ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಕಾಯ್ದೆ ಜಾರಿಗೆ ತರುವುದನ್ನು ನಿಲ್ಲಿಸಲು ಆಗುವುದಿಲ್ಲ: ಶೋಭಾ
ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು
‘ಕ್ರಾಸ್ ಬ್ರೀಡ್ ಬಗ್ಗೆ ಸಿದ್ದರಾಮಯ್ಯನವರಿಗೆ ತುಂಬಾ ಆಸಕ್ತಿ ಇದೆ. ಕಾಂಗ್ರೆಸ್ ನವರದ್ದು ಕ್ರಾಸ್ ಬ್ರೀಡ್ ಸಂತತಿ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಹಿಂದೂ ಮುಸ್ಲಿಂ ಕ್ರಾಸ್ ಆಗಿ ಬಹಳ ಜನ ಹುಟ್ಟಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಪ್ರತಿಕ್ರಿಯಿಸಿದ ಅವರು, ಲವ್ ಜಿಹಾದ್ ಬ್ಯಾನ್ ಮಾಡಬೇಕೆಂಬ ಚಿಂತನೆ ಇರುವುದು ನಿಜ. ಸಿದ್ದರಾಮಯ್ಯನವರ ಹೇಳಿಕೆಯೇ ಮೂರ್ಖತನದ್ದು. ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು. ಮುಸಲ್ಮಾನರನ್ನು ಓಲೈಸುವುದು ಇನ್ನಾದರೂ ಬಿಡಬೇಕು ಎಂದು ಸಿದ್ದರಾಮಯ್ಯಗೆ ಸಚಿವ ಈಶ್ವರಪ್ಪ ಕುಟುಕಿದರು.
‘ಲವ್ ಜಿಹಾದಿಗೆ ಕಾನೂನು ಬರಲೇಬೇಕು, ಅದು ಬರುತ್ತದೆ. ಲವ್ ಜಿಹಾದ್ ಕೇವಲ ಪ್ರೀತಿಯ ಸಂಗತಿಯಲ್ಲ ಮತಾಂತರದ ಷಡ್ಯಂತ್ರ, ದೇಶಾಂತರದ ಷಡ್ಯಂತ್ರ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಕಾಯ್ದೆ ಜಾರಿಗೆ ತರುವುದನ್ನು ನಿಲ್ಲಿಸಲು ಆಗುವುದಿಲ್ಲ. ಸಿದ್ದರಾಮಯ್ಯನವರು ಹಗುರವಾಗಿ, ಕೇವಲವಾಗಿ ಮಾತನಾಡಿದ್ದಾರೆ. ಅವರು ಯಾವ ಕ್ರಾಸ್ ಬಗ್ಗೆ ಮಾತನಾಡಿದ್ದಾರೆ? ಅವರಿಗೆ ಯಾವ ಕ್ರಾಸ್ ಬಗ್ಗೆ ಗೊತ್ತಿದೆ.? ಅದರಲ್ಲಿ ಅವರ ಪಾತ್ರವೇನು? ಈ ಬಗ್ಗೆ ನನಗೆ ಗೊತ್ತಿಲ್ಲ.ಹಾಗಾಗಿ ಅವರೇ ಉತ್ತರಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದರು.
ಲವ್ ಜಿಹಾದ್ ನಿಷೇಧದ ಕುರಿತ ವಿಚಾರಕ್ಕೆ ಸಿಟ್ಟಾದ ಸಿದ್ದರಾಮಯ್ಯ ಮದುವೆ ಎಂಬುವುದು ಪ್ರತಿಯೊಬ್ಬರ ವೈಯಕ್ತಿಕ ವಿಚಾರ. ಇಂತವರನ್ನೇ ಮದುವೆಯಾಗಿ ಎಂಬುವುದು ಸರಿಯಲ್ಲ. ಹಿಂದೂ ಮುಸ್ಲಿಂ ಕ್ರಾಸ್ ಆಗಿ ಬಹಳ ಜನ ಜನಿಸಿದ್ದಾರೆ. ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ತರಲು ನಮ್ಮ ವಿರೋಧವಿದೆ ಎಂದಿದ್ದರು.
-ಬೆಳಗಾವಿಯಿಂದ ಬಳ್ಳಾರಿವರೆಗೆ ಕೆಆರ್ಎಸ್ನಿಂದ ಚಲಿಸು ಕರ್ನಾಟಕ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರಾಜ್ಯ ಕೊರೋನಾ ವೈರಸ್ನಿಂದ ನಲುಗಿದಂತೆ ಭ್ರಷ್ಟ ರಾಜಕೀಯ ಮತ್ತು ಆಡಳಿತ ವ್ಯವಸ್ಥೆಯಿಂದ ಸೊರಗಿದೆ. ರಾಜ್ಯ ಸರಕಾರದ ದುರಾಡಳಿತ, ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಬೆಳಗಾವಿಯಿಂದ ಬಳ್ಳಾರಿವರೆಗೆ ಸುಮಾರು 300 ಕಿ.ಮೀ. ಸೈಕಲ್ ಯಾತ್ರೆ ಹಮ್ಮಿಕೊಂಡಿದೆ ಎಂದು ಕೆಆರ್ಎಸ್ಪಿ ಮುಖಂಡ ಪ.ಯ.ಗಣೇಶ ತಿಳಿಸಿದರು.
ಕೊಪ್ಪಳ ಮೀಡಿಯಾ ಕ್ಲಬ್ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 30ರಂದು ಕಿತ್ತೂರಿನಿಂದ ಆರಂಭಗೊಂಡಿರುವ ಸೈಕಲ್ ಯಾತ್ರೆಗೆ ಹಿರಿಯ ಸಾಮಾಜಿಕ ಹೋರಾಟಗಾರ, ಚಿಂತಕ ಎಸ್.ಆರ್.ಹಿರೇಮಠ ಚಾಲನೆ ನೀಡಿದರು. ಡಿಸೆಂಬರ್ 3ರಂದು ಭಾನಾಪುರದವರೆಗೆ ಆಗಮಿಸುವ ಸೈಕಲ್ ಯಾತ್ರೆ ಡಿಸೆಂಬರ್ 4ರಂದು ಕೊಪ್ಪಳಕ್ಕೆ ಆಗಮಿಸಿ ನಗರದ ಮೂರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮುಖಂಡರು ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಡಿಸೆಂಬರ್ 7ರಂದು ಬಳ್ಳಾರಿಯಲ್ಲಿ ಸೈಕಲ್ ಯಾತ್ರೆ ಸಮಾರೋಪಗೊಳ್ಳಲಿದ್ದು, ಆನಂತರ ನಮ್ಮ ಪಕ್ಷವು ಗ್ರಾಪಂ ಚುನಾವಣೆಯತ್ತ ಗಮನ ಹರಿಸಲಿದೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಎಸ್ಆರ್ಪಿಯ ಮುಖಂಡ ಪ್ರಶಾಂತ್ ಕೆ. ಇದ್ದರು.
-ಮೊಳಕಾಲ್ಮೂರನ್ನು ಬಳ್ಳಾರಿಗೆ ಸೇರಿಸುವ ಪ್ರಸ್ತಾವನೆಯೇ ಇಲ್ಲ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರಿಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪನ್ನು ಖಂಡಿಸಲಾಗದು, ಆದರೆ ಸುಪ್ರೀಂಕೋರ್ಟ್ನಲ್ಲಿ ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ. ಬಿಜೆಪಿ ವಿಶ್ವನಾಥ್ ಅವರ ಬೆನ್ನಿಗೆ ನಿಲ್ಲುತ್ತೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.
ಕೊಪ್ಪಳದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ಕಹಿ ಘಟನೆಗಳಿಂದ ಬೇಸರವಾಗುವುದು ಸಹಜ. ಬೇಸರದಲ್ಲಿ ವಿಶ್ವನಾಥ್ ಅವರು ಸಾಹಿತ್ಯೀಕ ಧಾಟಿಯಲ್ಲಿ ಮಾತನಾಡಿರಬಹುದು. ವಿಶ್ವನಾಥ್ ಸೇರಿದಂತೆ ಬೇರೆ ಪಕ್ಷಗಳಿಂದ ಬಿಜೆಪಿ ಸೇರಿದ ಶಾಸಕರ ಬಗ್ಗೆ ಬಿಜೆಪಿ ಸದಾ ಜೊತೆಗಿರುತ್ತದೆ ಎಂದರು.
ಸಿದ್ದರಾಮಯ್ಯನವರು ತಮಗಾದ ಅನುಭವ ಹೇಳಿಕೊಳ್ಳುತ್ತಾರೆ. ಬಿಜೆಪಿಯಲ್ಲಂತು ಭಿನ್ನಮತವಿಲ್ಲ. ಒಗ್ಗಟ್ಟಿನಿಂದ ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಮತ್ತು ಪಕ್ಷದ ನಾಯಕರು, ಸಚಿವರು ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.
ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಿಂದ ಗ್ರಾಮ ಸ್ವರಾಜ್ ಮಾಡ್ತಾ ಇದ್ದೇವೆ. 6 ತಂಡಗಳಿಂದ 62 ಸಭೆ 30 ಜಿಲ್ಲಾದ್ಯಂತ ನಡೆಸಲಿದ್ದೇವೆ. ಪಕ್ಷದ ಬೆಂಬಲಿಗರನ್ನು, ಶ್ರಮಿಸಿದ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಗ್ರಾಮ ಸ್ವರಾಜ್ಯ ಕನಸು, ನನಸಾಗಿಸಲು ಪಕ್ಷ ಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಅಧಿಕಾರ ಚುಕ್ಕಾಣಿ ನೀಡಲು ಪಕ್ಷ ಯೋಚಿಸಿದೆ. ಬೂತ್ವೊಂದರಲ್ಲಿ ಪಂಚರತ್ನ ಕಮಿಟಿ ಇರುತ್ತೆ. ಈ ಕಮಿಟಿ ಎಲ್ಲ ಕುಟುಂಬಗಳನ್ನು ಭೇಟಿ ಮಾಡಿ ಮತ ಕೇಳುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅವರು ಸಮಗ್ರ ಮಾಹಿತಿ ನೀಡಿದರು.
ಇನ್ನುಳಿದ ಅವಧಿಗೂ ಯಡಿಯೂರಪ್ಪ ಅವರೇ ಸಿಎಂ
ಅರಣ್ಯ ಜಾಗವನ್ನು ಎಲ್ಲೇ, ಯಾರೇ ಒತ್ತುವರಿ ಮಾಡಿದ್ರೂ ಸಹಿಸಲ್ಲ, ಕಾನೂನು ಮೀರಿ ಸಸ್ಯ ಸಂಪತ್ತನ್ನು ವಿನಾಶ ಮಾಡಿದ್ರೆ ಕ್ರಮ ಖಚಿತ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದರು.
ಕೊಪ್ಪಳದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಚ್.ವಿಶ್ವನಾಥ್ ಅವರಿಗೆ ಅನ್ಯಾಯ ಆಗಲು ಬಿಡಲ್ಲ. ಆ ರೀತಿ ಏನಾದರೂ ಆದರೆ ನಾವು ಅವರ ಹಿಂದೆ ನಿಲ್ಲುತ್ತೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಸರಕಾರದ ಇನ್ನುಳಿದ ಅವಧಿಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಅವರು ತಿಳಿಸಿದರು.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಗದಗ ಜಿಲ್ಲೆಯಲ್ಲಿ ಡಿ. 22 ಮತ್ತು 27ರಂದು ಒಟ್ಟು ಎರಡು ಹಂತಗಳಲ್ಲಿ ಜರುಗಲಿದೆ. ಈ ಕುರಿತು ನ. 30ರಂದು ನೀತಿ ಸಂಹಿತೆ ಜಾರಿಗೆ ಬಂದಿದೆ. ಜಿ.ಪಂ., ತಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹಾಗೂ ಎಪಿಎಂಸಿ ಅಧ್ಯಕ್ಷರಿಗೆ ಒದಗಿಸಲಾದ ಸರ್ಕಾರಿ ವಾಹನಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯಲಾಗಿದೆ.
ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಅವುಗಳನ್ನು ಆಯಾ ತಾಲೂಕಿನ ತಹಸೀಲ್ದಾರರ ವಶಕ್ಕೆ ನೀಡತಕ್ಕದ್ದು. ಗದಗ ತಾಲೂಕಿನ ವಾಹನಗಳನ್ನು ತಹಸೀಲ್ದಾರರು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಒಪ್ಪಿಸಬೇಕು. ಜಿಲ್ಲೆಯ ಗ್ರಾಮೀಣ ಮಟ್ಟದಲ್ಲಿ ಬರುವ ಎಲ್ಲ ನಿರೀಕ್ಷಣಾ ಮಂದಿರಗಳು, ಪ್ರವಾಸಿ ಮಂದಿರಗಳು, ಮಂಡಳಿಗಳ/ ನಿಗಮಗಳ ಅತಿಥಿ ಗೃಹಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳ ಅಧೀನಕ್ಕೆ ಪಡೆದುಕೊಳ್ಳಲಾಗಿದೆ.
ತಹಸೀಲ್ದಾರರು ತಮ್ಮ ತಾಲೂಕಿನಲ್ಲಿರುವ ಅತಿಥಿಗೃಹ ಕಟ್ಟಡಗಳನ್ನು ವಶಕ್ಕೆ ಪಡೆದುಕೊಂಡು ವರದಿ ಸಲ್ಲಿಸಬೇಕೆಂದು ಗದಗ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯತ ಚುನಾವಣೆ ಘೋಷಿಸಿದ್ದು, ಜಿಲ್ಲೆಯಲ್ಲಿ ಗ್ರಾ.ಪಂ. ಚುನಾವಣೆ ನಡೆಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ. ಅಲ್ಲದೇ, ನ್ಯಾಯ ಸಮ್ಮತ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು, ಜಿಲ್ಲೆಯಲ್ಲಿ ಒಟ್ಟು 122 ಗ್ರಾಮ ಪಂಚಾಯತಗಳಿದ್ದು, ಇವುಗಳ ಪೈಕಿ 117 ಗ್ರಾ.ಪಂ.ಗಳ 602 ಕ್ಷೇತ್ರಗಳಿಗೆ ಮಾತ್ರ ಚುನಾವಣೆ ನಡೆಯಲಿದೆ ಎಂದರು.
ಇನ್ನುಳಿದ ಜಿಲ್ಲೆಯ ಐದು ಗ್ರಾಮ ಪಂಚಾಯತಗಳಾದ ಲಕ್ಷ್ಮೇಶ್ವರ ತಾಲ್ಲೂಕಿನ ಬಟ್ಟೂರ, ಗದಗ ತಾಲ್ಲೂಕಿನ ಹರ್ಲಾಪುರ, ಗಜೇಂದ್ರಗಡ ತಾಲ್ಲೂಕಿನ ಕುಂಟೋಜಿ ಮತ್ತು ಶಾಂತಗಿರಿ, ಮುಂಡರಗಿ ತಾಲ್ಲೂಕಿನ ಮುರಡಿ ಗ್ರಾ.ಪಂ.ಗಳ ಅವಧಿ ಇನ್ನೂ ಮುಗಿಯದಿರದ ಕಾರಣ ಈ ಹಂತದಲ್ಲಿ ಚುನಾವಣೆ ಜರಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸದ್ಯ ಚುನಾವಣೆ ನಡೆಯುವ 117 ಗ್ರಾ.ಪಂ. ವ್ಯಾಪ್ತಿಯಲ್ಲಿ ಒಟ್ಟು 5,34,085 ಮತದಾರರು ಇದ್ದಾರೆ. ಅದರಲ್ಲಿ 2,70,245 ಜನ ಪುರುಷರು, 2,63,840 ಜನ ಮಹಿಳಾ ಮತದಾರರಿದ್ದಾರೆ.
ಜಿಲ್ಲೆಯ 117 ಗ್ರಾಮ ಪಂಚಾಯತಿಗಳ ಪೈಕಿ 53 ಗ್ರಾಮ ಪಂಚಾಯತಿಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಗದಗ ತಾಲ್ಲೂಕಿನ 26, ಲಕ್ಷೇಶ್ವರ 13, ಶಿರಹಟ್ಟಿ 14 ಸೇರಿ ಮೂರು ತಾಲ್ಲೂಕುಗಳ ಒಟ್ಟು 53 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಜರುಗಲಿದೆ.
ಅದರಂತೆ, ಎರಡನೇ ಹಂತದಲ್ಲಿ ಮುಂಡರಗಿ ತಾಲ್ಲೂಕಿನ 18, ಗಜೇಂದ್ರಗಡ 9, ನರಗುಂದ 13 ಹಾಗೂ ರೋಣ 24 ಸೇರಿ ನಾಲ್ಕು ತಾಲ್ಲೂಕುಗಳ ಒಟ್ಟು 64 ಗ್ರಾಮ ಪಂಚಾಯತಿಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಮೊದಲ ಹಂತದ ಚುನಾವಣೆಗೆ ಡಿ.7 ರಂದು ಅಧಿಕೃತ ಚುನಾವಣಾದೇಶ ಹೊರಡಿಸಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ.11 ಕೊನೆಯ ದಿನವಾಗಿದೆ. ಡಿ. 12 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಡಿ.14 ಕಡೆಯ ದಿನವಾಗಿದೆ. ಮೊದಲ ಹಂತದ ಮತದಾನವು ಡಿ.22 ರಂದು ಜರುಗಲಿದೆ.
ಅದರಂತೆ, ಎರಡನೇ ಹಂತದ ಚುನಾವಣೆಗೆ ಡಿ.12 ರಂದು ಅಧಿಕೃತ ಚುನಾವಣಾ ಆದೇಶ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಡಿ.16 ಕೊನೆಯ ದಿನವಾಗಿದೆ. ಡಿ.17 ರಂದು ನಾಮಪತ್ರ ಪರಿಶೀಲನೆ ಜರುಗಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಡಿ.19 ಕಡೆಯ ದಿನವಾಗಿದೆ. ಡಿ.27 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಡಿ.31 ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.
ಜಿಲ್ಲಾ ಪಂಚಾಯತ ಸಿಇಒ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಸುದ್ದಿಗೋಷ್ಠಿಯಲ್ಲಿ ಇದ್ದರು.
ರಾಜ್ಯಾದ್ಯಂತ ಸುಮಾರು 25 ಲಕ್ಷ ಜನಸಂಖ್ಯೆ ಹೊಂದಿರುವ ಪ.ಜಾ. ಅಲೆಮಾರಿ ಕೊರಮ-ಕೊರಚ, ಕುರುವನ್, ಕೇಪ್ಮಾರಿಸ್, ಎರಕುಲ ಕೈಕಾಡಿ(ಕುಳುವ) ಮತ್ತು ಎಸ್.ಸಿ, ಎಸ್.ಟಿ ಅಲೆಮಾರಿ ಸಮುದಾಯಗಳ ಪ್ರಗತಿಗೆ ಕೊರಮ-ಕೊರಚ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯಾಧ್ಯಕ್ಷ ಆನಂದಪ್ಪ ದಾವಣಗೆರೆ ಆಗ್ರಹಿಸಿದರು.
ಕೊಪ್ಪಳದ ಮೀಡಿಯಾ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯ ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಿಂದ ವಂಚಿತವಾಗಿದ್ದು, ಇಂದಿಗೂ ಜೀವನೋಪಾಯಕ್ಕಾಗಿ ಹಂದಿಸಾಕಾಣಿಕೆ, ಬುಟ್ಟಿ ನೇಯುವ, ಶಹನಾಯಿ ನುಡಿಸುವ, ಹಗ್ಗ ನೇಯುವ, ಈಚಲು ಗರಿಗಳ ಕಸಪೊರಕೆ ಕಟ್ಟುವ, ಹಚ್ಚೆ ಹಾಕುವ ಕಾಯಕಾನುಸಾರ ಜೀವನ ನಡೆಸುತ್ತಿದೆ. ಎಸ್ಸಿ, ಎಸ್ಟಿಯಲ್ಲಿಯೇ ಇರುವ ಮಾದಿಗ, ಒಡ್ಡರ್ ಮತ್ತಿತರ ಸಮಾಜಗಳಿಗೆ ಸಿಕ್ಕಿರುವ ರಾಜಕೀಯ ಪ್ರಾತಿನಿಧ್ಯ ಇದುವರೆಗೂ ನಮಗೆ ಸಿಕ್ಕಿಲ್ಲ. ಆದ್ದರಿಂದ ಕೊರಮ-ಕೊರಚ ಸಮುದಾಯದ ಯಾರೊಬ್ಬರೂ ಶಾಸಕರಾಗುವುದಿರಲಿ, ಜಿಪಂ ಸದಸ್ಯರೂ ಆಗಿಲ್ಲ ಎಂದರು.
ನಮ್ಮ ಸಮಾಜಗಳ ಅಭಿವೃದ್ಧಿ ಹಿತದೃಷ್ಟಿಯಿಂದ 2013ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೊರಮ-ಕೊರಚ ಅಭಿವೃದ್ಧಿ ನಿಗಮ ಸ್ಥಾಪಿಸಲು 5 ಕೋಟಿ ರೂ.ಘೋಷಿಸಿದ್ದರು. ಆದರೆ ಇಂದಿನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು 2019ರ ಡಿಸೆಂಬರ್ 26ರಂದು ಕೊರಮ-ಕೊರಚ ಅಭಿವೃದ್ಧಿ ನಿಗಮ ಸ್ಥಾಪನೆಯ ಅಗತ್ಯವಿಲ್ಲವೆಂದು ಹಿಂಬರಹ ನೀಡಿ, ಸಮುದಾಯದ ಏಳ್ಗೆಗೆ ಅಡ್ಡಗಾಲು ಹಾಕಿದರೆಂದು ಖಂಡಿಸಿದರು.
ಕೂಡಲೇ ಸರಕಾರ ಕೊರಮ-ಕೊರಚ ಜನಾಂಗಕ್ಕೆ ಸಾಮಾಜಿಕ ನ್ಯಾಯದಡಿ 50 ಕೋಟಿ ನಿಗದಿಗೊಳಿಸಿ ಘೋಷಣೆಯಾಗಿರುವ ಕೊರಮ-ಕೊರಚ ಅಭಿವೃದ್ಧಿ ನಿಗಮವನ್ನು ಅನುಷ್ಠಾನಕ್ಕೆ ತರಬೇಕು. ನಿರ್ಲಕ್ಷ್ಯ ವಹಿಸಿದರೆ ರಾಜ್ಯಾದ್ಯಂತ ಉಗ್ರಹೋರಾಟ ನಡೆಸಲಾಗುತ್ತದೆ ಎಂದು ಅವರು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ವಣಗೇರಿ, ರಾಜ್ಯ ಜಂಟಿ ಕಾರ್ಯದರ್ಶಿ ಕಿರಣ್ಕುಮಾರ್ ಕೊತ್ತಗೆರೆ, ಜಿಲ್ಲಾಧ್ಯಕ್ಷ ಕಂಬಣ್ಣ ಭಜಂತ್ರಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಭಜಂತ್ರಿ ಬೆಣಕಲ್ ಮತ್ತಿತರರು ಇದ್ದರು.
ಕೊಪ್ಪಳ ಜಿಲ್ಲೆಯ ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಾರಾಷ್ಟ್ರದ ಮೂಲದ ಮಹಾದು @ ಮಹಾದೇವ ಕಾಳೆ ಹಾಗೂ ಸಂಪತ್ ಮೋರಾಲೆ ಇವರು ಇನ್ನಿತರರೊಂದಿಗೆ ಕೂಡಿಕೊಂಡು (ಒಟ್ಟು 05 ಜನ ದರೋಡೆಕೋರರು) ಪ್ರಯಾಣಿಕರ ಮೇಲೆ ದರೋಡೆ ನಡೆಸಿರುವ ಆರೋಪವು ಸಾಭಿತಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಆರೋಪಿತರಿಗೆ ಶಿಕ್ಷೆ ವಿಧಿಸಿದ್ದಾರೆ.
ಆಂದ್ರಪ್ರದೇಶ ಮೂಲದ ವೈ.ಕಿರಣ ಕುಮಾರ ಎನ್ನುವವರು 2013ರ ಮಾರ್ಚ್. 17 ರಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಶಿರಡಿಗೆ ಹೋಗುತ್ತಿದ್ದಾಗ ಕೊಪ್ಪಳ ಜಿಲ್ಲೆಯ ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಮ್ಯಾದನೇರಿ ಬಸ್ ನಿಲ್ದಾಣದ ಹತ್ತಿರ ಬೆಳಿಗ್ಗೆ 04 ಗಂಟೆ ಸುಮಾರಿಗೆ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಮಲಗಿಕೊಂಡಿದ್ದಾಗ 05 ಜನ ದರೋಡೆಕೋರರು ಬಂದು ಕಾರಿನಲ್ಲಿದ್ದ ಪ್ರಮಾಣಿಕರಿಗೆ ಮಾರಕಾಸ್ತ್ರಗಳಿಂದ ಹೊಡೆ ಬಡೆ ಮಾಡಿ ಅವರಲ್ಲಿದ್ದ ರೂ. 1,88,100 ಮೌಲ್ಯದ ಹಣ, ಬಂಗಾರ ಮತ್ತು ಮೊಬೈಲ್ಗಳನ್ನು ದರೋಡೆ ಮಾಡಿಕೊಂಡು ಹೋಗಿದ್ದು, ಈ ಕುರಿತು ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಅಂದಿನ ತನಿಖಾಧಿಕಾರಿಯಾದ ಯಲಬುರ್ಗಾ ಸಿಪಿಐ ಸುರೇಶ ತಳವಾರ ಅವರು ತನಿಖೆ ಮಾಡಿ ಆರೋಪಿತರ ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಮಹಾರಾಷ್ಟ್ರ ಮೂಲದ ಮಹಾದು @ ಮಹಾದೇವ ಕಾಳೆ ಹಾಗೂ ಸಂಪತ್ ಮೋರಾಲೆ ಇವರು ಇನ್ನಿತರರೊಂದಿಗೆ ಕೂಡಿಕೊಂಡು ದರೋಡೆ ನಡೆಸಿದ ಆರೋಪ ಸಾಬೀತಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಎಲ್. ವಿಜಯಲಕ್ಷ್ಮೀದೇವಿ ಅವರು (ನ. 25) ಆರೋಪಿತರಿಗೆ 06 ವರ್ಷ ಜೈಲು ಶಿಕ್ಷೆ ಹಾಗೂ ತಲಾ ರೂ. 25,000 ಗಳ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಎ ಪಾಟೀಲ, ಕೆ.ನಾಗರಾಜ ಆಚಾರ್, ಸವಿತಾ ಎಂ. ಶಿಗ್ಲಿ ಹಾಗೂ ಟಿ.ಅಂಬಣ್ಣ ಇವರು ಪ್ರಕರಣ ನಡೆಸಿದ್ದು, ಬಂಡಿ ಅಪರ್ಣ ಮನೋಹರ ಅವರು ವಾದ ಮಂಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆರೋಪಿತನು ಅಪಹರಿಸಿ ಬಲಾತ್ಕಾರ ಸಂಭೋಗ ಮಾಡಿದ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರು (ಪೋಕ್ಸೋ) ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಗ್ರಾಮದ ಶರಣಬಸವ ಬಗಡಿ, ಇತನು ಕೊಪ್ಪಳ ನಗರದ ಕುರುಬರ ಓಣಿಯಲ್ಲಿ ಫಿರ್ಯಾದಿದಾರರು ವಾಸವಿರುವ ಓಣಿಯಲ್ಲಿ ವಾಸವಾಗಿದ್ದು, ಒಂದು ವರ್ಷದ ಹಿಂದೆ ಕೊಪ್ಪಳದಿಂದ ತನ್ನ ಊರು ತಾವರಗೇರಾ ಗ್ರಾಮಕ್ಕೆ ಹೋಗಿದ್ದ. ಆಗಾಗ ಕೊಪ್ಪಳಕ್ಕೆ ಬಂದು ಫಿರ್ಯಾದಿದಾರರ ಅಪ್ರಾಪ್ತ ವಯಸ್ಸಿನ ಮಗಳನ್ನು ಭೇಟಿಯಾಗಿ ಮಾತನಾಡಿಸುತ್ತಾ ಅವಳ ಗೆಳತನ ಸಂಪಾದಿಸಿರುತ್ತಾನೆ.
2016ರ ಮಾರ್ಚ್. 14 ರಂದು ಸಾಯಂಕಾಲ 04-30 ಗಂಟೆ ಸುಮಾರು ಕೊಪ್ಪಳ ನಗರದ ಫಿರ್ಯಾದಿದಾರರ ಮನೆ ಹತ್ತಿರ ಇದ್ದ ಫಿರ್ಯಾದಿದಾರರ ಮಗಳನ್ನು ಆಕೆ ಅಪ್ರಾಪ್ತ ವಯಸ್ಸಿನವಳು ಮತ್ತು ಪರಿಶಿಷ್ಟ ಪಂಗಡದವಳೆಂದು ಗೊತ್ತಿದ್ದು, ಬಾಲಕಿಯನ್ನು ಮದುವೆ ಮಾಡಿಕೊಳ್ಳುತ್ತೆನೆ ಹೋಗೋಣ ಬಾ ಅಂತಾ ಹೇಳಿ ನಂಬಿಸಿ ಪುಸಲಾಯಿಸಿ ಅಪಹರಣ ಮಾಡಿಕೊಂಡು ಆಂದ್ರ ಪ್ರದೇಶ ರಾಜ್ಯದ ಗುಂಟೂರಿನ ಅಮೀನ ನಗರದಲ್ಲಿ ರಾಮಾಂಜನೇಯ ಇತನ ಸಹಾಯದಿಂದ ಶೇಕನಾಗೂರ ಇತನ ಒಂದು ರೂಮ್ ಬಾಡಿಗೆಯಂತೆ ಹಿಡಿದು, ಈ ರೂಮಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅವಳಿಗೆ ಹಲವು ಬಾರಿ ಬಲಾತ್ಕಾರ ಸಂಭೋಗ ಮಾಡಿದ ಆರೋಪವು ತನಿಖೆಯಲ್ಲಿ ಸಾಭಿತಾಗಿದ್ದರಿಂದ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾಗಿದೆ ಎಂದು ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ರೂ. 25,000 ಗಳ ದಂಡ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ (ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಎ ಪಾಟೀಲ, ಕೆ.ನಾಗರಾಜ ಆಚಾರ್, ಸವಿತಾ ಎಂ. ಶಿಗ್ಲಿ ಹಾಗೂ ಟಿ.ಅಂಬಣ್ಣ ಇವರು ಪ್ರಕರಣ ನಡೆಸಿದ್ದು, ಬಂಡಿ ಅಪರ್ಣ ಮನೋಹರ ಅವರು ವಾದ ಮಂಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕೆಡಬ್ಲ್ಯೂಎಸ್ಸಿಸಿಯ ಏಕತಾ ಕಪ್ ಕ್ರಿಕೆಟ್ ಟೂರ್ನಿ ಪ್ರತಿಷ್ಠಿತ ಐಪಿಎಲ್ ಪಂದ್ಯಾವಳಿಯನ್ನೂ ಮೀರಿಸಿ ಮಾದರಿ ಎನಿಸಿತು ಎಂದು ಡಿಎಸ್ಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ರವಿ ವಕ್ಕುಂದ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಸಮಾರೋಪಗೊಂಡ ಏಕತಾ ಕಪ್ ಕ್ರಿಕೆಟ್ ಟೂರ್ನಮೆಂಟ್ನಲ್ಲಿ ವಿಜೇತ ತಂಡಕ್ಕೆ ಕಪ್ ವಿತರಿಸಿ ಅವರು ಮಾತನಾಡಿದರು.
ಇಲ್ಲಿನ ಬಳಗದ ಕ್ರೀಡಾ ಉತ್ಸಾಹ ಇತರರಿಗೂ ಮಾದರಿ. ಶಿಸ್ತು, ಸಮಯ, ಏಕತೆ ನೋಡಿದರೆ ಮುಂದೊಂದು ದಿನ ರಾಜ್ಯಮಟ್ಟದಲ್ಲಿ ಈ ಕ್ಲಬ್ ಗುರುತಿಸಿಕೊಳ್ಳುವಲ್ಲಿ ಅನುಮಾನವಿಲ್ಲ. ನಾವು ಸಹ ಕ್ಲಬ್ನ ಸದಸ್ಯರಾಗುವುದಾಗಿ ತಿಳಿಸಿದರು.
ಮತ್ತೋರ್ವ ಪೊಲೀಸ್ ಅಧಿಕಾರಿ ಮಲ್ಲನಗೌಡ್ರ ಮಾತನಾಡಿ, ಟೂರ್ನಮೆಂಟ್ನ ಫೈನಲ್ ಪಂದ್ಯ ಅತ್ಯಂತ ರೋಮಾಂಚಕವಾಗಿದ್ದು ಕುರ್ಚಿಯ ತುದಿಗೆ ಕುಳಿತುಕೊಳ್ಳುವಂತೆ ಮಾಡಿತು. ಈ ಪಂದ್ಯ ನೋಡಿದರೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪಂದ್ಯಗಳಿಗೆ ಕಡಿಮೆ ಇರಲಿಲ್ಲ. ಅಚ್ಚುಕಟ್ಟಾಗಿ ಟೂರ್ನಿ ನಡೆಸುವುದು ಸುಲಭದ ಕೆಲಸವಲ್ಲ. ಕ್ಲಬ್ ನಿರಂತರ ಇಂಥ ಟೂರ್ನಮೆಂಟ್ ನಡೆಸುತ್ತಿರಲಿ ಎಂದು ಆಶಿಸಿದರು.
ಪತ್ರಕರ್ತ ಬಸವರಾಜ ಕರುಗಲ್, ಕ್ಲಬ್ನ ಅಧ್ಯಕ್ಷ ವಿನೋದ ಚಿನ್ನಿನಾಯ್ಕರ್, ಮುಖಂಡ ಗಿರೀಶ್ ಮುಂಡಾದ ಮತ್ತಿತರರು ಮಾತನಾಡಿದರು. ಈರಣ್ಣ, ಗವಿ, ಚಂದ್ರು, ಸೂರಿ, ಶಿವು ನಿರ್ವಹಿಸಿದರು.
ಆರ್ಆರ್ಗೆ ವರವಾದ ವರುಣ; ಸಿಎಸ್ಕೆ ಮಡಿಲಿನಿಂದ ಜಾರಿ ಆರ್ಆರ್ ಕೈ ಸೇರಿದ ಕಪ್
ನಿಗದಿತ 12 ಓವರ್ಗಳ ಫೈನಲ್ ಪಂದ್ಯದ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ನಾಯಕ ಮಂಜುನಾಥ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಬೀಸಿದ ಸಿಎಸ್ಕೆ ಬಾಯ್ಸ್ ನಿಗದಿತ 12 ಓವರ್ಗಳಲ್ಲಿ 100 ರನ್ ಕಲೆ ಹಾಕಿದರು.
ನಂತರ ಬ್ಯಾಟಿಂಗ್ ಬಂದ ಆರ್ ಆರ್ ತಂಡದ ಹುಡುಗರಿಗೆ ವರುಣ ಅಡ್ಡಿ ಪಡಿಸಿದ. ಸುಮಾರು ಹದಿನೈದು ನಿಮಿಷ ಕಾಲ ಪಂದ್ಯ ಮಳೆಯಿಂದ ಸ್ಥಗಿತವಾಗಿತ್ತು. ಕೊನೆಗೂ ವರುಣಾರ್ಭಟ ನಿಂತಿತು. ಆಗ ಇದನ್ನು ವರವೆಂದು ಪರಿಗಣಿಸಿದ್ದ ಸಿಎಸ್ಕೆ ತಂಡ ಒತ್ತಡಕ್ಕೆ ಸಿಲುಕಿತು. ಜೊತೆ ಬ್ಯಾಡ್ಲೈಟ್ನ ಒತ್ತಡದಲ್ಲಿ ಬ್ಯಾಟ್ ಬೀಸಲು ಶುರು ಮಾಡಿದ ಆರ್ಆರ್ ದಾಂಡಿಗರು ಇನ್ನು ಒಂದು ಎಸೆತ ಬಾಕಿ ಇರುವಾಗಲೇ 101 ರನ್ ಕಲೆ ಹಾಕಿ ಏಕತಾ ಕಪ್ ಎತ್ತಿ ಹಿಡಿದರು. ಕೊಟೇಶ್ ನಾಯಕತ್ವದ ಸಿಎಸ್ಕೆ ಬಾಯ್ಸ್ ರನ್ನರ್ ಅಪ್ ಸ್ಥಾನ ಪಡೆದರು.