ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಈಚೆಗೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಬ್ಯಾಂಕ್ಗೆ ಕನ್ನ ಹಾಕಿದ್ದು, ಜಿಲ್ಲೆಯಲ್ಲಿ ಇದುವರೆಗೂ ನಡೆದ ದೊಡ್ಡ ದರೋಡೆ ಎಂಬ ಕುಖ್ಯಾತಿ ಹೊಂದಿತ್ತು.
ಸೆಪ್ಟೆಂಬರ್ 23ರಂದು ಬೇವೂರಿನ ಗ್ರಾಮೀಣ ಬ್ಯಾಂಕ್ಗೆ ಕನ್ನ ಹಾಕಿದ್ದ ಖದೀಮರು, 3.76 ಕೆಜಿ ಬಂಗಾರ, 21.75 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗೆ 4 ವಿಶೇಷ ತನಿಖಾ ತಂಡ ರಚಿಸಿದ್ದ ಎಸ್ಪಿ ಜಿ.ಸಂಗೀತಾ ಅವರು ದರೋಡೆಕೋರರ ಪತ್ತೆಗೆ ಜಾಲ ಬೀಸಿದ್ದರು.
ಮಹಾರಾಷ್ಟ್ರ ಮೂಲದ ದರೋಡೆಕೋರರು ಪೊಲೀಸ್ ಬಲೆಗೆ ಬಿದ್ದಿದ್ದು, ನಗದು ಹಾಗೂ ಬಂಗಾರ ವಶಪಡಿಸಿಕೊಳ್ಳಲಾಗಿದೆ. ಈ ಕುರಿತ ಸಮಗ್ರ ಮಾಹಿತಿಯನ್ನು ಅಕ್ಟೋಬರ್ 8ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗುವುದು ಎಂದು ಎಸ್ಪಿ ಜಿ.ಸಂಗೀತಾ ವಿಜಯಸಾಕ್ಷಿಗೆ ತಿಳಿಸಿದರು.
Exclusive…ಬ್ಯಾಂಕ್ ದರೋಡೆಕೋರರ ಬಂಧನ
ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ; ದುಷ್ಕರ್ಮಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ವಿಜಯಪುರ: ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರವಿಕಾಂತ ನಾಯ್ಕೋಡಿ ಮೇಲೆ ದುಷ್ಕರ್ಮಿಗಳಿಂದ ಮಾರಾಣಾಂತಿಕ ಹಲ್ಲೆ ನಡೆದಿದೆ.
ಸೋಮವಾರ ರಾತ್ರಿ ಸಿಂಧಗಿ ಪಟ್ಟಣದ ಹೊರವಲಯದ ಅರ್ಪಿತಾ ಧಾಬಾ ದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಕೆಲ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆ ಆಗಿವೆ. ರವಿಕಾಂತ ಮೇಲೆ ತಲವಾರ್ ನಿಂದ, ಧಾಬಾ ಸುತ್ತಲೂ ಓಡಾಡಿಸಿರುವ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.
ಹಲ್ಲೆ ನಂತರ ದುಷ್ಕರ್ಮಿಗಳು ಬೈಕ್ ಮೇಲೆ ಪರಾರಿ ಅಗಿದ್ದಾರೆ. ಘಟನೆಯಲ್ಲಿ ರವಿಕಾಂತ ಎಡಗೈಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಬಲೇಶ್ವರ ಗ್ರಾಮದ ಅನಿಲ್, ರಾಂಪೂರ ಪಿ.ಎ ಗ್ರಾಮದ ಯುವರಾಜ ಸೇರಿದಂತೆ ನಾಲ್ವರ ಮೇಲೆ ಸಿಂಧಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಣದ ವ್ಯವಹಾರವೇ ಈ ಹಲ್ಲೆಗೆ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ; ಸ್ಥಳೀಯರಿಂದ ಹಗ್ಗದಿಂದ ರಕ್ಷಣೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆ ಆಗಿದ್ದರೂ ಅವಾಂತರ ಮಾತ್ರ ನಿಂತಿಲ್ಲ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಬೈಕ್ ಓಡಿಸಿ, ಕೊಚ್ಚಿ ಹೋಗುತ್ತಿದ್ದ ಸವಾರನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕೊಪ್ಪಳ ತಾಲೂಕು ಶಿವಪುರ ಗ್ರಾಮದ ಹಳ್ಳದಲ್ಲಿ ಘಟನೆ ನಡೆದಿದೆ.
ಶಿವುಪುರ ಮತ್ತು ಹುಲಗಿ ನಡುವೆ ಹರಿಯೋ ಹಳ್ಳ ರಭಸವಾಗಿ ಹರಿಯುತ್ತಿದೆ. ಈ ನೀರಿನಲ್ಲೇ ಬೈಕ್ ಓಡಿಸಿದ್ದು, ರಭಸಕ್ಕೆ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ. ಬೈಕ್ ಸವಾರ ಹಳ್ಳದಲ್ಲಿದ್ದ ಗಿಡ ಹಿಡಿದುಕೊಂಡು ನಿಂತು, ಜೀವ ಉಳಿಸಿಕೊಂಡಿದ್ದಾನೆ. ಇದನ್ನು ನೋಡಿರುವ ಸ್ಥಳೀಯರು ಹಗ್ಗದ ಮೂಲಕ ಬೈಕ್ ಸವಾರರನ್ನು ರಕ್ಷಿಸಿದ್ದು, ವಿಡಿಯೋ ವೈರಲ್ ಆಗಿದೆ.
ವಿದೇಶಿಗರ ಹಾಟ್ ಸ್ಪಾಟ್: ವಿರುಪಾಪುರ ರೇಸಾರ್ಟ್ ತೆರವು ಕಾರ್ಯಾಚರಣೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ವಿದೇಶಿಗರ ಹಾಟ್ ಸ್ಪಾಟ್ ವಿರುಪಾಪುರ ಗಡ್ಡಿಯಲ್ಲಿ ಉಳಿದಿದ್ದ ಏಕೈಕ ರೆಸಾರ್ಟ್ ನೆಲಸಮಗೊಂಡಿದೆ. ಲಕ್ಷ್ಮಿ ಗೋಲ್ಡನ್ ಬೀಚ್ ರೆಸಾರ್ಟ್ ನೆಲಸಮವಾಗಿದ್ದು, ಕೊಪ್ಪಳ ಜಿಲ್ಲಾಡಳಿತದಿಂದ ರೆಸಾರ್ಟ್ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.
ಕಳೆದ 6 ತಿಂಗಳ ಹಿಂದೆ ಇಲ್ಲಿನ ಎಲ್ಲ ರೆಸಾರ್ಟ್ಗಳನ್ನು ಜಿಲ್ಲಾಡಳಿತ ತೆರವು ಮಾಡಿತ್ತು. ಲಕ್ಷ್ಮೀ ಗೋಲ್ಡನ್ ಬೀಚ್ ರೆಸಾರ್ಟ್ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ನಲ್ಲಿ ರೆಸಾರ್ಟ್ ಮಾಲೀಕರಿಗೆ ಸೋಲಾಗಿತ್ತು
ಈ ಹಿನ್ನೆಲೆಯಲ್ಲಿ ಗುರುವಾರದಿಂದ ರೆಸಾರ್ಟ್ ತೆರವು ಕಾರ್ಯಾಚರಣೆ ಆರಂಭಿಸಲಾಗಿತ್ತು. ರೇಸಾರ್ಟ್ನ ಮಾಲೀಕರು ಈ ರೀತಿ ನೆಲಸಮ ಮಾಡುವುದಾಗಿದ್ದರೆ ಪರವಾನಗಿ ಏಕೆ ಕೊಡಬೇಕಿತ್ತು? ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿದ ನಾವು ಸಾಯಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೈಕ್-ಟಾಟಾ ಏಸ್ ಢಿಕ್ಕಿ; ಮೂವರ ಸಾವು
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬೈಕ್ ಮತ್ತು ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ಶುಕ್ರವಾರ ಯಲಬುರ್ಗಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ.
ಗುರುವಾರ ಸಂಜೆ ಯಲಬುರ್ಗಾ ತಾಲೂಕಿನ ಬೇವೂರಿನಿಂದ ಚಿಕ್ಕ ಮ್ಯಾಗೇರಿಗೆ ಬೈಕ್ ಮೇಲೆ ಮೂವರು ತೆರಳುತ್ತಿದ್ದು ಅಪಘಾತ ನಡೆದ ತಕ್ಷಣ ಮೂವರಿಗೂ ಗಂಭೀರ ಗಾಯಗಳಾಗಿದ್ದು ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೂವರು ಮೃತಪಟ್ಟರು.
ಮೃತರನ್ನು ಬೈರಾಪುರ ಗ್ರಾಮದ ಈರಣ್ಣ ಸಿಂಧೋಗಿ (26), ಚಿಕ್ಕಮ್ಯಾಗೇರಿ ಗ್ರಾಮದ ಹನುಮಪ್ಪ ಉಪ್ಪಾರ್ (26) ಮತ್ತು ಧರ್ಮಪ್ಪ ಹೊಸಳ್ಳಿ (55) ಎಂದು ಗುರುತಿಸಲಾಗಿದೆ. ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ: ಶವದೊಂದಿಗೆ ರಾತ್ರಿಯಿಡೀ ಮಲಗಿದ್ದ ಲಲಿತಾ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅನೈತಿಕ ಸಂಬಂಧ ಹೊಂದಿದ್ದ ಪತ್ನಿ, ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡಾದಲ್ಲಿ ನಡೆದಿದೆ.
ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಕೊಲೆಯಾದ ದುರ್ದೈವಿಯಾಗಿದ್ದು, ಲಕ್ಷ್ಮಣ್ಣನ ಪತ್ನಿ ಲಲಿತಾ, ಆಕೆಯ ಪ್ರಿಯಕರ ಸೋಮಪ್ಪ ಲಮಾಣಿ ಜೊತೆ ಸೇರಿ, ಕುತ್ತಿಗೆಗೆ ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.
ಕಳೆದ ಹಲವು ವರ್ಷಗಳಿಂದ ಲಲಿತಾ, ಸೋಮಪ್ಪ ನಡುವೆ ಅನೈತಿಕ ಸಂಬಂಧ ಇತ್ತು. ಈ ವಿಷಯ ತಿಳಿದ ಪತಿ ಲಕ್ಷ್ಮಣ ಪತ್ನಿ ಲಲಿತಾ ಜೊತೆಗೆ ನಿತ್ಯವೂ ಜಗಳವಾಡುತ್ತಿದ್ದ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇದರಿಂದ ಬೇಸತ್ತು ಲಲಿತಾ ಹಾಗೂ ಪ್ರಿಯಕರ ಸೋಮಪ್ಪ ಲಕ್ಷ್ಮಣನನ್ನು ಕೊಲೆ ಮಾಡಿದ್ದಾರೆ. ಗೋವಾದ ಕಲ್ಲಂಗುಟನಲ್ಲಿ ದಂಪತಿಗಳು ಮೀನು ಮಾರಾಟ ಮಾಡುತ್ತಿದ್ದರು. ಲಾಕ್ ಡೌನ್ ಹಿನ್ನೆಲೆ ತಾಂಡಾಗೆ ವಾಪಾಸಾಗಿದ್ದರು. ಕೊಲೆಮಾಡಿದ ನಂತರ ಲಲಿತಾ ಎಂದಿನಂತೆ ಇದ್ದು, ಶವದೊಂದಿಗೆ ರಾತ್ರಿಯಿಡೀ ಮಲಗಿದ್ದಾಳೆ.
ಮುಂಜಾನೆ ಬಾಯಿ ಬಡಿದುಕೊಂಡು, ಜನರನ್ನು ಸೇರಿಸಿದ್ದಾಳೆ. ಬಂದ ಜನ ಕುತ್ತಿಗೆಯ ಮೇಲಿನ ಗುರುತು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕುತ್ತಿಗೆಗೆ ಬಿಗಿದಿದ್ದ ಹಗ್ಗ ವನ್ನು ಲಲಿತಾ ಹಾಗೂ ಸೋಮಪ್ಪ ಸುಟ್ಟು ಹಾಕಿದ್ದು, ಸಾಕ್ಷ್ಯ ನಾಶ ಮಾಡಿದ್ದಾರೆ. ರಾತ್ರಿಯೇ ಲಲಿತಾ ಹಾಗೂ ಸೋಮಪ್ಪರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿದ್ಯುತ್ ಸ್ಪರ್ಷ ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ವಿದ್ಯುತ್ ಸ್ಪರ್ಷಿಸಿ ಓರ್ವ ಸಾವನ್ನಪ್ಪಿ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ, ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪೂರ ಬಳಿ ನಡೆದಿದೆ.
ಗಂಗಪ್ಪ ಲಮಾಣಿ(30) ಮೃತ ದುರ್ದೈವಿಯಾಗಿದ್ದು, ರಮೇಶ್ ಲಮಾಣಿ(29)ಗೆ ಗಂಭೀರ ಗಾಯಗಳಾಗಿವೆ. ಗಾಯಾಳು ರಮೇಶ್ ನನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೂಲಿ ಕೆಲಸ ಮಾಡಿ ಮನೆಗೆ ತೆರಳುವ ವೇಳೆ ಈ ಘಟನೆ ನಡೆದಿದ್ದು, ವಿದ್ಯುತ್ ಸ್ಪರ್ಷವಾದ ವೇಳೆ ಇವರಿಬ್ಬರೂ ಬೊಲೇರೋ ವಾಹನದ ಮೇಲ್ಭಾಗದಲ್ಲಿ ಕುಳಿತು ಹೋಗುತ್ತಿದ್ದರು. ಈ ವೇಳೆ ತೋಟಕ್ಕೆ ಹಾಕಿದ ವಿದ್ಯುತ್ ವೈರ್ ತಾಗಿ ಈ ದುರ್ಘಟನೆ ನಡೆದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಡೂಪ್ಲಿಕೇಟ್ ಕೀಟನಾಶಕ ಮಾರಾಟ: ವೀರಭದ್ರೇಶ್ವರ ಅಗ್ರೋದ ಪರವಾನಿಗೆ ಸಸ್ಪೆಂಡ್
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಇಂದು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ) ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ವೇಳೆ ಕೀಟನಾಶಕ ಪರವಾನಿಗೆಯಲ್ಲಿ ಅನುಮತಿಸದೇ ಇರುವ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ, ನೋಂದಾಯಿತವಲ್ಲದ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ ಹಾಗೂ ಕೀಟನಾಶಕಗಳ ದಾಸ್ತಾನು ಷರತ್ತುಗಳನ್ನು ಉಲ್ಲಂಘಿಸಿರುವುದು ದೃಢಪಟ್ಟಿದೆ.
ಹೀಗಾಗಿ ಕೀಟನಾಟಕ ಕಾಯ್ದೆ 1968 ಹಾಗೂ ಕೀಟನಾಶಕ ನಿಯಮಗಳು 1971 ರನ್ವಯ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕಣವಿ ಇವರ ಪರವಾನಿಗೆಯನ್ನು ಅಮಾನತ್ತಿನಲ್ಲಿಟ್ಟು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪಬ್ಜಿಗೆ ಬಾಲಕ ಬಲಿ; ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣು
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗಜೇಂದ್ರಗಡ: ಪಬ್ಜಿ ಗೇಮ್ ಗೆ ಮಾರುಹೋದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಿರೇಪೇಟೆಯಲ್ಲಿರುವ ಮನೆಯಲ್ಲಿ 17 ವರ್ಷದ ಕಾರ್ತಿಕ್ ಬಬಲಿ ನೇಣಿಗೆ ಕೊರಳೊಡ್ಡಿದ್ದಾನೆ.
ಆನ್ ಲೈನ್ ಕ್ಲಾಸ್ ನೆಪದಲ್ಲಿ ಕಾರ್ತಿಕ್ ಪಬ್ಜಿ ಆಡುತ್ತಿದ್ದ. ಇದನ್ನು ಗಮನಿಸಿದ ಕುಟುಂಬಸ್ಥರು ಗೇಮ್ ಆಡುವುದನ್ನು ಬಿಟ್ಟು ಓದಿನ ಕಡೆ ಗಮನ ನೀಡು ಎಂದು, ಮೊಬೈಲ್ ಕಸಿದುಕೊಂಡಿದ್ದರು.
ಇದರಿಂದ ಬೇಸರಗೊಂಡ ಕಾರ್ತಿಕ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


