Home Blog Page 3239

ಈಜಲು ಹೋದ ಇಬ್ಬರು ಬಾಲಕರು ನೀರು ಪಾಲು; ಕುಟುಂಬಸ್ಥರ ಆಕ್ರಂದನ

ವಿಜಯಸಾಕ್ಷಿ ಸುದ್ದಿ, ಗದಗ:

ಅಕ್ರಮ ಗಣಿಗಾರಿಕೆಯಿಂದ ಕೆರೆಯಂತೆ ನಿರ್ಮಾಣವಾಗಿರುವ ಗರ್ಸಿನ ಕಣಿವೆಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಶುಕ್ರವಾರ ನಡೆದಿದೆ.

ಗದಗ ತಾಲ್ಲೂಕಿನ ಚಿಕ್ಕಹಂದಿಗೋಳ
ಗ್ರಾಮದ ಹೊರವಲಯದಲ್ಲಿರುವ ಗರ್ಸಿನ ಕಣಿವೆಯಲ್ಲಿ ಈ ಘಟನೆ ನಡೆದಿದೆ. ಶಾಗೋಟಿ ಗ್ರಾಮದ ರಾಜು ರೋಣದ (17), ಈರಪ್ಪ (17) ಎಂಬ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.

ಕೆರೆಯಂತಿರುವ ಗರ್ಸಿನ ಕಣಿವೆಯಲ್ಲಿ ಮುಳಗಿರುವ ಬಾಲಕರಿಗಾಗಿ ಅಣ್ಣಿಗೇರಿ, ಹುಬ್ಬಳ್ಳಿ ಅಗ್ನಿಶಾಮಕ ದಳದ ಸಿಬ್ಬಂದಿ, ಚಿಕ್ಕಹಂದಿಗೋಳ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಹಾಗೂ ಪೊಲೀಸರು ಬೋಟ್ ಮೂಲಕ ಕಾರ್ಯಾಚರಣೆ ನಡೆಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಇನ್ನು ಬಾಲಕರು ನೀರು ಪಾಲಾಗಿರುವ ಕಣಿವೆಯ ಪಕ್ಕದಲ್ಲಿ ಬಾಲಕರ ಬಟ್ಟೆಗಳು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮನೆಗೆ ಬಿದ್ದ ಸಿಡಿಲು; ಮಹಿಳೆ ಸ್ಥಳದಲ್ಲೇ ಸಾವು

ವಿಜಯಸಾಕ್ಷಿ ಸುದ್ದಿ, ಮುಂಡರಗಿ:

ಗದಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಗುರುವಾರ ಗುಡುಗು ಸಹಿತ ಮಳೆ ಸುರಿಯಿತು.

ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿಯ ಜಂತ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆಯಿತು. ಲತಾ ಮಲ್ಲಪ್ಪ ಕಲಕೇರಿ (27) ಮೃತ ದುರ್ದೈವಿಯಾಗಿದ್ದಾಳೆ.

ಮನೆಯ ಮೇಲಿದ್ದ ಡಿಟಿಎಚ್( ಡಿಶ್‌ಗೆ) ಸಿಡಿಲು ಬಡಿದಿದ್ದು, ಇದರ ಪರಿಣಾಮ ವೈಯರ್ ತುಂಡರಿಸಿದೆ. ಅಲ್ಲದೆ, ಸಿಡಿಲಿನ ಶಾಖಕ್ಕೆ ಮನೆಯಲ್ಲಿದ್ದ ಲತಾ ಕಲಕೇರಿ ಮೃತಪಟ್ಟಿದ್ದಾಳೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ನಿರೀಕ್ಷಕ ಎಂ.ಎ.ನದಾಫ ಹಾಗೂ ಗ್ರಾಮಲೆಕ್ಕಾಧಿಕಾರಿ ಸತ್ಯಪ್ಪ ಗೋಡಿ ಪರಿಶೀಲನೆ ನಡೆಸಿದರು. ಮುಂಡರಗಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲಾರಿಗೆ ಕಾರು ಡಿಕ್ಕಿ; ನಗರಸಭೆ ಉಪಾಧ್ಯಕ್ಷೆ ಪಾರು

ವಿಜಯಸಾಕ್ಷಿ ಸುದ್ದಿ, ಗದಗ:

ವೇಗವಾಗಿ ಬರುತ್ತಿದ್ದ ಕಾರು ಮುಂದೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಗರಸಭೆ ಉಪಾಧ್ಯಕ್ಷೆ, ಹಾಗೂ ಕಾರು ಚಾಲನೆ ಮಾಡುತ್ತಿದ್ದ ಪುತ್ರ ಗಾಯಗೊಂಡ ಘಟನೆ ತಾಲ್ಲೂಕಿನ ಹುಲಕೋಟಿ ಗ್ರಾಮದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಗದಗ ಕಡೆ ಬರುತ್ತಿದ್ದಾಗ ಈ ದುರ್ಘಟನೆ ಜರುಗಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಏರಬ್ಯಾಗ್ ಒಪನ್ ಆದ ಪರಿಣಾಮ ಯಾವುದೇ ಗಂಭೀರ ಗಾಯವಾಗಿಲ್ಲ ಎನ್ನಲಾಗಿದೆ.

ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ತಲೆಗೆ ಸ್ವಲ್ಪ ಪ್ರಮಾಣದ ಪೆಟ್ಟು ಬಿದ್ದಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪುತ್ರ ದತ್ತು ಬಾಕಳೆ ಕಾರು ಚಾಲನೆ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ಸಚಿವ ಪಾಟೀಲರ ಮನೆ ಮುಂದೆ ದಿಂಗಾಲೇಶ್ವರ ಶ್ರೀಗಳ ಧರಣಿ; ಶ್ರೀಗಳು ನರಗುಂದ ಪ್ರವೇಶಿಸದಂತೆ ತಡೆಯಲು ಪೊಲೀಸರ ನಿಯೋಜನೆ

ವಿಜಯಸಾಕ್ಷಿ ಸುದ್ದಿ, ನರಗುಂದ:

ಬಾಲೆಹೊಸೂರು ಮತ್ತು ಶಿರಹಟ್ಟಿಯ ಜ.ಫ.ದಿಂಗಾಲೇಶ್ವರ ಸ್ವಾಮೀಜಿ ಹಾಗೂ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರ ಮಧ್ಯದ ‌ಸಮರ‌ ಮುಂದುವರೆದಿದೆ. ಇದರ ಭಾಗವಾಗಿ ದಿಂಗಾಲೇಶ್ವರ ಶ್ರೀಗಳು ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲರ ಮನೆ ಮುಂದೆ ಇಂದು(ಏ.27) ಧರಣಿ ಕೂರುತ್ತಿದ್ದಾರೆ. ಆದರೆ, ಶ್ರೀಗಳನ್ನು ನರಗುಂದ ಪ್ರವೇಶಿಸದಂತೆ ತಡೆಯಲು ಪೊಲೀಸರು ಕಣ್ಗಾವಲಿರಿಸಿದ್ದಾರೆ‌.

ಹೌದು, ಧರಣಿ ಕೂರಲು ನರಗುಂದಕ್ಕೆ ಹೋಗುವ ಶಿರಹಟ್ಟಿಯ ದಿಂಗಾಲೇಶ್ವರ ಶ್ರೀಗಳನ್ನ ತೆಡೆಯಲು ಗದಗದಿಂದ ನರಗುಂದಕ್ಕೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಶ್ರೀಗಳನ್ನು ತಡೆಯಲು ಡಿವೈಎಸ್ ಪಿ ವೈ.ಎಸ್.ಏಗನಗೌಡರ್, ಸಿಪಿಐ ಎಂ.ಜಿ.ಮಠಪತಿ ನೇತೃತ್ವದಲ್ಲಿ ನಾಕಾಬಂದಿ ಹಾಕಲಾಗಿದೆ.

ನರಗುಂದ ಹೊರವಲಯದ ಕಲಕೇರಿ ಸೇರಿದಂತೆ ಪಟ್ಟಣದ ಮೂರು ಭಾಗದಲ್ಲಿ ನಾಕಾಬಂದಿ ಹಾಕಿರುವ ಪೊಲೀಸರು ಕುರ್ಲಗೆರಿ, ಅಳಗವಾಡಿ ರಸ್ತೆಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಮೂಲಕ ದಿಂಗಾಲೇಶ್ವರ ಶ್ರೀಗಳು ನರಗುಂದ ಪ್ರವೇಶಿಸಿದಂತೆ ನೋಡಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ‌. ಕೆಎಸ್ ಆರ್ ಪಿ ತುಕಡಿ ಜೊತೆ 30ಕ್ಕೂ ಹೆಚ್ಚು ಪೊಲೀಸರರನ್ನು ನಿಯೋಜಿಸಲಾಗಿದೆ. ಈಗಾಗಲೇ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಫೆ‌.21ನ್ನು ಭಾವೈಕ್ಯತಾ ದಿನವನ್ನಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗದುಗಿನ ತೋಂಟದಾರ್ಯ ಜಾತ್ರಾ ಮಹೋತ್ಸವದಂದು ಘೋಷಿಸಿದ್ದರು. ಇದಕ್ಕೆ ದಿಂಗಾಲೇಶ್ವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ದಿಂಗಾಲೇಶ್ವರ ಹೇಳಿಕೆ,‌ ನಡೆ‌ ಖಂಡಿಸಿ ದಿಂಗಾಲೇಶ್ವರ ಶ್ರೀಗಳ ಪೂರ್ವಾಶ್ರಮದ ಬಗ್ಗೆ ಗೊತ್ತು‌ ಎಂದು ಸಚಿವ ಸಿ.ಸಿ.ಪಾಟೀಲರು ಹೇಳಿದ್ದರು. ಸಚಿವರ ಹೇಳಿಕೆಗೆ ಕೆಂಡಾಮಂಡಲರಾಗಿದ್ದ ದಿಂಗಾಲೇಶ್ವರ ಶ್ರೀಗಳು ಸಾಬೀತು ಪಡಿಸುವಂತೆ ಒತ್ತಾಯಿಸಿ
ಸಚಿವರ ವಿರುದ್ಧ ಧರಣಿ ಕೂರಲು ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆ, ಧರೆಗುರುಳಿದ ಮರ; ಕೂದಲೆಳೆ ಅಂತರದಲ್ಲಿ ಪಾರಾದ ಬಸ್‌ನಲ್ಲಿದ್ದ ಪ್ರಯಾಣಿಕರು

ವಿಜಯಸಾಕ್ಷಿ ಸುದ್ದಿ, ಗದಗ:

ಜಿಲ್ಲೆಯ ಹಲವೆಡೆ ಸೋಮವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಗದಗ-ಬೆಟಗೇರಿ ನಗರದಲ್ಲಿ ಸುರಿದ ಗಾಳಿ, ಗುಡುಗು ಸಹಿತ ಭಾರೀ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದವು.

ಅವಳಿ ನಗರದ ಪಾಲಾ ಬದಾಮಿ ರಸ್ತೆಯ ಗಾಂಧಿ ಸರ್ಕಲ್ ಬಳಿ ಗಾಳಿ, ಮಳೆಯ ರಭಸಕ್ಕೆ ಬೃಹತ್ ಗಾತ್ರದ ಮರ ನೆಲಕ್ಕುರುಳಿತು. ಆದರೆ, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಬಸ್ ಮತ್ತು ಬಸ್‌ನಲ್ಲಿದ್ದ ಪ್ರಯಾಣಿಕರು ಸಾವಿನ ದವಡೆಯಿಂದ ಪಾರಾದ ಘಟನೆ ನಡೆಯಿತು. ಕಣ್ಣುಮುಂದೆಯೇ ಮರ ಬೀಳುವುದನ್ನು ಕಂಡ ಮರದ ಪಕ್ಕದಲ್ಲಿಯೇ ನಿಂತಿದ್ದ ಜನರ ಎದೆ ಒಂದು ಕ್ಷಣ ಝಲ್ಲೆನಿಸಿತು.

ಅದರಂತೆ, ಮಹಾತ್ಮಾ ಗಾಂಧಿ ವೃತ್ತ ಸೇರಿದಂತೆ ಅವಳಿ ನಗರದ ವಿವಿಧೆಡೆ ಅಳವಡಿಸಲಾಗಿದ್ದ ವಿವಿಧ ಕಾರ್ಯಕ್ರಮಗಳ ಪ್ಲೆಕ್ಸ್, ಬ್ಯಾನರ್‌ಗಳು ಹಾರಿಹೋದವು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಯಿತು.

ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸ; ರೌಡಿಶೀಟರ್ ಗ್ಯಾಂಗ್ ಥಳಿತಕ್ಕೆ ಯುವಕ ಸಾವು

ವಿಜಯಸಾಕ್ಷಿ ಸುದ್ದಿ, ಗದಗ:

ಗದಗ-ಬೆಟಗೇರಿ ಅವಳಿ ನಗರದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಬಡ್ಡಿ ವ್ಯವಹಾರಸ್ಥರ ಅಟ್ಟಹಾಸಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ.

ಹೌದು, ಬಡ್ಡಿ ದಂಧೆಕೋರರರಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಮೃತ್ಯುಂಜಯ ಭರಮಗೌಡರ್ (26) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಜಿಮ್ಸ್ ನಲ್ಲಿ ಸಾವನ್ನಪ್ಪಿದ್ದಾನೆ.

ಕಳೆದ ಮಾರ್ಚ್ 23ರಂದು‌ ಬಡ್ಡಿ ಹಣಕ್ಕಾಗಿ ಯುವಕನನ್ನು ರೌಡಿಶೀಟರ್ ಉಮೇಶ್ ಸುಂಕದ ಹಾಗೂ ಉದಯ ಸುಂಕದ ಮತ್ತು ಅವರ ಗ್ಯಾಂಗ್ ಮೃತ್ಯುಂಜಯ ಭರಮಗೌಡರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು.
ಮೂರು ದಿನ‌ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದರು.

ಮೃತ್ಯುಂಜಯ ಭರಮಗೌಡರ್ ಮಾಡಿದ್ದ 2 ಲಕ್ಷ ರೂ. ಸಾಲಕ್ಕೆ ಒಂದು ಲಕ್ಷ ರೂ. ಬಡ್ಡಿ ಹಣ ಕೊಡುವಂತೆ ದಂಧೆಕೋರರು ಒತ್ತಾಯಿಸಿದ್ದರು.
ಹಣ ವಸೂಲಿ‌ ಮಾಡುವ ಸಲುವಾಗಿ ಬಡ್ಡಿ ಜಮೀನಿಗೆ ಕರೆದ್ಯೊಯ್ದು ಹಿಗ್ಗಾಮುಗ್ಗಾ ಥಳಿಸಿದ್ದರು. ಮಾಧ್ಯಮದಲ್ಲಿ ಸುದ್ದಿ ಪ್ರಸಾರದ ಬಳಿಕ ಪೊಲೀಸರು ಉಮೇಶ್ ಸುಂಕದ ಸೇರಿದಂತೆ ಮೂವರನ್ನು ಬಂಧಿಸಿದ್ದರು.

ಬಡ್ಡಿ ದಂಧೆಕೋರರಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮೃತ್ಯುಂಜಯ ಭರಮಗೌಡರ್ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ 29 ದಿನಗಳ ಬಳಿಕ ಕೊನೆಯುಸಿರೆಳೆದಿದ್ದಾನೆ‌.

ಗದಗನ ಬೆಟಗೇರಿ ಭಾಗದಲ್ಲಿ ವ್ಯಾಪಕ ಬಡ್ಡಿ ವ್ಯವಹಾರದ ಆರೋಪ ಕೇಳಿ‌ ಬರುತ್ತಿದ್ದು, ಬಡ್ಡಿ ದಂಧೆಕೋರರಿಗೆ ಪೊಲೀಸರು ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಇನ್ನಷ್ಟು ಜೀವ ಬಲಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಅವಳಿ ನಗರದ ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ‌.

ಪ್ರತ್ಯೇಕ ಪ್ರಕರಣ; ಜಿಲ್ಲೆಯಲ್ಲಿ ಸಿಡಿಲಿಗೆ ಮೂವರು ಸ್ಥಳದಲ್ಲೇ ಸಾವು

ವಿಜಯಸಾಕ್ಷಿ ಸುದ್ದಿ, ಮುಂಡರಗಿ/ಶಿರಹಟ್ಟಿ:

ಶನಿವಾರ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಸುರಿದ ಮಳೆಗೆ ಕುರಿಗಾಯಿ, ಮಾವಿನ ಮರಗಳ ಕಾವಲುಗಾರ ಹಾಗೂ ದನಗಾಯಿ ಅಸುನೀಗಿರುವ ಎರಡು ಪತ್ಯೇಕ ಘಟನೆಗಳು ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕಿನಲ್ಲಿ ನಡೆದಿವೆ.

ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಹನುಮಂತಪ್ಪ ಸಿದ್ದಪ್ಪ ಮನ್ನಾಪುರ (೨೨) ಎಂಬ ಕುರಿಗಾಹಿ ಸಿಡಿಲು ಬಡಿದು ಸಾವಿಗೀಡಾಗಿದ್ದಾನೆ. ಕುರಿಗಳನ್ನು ರಕ್ಷಿಸಲು ಹೋಗಿ ಹನುಮಂತಪ್ಪ ಮನ್ನಾಪುರ ಜೀವ ಕಳೆದುಕೊಂಡಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಕಂದಾಯ ನಿರೀಕ್ಷಕ ಎಂ.ಎ.ನದಾಫ. ಉಪ ತಹಶಿಲ್ದಾರ ಸಿ‌.ಕೆ.ಬಳೂಟಗಿ. ಗ್ರಾಮಲೆಕ್ಕಾಧಿಕಾರಿ ಕು.ಸೌಮ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅದರಂತೆ, ಶಿರಹಟ್ಟಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು, ಸಂಜೆ ಸುರಿದ ಗುಡುಗು ಸಹಿತ ಮಳೆಯಿಂದ ರಕ್ಷಿಸಿಕೊಳ್ಳಲು ಜಮೀನಿನಲ್ಲಿರುವ ಮಾವಿನ ಮರದ ಕೆಳಗೆ ದನ ಮೇಯಿಸಲು ತೆರಳಿದ್ದ ಶಿರಹಟ್ಟಿ ತಾಲೂಕಿನ ಹರಿಪುರ ಗ್ರಾಮದ ಮುರುಗೇಶ್ ಈಶ್ವರಪ್ಪ ಹೊಸಮನಿ(೪೪), ಮಾವಿನ ಮರ ಕಾಯುತ್ತಿದ್ದ ಖಾನಾಪುರ ಗ್ರಾಮದ ಬಾಬುಸಾಬ್ ಖಾದಿರಸಾಬ್ ದೊಡ್ಡಮನಿ(೫೫) ಎಂಬುವವರು ಸಿಡಿಲು ಬಡಿದು ಸ್ಥಳದಲ್ಲೇ ಅಸುನೀಗಿದ್ದಾರೆ. ಘಟನಾ ಸ್ಥಳಕ್ಕೆ ಶಿರಹಟ್ಟಿ ಸಿಪಿಐ ವಿಕಾಸ್ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಕ್ಷ್ಮೇಶ್ವರ ಸುತ್ತಮುತ್ತ ಆಲಿಕಲ್ಲು ಮಳೆ ಸುರಿದರೆ, ಗದಗ-ಬೆಟಗೇರಿ ಅವಳಿ ನಗರದಲ್ಲಿ ತುಂತುರು ಮಳೆಯಾಯಿತು. ಬಿಸಿಲಿನ ಬೇಗೆಯಿಂದ ಬಳಲಿದ್ದ ಭೂಮಿಗೆ ತಂಪೆರೆಯಿತು.

ರೌಡಿಶೀಟರ್ ಪುಂಡಾಟ, ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ, ಬೈಕ್ ಗೆ ಬೆಂಕಿ; ಬೆಟಗೇರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ವಿಜಯಸಾಕ್ಷಿ ಸುದ್ದಿ, ಗದಗ:

ಮಹಿಳೆಗೆ ಮೆಸೇಜ್ ಮಾಡುವಲ್ಲಿ ಉಂಟಾದ ವೈಷಮ್ಯದಿಂದಾಗಿ ವ್ಯಕ್ತಿವೊರ್ವನಿಗೆ ಚಾಕು ಇರಿದು ಹತ್ಯೆಗೈದಿರುವ ಘಟನೆ ಬೆಟಗೇರಿಯ ಮಂಜುನಾಥ ನಗರದಲ್ಲಿ ಶನಿವಾರ ನಡೆದಿದ್ದು, ಘಟನೆಯ ಬಳಿಕ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಗಜೇಂದ್ರಸಿಂಗ್ ಎಂಬ ವ್ಯಕ್ತಿಯೇ ಚಾಕು ಇರಿತಕ್ಕೊಳಗಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದು, ರೌಡಿಶೀಟರ್ ಆಗಿರುವ ಶಿವರಾಜ್ ಪೂಜಾರ ಎಂಬುವವನು ಚಾಕು ಇರಿದಿದ್ದಾನೆ. ಅಷ್ಟೇ ಅಲ್ಲದೆ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ. ಮಹಿಳೆಗೆ ಮೆಸೇಜ್ ಮಾಡುವಲ್ಲಿ ಉಂಟಾದ ವೈಷಮ್ಯದಿಂದಾಗಿ ರೌಡಿ ಶೀಟರ್ ಶಿವರಾಜ್ ಹಾಗೂ ಆತನ ಹಿಂಬಾಲಕ, ಶುಕ್ರವಾರ ಸಂಜೆ ಗಜೇಂದ್ರಸಿಂಗ್ ಮನೆಗೆ ಬಂದು ದಮ್ಕಿ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಕುಟುಂಬಸ್ತರು ಆರೋಪಿಸಿದ್ದಾರೆ.

ರೌಡಿ ಶೀಟರ್ ಶಿವರಾಜ್ ಪೂಜಾರ್ ಗೆ ಗಜೆಂದ್ರಸಿಂಗ್ ಮತ್ತು ಆತನ ಸಹೋದರ ಸೇರಿ ಶುಕ್ರವಾರ ಹಲ್ಲೆ ಮಾಡಿದ್ದರ ಬಗ್ಗೆ ಕೇಳಲು ಹೋದಾಗ ವಾಗ್ವಾದ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಶಿವರಾಜ್ ಹಾಗೂ ‌ಗಜೇಂದ್ರಸಿಂಗ್ ಮಧ್ಯೆ ಪರಸ್ಪರ ಚಾಕು ಇರಿತವಾಗಿದೆ. ಆದರೆ ಶಿವರಾಜ್ ನ ಬಲವಾದ ಚಾಕು ಇರಿತದಿಂದ ಗಜೇಂದ್ರ ನಿಗೆ ತೀವ್ರ ರಕ್ತಸ್ರಾವ ಆಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಗಜೇಂದ್ರ ಸಿಂಗ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತ ಗಜೇಂದ್ರ ಸಿಂಗ್

ಇನ್ನು ಸ್ನೇಹಿತ ಗಜೇಂದ್ರಸಿಂಗ್‌ನಿಗೆ ಚಾಕು ಇರಿದಿದ್ದಕ್ಕೆ ಆಕ್ರೋಶಗೊಂಡ ಗಜೇಂದ್ರನ ಹಿಂಬಾಲಕರು ಶಿವರಾಜ್ ಪೂಜಾರ್ ಹಾಗೂ ಮಲ್ಲೇಶ್ ಕಣಕೆ ಎಂಬುವವರಿಗೆ ಚಾಕು ಹಾಕಿದ್ದಾರೆ. ಸದ್ಯ ಈ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಬೆಟಗೇರಿಯ ಮಂಜುನಾಥ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಬೀಡುಬಿಟ್ಟಿದ್ದಾರೆ.

ಪರಸ್ಪರ ಚಾಕು ಇರಿದಿರುವವರು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಗಜೇಂದ್ರಸಿಂಗ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ, ಶಿವರಾಜ್ ಪೂಜಾರ್ ಕಳೆದ ನಗರಸಭೆ ಚುನಾವಣೆಯಲ್ಲಿ ೪ನೇ ವಾರ್ಡಿನಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯ ಪತಿಯ ಸಹೋದರನಾಗಿದ್ದಾನೆ. ನಗರಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಗಜೇಂದ್ರಸಿಂಗ್ ಪ್ರಚಾರ ಮಾಡಿದ್ದನಂತೆ. ಇದು ಶಿವರಾಜ್ ಪೂಜಾರ್‌ನನ್ನು ಕೆರಳಿಸಿತ್ತು. ಈ ಹಿನ್ನೆಲೆಯಲ್ಲಿ ರಾಜಕೀಯ ದ್ವೇಷದಿಂದಲೇ ನಿನ್ನೆ(ಏ.೧೫) ಶಿವರಾಜ್ ಗಜೇಂದ್ರನನ್ನು ಥಳಿಸಿದ್ದನಂತೆ. ಈ ಬಗ್ಗೆ ಬೆಟಗೇರಿ ಪೊಲೀಸ್ ಠಾಣೆಗೆ ಬಂದ ಗಜೇಂದ್ರನ ಮನೆಯವರು ಮೌಖಿಕವಾಗಿ ಪೊಲೀಸರಿಗೆ ತಿಳಿಸಿದ್ದರಂತೆ. ಆದರೆ, ಪೊಲೀಸರು ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಕ್ರಮ ಕೈಗೊಂಡಿದ್ದರೆ, ಇಂತಹ ದುರ್ಘಟನೆ ನಡೆಯುತ್ತಿರಲಿಲ್ಲ ಎಂದು ಗಜೇಂದ್ರನ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ತಿಳಿದ ಎಸ್ಪಿ ಶಿವಪ್ರಕಾಶ್ ದೇವರಾಜು ಆಸ್ಪತ್ರೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಸಿಡಿಲು ಬಡಿದು ಕುರಿಗಾಹಿ ಸಾವು

0

ವಿಜಯಸಾಕ್ಷಿ ಸುದ್ದಿ,
ಗದಗ: ತಾಲೂಕಿನ ಹಳ್ಳಿಕೇರಿ ಗ್ರಾಮದ ಹನುಮಂತಪ್ಪ ಸಿದ್ದಪ್ಪ ಕೋರಿ (22) ಎಂಬ ಕುರಿಗಾಹಿ ಸಿಡಿಲು ಬಡಿದು ಸಾವಿಗೀಡಾದ ಘಟನೆ ಶನಿವಾರ ಸಂಜೆ ವೆಂಕಟಾಪೂರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

ಬಿಸಿಲಿನ ಧಗೆಯಿಂದ ಬೇಸತ್ತಿದ್ದ ಜನರು, ಮಳೆಗಾಗಿ ಕಾಯುತ್ತಿದ್ದರು. ಕಳೆದ ಎರಡು ದಿನಗಳಿಂದ ಜಿಲ್ಲೆಯ ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇಂದು ಮಧ್ಯಾಹ್ನದಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದೆ.

ವೆಂಕಟಾಪೂರ ಗ್ರಾಮದ ಜಮೀನೊಂದರಲ್ಲಿ ಕುರಿಗಳನ್ನು ರಕ್ಷಿಸಲು ಹೋಗಿ ಹನುಮಂತಪ್ಪ ಕೋರಿ ಜೀವ ಕಳೆದುಕೊಂಡಿದ್ದಾನೆ. ಅಷ್ಟೇ ಅಲ್ದೇ ಮೂರು ಕುರಿಗಳು ಸಿಡಲಿಗೆ ಬಲಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ವಿಜಯಸಾಕ್ಷಿಗೆ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ಎಂ.ಎ.ನದಾಫ. ಉಪ ತಹಶಿಲ್ದಾರ ಸಿ‌.ಕೆ.ಬಳೂಟಗಿ. ಗ್ರಾಮಲೆಕ್ಕಾಧಿಕಾರಿ ಕು.ಸೌಮ್ಯ ಭೇಟಿ ಕೊಟ್ಟಿದ್ದರು.

‘ನೀವು ತೋರಿದ ಪ್ರೀತಿ, ರೊಟ್ಟಿಬುತ್ತಿ ಮರೆಯಲ್ಲ; ಕಳಸಾ-ಬಂಡೂರಿ ಹೋರಾಟ ಸ್ಮರಿಸಿ ಭಾವುಕರಾದ ಸಿಎಂ ಬೊಮ್ಮಾಯಿ

ನರಗುಂದ ವಿಧಾನಸಭಾ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಲೋಕಾರ್ಪಣೆ

ವಿಜಯಸಾಕ್ಷಿ ಸುದ್ದಿ, ನರಗುಂದ:

‘ನಿಮ್ಮೂರಿಗೆ ಬಂದಾಗ ನೀವು ತೋರಿಸಿರುವ ಪ್ರೀತಿ, ಕೊಟ್ಟಂತಹ ರೊಟ್ಟಿ ಬುತ್ತಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ರಾತ್ರಿಯಾದಾಗ ನಿಮ್ಮ ಕಟ್ಟೆಯ ಮೇಲೆ ನಮಗೆ ಜಾಗ ಕೊಟ್ರಿ. ಮನೆಯ ಮಗನಾಗಿ ನೋಡಿಕೊಂಡ್ರಿ. ಹೆಜ್ಜೆಗೆ ಹಜ್ಜೆ ಹಾಕಿದ್ರಿ. ಹೆಗಲಿಗೆ ಹೆಗಲು ಕೊಟ್ರಿ. ಬಿಸಿಲು, ಮಳೆ, ಚಳಿ ಲೆಕ್ಕಿಸದೆ ಮುಂದುವರೆದ ಹೋರಾಟದಲ್ಲಿ ನಮ್ಮೊಂದಿಗೆ ಉಪವಾಸ ಕೂತ್ರಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳಸಾ ಬಂಡೂರಿ ಯೋಜನೆಯ ಹೋರಾಟದ ಹೆಜ್ಜೆಗಳನ್ನು ಮೆಲುಕು ಹಾಕಿ ಭಾವುಕರಾದರು.

ಶುಕ್ರವಾರ ನರಗುಂದ ವಿಧಾನಸಭಾ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ‘ನಿಮ್ಮೆಲ್ಲರ ಒತ್ತಾಸೆಯಂತೆ ಅಂದಿನ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಅಂದಿನ ಜಲಸಂಪನ್ಮೂಲ ಸಚಿವ ಕೆ.ಎಸ್.ಈಶ್ವರಪ್ಪ ಅವರ ಇಚ್ಛಾಶಕ್ತಿಯಿಂದ ಕಳಸಾ ಬಂಡೂರಿಗೆ ಅಡಿಗಲ್ಲು ಹಾಕಲಾಯಿತು. ಅಡಿಗಲ್ಲು ಹಾಕಬಾರದೆಂದು ಪ್ರಯತ್ನಿಸಿದರೂ ದಿಟ್ಟತನದ ನಿರ್ಧಾರದಿಂದ ೨೦೦೮ರಲ್ಲಿ ಜಲಸಂಪನ್ಮೂಲ ಸಚಿವನಾಗಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿತು.

ಈ ಹಿಂದೆಯೇ ಐದೂವರೆ ಕಿ.ಮೀ. ಇಂಟರ್‌ಲಿಂಕ್ ಕ್ಯಾನಲ್ ಪೂರ್ಣಗೊಳಿಸಿದ್ದೇವೆ. ಕೇವಲ ನದಿ ನೀರನ್ನು ಸ್ವಲ್ಪಮಟ್ಟಿಗೆ ತಿರುಗಿಸಿದರೆ ಕಳಸಾ ಬಂಡೂರಿ, ಮಹದಾಯಿ, ಮಲಪ್ರಭೆ ಸೇರುತ್ತದೆ. ಆದರೆ, ಅವತ್ತಿನ ಗೋವಾ ಸರ್ಕಾರ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಒಂದು ಹನಿ ನೀರನ್ನು ಕರ್ನಾಟಕಕ್ಕೆ ಬಿಟ್ಟು ಕೊಡುವುದಿಲ್ಲವೆಂದು ಕೋರ್ಟ್‌ಗೆ ಹೋದರು. ಅವತ್ತಿನ ಯುಪಿಎ ಸರ್ಕಾರ ಟ್ರಿಬಿನಲ್ ತೀರ್ಪನ್ನು ನಮ್ಮ ವಿರುದ್ಧ ಮಾಡಿದ್ದನ್ನು ನೆನಪಿಟ್ಟುಕೊಳ್ಳಬೇಕು ಎಂದರು.

‘ಅಂದು ಕಳಸಾ ಬಂಡೂರಿ ವಿರೋಧಿಸಿದವರಿಂದು ಈ ಯೋಜನೆಗಾಗಿ ಪಾದಯಾತ್ರೆ ಮಾಡಿ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಅಲ್ಲದೆ, ಟ್ರಬಿನಲ್‌ಗೆ ಹೋಗಿ ನ್ಯಾಯ ಕೊಡುವಂತೆ ಆಗ್ರಹಿಸಿದ ಸಂದರ್ಭದಲ್ಲಿ ಮಹದಾಯಿಯನ್ನು ಮಲಪ್ರಭೆಗೆ ಜೋಡಿಸುವ ಇಂಟರ್‌ಲಿಂಕ್ ಕೆನಾಲ್‌ಗೆ ನೀರು ಹರಿಸುವುದಿಲ್ಲ, ನಾವು ನೀರು ಹರಿಯದಂತೆ ಗೋಡೆ ಕಟ್ಟುತ್ತೇವೆಂದು ಬರೆದು ಕೊಟ್ಟ ಪುಣ್ಯಾತ್ಮರು ಇವರು. ಹೀಗಾಗಿ ನಾವು ಮಾಡಿದ ಕೆನಾಲ್‌ಗೆ ಗೋಡೆ ಕಟ್ಟಿದವರನ್ನು, ಟ್ರಿಬಿನಲ್ ಮಾಡಿದವರನ್ನು, ನೀರು ಕೊಡುವುದಿಲ್ಲವೆಂದು ಹೇಳಿದವರನ್ನು ಬೆಂಬಲಿಸಬೇಕೋ? ಬೇಡವೋ? ಎಂಬ ತೀರ್ಮಾನ ನಿಮ್ಮದು ಎಂದು ಹೇಳಿದರು.

‘ಸುಮಾರು ಏಳು ವರ್ಷ ಅವರ ಕೈಯಲ್ಲಿ ಅಧಿಕಾರವಿತ್ತು. ಬಹುತೇಕ ಕಾಮಗಾರಿಗಳನ್ನು ನಾವು ಪೂರ್ಣಗೊಳಿಸಿದ್ವಿ. ಅವರಿಗೆ ರಾಜಕೀಯ ಇಚ್ಛಾಶಕ್ತಿ ಇದ್ದಿದ್ದರೆ ನೀರು ಕೊಟ್ಟು ದೊಡ್ಡ ಹೆಸರು ಮಾಡಿಕೊಳ್ಳಬಹುದಿತ್ತು. ಆದರೆ, ಈ ವೇಳೆ ರೈತ ಸಂಘಟನೆಗಳು ಹೋರಾಟ ಮಾಡಿದರೆ ಲಾಟಿ ಏಟಿನಿಂದ ಹೊಡೆದು ಹೋರಾಟ ಹತ್ತಿಕ್ಕಲು ಯತ್ನಿಸಿದವರು ಯಾರು?. ನವಲಗುಂದ, ನರಗುಂದದ ಮನೆಯಲ್ಲಿ ಗಂಡುಮಕ್ಕಳು ಇಲ್ಲದಾಗ ಹೆಣ್ಣುಮಕ್ಕಳನ್ನು ಬೂಟುಗಾಲಿನಲ್ಲಿ ಒದ್ದವರು ಯಾರು? ಎಂಬುವುದನ್ನು ಮರೆಯದೆ ನೆನಪಿಟ್ಟುಕೊಳ್ಳಬೇಕು ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

‘ಯಾವುದೇ ಹೋರಾಟ ಮಾಡುವಾಗ ಬದ್ಧತೆ ಇರಬೇಕಾಗುತ್ತದೆ. ಈಗ ನಾವು ಮಹದಾಯಿ ಕಾಮಗಾರಿ ಅನುಷ್ಠಾನಗೊಳಿಸಲು ಕೈಗೆತ್ತಿಕೊಂಡಿದ್ದು, ಅದಕ್ಕಾಗಿ ೨೦೨೨-೨೩ನೇ ಸಾಲಿನ ಬಜೆಟ್‌ನಲ್ಲಿ ೧,೦೦೦ ಕೋಟಿ ರೂ. ಮೀಸಲಿಡಲಾಗಿದೆ. ಈ ವರ್ಷ ಮೀಸಲಿಟ್ಟಿರುವ ಅನುದಾನ ಬಳಕೆ ಮಾಡಬೇಕು ಎಲ್ಲ ಅನುಮತಿ ಕೊಡಿ ಎಂದು ಕೇಂದ್ರ ಜಲಸಂಪನ್ಮೂಲ ಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದು, ಮಾಡಿಕೊಡುತ್ತೇನೆಂದು ಭರವಸೆ ನೀಡಿದ್ದಾರೆ. ಕಾನೂನಿನನ್ವಯ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆಂದ ಅವರು, ಅಧಿಕಾರದಲ್ಲಿ ಇರಲಿ, ಇರದಿರಲಿ ನಮ್ಮ ಬದ್ಧತೆ ಸದಾ ಇರುತ್ತದೆ. ಯಲ್ಲಮ್ಮನ ಅಡಿಯಿಂದ ಬಾದಾಮಿ, ಬನಶಂಕರಿಯ ಮುಡಿವರೆಗೂ ಮಹದಾಯಿ ಹರಿಯಬೇಕು ಎಂಬುವುದು ನಮ್ಮ ಇಚ್ಛಾಶಕ್ತಿಯಾಗಿದೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಇದೇ ವೇಳೆ ಕರ್ನಾಟಕ ಕೊಳಚೆ ನಿರ್ಮಾಣ ಮಂಡಳಿಯಿಂದ ಫಲಾನುಭವಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಕ್ಕುಪತ್ರ ವಿತರಿಸಿದರು.

ಸಿ.ಸಿ.ಪಾಟೀಲ ಮಾತನಾಡಿ, ಏಳು ಲಿಪ್ಟ್ ಇರಿವೇಷನ್ ಲಿಸ್ಟ್ ಮಾಡಿದ್ದರು. ಕಳಪೆ ಮಟ್ಟದ ಕಾಮಗಾರಿಯಿಂದ ನೀರಾವರಿ ಸೌಲಭ್ಯ ಸಿಕ್ಕಿಲ್ಲ. ೯೨ ಕೋಟಿ ರೂ. ನೀಡಿದರೆ ಹತ್ತು ಸಾವಿರ ರೈತರಿಗೆ ಅನುಕೂಲ ಆಗಲಿದೆ.

ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ, ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ಶಾಸಕ ಕಳಕಪ್ಪ ಬಂಡಿ, ವಿಪ ಸದಸ್ಯ ಎಸ್.ವ್ಹಿ.ಸಂಕನೂರ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ರೈತ ಯಾರಿಗೂ ಸೇರಿಲ್ಲ, ಎಲ್ಲರೂ ರೈತರಿಗೆ ಸೇರಿದ್ದಾರೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. ರೈತರು, ನೆಲ, ಜಲದ ವಿಷಯ ಬಂದಾಗ ಎಲ್ಲರೂ ಒಂದಾಗಿ ನಿಲ್ಲಬೇಕು. ಅಂದಾಗ ರೈತರ, ರಾಜ್ಯದ ಹಿತಾಸಕ್ತಿ ಕಾಪಾಡಲು ಸಾಧ್ಯ. ನೀರಾವರಿ ಯೋಜನೆಗಳು ಪರಿಪೂರ್ಣತೆಯಾದಾಗ, ರೈತನ ಬೆವರಿನ ಹನಿ ಭೂಮಿಗೆ ಬಿದ್ದಾಗ ಭೂತಾಯಿ ಬಂಗಾರದ ಬೆಳೆ ಕೊಡುತ್ತಾಳೆ’.

ಬಸವರಾಜ್ ಬೊಮ್ಮಾಯಿ, ಮುಖ್ಯಮಂತ್ರಿ
error: Content is protected !!