ಚಾಲಕ ಸೇರಿದಂತೆ ಐದು ಜನ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರು ದಾಳಿ ಬಂಧಿಸಿ ಅವರಿಂದ 2500 ಕ್ಕೂ ಹೆಚ್ಚು ಹಣ ವಶಪಡಿಸಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆದಿದೆ.
ಖಚಿತ ಮಾಹಿತಿ ಪಡೆದ ಪಿಎಸ್ಐ ಗುರುಶಾಂತ ದಾಸ್ಯಾಳ ಹಾಗೂ ಸಿಬ್ಬಂದಿ ಇಲ್ಲಿನ ಗೌಡಗೇರಿ ರಸ್ತೆಯಲ್ಲಿ ಇರುವ ಪುರಸಭೆಯ ಕಸ ವಿಲೇವಾರಿ ಸ್ಥಳದ ಹತ್ತಿರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಚಾಲಕ ಪ್ರಭು ಯಲ್ಲಪ್ಪ ಕಲಾಲ್, ಕಳಕಪ್ಪ ಮಹಾಂತಪ್ಪ ಮಂಗಳೂರು, ಈರಪ್ಪ ರಾಮಣ್ಣ ಭಜಂತ್ರಿ, ರಾಮಪ್ಪ ದುರಗಪ್ಪ ಶಿಗ್ಗಾಂವಿ, ಬಸೆಟ್ಟೆಪ್ಪ ಮಹಾಬಲೇಶ್ವರ ಸಂಗಮದ ಎಂಬುವರನ್ನು ಬಂಧಿಸಿದ್ದಾರೆ.
ನಗರದ ಕೆ ಎಚ್ ಪಾಟೀಲ್ ಸರ್ಕಲ್ ಬಳಿಯ ವೀರೇಶ್ವರ ಲೈಬ್ರರಿ ಹಿಂದೆ ಬಾಂಬೆ ಮಟಕಾ ಓ ಸಿ ನಂಬರ್ ಬರೆಯುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬನನ್ನು ಸೈಬರ್ ಕ್ರೈಮ್ ನ ಇನ್ಸ್ಪೆಕ್ಟರ್ ಟಿ ಮಹಾಂತೇಶ್ ನೇತೃತ್ವದಲ್ಲಿ ದಾಳಿ ಮಾಡಿ ಬಂಧಿಸಿಲಾಗಿದೆ.
ಬಂಧಿತ ಗಂಗಾಪೂರಪೇಟಿಯ ಸಂತೋಷ ರಘುನಾಥಸಾ ನಾಕೋಡ್ ಎನ್ನಲಾಗಿದೆ. ಬಂಧಿತನಿಂದ 7555 ರೂ.ನಗದು ಹಾಗೂ ಮಟಕಾ ಸಾಮಾಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕೊರೊನಾ ಲಸಿಕೆ ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡುತ್ತಿದ್ದಂತೆ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲೂ ಕೋವಿಡ್ ಲಸಿಕೆ ವಿತರಿಸಲು ಜಿಲ್ಲಾಡಳಿತ ಭರ್ಜರಿ ಸಿದ್ಧತೆ ನಡೆಸಿದೆ.
ಈ ಬಗ್ಗೆ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿರುವ ಜಿಲ್ಲಾಧಿಕಾರಿ ಎಂ.ಸುಂದರೇಶ್ಬಾಬು ಕೋವಿಡ್ ಲಸಿಕೆ ವಿತರಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿರುವ ಅವರು, ‘ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡಲು ಗುರುತಿಸಲಾಗಿರುವ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಲಸಿಕೆ ತೆಗೆದುಕೊಳ್ಳುವವರು ಸೋಂಕು ನಿಯಂತ್ರಣ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿಯನುಸಾರ ಲಸಿಕೆ ಪಡೆಯಲು ಸೂಚಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಿ ನಿಗಾವಹಿಸಬೇಕು ಎಂದು ತಿಳಿಸಿದರು.
ಕೊರೊನಾ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ತಪಾಸಣೆ ಹಾಗೂ ಪರೀಕ್ಷೆ ನಡೆಸುವುದು ನಿರಂತರವಾಗಿರಬೇಕು. ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಸೂಚಿಸಬೇಕು. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿ.ಪಂ. ಸಿಇಒ ಡಾ.ಆನಂದ ಕೆ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ತಪಾಸಣೆಯನ್ನು ನಿರಂತರ ಹಾಗೂ ಸರಿಯಾಗಿ ನಡೆಸಬೇಕು. ಸೋಂಕು ಲಕ್ಷಣವಿರುವವರನ್ನು, ವೃದ್ಧರು ಮತ್ತು ಉಸಿರಾಟ ತೊಂದರೆಯಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಬಸರಿಗಿಡದ, ಜಿಲ್ಲಾ ಸಮೀಕ್ಷಾಣಾಧಿಕಾರಿ ಡಾ.ಜಗದೀಶ್ ನುಚ್ಚಿನ್, ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಬೂಸರಡ್ಡಿ ಸೇರಿದಂತೆ ಮತ್ತಿತರರು ಇದ್ದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ಸಿಬ್ಬಂದಿಗಳು, ಸೇರಿದಂತೆ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ಎಂ.ಸುಂದರೇಶ್ಬಾಬು, ಜಿಲ್ಲಾಧಿಕಾರಿ
8895 ಜನರಿಗೆ ಕೊರೊನಾ ಲಸಿಕೆ
ಜಿಲ್ಲೆಯಲ್ಲಿ ಪ್ರಥಮ ಹಂತದ ಕೋವಿಡ್ ಲಸಿಕೆ ನೀಡಲು ೪೮ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರತಿ ಕೇಂದ್ರಗಳಲ್ಲ್ಲೂ ಪ್ರತಿ ದಿನಕ್ಕೆ ನೂರು ಜನರಿಗೆ ಲಸಿಕೆ ಹಾಕಬಹುದು. ಪ್ರಥಮ ಹಂತದಲ್ಲಿ ಲಸಿಕೆ ನೀಡಲು ಒಟ್ಟು 8895 ಜನ ಕೊರೊನಾ ವಾರಿಯರ್ಸ್ಗಳನ್ನು ಗುರುತಿಸಲಾಗಿದ್ದು, ಅಷ್ಟೂ ಜನರಿಗೆ ಮೂರು ದಿನಗಳಲ್ಲಿ ಲಸಿಕೆ ವಿತರಿಸಬಹುದು ಎಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಬಿ.ಎಂ.ಗೊಜನೂರ ಮಾಹಿತಿ ನೀಡಿದರು.
ಪರನಾರಿ ಜೊತೆ ನನ್ನ ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಸಣ್ಣನೀರಾವರಿ ಇಲಾಖೆಯ ಅಧಿಕಾರಿಯ ಪತ್ನಿ ರಂಪಾಟ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ನಗರದ ಕುಷ್ಟಗಿ ಸರ್ಕಲ್ ಬಳಿಯ ಸಣ್ಣನೀರಾವರಿ ಇಲಾಖೆಯ ಅಧಿಕಾರಿ ವಿನೋದ್ ಕುಮಾರ್ ಗುಪ್ತಾ ಪರ ಸ್ತ್ರೀಯೊಂದಿಗೆ ಮನೆಯಲ್ಲಿದ್ದಾಗ ಗುಪ್ತಾಳ ಪತ್ನಿ ಹಾಗೂ ಮಕ್ಕಳು ದಾಳಿ ಮಾಡಿದ್ದಾರೆ. ಇದೇ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ವಿನೋದ್ ಕುಮಾರ್ ಗುಪ್ತಾ ಹಾಗೂ ಪರನಾರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಗುಪ್ತಾಳ ಪತ್ನಿ ಹಾಗೂ ಅನೈತಿಕ ಸಂಬಂಧ ಹೊಂದಿದ ಮಹಿಳೆ ಮನೆಯೊಳಗೆ ಕೈ ಕೈ ಮಿಲಾಯಿಸಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ವಿಷಯ ತಿಳಿದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ಇದೀಗ ಕೊಪ್ಪಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಗದಗ-ಬೆಟಗೇರಿ ನಗರದಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮೂರು ಅಂತಸ್ಥಿನ ವಾಣಿಜ್ಯ ಕಟ್ಟಡ ನಿರ್ಮಿಸಲಾಗುತ್ತಿದ್ದು, ಬಹುತೇಕ ಕಟ್ಟಡ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ನಗರದ ಪಾಲಾ ಬದಾಮಿ ರಸ್ತೆಯ ಪಕ್ಕದ ರಿಜಿಸ್ಟರ್ ಸರ್ವೆ ನಂಬರ್ 6706/75ಎ ದಿಂದ 22/2ಎ1 ನೇದ್ದರಲ್ಲಿ ಮೂರು ಅಂತಸ್ಥಿನ ವಾಣಿಜ್ಯ ಕಟ್ಟಡ ಕಟ್ಟಲಾಗುತ್ತಿದೆ. ದಲಿಚಂದ ಮೇಘರಾಜ ಕೋಠಾರಿ ಸೇರಿ 31 ಮಾಲೀಕರ ಸಹಭಾಗಿತ್ವದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದೆ. ಕಟ್ಟಡ ನಿರ್ಮಾಣಕ್ಕೆ ನಗರಸಭೆ ಪೌರಾಯಕ್ತರು ಅಕ್ಟೋಬರ್ 2015ರಲ್ಲಿಯೇ ಅನುಮತಿ ನೀಡಿದ್ದಾರೆ.
ತೆರವಿಗೆ ಮನವಿ
ಸದ್ಯ ನಿರ್ಮಾಣವಾಗುತ್ತಿರುವ ವಾಣಿಜ್ಯ ಕಟ್ಟಡದ ಮೂಲ ಜಾಗೆಯಲ್ಲಿ ಬಾವಿಯೊಂದಿತ್ತು. ಆದರೆ, ಆ ಬಾವಿಯನ್ನು ಮುಚ್ಚಿ ಅದರ ಮೇಲೆ ಕಟ್ಟಡ ಕಟ್ಟಿದ್ದಾರೆ. ನಿಯಮ ಬಾಹಿರವಾಗಿ ಕಟ್ಟಿರುವ ಈ ಕಟ್ಟಡವನ್ನು ತೆರುವುಗೊಳಿಸುವಂತೆ ಹೋರಾಟಗಾರ ವೆಂಕನಗೌಡ ಗೋವಿಂದಗೌಡರ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದಾರೆ.
ವಾಣಿಜ್ಯ ಕಟ್ಟಡವನ್ನು ಎರಡು ವರ್ಷಗಳಿಂದ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡ ಕಟ್ಟುತ್ತಿರುವ ಸ್ಥಳದಲ್ಲಿ ಎರಡು ಬಾವಿಗಳಿದ್ದು, ಅವೆರಡೂ ಬಾವಿಗಳಲ್ಲಿ ನೀರು ತುಂಬಿತ್ತು. ಅದರಲ್ಲಿ ಸ್ಥಳೀಯರು ಈಜಾಡುತ್ತಿದ್ದರಲ್ಲದೆ, ಅದೇ ನೀರನ್ನು ಕುಡಿಯಲು ಬಳಸುತ್ತಿದ್ದರು. ಕಟ್ಟಡ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿದ ಮೇಲೆ ಎರಡು ಬಾವಿಗಳನ್ನು ನೆಲಸಮಗೊಳಿಸಿ, ಮಣ್ಣು ತುಂಬಿ ಅವುಗಳ ಮೇಲೆಯೇ ಕಟ್ಟಡದ ಪಿಲ್ಲರ್ಗಳನ್ನು ನಿರ್ಮಿಸಿದ್ದಾರೆ. ಒಂದು ವೇಳೆ ಕಟ್ಟಡ ಕುಸಿದು ಅವಘಡ ಸಂಭವಿಸಿದರೆ ಯಾರು ಹೊಣೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪಾರ್ಕಿಂಗ್ ಜಾಗದಲ್ಲೂ ಕಟ್ಟಡ
ಕಟ್ಟಡದ ಆವರಣದಲ್ಲಿ ವಾಹನಗಳಿಗಾಗಿ ನಿಲುಗಡೆ ವ್ಯವಸ್ಥೆ ಮಾಡದೆ ಪಾರ್ಕಿಂಗ್ ಜಾಗದಲ್ಲಿ ಕಟ್ಟಡ ಕಟ್ಟಿದ್ದಾರೆ. ಪಾಲಾ-ಬಾದಾಮಿ ಮುಖ್ಯ ರಸ್ತೆಯನ್ನೂ ಅತಿಕ್ರಮಣ ಮಾಡಿದ್ದಾರೆ ಎನ್ನಲಾಗುತ್ತಿದೆ. ಕಣ್ಣು ಮುಂದೆ ಇಷ್ಟೆಲ್ಲ ನಡೆಯುತ್ತಿದ್ದರೂ ಅಧಿಕಾರಿಗಳು ನೆಪಮಾತ್ರಕ್ಕೆ ನೋಟಿಸ್ ನೀಡಿ ಕೈ ಕಟ್ಟಿ ಕುಳಿತಿರುವುದು ವಿಪರ್ಯಾಸ. ಕಳೆದ ಸೆಪ್ಟಂಬರ್ನಲ್ಲಿಯೇ ನೀಡಿರುವ ಅಧಿಕಾರಿಗಳ ನೋಟಿಸ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲದಾಗಿದೆ. ಮುಂದೊಂದು ದಿನ ಅಮಾಯಕ ಜನರ ಬಲಿ ತೆಗೆದುಕೊಳ್ಳಲು ಅಧಿಕಾರಿಗಳು ರಣ ಹದ್ದಿನಂತೆ ಕಾದು ಕುಳಿತಂತೆ ಕಾಣಿಸುತ್ತಿದೆ.
ಪ್ರಭಾವಿಗಳ ಕೈವಾಡ
ಕಟ್ಟಡ ನಿರ್ಮಾಣ ಮತ್ತು ಅನುಮತಿಯಲ್ಲಿ ಅಧಿಕಾರಿಗಳು, ಕೆಲ ಪ್ರಭಾವಿ ರಾಜಕಾರಣಿಗಳೂ ಮಾಲೀಕರ ಜೊತೆ ಸೇರಿ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿದ್ದಾರೆ ಎಂಬ ಆರೋಪಗಳಿವೆ.
ದುರಂತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಿ
ಭ್ರಷ್ಟ ಅಧಿಕಾರಗಳಿಂದಾಗಿ ಕಳೆದ ವರ್ಷ ಧಾರವಾಡದಲ್ಲೂ ಇದೇ ರೀತಿ ಅಕ್ರಮವಾಗಿ ಕಟ್ಟಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಯೊಬ್ಬರಿಗೆ ಸೇರಿದ್ದ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದಿತ್ತು. ಈ ಕಟ್ಟಡ ದುರಂತದಲ್ಲಿ ಸಾಕಷ್ಟು ಸಾವುನೋವು ಸಂಭವಿಸಿದ್ದವು. ಸುಮಾರು 19 ಜನ ಅಮಾಯಕರು ಪ್ರಾಣ ತೆತ್ತಿದ್ದರು. ಅದೆಷ್ಟೋ ಜನರು ಗಂಭೀರ ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ.
ಸಂಬಂಧಿಸಿದ ಮಾಲೀಕರಿಗೆ ಎರಡು ನೋಟಿಸ್ ನೀಡಲಾಗಿದೆ. ಕಟ್ಟಡದ ಕುರಿತು ವ್ಯಾಪಕ ಪ್ರಚಾರವೂ ಆಗಿದ್ದು, ಜನರಲ್ಲೂ ಅಧಿಕಾರಿಗಳು ಏನು ಮಾಡ್ತಾರೆ ಎಂಬ ಕುತೂಹಲವೂ ಹೆಚ್ಚಿದೆ. ಹಾಗಾಗಿ ಹೇಳುವುದಕ್ಕಿಂತ ಕೆಲಸ ಮಾಡಿ ತೋರಿಸುವುದೇ ಲೇಸು. ಖಂಡಿತ ಕ್ರಮ ಕೈಗೊಳ್ಳುತ್ತೇನೆ.
ವಿಜಯಸಾಕ್ಷಿ ಸುದ್ದಿ, ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ಇಂದು ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಬಸವಕಲ್ಯಾಣದಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿದ ಬಳಿಕ ಗುದ್ದಲಿ ಪೂಜೆ ನೆರವೇರಿಸಿದರು.
ಸಿಎಂ ಯಡಿಯೂರಪ್ಪ ಅವರ ಜೊತೆ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಕೆ.ಸುಧಾಕರ, ಪ್ರಭು ಚೌಹಾಣ್, ಎಂಪಿ ಭಗವಂತ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಪೂಜ್ಯ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮನೆ ಮುಂದೆ ಕಟ್ಟಿದ್ದ ಟಗರು ಮರಿಯನ್ನು ಬಿಚ್ಚಿಕೊಂಡು ಹೋಗುತ್ತಿರುವುದನ್ನು ಕೇಳಿದ್ದಕ್ಕೆ, ಚಾಕುವಿನಿಂದ ಚುಚ್ಚುವುದಾಗಿ ಹೆದರಿಸಿ ಟಗರು ಮರಿ ಕದ್ದೊಯ್ಯಲು ಯತ್ನಿಸಿ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಘಟನೆ ಮುಂಡರಗಿ ತಾಲ್ಲೂಕಿನ ಹೊಸ ಡಂಬಳದಲ್ಲಿ ನಡೆದಿದೆ.
ಹುಬ್ಬಳ್ಳಿಯ ಸೆಟ್ಲ್ ಮೆಂಟ್ ನಿವಾಸಿಗಳಾದ ಶಿವಾಜಿ ರಾಮು ಮುಳಗುಂದ, ಶ್ರೀನಿವಾಸ್ ಮಲ್ಲಪ್ಪ ರಾಮಗಿರಿ, ಚಂದ್ರಶೇಖರ್ ದುರಗಪ್ಪ ಬಳ್ಳಾರಿ ಹಾಗೂ ನೂಲ್ವಿ ಗ್ರಾಮದ ವೀರೇಶ್ ಸಿದ್ದಪ್ಪ ಎಂಬುವವರೇ ಸದ್ಯ ಪೊಲೀಸರ ಅತಿಥಿಗಳಾಗಿದ್ದಾರೆ.
ಈ ನಾಲ್ವರು ಹೊಸ ಡಂಬಳದ ರಾಮಪ್ಪ ಮಲ್ಲಪ್ಪ ಹೊಸಳ್ಳಿಯವರ ಮನೆ ಮುಂದೆ ಕಟ್ಟಿದ್ದ ಟಗರು ಬಿಚ್ಚಿಕೊಂಡು ಹೋಗುತ್ತಿದ್ದರು. ಈ ವೇಳೆ ರಾಮಪ್ಪ ಬಿಚ್ಚಿಕೊಂಡು ಹೋಗದಂತೆ ತಡೆಯೊಡ್ಡಿದ್ದು, ಆರೋಪಿಗಳು ಬಿಡದಿದ್ದರೆ ಚಾಕುವಿನಿಂದ ಚುಚ್ಚಿ ಟಗರು ಮರಿ ಕೊಂಡೊಯ್ಯುವುದಾಗಿ ಹೆದರಿಸಿ ಕಾರಿನಲ್ಲಿ ಹೊತ್ತೊಯ್ಯುತ್ತಿರುವಾಗ ಅಲ್ಲೇ ಇದ್ದ ಸ್ಥಳೀಯರು ಆರೋಪಿಗಳನ್ನು ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ.
ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾಗಿನಲ್ಲಿದ್ದ ಹಣ, ಎರಡು ಬ್ಯಾಂಕ್ ಪಾಸ್ ಬುಕ್, ಐಡಿ ಕಾರ್ಡ್ ದೋಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ನರಗುಂದ ಬಸ್ ನಿಲ್ದಾಣದಲ್ಲಿ ನಡೆದಿದೆ.
ರಾಮದುರ್ಗ ತಾಲ್ಲೂಕಿನ ತೋರಣಗಟ್ಟಿ ಗ್ರಾಮದ ನಿವೃತ್ತ ಪೊಲೀಸ್ ಅಧಿಕಾರಿ ಸಿದ್ದಲಿಂಗಪ್ಪ ದೊಡ್ಡಸಿದ್ದಪ್ಪ ಇಮಡಿ ಎಂಬುವವರು ಬ್ಯಾಗ್ ನಲ್ಲಿದ್ದ ನಗದು ಕಳೆದುಕೊಂಡಿದ್ದಾರೆ.
ಸಿದ್ದಲಿಂಗಪ್ಪ ತಮ್ಮೂರು ತೋರಣಗಟ್ಟಿಗೆ ಹೋಗಲು ನರಗುಂದ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ನರಗುಂದ-ಮುನವಳ್ಳಿ ಬಸ್ ಹತ್ತುತ್ತಿದ್ದಾಗ ಎಡಗಡೆ ಹೆಗಲಿಗೆ ಹಾಕಿದ್ದ ಬ್ಯಾಗಿನಲ್ಲಿದ್ದ ಹಣವನ್ನು ಕಳ್ಳತನ ಮಾಡಿದ್ದಾರೆ.
ಬ್ಯಾಗಿನಲ್ಲಿದ್ದ 21 ಸಾವಿರ ರೂ. ನಗದು, ವಿಜಯಾ ಹಾಗೂ ಕೆವ್ಹಿಜಿ ಬ್ಯಾಂಕ್ ಪಾಸ್ ಬುಕ್, ಓಟರ್ ಐಡಿ, ಪಾನ್ ಕಾರ್ಡ್ ಕಳ್ಳತನವಾಗಿವೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಕೋವಿಡ್-19 ಮಾರಕ ವೈರಸ್ ಇನ್ನೂ ಅಂತ್ಯ ಕಂಡಿಲ್ಲ. ಹಾಗಾಗಿ ಈ ನಾಡಿನ ಭಕ್ತಿ ಸಾಗರ ಒಂದೆಡೆ ಸೇರುವುದು ಸರಿಯಲ್ಲ. ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆ ನಡೆಯುವುದು ಬೇಡ. ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಸಂಕ್ಷಿಪ್ತವಾಗಿ ನಡೆಯಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪುರ ಹೇಳಿದರು.
ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗವಿಮಠದದ ಜಾತ್ರೆ ಅತೀ ದೊಡ್ಡ ಜಾತ್ರೆ. ಲಕ್ಷಾಂತರ ಜನ ಸೇರುತ್ತಾರೆ. ಆದರೆ ಈಗ ಸಂದರ್ಭ ಸರಿಯಿಲ್ಲ. ಜಿಲ್ಲಾಧಿಕಾರಿಗಳ ನಿಲುವನ್ನು ನಾನು ಬೆಂಬಲಿಸುತ್ತೇನೆ. ಜಾತ್ರೆ ವಿಜೃಂಭಣೆಯಿಂದ ಮಾಡುವ ಬದಲು ಸಾಂಕೇತಿಕವಾಗಿ ಮಾಡುವಂತಾಗಲಿ ಈ ಕುರಿತು ನಾನು ಶ್ರೀಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಹಣವಿದ್ದವನು ಬಿಜೆಪಿಯಲ್ಲಿ ಸೋತರೂ ಮಂತ್ರಿಯಾಗ್ತಾನೆ. ಎಂಟಿಬಿ ಸೋತಿದ್ದರೂ ಅವರನ್ನು ಮಂತ್ರಿಯನ್ನಾಗಿಸಲು ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಶ್ರಮಿಸುತ್ತಿದ್ದಾರೆ. ಹಣವಿದ್ದವರು ಬಿಜೆಪಿಯಲ್ಲಿ ಆನೆ ಇದ್ದಂತೆ. ಆನೆಗೆ ಸತ್ತರೂ ಬೆಲೆಯೇ ಎಂದು ಅವರು ವ್ಯಂಗ್ಯವಾಡಿದರು.
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾ ದಲಿತ ಹಿಂದುಳಿದ ಹಾಗೂ ಅಲ್ಪಸಂಖ್ಯಾಥ ಹಿತರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹಾಗೂ ಶ್ರೀ ಗವಿಸಿದ್ಧೇಶ್ವರ ಕ್ರೀಡಾ ಮತ್ತು ಕಲಾ ಸಾಂಸ್ಕೃತಿಕ ಸಂಸ್ಥೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಭಾಗಿತ್ವದಲ್ಲಿ ರಾಜ್ಯಮಟ್ಟದ ಹಾರ್ಡ್ ಟೆನ್ನಿಸ್ ಕ್ರಿಕೆಟ್ ಟೂರ್ನಾಮೆಂಟ್ ಗವಿಶ್ರೀ ಟ್ರೋಫಿ-2021-22 ಆಯೋಜಿಸಲಾಗಿದ್ದು. ಜನೇವರಿ 5ರಂದು ಬೆಳಗ್ಗೆ 10-30ಕ್ಕೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಚಾಲನೆಗೊಳ್ಳಲಿದೆ ಎಂದು ಸಂಘಟಕ ಸೈಯದ್ ಮಹಿಮೂದ್ ಹುಸೇನಿ ಹೇಳಿದರು.
ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಟೂರ್ನಿಯಲ್ಲಿ ವಿಜೇತ ತಂಡಕ್ಕೆ ಲಕ್ಷ ರೂ. ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ರನ್ನರ್ ಅಪ್ ತಂಡಕ್ಕೆ 50 ಸಾವಿರ ನಗದು ಹಾಗೂ ಟ್ರೋಫಿ, ಮೂರನೇ ವಿಜೇತ ತಂಡಕ್ಕೆ 15 ಸಾವಿರ ನಗದು ಹಾಗೂ ಟ್ರೋಫಿ ಮತ್ತು ನಾಲ್ಕನೇ ವಿಜೇತ ತಂಡಕ್ಕೆ 10 ಸಾವಿರ ರೂ. ನಗದು ಮತ್ತು ಟ್ರೋಫಿ ನೀಡಲಾಗುವುದು ಎಂದರು.
ಇದ ಜೊತೆಗೆ ಸರಣಿ ಪುರುಷೋತ್ತಮ, ಪ್ರತಿ ಪಂದ್ಯಕ್ಕೂ ಪಂದ್ಯ ಪುರುಷೋತ್ತಮ, ಬೆಸ್ಟ್ ಬ್ಯಾಟ್ಸ ಮನ್, ಬೆಸ್ಟ್ ಬೌಲರ್, ಬೆಸ್ಟ್ ಕೀಪರ್, ಬೆಸ್ಟ್ ಕ್ಯಾಚರ್, ಬೆಸ್ಟ್ ಫೀಲ್ಡರ್ ಘೋಷಣೆ ಜೊತೆಗೆ ಆಕರ್ಷಕ ಟ್ರೋಫಿ ನೀಡಲಾಗುವುದು. ಟೂರ್ನಮೆಂಟ್ ನ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ಸಮಾಜದ ಹಲವು ಗಣ್ಯರು ಕೊಡುಗೆಯಾಗಿ ನೀಡಿದ್ದಾರೆ. ಮುಂಬಯಿನಿಂದಲೂ ತಂಡವೊಂದು ನೋಂದಣಿಯಾಗಿದೆ. ಒಟ್ಟಾರೆ ಇದುವರೆಗೂ 36 ತಂಡಗಳು ನೋಂದಣಿ ಮಾಡಿಕೊಂಡಿವೆ. ನೋಂದಣಿ ಮಾಡುವ ಪ್ರತಿ ತಂಡಕ್ಕೂ 5 ಸಾವಿರ ರೂಪಾಯಿ ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.
ಜನೇವರಿ 5ರಂದು ಬೆಳಗ್ಗೆ 10-30ಕ್ಕೆ ಟೂರ್ನಿಯ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೊಪ್ಪಳದ ಶ್ರೀ ಸಂಸ್ಥಾನ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸಮಾರಂಭದ ಸಾನ್ನಿಧ್ಯ ವಹಿಸುವರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಅಮೃತ್ ಅಧ್ಯಕ್ಷತೆ ವಹಿಸುವರು. ಸಂಸದ ಕರಡಿ ಸಂಗಣ್ಣ ಸಮಾರಂಭ ಉದ್ಘಾಟಿಸುವರು. ಶಾಸಕ ರಾಘವೇಂದ್ರ ಹಿಟ್ನಾಳ, ಬಿಜೆಪಿ ಮುಖಂಡ ಸಿ.ವಿ.ಚಂದ್ರಶೇಖರ್, ಎಸ್ಪಿ ಟಿ.ಶ್ರೀಧರ್, ಡಿವೈಎಸ್್ಪಿ ವೆಂಕಟಪ್ಪ ನಾಯಕ್, ಜಿಲ್ಲಾ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶ್ ಭೂಮರಡ್ಡಿ ಮತ್ತಿತರರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರವಣಕುಮಾರ್ ಈರಣ್ಣ, ಖಲೀಲ್ ಮಾನ್ವಿ ಇದ್ದರು.