Home Blog Page 3158

ಸೋಂಕಿನಿಂದ ಮೃತರಾದ ಕುಟುಂಬದವರಿಗೆ ಸರ್ಕಾರಿ ಸೌಲಭ್ಯ; ಡಿಸಿ

ವಿಜಯಸಾಕ್ಷಿ ಸುದ್ದಿ, ಗದಗ

ಕೋವಿಡ್ ಸೋಂಕಿನಿಂದ ಮೃತರಾದ ಕುಟುಂಬದ ಸದಸ್ಯರಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ದೊರಕಿಸುವ ಪ್ರಾಮಾಣಿಕ ಪ್ರಯತ್ನವನ್ನು ಅಧಿಕಾರಿಗಳು ನಿರ್ವಹಿಸಬೇಕು. ಸರ್ಕಾರದ ಒಂದಿಲ್ಲೊಂದು ಯೋಜನೆಯಲ್ಲಿ ಸೋಂಕಿನಿಂದ ಮೃತ ಕುಟುಂಬದ ಸದಸ್ಯರಿಗೆ ಪ್ರಯೋಜನವಾಗಬೇಕು. ಮೃತ ವ್ಯಕ್ತಿಯ ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷಣ ಸೌಲಭ್ಯ ದೊರೆಯುವಂತೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳು ತಹಸೀಲ್ದಾರರಿಗೆ ನಿರ್ದೇಶನ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಅನೇಕ ಕುಟುಂಬಗಳು ಆರ್ಥಿಕವಾಗಿ ಬಲಹೀನವಾಗಿದೆ. ಜಿಲ್ಲೆಯ ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರಿಗೆ ಸಾಲ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ. ಹಣಕಾಸು ಸಂಸ್ಥೆಯ ಮುಖ್ಯಸ್ಥರಿಗೆ ಈಗಾಗಲೇ ಸೂಚನೆ ನೀಡಿರುವಂತೆ ಇನ್ನೆರಡು ತಿಂಗಳು ಆರ್ಥಿಕವಾಗಿ ಅಸಹಾಯಕವಾಗಿರುವ ಕುಟುಂಬಗಳಿಂದ ಸಾಲದ ಕಂತು ವಸೂಲಿ ಮಾಡದಿರುವಂತೆ ತಿಳಿಸಲಾಗಿದೆ.

ತಹಶೀಲ್ದಾರರು ಸ್ಥಳೀಯವಾಗಿ ಹಣಕಾಸು ಸಂಸ್ಥೆಯವರೊಂದಿಗೆ ಚರ್ಚಿಸಿ ಸಾಲದ ಕಂತು ಮರುಪಾವತಿಗೆ ಕಾಲಾವಕಾಶ ನೀಡುವಂತೆ ತಿಳಿಸಲು ನಿರ್ದೇಶಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ , ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅನಿಲಕುಮಾರ್ ಮುದ್ದಾ , ನಗರಸಭೆಯ ಪೌರಾಯುಕ್ತ ರಮೇಶ ಜಾಧವ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿ ಪಿ ವೀರಣ್ಣ, ಕಾರ್ಯದರ್ಶಿಯಾಗಿ ಶಿವಕುಮಾರ ಪತ್ರಿಮಠ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಹೂವಿನಹಡಗಲಿ

ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಘಟಕದ ಸಾಮಾನ್ಯ ಸಭೆಯಲ್ಲಿ 2021- 22ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅದ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಪಿ. ವೀರಣ್ಣ,

ಉಪಾಧ್ಯಕ್ಷರಾಗಿ ಕನ್ನಡನಾಡು ಪತ್ರಿಕೆ ವರದಿಗಾರ ಎಸ್. ಅಶ್ವತ್ಥನಾರಾಯಣ್,

ಪ್ರಧಾನ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ಶಿವಕುಮಾರ ಪತ್ರಿಮಠದ,

ಖಜಾಂಚಿಯಾಗಿ ನವೋದಯ ಪತ್ರಿಕೆ ವರದಿಗಾರ ಎಸ್.ಎಂ. ಬಸವರಾಜ್,

ಸಹ ಕಾರ್ಯದರ್ಶಿಯಾಗಿ ಮೂಡಣ ಪತ್ರಿಕೆ ವರದಿಗಾರ ಎಸ್.ಎಂ. ಜಾನ್ ಆಯ್ಕೆ ಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಅಯ್ಯನಗೌಡ, ವಿಶ್ವನಾಥ ಹಳ್ಳಿಗುಡಿ, ಎಂ. ನಿಂಗಪ್ಪ, ಎಂ.ಪಿ.ಎಂ. ಶಿವಪ್ರಕಾಶ್, ಎಸ್.ನಿಂಗರಾಜ, ಚಂದ್ರು ಕೊಂಚಿಗೇರಿ, ಎಂ.ಅಶೋಕ, ಎಚ್.ಎಂ. ಗುರುಬಸವರಾಜಯ್ಯ, ಎಲ್.ಅಕ್ಬರ್, ಸೋಮಶೇಖರ, ಎಚ್.ಚಂದ್ರಪ್ಪ, ಕೆ. ಎಚ್.ಕೆ. ಮಹೇಶ, ಎಚ್‌.ವೀರನಗೌಡ ಸರ್ವಾನುಮತದಿಂದ ಆಯ್ಕೆಯಾದರು.

ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಇಳಿಕೆ; ಸುರಳ್ಕರ್

ವಿಜಯಸಾಕ್ಷಿ ಸುದ್ದಿ, ಕೊಪ್ಪಳ

ಲಾಕ್‌ಡೌನ್ ಹಾಗೂ ಜಿಲ್ಲಾಡಳಿತ ಕೈಗೊಂಡ ಕಠಿಣ ಕ್ರಮಗಳಿಂದ ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯ ಕುರಿತು ಮಾಹಿತಿ ನೀಡುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿನಿತ್ಯ 1,500ರಿಂದ 1800ರವರೆಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷಾ ಫಲಿತಾಂಶದನ್ವಯ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣದಲ್ಲಿ ಶೇ. 20ರಷ್ಟು ಇಳಿಕೆ ಕಂಡುಬಂದಿದೆ. ಸಾರ್ವಜನಿಕರು ಲಾಕ್‌ಡೌನ್ ಹಾಗೂ ಜಿಲ್ಲಾಡಳಿತದ ನಿಯಮಗಳನ್ನು ಸೂಕ್ತ ರೀತಿಯಲ್ಲಿ ಅನುಸರಿಸಿ ಸಹಕರಿಸಿದರೆ ಶೀಘ್ರದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಬಹುದು. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಆಕ್ಸಿಜನ್ ಘಟಕ ಇಂದು ಆರಂಭ

ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸಹಿತ ಒಟ್ಟು 712 ಫೆಸಿಲಿಟಿಗಳಲ್ಲಿ ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕನಕಗಿರಿಯಲ್ಲಿ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಬೆಡ್‌ಗಳನ್ನು ಕೋವಿಡ್ ನಿಯಮಾನುಸಾರ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ನಿರ್ಮಿಸಲಾಗುತ್ತಿರುವ 1,000 ಎಲ್‌ಪಿಎಂ ಆಕ್ಸಿಜನ್ ಉತ್ಪಾದನಾ ಘಟಕದ ಕಾರ್ಯವು ಬಹುತೇಕ ಪೂರ್ಣಗೊಂಡಿದ್ದು, ಶನಿವಾರದಿಂದ ಕಾರ್ಯಾರಂಭಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಕೋವಿಡ್ ಎರಡನೇ ಅಲೆ ಆರಂಭದಿಂದ ಇಲ್ಲಿಯವರೆಗೆ ಒಟ್ಟು 309 ಜನರು ಮೃತಪಟ್ಟಿದ್ದು, ಅದರಲ್ಲಿ 49 ಸೋಂಕಿತರು ಹೊರ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಮೊದಲ ಹಾಗೂ ಎರಡನೇ ಸುತ್ತು ಸೇರಿದಂತೆ ಒಟ್ಟು 2,81,120 ಜನರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇನ್ನೂ ಅನೇಕರಿಗೆ ಎರಡನೇ ಡೋಸ್ ಲಸಿಕೆ ನೀಡುವುದು ಬಾಕಿ ಇದೆ. ಲಸಿಕೆ ನಿಯಮಾನುಸಾರ ಮೊದಲ ಡೋಸ್ ನಂತರ ನಿಗದಿತ ಅವಧಿಯನ್ನು ಪೂರ್ಣಗೊಳಿಸಿದವರು ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಎರಡನೇ ಡೋಸ್ ಲಸಿಕೆ ಪಡೆಯಬಹುದು.

ಎರಡನೇ ಡೋಸ್ ಲಸಿಕೆಗೆ ಅರ್ಹರಿರುವರಿಗೆ ಸಂದೇಶದ ಮೂಲಕ ಮಾಹಿತಿ ನೀಡಲು ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಮುಂದಿನ ವಾರದಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.

ಮ್ಯೂಕಸ್ ಮೈಕೋಸಿಸ್ ಪ್ರಕರಣಗಳು

ಮ್ಯೂಕಸ್ ಮೈಕೋಸಿಸ್ ಬಾಧಿತ 4 ರೋಗಿಗಳು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ 5 ಜನರು ಸೋಂಕಿಗೆ ಒಳಗಾಗಿರಬಹುದು ಎಂದು ಶಂಕಿಸಲಾಗಿದ್ದು, ಪರೀಕ್ಷಾ ವರದಿಯ ಅನಂತರ ಸೋಂಕು ದೃಢೀಕರಣದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.

ಕೋವಿಡ್ ಮೂರನೇ ಅಲೆಯ ಬಗ್ಗೆ ತಜ್ಞರು, ವೈದ್ಯರು ಹಾಗೂ ಮಾಧ್ಯಮಗಳು ಹೇಳುವ ಪ್ರಕಾರ ಕಡಿಮೆ ವಯಸ್ಸಿನ ಅಥವಾ ಚಿಕ್ಕ ಮಕ್ಕಳಿಗೆ ಸೋಂಕು ಹೆಚ್ಚು ಬಾಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕರನ್ನು ಬಳಸಿಕೊಂಡು ಮನೆ ಮನೆಗೆ ತೆರಳಿ ಮಕ್ಕಳ ಸಮೀಕ್ಷೆ ಮಾಡಲಾಗುತ್ತಿದೆ. ಸಮೀಕ್ಷೆಯಲ್ಲಿ ಮಕ್ಕಳು ಹಾಗೂ ಪೋಷಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಮಕ್ಕಳ ತಜ್ಞ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದ್ದು, ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಲಿಂಗರಾಜು ಟಿ. ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ‌ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ಬೆಳಗಾವಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ. ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರು, ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದುಕೊಂಡು ನಂತರ 4 ಗಂಟೆಗೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿರುವ ಸಿಎಂ ಅವರು, ಕೋವಿಡ್ ನಿಯಂತ್ರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್, ವಾರ್ತಾ ಸಚಿವ ಸಿ.ಸಿ.ಪಾಟೀಲ್ ಸೇರಿದಂತೆ ಉಪಸ್ಥಿತಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಹಿ!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿರುವ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ವರ್ಷ ರಾಜ್ಯದ್ಲಿ 8.75 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಇಲ್ಲದ ಕಾರಣ ಅವರ ಕಲಿಕಾ ಮಟ್ಟ ನಿರ್ಧಾರವಾಗುವುದು ತುಂಬಾ ಕಷ್ಟವಾಗುತ್ತದೆ. ಕಳೆದ ವರ್ಷ 9 ನೇ ತರಗತಿ ಪರೀಕ್ಷೆ ನಡೆದಿಲ್ಲ. ಸಿಬಿಎಸ್ ಇ ಪಠ್ಯದಲ್ಲಿ ಮೂರು ತಿಂಗೊಳಿಗೊಮ್ಮೆ ವಿದ್ಯಾರ್ಥಿಗಳ ಇವ್ಯುಲೇಶನ್ ನಡೆಯುತ್ತದೆ. ಆದರೆ, ನಮ್ಮಲ್ಲಿ ಈ ಪದ್ಧತಿ ಇಲ್ಲ. ಹೀಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿವೆ ಎಂದು ಹೇಳಿದ್ದಾರೆ.

ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಮಾಜ ವಿಜ್ಞಾನ, ಗಣಿತ, ವಿಜ್ಞಾನ ಈ ಮೂರು ವಿಷಯ ಸೇರಿ ಒಂದು ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರಶ್ನೆಗಳು ಸರಳವಾಗಿ, ನೇರವಾಗಿರುತ್ತವೆ. ಆಯ್ಕೆ ಪ್ರಶ್ನೆಗಳು ಇರುತ್ತವೆ ಎಂದು ಹೇಳಿದ್ದಾರೆ.

ಈ ಬಾರಿ 6 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕಳೆದ ವರ್ಷ ಮೂರು ಸಾವಿರ ಮಾತ್ರ ಇದ್ದವು. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುತ್ತದ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು!

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಈಗಾಗಲೇ ಕೇಂದ್ರ ಸರ್ಕಾರವು ಸಿಬಿಎಸ್ ಇ 12 ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದೆ. ಇದರ ಬೆನ್ನಲ್ಲಿಯೇ ರಾಜ್ಯದಲ್ಲಿಯೂ ಪಿಯುಸಿ ಪರೀಕ್ಷೆ ರದ್ದುಗೊಂಡಿದೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ.

ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್ಸೆಸ್ಸೆಲ್ಸಿ ನಡೆದಿತ್ತು. ಪಿಯುಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ. ಆದರೆ, ಕೊರೊನಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಬಹಳ ಅಪಾಯಕಾರಿ. ಹೀಗಾಗಿ ಪರೀಕ್ಷೆ ಎಂಬ ಅಡಕತ್ತರಿಯಲ್ಲಿ ಶಿಕ್ಷಣ ಇಲಾಖೆ ಸಿಲುಕಿತ್ತು.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್ ಅಪಾಯವಾಗಿ ಸೋಂಕು ಸ್ಫೋಟ ಆಗಬಹುದು. ಕೋವಿಡ್ ಸಾವು ನೋವು ಹೆಚ್ಚಾಗಬಹುದು ಎಂಬ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಕೊರೊನಾ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಬಾರದು. ಮಕ್ಕಳ ಶಿಕ್ಷಣಕ್ಕಿಂತ ಮಕ್ಕಳ ಜೀವ ನಮಗೆ ಮುಖ್ಯ. ಈ ಕೊರೊನಾ ವರ್ಷದಲ್ಲಿ ಪರೀಕ್ಷೆಯೇ ಬೇಡ. ಸಿಬಿಎಸ್‍ ಇ ಮಾದರಿಯಲ್ಲಿ ಎಲ್ಲರನ್ನು ಪಾಸ್ ಮಾಡಿ ಎಂಬ ಕೂಗು ಕೇಳಿ ಬಂದಿತ್ತು.

ಶೈಕ್ಷಣಿಕ ಗುಣಮಟ್ಟಕ್ಕೆ ಹೊಡೆತ ಬೀಳುವುದರ ಜೊತೆಗೆ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಹುದು. ನೀಟ್, ಸಿಇಟಿ ಸೀಟ್ ಹಂಚಿಕೆಯಲ್ಲಿ ಗೊಂದಲವಾಗಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷೆಯ ಬಳಿಕ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲು ಏರಬಹುದು. ಅತ್ಯುತ್ತಮ ಕಾಲೇಜುಗಳಲ್ಲಿ ಪ್ರವೇಶಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಬಹುದು ಎಂಬ ಆತಂಕ ಕೂಡ ಕಾಡುತ್ತಿದೆ.

ಗುರುವಾರ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ; ನಾಲ್ವರ ಸಾವು

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಯಲ್ಲಿ ನಿನ್ನೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿತ್ತು. ಆದರೆ ಮತ್ತೆ ಇವತ್ತು ಇಳಿಕೆ ಕಂಡಿದೆ. ಆದರೆ ಸಾವಿನ ಸರಣಿ ಮುಂದುವರೆದಿದೆ. ಇಂದು 250 ಜನರಿಗೆ ಸೋಂಕು ತಗುಲಿದೆ. ಬುಧವಾರ ಜಿಲ್ಲಾಡಳಿತದ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟಿದ್ದಾರೆ.

ಇಂದಿನ 250 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24315 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -105, ಮುಂಡರಗಿ-51, ನರಗುಂದ-23, ರೋಣ-21, ಶಿರಹಟ್ಟಿ-41, ಹೊರಜಿಲ್ಲೆಯ-09 ಸೇರಿದಂತೆ 250 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 262 ಕ್ಕೇರಿದೆ.

ಗದಗನ ಪಂಚಾಕ್ಷರಿ ನಗರದ ನಿವಾಸಿ 62 ವರ್ಷದ ವ್ಯಕ್ತಿ ಮೇ-25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -02 ರಂದು ಮೃತಪಟ್ಟಿದ್ದಾರೆ.

ಗದಗ ಶಹರದ ನಿವಾಸಿ 62 ವರ್ಷದ ವ್ಯಕ್ತಿ ಮೆ,27 ರಂದು ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 31 ರಂದೇ ಮೃತಪಟ್ಟಿದ್ದಾರೆ.

ಜಿಲ್ಲೆಯ ಗಜೇಂದ್ರಗಡ ನಿವಾಸಿ 59 ವರ್ಷದ ಮಹಿಳೆ ಮೇ,28 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ, 29 ರಂದು ಮೃತಪಟ್ಟಿದ್ದಾರೆ.

ಗದಗ ಶಹರ ನಿವಾಸಿ 45 ವರ್ಷದ ಮಹಿಳೆ ಮೇ 21 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್- 01 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 351 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 21835 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 2218 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 185 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಗರಿಷ್ಠ ಸಂಖ್ಯೆಯ ಐಸಿಯು, ವೆಂಟಿಲೇಟರ್ ಬೆಡ್: ಜಿಮ್ಸ್ ದಾಖಲೆ

ವಿಜಯಸಾಕ್ಷಿ ಸುದ್ದಿ, ಗದಗ

ರಾಜ್ಯದಲ್ಲಿ ಗರಿಷ್ಠ ಪ್ರಮಾಣದ ವೆಂಟಿಲೇಟರ್ ಹೊಂದಿರುವ ಬೆಡ್‌ಗಳಿರುವ ಆಸ್ಪತ್ರೆ ಎಂಬ ಖ್ಯಾತಿಗೆ ಗದಗ ಜಿಮ್ಸ್ ಪಾತ್ರವಾಗಿದೆ. ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ 110 ಐಸಿಯು ಬೆಡ್‌ಗಳನ್ನು ಹೊಂದಿದೆ. ಒಟ್ಟು 440 ಬೆಡ್ ಸಾಮರ್ಥ್ಯದ ಆಸ್ಪತ್ರೆಯಲ್ಲಿ ಈಗ 110 ಬೆಡ್‌ಗಳಿಗೆ ವೆಂಟಿಲರ್ ಅಳವಡಿಸಿದ್ದು, ಇದರ ಪ್ರಮಾಣ ಶೇ. 25ಕ್ಕೇರಿದೆ ಎಂದು ಜಿಮ್ಸ್ ನಿರ್ದೇಶಕ ಡಾ| ಪಿ.ಎಸ್. ಭೂಸರಡ್ಡಿ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಈ ಸೌಲಭ್ಯ ತುಂಬ ಅನುಕೂಲ ಕಲ್ಪಿಸಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ, ಆರೋಗ್ಯ ಸಚಿವ ಡಾ| ಕೆ. ಸುಧಾಕರ್, ಶಾಸಕರಾದ ಎಚ್.ಕೆ. ಪಾಟೀಲ, ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ಸಂಸದರಾದ ಶಿವಕುಮಾರ್ ಉದಾಸಿ, ಪಿ.ಸಿ. ಗದ್ದಿಗೌಡರ್, ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ ಮಾನೆ, ಪ್ರದೀಪ ಶೆಟ್ಟರ್, ದ್ರಾಕ್ಷಿರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ..ಕೆ. ಅನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ| ಪಿ.ಜಿ. ಗಿರೀಶ್, ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು, ಜಿ.ಪಂ. ಸಿಇಒ ಭರತ್ ಎಸ್., ಎಸ್ಪಿ ಯತೀಶ್ ಎನ್. ಮತ್ತಿತರರಿಗೆ ಡಾ| ಪಿ.ಎಸ್. ಭೂಸರಡ್ಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕೈ ಮುಗಿತೀವಿ, ದಯವಿಟ್ಟು ಕಾಳಜಿ ಕೇಂದ್ರಕ್ಕೆ ಬನ್ನಿ! ಅಧಿಕಾರಿಗಳಿಂದ ಸೋಂಕಿತರ ಮನವೊಲಿಕೆ

ಎರಡು ವರ್ಷದ ಮಗುವಿದೆ, ಕೊರೊನಾಗೆ ಮನೇಲೇ ಚಿಕಿತ್ಸೆ ಪಡೀತೀವಿ ಎಂದ ಕುಟುಂಬದ ಮನವೊಲಿಕೆ

ವಿಜಯಸಾಕ್ಷಿ ಸುದ್ದಿ, ಮುಂಡರಗಿ

ಸೋಂಕು ತಗುಲಿದ್ದ ಕುಟುಂಬವೊಂದರ ಮನವೊಲಿಸಿದ ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ಕರೆ ತಂದ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಾರೋಗೇರಿ ‌ಗ್ರಾಮದ ಮಗು ಸಮೇತ ಕುಟುಂಬದ ನಾಲ್ವರಿಗೆ ಎರಡು ದಿನಗಳ ಹಿಂದೆ ಪಾಸಿಟಿವ್ ಬಂದಿತ್ತು. ಆದರೆ ಅವರು ಆಸ್ಪತ್ರೆಗೆ ಬಾರದೆ‌ ಮನೆಯಲ್ಲಿಯೇ ಇದ್ದರು. ಇದನ್ನು ಗಮನಿಸಿದ ಅಧಿಕಾರಿಗಳು ತಲಾಠಿ, ಪಿಡಿಒ ಮೂಲಕ ಕಾಳಜಿ ಕೇಂದ್ರಕ್ಕೆ ಕಳಿಸಿ ಕೊಡಲು ಮನವಿ ಮಾಡಿದ್ದರು. ಆದರೆ ಇದಕ್ಕೆ ಕುಟುಂಬದವರು ಸುತಾರಾಂ ಒಪ್ಪಲಿಲ್ಲ.

ಎರಡು ವರ್ಷದ ಮಗುವಿದೆ‌, ನಾವು ಮನೆಯಲ್ಲೇ ಇದ್ದು ಚಿಕಿತ್ಸೆ ತಗೋತೀವಿ ಅಂದರು. ಹಾಗೇ ಮಾಡೋಕೆ ಬರಲ್ಲ‌, ದಯವಿಟ್ಟು ಮುಂಡರಗಿಯ ಕಾಳಜಿ ಕೇಂದ್ರಕ್ಕೆ ಬನ್ನಿ ಎಂದು ಅಧಿಕಾರಿಗಳು ಮನವೊಲಿಸಲು ಯತ್ನಿಸಿದರು. ಅದಕ್ಕೂ ಕೇರ್ ಮಾಡದ ಕುಟುಂಬವನ್ನು ಕಾಳಜಿ ಕೇಂದ್ರಕ್ಕೆ ಕರೆತರಲು ಖುದ್ದು ತಾಲೂಕು ಆಡಳಿತವೇ ಅವರ ಮನೆಗೆ ಬಂದಿತ್ತು. ಅವರ ಮನವಿಗೆ ಒಪ್ಪದ ಕುಟುಂಬ ಆಗಲ್ಲ ಆಗಲ್ಲ ಅಂದಿತು. ಕೊನೆಗೆ ಅಧಿಕಾರಿಗಳು ಅವರ ಮನೆ ಮುಂದೆ ಕೈ ಮುಗಿದು ಕುಳಿತು, ದಯವಿಟ್ಟು ಕೋವಿಡ್ ಕೇರ್ ಸೆಂಟರ್ ಗೆ ಬನ್ನಿ ಎಂದು ಮನವಿ ಮಾಡಿದರು.

ಕರಗಿದ ಮನಸ್ಸು

ಅಧಿಕಾರಿಗಳೆಲ್ಲರೂ ಸೇರಿ, ಹೀಗೆ ಕೈ ಮುಗಿದು ಕುಳಿತಿದ್ದನ್ನು ಕಂಡ‌ ಆ ಕುಟುಂಬದವರ ಮನಸ್ಸು ಕರಗಿತು. ಅಧಿಕಾರಿಗಳು ತಂದಿದ್ದ ವಾಹನದಲ್ಲಿ ಕುಳಿತು ಕೋವಿಡ್ ಕೇರ್ ಸೆಂಟರ್ ಗೆ ಬಂದರು.

ಮುಂಡರಗಿ ತಹಸೀಲ್ದಾರ್ ಆಶಪ್ಪ ಪೂಜಾರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್. ಕಲ್ಮನಿ, ಹಾರೋಗೇರಿ ಗ್ರಾ.ಪಂ. ಅಧ್ಯಕ್ಷ ರವಿ, ಡಂಬಳ ಹೋಬಳಿಯ ಕಂದಾಯ ನಿರೀಕ್ಷಕ ಎಂ.ಎ. ನದಾಫ್, ಪಿಡಿಒ ಮಹೇಶ್ ಅಲ್ಲಿಪುರ ಸೇರಿದಂತೆ ನೋಡಲ್ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಚಿರತೆ ಬಲಿ!

ವಿಜಯಸಾಕ್ಷಿ ಸುದ್ದಿ, ಮೈಸೂರು

ಕಿಡಿಗೇಡಿಗಳ ಅಟ್ಟಹಾಸಕ್ಕೆ ಎರಡು ಚಿರತೆ ಬಲಿಯಾಗಿರುವ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶುಂಠಿ ಬೆಳೆ ಬೆಳೆದಿರುವ ಜಮೀನಿನಲ್ಲಿ ಎರಡು ಚಿರತೆಗಳ ಶವ ಕಂಡು ಬಂದಿದ್ದರಿಂದಾಗಿ ಈ ವಿಷಯ ಬೆಳಕಿಗೆ ಬಂದಿದೆ. 5 ವರ್ಷದ ಹೆಣ್ಣು ಚಿರತೆ ಮತ್ತು 1 ವರ್ಷದ ಮರಿ ಚಿರತೆ ವಿಷ ತಿಂದು ಸ್ಥಳದಲ್ಲಿಯೇ ಸಾವನ್ನಪ್ಪಿವೆ.

ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ ಎನ್ನಲಾಗಿದೆ. ಕಡಬೂರು ಗ್ರಾಮದ ರಾಮನಾಯಕ ಎಂಬುವರ ಶುಂಠಿ ಬೆಳೆ ಜಮೀನು ಮತ್ತು ಬಾಳೆ ತೋಟದಲ್ಲಿ 2 ಚಿರತೆಗಳ ಶವ ಸಿಕ್ಕಿವೆ.

ಈ ಚಿರತೆಗಳು ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ವಿಷ ತಿಂದು ಸಾವನ್ನಪ್ಪಿವೆ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ನಂಜನಗೂಡಿನ ಅರಣ್ಯ ಇಲಾಖಾಧಿಕಾರಿ ರಕ್ಷಿತ್ ಮತ್ತು ಜನಾರ್ದನ್ ಸೇರಿದಂತೆ ಇನ್ನಿತರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳಕ್ಕೆ ಶ್ವಾನ ದಳದ ಸಿಬ್ಬಂದಿ ಆಗಮಿಸಿ ಕಿಡಿಗೇಡಿಗಳ ಹೆಜ್ಜೆ ಗುರುತಿನ ಪರಿಶೀಲನೆ ನಡೆಸಲಾಗುತ್ತಿದೆ. ಕಳೆದ ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ 3 ಚಿರತೆಗಳು ಕೂಡ ಸಾವನ್ನಪ್ಪಿದ್ದವು. ಆದರೆ, ಚಿರತೆಗಳು ಸಾವನ್ನಪ್ಪಿ ವರ್ಷ ಕಳೆದರೂ ಸಾವಿಗೆ ಕಾರಣರಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿಲ್ಲ. ಈಗ ಸದ್ಯ ಮತ್ತೆ ನಂಜನಗೂಡು ತಾಲೂಕಿನ ಕಡೂಬೂರು ಗ್ರಾಮದಲ್ಲಿ 2 ಚಿರತೆಗಳು ವಿಷ ತಿಂದು ಸಾವನ್ನಪ್ಪಿವೆ. ಇನ್ನಾದರೂ ಅರಣ್ಯ ಅಧಿಕಾರಿಗಳು ಇಂತಹ ಕಿಡಿಗೇಡಿಗಳ ಹೆಡೆಮೂರಿ ಕಟ್ಟುವರೇ? ಕಾಯ್ದು ನೋಡಬೇಕಿದೆ.

error: Content is protected !!