Home Blog Page 3098

ಪ್ರಯಾಣಿಕರ ಮೇಲೆ ದರೋಡೆ ನಡೆಸಿದ ದರೋಡೆಕೋರರಿಗೆ ಶಿಕ್ಷೆ

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ

ಕೊಪ್ಪಳ ಜಿಲ್ಲೆಯ ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಾರಾಷ್ಟ್ರದ ಮೂಲದ ಮಹಾದು @ ಮಹಾದೇವ ಕಾಳೆ ಹಾಗೂ ಸಂಪತ್ ಮೋರಾಲೆ ಇವರು ಇನ್ನಿತರರೊಂದಿಗೆ ಕೂಡಿಕೊಂಡು (ಒಟ್ಟು 05 ಜನ ದರೋಡೆಕೋರರು) ಪ್ರಯಾಣಿಕರ ಮೇಲೆ ದರೋಡೆ ನಡೆಸಿರುವ ಆರೋಪವು ಸಾಭಿತಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಆರೋಪಿತರಿಗೆ ಶಿಕ್ಷೆ ವಿಧಿಸಿದ್ದಾರೆ.

ಆಂದ್ರಪ್ರದೇಶ ಮೂಲದ ವೈ.ಕಿರಣ ಕುಮಾರ ಎನ್ನುವವರು 2013ರ ಮಾರ್ಚ್. 17 ರಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಶಿರಡಿಗೆ ಹೋಗುತ್ತಿದ್ದಾಗ ಕೊಪ್ಪಳ ಜಿಲ್ಲೆಯ ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಮ್ಯಾದನೇರಿ ಬಸ್ ನಿಲ್ದಾಣದ ಹತ್ತಿರ ಬೆಳಿಗ್ಗೆ 04 ಗಂಟೆ ಸುಮಾರಿಗೆ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಮಲಗಿಕೊಂಡಿದ್ದಾಗ 05 ಜನ ದರೋಡೆಕೋರರು ಬಂದು ಕಾರಿನಲ್ಲಿದ್ದ ಪ್ರಮಾಣಿಕರಿಗೆ ಮಾರಕಾಸ್ತ್ರಗಳಿಂದ ಹೊಡೆ ಬಡೆ ಮಾಡಿ ಅವರಲ್ಲಿದ್ದ ರೂ. 1,88,100 ಮೌಲ್ಯದ ಹಣ, ಬಂಗಾರ ಮತ್ತು ಮೊಬೈಲ್‌ಗಳನ್ನು ದರೋಡೆ ಮಾಡಿಕೊಂಡು ಹೋಗಿದ್ದು, ಈ ಕುರಿತು ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಅಂದಿನ ತನಿಖಾಧಿಕಾರಿಯಾದ ಯಲಬುರ್ಗಾ ಸಿಪಿಐ ಸುರೇಶ ತಳವಾರ ಅವರು ತನಿಖೆ ಮಾಡಿ ಆರೋಪಿತರ ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಮಹಾರಾಷ್ಟ್ರ ಮೂಲದ ಮಹಾದು @ ಮಹಾದೇವ ಕಾಳೆ ಹಾಗೂ ಸಂಪತ್ ಮೋರಾಲೆ ಇವರು ಇನ್ನಿತರರೊಂದಿಗೆ ಕೂಡಿಕೊಂಡು ದರೋಡೆ ನಡೆಸಿದ ಆರೋಪ ಸಾಬೀತಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಎಲ್. ವಿಜಯಲಕ್ಷ್ಮೀದೇವಿ ಅವರು (ನ. 25) ಆರೋಪಿತರಿಗೆ 06 ವರ್ಷ ಜೈಲು ಶಿಕ್ಷೆ ಹಾಗೂ ತಲಾ ರೂ. 25,000 ಗಳ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಎ ಪಾಟೀಲ, ಕೆ.ನಾಗರಾಜ ಆಚಾರ್, ಸವಿತಾ ಎಂ. ಶಿಗ್ಲಿ ಹಾಗೂ ಟಿ.ಅಂಬಣ್ಣ ಇವರು ಪ್ರಕರಣ ನಡೆಸಿದ್ದು, ಬಂಡಿ ಅಪರ್ಣ ಮನೋಹರ ಅವರು ವಾದ ಮಂಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಶಿಕ್ಷೆ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆರೋಪಿತನು ಅಪಹರಿಸಿ ಬಲಾತ್ಕಾರ ಸಂಭೋಗ ಮಾಡಿದ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರು (ಪೋಕ್ಸೋ) ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಗ್ರಾಮದ ಶರಣಬಸವ ಬಗಡಿ, ಇತನು ಕೊಪ್ಪಳ ನಗರದ ಕುರುಬರ ಓಣಿಯಲ್ಲಿ ಫಿರ್ಯಾದಿದಾರರು ವಾಸವಿರುವ ಓಣಿಯಲ್ಲಿ ವಾಸವಾಗಿದ್ದು, ಒಂದು ವರ್ಷದ ಹಿಂದೆ ಕೊಪ್ಪಳದಿಂದ ತನ್ನ ಊರು ತಾವರಗೇರಾ ಗ್ರಾಮಕ್ಕೆ ಹೋಗಿದ್ದ. ಆಗಾಗ ಕೊಪ್ಪಳಕ್ಕೆ ಬಂದು ಫಿರ್ಯಾದಿದಾರರ ಅಪ್ರಾಪ್ತ ವಯಸ್ಸಿನ ಮಗಳನ್ನು ಭೇಟಿಯಾಗಿ ಮಾತನಾಡಿಸುತ್ತಾ ಅವಳ ಗೆಳತನ ಸಂಪಾದಿಸಿರುತ್ತಾನೆ.

2016ರ ಮಾರ್ಚ್. 14 ರಂದು ಸಾಯಂಕಾಲ 04-30 ಗಂಟೆ ಸುಮಾರು ಕೊಪ್ಪಳ ನಗರದ ಫಿರ್ಯಾದಿದಾರರ ಮನೆ ಹತ್ತಿರ ಇದ್ದ ಫಿರ್ಯಾದಿದಾರರ ಮಗಳನ್ನು ಆಕೆ ಅಪ್ರಾಪ್ತ ವಯಸ್ಸಿನವಳು ಮತ್ತು ಪರಿಶಿಷ್ಟ ಪಂಗಡದವಳೆಂದು ಗೊತ್ತಿದ್ದು, ಬಾಲಕಿಯನ್ನು ಮದುವೆ ಮಾಡಿಕೊಳ್ಳುತ್ತೆನೆ ಹೋಗೋಣ ಬಾ ಅಂತಾ ಹೇಳಿ ನಂಬಿಸಿ ಪುಸಲಾಯಿಸಿ ಅಪಹರಣ ಮಾಡಿಕೊಂಡು ಆಂದ್ರ ಪ್ರದೇಶ ರಾಜ್ಯದ ಗುಂಟೂರಿನ ಅಮೀನ ನಗರದಲ್ಲಿ ರಾಮಾಂಜನೇಯ ಇತನ ಸಹಾಯದಿಂದ ಶೇಕನಾಗೂರ ಇತನ ಒಂದು ರೂಮ್ ಬಾಡಿಗೆಯಂತೆ ಹಿಡಿದು, ಈ ರೂಮಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅವಳಿಗೆ ಹಲವು ಬಾರಿ ಬಲಾತ್ಕಾರ ಸಂಭೋಗ ಮಾಡಿದ ಆರೋಪವು ತನಿಖೆಯಲ್ಲಿ ಸಾಭಿತಾಗಿದ್ದರಿಂದ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾಗಿದೆ ಎಂದು ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ (ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಎ ಪಾಟೀಲ, ಕೆ.ನಾಗರಾಜ ಆಚಾರ್, ಸವಿತಾ ಎಂ. ಶಿಗ್ಲಿ ಹಾಗೂ ಟಿ.ಅಂಬಣ್ಣ ಇವರು ಪ್ರಕರಣ ನಡೆಸಿದ್ದು, ಬಂಡಿ ಅಪರ್ಣ ಮನೋಹರ ಅವರು ವಾದ ಮಂಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಐಪಿಎಲ್‌ಗೆ ಸಡ್ಡು ಹೊಡೆದ ಮಾದರಿ: ವಕ್ಕುಂದ: ಏಕತಾ ಕಪ್ ಕ್ರಿಕೆಟ್ ಟೂರ್ನಿ ಸಮಾರೋಪ

0

ರೋಚಕ ಹಣಾಹಣಿಯಲ್ಲಿ ಕಪ್ ಎತ್ತಿ ಹಿಡಿದ ಆರ್‌ಆರ್ ಬಾಯ್ಸ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ

ಕೆಡಬ್ಲ್ಯೂಎಸ್‌ಸಿಸಿಯ ಏಕತಾ ಕಪ್ ಕ್ರಿಕೆಟ್ ಟೂರ್ನಿ ಪ್ರತಿಷ್ಠಿತ ಐಪಿಎಲ್ ಪಂದ್ಯಾವಳಿಯನ್ನೂ ಮೀರಿಸಿ ಮಾದರಿ ಎನಿಸಿತು ಎಂದು ಡಿಎಸ್‌ಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ರವಿ ವಕ್ಕುಂದ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಸಮಾರೋಪಗೊಂಡ ಏಕತಾ ಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ವಿಜೇತ ತಂಡಕ್ಕೆ ಕಪ್ ವಿತರಿಸಿ ಅವರು ಮಾತನಾಡಿದರು.

ಇಲ್ಲಿನ ಬಳಗದ ಕ್ರೀಡಾ ಉತ್ಸಾಹ ಇತರರಿಗೂ ಮಾದರಿ. ಶಿಸ್ತು, ಸಮಯ, ಏಕತೆ ನೋಡಿದರೆ ಮುಂದೊಂದು ದಿನ ರಾಜ್ಯಮಟ್ಟದಲ್ಲಿ ಈ ಕ್ಲಬ್ ಗುರುತಿಸಿಕೊಳ್ಳುವಲ್ಲಿ ಅನುಮಾನವಿಲ್ಲ. ನಾವು ಸಹ ಕ್ಲಬ್‌ನ ಸದಸ್ಯರಾಗುವುದಾಗಿ ತಿಳಿಸಿದರು.

ಮತ್ತೋರ್ವ ಪೊಲೀಸ್ ಅಧಿಕಾರಿ ಮಲ್ಲನಗೌಡ್ರ ಮಾತನಾಡಿ, ಟೂರ್ನಮೆಂಟ್‌ನ ಫೈನಲ್ ಪಂದ್ಯ ಅತ್ಯಂತ ರೋಮಾಂಚಕವಾಗಿದ್ದು ಕುರ್ಚಿಯ ತುದಿಗೆ ಕುಳಿತುಕೊಳ್ಳುವಂತೆ ಮಾಡಿತು. ಈ ಪಂದ್ಯ ನೋಡಿದರೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪಂದ್ಯಗಳಿಗೆ ಕಡಿಮೆ ಇರಲಿಲ್ಲ. ಅಚ್ಚುಕಟ್ಟಾಗಿ ಟೂರ್ನಿ ನಡೆಸುವುದು ಸುಲಭದ ಕೆಲಸವಲ್ಲ. ಕ್ಲಬ್ ನಿರಂತರ ಇಂಥ ಟೂರ್ನಮೆಂಟ್ ನಡೆಸುತ್ತಿರಲಿ ಎಂದು ಆಶಿಸಿದರು.

ಪತ್ರಕರ್ತ ಬಸವರಾಜ ಕರುಗಲ್, ಕ್ಲಬ್‌ನ ಅಧ್ಯಕ್ಷ ವಿನೋದ ಚಿನ್ನಿನಾಯ್ಕರ್, ಮುಖಂಡ ಗಿರೀಶ್ ಮುಂಡಾದ ಮತ್ತಿತರರು ಮಾತನಾಡಿದರು. ಈರಣ್ಣ, ಗವಿ, ಚಂದ್ರು, ಸೂರಿ, ಶಿವು ನಿರ್ವಹಿಸಿದರು.

ಆರ್‌ಆರ್‌ಗೆ ವರವಾದ ವರುಣ; ಸಿಎಸ್‌ಕೆ ಮಡಿಲಿನಿಂದ ಜಾರಿ ಆರ್‌ಆರ್ ಕೈ ಸೇರಿದ ಕಪ್

ನಿಗದಿತ 12 ಓವರ್‌ಗಳ ಫೈನಲ್ ಪಂದ್ಯದ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ನಾಯಕ ಮಂಜುನಾಥ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಬೀಸಿದ ಸಿಎಸ್‌ಕೆ ಬಾಯ್ಸ್ ನಿಗದಿತ 12 ಓವರ್‌ಗಳಲ್ಲಿ 100 ರನ್ ಕಲೆ ಹಾಕಿದರು.

ನಂತರ ಬ್ಯಾಟಿಂಗ್ ಬಂದ ಆರ್ ‌ಆರ್ ತಂಡದ ಹುಡುಗರಿಗೆ ವರುಣ ಅಡ್ಡಿ ಪಡಿಸಿದ. ಸುಮಾರು ಹದಿನೈದು ನಿಮಿಷ ಕಾಲ ಪಂದ್ಯ ಮಳೆಯಿಂದ ಸ್ಥಗಿತವಾಗಿತ್ತು. ಕೊನೆಗೂ ವರುಣಾರ್ಭಟ ನಿಂತಿತು. ಆಗ ಇದನ್ನು ವರವೆಂದು ಪರಿಗಣಿಸಿದ್ದ ಸಿಎಸ್‌ಕೆ ತಂಡ ಒತ್ತಡಕ್ಕೆ ಸಿಲುಕಿತು. ಜೊತೆ ಬ್ಯಾಡ್‌ಲೈಟ್‌ನ ಒತ್ತಡದಲ್ಲಿ ಬ್ಯಾಟ್ ಬೀಸಲು ಶುರು ಮಾಡಿದ ಆರ್‌ಆರ್ ದಾಂಡಿಗರು ಇನ್ನು ಒಂದು ಎಸೆತ ಬಾಕಿ ಇರುವಾಗಲೇ 101 ರನ್ ಕಲೆ ಹಾಕಿ ಏಕತಾ ಕಪ್ ಎತ್ತಿ ಹಿಡಿದರು. ಕೊಟೇಶ್ ನಾಯಕತ್ವದ ಸಿಎಸ್‌ಕೆ ಬಾಯ್ಸ್ ರನ್ನರ್ ಅಪ್ ಸ್ಥಾನ ಪಡೆದರು.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿದ್ದೇವೆ ; ಬೊಮ್ಮಾಯಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

‘ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. 17 ಜನ ರಾಜೀನಾಮೆ ಕೊಟ್ಟು ಬಂದ ಮೇಲೆ ಸರ್ಕಾರ ಅಧಿಕಾರಕ್ಕೆ ಬಂದಿದೆ’ ಎಂದು ಗೃಹ ಸಚಿವ ಬಸವರಾಜ್ ಬೊಮ್ಮೊಯಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ರಾಜ್ಯದಲ್ಲಿ ರಚಿಸುವಲ್ಲಿ ಸಹಾಯ ಮಾಡಿದವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ.
ಪಕ್ಷದ ಅಧಿಕೃತ ಯಾವುದೇ ವೇದಿಕೆಯಲ್ಲಿ ಗೊಂದಲವಿಲ್ಲ. ಸಚಿವ ಸಂಪುಟದ ಬಗ್ಗೆ ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ರಹಸ್ಯ ವಿಡಿಯೋ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದು ಕ್ಷಣ ಮೌನವಹಿಸಿ ಸಂತೋಷ ಗುಣಮುಖರಾದ ಮೇಲೆ ಸತ್ಯಾಸತ್ಯತೆ ಗೊತ್ತಾಗುತ್ತದೆ. ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು.

ಕಳೆದ 35 ವರ್ಷಗಳಿಂದ ವೀರಶೈವ ಲಿಂಗಾಯತ ಸಮುದಾಯನ್ನು ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಬೇಡಿಕೆಯಿದ್ದು, ಈ ಬಗ್ಗೆ ಸರ್ಕಾರಗಳಿಗೆ ಮನವಿಗಳನ್ನೂ ಸಲ್ಲಿಸಿದ್ದಾರೆ. ಈ ಬಗ್ಗೆ ಕಾನೂನಾತ್ಮಕವಾಗಿ ಸಮಗ್ರವಾಗಿ ಚಿಂತಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಪೊಲೀಸ್ ನೇಮಕಾತಿ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮೋದನೆ ಸಿಕ್ಕಿದ್ದು, ಖಾಲಿ ಇರುವ ಹುದ್ದೆಗಳ ಭರ್ತಿ ಕಾರ್ಯ ನಡೆಯುತ್ತಿದೆ. ಇನ್ನೆರಡು ವರ್ಷಗಳಲ್ಲಿ ಇನ್ನುಳಿದ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಎನ್ ಡಿಪಿಎಸ್ ಕಾಯ್ದೆ ಪ್ರಕಾರ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಕೆಲವರು ಜೈಲಿನಲ್ಲೂ ಇದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ.ಸಂಕನೂರ, ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಜೇಂದ್ರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಮೋಹನ್ ಮಾಳಶೆಟ್ಟಿ, ಯುವ ಮುಖಂಡ ಅನಿಲ್ ಮೆಣಸಿನಕಾಯಿ ಸೇರಿದಂತೆ ಹಲವರು ಇದ್ದರು.

ಶಿಸ್ತುಬದ್ಧ ಪಕ್ಷ ಸಂಘಟನೆ ನೊಡಿ ಖುಷಿಯಾಗಿದೆ: ಬಿ.ಸಿ.ಪಾಟೀಲ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಬಿಜೆಪಿಯಲ್ಲಿರುವ ಶಿಸ್ತು ಬದ್ಧವಾದ ಪಕ್ಷ ಸಂಘಟನೆಯನ್ನು ನಾನು ಯಾವ ಪಕ್ಷದಲ್ಲೂ ನೋಡಿಲ್ಲ. ಇಲ್ಲಿ ನೋಡಿದ್ದು ತುಂಬಾ ಖುಷಿಯಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ಪಟ್ಟರು.

ಪ್ರವಾಸಿಮಂದಿರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಾನು ಹೊಸದಾಗಿ ಸೇರ್ಪಡೆಯಾಗಿದ್ದು, ಇಲ್ಲಿನ ಶಿಸ್ತು ಬದ್ಧ ಪಕ್ಷ ಸಂಘಟನೆ, ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ ನೋಡಿ ಬಹಳಷ್ಟು ಖುಷಿಯಾಗಿದೆ ಎಂದರು.

ಗ್ರಾಮ ಸ್ವರಾಜ್ ಯಾತ್ರೆ ಮೂಲಕ ಮುಂಬರುವ ಗ್ರಾಮ ಪಂಚಾಯತ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸನ್ನದ್ಧಗೊಳಿಸಲಾಗುತ್ತಿದೆ. ಕಾರ್ಯಕರ್ತರನ್ನು ಬಲ ಪಡಿಸಲಾಗುತ್ತಿದೆ. ಅಲ್ಲದೇ, ತಳಮಟ್ಟದಲ್ಲಿರುವ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲಾಗುತ್ತಿದೆ. ಚುನಾವಣೆ ಎದುರಿಸಲು ಕಾರ್ಯಕರ್ತರಲ್ಲಿ ಶಕ್ತಿ ತುಂಬಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಈ ಸಂದರ್ಭದಲ್ಲಿ
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿ.ಸಿ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ.ಸಂಕನೂರ, ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಜೇಂದ್ರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಮೋಹನ್ ಮಾಳಶೆಟ್ಟಿ, ಯುವ ಮುಖಂಡ ಅನಿಲ್ ಮೆಣಸಿನಕಾಯಿ ಸೇರಿದಂತೆ ಹಲವರು ಇದ್ದರು.

ಸಂಪುಟ ವಿಸ್ತರಣೆ ವಿಳಂಬ: ಒಂದೇ ವಾಕ್ಯದಲ್ಲಿ ಉತ್ತರಿಸಿದ ಯಡಿಯೂರಪ್ಪ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸಂಪುಟ ವಿಸ್ತರಣೆಗೆ ನಾವು ನೀವು ಇಬ್ಬರೂ ಕಾಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾರ್ಮಿಕವಾಗಿ ಹೇಳಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಿಂದ ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರು ಮಾಧ್ಯಮದವರ ಅಮಿತ್ ಶಾ ಅವರು ಭರವಸೆ ಕೊಟ್ಟ ಬಳಿಕವೂ ಸಂಪುಟ ವಿಳಂಬವಾಗುತ್ತಿದೆಯಲ್ಲ ಎಂಬ ಪ್ರಶ್ನೆಗೆ ಒಂದೇ ವಾಕ್ಯದಲ್ಲಿ ಮಾಧ್ಯಮಗಳಿಗೆ ಉತ್ತರಿಸಿ ತೆರಳಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಇನ್ನೂ ಗೊಂದಲದ ಗೂಡಾಗಿದೆ. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಪಟ್ಟಿ ಕಳುಹಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಮೊನ್ನೆಯಷ್ಟೇ ಹೇಳಿದ್ದರು.

ಅವರು ಹೇಳಿ ಮೂರು ದಿನಗಳು ಕಳೆದಿದ್ದರೂ, ಹೈಕಮಾಂಡ್ ನಿಂದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಯಡಿಯೂರಪ್ಪ ಅವರಿಗೆ ಇನ್ನೂವರೆಗೂ ಯಾವುದೇ ಸೂಚನೆಗಳು ಬಂದಿಲ್ಲ.

ಶಿರಾ ಮತ್ತು ರಾಜರಾಜೇಶ್ವರ ನಗರ ಉಪ ಚುನಾವಣೆಯ ಗೆಲವಿನ ನಂತರವೂ ಬಳಿಕವೂ ಬಿಎಸ್ವೈಗೆ ಪೂರಕವಾದ ವಾತಾವರಣ ಸೃಷ್ಠಿಯಾಗುತ್ತಿಲ್ಲ.

ಸಂಪುಟ ವಿಸ್ತರಣೆಗೆ ವರಿಷ್ಠರು ಒಪ್ಪಿಗೆ ನೀಡದಿರುವುದು ನಿಗೂಢತೆಗೆ ಕಾರಣವಾಗಿರುವುದೆ. ರಾಜಕೀಯ ಕಾರ್ಯದರ್ಶಿ ಹಾಗೂ ಯಡಿಯೂರಪ್ಪ ಅವರ ಹತ್ತಿರದ ಸಂಬಂಧಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವುದು ಸಿಎಂ ನೆಮ್ಮದಿ ಕೆಡಿಸಿವೆ ಎಂದು ಹೇಳಲಾಗಿದ್ದು, ಹೈಕಮಾಂಡ್ ನ ಸಚಿವ ಸಂಪುಟದ ವಿಳಂಬ ಧೋರಣೆ ಬಿಜೆಪಿಯಲ್ಲಿ ಸಹಜವಾಗಿ ಗೊಂದಲ ಸೃಷ್ಟಿಸಿದೆ.

ಬಿಜೆಪಿಯಲ್ಲೀಗ ಮನೆಯೊಂದು ಮೂರು ಬಾಗಿಲು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು

ದಿನ ಕಳೆದಂತೆ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಹುಟ್ಟಿಕೊಳ್ಳುತ್ತಿದ್ದು, ಆಂತರಿಕ ಭಿನ್ನಾಭಿಪ್ರಾಯಗಳಿಂದ ಬಾಜಪದಲ್ಲೀಗ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.

ಸಚಿವ ಸಂಪುಟ ಪುನಾರಚನೆ ಗೊಂದಲವುಂಟಾಗಿದ್ದು, ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಇದರಿಂದ ಯಾರನ್ನ ಮಂತ್ರಿ ಮಾಡಬೇಕು, ಯಾರನ್ನ ಸಂಪುಟದಿಂದ ಕೈ ಬಿಡಬೇಕು ಎಂಬುವುದು ಬಿಜೆಪಿ ಹೈಕಮಾಂಡ್ ಗೆ ತಲೆಬಿಸಿ ತಂದಿದೆ.

ಕ್ಯಾಬಿನೆಟ್ ಸಭೆಯ ನೆಪದಲ್ಲಿ ಸಚಿವಾಕಾಂಕ್ಷಿಗಳು ಸಾಲು ಸಾಲು ಸಭೆ ನಡೆಸುತ್ತಿದ್ದು, ಯಡಿಯೂರಪ್ಪ ಅವರಿಗೆ ಕಣ್ಣು ತೆರೆಯುತ್ತಿಲ್ಲ. ಬದಲಾಗಿ ಮಂತ್ರಿ ಸ್ಥಾನ ಕೊಡುವಂತೆ ಪಟ್ಟು ಹಿಡಿದಿದ್ದಾರೆ. ಇದರ ಮಧ್ಯೆ ವಲಸಿಗ ಮತ್ತು ಮೂಲ ಬಿಜೆಪಿಗರು ಎಂಬ ಚರ್ಚೆ ಶುರುವಾಗಿದೆ.

ಸಂಪುಟ ವಿಸ್ತರಣೆಯಲ್ಲಿ ಮೂಲ ಬಿಜೆಪಿಗರಿಗೆ ಆದ್ಯತೆ ನೀಡಬೇಕು ಎಂಬ ಮಾತುಗಳು ಹರಿದಾಡುತ್ತಿವೆ. ಇತ್ತ ಸರ್ಕಾರ ರಚನೆಗೆ ಕಾರಣವಾಗಿರುವ ವಲಸಿಗ ಬಿಜೆಪಿಗರಾದ ಎಂಟಿಬಿ ನಾಗರಾಜ್, ಎಚ್.ವಿಶ್ವನಾಥ್ ಹಾಗೂ ಆರ್.ಶಂಕರ್ ಮಂತ್ರಿ ಮಾಡಿ ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಯಡಿಯೂರಪ್ಪ ಅವರಿಗೆ ಒತ್ತಡ ಹೇರುತ್ತಿದ್ದಾರೆ.

ಅಲ್ಲದೇ, ಯಡಿಯೂರಪ್ಪಗೆ ವಿಪಕ್ಷಗಳಿಗಿಂತ ಸಿಎಂ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳೇ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗಿಂತ ಆಂತರಿಕ ಕಿತ್ತಾಟವೇ ಹೆಚ್ಚಾಗಿದೆ. ಸ್ವಯಂಕೃತ ಅಪರಾಧದಿಂದಲೇ ಬಿಜೆಪಿ ಆಡಳಿತ ಪಾತಾಳಕ್ಕೆ ಕುಸಿಯುತ್ತಿದ್ದು, ಕ್ರಮೇಣ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

2008 ರಲ್ಲೂ ಆಂತರಿಕ ಕಚ್ಚಾಟದಿಂದ ಯಡಿಯೂರಪ್ಪ ನೇತೃತ್ವದ ಬಿಜೆಪಿ‌ ಸರ್ಕಾರ ಪತನಗೊಂಡಿತ್ತು. ಬಿಎಸ್ ವೈ ಸರ್ಕಾರ ಮತ್ತೆ ಅದೇ ಹಾದಿ ತುಳಿಯುತ್ತಿದೆಯಾ ಎಂಬುದೇ ಸದ್ಯದ ಕುತೂಹಲವಾಗಿದ್ದು ಮುಂದೇನಾಗುತ್ತೆ ಎಂಬುದನ್ನು ಕಾದು ನೋಡಬೇಕು.

ಹಣ ಕೊಡು, ಇಲ್ಲವೇ ಆಸ್ತಿ ಬಿಡು! ಚಕ್ರಬಡ್ಡಿ, ಮೀಟರ್ ಬಡ್ಡಿ ಭಾರಕ್ಕೆ ನಲುಗುತ್ತಿದೆ ಬಡವರ ಬದುಕು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

‘ಚಕ್ರ ಬಡ್ಡಿ, ಮೀಟರ್ ಬಡ್ಡಿ ಪ್ರಕರಣಗಳು ಬೆಳಕಿಗೆ ಬಂದಾಗ ಎಫ್‌ಐಆರ್ ದಾಖಲಿಸದೆ ರಾಜಿ ಸಂಧಾನ ಮಾಡಿ ಕಳುಹಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಬಡ್ಡಿ ವ್ಯವಹಾರ ಬೃಹತ್ ಮಟ್ಟದಲ್ಲಿ ಬೆಳೆದಿದ್ದು, ಬಡ್ಡಿ ವ್ಯವಹಾರಗಾರರೊಂದಿಗೆ ಪೊಲೀಸರು ಕೈಜೋಡಿಸಿದ್ದಾರೆ ಎಂಬ ಆಪಾದನೆಯನ್ನು ಜಿಲ್ಲೆಯ ಜನರು ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಬಡ್ಡಿ ವ್ಯವಹಾರ ಭರ್ಜರಿಯಾಗಿ ನಡೆಯುತ್ತಿದೆ. ಸರ್ಕಾರದ ಪರವಾನಗಿ ಪಡೆಯದೆ ಅನಧಿಕೃತವಾಗಿ ಲೇವಾದೇವಿ ವ್ಯವಹಾರ ನಡೆಸುತ್ತಿರುವವರ ಸಂಖ್ಯೆ ಇತ್ತೀಚೆಗೆ ದ್ವಿಗುಣಗೊಳ್ಳುತ್ತಿದೆ. ಕಷ್ಟ ಕಾಲದಲ್ಲಿ ಕೈಗಡ ಪಡೆದವರ ಗತಿ ಹರೋಹರ ಆಗುತ್ತಿದೆ. ಚಕ್ರ ಬಡ್ಡಿ, ಮೀಟರ್ ಬಡ್ಡಿ ದಂಧೆಕೋರರು ಹಣ ಕೊಡು, ಇಲ್ಲದಿದ್ದರೆ ಆಸ್ತಿ ಬಿಡು ಎಂದು ಪೀಡಿಸುವ ಕಾರಣಕ್ಕೆ ಮನನೊಂದು ಜನರು ಸಾವಿನ ಕುಣಿಕೆಗೆ ಕೊರಳೊಡ್ಡುತ್ತಿದ್ದಾರೆ.

ಗ್ರಾ.ಪಂ. ಮಾಜಿ ಅಧ್ಯಕ್ಷೆಯೇ ಬಲಿ

ಅಂತಹದ್ದೇ ಒಂದು ಘಟನೆ ಇತ್ತೀಚೆಗಷ್ಟೇ ಜಿಲ್ಲೆಯಲ್ಲಿ ನಡೆದಿತ್ತು. ತಾಲೂಕಿನ ಅಡವಿಸೋಮಾಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮೀಟರ್ ಬಡ್ಡಿ ವ್ಯವಹಾರದಿಂದ ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ತುರ್ತು ಸಂದರ್ಭದಲ್ಲಿ ತಕ್ಷಣಕ್ಕೆ ಬ್ಯಾಂಕ್ ಗಳಿಂದ ಸಾಲ ದೊರೆಯದಿರುವುದರಿಂದ ಖಾಸಗಿ ವ್ಯಕ್ತಿಗಳ ಅನಧಿಕೃತ ಫೈನಾನ್ಸ್ ಗಳಲ್ಲಿ ಜಿಲ್ಲೆಯ ಬಡ ಕೂಲಿ ಕಾರ್ಮಿಕರು, ಸಣ್ಣ ಪುಟ್ಟ ವ್ಯಾಪಾರಿಗಳು, ರೈತರು ಹೆಚ್ಚಾಗಿ ಸಾಲ ಪಡೆದು ಬಡ್ಡಿ ವ್ಯವಹಾರಕ್ಕೆ ಬಲಿಯಾಗುತ್ತಿದ್ದಾರೆ. ಕಿತ್ತು ತಿನ್ನುವ ಬಡತನದಿಂದಾಗಿ ದುಬಾರಿ ದುನಿಯಾದಲ್ಲಿ ಕುಟುಂಬ ನಿರ್ವಹಣೆ ಮಾಡಲಾಗದೆ, ಖಾಸಗಿ ವ್ಯಕ್ತಿಗಳಿಂದ ಕೈಗಡ ಪಡೆದು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿರುವ ಜನರನ್ನು ಪೊಲೀಸರು  ರಕ್ಷಿಸಬೇಕಿದೆ.


ಹೊಸ ಹೊಸ ಷರತ್ತುಗಳು

ಬಡ್ಡಿ ವ್ಯವಹಾರಗಾರರು ಸಾಲ ಕೊಡುವ ಮುನ್ನ ಮನೆ, ನಿವೇಶನದಂತಹ ಆಸ್ತಿ ಪತ್ರ ನೀಡಿದರೆ ಸಾಕು, ಅರ್ಧರಾತ್ರಿಯಲ್ಲಿಯೂ ಕಂತೆ ಕಂತೆ ನೋಟು ಕೊಡುತ್ತಾರೆ. ಆದರೆ, ಸಾಲ ನೀಡುವಾಗ ಇಲ್ಲದ ಷರತ್ತುಗಳನ್ನು ಬಳಿಕ ಒಂದಾದೊಂದಾಗಿ ಸೇರಿಸಿ ,ಬಡವರ ಬದುಕನ್ನು ಹಿಂಡಿ ಹಿಪ್ಪೆ ಮಾಡುತ್ತಿದ್ದಾರೆ. ಬಡ್ಡಿ ಕಟ್ಟಲಾಗದಿದ್ದರೆ, ಮಾತಿಗೆ ಬಗ್ಗದಿದ್ದರೆ ರೌಡಿಶೀಟರ್ ಗಳಿಂದ ಬೆದರಿಕೆ ಹಾಕಿಸಿ ಸಾಲಗಾರರ ಆಸ್ತಿ ಕಬಳಿಸುತ್ತಿದ್ದು, ಮೀಟರ್ ಬಡ್ಡಿ ವ್ಯವಸ್ಥೆ ವಿರುದ್ಧ ಜಿಲ್ಲೆಯ ಜನರು ಹಿಡಿಶಾಪ ಹಾಕುತ್ತಿದ್ದಾರೆ.

ಈ ನಿಟ್ಟಿನಲ್ಲಿ ಕುದುರೆಗಿಂತ ವೇಗವಾಗಿ ಓಡುತ್ತಿರುವ ತರಹವೇವಾರಿ ಬಡ್ಡಿ ವ್ಯವಹಾರಕ್ಕೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಎಂಬುವುದು ಜಿಲ್ಲೆಯ ಜನರ ಆಶಯ.

ಬಡ್ಡಿ ದಂಧೆಕೋರರು ಬಡವರಿಗೆ, ಬೀದಿ ವ್ಯಾಪಾರಿಗಳಿಗೆ, ರೈತರಿಗೆ ಕೊಟ್ಟ ಸಾಲದ ದಾಖಲೆಗಳು, ಅವರಿಂದ ಬರೆಸಿಕೊಂಡ ಪತ್ರಗಳನ್ನು ಮಾತ್ರ ಜೋಪಾನವಾಗಿ ಇರಿಸುತ್ತಾರೆ. ಯಾವುದೇ ಲೆಕ್ಕಪತ್ರಗಳನ್ನು ನಿರ್ವಹಿಸುವುದಿಲ್ಲ. ಹೀಗಾಗಿ, ಸರ್ಕಾರಕ್ಕೆ ನಯಾಪೈಸೆ ತೆರಿಗೆಯನ್ನೂ ಪಾವತಿಸುವುದಿಲ್ಲ. ಒಬ್ಬ ಬಡವನಿಂದ ವಸೂಲಿ ಮಾಡಿದ ಹಣವನ್ನು ತನ್ನ ಅಸಲನ್ನಾಗಿ ಮಾಡಿಕೊಂಡು, ಮತ್ತೊಬ್ಬ ಬಡವನಿಗೆ ಸಾಲ ಕೊಡುತ್ತಾರೆ. ಈ ಮೂಲಕ ತಾವು ಶ್ರೀಮಂತರಾಗಿ ಕೊಬ್ಬಿ ಮೆರೆಯುತ್ತಾರೆ. ಮೋಜು-ಮಸ್ತಿಯಲ್ಲಿ ತೊಡಗುತ್ತಾರೆ. ಅಂಥವರಿಗೆ ಬಡವರ ಕಣ್ಣೀರು ಕಾಣುವುದೇ ಇಲ್ಲ.

ವ್ಯವಹಾರ ಏಕೆ? ಹೇಗೆ?

ಖಾಸಗಿ ಲೇವಾದೇವಿ ವ್ಯವಹಾರಕ್ಕೆ ಬಡವರು, ಅನಕ್ಷರಸ್ಥರೇ ಬಲಿಯಾಗುವುದು ಹೆಚ್ಚು. ಬ್ಯಾಂಕುಗಳಲ್ಲಿ ಸಾಲ ಕೇಳಲು ಹೋದರೆ ಅಡಮಾನ ಇಡಲು ಆಸ್ತಿ ಕೇಳುತ್ತಾರೆ. ಜಾಮೀನಿಗೆ ಯಾರನ್ನಾದರೂ ಕರೆದುಕೊಂಡು ಬನ್ನಿ ಎನ್ನುತ್ತಾರೆ. ಹತ್ತಾರು ದಾಖಲೆಗಳನ್ನು ತರುವಂತೆ ಹೇಳಿ ನೂರಾರು ಬಾರಿ ಅಡ್ಡಾಡಿಸಿ ಹೈರಾಣು ಮಾಡುತ್ತಾರೆ. ಮಗಳ ಮದುವೆ. ಮನೆಯಲ್ಲಿ ಯಾರಿಗೋ ಹುಷಾರಿಲ್ಲ ಚಿಕಿತ್ಸೆ ಕೊಡಿಸಬೇಕು, ಹಬ್ಬಕ್ಕೆ ಏನೋ ವಸ್ತು ಖರೀದಿಸಬೇಕು, ಮನೆ ರಿಪೇರಿ ಮಾಡಿಸಬೇಕು- ಇತ್ಯಾದಿಗಳಿಗೆ ಬಡವರ ಬಳಿ ಹಣ ಇರುವುದಿಲ್ಲ, ಬ್ಯಾಂಕುಗಳು ಸಾಲ ಕೊಡುವುದಿಲ್ಲ. ಹೀಗಾಗಿ, ಅನಿವಾರ್ಯವಾಗಿ ಬಡ್ಡಿ ಕುಳಗಳ ಬಳಿ ಕೈಯೊಡ್ಡುತ್ತಾರೆ. ಮೊದಲ ತಿಂಗಳ ಬಡ್ಡಿಯನ್ನು ಹಣ ಕೊಡುವಾಗಲೇ ಮುರಿದುಕೊಳ್ಳುವ ಈ ಕುಳಗಳು, ಅದಕ್ಕೂ ಸೇರಿಸಿ ಬಡ್ಡಿ ಲೆಕ್ಕ ಹಾಕಲು ಆರಂಭಿಸುತ್ತಾರೆ. ಐದು ಪರ್ಸೆಂಟ್ ಲೆಕ್ಕದವರೆಗೂ ಬಡ್ಡಿ ವ್ಯವಹಾರ ನಡೆಯುತ್ತಿದೆ.

ಬೀದಿ ವ್ಯಾಪಾರಸ್ಥರು ಇಂತಹ ಕುಳಗಳಿಂದ ಹಣ ಪಡೆದು, ದಿನವಿಡೀ ಬಿಸಿಲಲ್ಲಿ ನಿಂತು ವ್ಯಾಪಾರ ಮಾಡಿ ಗಳಿಸಿದ ಹಣವೆಲ್ಲ ಸಂಜೆ ಅನಾಯಾಸವಾಗಿ ಬಡ್ಡಿ ರೂಪದಲ್ಲಿ ಇಂಥ ದಂಧೆಕೋರರ ಜೇಬು ಸೇರುತ್ತದೆ. ಬೆಳಗ್ಗೆ ಮಾಲು ಹಾಕಲು ಮತ್ತೆ ಇವರ ಬಳಿಯೇ ಹಣ ಕೇಳುವ ಪರಿಸ್ಥಿತಿ. ಇಂತಹ ಸನ್ನಿವೇಶವನ್ನು ದುರ್ಬಳಕೆ ಮಾಡಿಕೊಳ್ಳುವ ಬಡ್ಡಿ ದಂಧೆಕೋರರು, ಬಡವರ ರಕ್ತ ಹೀರುತ್ತಿದ್ದಾರೆ.

ಕನ್ನಡದ ಮತ್ತೊಬ್ಬ ಸಂಜನಾಳ ಬೆತ್ತಲೆ ಬೆನ್ನು!, ಪೂಜಾ ಆಯ್ತು, ಈಗ ಸಂಜನಾ ಸರದಿ

-ಬಸವರಾಜ ಕರುಗಲ್
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಕನ್ನಡದ ಮತ್ತೊಬ್ಬ ನಟಿ ಕ್ಯಾಮೆರಾಗೆ ಬೆತ್ತಲೆ ಬೆನ್ನು ತೋರಿದ ಹಾಟ್ ಹಾಟ್ ಎಕ್ಸಕ್ಲೂಸೀವ್ ಫೋಟೊಗಳು ನಮ್ಮ ತಂಡಕ್ಕೆ ಲಭ್ಯವಾಗಿವೆ.
ರವಿ ಶ್ರೀವತ್ಸ ನಿರ್ದೇಶನದ ಗಂಡ-ಹೆಂಡತಿ ಸಿನಿಮಾದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ಸಂಜನಾ ಗರ್ಲಾನಿ ಪಡ್ಡೆಗಳ ನಿದ್ದೆ ಕದ್ದಿದ್ದು ದೊಡ್ಡ ಸುದ್ದಿಯಾಗಿತ್ತು. ಆನಂತರ ಬಂದ ಶ್ರೀನಿವಾಸರಾಜು ನಿರ್ದೇಶನದ ದಂಡುಪಾಳ್ಯ-1 ಸಿನಿಮಾದಲ್ಲಿ ಮಳೆ ಹುಡುಗಿ ನಟಿ ಸಂಜನಾ ಗಾಂಧಿ (ಪೂಜಾ ಗಾಂಧಿಯ ಮೊದಲ ಹೆಸರು) ಬೆತ್ತಲೆ ಬೆನ್ನು ತೋರಿದ್ದು ಸಂಚಲನ ಮೂಡಿಸಿತ್ತು. ಈಗ ಮತ್ತೇ ಸಂಜನಾ ಬೆತ್ತಲೆ ಬೆನ್ನು ಪ್ರದರ್ಶಿಸಿದ್ದಾರೆ. ಆದರೆ ಈ ಸಂಜನಾ ಬೇರೆ.

ದೇವದಾಸಿಯರು ಎಂಬ ಸಿನಿಮಾ ಈಗಾಗಲೇ ಶೂಟಿಂಗ್ ಮುಗಿಸಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಸಂಜನಾ ನಾಯ್ಡು ದೃಶ್ಯವೊಂದರಲ್ಲಿ ಬೆತ್ತಲೆ ಬೆನ್ನು ತೋರಿಸಿದ್ದಾರೆ.
ಗಂಡ-ಹೆಂಡತಿಯಲ್ಲಿ ಶೃಂಗಾರದ ಕಾರಣಕ್ಕಾಗಿ ಹಸಿ-ಬಿಸಿ ದೃಶ್ಯಗಳ ಫೋಟೋಗಳು ಪಡ್ಡೆಗಳನ್ನು ಸೆಳೆದಿದ್ದವು. ದಂಡುಪಾಳ್ಯದಲ್ಲಿ ಪೊಲೀಸರ ಕ್ರೌರ್ಯದ ಸಂಕೇತವಾಗಿದ್ದ ಬೆತ್ತಲೆ ಬೆನ್ನು ಜನರನ್ನು ಥೇಟರ್‌ನತ್ತ ಬರುವಂತೆ ಮಾಡಿತ್ತು. ಈಗ ದೇವದಾಸಿಯರು ಸಿನಿಮಾದಲ್ಲಿ ಮತ್ತೇ ಶೃಂಗಾರದ ಸಂಕೇತವಾಗಿರುವ ಬೆತ್ತಲೆ ಬೆನ್ನು ಕಿಚ್ಚು ಹಚ್ಚಿರುವುದಂತೂ ಸತ್ಯ. ಆದರೆ ಜನರನ್ನ ಥೇಟರ್‌ನತ್ತ ಸೆಳೆಯುತ್ತಾ? ಎಂಬ ಪ್ರಶ್ನೆಗೆ ಡಿಸೆಂಬರ್ ಕೊನೆಗೆ ಇಲ್ಲವೇ 2021ರ ಜನೇವರಿ ಮೊದಲೆರಡು ವಾರದ ಬಳಿಕ ಉತ್ತರ ಸಿಗುತ್ತೆ. ಯಾಕೆಂದರೆ ಸ್ವಾತಿ ಅಂಬರೀಶ್ ನಿರ್ದೇಶನದ ದೇವದಾಸಿಯರು ಬಿಡುಗಡೆ ಆಗೋದು ಆ ಟೈಮ್‌ನಲ್ಲೇ.

ಗಂಡ-ಹೆಂಡತಿ, ದಂಡುಪಾಳ್ಯ ಹಾಗೂ ದೇವದಾಸಿಯರು-ಈ ಮೂರು ಸಿನಿಮಾದ ವಿಶೇಷತೆ ಅಂದ್ರೆ ಸೆನ್ಸಾರ್ ಮಂಡಳಿ ಇವುಗಳಿಗೆ ಎ ಸರ್ಟಿಫಿಕೇಟ್ ನೀಡಿರೋದು. ಮೊದಲು ಎ ಸರ್ಟಿಫಿಕೇಟ್ ಸಿಕ್ಕರೆ ಅಶ್ಲೀಲ ಎಂಬ ಭಾವ ಇರುತ್ತಿತ್ತು. ಈಗ ಕ್ರೌರ್ಯದ ಅಂಶಗಳು ಹೆಚ್ಚಿರುವ ಸಿನಿಮಾಗಳಿಗೂ ಎ ಸರ್ಟಿಫಿಕೇಟ್ ನೀಡಲಾಗುತ್ತೆ. ಶಿವಣ್ಣ ಅಭಿನಯದ ಹೊಡಿ ಮಗಾ ಸಿನಿಮಾಕ್ಕೇನೇ ಎ ಸರ್ಟಿಫಿಕೇಟ್ ಸಿಕ್ಕಿತ್ತು ಅನ್ನೋ ಸಮಾಧಾನ ದೇವದಾಸಿಯರು ಚಿತ್ರತಂಡದ್ದು. ಅಂದಹಾಗೆ ಸ್ವಾತಿ ಅಂಬರೀಶ್ ದೇವದಾಸಿಯರು ಸಿನಿಮಾ ಪೂರ್ಣಗೊಳಿಸಿ, ಈಗ ತಮಸ್ ಎಂಬ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.

ಒಟ್ಟಾರೆ ದೇವದಾಸಿಯರು ಸಿನಿಮಾದ ಮತ್ತೊಬ್ಬ ಸಂಜನಾಳ ಬೆತ್ತಲೆ ಬೆನ್ನನ್ನ ಹದಿಹರೆಯದ ಹುಡುಗರು ಕದ್ದು ಮುಚ್ಚಿ ನೋಡ್ತಿದಾರೆ. ಸಿನಿಮಾನ ಎಷ್ಟು ಜನ ನೋಡ್ತಾರೆ ಅನ್ನೋದನ್ನ ಕಾದು ನೋಡಬೇಕು..

ಜನವರಿ ಅಂತ್ಯಕ್ಕೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ ಶಿಪ್

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಕೋವಿಡ್ -19 ಸೋಂಕಿನ ಹಾವಳಿಯಿಂದಾಗಿ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಒ) ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್ ನ್ನು 2021 ಜನವರಿ ಅಂತ್ಯಕ್ಕೆ ಮುಂದೂಡಿದೆ.

ಕೋವಿಡ್ ಉಂಟು ಮಾಡಿರುವ ಸದ್ಯದ ಪರಿಸ್ಥಿತಿಯಲ್ಲಿ ಚಾಂಪಿಯನ್‌ಶಿಪ್ ನಡೆಸುವುದು ಕಷ್ಟ. ಹಾಗಾಗಿ ಒಂದು ತಿಂಗಳು ಮುಂದೂಡಬೇಕಾಯಿತು ಎಂದು ಡಬ್ಲ್ಯುಎಫ್ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ನುಡಿದಿದ್ದಾರೆ.

ಉತ್ತರ ಪ್ರದೇಶದ ಗೊಂಡಾದಲ್ಲಿ ಡಿ.18 ರಿಂದ 20 ರವರೆಗೆ ಈ ಬಾರಿಯ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್ ಆಯೋಜಿಸಲು ನಿರ್ಧರಿಸಲಾಗಿತ್ತು. ಟೂರ್ನಿ ಆಯೋಜನೆಗೆ ಇನ್ನಷ್ಟು ರಾಜ್ಯಗಳು ಬಯಸಿದರೆ, ಸ್ಥಳ ಬದಲಾಗಬಹುದು ಎಂದು ವಿನೋದ್ ತೋಮರ್ ಹೇಳಿದ್ದಾರೆ.

ಸರ್ಬಿಯಾದ ಬಿಲ್ ಗ್ರೇಡ್ ನಲ್ಲಿ ಡಿ.12 ರಿಂದ 18 ರವರೆಗೆ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಕಳುಹಿಸಿ ಕೊಡಲಾಗುವುದು ಎಂದು ಡಬ್ಲ್ಯುಎಫ್ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫೆಬ್ರುವರಿಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಏಷ್ಯನ್ ಚಾಂಪಿಯನ್‌ಶಿಪ್ ಗೆ ಆಯ್ಕೆ ಟ್ರಯಲ್ಸ್ ನಡೆಸದಿರಲು ತೀರ್ಮಾನಿಸಲಾಗಿದೆ.ಅದೇ ತಂಡವನ್ನು ಬೆಲ್ ಗ್ರೇಡ್ ಗೆ ಕಳುಹಿಸಲಾಗುವುದು.

ಬಜರಂಗ್ ಪುನಿಯಾ(65 ಕೆಜಿ ವಿಭಾಗ), ವಿನೇಶ್ ಪೋಗಟ್ (ಮಹಿಳೆಯರ 53 ಕೆಜಿ ವಿಭಾಗ), ಜೀತೆಂದರ್ ಕುಮಾರ್ (74 ಕೆಜಿ ವಿಭಾಗ) ಹಾಗೂ ಸೋಮವೀರ್ ರಾಠೆ (92 ಕೆಜಿ ವಿಭಾಗ) ಅವರು ಟೂರ್ನಿಯಲ್ಲಿ ಭಾಗವಹಿಸದಿರಲು ಅನುಮತಿ ಕೇಳಿದ್ದು, ಒಪ್ಪಿಗೆ ನೀಡಲಾಗಿದೆ ಎಂದು ಡಬ್ಲ್ಯುಎಫ್ಐನ ಅಧಿಕಾರಿ ಹೇಳಿದ್ದಾರೆ.

error: Content is protected !!