Home Blog Page 3372

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ‌ ಸ್ವಾಗತಾರ್ಹ

  • ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

ಯಡಿಯೂರಪ್ಪ ಪದತ್ಯಾಗದಿಂದ‌ ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯದವರು ಬೇಸರದಲ್ಲಿದ್ದರು. ಅದನ್ನು ಸರಿದೂಗಿಸಲು ಅದೇ ಸಮುದಾಯದ ನಾಯಕನನ್ನು ಸಿಎಂ ಮಾಡಿರುವುದು ಸ್ವಾಗತಾರ್ಹ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಜಗದ್ಗುರುಗಳು ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ನಾಲ್ಕೈದು ಜನರ ಹೆಸರು ಕೇಳಿ ಬಂದಿದ್ದವಾದರೂ ಬಸವರಾಜ ಬೊಮ್ಮಾಯಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು, ಬಿಜೆಪಿಯ ಒಗ್ಗಟ್ಟು, ದೂರದೃಷ್ಟಿಗೆ ಸಾಕ್ಷಿ ಎಂದರು.

ಬಸವರಾಜ ಬೊಮ್ಮಾಯಿ ಚಾಣಾಕ್ಷ ರಾಜಕಾರಣಿ, ದಕ್ಷ ಆಡಳಿತಗಾರ, ಯಾವುದೇ ಆರೋಪಗಳಿಲ್ಲ. ಹೀಗಾಗಿ, ಬಿಜೆಪಿಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಅವರಲ್ಲಿದೆ. ಯಡಿಯೂರಪ್ಪ ಅವರ ಮಾತಿಗೆ ರಾಷ್ಟ್ರೀಯ ನಾಯಕರು ಗೌರವ ಕೊಟ್ಟಿದ್ದಾರೆ ಎಂದು ಭಾವಿಸಿದ್ದೇವೆ ಎಂದರು.

ಮೈಸೂರು ಪ್ರಾಂತ್ಯದಲ್ಲಿ ಆಗುತ್ತಿದ್ದ ಅಭಿವೃದ್ಧಿ ಕಾರ್ಯಗಳು ಉತ್ತರ ಕರ್ನಾಟಕದಲ್ಲಿ ಆಗುತ್ತಿಲ್ಲವೆಂಬ ಕೂಗು ಕೇಳಿ ಬರುತ್ತಿದೆ.
ಇದರ ಕಡೆ ಬೊಮ್ಮಾಯಿ ಹೆಚ್ಚಿನ ಮುತುವರ್ಜಿ ವಹಿಸಿವ ಉ.ಕ. ಭಾಗದ ಅಭಿವೃದ್ಧಿಗಳು ಕಾರ್ಯ ಕುಂಠಿತವಾಗಿದ್ದು, ಅವುಗಳಿಗೆ ವೇಗ ತರಬೇಕು.‌ ಈ ಭಾಗದ ರೈತ ಸಮುದಾಯಕ್ಕೆ ನೀರಾವರಿ ಸೌಲಭ್ಯ ಒದಗಿಸಬೇಕು. ಮೌಲ್ಯಾಧರಿತ ಶಿಕ್ಷಣಕ್ಕೆ ಒತ್ತು ನೀಡಿ ಜಾತಿ-ಮತ-ವರ್ಗಗಳನ್ನು ಮರೆತು ಕೆಲಸ ಮಾಡಬೇಕು ಎಂದರು.

ಈವರೆಗೂ ಬಿಜೆಪಿಯಲ್ಲಿ ಗುಂಪುಗಳಾಗಿ ಕೆಲಸ ಮಾಡುತ್ತಿದ್ದರು. ಸಿಎಂ ಬೊಮ್ಮಾಯಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕು. ಬಿಎಸ್‌ವೈ ದೂರದೃಷ್ಟಿ, ಸಂಕಲ್ಪ ಸಾಕಾರಗೊಳಿಸುವ ನಿಟ್ಟಿನಲ್ಲಿ ಬೊಮ್ಮಾಯಿ ಕೆಲಸ ಮಾಡಲಿ ಎಂದರು.

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಉತ್ತಮ ಆಯ್ಕೆ; ಜೋಶಿ

ವಿಜಯಸಾಕ್ಷಿ ಸುದ್ದಿ, ನವದೆಹಲಿ

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಉತ್ತಮ ಆಯ್ಕೆ. ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಡ್ಡಾ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಬೊಮ್ಮಾಯಿ ಒಳ್ಳೆಯ ಮನುಷ್ಯ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ಹೇಳಿದರು.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಸ್ವಭಾವದಿಂದ ಒಳ್ಳೆಯ ವ್ಯಕ್ತಿ. ನನ್ನ ಆತ್ಮೀಯ ಸ್ನೇಹಿತರೂ ಸಹ ಎಂದು ಹೇಳಿದರು. ಬಿಜೆಪಿಗೆ ಯಡಿಯೂರಪ್ಪ ಕೊಡುಗೆ ದೊಡ್ಡದು. ಕರ್ನಾಟಕದಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸರಕಾರ ಸುಗಮವಾಗಿ ನಡೆಯಲಿದ್ದು, ಉತ್ತಮ ಆಡಳಿತ ನೀಡಲಿದೆ ಎಂದು ಸಚಿವ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಎಲ್ಲ ಸರಿಯಿದೆ. ಏನೇ ಸಮಸ್ಯೆಗಳಿದ್ದರೂ ಚರ್ಚಿಸಿ ಪರಿಹರಿಸಲಾಗುವುದು ಎಂದರು. ರೈತ ಪರ ಕಾನೂನು ವಿರೋಧಿಸಿ ಪ್ರತಿಪಕ್ಷಗಳು ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ನಡೆ ಅಪ್ರಬುದ್ಧವಾದದು. ರೈತರ ಹಿತಕ್ಕಾಗಿ ಈ ಕಾನೂನುಗಳು ಎರಡೂ ಸದನಗಳಲ್ಲಿ ಅಂಗೀಕಾರವಾಗಿವೆ. ಕೃಷಿ ಕಾನೂನು ಜಾರಿಗೊಂಡ ಬಳಿಕ‌ ದೇಶದ ಅನೇಕ ಕಡೆ ಚುನಾವಣೆ ಆಗಿವೆ. ಜನರು ಸರ್ಕಾರದ ನೀತಿ ಸ್ವೀಕರಿಸಿ ಮತಗಳನ್ನು ನೀಡಿದ್ದಾರೆ. ಪ್ರತಿಪಕ್ಷಗಳ ನಡೆಯನ್ನು ದೇಶದ ಜನ ನೋಡುತ್ತಿದ್ದಾರೆ ಎಂದು ಹೇಳಿದರು.

ಮಹತ್ಮಾ ಗಾಂಧಿ ಮಗ ಕುಡಕನಾದ, ಬೊಮ್ಮಾಯಿ ಮಗ ತಂದೆಯಂತಾಗುತ್ತಾರೆ ಅನ್ನೋದು ಏನು ಗ್ಯಾರಂಟಿ ?

  • ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು

ಮಹಾತ್ಮ ಗಾಂಧಿ ಮಗ ಅವರಂತಾಗಲಿಲ್ಲ,
ಕುಡುಕನಾದ. ಅದೇ ರೀತಿ ಬೊಮ್ಮಾಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ. ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.

ಮುಖ್ಯಮಂತ್ರಿ ಬದಲಾದ್ರೆ ಎಲ್ಲವೂ ಬದಲಾಗುತ್ತಾ..?

ಯಡಿಯೂರಪ್ಪ ಇಳಿದ್ದಿದ್ದಾರೆ.
ಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ.? ಎಂದವರು ಪ್ರಶ್ನಿಸಿದ್ದಾರೆ. ಕೋಮುವಾದ ಹೊರಟು ಹೋಗುತ್ತಾ ? ಹಿಂದುತ್ವದ ಅಜೆಂಡಾ ಬದಲಾಗುತ್ತಾ ? ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ. ಹಾಗಾಗಿ ಈ ಸರ್ಕಾರದಿಂದ ಯಾವುದೇ ನೀರೀಕ್ಷೆ ಮಾಡೋದಿಲ್ಲ ಎಂದರು.

ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ಆಡಳಿತ ನೀಡಲಿ ಎಂದಷ್ಟೆ ನಾ ಹೇಳಬಲ್ಲೆ ಎಂದರು.

ನಾನು ಬೊಮ್ಮಾಯಿ ಸಚಿವ ಸಂಪು‌ಟ ಸೇರಲ್ಲ

  • ಮಾಜಿ ಸಿಎಂ ಜಗದೀಶ ಶೆಟ್ಟರ್ ಅಚ್ಚರಿಯ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಖಾಸಗಿ ಮಾಧ್ಯಮ ವಾಹಿನಿಯೊಂದರ ಜೊತೆಗೆ ಮಾತನಾಡಿರುವ ಅವರು, ನಾನು ಮಾಜಿ ಸಿಎಂ, ಪಕ್ಷದ ಹಿರಿಯ ನಾಯಕ. ಹೀಗಾಗಿ ನೈತಿಕ ಕಾರಣದಿಂದ ಸಂಪುಟಕ್ಕೆ ಸೇರಲ್ಲ.

ನಳೀನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋಗೂ ನನ್ನ ನಿರ್ಧಾರಕ್ಕೂ ಸಂಬಂಧ ಇಲ್ಲ. ಇದು ನನ್ನ ವಯಕ್ತಿಕ ನಿರ್ಧಾರ. ಈಗಾಗಲೇ ನನ್ನ ನಿರ್ಧಾರದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಗಮನಕ್ಕೂ ತಂದಿದ್ದೇನೆ. ಪಕ್ಷ ಹಾಗೂ ಸರ್ಕಾರದಲ್ಲಿ ತಳಮಟ್ಟದಿಂದ ಮೇಲ್ಮಟ್ಟದವರೆಗೂ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ನೀರು ಕುಡಿಯಲು ಹೋದ ಅತ್ತೆ- ಸೊಸೆ ಕೃಷ್ಣೆಯ ಪಾಲು

  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುನಕುಂಟಿ ಗ್ರಾಮದಲ್ಲಿ ದುರ್ಘಟನೆ

ವಿಜಯಸಾಕ್ಷಿ ಸುದ್ದಿ, ವಿಜಯಪುರ

ನೀರು ಕುಡಿಯಲು ಕೃಷ್ಣಾ ನದಿಯ ಹಿನ್ನೀರಿಗೆ ಇಳಿದಾಗ ಕಾಲುಜಾರಿ ಗುಂಡಿಯಲ್ಲಿ ಬಿದ್ದ ಸೊಸೆಯನ್ನು ರಕ್ಷಿಸಲು ಹೋಗಿ ಅತ್ತೆಯೂ ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಹುನಕುಂಟಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಹುನಕುಂಟಿ ಗ್ರಾಮದ ಶಾಂತಮ್ಮ ಭೀಮನಗೌಡ ನಾಗೋಡ (20), ಗುರುಸಂಗಮ್ಮ ಭೀಮಪ್ಪ ಮುದೂರ(8) ಮೃತರು.

ದನ ಮೇಯಿಸಲೆಂದು ನದಿ ತೀರಕ್ಕೆ ಹೋಗಿದ್ದರು. ಬಾಯಾರಿಕೆ‌ ಆಗಿದ್ದರಿಂದ ಸೊಸೆ ಗುರುಸಂಗಮ್ಮ ನೀರು ಕುಡಿಯಲೆಂದು ಹಿನ್ನೀರಿಗೆ ಇಳಿದಿದ್ದಾಳೆ. ನದಿ ತೀರದಲ್ಲಿ ಅಲ್ಲಲ್ಲಿ ಮಣ್ಣು ಅಗೆದ ಕಾರಣ ಆಳವಾದ ಗುಂಡಿಗಳಿದ್ದು, ಹಿನ್ನೀರಿನಿಂದ ಗುಂಡಿಗಳಲ್ಲಿ ನೀರು ಭರ್ತಿಯಾಗಿದೆ. ಇದನ್ನು ಅರಿಯದ ಗುರುಸಂಗಮ್ಮ ಕಾಲು ಜಾರಿ ಗುಂಡಿಯಲ್ಲಿ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಅತ್ತೆ ಶಾಂತಾ ರಕ್ಷಣೆಗೆ ಓಡಿ ಬಂದಿದ್ದು, ಆಕೆಯೂ ಆಳವಾದ ಗುಂಡಿಯಲ್ಲಿ ಬಿದ್ದು ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಡಿಯಲ್ಲಿ ಮುಳುಗಿದ್ದ ಇಬ್ಬರ ಶವ ಹೊರ ತೆಗೆದರು. ಮುದ್ದೆಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಕ್ಷ ನಮಗೆ ಅನ್ಯಾಯ ಮಾಡಲ್ಲ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ನಾವು ಪಕ್ಷ ಹಾಗೂ ಯಡಿಯೂರಪ್ಪನವರನ್ನು ನಂಬಿ ಬಿಜೆಪಿಗೆ ಬಂದವರು. ಹೀಗಾಗಿ ಪಕ್ಷದಿಂದ ನಮಗೆ ಯಾವುದೇ ರೀತಿ ಅನ್ಯಾಯ ಆಗಲ್ಲ ಎಂದು ಮಾಜಿ ಸಚಿವ ಶಿವರಾಮ್ ಹೆಬ್ಬಾರ ವಿಶ್ವಾಸ ವ್ಯಕ್ತಪಡಿಸಿದರು.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಬ್ಬಾರ, ನೂತನ ಸಿಎಂ ಬೊಮ್ಮಾಯಿ ಹಾಗೂ ಯಡಿಯೂರಪ್ಪನವರು ಹೇಗೆ ತೀರ್ಮಾನ ಮಾಡುತ್ತಾರೋ ಅದರ ಮೇಲೆ ನಮ್ಮ ಸಚಿವ ಸ್ಥಾನ ನಿರ್ಧಾರವಾಗುತ್ತದೆ. ಆದರೆ ಪಕ್ಷ ನಮಗೆ ತೊಂದರೆ ಕೊಡುವುದಿಲ್ಲ ಎಂಬ ನಂಬಿಕೆ ಇದೆ ಎಂದರು.

ಬಿಎಸ್ ವೈ ಈಗಲೂ ನಮ್ಮ ಮಾರ್ಗದರ್ಶಕರು

  • ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿಕೆ

ನಾವು ದೆಹಲಿ ನಂಬಿ ಬಂದವರಲ್ಲ. ಬೆಂಗಳೂರು ನಂಬಿ ಬಂದವರು. ಯಡಿಯೂರಪ್ಪನವರೇ ಈಗಲೂ ನಮ್ಮ ಮಾರ್ಗದರ್ಶಕರು ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪನವರು ಅಧಿಕಾರ ಬಿಟ್ಡಿದ್ದಾರೆ ಹೊರತು ಪಕ್ಷವನ್ನಲ್ಲ. ನೂತನ ಸಿಎಂ ಸಹ ಯಡಿಯೂರಪ್ಪನವರ ಮಾರ್ಗದರ್ಶನದಲ್ಲೇ ಕಾರ್ಯನಿರ್ವಹಿಸುತ್ತಾರೆ.

ನಾವು ಡೆಲ್ಲಿ ನಂಬಿ ಬಂದವರಲ್ಲ, ಬೆಂಗಳೂರು ನಂಬಿ ಬಂದವರು. ಹೀಗಾಗಿ ದೆಹಲಿ ವರಿಷ್ಠರು ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಜನಪರ ಆಡಳಿತ ನೀಡುವೆ

  • ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೂತನ ಸಿಎಂ ಹೇಳಿಕೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ನಾನು ಸಿಎಂ ಎನ್ನುವುದಕ್ಕಿಂತ, ಟೀಂ ವರ್ಕ ಮಾಡುತ್ತೇವೆ. ಎಲ್ಲರಂತೆ ನಾನು ಒಬ್ಬ ಎಂಬಂತೆ ಜನಪರ ಆಡಳಿತ ನೀಡುವುದೇ ನಮ್ಮ ಗುರಿ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,
ನಮ್ಮ ಮುಂದೆ ಆರ್ಥಿಕ, ಸಾಮಾಜಿಕ ಸವಾಲುಗಳಿವೆ. ಸಂಪುಟ ಸಹೋದ್ಯೋಗಿಗಳು, ಎಲ್ಲರ ನೆರವು ಪಡೆದು ಸವಾಲುಗಳನ್ನು ಎದುರಿಸುತ್ತೇವೆ ಎಂದವರು ಹೇಳಿದರು.

ಕಳೆದ ಒಂದೂವರೆ ವರ್ಷದಿಂದ ಕೊರೊನಾ ಸಂಕಷ್ಟವಿದೆ. ಕಳೆದ 2 ಬಾರಿಯಿಂದ ಪ್ರವಾಹದ ಸಂಕಷ್ಟವನ್ನು ರಾಜ್ಯದ ಜನ ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಜನರ ಸಂಕಷ್ಟಗಳಿಗೆ ನಮ್ಮ ಸರ್ಕಾರ ಸ್ಪಂದಿಸುತ್ತದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತದೆ. ಬಡವರು, ರೈತರ ಕಣ್ಣೀರು ಒರೆಸುವ ಕೆಲಸ ಮಾಡುತ್ತೇವೆ ಎಂದು ನೂತನ ಸಿಎಂ ಭರವಸೆ ನೀಡಿದ್ದಾರೆ.

ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್; 15 ಲಕ್ಷ ಲಂಚ ಪಡೆಯುವಾಗ ಬಲೆಗೆ

ವಿಜಯಸಾಕ್ಷಿ ಸುದ್ದಿ, ಬೀದರ

15 ಲಕ್ಷ ರೂ. ಲಂಚ ಪಡೆಯುವಾಗ ಬೀದರ್ ತಹಸೀಲ್ದಾರ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರದ ಚಿದ್ರಿ ಸರ್ವೇ ನಂಬರ್ 15ರ ಭೂಮಿ ಮುಟೆಷನ್ ಮಾಡಲು ಲಿಲಾಧರ ಎಂಬುವವರು ಕಂದಾಯ ಇಲಾಖೆಗೆ
ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಲೇವಾರಿಗೆ ತಹಸೀಲ್ದಾರ್ 20 ಲಕ್ಷ ರೂ.ಡಿಮ್ಯಾಂಡ್ ಮಾಡಿದ್ದರು. ಈ ಕುರಿತು ಲೀಲಾಧರ್ ಎಸಿಬಿಗೆ ದೂರು ನೀಡಿದ್ದರು.

ತಮ್ಮ ಮನೆಯಲ್ಲಿ 15 ಲಕ್ಷ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ತಹಸೀಲ್ದಾರ್ ಗಂಗಾದೇವಿ ಹಲವಾರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದರು. ಎಸಿಬಿ ಎಸ್ಪಿ ಸೇರಿದಂತೆ ಹಲವು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

error: Content is protected !!