Home Blog Page 3238

ಡಿಸೇಲ್ ಟ್ಯಾಂಕರ್ ಹಾಯ್ದು ಪಾದಚಾರಿ ಸ್ಥಳದಲ್ಲಿಯೇ ಸಾವು

ವಿಜಯಸಾಕ್ಷಿ ಸುದ್ದಿ, ನವಲಗುಂದ:

ಇಲ್ಲಿಯ ಹುಬ್ಬಳ್ಳಿ ವಿಜಯಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿನ ನವೀನ ಹೊಟೇಲ್ ಎದುರುಗಡೆ ನಡೆದು ಹೋಗುತ್ತಿದ್ದ ಪಾದಚಾರಿಯ ಮೇಲೆ ಡಿಸೇಲ್ ಟ್ಯಾಂಕರ್ ಹರಿದ ಪರಿಣಾಮ ಒರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.
       

ಟ್ಯಾಂಕರ್ ನವಲಗುಂದದಿಂದ ನರಗುಂದ ಕಡೆಗೆ ಹೊರಟಿತ್ತು, ಪಾದಚಾರಿ ಅಂದಾನಗೌಡ ವೆಂಕನಗೌಡ ಕಲ್ಲನಗೌಡರ (64) ಎಂಬಾತ ಟ್ಯಾಂಕರ್ ಹಿಂಬದಿಯ ಗಾಲಿಗೆ ಸಿಲುಕಿದ ಪರಿಣಾಮ ತಲೆಯಲ್ಲಿನ ಮೆದುಳು ಹೊರಬಂದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಇದಾಗಿದೆ.
 

ಘಟನಾ ಸ್ಥಳಕ್ಕೆ ಸಿಪಿಐ ಚಂದ್ರಶೇಖರ ಮಠಪತಿ, ಪಿಎಸ್‍ಐ ಕಲ್ಮೇಶ ಬೆನ್ನೂರ ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ.

ಇಲ್ಲಿಯ ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಮೇಲಿಂದ ಮೇಲೆ ಅಪಘಾತಗಳ ಸಂಭವಿಸುತ್ತಲೇ ಇವೆ. ದಿನನಿತ್ಯ ವಾಹನ ದಟ್ಟಣೆಯಿಂದ ಜನ ಬೇಸತ್ತು ಹೋಗಿದ್ದಾರೆ.

ಬೈಪಾಸ್ ರಸ್ತೆ ಮಾಡಿ ಪಟ್ಟಣದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಬೇಕೆಂದು ಬೈಪಾಸ್ ಹೋರಾಟ ಸಮಿತಿಯವರು ಮೇಲಿಂದ ಮೇಲೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಪೊಲೀಸ್ ಇಲಾಖೆಯವರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗುತ್ತಿಲ್ಲವಾದ ಕಾರಣ ಅಫಘಾತಗಳು ಹೆಚ್ಚಾಗುತ್ತಿವೆ ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನವಲಗುಂದ ಪುರಸಭೆ ಕಾಂಗ್ರೆಸ್ ಮಡಿಲಿಗೆ; ಅಧ್ಯಕ್ಷರಾಗಿ ಅಪ್ಪಣ್ಣ ಹಳ್ಳದ, ಉಪಾಧ್ಯಕ್ಷರಾಗಿ ಪದ್ಮಾವತಿ ಪೂಜಾರ ಆಯ್ಕೆ

ವಿಜಯಸಾಕ್ಷಿ ಸುದ್ದಿ, ನವಲಗುಂದ:

ತೀವ್ರ ಕುತೂಹಲ ಮೂಡಿಸಿದ್ದ ಸ್ಥಳೀಯ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಅಪ್ಪಣ್ಣ ಹಳ್ಳದ ಹಾಗೂ ಉಪಾಧ್ಯಕ್ಷರಾಗಿ ಪದ್ಮಾವತಿ ಪೂಜಾರ ಶುಕ್ರವಾರ ಆಯ್ಕೆಯಾದರು.

ಅಧ್ಯಕ್ಷ ಅಪ್ಪಣ್ಣ ಹಳ್ಳದ

ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಅಪ್ಪಣ್ಣ ಹಳ್ಳದ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪದ್ಮಾವತಿ ಪೂಜಾರ ನಾಮಪತ್ರ ಸಲ್ಲಿಸಿದರೆ, ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಮಹಾಂತೇಶ ಕಲಾಲ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗೊಲ್ಲರ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷೆ ಪದ್ಮಾವತಿ ಪೂಜಾರ

ಒಟ್ಟು 23 ಸ್ಥಾನಗಳಲ್ಲಿ ಕಾಂಗ್ರೆಸ್ 17 ಹಾಗೂ ಬಿಜೆಪಿ 6 ಸದಸ್ಯರನ್ನು ಹೊಂದಿತ್ತು. ಗೆಲುವಿಗಾಗಿ ಮ್ಯಾಜಿಕ್ ಸಂಖ್ಯೆ 13 ಪಡೆಯಬೇಕಾಗಿತ್ತು. ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಶಿಗ್ಲಿ ಹಾಗೂ ಅಪ್ಪಣ್ಣ ಹಳ್ಳದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಗಳಿಗೆಯಲ್ಲಿ ಪಕ್ಷದ ಹಿರಿಯರು ಅಪ್ಪಣ್ಣ ಹಳ್ಳದ ಹೆಸರು ಸೂಚಿಸಿದ್ದರಿಂದ ಅದೃಷ್ಟ ಖುಲಾಯಿಸಿತು.

ಅಪ್ಪಣ್ಣ ಹಳ್ಳದ ವಾರ್ಡ ನಂ.6 ರಿಂದ ಪಕ್ಷೇತರರರಾಗಿ ಗೆದ್ದು ಬಂದು ನಂತರ ಜೆ.ಡಿ.ಎಸ್ ಸೇರ್ಪಡೆಯಾಗಿದ್ದರು. ಬದಲಾದ ರಾಜಕಾರಣದಲ್ಲಿ ಜೆಡಿಎಸ್ ಮುಖಂಡ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರಿಂದ ಜೆ.ಡಿ.ಎಸ್.ನ 9 ಹಾಗೂ ಪಕ್ಷೇತರರಾದ ಅಪ್ಪಣ್ಣ ಹಳ್ಳದ ಈಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರಿಂದ ಕಾಂಗ್ರೆಸ್ ಬಲ 17 ಕ್ಕೆ ಏರಿಕೆಯಾಗಿ ನಿಚ್ಚಳ ಬಹುಮತ ಇತ್ತು.

ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಹಶೀಲ್ದಾರ್ ಅನೀಲ ಬಡಿಗೇರ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಪ್ಪಣ್ಣ ಹಳ್ಳದ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪದ್ಮಾವತಿ ಪೂಜಾರ ಅವರು 13 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಿದರು.  ಬಿಜೆಪಿಯ ಮಹಾಂತೇಶ ಕಲಾಲ ಹಾಗೂ ಜ್ಯೋತಿ ಗೊಲ್ಲರ ಅವರು ಕೇವಲ 6 ಮತಗಳನ್ನು ಪಡೆದು ಪರಾಜಿತರಾದರು. ಮುಖ್ಯಾಧಿಕಾರಿ ಈರಪ್ಪ ಹಸಬಿ ಉಪಸ್ಥಿತರಿದ್ದರು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಮಡಿಲಿಗೆ ಬರುತ್ತಿದ್ದಂತೆಯೇ ಕಾರ್ಯಕರ್ತರು ಬಣ್ಣ ಎರಚಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ನಾಲ್ವರು ಸದಸ್ಯರು ಗೈರು

ಪ್ರಕಾಶ ಶಿಗ್ಲಿಗೆ ಅಧ್ಯಕ್ಷ ಸ್ಥಾನ ಕೈತಪ್ಪಿದ್ದರಿಂದ ಅಸಮಾದಾನಗೊಂಡ ಅವರ ಬೆಂಬಲಿಗ ಸದಸ್ಯರಾದ ಹುಸೇನಬಿ ಧಾರವಾಡ, ಹನಮಂತ ವಾಲ್ಮೀಕಿ, ಬಾಬಾಜಾನ ಮಕಾನದಾರ ಸೇರಿದಂತೆ ಒಟ್ಟು ನಾಲ್ವರು ಸದಸ್ಯರು ಗೈರಾದರು. ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ ಹಾಗೂ ಅಣ್ಣಿಗೇರಿ ಪುರಸಭೆ ಎರಡರಲ್ಲೂ ನಿಚ್ಚಳ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದುಕೊಂಡಿದ್ದು ಬಿಜೆಪಿಗೆ ಹಿನ್ನಡೆಯಾದಂತಾಗಿದೆ.  

ಹೃದಯಾಘಾತದಿಂದ ಸ್ವಾತಿ ಸಾವು; ಸ್ವಾತಿಯ ಸೇವೆ ನೆನೆದು ಕಂಬನಿ ಮಿಡಿದ ಪೊಲೀಸ್ ಇಲಾಖೆ

ವಿಜಯಸಾಕ್ಷಿ ಸುದ್ದಿ, ಗದಗ:

ಗದಗ ಜಿಲ್ಲಾ ಪೊಲೀಸ್ ಇಲಾಖೆಯ ಕಣ್ಮನಿಯಾಗಿ ಸುಮಾರು 11 ವರ್ಷ 07 ತಿಂಗಳುಗಳ ಕಾಲ ಸೇವೆ ಸಲ್ಲಿಸಿ, ವಿವಿಧ ಪ್ರಕರಣಗಳನ್ನು ಪತ್ತೆ ಮಾಡಿ ಇಲಾಖೆಯ ಗೌರವ ಹೆಚ್ಚಿಸಿದ್ದ ‘ಸ್ವಾತಿ ಎಂಬ ಹೆಸರಿನ ಶ್ವಾನವು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದೆ.

ಸ್ವಾತಿಯ ಅಗಲಿಕೆಗೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ವಾತಿಗೆ ಅಂತಿಮ ಗೌರವ ನಮನ ಸಲ್ಲಿಸಿದರು. ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸುವ ಮೂಲಕ ಪೊಲೀಸ್ ಇಲಾಖೆ ಸ್ವಾತಿಗೆ ಗೌರವ ವಂದನೆ ಸಲ್ಲಿಸಿತು.

‘ಲ್ಯಾಬ್ರಡರ್’ ಜಾತಿಯ ಸ್ವಾತಿ ಎಂಬ ಹೆಸರಿನ ಹೆಣ್ಣು ಶ್ವಾನವು 2011 ಸೆಪ್ಟಂಬರ್ 01 ರಂದು ಜನಿಸಿದ್ದು, 2013 ಜನೇವರಿ 01ರಂದು ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಸೇರ್ಪಡೆಗೊಂಡಿತ್ತು. 11 ವರ್ಷ 07 ತಿಂಗಳ ಕಾಲ ಸ್ಫೋಟಕ ವಸ್ತು ಶ್ವಾನವಾಗಿ ಕರ್ತವ್ಯ ನಿರ್ವಹಿಸಿದ್ದ ಸ್ವಾತಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅನೇಕ ಬಾರಿ ಶ್ಲಾಘಿಸಿತ್ತು.

ಗದಗನ ನಿವೃತ್ತ ಇಂಜನೀಯರ್ ಅಶೋಕ ಬರಗುಂಡಿ ಅವರು ಪೊಲೀಸ್ ಇಲಾಖೆಗೆ ಕೊಡುಗೆಯಾಗಿ ನೀಡಿದ್ದ ಸ್ವಾತಿಯ ಮೇಲುಸ್ತುವಾರಿಯನ್ನು ಡಿಎಸ್‌ಪಿ ಡಿಎಆರ್ ಮತ್ತು ಆರ್‌ಪಿಐ ಡಿಎಆರ್‌ನವರು ವಹಿಸಿದ್ದರು. ಅಲ್ಲದೆ,ಎಂ.ಎಸ್.ಕುಂಬಾರ (ಎಎಚ್‌ಸಿ-229), ಎನ್.ಆರ್.ಕಂದಗಲ್ (ಎಪಿಸಿ-214) ಸ್ವಾತಿಯ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿದ್ದರು.

ಸ್ವಾತಿಯು ಸುಮಾರು 10 ತಿಂಗಳುಗಳ ಕಾಲ ಬೆಂಗಳೂರಿನ ಆಡುಗೋಡಿಯಲ್ಲಿರುವ ಪೊಲೀಸ್ ಶ್ವಾನದಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿತ್ತು. ಅಲ್ಲದೆ, ರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವ, ಗೋವಾ ಚಿಕ್ ಶೃಂತ ಸಭೆ, ಮುಖ್ಯಮಂತ್ರಿಗಳು ಸೇರಿದಂತೆ ವಿವಿಐಪಿ ಹಾಗೂ ವಿಐಪಿಗಳ ಅನೇಕ ಭದ್ರತಾ ಕರ್ತವ್ಯ ನಿರ್ವಹಿಸಿದ ಕೀರ್ತಿ ಸ್ವಾತಿಯದ್ದಾಗಿದೆ.

ಸ್ವಾತಿಯ ಕೊನೆಯದಾಗಿ ನಿನ್ನೆ ಅಂದರೆ ಮೇ ೧ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಆರ್‌ಎಸ್‌ಎಸ್ ಸರಸಂಚಾಲಕ ಮೋಹನ್ ಭಾಗವತ್‌ರವರ ಭದ್ರತಾ ಕರ್ತವ್ಯ ನಿರ್ವಹಿಸಿದ್ದ ಸ್ವಾತಿಯು ಇಂದು ಕೊನೆಯುಸಿರೆಳೆದಿದ್ದು, ಪೊಲೀಸ್ ಇಲಾಖೆಗೆ ಅತ್ಯಂತ ದುಃಖವನ್ನುಂಟು ಮಾಡಿದ್ದಾಳೆ.

ಸ್ವಾತಿಯು ಗದಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 95 ವಿವಿಧ ಪ್ರಕರಣಗಳಲ್ಲಿ ಕರ್ತವ್ಯ ನಿರ್ವಹಿಸಿದೆ. ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಸುಳಿವು ನೀಡಿ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ವಾತಿ ಇನ್ನು ನೆನಪು ಮಾತ್ರ.

10 ಲಕ್ಷ ರೂ. ಕಳ್ಳತನ ಪ್ರಕರಣ; ಲಕ್ಷ್ಮೇಶ್ವರ ಪೊಲೀಸರ ಬಲೆಗೆ ಬಿದ್ದ ಅಂತರ್ ಜಿಲ್ಲಾ ಖದೀಮರು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ:

ಲಕ್ಷ್ಮೇಶ್ವರ ಠಾಣೆಯ ಸಿಪಿಐ ವಿಕಾಸ ಲಮಾಣಿ ನೇತೃತ್ವದ ಪೊಲೀಸ್ ತಂಡ ಶನಿವಾರ ಅಂತರ್ ಜಿಲ್ಲಾ ಕಳ್ಳರ ಬಂಧನ ಮಾಡಿ ಬಂಧಿತರಿಂದ 5 ಲಕ್ಷ ನಗದು, ಬೈಕ್ ವಶಪಡಿಸಿಕೊಂಡಿದ್ದಾರೆ.

ಕಳೆದ ಏ.8ರಂದು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ ಪಟ್ಟಣದ ಗಣ್ಯ ವ್ಯಾಪಾರಸ್ಥರ ಕಾರ್ಖೂನರೊಬ್ಬರು 10 ಲಕ್ಷ ರೂ.ಗಳ ಹಣವನ್ನು ತೆಗೆದುಕೊಂಡು(ಡ್ರಾ) ಬೈಕ್‌ನ ಸೈಡ್ ಬ್ಯಾಗ್‌ನಲ್ಲಿರಿಸಿಕೊಂಡು ಹೋಗುವಾಗ ೩ ಜನ ಕಳ್ಳರ ತಂಡ ಹಣವನ್ನು ಕ್ಷಣಾರ್ಧದಲ್ಲಿ ಎಗರಿಸಿಕೊಂಡು ಪರಾರಿಯಾಗಿದ್ದರು.

ಘಟನೆಯಿಂದ ವ್ಯಾಪಾರಸ್ಥರು, ಸಾರ್ವಜನಿಕರು ಭೀತಿಗೊಳಗಾಗಿದ್ದರು. ಪ್ರಕರಣದ ಜಾಡು ಹಿಡಿದು ಹೊರಟ ಸಿಪಿಐ ವಿಕಾಸ ಲಮಾಣಿ ನೇತೃತ್ವದ 5 ಜನ ಪೊಲೀಸರ ತಂಡ 8 ದಿನಗಳ ಕಾಲ ಗದಗ, ಹುಬ್ಬಳ್ಳಿ, ಬೆಳಗಾವಿ, ಭದ್ರಾವತಿ, ಬಾಗೇಪಲ್ಲಿ ಸೇರಿ ಅನೇಕ ಕಡೆ ಸುತ್ತಿದ್ದಾರೆ.

ಜಿಲ್ಲೆಯ ಎಸ್‌ಪಿ ಶಿವಪ್ರಕಾಶ್ ದೇವರಾಜು ಮತ್ತು ಡಿಎಸ್‌ಪಿ ಶಿವಾನಂದ ಪವಾಡಶೆಟ್ಟೆ ಅವರ ಮಾರ್ಗದರ್ಶನದಲ್ಲಿ ಕೊನೆಗೂ ಕಳ್ಳರ ಪತ್ತೇ ಮಾಡಿ ಅವರಿಂದ 5 ಲಕ್ಷ ರೂ.ನಗದು, ಬೈಕ್ ವಶಪಡಿಸಿಕೊಳ್ಳುವಲ್ಲಿ ಯಶ್ವಸಿಯಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಂಜಿ ಕೃಷ್ಣಪ್ಪ ಮತ್ತು ಈತನ ಮಗ (ಬಾಲಾಪರಾಧಿ) ಬಂಧಿತರಾಗಿದ್ದಾರೆ. ಇನ್ನೋರ್ವ ಆರೋಪಿತ ಭದ್ರಾವತಿಯ ಪಿ.ಆಂಜನೇಯಲು ನಾಪತ್ತೆಯಾಗಿದ್ದಾನೆ.
ಸಿಪಿಐ ವಿಕಾಸ ಲಮಾಣಿ, ಪಿಎಸ್‌ಐ ಪ್ರಕಾಶ ಡಿ, ಅವರೊಂದಿಗೆ ಸಿಬ್ಬಂದಿಗಳಾದ ಪಿ.ಎಂ.ರಗ್ರೇಜಿ, ಎಂ.ಜಿ.ವಡ್ಡಟ್ಟಿ, ಎಚ್.ಐ.ಕಲ್ಲಣ್ಣವರ, ಡಿ.ಎಸ್.ನದಾಫ್ ಅವರು ಕಾರ್ಯನಿರ್ವಹಿಸಿದ್ದು, ಪೊಲೀಸರ ಕಾರ್ಯಕ್ಕೆ ಪಟ್ಟಣದ ವ್ಯಾಪಾರಸ್ಥರು, ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

ನೀರು ಪಾಲಾಗಿದ್ದ ಬಾಲಕರ ಮೃತದೇಹ‌ ಪತ್ತೆ; ಕ್ವಾರಿ ಮಾಲೀಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಗದಗ:

ಅಕ್ರಮ ಗಣಿಗಾರಿಕೆಯಿಂದ ಕೆರೆಯಂತೆ ನಿರ್ಮಾಣವಾಗಿರುವ ಗರ್ಸಿನ ಕಣಿವೆಯಲ್ಲಿ ನಿಂತಿದ್ದ ನೀರಿನಲ್ಲಿ ಶುಕ್ರವಾರ ಸಂಜೆ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರ ಮೃತದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸಿ ಶನಿವಾರ ಹೊರತೆಗೆದಿದ್ದಾರೆ.

ಗದಗ ತಾಲ್ಲೂಕಿನ ಚಿಕ್ಕಹಂದಿಗೋಳ ಗ್ರಾಮದ ಹೊರವಲಯದಲ್ಲಿರುವ ಗರ್ಸಿನ ಕಣಿವೆಯಲ್ಲಿ ( ಕ್ವಾರಿ) ಶುಕ್ರವಾರ ಶಾಗೋಟಿ ಗ್ರಾಮದ ಬಸವರಾಜ್ ರೋಣದ (17), ಈರಪ್ಪ ಜೋಡಿಗೇರ (17) ಎಂಬ ಇಬ್ಬರು ಬಾಲಕರು ಈಜಲು ಹೋಗಿ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಬಾಲಕರ ಪತ್ತೆಗಾಗಿ
ಅಣ್ಣಿಗೇರಿ, ಗದಗ ಅಗ್ನಿಶಾಮಕ ದಳದ ಸಿಬ್ಬಂದಿ, ಚಿಕ್ಕಹಂದಿಗೋಳ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಹಾಗೂ ಪೊಲೀಸರು ಬೋಟ್ ಮೂಲಕ ಕಾರ್ಯಾಚರಣೆ ನಡೆಸಿದ್ದರು. ಬೆಳಕಿನ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ ಶೋಧ ಕಾರ್ಯ ಸ್ಥಗಿತಗೊಳಿಸಿದ್ದರು. ಶನಿವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರೆಸಿ ಮೃತದೇಹ‌ ಪತ್ತೆ ಹಚ್ಚಿ ಹೊರ ತೆಗೆದಿದ್ದಾರೆ.

ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸಿದ ಕ್ವಾರಿ ಮಾಲೀಕರ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈಜಲು ಹೋದ ಇಬ್ಬರು ಬಾಲಕರು ನೀರು ಪಾಲು; ಕುಟುಂಬಸ್ಥರ ಆಕ್ರಂದನ

ವಿಜಯಸಾಕ್ಷಿ ಸುದ್ದಿ, ಗದಗ:

ಅಕ್ರಮ ಗಣಿಗಾರಿಕೆಯಿಂದ ಕೆರೆಯಂತೆ ನಿರ್ಮಾಣವಾಗಿರುವ ಗರ್ಸಿನ ಕಣಿವೆಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಶುಕ್ರವಾರ ನಡೆದಿದೆ.

ಗದಗ ತಾಲ್ಲೂಕಿನ ಚಿಕ್ಕಹಂದಿಗೋಳ
ಗ್ರಾಮದ ಹೊರವಲಯದಲ್ಲಿರುವ ಗರ್ಸಿನ ಕಣಿವೆಯಲ್ಲಿ ಈ ಘಟನೆ ನಡೆದಿದೆ. ಶಾಗೋಟಿ ಗ್ರಾಮದ ರಾಜು ರೋಣದ (17), ಈರಪ್ಪ (17) ಎಂಬ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.

ಕೆರೆಯಂತಿರುವ ಗರ್ಸಿನ ಕಣಿವೆಯಲ್ಲಿ ಮುಳಗಿರುವ ಬಾಲಕರಿಗಾಗಿ ಅಣ್ಣಿಗೇರಿ, ಹುಬ್ಬಳ್ಳಿ ಅಗ್ನಿಶಾಮಕ ದಳದ ಸಿಬ್ಬಂದಿ, ಚಿಕ್ಕಹಂದಿಗೋಳ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಹಾಗೂ ಪೊಲೀಸರು ಬೋಟ್ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಇನ್ನು ಬಾಲಕರು ನೀರು ಪಾಲಾಗಿರುವ ಕಣಿವೆಯ ಪಕ್ಕದಲ್ಲಿ ಬಾಲಕರ ಬಟ್ಟೆಗಳು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮನೆಗೆ ಬಿದ್ದ ಸಿಡಿಲು; ಮಹಿಳೆ ಸ್ಥಳದಲ್ಲೇ ಸಾವು

ವಿಜಯಸಾಕ್ಷಿ ಸುದ್ದಿ, ಮುಂಡರಗಿ:

ಗದಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಗುರುವಾರ ಗುಡುಗು ಸಹಿತ ಮಳೆ ಸುರಿಯಿತು.

ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿಯ ಜಂತ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆಯಿತು. ಲತಾ ಮಲ್ಲಪ್ಪ ಕಲಕೇರಿ (27) ಮೃತ ದುರ್ದೈವಿಯಾಗಿದ್ದಾಳೆ.

ಮನೆಯ ಮೇಲಿದ್ದ ಡಿಟಿಎಚ್( ಡಿಶ್‌ಗೆ) ಸಿಡಿಲು ಬಡಿದಿದ್ದು, ಇದರ ಪರಿಣಾಮ ವೈಯರ್ ತುಂಡರಿಸಿದೆ. ಅಲ್ಲದೆ, ಸಿಡಿಲಿನ ಶಾಖಕ್ಕೆ ಮನೆಯಲ್ಲಿದ್ದ ಲತಾ ಕಲಕೇರಿ ಮೃತಪಟ್ಟಿದ್ದಾಳೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ನಿರೀಕ್ಷಕ ಎಂ.ಎ.ನದಾಫ ಹಾಗೂ ಗ್ರಾಮಲೆಕ್ಕಾಧಿಕಾರಿ ಸತ್ಯಪ್ಪ ಗೋಡಿ ಪರಿಶೀಲನೆ ನಡೆಸಿದರು. ಮುಂಡರಗಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲಾರಿಗೆ ಕಾರು ಡಿಕ್ಕಿ; ನಗರಸಭೆ ಉಪಾಧ್ಯಕ್ಷೆ ಪಾರು

ವಿಜಯಸಾಕ್ಷಿ ಸುದ್ದಿ, ಗದಗ:

ವೇಗವಾಗಿ ಬರುತ್ತಿದ್ದ ಕಾರು ಮುಂದೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಗರಸಭೆ ಉಪಾಧ್ಯಕ್ಷೆ, ಹಾಗೂ ಕಾರು ಚಾಲನೆ ಮಾಡುತ್ತಿದ್ದ ಪುತ್ರ ಗಾಯಗೊಂಡ ಘಟನೆ ತಾಲ್ಲೂಕಿನ ಹುಲಕೋಟಿ ಗ್ರಾಮದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಗದಗ ಕಡೆ ಬರುತ್ತಿದ್ದಾಗ ಈ ದುರ್ಘಟನೆ ಜರುಗಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಏರಬ್ಯಾಗ್ ಒಪನ್ ಆದ ಪರಿಣಾಮ ಯಾವುದೇ ಗಂಭೀರ ಗಾಯವಾಗಿಲ್ಲ ಎನ್ನಲಾಗಿದೆ.

ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ತಲೆಗೆ ಸ್ವಲ್ಪ ಪ್ರಮಾಣದ ಪೆಟ್ಟು ಬಿದ್ದಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪುತ್ರ ದತ್ತು ಬಾಕಳೆ ಕಾರು ಚಾಲನೆ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ಸಚಿವ ಪಾಟೀಲರ ಮನೆ ಮುಂದೆ ದಿಂಗಾಲೇಶ್ವರ ಶ್ರೀಗಳ ಧರಣಿ; ಶ್ರೀಗಳು ನರಗುಂದ ಪ್ರವೇಶಿಸದಂತೆ ತಡೆಯಲು ಪೊಲೀಸರ ನಿಯೋಜನೆ

ವಿಜಯಸಾಕ್ಷಿ ಸುದ್ದಿ, ನರಗುಂದ:

ಬಾಲೆಹೊಸೂರು ಮತ್ತು ಶಿರಹಟ್ಟಿಯ ಜ.ಫ.ದಿಂಗಾಲೇಶ್ವರ ಸ್ವಾಮೀಜಿ ಹಾಗೂ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ ಮಧ್ಯದ ‌ಸಮರ‌ ಮುಂದುವರೆದಿದೆ. ಇದರ ಭಾಗವಾಗಿ ದಿಂಗಾಲೇಶ್ವರ ಶ್ರೀಗಳು ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲರ ಮನೆ ಮುಂದೆ ಇಂದು(ಏ.27) ಧರಣಿ ಕೂರುತ್ತಿದ್ದಾರೆ. ಆದರೆ, ಶ್ರೀಗಳನ್ನು ನರಗುಂದ ಪ್ರವೇಶಿಸದಂತೆ ತಡೆಯಲು ಪೊಲೀಸರು ಕಣ್ಗಾವಲಿರಿಸಿದ್ದಾರೆ‌.

ಹೌದು, ಧರಣಿ ಕೂರಲು ನರಗುಂದಕ್ಕೆ ಹೋಗುವ ಶಿರಹಟ್ಟಿಯ ದಿಂಗಾಲೇಶ್ವರ ಶ್ರೀಗಳನ್ನ ತೆಡೆಯಲು ಗದಗದಿಂದ ನರಗುಂದಕ್ಕೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಶ್ರೀಗಳನ್ನು ತಡೆಯಲು ಡಿವೈಎಸ್ ಪಿ ವೈ.ಎಸ್.ಏಗನಗೌಡರ್, ಸಿಪಿಐ ಎಂ.ಜಿ.ಮಠಪತಿ ನೇತೃತ್ವದಲ್ಲಿ ನಾಕಾಬಂದಿ ಹಾಕಲಾಗಿದೆ.

ನರಗುಂದ ಹೊರವಲಯದ ಕಲಕೇರಿ ಸೇರಿದಂತೆ ಪಟ್ಟಣದ ಮೂರು ಭಾಗದಲ್ಲಿ ನಾಕಾಬಂದಿ ಹಾಕಿರುವ ಪೊಲೀಸರು ಕುರ್ಲಗೆರಿ, ಅಳಗವಾಡಿ ರಸ್ತೆಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಮೂಲಕ ದಿಂಗಾಲೇಶ್ವರ ಶ್ರೀಗಳು ನರಗುಂದ ಪ್ರವೇಶಿಸಿದಂತೆ ನೋಡಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ‌. ಕೆಎಸ್ ಆರ್ ಪಿ ತುಕಡಿ ಜೊತೆ 30ಕ್ಕೂ ಹೆಚ್ಚು ಪೊಲೀಸರರನ್ನು ನಿಯೋಜಿಸಲಾಗಿದೆ. ಈಗಾಗಲೇ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಫೆ‌.21ನ್ನು ಭಾವೈಕ್ಯತಾ ದಿನವನ್ನಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗದುಗಿನ ತೋಂಟದಾರ್ಯ ಜಾತ್ರಾ ಮಹೋತ್ಸವದಂದು ಘೋಷಿಸಿದ್ದರು. ಇದಕ್ಕೆ ದಿಂಗಾಲೇಶ್ವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ದಿಂಗಾಲೇಶ್ವರ ಹೇಳಿಕೆ,‌ ನಡೆ‌ ಖಂಡಿಸಿ ದಿಂಗಾಲೇಶ್ವರ ಶ್ರೀಗಳ ಪೂರ್ವಾಶ್ರಮದ ಬಗ್ಗೆ ಗೊತ್ತು‌ ಎಂದು ಸಚಿವ ಸಿ.ಸಿ.ಪಾಟೀಲರು ಹೇಳಿದ್ದರು. ಸಚಿವರ ಹೇಳಿಕೆಗೆ ಕೆಂಡಾಮಂಡಲರಾಗಿದ್ದ ದಿಂಗಾಲೇಶ್ವರ ಶ್ರೀಗಳು ಸಾಬೀತು ಪಡಿಸುವಂತೆ ಒತ್ತಾಯಿಸಿ
ಸಚಿವರ ವಿರುದ್ಧ ಧರಣಿ ಕೂರಲು ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆ, ಧರೆಗುರುಳಿದ ಮರ; ಕೂದಲೆಳೆ ಅಂತರದಲ್ಲಿ ಪಾರಾದ ಬಸ್‌ನಲ್ಲಿದ್ದ ಪ್ರಯಾಣಿಕರು

ವಿಜಯಸಾಕ್ಷಿ ಸುದ್ದಿ, ಗದಗ:

ಜಿಲ್ಲೆಯ ಹಲವೆಡೆ ಸೋಮವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಗದಗ-ಬೆಟಗೇರಿ ನಗರದಲ್ಲಿ ಸುರಿದ ಗಾಳಿ, ಗುಡುಗು ಸಹಿತ ಭಾರೀ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದವು.

ಅವಳಿ ನಗರದ ಪಾಲಾ ಬದಾಮಿ ರಸ್ತೆಯ ಗಾಂಧಿ ಸರ್ಕಲ್ ಬಳಿ ಗಾಳಿ, ಮಳೆಯ ರಭಸಕ್ಕೆ ಬೃಹತ್ ಗಾತ್ರದ ಮರ ನೆಲಕ್ಕುರುಳಿತು. ಆದರೆ, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಬಸ್ ಮತ್ತು ಬಸ್‌ನಲ್ಲಿದ್ದ ಪ್ರಯಾಣಿಕರು ಸಾವಿನ ದವಡೆಯಿಂದ ಪಾರಾದ ಘಟನೆ ನಡೆಯಿತು. ಕಣ್ಣುಮುಂದೆಯೇ ಮರ ಬೀಳುವುದನ್ನು ಕಂಡ ಮರದ ಪಕ್ಕದಲ್ಲಿಯೇ ನಿಂತಿದ್ದ ಜನರ ಎದೆ ಒಂದು ಕ್ಷಣ ಝಲ್ಲೆನಿಸಿತು.

ಅದರಂತೆ, ಮಹಾತ್ಮಾ ಗಾಂಧಿ ವೃತ್ತ ಸೇರಿದಂತೆ ಅವಳಿ ನಗರದ ವಿವಿಧೆಡೆ ಅಳವಡಿಸಲಾಗಿದ್ದ ವಿವಿಧ ಕಾರ್ಯಕ್ರಮಗಳ ಪ್ಲೆಕ್ಸ್, ಬ್ಯಾನರ್‌ಗಳು ಹಾರಿಹೋದವು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಯಿತು.

error: Content is protected !!