರದ ಅನ್ನಭಾಗ್ಯದ ಅಕ್ಕಿ ಜಿಲ್ಲೆಯಲ್ಲಿ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟ ಆಗುತ್ತಿದೆ. ಮನೆ ಮನೆಯಿಂದ ಕೆಜಿಗೆ 8ರಿಂದ 10 ರೂ. ದರದಲ್ಲಿ ಅಕ್ಕಿ ಸಂಗ್ರಹಿಸಿ, ಖಾಸಗಿ ಗೋದಾಮಿನಲ್ಲಿ ಶೇಖರಿಸಿ, ಹೊರ ರಾಜ್ಯಕ್ಕೆ 10 ಗಾಲಿ ವಾಹನಗಳ ಮುಖಾಂತರ ಸಾಗಿಸುತ್ತಿದ್ದಾರೆ ಎಂದು ಕದಂಬ ಸೈನ್ಯದ ಧಾರವಾಡ ವಿಭಾಗದ ಸಂಚಾಲಕ ಆನಂದ ಗವಳಿ ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಅನ್ನಭಾಗ್ಯ ಸಾಗಾಟ ಮಾಡುವವರ ವಿರುದ್ಧ ಕೆಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅತಿ ಹೆಚ್ಚು ಪ್ರಕರಣ ದಾಖಲಾದವರ ಲೆಕ್ಕ ಪತ್ರಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಸುಳ್ಳು ಲೆಕ್ಕಪತ್ರ ಅಥವಾ ನಕಲಿ ಬಿಲ್ಲು ತೋರಿಸಿದ್ದು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಇಷ್ಟೆಲ್ಲ ಅಕ್ರಮಗಳು ನಡೆಯುತ್ತಿದ್ದರೂ ಆಹಾರ ಇಲಾಖೆ ಅಧಿಕಾರಿಗಳು ದೂರು ಬಂದಲ್ಲಿ ಮಾತ್ರ ಕ್ರಮ ಕೈಗೊಳುತ್ತಾರೆ. ಸ್ವಯಂ ಪ್ರೇರಣೆಯಿಂದ ಯಾವುದೇ ಕಾರ್ಯಾಚರಣೆಗೆ ಇಳಿಯಲು ಹಿಂದೇಟು ಹಾಕುತ್ತಿರುವುದೇಕೆ? ದಂಧೆಕೋರರೊಂದಿಗೆ ಅಧಿಕಾರಿಗಳು ಹೊಂದಾಣೀಕೆ ಮಾಡಿಕೊಂಡಿದ್ದಾರೆಯೇ ಎಂದು ಗವಳಿ ಪ್ರಶ್ನಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಅನ್ಯಭಾಗ್ಯ ಅಕ್ಕಿ ಸಾಗಾಟ ತಡೆಯುವಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!