Home Blog Page 37

27 ಗ್ರಾಪಂಗಳಲ್ಲಿ ಜಾಬ್‌ಕಾರ್ಡ್ ಮೇಳ

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಬಿ ಜಿ ರಾಮ್ ಜಿ ಯೋಜನೆಯಡಿ ತಾಲೂಕಿನ 27 ಗ್ರಾಮ ಪಂಚಾಯಿತಿಗಳಲ್ಲಿ ಜಾಬ್‌ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜನಗಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15ರವರೆಗೆ ತಾಲೂಕಿನಾದ್ಯಂತ ಜಾಬ್‌ಕಾರ್ಡ್ ಮೇಳ ಹಾಗೂ ಮನೆ-ಮನೆ ಭೇಟಿ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗಿರುವ ಸಂದರ್ಭದಲ್ಲಿ ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗ ಕಲ್ಪಿಸುವುದು ಪ್ರಮುಖ ಆದ್ಯತೆಯಾಗಿದೆ. ವಿಬಿ ಜಿ ರಾಮ್ ಜಿ ಯೋಜನೆಯಡಿ ಅರ್ಹ ಗ್ರಾಮೀಣ ಕುಟುಂಬಗಳಿಗೆ ಲಭ್ಯವಿರುವ ವಿವಿಧ ಕಾಮಗಾರಿಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು ಎಂದರು.

ಜಾಬ್‌ಕಾರ್ಡ್ ಹೊಂದಿರುವವರು ಹಾಗೂ ಹೊಸದಾಗಿ ಜಾಬ್‌ಕಾರ್ಡ್ ಪಡೆಯಲು ಅರ್ಹರಾಗಿರುವ ಕುಟುಂಬಗಳನ್ನು ಗುರುತಿಸಿ, ಯೋಜನೆಯಡಿ ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವಂತೆ ಪ್ರೇರೇಪಿಸಲಾಗುವುದು. ಗ್ರಾಮದಲ್ಲಿಯೇ ಉದ್ಯೋಗ ದೊರೆಯುವುದರಿಂದ ಗ್ರಾಮೀಣ ಜನರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರ್ಮಿಕರನ್ನು ಯೋಜನೆಯಡಿ ತೊಡಗಿಸಿಕೊಂಡು ನಿರಂತರ ಉದ್ಯೋಗ ಒದಗಿಸಲು ಆದ್ಯತೆ ನೀಡಲಾಗಿದೆ. ಈಗಾಗಲೇ ತಾಲೂಕಿನ ಎಲ್ಲ 27 ಗ್ರಾಮ ಪಂಚಾಯಿತಿಗಳಲ್ಲಿ ಜಾಬ್‌ಕಾರ್ಡ್ ಮೇಳ ಪ್ರಗತಿಯಲ್ಲಿದ್ದು, ಗ್ರಾಮೀಣ ಕುಟುಂಬಗಳಿಗೆ ಯೋಜನೆಯ ಕುರಿತು ಸಮಗ್ರ ಮಾಹಿತಿ ನೀಡಲು ವಿಶೇಷ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಕಾಯಕ ಮಿತ್ರರು, ಬಿಎಫ್‌ಟಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲಿದ್ದಾರೆ. ಉದ್ಯೋಗ ಬೇಡಿಕೆ ಸಂಗ್ರಹಿಸುವುದು ಹಾಗೂ ಯೋಜನೆಯಡಿ ಲಭ್ಯವಿರುವ ವಿವಿಧ ಕಾಮಗಾರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಈ ಕಾರ್ಯದ ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ ಎಂದು ಡಾ. ಜನಗಿ ತಿಳಿಸಿದ್ದಾರೆ.

ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವುದರ ಜತೆಗೆ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವುದು ಜಾಬ್‌ಕಾರ್ಡ್ ಮೇಳದ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕರೂ ಪಡೆದುಕೊಳ್ಳುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಾಬ್‌ಕಾರ್ಡ್ ಹೊಂದಿರುವ ಹಾಗೂ ಇ-ಕೆವೈಸಿ ಪೂರ್ಣಗೊಳಿಸಿರುವ ಪ್ರತಿಯೊಬ್ಬ ಅರ್ಹ ಕೂಲಿಕಾರ್ಮಿಕರೂ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಿ, ಗ್ರಾಮೀಣ ಕುಟುಂಬಗಳಿಗೆ ಆದಾಯದ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

— ಡಾ. ಎಚ್.ಎಸ್. ಜನಗಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಗದಗ

ಬರ ಪರಿಸ್ಥಿತಿಯಿಂದ ಗ್ರಾಮೀಣ ಭಾಗದಲ್ಲಿ ಕೃಷಿ ಕೆಲಸದ ಅವಕಾಶಗಳು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾಬ್‌ಕಾರ್ಡ್ ಮೇಳ ಮಹತ್ವ ಪಡೆದಿದೆ. ಗ್ರಾಮದಲ್ಲಿಯೇ ಕೂಲಿ ಕೆಲಸ ದೊರೆಯುವುದರಿಂದ ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ತಪ್ಪಲಿದೆ. ಜಾಬ್‌ಕಾರ್ಡ್ ಹೊಂದಿರುವವರು ಇ-ಕೆವೈಸಿ ಪೂರ್ಣಗೊಳಿಸಿ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿ ಪ್ರಚಾರ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

— ಕುಮಾರ ಪುಜಾರ, ಸಹಾಯಕ ನಿರ್ದೇಶಕರು, ವಿಬಿ ಜಿ ರಾಮ್ ಜಿ ಯೋಜನೆ, ತಾಲೂಕು ಪಂಚಾಯಿತಿ, ಗದಗ

ಬಿಬಿಎ ಪರೀಕ್ಷೆಯಲ್ಲಿ ಮನೋರಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ ಬಿಬಿಎ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಪರೀಕ್ಷೆಯಲ್ಲಿ ಕುಮಾರಿ ಯಶಸ್ವಿನಿ ಬಾಗೇವಾಡಿ ಅವರು 601 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕುಮಾರಿ ಶಹತಾಜ್ ಖಾಜಿ ಅವರು 590 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿದ್ದು, ಕುಮಾರಿ ಸಿಮ್ರಾನ್ ನದಾಫ ಅವರು 483 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಇನ್ನು ಕುಮಾರಿ ಸಾನಿಯಾ ಕುರುವಿನಕೊಪ್ಪ ಅವರು 477 ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನ ಗಳಿಸಿದ್ದಾರೆ.

ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಚೇರ್ಮನ್ ಎನ್.ಎಂ. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ ಹಾಗೂ ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಕುಡತರಕರ, ಸಂಜಯಕುಮಾರ ಕುಡತರಕರ ಮತ್ತು ಚೇತನ ಕುಡತರಕರ ಶ್ಲಾಘಿಸಿದ್ದಾರೆ.

ಸಂಯೋಜಕಿ ಪ್ರೊ. ಆರತಿ ಗೌಡರ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ಸಿಎಂ ಬರುತ್ತಾರೆಂದರೆ ರಸ್ತೆ ಗುಂಡಿಗೂ ಅದೃಷ್ಟ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವರ್ಷಗಳಿಂದ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ಮುಚ್ಚಿ, ಸಮಗ್ರ ಡಾಂಬರೀಕರಣ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡುತ್ತಿದ್ದರೂ ಸ್ಪಂದಿಸದ ಲೋಕೋಪಯೋಗಿ ಇಲಾಖೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆ.1ರಂದು ಲಕ್ಷ್ಮೇಶ್ವರಕ್ಕೆ ಆಗಮಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಏಕಾಏಕಿ ರಸ್ತೆ ಗುಂಡಿಗಳಿಗೆ ತೇಪೆ ಹಾಕುವ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಗದಗ–ಲಕ್ಷ್ಮೇಶ್ವರ ಸಂಪರ್ಕಿಸುವ ಕೈಗಾ–ಇಳಕಲ್ ರಾಜ್ಯ ಹೆದ್ದಾರಿ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವುದು ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ ನಿತ್ಯದ ಸಂಕಷ್ಟವಾಗಿದೆ. ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ನೀರು ಹಾಗೂ ಕೆಸರು ತುಂಬಿದರೆ, ಬಿಸಿಲಿನ ದಿನಗಳಲ್ಲಿ ಧೂಳುಮಯ ವಾತಾವರಣ ನಿರ್ಮಾಣವಾಗುತ್ತಿದೆ.

ರಸ್ತೆಯ ದುಸ್ಥಿತಿಯಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದ್ದು, ಕೆಲವರು ಮಾರ್ಗ ಬದಲಿಸಿ ಸುತ್ತುವರಿದು ಪ್ರಯಾಣಿಸುವ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಈ ಕುರಿತು ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ಹಲವು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿ, ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿಯೂ ರಸ್ತೆಯ ದುಸ್ಥಿತಿಯ ಕುರಿತು ಹಲವು ಬಾರಿ ವರದಿಗಳು ಪ್ರಕಟಗೊಂಡಿವೆ.

ಆದರೆ, ಇಷ್ಟೆಲ್ಲ ಮನವಿ, ಹೋರಾಟ ಮತ್ತು ಸಾರ್ವಜನಿಕರ ಗೋಳಿಗೂ ಜಗ್ಗದ ಅಧಿಕಾರಿಗಳು ಇದೀಗ ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾಗಿರುವುದು ಜನರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ರಸ್ತೆಯ ಸಮಗ್ರ ಅಭಿವೃದ್ಧಿಗೆ ಮಾಜಿ ಸಂಸದ ಶಿವಕುಮಾರ ಉದಾಸಿ ಅವರ ಎರಡು ಅವಧಿಯಲ್ಲಿಯೂ ಮನವಿ ಸಲ್ಲಿಸಲಾಗಿತ್ತು. ಬಳಿಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕ ಡಾ. ಚಂದ್ರು ಲಮಾಣಿ ಅವರಿಗೂ ಹಲವು ಬಾರಿ ಮನವಿ ಸಲ್ಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜಿಲ್ಲೆಯ ಪ್ರಭಾವಿ ಶಾಸಕ ಎಚ್.ಕೆ. ಪಾಟೀಲ ಹಾಗೂ ಈ ಹಿಂದೆ ಲೋಕೋಪಯೋಗಿ ಇಲಾಖೆಯ ಸಚಿವರಾಗಿದ್ದ ಸಿ.ಸಿ. ಪಾಟೀಲ ಜಿಲ್ಲೆಯವರಾಗಿದ್ದರೂ ರಸ್ತೆ ಅಭಿವೃದ್ಧಿಗೆ ನಿರೀಕ್ಷಿತ ಸ್ಪಂದನೆ ದೊರೆಯಲಿಲ್ಲ ಎಂಬ ಅಸಮಾಧಾನವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಮುಖ್ಯಮಂತ್ರಿ ಲಕ್ಷ್ಮೇಶ್ವರಕ್ಕೆ ರಸ್ತೆ ಮಾರ್ಗದ ಮೂಲಕ ಆಗಮಿಸುವ ಬದಲು ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೂ ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಏಕಾಏಕಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಇಲಾಖೆ ಮುಂದಾಗಿರುವುದು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅನುದಾನ ಇಲ್ಲ ಎಂದವರು ಈಗ ಯಾವ ಹಣದಲ್ಲಿ?

ರಸ್ತೆ ಅಭಿವೃದ್ಧಿಗೆ ಅನುದಾನ ಲಭ್ಯವಿಲ್ಲ. ಕ್ರಿಯಾಯೋಜನೆ ಸಿದ್ಧಪಡಿಸಿ ಇಲಾಖೆಗೆ ಕಳುಹಿಸಲಾಗಿದೆ. ಅನುದಾನ ಬಿಡುಗಡೆಯಾದ ಬಳಿಕ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಈವರೆಗೆ ಹೇಳುತ್ತಿದ್ದ ಅಧಿಕಾರಿಗಳು, ಇದೀಗ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗೆ ಯಾವ ಅನುದಾನ ಬಳಸುತ್ತಿದ್ದಾರೆ ಎಂಬುದನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಶಿರಹಟ್ಟಿ ಮತಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಶಂಕರ ಬಾಳಿಕಾಯಿ ಪ್ರಶ್ನಿಸಿದ್ದಾರೆ.

ಕೇವಲ ಗುಂಡಿಗಳಿಗೆ ಜಲ್ಲಿಕಲ್ಲು ಹಾಕುವುದರಿಂದ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವುದಿಲ್ಲ. ಬದಲಾಗಿ ವಾಹನ ಸಂಚಾರಕ್ಕೆ ಮತ್ತಷ್ಟು ತೊಂದರೆಯಾಗುವ ಸಾಧ್ಯತೆಯಿದೆ. ರಸ್ತೆಯುದ್ದಕ್ಕೂ ಮೊಣಕಾಲಿನಷ್ಟು ಆಳದ ಗುಂಡಿಗಳು ನಿರ್ಮಾಣವಾಗಿದ್ದು, ಈ ಹೆದ್ದಾರಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಗುಣಮಟ್ಟದ ಡಾಂಬರೀಕರಣ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಪ್ರಮುಖ ಆಗ್ರಹವಾಗಿದೆ.

ಜನರ ನಿತ್ಯದ ಸಂಚಾರಕ್ಕೆ ಅನುಕೂಲವಾಗುವಂತೆ ಕೈಗಾ–ಇಳಕಲ್ ರಾಜ್ಯ ಹೆದ್ದಾರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಕೇವಲ ಗಣ್ಯರ ಭೇಟಿ ಅಥವಾ ವಿಶೇಷ ಸಂದರ್ಭಗಳಲ್ಲಿ ತೇಪೆ ಹಾಕುವ ಕ್ರಮಕ್ಕೆ ಸೀಮಿತವಾಗದೆ, ರಸ್ತೆಯ ಸಂಪೂರ್ಣ ಅಭಿವೃದ್ಧಿಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಹೆಲಿಕಾಪ್ಟರ್ ಮೂಲಕ ಆಗಮಿಸುತ್ತಾರೆ ಎಂಬ ಕಾರಣಕ್ಕೆ ರಸ್ತೆಯ ಗುಂಡಿಗಳನ್ನು ಮುಚ್ಚಲು ತುರ್ತು ಕ್ರಮ ಕೈಗೊಳ್ಳುವ ಅಧಿಕಾರಿಗಳು, ಇದೇ ರಸ್ತೆಯಲ್ಲಿ ಹಲವು ವರ್ಷಗಳಿಂದ ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿರುವ ಜನಸಾಮಾನ್ಯರ ಸಂಕಷ್ಟಕ್ಕೆ ಏಕೆ ಸ್ಪಂದಿಸಲಿಲ್ಲ? ಅನುದಾನ ಇಲ್ಲ ಎಂದಿದ್ದ ಅಧಿಕಾರಿಗಳು ಈಗ ಯಾವ ಹಣದಲ್ಲಿ ಕಾಮಗಾರಿ ಮಾಡುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಜನರ ಕಷ್ಟಕ್ಕೆ ಸ್ಪಂದಿಸಿ ಕೈಗಾ–ಇಳಕಲ್ ರಾಜ್ಯ ಹೆದ್ದಾರಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಗುಣಮಟ್ಟದ ಡಾಂಬರೀಕರಣ ಕೈಗೊಳ್ಳಬೇಕು.

– ಶಂಕರ ಬಾಳಿಕಾಯಿ, ಶಿರಹಟ್ಟಿ ಮತಕ್ಷೇತ್ರ ಜೆಡಿಎಸ್ ಅಧ್ಯಕ್ಷ

ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ! ರೈಲು ಡಿಕ್ಕಿಗೆ ಅಜ್ಜಿ, ಇಬ್ಬರು ಮೊಮ್ಮಕ್ಕಳು ಬಲಿ

0

ದೇವನಹಳ್ಳಿ: ರೈಲು ಹಳಿ ದಾಟುತ್ತಿದ್ದ ವೇಳೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ವೃದ್ಧೆ ಸೇರಿದಂತೆ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿರುವ ಕರುಣಾಜನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಮೃತರನ್ನು ಮುತ್ತೂರು ನಿವಾಸಿ ಇರ್ಫಾನಾ (46) ಹಾಗೂ ಆಂಧ್ರಪ್ರದೇಶದ ಹಿಂದೂಪುರದ ರುಕಿಯಾ (13), ರಾಕಿಯಾ (8) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರುಕಿಯಾ ಮತ್ತು ರಾಕಿಯಾ ಕಳೆದ ಶನಿವಾರ ರಜೆ ಕಳೆಯಲು ಹಿಂದೂಪುರದಿಂದ ದೊಡ್ಡಬಳ್ಳಾಪುರದಲ್ಲಿರುವ ಅಜ್ಜಿ ಇರ್ಫಾನಾ ಅವರ ಮನೆಗೆ ಬಂದಿದ್ದರು. ಸೋಮವಾರ ಬೆಳಗ್ಗೆ ಶಾಲೆಗೆ ತೆರಳಬೇಕಿದ್ದ ಹಿನ್ನೆಲೆಯಲ್ಲಿ ಮಕ್ಕಳನ್ನು ಸಮಯಕ್ಕೆ ಕಳುಹಿಸುವಂತೆ ಪೋಷಕರು ತಿಳಿಸಿದ್ದರು.

ಇದಕ್ಕಾಗಿ ಇರ್ಫಾನಾ ಸೋಮವಾರ ಬೆಳಗಿನ ಜಾವ ಮಕ್ಕಳನ್ನು ಎಬ್ಬಿಸಿ, ಬೆಳಗ್ಗೆ 6 ಗಂಟೆಗೆ ಹೊರಡುವ ಹಿಂದೂಪುರ ಪ್ಯಾಸೆಂಜರ್ ರೈಲು ಹಿಡಿಯಲು ಇಬ್ಬರನ್ನೂ ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಬಂದಿದ್ದರು.

ಗೂಡ್ಸ್ ರೈಲು ಪಕ್ಕದಲ್ಲಿ ಹಳಿ ದಾಟುವಾಗ ದುರಂತ:

ಪ್ಯಾಸೆಂಜರ್ ರೈಲು ತಪ್ಪಿಹೋಗಬಾರದು ಎಂಬ ಆತುರದಲ್ಲಿ ಟಿಕೆಟ್ ಪಡೆಯಲು ಮುಂದಾಗಿದ್ದ ಅಜ್ಜಿ ಮತ್ತು ಇಬ್ಬರು ಮಕ್ಕಳು ನಿಂತಿದ್ದ ಗೂಡ್ಸ್ ರೈಲಿನ ಪಕ್ಕದಲ್ಲೇ ಹಳಿ ದಾಟಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಅದೇ ಮಾರ್ಗದಲ್ಲಿ ಬಂದ ಎಕ್ಸ್‌ಪ್ರೆಸ್ ರೈಲು ಮೂವರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಕೈವಾಕ್ ನಿರ್ಮಾಣಕ್ಕೆ ಸ್ಥಳೀಯರ ಒತ್ತಾಯ:

ರೈಲ್ವೆ ನಿಲ್ದಾಣದ ಸಮೀಪ ಸ್ಕೈವಾಕ್ ಅಥವಾ ಸುರಕ್ಷಿತ ಪಾದಚಾರಿ ಮೇಲ್ಸೇತುವೆ ಇಲ್ಲದಿರುವುದರಿಂದ ಸಾರ್ವಜನಿಕರು ಹಳಿ ದಾಟುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರೈಲ್ವೆ ನಿಲ್ದಾಣದ ಸಮೀಪವೇ ಕೈಗಾರಿಕಾ ಪ್ರದೇಶವೂ ಇರುವುದರಿಂದ ರಾತ್ರಿ ಹಾಗೂ ಬೆಳಗಿನ ವೇಳೆ ಕೆಲಸಕ್ಕೆ ತೆರಳುವವರು ಮತ್ತು ವಾಪಸ್ ಬರುವವರು ಅಪಾಯದ ನಡುವೆಯೇ ಹಳಿ ದಾಟುತ್ತಿದ್ದಾರೆ ಎನ್ನಲಾಗಿದೆ.

ಇಂತಹ ಘಟನೆಗಳು ಮರುಕಳಿಸದಂತೆ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಬಳಿ ಸ್ಕೈವಾಕ್ ನಿರ್ಮಿಸಬೇಕು. ಸಾರ್ವಜನಿಕರ ಸುರಕ್ಷತೆಗೆ ರೈಲ್ವೆ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಮಕ್ಕಳನ್ನು ಶಾಲೆಗೆ ಸಮಯಕ್ಕೆ ಕಳುಹಿಸುವ ಉದ್ದೇಶದಿಂದ ನಿಲ್ದಾಣಕ್ಕೆ ಕರೆದುಕೊಂಡು ಬಂದಿದ್ದ ಅಜ್ಜಿ, ಇಬ್ಬರು ಮೊಮ್ಮಕ್ಕಳೊಂದಿಗೆ ದುರಂತ ಅಂತ್ಯ ಕಂಡಿರುವುದು ಕುಟುಂಬಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಗದಗ ಜಿಲ್ಲೆ ಬರ ಘೋಷಣೆಗಾಗಿ ಸಿಡಿದೆದ್ದ ಜೆನ್‌ ಜಿ ಶಕ್ತಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಬರದ ಕರಿನೆರಳು ಆವರಿಸಿದ್ದರೂ ಗದಗ ಜಿಲ್ಲೆಯನ್ನು ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿರುವ ಕ್ರಮದ ವಿರುದ್ಧ ರೈತರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಸೋಮವಾರ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಎಲ್ಲ ಅರ್ಹ ತಾಲೂಕುಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿ ಜೆನ್ ಜಿ ವೋಟರ್ಸ್ ಅಂಡ್ ಸಿಟಿಜನ್ಸ್ ಫೋರಂ ಹಾಗೂ ರೈತರ ಒಕ್ಕೂಟದ ನೇತೃತ್ವದಲ್ಲಿ ‘ರೈತರ ನ್ಯಾಯಕ್ಕಾಗಿ ಜನಶಕ್ತಿ ಪಾದಯಾತ್ರೆ’ ನಡೆಯಿತು.

ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪಾದಯಾತ್ರೆಯಲ್ಲಿ ರೈತರು ಮತ್ತು ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಹಾಗೂ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಮುಳಗುಂದ ನಾಕಾದಲ್ಲಿ ಮಾನವ ಸರಪಳಿ

ಪಾದಯಾತ್ರೆ ಮುಳಗುಂದ ನಾಕಾ ತಲುಪುತ್ತಿದ್ದಂತೆ ಪ್ರತಿಭಟನಾಕಾರರು ರಸ್ತೆ ಮಧ್ಯೆ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯತ್ತ ಸಾಗಿದ ಪ್ರತಿಭಟನಾಕಾರರು, ಗದಗ–ಹುಬ್ಬಳ್ಳಿ ಹೆದ್ದಾರಿಯಲ್ಲೂ ರಸ್ತೆ ತಡೆದು ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ರಸ್ತೆ ತಡೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಖಾಸಗಿ ವಾಹನವೊಂದು ಮುಂದೆ ಸಾಗಲು ಮುಂದಾದಾಗ ಪ್ರತಿಭಟನಾಕಾರರು ವಾಹನವನ್ನು ತಡೆದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದವೂ ನಡೆಯಿತು. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

“ಗದಗ ಜಿಲ್ಲೆಗೆ ಮಲತಾಯಿ ಧೋರಣೆ”

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜೆನ್ ಜಿ ವೋಟರ್ಸ್ ಅಂಡ್ ಸಿಟಿಜನ್ಸ್ ಫೋರಂ ರೂವಾರಿ ಅನಿಲ ಮೆಣಸಿನಕಾಯಿ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ನೆಲಕಚ್ಚಿವೆ. ರಾಜ್ಯ ಸರ್ಕಾರ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದರೂ ಗದಗ ಜಿಲ್ಲೆಗೆ ಅನ್ಯಾಯ ಮಾಡಲಾಗಿದೆ ಎಂದು ತೀವ್ರವಾಗಿ ಆರೋಪಿಸಿದರು.

ಬರ ಘೋಷಣೆಗೆ ಕೇವಲ ಹಳೆಯ ಮಳೆ ಅಂಕಿ-ಅಂಶಗಳನ್ನು ಪರಿಗಣಿಸುವ ಬದಲು, ಕಂದಾಯ, ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಗಳ ವಿಶೇಷ ತಜ್ಞರ ತಂಡವನ್ನು ರಚಿಸಿ ಗ್ರಾಮವಾರು ವಾಸ್ತವಿಕ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಮಣ್ಣಿನ ತೇವಾಂಶ, ಅಂತರ್ಜಲ ಮಟ್ಟದ ಕುಸಿತ ಹಾಗೂ ನೈಜ ಬೆಳೆ ನಷ್ಟದ ಪ್ರಮಾಣವನ್ನು ಆಧರಿಸಿ ಸರ್ಕಾರಕ್ಕೆ ತುರ್ತು ವರದಿ ಸಲ್ಲಿಸುವ ಮೂಲಕ ಗದಗ ಜಿಲ್ಲೆಯ ವಾಸ್ತವಿಕ ಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.

ರಕ್ತ ಸಹಿ ಅಭಿಯಾನದ ಮಾಹಿತಿ ಮುಖ್ಯಮಂತ್ರಿಗಳಿಗೆ ನೀಡಿ

ಜಿಲ್ಲಾಡಳಿತವು ವಾಸ್ತವಿಕ ಪರಿಸ್ಥಿತಿಯ ಸಮಗ್ರ ವರದಿ ಸಿದ್ಧಪಡಿಸಿ, ಜನರು ನಡೆಸುತ್ತಿರುವ ರಕ್ತ ಸಹಿ ಅಭಿಯಾನದ ಬಗ್ಗೆಯೂ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಬೇಕು ಎಂದು ಅನಿಲ ಮೆಣಸಿನಕಾಯಿ ಒತ್ತಾಯಿಸಿದರು.

ಬರ ಘೋಷಣೆ ವಿಷಯದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕ ಮಹಾಸಭಾ ಅಧ್ಯಕ್ಷ ರವಿಕಾಂತ ಅಂಗಡಿ, ಬಿಜೆಪಿ ಮುಖಂಡ ಸಿದ್ದಪ್ಪ ಪಲ್ಲೇದ, ರೈತ ಮುಖಂಡ ಶಂಕರಗೌಡ ಜಯನಗೌಡ್ರ, ಶಿವರಾಮಕೃಷ್ಣ ಸೇವಾ ಸಮಿತಿಯ ರಾಜು ಖಾನಪ್ಪನವರ, ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ, ವಸಂತ ಪಡಗದ, ವಿನೋದ ಮೊರಬದ, ಅಯ್ಯಪ್ಪ ಅಂಗಡಿ, ಮೋಹನ ವರವಿ, ಕುಮಾರ ಮಾರನಬಸರಿ, ರಜತ್ ಭೀಮಕರ, ಅಶೋಕ ಕರೂರ, ಎಂ.ಪಿ. ಮುಳಗುಂದ, ಡಿ.ಬಿ. ಕರಿಗೌಡ್ರ, ಅಪ್ಪು ನಮಸ್ತೆಮಠ, ಭದ್ರೇಶ ಕೂಸ್ಲಾಪುರ, ಬಾಬು ಸುಂಕದ, ಮಹೇಶ ಶಿರಹಟ್ಟಿ, ಬಾಬು ಯಲಿಗಾರ, ರವಿ ನರೇಗಲ್, ಆನಂದ ಅಂಗಡಿ, ಇರ್ಷಾದ ಮಾನ್ವಿ, ಚಂದ್ರು ಹರಿಜನ, ಕಿಶನ್ ಮೇರವಾಡೆ, ಅರವಿಂದ ಕೆಲೂರ, ರವಿ ವಗ್ಗನವರ, ಚನ್ನಮ್ಮ ಹುಳಕಣ್ಣವರ, ಸ್ವಾತಿ ಅಕ್ಕಿ, ಸಂಗು ಚಿತ್ತರಗಿ, ಉಡಚಪ್ಪ ಹಳ್ಳಿಕೇರಿ, ಬಸನಗೌಡ ಪೊಲೀಸಪಾಟೀಲ, ಪ್ರವೀಣ ಅಂದೇಲಿ, ಬಸವರಾಜ ಅಡ್ನೂರ, ರಾಮು ವಾಲ್ಮೀಕಿ, ಪರಮೇಶ್ ನಾಯಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಗದಗ ರೈತರ ಪ್ರಮುಖ ಬೇಡಿಕೆಗಳು

  • ಮಳೆ ಕೊರತೆ ಮತ್ತು ಬೆಳೆ ಹಾನಿಯ ವಾಸ್ತವಿಕ ಮಾನದಂಡಗಳನ್ನು ಆಧರಿಸಿ ಗದಗ ಜಿಲ್ಲೆಯ ಎಲ್ಲ ಅರ್ಹ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ತಕ್ಷಣ ಶಿಫಾರಸು ಮಾಡಬೇಕು.
  • ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಮಾನದಂಡಗಳ ಅನ್ವಯ ಸಂಕಷ್ಟದಲ್ಲಿರುವ ರೈತರಿಗೆ ನೇರ ಬೆಳೆ ಹಾನಿ ಪರಿಹಾರ ಹಾಗೂ ಬೆಳೆ ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು.
  • ಜಾನುವಾರುಗಳ ರಕ್ಷಣೆಗಾಗಿ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ತೆರೆಯಬೇಕು.
  • ಗ್ರಾಮೀಣ ಭಾಗದಲ್ಲಿ ವಿಬಿಜಿ–ರಾಮ್ ಜಿ ಯೋಜನೆಯಡಿ ಹೆಚ್ಚುವರಿ ಮಾನವ ದಿನಗಳ ಉದ್ಯೋಗ ಒದಗಿಸಬೇಕು.
  • ಸಂಕಷ್ಟದಲ್ಲಿರುವ ರೈತರ ಕೃಷಿ ಸಾಲ ಮರುಪಾವತಿಯನ್ನು ಪುನರ್‌ವ್ಯವಸ್ಥೆಗೊಳಿಸಿ ರೈತರಿಗೆ ಪರಿಹಾರ ಕಲ್ಪಿಸಬೇಕು.

ಗದಗ ಜಿಲ್ಲೆಯಲ್ಲಿ ಮುಂಗಾರು ಕೈಕೊಟ್ಟು ರೈತರ ಬೆಳೆಗಳು ನೆಲಕಚ್ಚಿವೆ. ಕೇವಲ ಹಳೆಯ ಮಳೆ ಅಂಕಿ-ಅಂಶಗಳ ಆಧಾರದ ಮೇಲೆ ಜಿಲ್ಲೆಯ ಬರ ಪರಿಸ್ಥಿತಿಯನ್ನು ನಿರ್ಧರಿಸಬಾರದು. ಗ್ರಾಮವಾರು ವಾಸ್ತವಿಕ ಸಮೀಕ್ಷೆ ನಡೆಸಿ, ಎಲ್ಲ ಅರ್ಹ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು. ಇಲ್ಲದಿದ್ದರೆ ಜಿಲ್ಲೆಯ ಜನರನ್ನು ಸಂಘಟಿಸಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು.

– ಅನಿಲ ಮೆಣಸಿನಕಾಯಿ, ರೂವಾರಿ, ಜೆನ್ ಜಿ ವೋಟರ್ಸ್ ಅಂಡ್ ಸಿಟಿಜನ್ಸ್ ಫೋರಂ

ರಾಯಪ್ಪ ಹತ್ತಿಕಾಳಗೆ ಗೌರವ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಗದಗ: ಮಧ್ಯ ಕರ್ನಾಟಕದ ಅತಿ ದೊಡ್ಡ ಫೋಟೋಗ್ರಾಫಿ ಹಾಗೂ ವಿಡಿಯೋಗ್ರಫಿ ಛಾಯಾಮೇಳವೆಂದು ಗುರುತಿಸಿಕೊಂಡಿರುವ ದೇವನಗರಿ ಪ್ರೊ ಇಮೇಜ್–2026 ಕಾರ್ಯಕ್ರಮವು ದಾವಣಗೆರೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ರಾಯಪ್ಪ ಹತ್ತಿಕಾಳ ಅವರನ್ನು ದೇವನಗರಿ ಪ್ರೊ ಇಮೇಜ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಛಾಯಾಗ್ರಹಣ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ಸೇವೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಗುರುತಿಸಿ ಈ ವಿಶೇಷ ಗೌರವವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ದೇವನಗರಿ ಪ್ರೊ ಇಮೇಜ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು, ಸನ್ಮಾನಿತರನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಗದಗ ಜಿಲ್ಲಾ ಛಾಯಾಗ್ರಾಹಕರ ಸಂಘದ ಜಿಲ್ಲಾಧ್ಯಕ್ಷ ಪವನ ಕೆ. ಮೇಹರವಾಡೆ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಛಾಯಾಗ್ರಾಹಕರ ಸಂಘಗಳ ಉಪಾಧ್ಯಕ್ಷರಿಗೂ ಗೌರವ ಸನ್ಮಾನ ನೀಡಿ ಅಭಿನಂದಿಸಲಾಯಿತು.

ಗದಗ ಜಿಲ್ಲೆಯ ಛಾಯಾಗ್ರಾಹಕರಿಗೆ ಈ ಪ್ರತಿಷ್ಠಿತ ವೇದಿಕೆಯಲ್ಲಿ ದೊರೆತಿರುವ ಗೌರವವು ಜಿಲ್ಲೆಯ ಛಾಯಾಗ್ರಹಣ ಕ್ಷೇತ್ರಕ್ಕೆ ಮತ್ತಷ್ಟು ಹೆಮ್ಮೆ ತಂದಿದೆ. ದೇವನಗರಿ ಪ್ರೊ ಇಮೇಜ್–2026 ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ಛಾಯಾಗ್ರಾಹಕರನ್ನು ಗುರುತಿಸಿ ಗೌರವಿಸಿದ ದೇವನಗರಿ ಪ್ರೊ ಇಮೇಜ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ಛಾಯಾಗ್ರಾಹಕರ ಪರವಾಗಿ ಅಭಿನಂದನೆ ಸಲ್ಲಿಸಲಾಗಿದೆ.

ಜೋಳದ ಸಂಗಟಿಯೇ ನೈವೇದ್ಯ… ಭಾವೈಕ್ಯತೆಯೇ ಆರಾಧನೆ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಒಂದು ಕಡೆ ಭೂಮಿಯಿಂದ ತಾನಾಗಿಯೇ ಉದ್ಭವಿಸಿದ ಜಾಗೃತ ದೈವದ ಮೇಲಿನ ಅಚಲ ನಂಬಿಕೆ… ಇನ್ನೊಂದು ಕಡೆ ರೈತರ ಬೆವರಿನ ಫಲವಾದ ಜೋಳದ ಸಂಗಟಿಯನ್ನೇ ದೇವರಿಗೆ ನೈವೇದ್ಯವಾಗಿ ಅರ್ಪಿಸುವ ವಿಶಿಷ್ಟ ಸಂಪ್ರದಾಯ… ಜಾತಿ-ಮತಗಳ ಬೇಲಿ ಮೀರಿ ಒಂದೇ ಭಕ್ತಿಯ ಭಾವದಲ್ಲಿ ಒಂದಾಗುವ ಜನತೆ…!

ಇದು ಸಮೀಪದ ಮಾರನಬಸರಿ ಗ್ರಾಮದ ಐತಿಹಾಸಿಕ ಗಡ್ಡಿ ಮಾರುತೇಶ್ವರ ಪಾಲಕಿ ಉತ್ಸವದ ವಿಶೇಷತೆ.

ಗ್ರಾಮೀಣ ಜನಪದ ಸಂಸ್ಕೃತಿ, ಶತಮಾನಗಳ ನಂಬಿಕೆ ಹಾಗೂ ರೈತ ಬದುಕಿನ ಸಂಪ್ರದಾಯದ ಸಂಗಮವಾಗಿರುವ ಗಡ್ಡಿ ಮಾರುತೇಶ್ವರನ ವಾರ್ಷಿಕ ಪಾಲಕಿ ಉತ್ಸವವು ಶ್ರಾವಣ ಮಾಸದ ಮೂರನೇ ಶನಿವಾರದಂದು ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಜರುಗಿತು.

ಗ್ರಾಮದ ದಕ್ಷಿಣ ಭಾಗದ ಹೊಲದಲ್ಲಿರುವ ಗಡ್ಡಿ ಮಾರುತೇಶ್ವರ ಮೂರ್ತಿಯು ಭೂಮಿಯಲ್ಲಿ ತಾನಾಗಿಯೇ ಉದ್ಭವಿಸಿದ ಜಾಗೃತ ದೈವ ಎಂಬುದು ಗ್ರಾಮಸ್ಥರ ನಂಬಿಕೆಯಾಗಿದೆ. ಪೂರ್ವಜರ ಕಾಲದಿಂದಲೂ ಶ್ರಾವಣ ಮಾಸದಲ್ಲಿ ವಿಶೇಷ ಆರಾಧನೆ ನಡೆಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಹಿರಿಯರು ತಿಳಿಸಿದರು.

ಉತ್ಸವದ ಅಂಗವಾಗಿ ರೈತರು ಜೋಳ, ಧಾನ್ಯ, ಕಾಳು-ಕಡಿ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಕಾಣಿಕೆಯಾಗಿ ಅರ್ಪಿಸಿದರು. ವಿಶೇಷ ಪೂಜೆ ಬಳಿಕ ಜೋಳದ ಸಂಗಟಿ ಹಾಗೂ ಸಾರಿನ ದಾಸೋಹ ನಡೆಯಿತು.

ಅನ್ನಸಂತರ್ಪಣೆಯ ನಂತರ ಆಂಜನೇಯಸ್ವಾಮಿ ದೇವಸ್ಥಾನದಿಂದ ಅಲಂಕೃತ ಪಾಲಕಿ ಹೊರಟು, ‘ಡೊಳ್ಳಿನ ಮಜಲು’ ವಾದ್ಯ ವೈಭವದೊಂದಿಗೆ ಉದ್ಭವ ಮೂರ್ತಿಯ ಸನ್ನಿಧಾನಕ್ಕೆ ತಲುಪಿತು. ಉತ್ತಮ ಮಳೆ-ಬೆಳೆ, ರೈತರ ಬದುಕಿನಲ್ಲಿ ಸಮೃದ್ಧಿ ಹಾಗೂ ಸಕಲ ಜೀವಿಗಳಿಗೆ ಆರೋಗ್ಯ ದೊರೆಯಲಿ ಎಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಭಾವೈಕ್ಯತೆಗೆ ಜೀವಂತ ಸಾಕ್ಷಿಯಾದ ಉತ್ಸವ

ಗಡ್ಡಿ ಮಾರುತೇಶ್ವರನ ವಿಶೇಷ ಪೂಜೆ, ಸಂಗಟಿ ದಾಸೋಹ ಹಾಗೂ ಪಾಲಕಿ ಉತ್ಸವದಲ್ಲಿ ಹಿಂದೂ ಬಾಂಧವರೊಂದಿಗೆ ಮುಸ್ಲಿಂ ಸಮುದಾಯದವರೂ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದರು. ಜಾತಿ-ಮತಗಳ ಭೇದ ಮರೆತು ಎಲ್ಲರೂ ಒಂದಾಗಿ ಸಂಭ್ರಮಿಸಿದ ಈ ಉತ್ಸವವು ಮಾರನಬಸರಿ ಗ್ರಾಮವನ್ನು ಭಾವೈಕ್ಯತೆ ಹಾಗೂ ಕೋಮು ಸೌಹಾರ್ದತೆಯ ಜೀವಂತ ಸಾಕ್ಷಿಯನ್ನಾಗಿ ಮಾಡಿತು.

ಪೂರ್ವಜರ ಕಾಲದಿಂದಲೂ ಗಡ್ಡಿ ಮಾರುತೇಶ್ವರನಿಗೆ ವಿಶೇಷ ಆಚರಣೆ ನಡೆಸಿಕೊಂಡು ಬರುತ್ತಿದ್ದೇವೆ. ರೈತರ ಬೆವರಿನೊಂದಿಗೆ ಬೆಳೆದ ಜೋಳದ ಸಂಗಟಿಯೇ ದೇವರಿಗೆ ಪ್ರಮುಖ ನೈವೇದ್ಯ. ಜಾತಿ-ಮತಗಳ ಬೇಲಿ ಮೀರಿ ನಾವೆಲ್ಲರೂ ಒಂದಾಗಿ ಊರು ಹಾಗೂ ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸುತ್ತೇವೆ.

– ಶರಣಪ್ಪ ಕುರಿ, ಗ್ರಾಮದ ಹಿರಿಯ

ಮೌಲಾನಾ ಆಜಾದ್–ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಖಾಲಿ ಹುದ್ದೆ ಭರ್ತಿಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಮೌಲಾನಾ ಆಜಾದ್ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಮತ್ತು ಶಿಕ್ಷಕೇತರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ರಾಜ್ಯಾಧ್ಯಕ್ಷ ಮಹ್ಮದಶಫಿ ನಾಗರಕಟ್ಟೆ ತಿಳಿಸಿದ್ದಾರೆ.

ನಗರದ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಮೌಲಾನಾ ಆಜಾದ್ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಿದರು.

ಹುದ್ದೆಗಳ ಕೊರತೆಯಿಂದ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ತೊಡಕಾಗುತ್ತಿದೆ. ಮತ್ತೊಂದೆಡೆ, ಅಗತ್ಯ ವಿದ್ಯಾರ್ಹತೆ ಹೊಂದಿರುವ ಅನೇಕ ಪದವೀಧರರು ಉದ್ಯೋಗದ ನಿರೀಕ್ಷೆಯಲ್ಲಿ ಕಾಯುತ್ತಿರುವ ಸಂದರ್ಭದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಅವರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ವಸತಿ ಶಾಲೆಗಳು ಬಡವರು, ಅಲ್ಪಸಂಖ್ಯಾತರು, ಅತ್ಯಂತ ಹಿಂದುಳಿದವರು ಹಾಗೂ ದಲಿತ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಪ್ರಮುಖ ಕೇಂದ್ರಗಳಾಗಿವೆ. ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗದಂತೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಖಾಲಿ ಇರುವ ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ಕಲ್ಪಿಸಬೇಕು. ಜತೆಗೆ ವಿದ್ಯಾವಂತ ನಿರುದ್ಯೋಗಿ ಪದವೀಧರರಿಗೆ ಉದ್ಯೋಗದ ಅವಕಾಶ ಒದಗಿಸಬೇಕು ಎಂದು ಮಹ್ಮದಶಫಿ ನಾಗರಕಟ್ಟೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಾಫರ ಡಾಲಾಯತ, ಮಹಬೂಬ್ ಬಾದಷಾ ಖಾಜಿ, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ದೊಡ್ಡಮನಿ, ಕುತುಬುದ್ದೀನ್ ಶೇಖ, ಅಬ್ದುಲರಜ್ಜಾಕ ಮಂಗಳೂರು, ರಫೀಕ್ ಈಟಿ, ಸಲೀಂ ಕರಡಿ, ಯಾಸಿನ್ ಮುಲ್ಲಾ, ಅಫ್ಜಲ್ ಮನಿಯಾರ್, ಜೋಹರ ಮುಂಡರಗಿ, ಇಮ್ರಾನ್ ತಹಶೀಲ್ದಾರ್, ಮೀರಾಸಾಬ ಇರಕಲ್, ನಿಜಾಮುದ್ದೀನ್ ಕಾಟಾಪುರ, ರಹೀಂಸಾಬ ದೊಡ್ಡಮನಿ, ಸಲೀಂ ನಾಲಬಂದ, ಮಕ್ತುಂ ಹುಸೇನ್ ಜಮಾದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಟ-ಪಾಠದೊಂದಿಗೆ ಬದುಕಿನ ಮೌಲ್ಯ ಅರಿಯಿರಿ: ಜಯಶ್ರೀ ಉಗಲಾಟದ

0

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ಬಾಲ್ಯ ಹಸನಾಗಲು ಆಟ-ಪಾಠದೊಂದಿಗೆ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಚಿಂತಕಿ ಜಯಶ್ರೀ ಉಗಲಾಟದ ಹೇಳಿದರು.

ನಗರದ ಗಂಗಿಮಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಕಮಹಾದೇವಿ ಕದಳಿಶ್ರೀ ಮಹಿಳಾ ವೇದಿಕೆಯಿಂದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ‘ಅಮೃತಭೋಜನ–ಜ್ಞಾನ ಸಿಂಚನ’ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿ ಭೋಜನ ವಿತರಿಸಿ ಅವರು ಮಾತನಾಡಿದರು.

ಬಾಲ್ಯದಲ್ಲಿಯೇ ಉತ್ತಮ ನಡೆ-ನುಡಿ ಹಾಗೂ ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಶಾಲಾ ಪಾಠದೊಂದಿಗೆ ಜೀವನ ಪಾಠವೂ ಅಗತ್ಯವಾಗಿದೆ ಎಂದು ಹೇಳಿದರು.

ಚಿಂತಕ ರಮೇಶ ಶಿಗ್ಲಿ ಮಾತನಾಡಿ, ಸಂಗೀತದ ಮೂಲಕ ಕಲಿಕೆಯನ್ನು ಪರಿಣಾಮಕಾರಿಯಾಗಿಸಿಕೊಳ್ಳಬಹುದು. ಮಕ್ಕಳು ಶರಣರು ಹಾಗೂ ದಾರ್ಶನಿಕರ ಜೀವನ ಸಂದೇಶಗಳನ್ನು ತಿಳಿದು ಅನುಸರಿಸಬೇಕು ಎಂದರು.

ಚಿಂತಕಿ ಸುಜಾತಾ ಲಕ್ಷ್ಮೇಶ್ವರ ಕಲಿಕಾ ಸಾಮಗ್ರಿಗಳನ್ನು ವಿತರಿಸಿ, ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿ ಅದನ್ನು ಸಾಧಿಸಲು ಹಿರಿಯರ ಮಾರ್ಗದರ್ಶನ ಪಡೆಯಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿ ಮುತ್ತಣ್ಣ ತೋಟಗೇರ ಅವರು ಪ್ರಯತ್ನ ಮತ್ತು ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ ಎಂದು ಹೇಳಿದರು. ಸಾವಿತ್ರಿ ಶಿಗ್ಲಿ ಅವರು ಮಕ್ಕಳು ಯೋಗ ಮತ್ತು ಧ್ಯಾನವನ್ನು ರೂಢಿಸಿಕೊಳ್ಳುವುದರಿಂದ ಏಕಾಗ್ರತೆ ಹೆಚ್ಚುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕುಮಾರ ಯಶಸ್ಸಕುಮಾರ ಶಿಗ್ಲಿ ಅವರ ಜನ್ಮದಿನವನ್ನು ಮಕ್ಕಳೊಂದಿಗೆ ಆಚರಿಸಲಾಯಿತು.

ವೇದಿಕೆಯ ಸಂಚಾಲಕಿ ಕವಿತಾ ದಂಡಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ.ಎಸ್. ಬೆಳಹಾರ ಸ್ವಾಗತಿಸಿದರು. ಐ.ಡಿ. ಕಬ್ಬೇರಹಳ್ಳಿ ನಿರೂಪಿಸಿದರು. ಆರ್.ಡಿ. ಮಗಜಿ ವಂದಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಎಂ.ಟಿ. ವಡ್ಡಟ್ಟಿ, ಕವಯಿತ್ರಿ ಹಾಗೂ ಗಾಯಕಿ ಪದ್ಮಾ ಕಬಾಡಿ, ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಬಿಜೆಪಿ ಮಹಿಳಾ ಮೋರ್ಚಾದಿಂದ ವಿಶಿಷ್ಟ ರಕ್ಷಾಬಂಧನ ಆಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಗದಗ ನಗರ ಮಂಡಲ ವತಿಯಿಂದ ರಕ್ಷಾಬಂಧನ ಹಬ್ಬವನ್ನು ಪೌರಕಾರ್ಮಿಕರು ಹಾಗೂ ಶಿಕ್ಷಕರೊಂದಿಗೆ ವಿಶಿಷ್ಟವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಗದಗ ನಗರ ಮಂಡಲ ಅಧ್ಯಕ್ಷೆ ಸ್ವಾತಿ ಅಕ್ಕಿ ವಹಿಸಿ ಮಾತನಾಡಿ, ಊರು ಹಾಗೂ ಬೀದಿಗಳನ್ನು ಸ್ವಚ್ಛವಾಗಿಟ್ಟುಕೊಂಡು ಸಾರ್ವಜನಿಕರ ಆರೋಗ್ಯ ಕಾಪಾಡುವ ಪೌರಕಾರ್ಮಿಕರು ಸಮಾಜದ ನಿಜವಾದ ರಕ್ಷಕರಾಗಿದ್ದಾರೆ ಎಂದು ಹೇಳಿದರು.

ಸಮಾಜಕ್ಕಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕ ಬಂಧುಗಳಿಗೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಾರ್ಗದರ್ಶನ ನೀಡುವ ಶಿಕ್ಷಕರಿಗೆ ಗೌರವದ ರಾಖಿ ಕಟ್ಟಿ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ರಕ್ಷಾಬಂಧನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಮಾತನಾಡಿ, ಸಮಾಜವನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ಶಿಕ್ಷಕರು ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಛತೆಗಾಗಿ ನಿರಂತರ ಸೇವೆ ಸಲ್ಲಿಸುವ ಪೌರಕಾರ್ಮಿಕರೊಂದಿಗೆ ರಕ್ಷಾಬಂಧನ ಆಚರಿಸುತ್ತಿರುವುದು ವಿಶೇಷ ಹಾಗೂ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ನಿರ್ಮಲಾ ಕೊಳ್ಳಿ ಹಾಗೂ ವಿದ್ಯಾವತಿ ಗಡಗಿ ಮಾತನಾಡಿ, ಉತ್ತಮ ಶಿಕ್ಷಕರು ಕೇವಲ ಪಾಠ ಕಲಿಸುವುದಲ್ಲದೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರ ಜೀವನ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಇಂತಹ ಶಿಕ್ಷಕರೊಂದಿಗೆ ರಕ್ಷಾಬಂಧನ ಆಚರಿಸುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಂ.ಎಸ್. ಕರಿಗೌಡ್ರ, ಶ್ರೀಪತಿ ಉಡುಪಿ, ನಗರ ಮಂಡಲ ಅಧ್ಯಕ್ಷ ಸುರೇಶ್ ಮರಳಪ್ಪನವರ, ಅನಿಲ ಅಬ್ಬಿಗೇರಿ, ಚೆನ್ನಮ್ಮ ಹುಳಕಣ್ಣವರ, ಅಮರನಾಥ ಗಡಗಿ, ಪ್ರೀತಿ ಶಿವಪ್ಪನಮಠ, ವಂದನಾ ವರ್ಣೆಕರ್, ಅಶ್ವಿನಿ ಜಗತಾಪ, ಮೇಘನಾ ಕೊಟ್ಟೂರ, ಗೀತಾ ಅಣ್ಣಿಗೇರಿ, ಶೈಲಾ ಜೋಸೆಫ್, ಮಹಾಲಕ್ಷ್ಮಿ ಶಿರಸಿಪಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಗರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ಪೂಜಾರ ಕಾರ್ಯಕ್ರಮ ನಿರೂಪಿಸಿದರು. ರೇಖಾ ಗವಳಿ ವಂದಿಸಿದರು.