ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ಬಗ್ಗೆ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ ಆರಂಭಿಸಲಾಗಿದೆ. ಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದ ವರೆಗೂ ಜನಜಾಗೃತಿ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಷಣ್ಮುಖ ಗುರಿಕಾರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರೈತ ಮೋರ್ಚಾದಿಂದ ಅ. ೧೦ರಿಂದ ೩೧ರ ವರೆಗೆ ಮೂರು ಹಂತದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅ. ೧೮ರಿಂದ ೨೪ರ ವರೆಗೆ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳಿಂದ ಮಂಡಲಗಳ ಪದಾಧಿಕಾರಿಗಳ ಮೂಲಕ ಗ್ರಾಮಸಭೆ ನಡೆಸಿ ಕೃಷಿ ಮಸೂದೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಈ ಅಭಿಯಾನದಲ್ಲಿ ಟ್ರ್ಯಾಕ್ಟರ್, ಭೂಮಿಪೂಜೆ, ದಾನ್ಯಪೂಜೆ ಹಾಗೂ ಗೋಮಾತೆ ಪೂಜೆಗಳ ಮೂಲಕ ರೈತರ ಸ್ವಾಭಿಮಾನವನ್ನು ಪ್ರೇರೆಪಿಸಲಾಗುವುದು. ಗ್ರಾಮೀಣ ಜನರಿಗೆ ಕೇಂದ್ರ ಸರಕಾರದ ಕೃಷಿ ಮಸೂಧೆಗಳ ಮಹತ್ವವನ್ನು ಮನದಟ್ಟು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ, ಎಂ.ಎಸ್.ಕರಿಗೌಡ್ರ, ಕಾಂತೀಲಾಲ ಬನ್ಸಾಲಿ ಇತರರು ಉಪಸ್ಥಿತರಿದ್ದರು.
ಕೃಷಿ ಮಸೂದೆ ಬಗ್ಗೆ ಬಿಜೆಪಿಯಿಂದ ಜನಜಾಗೃತಿ
ಹೆಣ್ಣು ಮಕ್ಕಳಿಗೂ ಹೆಚ್ಚು ಪ್ರಾಶಸ್ತ್ಯ ನೀಡಿ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಹೆಣ್ಣು ಅಬಲೆಯಲ್ಲ ಅವಳು ಸಬಲೆ ಆಗಿದ್ದು, ಗಂಡು ಮಗುವಿನಂತೆ ಹೆಣ್ಣು ಮಗುವಿಗೂ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ಹೆಣ್ಣು ಗಂಡೆಂಬ ತಾರತಮ್ಯ ಮಾಡದೇ ಇಬ್ಬರನ್ನೂ ಸಮನಾಗಿ ಕಾಣಬೇಕು ಎಂದು ಜಿಲ್ಲಾ ಪಂಚಾಯತ ಸಿಇಒ ಡಾ.ಆನಂದ ಕೆ. ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗದಗ ಇವರ ಸಹಯೋಗದಲ್ಲಿ ನಡೆದ ಮಗಳನ್ನು ಉಳಿಸಿ ಮಗಳನ್ನು ಓದಿಸಿ (ಬೇಟಿ ಬಚಾವೋ ಬೇಟಿ ಪಡಾವೋ) ಯೋಜನೆಯಡಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವುದು ಶ್ಲಾಘನೀಯವಾಗಿದ್ದು, ಪ್ರತಿ ಹೆಣ್ಣು ಮಗುವಿಗೂ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾನ ಅವಕಾಶ ಕಲ್ಪಿಸಿ ಉತ್ತೇಜನ ನೀಡಬೇಕು. ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಉತ್ತಮ ಸಂಸ್ಕಾರಯುತ ಮಕ್ಕಳನ್ನಾಗಿ ಬೆಳೆಸಬೇಕು ಎಂದರು.
ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಮಾತನಾಡಿ, ಹಿಂದೆ ಇದ್ದ ಪುರುಷ ಪ್ರಧಾನ ಸಮಾಜದಿಂದ ಮುಕ್ತಿ ಹೊಂದಿ, ಪ್ರಸ್ತುತ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಬಹುಮಖ್ಯವಾಗಿದ್ದು, ಹೆಣ್ಣು ಮಗುವೆಂಬ ಕೀಳರಿಮೆಯಿಂದ ಹೊರಬರಬೇಕು. ಹೆಣ್ಣು ಮಗು ಉಳಿಸಿ ಪ್ರೋತ್ಸಾಹಿಸಲು ಸಾರ್ವಜನಿಕರು ಕೈ ಜೋಡೊಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಎ. ಮಾತನಾಡಿ, ಜಗತ್ತಿನಾದ್ಯಂತ ಗಂಡು ಮತ್ತು ಹೆಣ್ಣಿನ ನಡುವಿನ ಜನನ ಪ್ರಮಾಣದ ಅಂತರ ಕಾಪಾಡುವುದೇ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಉದ್ದೇಶವಾಗಿದೆ. ಈ ಬಾರಿಯ ಘೋಷವಾಕ್ಯ ‘ಹೆಣ್ಣು ಮಕ್ಕಳು ನನ್ನ ಧ್ವನಿ, ನನ್ನ ಸಮಾನ’ ಆಗಿದೆ. ಹೆಣ್ಣು ಮಕ್ಕಳನ್ನು ಪೋಷಿಸುವ ಮೂಲಕ ಹೆಣ್ಣು ಜೀವ ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಎಂದರು.
ಹೆಣ್ಣು ಮಗುವಿನ ಪೋಷಣೆ, ಶಿಕ್ಷಣ, ವೈದ್ಯಕೀಯ ಆರೈಕೆ, ಬಾಲ್ಯ ವಿವಾಹಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಅಲ್ಲದೇ, ಹೆಣ್ಣು ಬ್ರೂಣ ಹತ್ಯೆ ತಡೆಗಟ್ಟಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಪ್ರತಿ ಹೆಣ್ಣು ಮಗುವಿಗೂ ಶಿಕ್ಷಣ ನೀಡಬೇಕು ಎಂದು ವಿದ್ಯಾರ್ಥಿನಿಯರಾದ ದೀಪಾ ಹಿರೇಮಠ ಹಾಗೂ ಪೂರ್ಣಿಮಾ ಸವದತ್ತಿಮಠ ಅಭಿಪ್ರಾಯ ಹಂಚಿಕೊಂಡರು.
ಸಾಧನೆಗೈದ ತಾಯಂದಿರು ಸೇರಿದಂತೆ ಹೆಣ್ಣು ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಬಿ.ಎಂ.ಗೊಜನೂರ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಹೆಚ್.ಹೆಚ್.ಕುಕನೂರ, ವಯಸ್ಕರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್, ಅಂಗನವಾಡಿಯ ಮೇಲ್ವಿಚಾರಕರು, ಕಾರ್ಯಕರ್ತೆಯರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಸದರ ಆದರ್ಶ ಗ್ರಾಮಕ್ಕೆ ರಸ್ತೆಯೆ ಇಲ್ಲ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯ ರೈತರು ನಿರಂತರ ಮಳೆಯಿಂದ ಒಂದು ಕಡೆ ಹೈರಾಣಾಗಿದ್ದಾರೆ. ಇನ್ನೊಂದು ಕಡೆ ಸಮರ್ಪಕವಾದ ರಸ್ತೆ ಇಲ್ಲದ ಕಾರಣ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆಗೆ ತರಲು ಆಗದಂಥ ಪರಿಸ್ಥಿತಿಗೆ ಸಿಲುಕಿದ್ದಾರೆ.
ಇದು ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದ ಕಥೆ. ಹೇಳಿಕೊಳ್ಳಲು ಇದು ಸಂಸದರ ಆದರ್ಶ ಗ್ರಾಮ. ಹಾವೇರಿ ಲೋಕಸಭೆ ಕ್ಷೇತ್ರದ ಸಂಸದ ಶಿವಕುಮಾರ ಉದಾಸಿ ಅವರ ಆದರ್ಶ ಗ್ರಾಮ. ಆದರೆ ಯಾವ ನಿಟ್ಟಿನಲ್ಲಿಯೂ ಈ ಗ್ರಾಮ ಆದರ್ಶವಾಗಿಲ್ಲ.
ಯಳವತ್ತಿ ಗ್ರಾಮದ ಅಭಿವೃದ್ಧಿಗೆ ಸಂಸದ ಶಿವಕುಮಾರ ಉದಾಸಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಕೋಟಿ ರೂ. ಲೆಕ್ಕದಲ್ಲಿ ಅನುದಾನ ಒದಗಿಸಿದ್ದಾರೆ ಎನ್ನುವುದು ಶುದ್ಧ ಸುಳ್ಳು. ಸಂಸದರು ಆಸ್ಥೆ ವಹಿಸಿದ್ದರೆ ಯಳವತ್ತಿ ನಿಜವಾಗಿಯೂ ಆದರ್ಶವಾಗುತ್ತಿತ್ತು. ಗ್ರಾಮದ ರಸ್ತೆಗಳನ್ನು ನೋಡಿದರೆ ಯಳವತ್ತಿ ಯಾವ ರೀತಿಯಿಂದಲೂ ಆದರ್ಶ ಗ್ರಾಮ ಆಗುವುದಿಲ್ಲ.
ಒಂದು ಎಕರೆ ಶೇಂಗಾ ಬೆಳೆಯಲು 15 ರಿಂದ 20 ಸಾವಿರ ರೂಪಾಯಿ ಖರ್ಚು ಮಾಡಲಾಗಿದೆ. ಮಳೆಯಿಂದ ಶೇಂಗಾ ಬೆಳೆ ಜಮೀನಿನಲ್ಲಿಯೇ ಉಳಿದಿದೆ. ಎತ್ತಿನ ಚಕ್ಕಡಿ, ಟ್ರಾಕ್ಟರ್ ಮೂಲಕ ತರಬೇಕು ಎಂದರೆ ರಸ್ತೆ ಇಲ್ಲದೇ ಕೆಸರಿನಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಿವೆ. ಜಮೀನುಗಳಿಗೆ ನಡೆದು ಹೋಗಲು ಸಹ ಆಗದ ಸ್ಥಿತಿ ನಿರ್ಮಾಣವಾಗಿದೆ.
-ಯಳವತ್ತಿ ಗ್ರಾಮಸ್ಥರು.

ಯಳವತ್ತಿ ಗ್ರಾಮದ ಜಮೀನುಗಳಿಗೆ ಹೋಗುವ ರಸ್ತೆ ಸರಿಯಾಗಿಲ್ಲದ ಕಾರಣ ಮುಂಗಾರು ಹಂಗಾಮಿನ ಬೆಳೆಗಳಾದ ಹೆಸರು, ಶೇಂಗಾ ಕಟಾವು ಮಾಡಿಕೊಂಡು ಮಾರುಕಟ್ಟೆಗೆ ಒಯ್ಯುವುದು ಕಷ್ಟವಾಗಿದೆ. ನಿರಂತರ ಮಳೆಯಿಂದ ಕಟಾವು ಮಾಡಲು ಸಾಧ್ಯವಾಗದ ಸ್ಥಿತಿ ಒಂದೆಡೆಯಾದರೆ, ಮಳೆ ವಿರಾಮ ನೀಡಿದಾಗ ಕಟಾವು ಮಾಡಿಕೊಂಡು ಹೋಗಬೇಕೆಂದರೆ ರಸ್ತೆ ಇಲ್ಲದ ವಾಹನಗಳು ಸಂಚರಿಸದ ಸ್ಥಿತಿ ಮತ್ತೊಂದೆಡೆ. ಹೀಗಾಗಿ ಜಮೀನುಗಳಿಗೆ ಹೋಗುವ ರಸ್ತೆ ದುರಸ್ತಿ ಮಾಡಿಕೊಡಿ ಎಂದು ಯಳವತ್ತಿ ಗ್ರಾಮಸ್ಥರು ಮನವಿ ಮಾಡಿಕೊಳ್ಳುವಂತಾಗಿದೆ.
ಸಂಸದರು ನೋಡಲಿ
ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರು ತಮ್ಮ ಆದರ್ಶ ಗ್ರಾಮದ ಸ್ಥಿತಿಯನ್ನು ಒಮ್ಮೆ ನೋಡಲಿ. ಜಮೀನುಗಳಿಗೆ ಹೋಗಲು ರಸ್ತೆ ಇಲ್ಲದ ಸ್ಥಿತಿಯನ್ನು ಕಣ್ಣಾರೆ ಕಂಡ ನಂತರವಾದರೂ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಲಿ ಎನ್ನುತ್ತಾರೆ ಯಳವತ್ತಿ ಗ್ರಾಮದ ರೈತ ಚನ್ನಬಸವನಗೌಡ.
ಯಳವತ್ತಿ ಗ್ರಾಮದ ವ್ಯಾಪ್ತಿಯ ಜಮೀನುಗಳು ಫಲವತ್ತಾಗಿವೆ. ಈರುಳ್ಳಿ, ಹತ್ತಿ, ಶೇಂಗಾ, ಗೋವಿನ ಜೋಳ ಬೆಳೆಯಲು ಸೂಕ್ತವಾಗಿದೆ. ಆದರೆ ಈ ಬಾರಿ ಸುರಿದ ಅಪಾರ ಮಳೆಯಿಂದ ಶೇಂಗಾ ಬೆಳೆ ಜಮೀನಿನಲ್ಲಿಯೇ ಕೊಳೆಯುವಂತಾಗಿದೆ. ಅಳಿದುಳಿದ ಫಸಲನ್ನು ತರಬೇಕು ಎಂದರೆ ರಸ್ತೆಗಳು ಸರಿಯಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಗ್ರಾಮದ ರಸ್ತೆ ದುರಸ್ತಿಗಾಗಿ ಗ್ರಾಮ ಪಂಚಾಯಿತಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸುತ್ತಾರೆ ಯಳವತ್ತಿ ಗ್ರಾಮಸ್ಥರು.
ಇನ್ನಾದರೂ ಎಚ್ಚೆತ್ತುಕೊಳ್ಳಲಿ
ಅತಿಯಾದ ಮಳೆಯಿಂದ ಬೆಳೆನಾಶ ಒಂದು ಕಡೆಯಾದರೆ, ರಸ್ತೆ ಸರಿ ಇಲ್ಲದ ಕಾರಣ ಅಳಿದುಳಿದ ಬೆಳೆಯನ್ನು ಜಮೀನಿನಿಂದ ತರದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರೈತರ ಕಷ್ಟ ಪರಿಹರಿಸಲು ಮುಂದಾಗುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಎಸ್ಪಿ ಯತೀಶ್ ಎನ್
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕೊರೋನಾ ವೈರಸ್ ತಡೆಗಟ್ಟಲು ಜಿಲ್ಲಾ ಎಸ್ಪಿ ಯತೀಶ್ ಎನ್ ಖುದ್ದು ಬೀದಿಗಿಳಿದು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ನಗರದ ಟಾಂಗಾ ಕೂಟ್ ಸರ್ಕಲ್ ನಲ್ಲಿ ಎಸ್ಪಿ ಯತೀಶ್ ಎನ್, ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರಿಗೆ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರದ ಅವಶ್ಯಕತೆಯನ್ನು ವಿವರಿಸಿ ಹೇಳುವ ಮೂಲಕ ಕೊರೋನಾ ತಡೆಯ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ರೋಟರಿ ಸಂಸ್ಥೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸ್ಥಳದಲ್ಲಿಯೇ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸೋಪ್ ವಿತರಣೆ ಮಾಡಿ, ಇವುಗಳನ್ನು ಖಡ್ಡಾಯವಾಗಿ ಬಳಕೆ ಮಾಡವೇಕೆಂದು ಮನವಿ ಮಾಡಿದರು.
ಈ ವೇಳೆ ಡಿವೈಎಸ್ಪಿ S K ಪ್ರಹ್ಲಾದ್, ನಗರ ಠಾಣೆ ಸಿಪಿಐ ಪಿ ವಿ ಸಾಲಿಮಠ್, ಗ್ರಾಮೀಣ ಠಾಣೆ ಸಿಪಿಐ ರವಿಕುಮಾರ್ ಕಪ್ಪತ್ತನವರ, ಬೆಟಗೇರಿ ಸಿಪಿಐ ಬಿರಾದಾರ್, ಪಿಎಸ್ಐಗಳಾದ ಪ್ರಕಾಶ್ D, G T ಜಕ್ಕಲಿ ಕಮಲಮ್ಮ ದೊಡ್ಡಮನಿ, ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ಗೌಡ ಧರ್ಮಾಯತ, ಕಾರ್ಯದರ್ಶಿ ಚಂದ್ರಮೌಳಿ ಜಾಲಿ, ಡಾ. ರಾಜಶೇಖರ್ ಬಳ್ಳಾರಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿನ್ನೀರಿನಲ್ಲಿ ಕೊಚ್ಟಿ ಹೋಗುತ್ತಿದ್ದ 15 ದಿನದ ಹಸುಗೂಸು ರಕ್ಷಣೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಯಾದಗಿರಿ: ಭೀಮಾ ನದಿಯ ಹಿನ್ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ 15 ದಿನಗಳ ಹಸುಗೂಸನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಹಾಪುರ ತಾಲೂಕಿನ ರೋಜಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಟುಂಬಸ್ಥರನ್ನು ಸ್ಥಳಾಂತರಿಸುವಾಗ ತೆಪ್ಪ ಅಲುಗಾಡಿ ಕೂಸು ನದಿಗೆ ಬಿದ್ದಿತ್ತು.
ಗ್ರಾಮದ ತವಕಲ್ ಹಾಗೂ ರಜಿಯಾ ದಂಪತಿಯ ಗಂಡು ಮಗು ಇದಾಗಿದ್ದು, ಹಿನ್ನೀರಿನಿಂದಾಗಿ ಗ್ರಾಮ ಜಲಾವೃತವಾದ್ದರಿಂದ ಮಗು ಸಮೇತ ದಂಪತಿಯನ್ನು ತೆಪ್ಪದಲ್ಲಿ ಸ್ಥಳಾಂತರ ಮಾಡಲಾಗುತ್ತಿತ್ತು.
ಈ ವೇಳೆ ಅವಘಡ ನಡೆದಿದ್ದು, ಸ್ಥಳೀಯರು ಹಾಗೂ ಮೀನುಗಾರರು ಸೇರಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ: ಜೋಳದ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿ ಬಂಧನ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗೋವಿನ ಜೋಳದ ಬೆಳೆ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ಸಂಜೀವಪ್ಪ ದೇವಪ್ಪ ಗುಂಡಿಕೇರಿ ಬಂಧಿತ ಆರೋಪಿಯಾಗಿದ್ದಾನೆ.
ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದ ಜಮೀನಿನಲ್ಲಿ ಗೋವಿನ ಜೋಳದ ಮಧ್ಯೆ ಬೆಳೆದಿದ್ದ 1.250 ಕೆಜಿ ಗಾಂಜಾ ಬೆಳೆಯನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿತನನ್ನು ಮಾಲು ಸಮೇತ ಬಂಧಿಸಿದ್ದಾರೆ.
ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಳೆದ ಒಂದು ವಾರದ ಹಿಂದೆ ಜಾನುವಾರು ಮೇಯಿಸಲು ಹೋಗಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ರಾಂಪುರ ಗ್ರಾಮದ ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಗುರುವಾರ ಬೆಳಗಿನ ವೇಳೆ ಆನೆಗೊಂದಿ ಬಳಿ ಇರಿಸಲಾಗಿದ್ದ ಬೋನಿಗೆ ಬಿದ್ದಿದೆ.
ಗ್ರಾಮಸ್ಥರ ಆಕ್ರೋಶದ ನಡುವೆ ನಾಲ್ಕು ಬೋನ್ಗಳನ್ನು ಅರಣ್ಯ ಇಲಾಖೆ ಅಳವಡಿಸಿತ್ತು.
ಮೂರ್ನಾಲ್ಕು ಚಿರತೆಗಳಿವೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ: ಶೇಖರಗೌಡ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ:
ನಾಡಿನಾದ್ಯಂತ ಸಾಹಿತಿಗಳು, ಕಸಾಪ ಸದಸ್ಯರು ಹಾಗೂ ಮಠಾಧೀಶರು ಸೇರಿದಂತೆ ಪ್ರತಿಯೊಬ್ಬರು ತೋರುತ್ತಿರುವ ಪ್ರೀತಿಯನ್ನು ನೋಡಿದರೇ ನನಗೆ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ ಹೇಳಿದರು.
ಕೊಪ್ಪಳದಲ್ಲಿ ಬುಧವಾರ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳನ್ನು ಭೇಟಿಯಾಗಿ, ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೆಲ್ಲುವ ವಿಶ್ವಾಸ ಹೆಚ್ಚುತ್ತಿದೆ ಎಂದರು.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಭ್ಯರ್ಥಿಯಾಗಿರುವ ನಾನು ರಾಜ್ಯದ ಬಹುತೇಕ ಜಿಲ್ಲೆಗಳನ್ನು ಸುತ್ತಾಡಿದ್ದೇನೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕರಾವಳಿ ಕರ್ನಾಟಕ, ಬೆಂಗಳೂರು ಭಾಗದ ಜಿಲ್ಲೆಗಳು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಾನು ನಿರೀಕ್ಷೆ ಮಾಡಿದ್ದಕ್ಕೂ ಮೀರಿ ಸಾಹಿತಿಗಳು, ಕನ್ನಡಾಭಿಮಾನಿಗಳು, ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ತುಂಬು ಮನಸ್ಸಿನಿಂದ ಸ್ವಾಗತಿಸುತ್ತಿದ್ದಾರೆ ಎಂದರು.
ನಾನು ನೆಪ ಮಾತ್ರ ಎನ್ನುವಂತೆ ಅವರೇ ಸ್ವಯಂ ಪ್ರೇರಣೆಯಿಂದ ಈಗಾಗಲೇ ನನ್ನ ಪರವಾಗಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ.
ಇದರಿಂದ ನನಗೆ ಅತೀವ ವಿಶ್ವಾಸ ಮೂಡಿದ್ದು, ಇನ್ನು ಹೆಚ್ಚು ಹೆಚ್ಚು ಬೆಂಬಲ ಪಡೆಯುವುದಕ್ಕಾಗಿ ಸುತ್ತಾಟ ನಡೆಸಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ ಎನ್ನುವುದು ಇದುವರೆಗೂ ಸಾಮಾನ್ಯ ವರ್ಗವನ್ನು ಮತ್ತು ಗ್ರಾಮೀಣ ಪ್ರದೇಶವನ್ನು ತಲುಪಿಲ್ಲ ಎನ್ನುವ ಆರೋಪ ಇದ್ದು, ಇದನ್ನು ತೊಡೆದು ಹಾಕಬೇಕು ಎನ್ನುವುದೇ ಹೆಬ್ಬಯಕೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇನ್ನಷ್ಟು ಅರ್ಥಪೂರ್ಣ ಮಾಡುವುದು ಮತ್ತು ನೂತನ ಬರಹಗಾರರನ್ನು ಗುರತಿಸುವ ಪ್ರಯತ್ನ ಮಾಡಬೇಕು ಎಂದುಕೊಂಡಿದ್ದೇನೆ.
ಇದೆಲ್ಲಕ್ಕಿಂತ ಮಿಗಿಲಾಗಿ ಸಾಹಿತ್ಯ ಸಮ್ಮೇಳನ ಕೇವಲ ಒಂದು ವರ್ಗದ ಸಮ್ಮೇಳನವಾಗದೆ ಅದನ್ನು ಇಡೀ ನಾಡಿನ ಜನಜಾತ್ರೆ ಮಾಡಬೇಕಾಗಿದೆ. ಅದಕ್ಕೊಂದು ಸಾಮಾಜಿಕ ಜಾಗೃತಿಯ ಸ್ಪರ್ಶ ನೀಡಬೇಕಾಗಿದೆ. ಈ ರೀತಿಯ ಕನಸು ಕಟ್ಟಿಕೊಂಡಿರುವ ನಾನು ಅವಕಾಶವನ್ನು ನೀಡುವಂತೆ ಮನವಿ ಮಾಡಿದ್ದಕ್ಕೆ ಉತ್ತಮ ಪ್ರತಿಕ್ರಿಯೇ ಮತ್ತು ಪ್ರೀತಿ ವ್ಯಕ್ತವಾಗುತ್ತಿರುವುದರಿಂದ ನನ್ನ ಉತ್ಸಾಹ ಇಮ್ಮಡಿಯಾಗಿದೆ ಎಂದು ತಿಳಿಸಿದರು.
ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸಹ ನನಗೆ ಆಶಿರ್ವಾದ ಮಾಡಿದ್ದು ಸಂತೋಷವಾಗಿದೆ. ಅವರ ಆಶಿರ್ವಾದ ಇರುವುದು ನನ್ನ ಹೋರಾಟಕ್ಕೆ ನೂರಾನೆ ಬಲ ಬಂದಿದೆ ಎಂದರು.
ಕಸಪಾ ಕೊಪ್ಪಳ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ, ಶರಣೇಗೌಡ ಪೊಲೀಸ್ ಪಾಟೀಲ್, ರಾಮಚಂದ್ರ ಗೊಂಡಬಾಳ, ಚನ್ನಪ್ಪ ಕಡ್ಡಿಪುಡಿ, ಈಶಪ್ಪ ದಿನ್ನಿ, ನಾಗರಾಜನಾಯಕ ಡೊಳ್ಳಿನ, ರುದ್ರೇಶ ಅರಾಳ, ಹಾಲಯ್ಯ ಹುಡೇಜಾಲಿ, ವೀರೇಶ ತಾಳಿಕೋಟಿ, ಹಾವೇರಿ ಎಂ. ಎಸ್. ದಂಡಿನ್ ಮೊದಲಾದವರು ಇದ್ದರು.
ಬಿಟಿ ಹತ್ತಿಯಲ್ಲಿ ಗಾಂಜಾ ಬೆಳೆ; ಆರೋಪಿ ಅಂದರ್
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬಿಟಿ ಹತ್ತಿ ಬೆಳೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿ ಯೊಬ್ಬನನ್ನು ಮುಳಗುಂದ ಪೊಲೀಸರು ಬಂಧಿಸಿದ್ದಾರೆ.
ಚನ್ನಪ್ಪ ನಾಗಪ್ಪ ಆರೇರ್ ಎಂಬಾತನೇ ಬಂಧಿತ ಆರೋಪಿ. ಮುಳಗುಂದ ಸಮೀಪದ ಯಲಿಶಿರುಂದ ರಸ್ತೆಯಲ್ಲಿ ಇರುವ ತನ್ನ ಜಮೀನಿನಲ್ಲಿ ಕಳೆದ ಹಲವು ದಿನಗಳಿಂದ ಬಿಟಿ ಹತ್ತಿ ಬೆಳೆಯ ಮಧ್ಯ ಈ ಗಾಂಜಾ ಗಿಡಗಳನ್ನು ಬೆಳೆದಿದ್ದ ಎನ್ನಲಾಗಿದೆ.
ಖಚಿತ ಮಾಹಿತಿ ಪಡೆದ ಮುಳಗುಂದ ಪೊಲೀಸರು ದಾಳಿ ನಡೆಸಿ 17 ಸಾವಿರ ರೂ ಮೌಲ್ಯದ ಗಾಂಜಾಗಿಡಗಳನ್ನು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಸಚಿನ್ ಅಲಮೇಲಕರ್, ಎಎಸ್ ಐ ಎ ಕೆ ಮಾಳವಾಡ, ಸಿಬ್ಬಂದಿಗಳಾದ ಎಚ್ ಐ ಕಲ್ಲಣ್ಣವರ್, ಪ್ರಭಯ್ಯ ಕೊಡಬಾಳಮಠ, ಬಿ ಸಿ ಕೋಳಿವಾಡ, ಎನ್ ಎನ್ ದಳವಾಯಿ, ಡಿ ಐ ತಹಸೀಲ್ದಾರ ಈ ಕಾರ್ಯಾಚರಣೆಯಲ್ಲಿ ಇದ್ದರು.
ಗಂಗಾವತಿಯಲ್ಲಿ ಕೃಷಿ ವಿವಿ ಸ್ಥಾಪಿಸಿ; ಜಿಲ್ಲಾ ಮಂತ್ರಿ ನೇತೃತ್ವದಲ್ಲಿ ಕೊಪ್ಪಳ ಶಾಸಕ, ಸಂಸದರಿಂದ ಸಿಎಂಗೆ ಪ್ರಸ್ತಾವನೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಗಂಗಾವತಿಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಶಾಸಕ, ಸಂಸದರು ಸಿಎಂ ಯಡಿಯೂರಪ್ಪ ಅವರಿಗೆ ಬುಧವಾರ ಪ್ರಸ್ತಾವನೆ ಸಲ್ಲಿಸಿದರು.
ಗಂಗಾವತಿ ತಾಲೂಕು ನೀರಾವರಿ ಮತ್ತು ಒಣಭೂಮಿ ಹೊಂದಿರುವ ಪ್ರದೇಶವಾಗಿದ್ದು, ಇಲ್ಲಿನ ಮಣ್ಣು ಮತ್ತು ನೀರು ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸೂಕ್ತವಾಗಿದೆ. ಅಲ್ಲದೇ ಜಿಲ್ಲೆಯ ಕೃಷಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದೆ.
ಜಿಲ್ಲೆಯಲ್ಲಿ ಎರಡು ಕೃಷಿ ಸಂಶೋಧನಾ ಕೇಂದ್ರಗಳು, ಒಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಒಂದು ಕೃಷಿ ವಿಜ್ಞಾನ ಕೇಂದ್ರವಿದ್ದು, ಒಟ್ಟು 19 ವಿಜ್ಞಾನಿಗಳು ಮತ್ತು 20 ಬೋಧಕೇತರ ಸಿಬ್ಬಂದಿ ಇದ್ದಾರೆ. ಕೃಷಿ ವಿವಿ ಸ್ಥಾಪನೆಗೆ ಬೇಕಾದ ಎಲ್ಲಾ ಅನುಕೂಲತೆ ಇದೆ. ಕೃಷಿಗೆ ಪೂರಕವಾದ ವಾತಾವರಣವನ್ನು ಹೊಂದಿರುವ ಕೊಪ್ಪಳ ಜಿಲ್ಲೆಯಲ್ಲಿ ಕೃಷಿ ವಿವಿ ಅಗತ್ಯವಿರುತ್ತದೆ ಎಂದು ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.
ಜಿಲ್ಲೆಯ ವಿದ್ಯಾರ್ಥಿಗಳು ಕೃಷಿ ಪದವಿ ಹೊಂದಲು 140 ಕಿ.ಮೀ. ದೂರದ ರಾಯಚೂರು ಇಲ್ಲವೇ 220 ಕಿ.ಮೀ ದೂರದ ಧಾರವಾಡಕ್ಕೆ ಹೋಗಬೇಕಿದೆ. ಇದರಿಂದ ಕೃಷಿ ಪದವಿ ತಂತ್ರಜ್ಞಾನ ಸಂಬಂಧ ಅಧ್ಯಯನಕ್ಕೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಕೊಪ್ಪಳದಲ್ಲಿಯೇ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವುದರಿಂದ ಅನುಕೂಲವಾಗಲಿದೆ ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.
ಗಂಗಾವತಿ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕೃಷಿ ವಿವಿ ಸ್ಥಾಪಿಸಲು ಬೇಕಾದ ಭೂಪ್ರದೇಶ ಹಾಗೂ ನೀರಾವರಿ ಸೌಲಭ್ಯವಿರುತ್ತದೆ. ನೂತನ ಕೃಷಿ ಮಹಾವಿದ್ಯಾಲಯಕ್ಕೆ ಅಗತ್ಯವಾದ ಪ್ರಯೋಗಾಲಯಗಳು, ವಸತಿ ನಿಲಯ, ವಡ್ಡರಹಟ್ಟಿ ಕ್ಯಾಂಪ್ ಡಿಎಟಿಸಿಯಲ್ಲಿ ಲಭ್ಯವಿದ್ದು, ಇವುಗಳನ್ನು ನೂತನ ಕೃಷಿ ಮಹಾವಿದ್ಯಾಲಯಕ್ಕೆ ಅವಶ್ಯಕತೆಯಿದ್ದಲ್ಲಿ ಬಳಸಿಕೊಳ್ಳಬಹುದಾಗಿದೆ.
ಅಲ್ಲದೇ ಗಂಗಾವತಿ ನಗರವು ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸಲು ಸುಸಜ್ಜಿತ ರೈಲು ಹಾಗೂ ಸಾರಿಗೆ ಸಂಪರ್ಕವನ್ನೂ ಸಹ ಹೊಂದಿದೆ. ಇಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವುದರಿಂದ ಜಿಲ್ಲೆಯ ವಿದ್ಯಾರ್ಥಿ ಹಾಗೂ ರೈತ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಬಿ.ಸಿ.ಪಾಟೀಲರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಪ್ರಸ್ತಾವನೆ ಸಲ್ಲಿಕೆಗೂ ಮುನ್ನ ವಿಕಾಸಸೌಧದ ಕೃಷಿ ಮಂತ್ರಿಗಳ ಕಚೇರಿಯಲ್ಲಿ ಕೃಷಿ ವಿವಿ ಸ್ಥಾಪನೆ ಸಂಬಂಧ ಸಭೆ ನಡೆಯಿತು. ಸಭೆಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಶಾಸಕರಾದ ಹಾಲಪ್ಪ ಆಚಾರ್, ಬಸವರಾಜ ದಡೆಸುಗೂರ, ಪರಣ್ಣ ಮನವಳಿ ಇದ್ದರು.

