Home Blog Page 3117

ಕೊವಿಡ್-19: ಗದಗ ಜಿಲ್ಲೆಯ ಗುರುವಾರದ ಅಪ್ಡೇಟ್

0

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಡಿಸೆಂಬರ್‌ 10 ರವರೆಗಿನ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 141715 ಜನ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು 146758 ಮಾದರಿಗಳಲ್ಲಿ 134564 ಮಾದರಿಗಳು (ನೆಗೆಟಿವ್) ನಕಾರಾತ್ಮಕವಾಗಿವೆ. 1376 ಮಾದರಿಗಳ ವರದಿ ಬರಲು ಬಾಕಿ ಇದೆ.

ಜಿಲ್ಲೆಯಲ್ಲಿ ಇಂದಿನ 03 ಪ್ರಕರಣಗಳು ಸೇರಿದಂತೆ ಒಟ್ಟು 10818 ಕೊವಿಡ್-19 ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿವೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ
ಕೊವಿಡ್ ಸೋಂಕಿಗೆ 141 ಜನ ಮೃತಪಟ್ಟಿದ್ದು, ಇಂದಿನ 6 ಜನ ಸೇರಿದಂತೆ ಒಟ್ಟು 10613 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 64 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಲ್ಲಿ ರೈತರಿಂದ ಪ್ರತಿಭಟನೆ; ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಒತ್ತಾಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕರ್ನಾಟಕದಲ್ಲಿ ರೈತರ ಹೋರಾಟ ಮುಂದುವರೆದಿದೆ.

ಭೂ ಸುಧಾರಣಾ ಮಸೂದೆಯನ್ನು ವಿಧಾನಪರಿಷತ್‌ನಲ್ಲಿ ಅಂಗೀಕರಿಸಿದ್ದನ್ನು ವಿರೋಧಿಸಿ, ರಾಜ್ಯಪಾಲರು ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿ ರೈತ-ದಲಿತ-ಕಾರ್ಮಿಕ ಸಂಘಟನೆಗಳ ಐಕ್ಯಹೋರಾಟ ಸಮಿತಿಯಿಂದ ಗುರುವಾರ ರಾಜಭವನ ಚಲೋ ಹೋರಾಟ ಆರಂಭವಾಗಿದೆ.

ಗುರುವಾರ ಮುಂಜಾನೆಯೇ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿ ಜಮಾಯಿಸಿದ ಸಾವಿರಾರು ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈಲು ನಿಲ್ದಾಣದಿಂದ ಕೆ.ಆರ್.ಸರ್ಕಲ್ ಮತ್ತು ವಿಧಾನಸೌಧದ ಮುಂಭಾಗದಿಂದ ರಾಜಭವನ ತಲುಪಲು ಯೋಜಿಸಿದ್ದ ರೈತರನ್ನು ಸದ್ಯಕ್ಕೆ ಫ್ರೀಡಂಪಾರ್ಕ್‌ಬಳಿ ಪೊಲೀಸರು ತಡೆದಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಫ್ರೀಡಂಪಾರ್ಕ್ ರಸ್ತೆಯಲ್ಲಿ ವಾಹನ ಸಂಚಾರ ಸ್ತಭ್ದವಾಗಿದೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ `ಸರ್ಕಾರ ಕಾಯ್ದೆಯನ್ನು ಅಂಗೀಕರಿಸಿ ನಮ್ಮನ್ನು ಮಾತುಕತೆಗೆ ಕರೆದಿದೆ. ಇದು ಸರ್ಕಾರದ ಪೂರ್ವಯೋಜಿತ ನಾಟಕ. ಹಾಗಾಗಿ ನಾವು ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಹೋರಾಟ ಮುಂದುವರೆಸುತ್ತೇವೆ’ ಎಂದಿದ್ದಾರೆ.

ಕಬ್ಬು ಬೆಳೆಗಾರರ ಸಂಘದ ಕುರುಬೂರು ಶಾಂತಕುಮಾರ್ ಮಾತನಾಡಿ `ಈ ಜನವಿರೋಧಿ ಕಾಯ್ದೆಗೆ ರಾಜ್ಯಪಾಲರು ಸಹಿ ಹಾಕಬಾರದು. ಒಂದು ವೇಳೆ ಸಹಿ ಹಾಕಿದ್ದೆ ಆದಲ್ಲಿ ದೆಹಲಿ ರೈತರ ಮಾದರಿಯಲ್ಲಿ ಬೆಂಗಳೂರನ್ನೂ ಮುತ್ತಿಗೆ ಹಾಕಿ ಹೋರಾಟ ಮಾಡುತ್ತೇವೆ. ಮಾಜಿ ಸಿಎಂ ಕುಮಾರಸ್ವಾಮಿಯವರು ನಾಟಕ ನಿಲ್ಲಿಸಬೇಕು’ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿದರು.

ಭೂ ಒಡೆತನ ಯೋಜನೆ, ಜಮೀನಿನ ಜಂಟಿ ಪರಿಶೀಲನೆಗೆ ಕ್ರಮ ಕೈಗೊಳ್ಳಿ : ಸುರಳ್ಕರ್

0

ವಿಜಯಸಾಕ್ಷಿ ಸುದ್ದಿ ಕೊಪ್ಪಳ:
ಭೂ ಒಡೆತನ ಯೋಜನೆಯಡಿ ಖಾಸಗಿ ಜಮೀನು ಖರೀದಿಸಿದಾಗ ಜಮೀನಿನ ಮಣ್ಣಿನ ವಿಧ, ನೀರಿನ ಲಭ್ಯತೆ ಇತ್ಯಾದಿಗಳ ಬಗ್ಗೆ ಕಂದಾಯ ಇಲಾಖೆಯವರೊಂದಿಗೆ ಜಂಟಿ ಪರಿಶೀಲಿಸಿ, ಭೂ ಮಾಲೀಕರಿಂದ ಭೂಮಿ ಖರೀದಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ದೌರ್ಜನ್ಯ ತಡೆ ಹಾಗೂ ನಿಯಂತ್ರಣ ಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಿಧ ಅಭಿವೃದ್ಧಿ ನಿಗಮಗಳಿಂದ ಭೂ ಒಡೆತನ ಯೋಜನೆಯಡಿ ಹಂಚಿಕೆಯಾದ ಜಮೀನುಗಳನ್ನು ಫಲಾನುಭವಿಗಳು ಪರಭಾರೆ ಮಾಡಿದ್ದಲ್ಲಿ ಅವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಿ. ದೌರ್ಜನ್ಯ ಪ್ರಕರಣಗಳಲ್ಲಿ ಅಪರಾಧ ನಿರ್ಣಯ ಪ್ರಮಾಣ ಅತ್ಯಂತ ಕಡಿಮೆಯಿದ್ದು, ಕಳೆದ 3 ವರ್ಷಗಳ ದೌರ್ಜನ್ಯ ಪ್ರಕರಣದ ಅಪರಾಧ ನಿರ್ಣಯ ಮತ್ತು ಖುಲಾಸೆಗೆ ಸಂಬಂಧಿಸಿದಂತೆ ಅಂಕಿ ಅಂಶಗಳ ವಿಶ್ಲೇಷನಾತ್ಮಕ ವರದಿ ಸಿದ್ದಪಡಿಸಿ ಸಲ್ಲಿಸುವಂತೆ ಅವರು ತಿಳಿಸಿದರು.

ತಪ್ಪು ಮಾಹಿತಿ ನೀಡಿ ಪಡೆದ ಸುಳ್ಳು ಜಾತಿ ಪ್ರಮಾಣ ಪತ್ರಗಳ ಆಧಾರದ ಮೇಲೆ ವಿತರಿಸಿದ ಸರ್ಕಾರದ ಸಹಾಯಧನ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಸ್ಥಿರ/ಚರ ಆಸ್ತಿಗಳನ್ನು ಜಪ್ತಿ ಮಾಡಿ ಹಣವನ್ನು ಸರ್ಕಾರಕ್ಕೆ ಭರಣ ಮಾಡಲು ಕ್ರಮ ಕೈಗೊಳ್ಳಿ. ಭವನ, ಕಾಲೋನಿ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯಲ್ಲಿ ಮುಕ್ತಾಯಗೊಳಿಸಿ ಎಂದು ಅವರು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಟಿ.ಶ್ರೀಧರ ಮಾತನಾಡಿ, ಒಟ್ಟು 26 ಪ್ರಕರಣಗಳಿಗೆ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, 3 ಪ್ರಕರಣಗಳು ಒಂದು ತಿಂಗಳಿಗಿಂತ ಹೆಚ್ಚಿನ ಅವಧಿಯ ಬಾಕಿ ಪ್ರಕರಣಗಳು, 1 ಬಿ ಫಾಲ್ಸ್ ಹಾಗೂ 3 ಇತರೆ ಪ್ರಕರಣಗಳಾಗಿವೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನವೀನ್ ಶಿಂತ್ರೆ ಮಾತನಾಡಿ, 2020 ರ ಕ್ಯಾಲೆಂಡರ್ ವರ್ಷದಲ್ಲಿ ನವ್ಹಂಬರ್ ಅಂತ್ಯದವರೆಗೆ ದಾಖಲಾಗಿರುವ 34 ಪ್ರಕರಣಗಳಲ್ಲಿ 23 ಪ್ರಕರಣಗಳಿಗೆ ರೂ.33 ಲಕ್ಷ ಪರಿಹಾರ ಮಂಜೂರಿಸಿದ್ದು, ಬಾಕಿ ಪ್ರಕರಣಗಳಿಗೆ ಅನುದಾನ ಕೊರತೆಯ ಕಾರಣ ಪರಿಹಾರ ಪಾವತಿ ಮಾಡಲಾಗಿಲ್ಲ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಸಿಇಒ ರಘುನಂದನ್ ಮೂರ್ತಿ, ಸಹಾಯಕ ಆಯುಕ್ತರಾದ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ಬಿ.ಸಿ.ಪಾಟೀಲರಿಗೆ ಪರ್ಸಂಟೇಜ್ ಕೊಟ್ರೇನೇ ಕೆಲಸ ಆಗುತ್ತಂತೆ!!

ಇದನ್ನ ಹೇಳ್ತಿರೋದು ನಾವಲ್ಲ, ಸಂಸದರ ಪತ್ರದಲ್ಲಿದೆ ಶಾಕಿಂಗ್ ನ್ಯೂಸ್

ವಿಜಯಸಾಕ್ಷಿ ಸುದ್ದಿ ಕೊಪ್ಪಳ:
ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ‌.ಪಾಟೀಲ ಒಂದಿಲ್ಲೊಂದು ವಿಷಯದಲ್ಲಿ ಸದಾ ಸುದ್ದಿಯಲ್ಲಿ ಇರ್ತಾರೆ ಅನ್ನೋದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ.

ಕೃಷಿ ಇಲಾಖೆ ಅಧಿಕಾರಿಗಳು ಅವರ ವಿರುದ್ಧ ಸಿಎಂಗೆ ಪತ್ರ ಬರೆದದ್ದು, ಈಚೆಗೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರನ್ನು ಹೇಡಿಗಳು ಎಂದು ಹೇಳಿಕೆ ನೀಡಿದ್ದು ಸಚಿವ ಬಿ‌.ಸಿ.ಪಾಟೀಲ ಹೆಸರು ಬಿಸಿ ಬಿಸಿ ಸುದ್ದಿಯಲ್ಲಿ ಕಾಣಿಸಿಕೊಂಡಿತ್ತು.

ಈಗ ಸಚಿವರ ಕಚೇರಿಯ ಒಳ ವಿಷಯವೊಂದು ಹೊರ ಬಿದ್ದಿದೆ. ನವೆಂಬರ್ 24ರಂದು ಸಚಿವ ಬಿ.ಸಿ.ಪಾಟೀಲರಿಗೆ ಸಂಸದ ಕರಡಿ ಸಂಗಣ್ಣನವರು ಬರೆದ ಪತ್ರ ಇದೀಗ ವೈರಲ್ ಆಗಿದೆ.

ಡಿಸೆಂಬರ್ 5ರಂದು ಸಚಿವರ ಕಚೇರಿ ತಲುಪಿರುವ ಪತ್ರದಲ್ಲಿ ಸಚಿವರ ಆಪ್ತ ಸಹಾಯಕ ರಮೇಶ್ ಜ್ಯೋತಿ ಎಂಬುವವರ ಬಗ್ಗೆ ಸಂಸದರು ವಿವರಿಸಿದ್ದಾರೆ.

ಸಂಸದರು ಪತ್ರ ಬರೆಯುವ ಅಗತ್ಯ ಇರಲಿಲ್ಲ
ಸಂಸದರು ಇದನ್ನು ಸರಿಪಡಿಸುವ ಹಾಗಿದ್ದರೆ ಮುಖತಃ ಇಲ್ಲವೇ ಫೋನ್ ಮಾಡಿ ವಿಷಯ ತಿಳಿಸಬಹುದಿತ್ತು. ಅದನ್ನು ಬಿಟ್ಟು ಪತ್ರ ಬರೆದು, ಅದನ್ನು ಪತ್ರಿಕೆಗಳಿಗೆ ಬಿಡುಗಡೆ‌ ಮಾಡುವ ಅಗತ್ಯ ಇರಲಿಲ್ಲ. ವ್ಯವಸ್ಥೆ ಸರಿ ಇಲ್ಲ. ಕ್ಲರ್ಕ್ ಇಟ್ಟುಕೊಂಡು ಸಚಿವಗಿರಿ ಮಾಡ್ಲಾ?
-ಬಿ.ಸಿ.ಪಾಟೀಲ, ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ, ಕೊಪ್ಪಳ.

ರಮೇಶ್ ಜ್ಯೋತಿ ಸಚಿವರ ಕಚೇರಿಯನ್ನು ಮಕ್ಕಳ ದರ್ಬಾರ್‌ಗೆ ಬಳಸಿಕೊಂಡಿದ್ದಾರೆ. ಅಪರೂಪಕ್ಕೆ ಕಚೇರಿಯಲ್ಲಿ ಕಾಣಿಸುವ ಅವರು ಮಲಗಿರುತ್ತಾರೆ. ಸಾರ್ವಜನಿಕರು, ರೈತರು ಕೆಲಸ ಕಾರ್ಯಗಳ ಕುರಿತು ಹೇಳಿದರೆ ಸಚಿವರಿಗೆ ಪರ್ಸಂಟೇಜ್ ಕೊಟ್ಟರೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ.

ಆದ್ದರಿಂದ ತಕ್ಷಣವೇ ರಮೇಶ್ ಜ್ಯೋತಿ ಎಂಬಾತನನ್ನು ಆಪ್ತ ಸಹಾಯಕ ಹುದ್ದೆಯಿಂದ ತೆಗೆದು ಹಾಕಿ ಎಂದು ಕರಡಿ ಸಂಗಣ್ಣನವರು ಸಚಿವ ಬಿ.ಸಿ.ಪಾಟೀಲ ಅವರನ್ನು ಕೋರಿದ್ದಾರೆ.

ಈ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಮತ್ತೊಮ್ಮೆ ಸಚಿವ ಬಿ.ಸಿ.ಪಾಟೀಲ ಸುದ್ದಿಯಲ್ಲಿದ್ದಾರೆ.

ಗ್ರಾಮ ಪಂಚಾಯತ ಚುನಾವಣೆ; ಬುಧವಾರ 135 ನಾಮಪತ್ರ ಸಲ್ಲಿಕೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ

ಜಿಲ್ಲೆಯ ಮೊದಲ ಹಂತದ 53 ಗ್ರಾಮ ಪಂಚಾಯತಗಳ 801 ಸ್ಥಾನಗಳ ಚುನಾವಣೆಯು ಡಿ.22 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಯ ಮೂರನೆಯ ದಿನವಾದ ಬುಧವಾರ 135 ನಾಮಪತ್ರಗಳು ಸಲ್ಲಿಕೆಯಾಗಿವೆ. ಬುಧವಾರದ ವರೆಗೆ (ಡಿ.9) ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಒಟ್ಟು 158 ನಾಮಪತ್ರಗಳು ಸಲ್ಲಿಕೆಯಾಗಿವೆ.

ಗದಗ ತಾಲ್ಲೂಕಿನ 26 ಗ್ರಾಮ ಪಂಚಾಯತಿಯ 438 ಸ್ಥಾನಗಳಿಗೆ 77 ನಾಮಪತ್ರ, , ಲಕ್ಷ್ಮೇಶ್ವರ ತಾಲ್ಲೂಕಿನ 13 ಗ್ರಾಮ ಪಂಚಾಯತಿಯ 174 ಸ್ಥಾನಗಳಿಗೆ 43, ಹಾಗೂ ಶಿರಹಟ್ಟಿ ತಾಲ್ಲೂಕಿನ 14 ಗ್ರಾಮ ಪಂಚಾಯತಿಯ 189 ಸ್ಥಾನಗಳಿಗೆ 38 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿಗಳ ಚುನಾವಣಾ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ಅಧೀಕ್ಷಕರಾಗಿ ಮುಂಬಡ್ತಿ ಹೊಂದಿದ ಎಂ.ನೂರುದ್ದೀನ್ಗೆ ಬೀಳ್ಕೊಡುಗೆ

0

ವಿಜಯಸಾಕ್ಷಿ ಸುದ್ದಿ, ಕಂಪ್ಲಿ

ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದ ಭೂಮಾಪನ ಇಲಾಖೆಯಲ್ಲಿ ಸಿರುಗುಪ್ಪ ಭೂಮಾಪನ ಇಲಾಖೆಯ ಅಧೀಕ್ಷಕರಾಗಿ ಮುಂಬಡ್ತಿ ಹೊಂದಿದ ಎಂ.ನೂರುದ್ದೀನ್ ಅವರಿಗೆ ಕಂಪ್ಲಿ ತಾಲ್ಲೂಕು ಆಡಳಿತ ಹಾಗೂ ಸರ್ವೆ ಇಲಾಖೆ ನೇತೃತ್ವದಲ್ಲಿ ಮಂಗಳವಾರ ಸನ್ಮಾನಿಸುವ ಮೂಲಕ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂ.ನೂರುದ್ದೀನ್ ಕಂಪ್ಲಿಯ ಸರ್ವೆ ಇಲಾಖೆಯಲ್ಲಿ ಸರ್ವೆ ಇಲಾಖೆಯ ತಪಾಸಕರಾಗಿ(ಸರ್ವೆ ಸೂಪರ್ವೈಸರ್) ಎಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಲಾಯಿತು. ಕಂಪ್ಲಿ ಜನತೆಯ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿರುವೆ. ಇಲ್ಲಿನ ಸರ್ವೆ ಇಲಾಖೆ ಸಿಬ್ಬಂದಿಗಳ ಸಹಕಾರವು ಹೆಚ್ಚಿನ ಮಟ್ಟದಲ್ಲಿ ದೊರೆಯಿತು. ಈಗ ಸಿರುಗುಪ್ಪ ಸರ್ವೆ ಇಲಾಖೆಯಲ್ಲಿ ಅಧೀಕ್ಷಕರಾಗಿ ಮುಂಬಡ್ತಿ ಸಿಕ್ಕ ಹಿನ್ನಲೆ ಅನಿವಾರ್ಯವಾಗಿ ಇಲ್ಲಿಂದ ವರ್ಗಾವಣೆಯಾಗಬೇಕಾಯಿತು. ಮುಂದಿನ ದಿನದಲ್ಲಿ ಕಂಪ್ಲಿಯಲ್ಲಿ ಸೇವೆ ಮಾಡಲು ಅವಕಾಶ ದೊರೆತರೆ, ಮತ್ತೇ ಬರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಗೌಸಿಯಾಬೇಗಂ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ್, ಶಿರಸ್ತೇದಾರರಾದ ಪಂಪಾಪತಿ, ಎಸ್.ರೇಖಾಮಠ್, ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಮಹ್ಮದ್ ಶರೀಫ್, ಸರ್ವೆ ಅಧಿಕಾರಿಗಳಾದ ಎಂ.ಟಿ.ಮಹಾಂತೇಶ್, ನಿರಂಜನ್, ಮಚ್ಚೇಂದ್ರಪ್ಪ, ಅನೀಲ್, ಅಂಥೋನಿ, ಅಜ್ಜಣಾಚಾರ್, ಹೆಚ್.ಕರಿಬಸಪ್ಪ, ವಿರೇಶಪ್ಪ, ಆನಂದ, ಕರುಣಾಕರ್ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಶಿಕ್ಷಣ ಸಚಿವ ಸುರೇಶ್ ಕುಮಾರ ಮಲತಾಯಿ ಧೋರಣೆ ಖಂಡಿಸಿ ಗುರುವಾರ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಕೊರೋನಾ ಸೋಂಕಿನಿಂದ ಸಾಕಷ್ಟು ಆರ್ಥಿಕ ಸಂಕಷ್ಟ ಹೊರತಾಗಿ ಶಾಲೆಗಳು ಓಪನ್ ಇಲ್ಲದೆ ಮಕ್ಕಳಿಗೆ ಮಾನಸಿಕ ಹಾಗೂ ಶೈಕ್ಷಣಿಕ ಸಮಸ್ಯೆಗಳು ಎದುರಾಗಿವೆ. ಆದ್ರೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೊಂದಲಮಯ ಹೇಳಿಕೆಯನ್ನು ನೀಡುವ ಮುಲಕ ಮಲತಾಯಿ ಧೋರಣೆಯನ್ನು ತೋರಿದ್ದಾರೆ ಎಂದು ಕೊಪ್ಪಳ ಜಿಲ್ಲೆಯ ಖಾಸಗಿ ಅನುದಾನರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.

ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷ ರಾಘವೇಂದ್ರ ಪಾನಘಂಟಿ ಮಾತನಾಡಿ, ಖಾಸಗಿ ಶಾಲೆಗಳ ಬಗ್ಗೆ ಸರ್ಕಾರಕ್ಕೆ ಚಿಂತನೆ ಇಲ್ಲ. ಅವರ ಸಮಸ್ಯೆಗಳಿ ಪರಿಹಾರವಾಗಲಿ ಅಥವಾ ನೆರವಿಗೆ ಬಾರದೇ ಇರುವುದು ಶೋಚನೀಯ, ಹಾಗಾಗಿ ಡಿಸೆಂಬರ್ 11 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ವಿವಿಧ ಬೇಡಿಕೆಗೆ ಒತ್ತಾಯಿಸಲಿದ್ದೇವೆ ಎಂದರು.

ಶಾಲಾ ನವೀಕರಣವನ್ನು ನಿರ್ಬಂಧವಿಲ್ಲದೆ ಮುಂದಿನ ಐದು ವರ್ಷಗಳಿಗೆ ವಿಸ್ತರಣೆ ಮಾಡುವುದು, ಕಟ್ಟಡ ಹಾಗೂ ವಾಹನಗಳ ಸಾಲ ಮರುಪಾವತಿಗೆ ಒಂದು ವರ್ಷ ವಿನಾಯಿತ ನೀಡುವುದು, ಖಾಸಗಿ ಶಿಕ್ಷಕರಿಗೆ ಸಿಬ್ಬಂದಿಗೆ 10000 ರೂ ಸಂಕಷ್ಟ ಪರಿಹಾರ, ಆರ್ ಟಿ ಇ ಶುಲ್ಕ ಮರುಪಾವತಿ, 25 ವರ್ಷಗಳಿಂದ ನಡೆಯುತ್ತಿರುವ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ಕಲ್ಯಾಣ ಕರ್ನಾಟಕಕ್ಕೆ ಒಳಪಡುವ ಎಲ್ಲಾ ಶಾಲೆಗಳಿಗೆ 371 ಜೆ ಅಡಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ರಾಜ್ಯದಲ್ಲಿ ಅಧಿಕೃತ ಶಾಲೆ ಆರಂಭವಾಗುವವರೆಗೆ ಸಾಲದ ಕಂತುಗಳು, ವಾಹನ ತೆರೆಗೆ, ಇನ್ಷುರೆನ್ಸ್ ಪಾವತಿಗೆ ವಿನಾಯಿತಿ ಇನ್ನಿತರ ಹಲವು ಬೇಡಿಕೆಗಳ ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಲಾಗುವುದು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಖಾಸಗಿ ಶಾಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ, ಪ್ರಹ್ಲಾದ್ ಅಗಳಿ, ತಾಲೂಕ ಅಧ್ಯಕ್ಷ ಶಾಹೀದ್ ತಹಶೀಲ್ದಾರ್, ನಿರ್ದೇಶಕ ಎ ಹೆಚ್ ಆತನೂರು, ದಾನಪ್ಪ ಕವಲೂರು ಸೇರಿದಂತೆ ಇನ್ನಿತರರು ಇದ್ದರು.

ಗ್ರಾಮ ಪಂಚಾಯತ ಚುನಾವಣೆ-2020-
ಮದ್ಯ ಅಕ್ರಮ ಸಾಗಣೆ ಮಾಡಿದರೆ ಹುಷಾರ್! ಸುರಳ್ಕರ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ

ಅಬಕಾರಿ ಇಲಾಖೆ ಹಾಗೂ ಜಿಲ್ಲೆಯ ಎಲ್ಲ ವಿವಿಧ ಸನ್ನದುದಾರರೊಂದಿಗೆ ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ ಚುನಾವಣೆ-2020 ರ ಪ್ರಯುಕ್ತ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಬಕಾರಿ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸನ್ನದುದಾರರಿಗೆ ನಿರ್ದೇಶನಗಳನ್ನು ನೀಡುವುದರ ಜೊತೆಗೆ ಕೆಲ ಎಚ್ಚರಿಕೆ ನೀಡಿದರು.

ಅದರಂತೆ ಜಿಲ್ಲೆಯ ಎಲ್ಲ ವಿವಿಧ ಸನ್ನದುದಾರರು ಗ್ರಾಮ ಪಂಚಾಯತ್ ಚುನಾವಣೆ-2020ರ ಪ್ರಯುಕ್ತ ಚುನಾವಣಾ ಆಯೋಗವು ಘೋಷಿಸುವ ಮದ್ಯ ಮುಕ್ತ ದಿನ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಈ ಅವಧಿಯಲ್ಲಿ ಯಾವುದೇ ರೀತಿಯ ಅಕ್ರಮ ಮದ್ಯ ಮಾರಾಟಕ್ಕೆ ಆಸ್ಪದ ನೀಡಬಾರದು. ಹಾಗೊಂದು ವೇಳೆ ಮಾಡಿದರೆ ಪರವಾನಗಿ ರದ್ದುಪಡಿಸಲಾಗುವುದು ಹುಷಾರಾಗಿರಿ ಎಂದು ಸೂಚನೆ ನೀಡಿದರು.

ಮದ್ಯ ಮಾರಾಟ ಮಳಿಗೆಗಳಿಂದ ಮದ್ಯವು ಚುನಾವಣಾ ಸಂಬಂಧ ಬಳಕೆಯಾಗದಂತೆ ಕ್ರಮ ವಹಿಸಬೇಕು. ಸನ್ನದು ಸ್ಥಳದಲ್ಲಿ ಯಾವುದೇ ಅಕ್ರಮಕ್ಕೆ ಆಸ್ಪದ ನೀಡಬಾರದು. ಮದ್ಯದ ಅಂಗಡಿಗಳಲ್ಲಿ ಮದ್ಯ ಎತ್ತುವಳಿಯು ಅಸಹಜ ಅಥವಾ ಅಸಾಧಾರಣವೆನಿಸಿದ್ದಲ್ಲಿ ಸದರಿ ಮದ್ಯದ ಅಂಡಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ನ್ಯೂನ್ಯತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು. ಸನ್ನದು ಸ್ಥಳ ಹೊರತುಪಡಿಸಿ ಅನಧಿಕೃತವಾಗಿ ಬೇರೆ ಸ್ಥಳಗಳಲ್ಲಿ ಮದ್ಯ ಸಂಗ್ರಹಿಸದಂತೆ ಮುನ್ನೆಚ್ಚರಿಕೆ ಕ್ರಮವನ್ನು ಜಿಲ್ಲೆಯ ಎಲ್ಲ ವಿವಿಧ ಸನ್ನದುದಾರರು ವಹಿಸಬೇಕು ಎಂದು ತಿಳಿಸಿದರು.

ಮದ್ಯ ಮಾರಾಟ ಸನ್ನದುಗಳಿಗೆ ನಿಗದಿಪಡಿಸಿದ ಸಮಯಪಾಲನೆ ಮಾಡಬೇಕು. ಸಮಯ ಪಾಲನೆ ಮಾಡದೇ ಇರುವಂತಹ ಸನ್ನದುದಾರರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು. ಸನ್ನದು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಮಾಜ ಘಾತುಕ ವ್ಯಕ್ತಿಗಳು ಮದ್ಯ ಮಾರಾಟ ಮಳಿಗೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕೃತ್ಯಗಳನ್ನು ಎಸಗದಂತೆ ಕ್ರಮ ವಹಿಸಬೇಕು. ನಿಯಮನುಸಾರ ಒಬ್ಬ ವ್ಯಕ್ತಿ ಮದ್ಯ ಖರೀದಿಸಬಹುದಾದ ಪ್ರಮಾಣಕ್ಕಿಂತಲೂ ಹೆಚ್ಚು ಮದ್ಯವನ್ನು ನೀಡಬಾರದು ಹಾಗೂ ಪದೇ ಪದೇ ಮದ್ಯವನ್ನು ಒಬ್ಬ ವ್ಯಕ್ತಿ ತೆಗೆದುಕೊಳ್ಳುತ್ತಿರುವುದನ್ನು ಗಮನಿಸಿ ಅಂತಹ ವ್ಯಕ್ತಿಗಳಿಗೆ ಮದ್ಯ ನೀಡದಂತೆ ಹಾಗೂ ಸದರಿ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ಸನ್ನದುದಾರರು ಇಲಾಖೆ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.

ಕೋವಿಡ್-19 ಕೊರೋನಾ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ವಿವಿಧ ಸನ್ನದುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದರೊಂದಿಗೆ ಹೆಚ್ಚು ಹೆಚ್ಚು ಜನರು ಸೇರುವಿಕೆಯನ್ನು ತಡೆಗಟ್ಟಬೇಕು. ಮಾಸ್ಕ್ನ್ನು ಕಡ್ಡಾಯವಾಗಿ ಧರಿಸುವಂತೆ ನೋಡಿಕೊಳ್ಳಬೇಕು. ಅಬಕಾರಿ ಉಪ ಅಧೀಕ್ಷಕರು ಹಾಗೂ ಜಿಲ್ಲೆಯ ಎಲ್ಲಾ ಅಧೀನ ಅಬಕಾರಿ ಅಧಿಕಾರಿಗಳು ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಪ್ರವೃತ್ತರಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಅಬಕಾರಿ ಉಪ ಆಯುಕ್ತರು ಮಾತನಾಡಿ, ಅನಧಿಕೃತ ಮದ್ಯ ಮಾರಾಟ ಮತ್ತು ಚುನಾವಣಾ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಅಬಕಾರಿ ಇಲಾಖೆಯ ಇ-ಮೇಲ್ ವಿಳಾಸ : dckpl-ex-ka@nic.in & dcekoppal@gmail.com ಕ್ಕೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ವಿವಿಧ ಸನ್ನದುದಾರರು ಉಪಸ್ಥಿತರಿದ್ದರು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನಕಗಿರಿ ಶಾಸಕರ “ದಡ್ಡ” ನಡೆ! ರೈತರಿಗೆ ಸೌಲಭ್ಯ ನೀಡುವಲ್ಲೂ ದಢೇಸೂಗೂರು “ಹಸ್ತಾ” ಕ್ಷೇಪ?

-ಈರುಳ್ಳಿ ಸಂಸ್ಕರಣಾ ಘಟಕ ನಿರ್ಮಾಣ ಫಲಾನುಭವಿಗಳ ಪಟ್ಟಿಗೆ ಕೊಕ್ಕೆ
-ಅಧ್ಯಕ್ಷರಲ್ಲದಿದ್ದರೂ ನಾನೇ ಫೈನಲ್ ಮಾಡ್ತಿನಿ ಎಂದು ಅಧಿಕಾರಿಗಳ ಮೇಲೆ ದಬ್ಬಾಳಿಕೆ

ಭಾಗ-01

-ಬಿಯಸ್ಕೆ.
ವಿಜಯಸಾಕ್ಷಿ ವಿಶೇಷ ವರದಿ, ಕೊಪ್ಪಳ

ರೈತವಿರೋಧಿ ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಅನ್ನದಾತರ ಆಕ್ರೋಶ ಭುಗಿಲೆದ್ದಿದೆ. ಇಂಥ ಸಂಕಷ್ಟದ ನಡುವೆಯೂ ರಾಜ್ಯ ಸರಕಾರ ರೈತರಿಗೆ ಅನುಕೂಲವಾಗಲಿ ಎನ್ನುವ ಸದುದ್ದೇಶದಿಂದ ಕೆಲವು ಸೌಲಭ್ಯಗಳನ್ನು ನೀಡಲು ಮುಂದಾಗಿದೆ. ಆದರೆ ದೇವರು ವರ ಕೊಟ್ಟರೂ ಪೂಜಾರಿ ಬಿಡ ಎನ್ನುವಂತಾಗಿದೆ ಜನರ ಸ್ಥಿತಿ, ಇದಕ್ಕೆ ತಾಜಾ ಉದಾಹರಣೆ ಈರುಳ್ಳಿ ಸಂಸ್ಕರಣಾ ಘಟಕ ನಿರ್ಮಾಣದ ಫಲಾನುಭವಿಗಳ ಪಟ್ಟಿ. ಎಲ್ಲದರಲ್ಲೂ ಮೂಗು ತೂರಿಸುವುದು ಚುನಾಯಿತ ಜನಪ್ರತಿನಿಧಿಗಳ ದೊಡ್ಡಸ್ತಿಕೆ. ಆದರೆ ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು ದೊಡ್ಡಸ್ತಿಕೆಯ ಜೊತೆಗೆ ತಮಗಿರುವ ದಡ್ಡತನವನ್ನು ಪ್ರದರ್ಶಿಸುತ್ತಿದ್ದಾರೆ.

ಈರುಳ್ಳಿ ಬೆಳೆಗಾರರ ಸಂಕಷ್ಟ ಅರಿತ ಸರಕಾರ ಈರುಳ್ಳಿ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ರೈತರಿಗೆ ಸಬ್ಸಿಡಿ ನೀಡುವ ಸೌಲಭ್ಯ ಆರಂಭಿಸಿದೆ. ಇದಕ್ಕಾಗಿ ತೋಟಗಾರಿಕಾ ಇಲಾಖೆಗೆ ಗುರಿಯನ್ನೂ ನೀಡಿ ರೈತರಿಗೆ ಅನುಕೂಲ ಕಲ್ಪಿಸಬೇಕೆನ್ನುವುದು ಸರಕಾರದ ಮಹಾತ್ವಾಕಾಂಕ್ಷೆ. ಸುಮಾರು 1.25 ಲಕ್ಷ ರೂ.ವೆಚ್ಚದಡಿ ನಿರ್ಮಾಣವಾಗುವ ಪ್ರತಿ ಘಟಕಕ್ಕೆ ಸರಕಾರ ಸುಮಾರು 85 ಸಾವಿರ ರೂಪಾಯಿ ಸಬ್ಸಿಡಿ ನೀಡುತ್ತದೆ. ಇದಕ್ಕೆ ಈರುಳ್ಳಿ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿ ಅರ್ಹರನ್ನ ಫಲಾನುಭವಿಗಳನ್ನಾಗಿ ಮಾಡಲಾಗುತ್ತದೆ.

ಈರುಳ್ಳಿ ಸಂಸ್ಕರಣಾ ಘಟಕ ಏಕೆ ಬೇಕು?

ಈರುಳ್ಳಿ ಬೆಲೆ ಕುಸಿದು ಬೆಳೆಗಾರರು ಈರುಳ್ಳಿಯನ್ನು ಮಾರಾಟ ಮಾಡಲಾಗದೇ ರಸ್ತೆಗೆ ಚೆಲ್ಲಿ ನಷ್ಟ ಅನುಭಬಿಸುವುದನ್ನು ತಪ್ಪಿಸಲು ರಾಜ್ಯ ಸರಕಾರ ಈರುಳ್ಳಿಯನ್ನು ಸಂರಕ್ಷಿಸಲು ಅಗತ್ಯವಿರುವ ವಾತಾವರಣದ ಜೊತೆಗೆ ಜಮೀನಿನಲ್ಲೇ ಈರುಳ್ಳಿ ಸಂಸ್ಕರಿಸುವ ಕಟ್ಟಡ ನಿರ್ಮಿಸಲು ಸಹಾಯಧನ ನೀಡುತ್ತದೆ. ಇದರಿಂದ ರೈತರು ಹಾಳಾಗಬಹುದಾದ ಈರುಳ್ಳಿಯನ್ನು ಸಂರಕ್ಷಿಸಬಹುದು, ಜೊತೆಗೆ ಆ ಕಟ್ಟಡವನ್ನು ಕೃಷಿಪರ ವಿವಿಧೋದ್ದೇಶಗಳಿಗೂ ಬಳಸಬಹುದು ಎಂಬ ಆಲೋಚನೆಯಿಂದ ಸರಕಾರ ಇದನ್ನು ಆರಂಭಿಸಿದೆ. ಆದರೆ ಈ ಯೋಜನೆಯಲ್ಲೂ ಕೆಲ ಚುನಾಯಿತ ಜನಪ್ರತಿನಿಧಿಗಳು ಅನರ್ಹರ ಹೆಸರನ್ನು ಸೇರಿಸಲು, ಆ ಮೂಲಕ ಸರಕಾರದ ಸಬ್ಸಿಡಿಯಲ್ಲೂ ಪಾಲು ಪಡೆಯಲು ಹುನ್ನಾರ ನಡೆಸಿರುವುದು ಬೆಳಕಿಗೆ ಬಂದಂತಾಗಿದೆ.

ರೈತರನ್ನೇ ವಿಭಜನೆ ಮಾಡಿದ ಶಾಸಕ?

ತೋಟಗಾರಿಕಾ ಇಲಾಖೆ ಯೋಜನೆಯಡಿ ಅರ್ಜಿ ಆಹ್ವಾನಿಸಿದಾಗ ಕೊಪ್ಪಳ ಜಿಲ್ಲಾದ್ಯಂತ ಸಾವಿರಕ್ಕೂ ಅರ್ಜಿ ಬಂದಿವೆ. ಸರಕಾರ ಜಿಲ್ಲೆಗೆ ಕೊಟ್ಟಿರುವ ಗುರಿ 300. ಈಗಾಗಲೇ ಇಲಾಖೆ ಗುರಿ ತಲುಪಿದ್ದು, ಈಗ ಕನಕಗಿರಿ ಹಾಗೂ ಕುಷ್ಟಗಿ ಭಾಗಗಳಿಂದ ಬೇಡಿಕೆ ಬರುತ್ತಿದೆ. ಮೊದಲು ಕುಷ್ಟಗಿ, ಗಂಗಾವತಿಯಲ್ಲಿ ಅಷ್ಟಾಗಿ ಬೇಡಿಕೆ ಈರಲಿಲ್ಲ. 2020-21ನೇ ಸಾಲಿನಡಿ ಯೋಜನೆಯ ಪ್ರಯೋಜನ ಪಡೆಯಲು ಕೊಪ್ಪಳ ತಾಲೂಕಿನಿಂದ 600, ಕುಷ್ಟಗಿ ತಾಲೂಕಿನಿಂದ 150, ಗಂಗಾವತಿ ತಾಲೂಕಿನಿಂದ 60, ಯಲಬುರ್ಗಾ ತಾಲೂಕಿನಿಂದ 100 ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದಿಂದ 90 ಅರ್ಜಿಗಳು ಸಲ್ಲಿಕೆಯಾಗಿವೆ.

ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ಇರದ ತಾರತಮ್ಯ ಕನಕಗಿರಿ ಕ್ಷೇತ್ರದಲ್ಲಿ ಕಂಡು ಬಂದಿದೆ. ಫಲಾನುಭವಿಗಳ ಆಯ್ಕೆಪಟ್ಟಿ ತಯಾರಿಸಬೇಕಾದವರು ಆಯಾ ಭಾಗದ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು. ಆದರೆ ಕನಕಗಿರಿ ಕ್ಷೇತ್ರದಲ್ಲಿ ಅಧಿಕಾರಿಗಳ ಕರ್ತವ್ಯದಲ್ಲಿ ಮೂಗು ತೂರಿಸುವ ಶಾಸಕ ಬಸವರಾಜ ದಢೇಸೂಗೂರು ಫಲಾನುಭವಿ ರೈತರನ್ನೇ ಇವರು ಕಾಂಗ್ರೆಸ್ ನವರು, ಅವರು ಬಿಜೆಪಿ ಪರ ರೈತರು ಎಂದು ವಿಭಜನೆ ಮಾಡುತ್ತಿದ್ದು, ತಮಗೆ ಬೇಕಾದವರಿಗೆ, ಹಾಗೂ ತಾವು ಬಯಸಿದ್ದನ್ನು ಕೊಡುವವರ ಹೆಸರನ್ನು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲು ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಈ ಕುರಿತು ಶಾಸಕ ಬಸವರಾಜ ದಢೇಸೂಗೂರು ಅವರ ಪ್ರತಿಕ್ರಿಯೆ ಪಡೆಯಲು ಅವರ ಮೊಬೈಲ್ ಸಂಖ್ಯೆಗೆ ಹಲವು ಬಾರಿ ಸಂಪರ್ಕ ಮಾಡಿದರೂ ಅವರು ಕರೆ ಸ್ವೀಕರಿಸಲಿಲ್ಲ. ಅವರ ಆಪ್ತ ಸಹಾಯಕರೂ ಸಹ ಶಾಸಕರ ಹಾದಿಯನ್ನೇ ಅನುಸರಿಸಿದರು. ಭೀಮಶಿ ಎನ್ನುವ ಆಪ್ತ ಕರೆ ಸ್ವೀಕರಿಸಿದರೂ ಸಾಹೇಬ್ರು ಜನರ ಜೊತೆ ಬ್ಯೂಜಿ ಇದಾರೆ, ಹೇಳ್ತಿನಿ ಎನ್ನುತ್ತಾರೆಯೇ ಹೊರತು ಶಾಸಕರಿಂದ ಪ್ರತಿಕ್ರಿಯೆ ಮಾತ್ರ ಸಿಗಲಿಲ್ಲ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅನುದಾನ ಕಡಿತ: ಸರಕಾರದ ನೀತಿಗೆ ಸೈಯದ್ ಕೊಪ್ಪಳ ಆಕ್ರೋಶ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ:

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನ ಕಡಿತ ಮಾಡಿರುವುದು ಇಡೀ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ ಸಮುದಾಯಗಳ ಅಭಿವೃದ್ದಿಗೆ ಹಿನ್ನಡೆಯಾಗಲಿದೆ ಎಂದು ಮುಸ್ಲಿಂ ಚಿಂತಕರ ಚಾವಡಿಯ ಮುಖಂಡ ಸೈಯದ್ ಖಾಲೀದ ಕೊಪ್ಪಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅನುದಾನ ಕಡಿತಗೊಳಿಸಿರುವದನ್ನು ಖಂಡಿಸಿ ಗದಗ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾ ಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ ೨೦೧೯-೨೦ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ಇರುವದು ವಿದ್ಯಾರ್ಥಿಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ.

ರಾಜ್ಯದಲ್ಲಿ ೨೦೧೬-೧೭ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸಂಶೋಧನೆ (ಪಿ.ಎಚ್.ಡಿ./ಎಂ.ಫೀಲ್) ಕೈಗೊಳ್ಳಲು ಪ್ರತಿ ತಿಂಗಳು ನೀಡಲಾಗುತ್ತಿದ್ದ ಪ್ರೋತ್ಸಾಹಧನ ೨೫೦೦೦.ರೂಗಳನ್ನು ೮೩೩೩.ರೂಗಳಿಗೆ ಕಡಿತಗೊಳಿಸಿ ಬಡ ವರ್ಗದ ಮಕ್ಕಳ ಶೈಕ್ಷಣಿಕ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ರಾಜ್ಯ ಬಿಜೆಪಿ ಸರಕಾರ ನಡೆಸಿದೆ ಎಂದು ಸೈಯದ್ ಆರೋಪಿಸಿದರು.

ಮುಸ್ಲಿಂ ಚಿಂತಕರ ಚಾವಡಿಯ ಜಿಲ್ಲಾ ಮುಖಂಡ ಆರ್.ಕೆ. ಬಾಗವಾನ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ಕೈ ಬಿಡಲಾಗಿದ್ದು ೨೦೧೯-೨೦ನೇ ಸಾಲಿನಲ್ಲಿ ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು ೧೮೯೭.೦೦ಕೋ.ರೂ.ಗಳಿಂದ ಇದೀಗ ಮತ್ತೆ ೧೦೦೫. ಕೋಟಿ. ಅನುದಾನ ಕಡಿತಗೊಳಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಳೆದ ೫ ವ?ಗಳಿಂದ ಜಾರಿಯಲ್ಲಿಟ್ಟಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳ ಅನುದಾನ ಕಡಿತಗೊಳಿಸಿರುವುದರಿಂದ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ದಿಗೆ ಹಿನ್ನಡಯಾಗಲಿದೆ. ಕೂಡಲೇ ಸರ್ಕಾರ ಇಲಾಖೆಗೆ ನೀಡುತ್ತಿದ್ದ ಅನುದಾನವನ್ನು ಯಥಾವತ್ತಾಗಿ ಮುಂದುವರೆಸಬೇಕೆಂದು ಒತ್ತಾಯಿಸಿದರು.

ಶೈಕ್ಷಣಿಕ ಸಾಲದ ಯೋಜನೆ ಸಹ ಈ ವ? ದಾರಿ ತಪ್ಪಿದೆ, ಈ ಯೋಜನೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಗೊಳ್ಳುವಂತೆ ಮಾಡಿದೆ. ಅರಿವು ಯೋಜನೆಯ ಮೂಲಕ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಶೈಕ್ಷಣಿಕ ಸಾಲ ನೀಡಲಾಗುತ್ತಿತ್ತು, ಈ ವ? ಸದರಿ ಸಾಲವನ್ನು ವಿದ್ಯಾರ್ಥಿಗಳು ಕೋರ್ಸುಗಳಿಗೆ ಪಾವತಿಸುವ ಮೊತ್ತದ ಅರ್ದ ಮೊತ್ತ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಸಾಲದ ರೂಪದಲ್ಲಿ ನೀಡುತ್ತಿದೆ.

ಒಂದು ಕಡೆ ಪ್ರೋತ್ಸಾಹಧನ ಕಡಿತಗೊಳಿಸಿ, ಮತ್ತೊಂದು ಕಡೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅನುದಾನ ಕಡಿತಗೊಳಿಸಿದ್ದಲ್ಲದೇ ಶುಲ್ಕವಿನಾಯತಿ, ವಿದ್ಯಾಸಿರಿ ಅನುದಾನವೂ ಸರಕಾರ ನೀಡುತ್ತಿಲ್ಲ, ಇದನ್ನು ಹೊರತುಪಡಿಸಿ ಇದ್ದಂತಹ ಅರಿವು ಶೈಕ್ಷಣಿಕ ಸಾಲದ ಯೋಜನೆಯನ್ನು ಮೊಟುಕುಗೊಳಿಸಲು ಹೊರಟಿರುವದು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ಶಪಥ ಮಾಡಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ರಾಜ್ಯ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂದಿಸಿದ ಯಾವುದೇ ಹೊಸ ಯೋಜನೆ ಜಾರಿಗೊಳಿಸದೇ ಇದ್ದರೂ ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನು ಮುಂದುವರೆಸಬೇಕು, ಸದರಿ ಯೋಜನೆಗಳನ್ನು ಮುಂದುವರೆಸಲು ಬೇಕಾಗುವ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಹ್ಮದ ಶಫಿ ನಾಗರಕಟ್ಟಿ, ಭಾಷಾಸಾಬ ಮಲಸಮುದ್ರ, ಎಂ.ಎ.ಕುರಹಟ್ಟಿ, ಶೌಕತ್ ಕಾತರಕಿ, ಅಕ್ಬರ ಅಲಿಬೇಗ, ದಾವುದ್ ಜಾಮಾಲ್, ಮುನ್ನಾ ಡಾಲಾಯತ್, ಖಾಸಿಂ ಧಾರವಾಡ, ತನ್ವೀರ ಹಾಜಿ., ಮೈನುದ್ದೀನ್ ನದಾಫ್, ದಾದು ಮುಂಡರಗಿ, ಎಂ.ಡಿ.ಇಸ್ಮಾಯಿಲ್, ಜಾಫರ ಡಾಲಾಯತ್ ಭಾಗವಹಿಸಿದ್ದರು.

ಅನುದಾನ ಕಡಿತಗೊಳಿಸಲು ಕೋವಿಡ್-೧೯ ಕಾರಣವಿದ್ದರೂ ಯಾವುದೇ ಸರಕಾರ ಜನಪರ ಕಲ್ಯಾಣ ಇಲಾಖೆಗಳ ಯೋಜನೆಗಳನ್ನು ಕಡಿತಗೊಳಿಸುವದು ಸಾಮಾಜಿಕ ಬದ್ದತೆಯ ದೃಷ್ಟಿಯಿಂದ ಒಳ್ಳೆಯ ಆಡಳಿತದ ಮಾದರಿಯಾಗಲಾರದು. ಸರಕಾರದಲ್ಲಿ ಯಾವುದೇ ಇಲಾಖೆಗೂ ಇರದ ಅನುದಾನ ಕಡಿತ ಕೇವಲ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಮಾತ್ರ ಏಕೆ ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತಿದೆ.


-ದಾವಲಸಾಬ ತಾಳಿಕೋಟಿ
error: Content is protected !!