Home Blog Page 37

ಬೈಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸ್ಥಳದಲ್ಲೇ ಸಾವು

0

ಬಳ್ಳಾರಿ: ಬೈಕ್‌ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಕಮಲಾಪುರದ ಕೃಷ್ಣ (26) ಮತ್ತು ವೆಂಕಟಾಪುರದ ಹನುಮಂತಪ್ಪ (50) ಎಂದು ಗುರುತಿಸಲಾಗಿದೆ. ಇವರು ಹೊರಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಯಲ್ಲಿ ವಾಚರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬೈಕ್‌ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಪರಾರಿಯಾಗಲು ಯತ್ನಿಸಿದ ಬುಲೇರೋ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸ್ಥಳಕ್ಕೆ ರಾಜೇಶ್ ಭಟಗುರ್ಕಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

2017ರ ದರೋಡೆ–ಕೊಲೆ ಪ್ರಕರಣಕ್ಕೆ ತೀರ್ಪು: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

0

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 2017ರಲ್ಲಿ ನಡೆದಿದ್ದ ಭೀಕರ ದರೋಡೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದ್ದ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಈ ಪ್ರಕರಣದಲ್ಲಿ ಹಶ್ಯಾ ಅಲಿಯಾಸ್ ರಮೇಶ್‌ಗೆ ಜೀವಾವಧಿ ಶಿಕ್ಷೆಯ ಜೊತೆಗೆ 30 ಸಾವಿರ ರೂ. ದಂಡ ವಿಧಿಸಲಾಗಿದೆ. ಕದ್ದ ಚಿನ್ನಾಭರಣವನ್ನು ಖರೀದಿಸುತ್ತಿದ್ದ ಮೌನೇಶ್‌ಗೆ 2 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ರಾಯಚೂರಿನ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಘಟನೆ ವೇಳೆ ದರೋಡೆಯನ್ನು ತಡೆಯಲು ಮುಂದಾದ ಮನೆ ಮಾಲೀಕ ಡಾಕ್ಯಾನಾಯಕ್ ಅವರ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ದರೋಡೆ ಕೃತ್ಯವನ್ನು ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರನ್ನು ಒಳಗೊಂಡ ಐದು ಸದಸ್ಯರ ಪಾರ್ದಿ ಗ್ಯಾಂಗ್ ನಡೆಸಿತ್ತು. ಆರೋಪಿಗಳು ಸುಮಾರು 50 ಸಾವಿರ ರೂ. ನಗದು ಮತ್ತು 30,400 ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದರು.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪರ್ಲಿ ಮೂಲದ ಈ ಗ್ಯಾಂಗ್ ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಇಸ್ರಾಮ್ ಮತ್ತು ಪಲ್ಲು ಗೋವಿಂದ ಎಂಬ ಆರೋಪಿಗಳು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ.

ಇದಲ್ಲದೆ, ಮಹಿಳಾ ಆರೋಪಿಗಳಾದ ಗೌರಿತಾಯಿ ಮತ್ತು ಶಿಶಬಾಯಿ ಜಾಮೀನು ಪಡೆದ ಬಳಿಕ ನಾಪತ್ತೆಯಾಗಿದ್ದಾರೆ. ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ಮಾತ್ರ ಶಿಕ್ಷೆ ಪ್ರಕಟವಾಗಿದೆ.

ಪೊಲೀಸ್ ತನಿಖೆಯಲ್ಲಿ, ಈ ಅಲೆಮಾರಿ ಗ್ಯಾಂಗ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕಳ್ಳತನ ನಡೆಸಿ, ಕದ್ದ ಚಿನ್ನಾಭರಣವನ್ನು ಮೌನೇಶ್‌ಗೆ ನೀಡುತ್ತಿದ್ದು, ಹಣ ಪಡೆಯುತ್ತಿದ್ದುದಾಗಿ ಬಹಿರಂಗವಾಗಿದೆ. 2017ರಲ್ಲಿ ಈ ಗ್ಯಾಂಗ್ ಹಾವಳಿ ಜಿಲ್ಲೆಯ ಜನರಲ್ಲಿ ಭೀತಿ ಹುಟ್ಟಿಸಿತ್ತು.

ಲಾರಿಯೊಳಗೆ ನೇಣಿಗೆ ಕೊರಳೊಡ್ಡಿದ ಚಾಲಕ! ಅಂತದ್ದೇನಾಯ್ತು?

ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದಲ್ಲಿ ಚಾಲಕನೋರ್ವ ಲಾರಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

ಮೃತ ಲಾರಿ ಚಾಲಕನನ್ನು ಷಣ್ಮುಗ ಎಂದು ಗುರುತಿಸಲಾಗಿದೆ. ಪೊಲೀಸರು ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು, ಚಾಲಕ ಷಣ್ಮುಗಗೆ ದಂಡ ವಿಧಿಸಿ ಬಳಿಕ ಲಾರಿಯನ್ನು ಜೆ.ಪಿ.ನಗರ ಠಾಣೆಗೆ ಎಳೆದೊಯ್ದಿದ್ದಾರೆ. ಆದ್ರೆ, ಷಣ್ಮುಗ ಠಾಣೆಯ ಬಳಿ ನಿಲ್ಲಿಸಿದ್ದ ಲಾರಿಯಲ್ಲೇ ನೇಣು ಬಿಗಿದುಕೊಂಡಿಕೊಂಡು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯಿಂದ ಮನನೊಂದು ಚಾಲಕ, ತಡರಾತ್ರಿ ಈ ದುರಂತ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ಇಂದು ಬೆಳಿಗ್ಗೆ ಲಾರಿಯೊಳಗೆ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ UDR ಕೇಸ್ ದಾಖಲಾಗಿದೆ.

ಸ್ಕೂಟಿಗೆ ಡಿಕ್ಕಿ ಹೊಡೆದ ಟ್ರಕ್: ಮಹಿಳೆ ಸಾವು, ಪತಿ ಗಂಭೀರ!

0

ಹೈದರಾಬಾದ್: ಮಾಧಾಪುರ ಮೈಂಡ್‌ಸ್ಪೇಸ್ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 22 ವರ್ಷದ ಹನಿಯಾ ಆಯೇಷಾ ಮೃತಪಟ್ಟಿದ್ದಾರೆ.

ಅವರು ಹಾಗೂ ಪತಿ ಅಬ್ದುಲ್ ಬಾಸಿತ್ (26) ಸಿನಿಮಾ ನೋಡಿ ಮನೆಗೆ ಹಿಂತಿರುಗುತ್ತಿದ್ದರು. ಸ್ಕೂಟಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆಯೇಷಾ ಮತ್ತು ಸ್ಕೂಟಿ ಟ್ರಕ್ ಅಡಿಯಲ್ಲಿ ಸಿಲುಕಿಕೊಂಡು ಸುಮಾರು ಒಂದು ಕಿಲೋಮೀಟರ್ ಎಳೆದೊಯ್ಯಲ್ಪಟ್ಟಿದ್ದಾರೆ. ಪತಿ ಅಬ್ದುಲ್ ಬಾಸಿತ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಟ್ರಕ್ ಕ್ಲೀನರ್‌ನನ್ನು ಹಿಡಿದು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನನ್ನು ಹುಡುಕಲು ತಂಡಗಳನ್ನು ರಚಿಸಲಾಗಿದೆ.

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು.

ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ.

ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಅವರನ್ನು ನೂರಕ್ಕೆ ನೂರರಷ್ಟು ಗೆಲ್ಲಿಸುವ ಕೆಲಸ ಮಾಡ್ತೀನಿ. ನಾನು ಕೇರಳದಲ್ಲಿ ಸ್ಟಾರ್ ಪ್ರಚಾರಕನಾಗಿದ್ದೆ. ಹತ್ತು ಕ್ಷೇತ್ರ ಕೊಟ್ಟಿದ್ದರು. ಇಂದು ಇಲ್ಲಿಗೆ ಬರುತ್ತೇನೆ ಎಂದು ಹೇಳಿದ್ದೆ. ದಾವಣಗೆರೆಗೆ ಬಂದಿದ್ದೇನೆ ಸಮರ್ಥ್ ಗೆಲ್ಲಿಸಿಕೊಂಡು ಹೋಗುತ್ತೇನೆ. ನೂರಕ್ಕೆ ನೂರರಷ್ಟು ಸಮರ್ಥ್ ಗೆಲ್ಲಿಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಕಳೆದ ಚುನಾವಣೆಯಲ್ಲಿ ನಾಲ್ಕು ಜನ ಮುಸ್ಲಿಮರು ನಿಂತಿದ್ದರು. ಆದರೂ ಕೂಡ ಗೆದ್ದು ಬಂದಿದ್ದೇವೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಯಾರಾದರೂ ಶಾಸಕರು ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ ಟಿಕೆಟ್‌ ಕೊಡುವುದು ನಮ್ಮ ಪಕ್ಷದ ಸಂಪ್ರದಾಯ. 2028ಕ್ಕೆ ಯಾರಿಗೆ ಟಿಕೆಟ್‌ ಕೊಡುತ್ತಾರೆ ಎಂಬುದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಹತ್ಯೆಗೈದ ತಂದೆ: ಕೇಸ್ ಮುಚ್ಚಿ ಹಾಕಲು ಯತ್ನಿಸಿದ ಇನ್ಸ್‌ಪೆಕ್ಟರ್ ಸಸ್ಪೆಂಡ್

ಹೈದರಾಬಾದ್: ಆಂಧ್ರಪ್ರದೇಶದ ಮಾಚೆರ್ಲಾ ಪಟ್ಟಣದಲ್ಲಿ ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಜರುಗಿದೆ.

ಈ ಹತ್ಯೆ ಮಾರ್ಚ್‌ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚೌಡೇಶ್ವರಿ (22) ಹತ್ಯೆಯಾದ ಮಹಿಳೆ. ಮೃತ ಮಹಿಳೆ, ಯುವಕನೊಬ್ಬನ ಜೊತೆ ಪ್ರೇಮ ಸಂಬಂಧ ಹೊಂದಿದ್ದಳು. ಇದಕ್ಕೆ ಆಕೆಯ ಕುಟುಂಬಸ್ಥರ ವಿರೋಧವಿತ್ತು. ಮಾ.4 ರಂದು, ಆಕೆ ಮನೆ ಬಿಟ್ಟು ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಳು. ಈ ಸಂಬಂಧ ಕುಟುಂಬಸ್ಥರು ದೂರು ದಾಖಲಿಸಿದ್ದರು.

ಮಾಚೆರ್ಲಾ ಪಟ್ಟಣದ ಸರ್ಕಲ್ ಇನ್ಸ್‌ಪೆಕ್ಟರ್ ಮಾ.15 ರಂದು ದಂಪತಿಯನ್ನು ಪತ್ತೆಹಚ್ಚಿದ್ದರು. ಬಳಿಕ ಮಹಿಳೆಗೆ ಬೆದರಿಸಿ ಪೋಷಕರ ಮನೆಗೆ ಹಿಂತಿರುಗುವಂತೆ ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ. ಮೂರು ದಿನಗಳ ನಂತರ ಪೋಷಕರ ಮನೆಯಲ್ಲಿ ಆಕೆ ಶವವಾಗಿ ಪತ್ತೆಯಾಗಿದ್ದಳು. ಆರಂಭದಲ್ಲಿ, ಅವರ ಕುಟುಂಬವು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿಕೊಂಡಿತ್ತು. ಪೊಲೀಸ್ ಅಧಿಕಾರಿಯ ಸಹಾಯದಿಂದ ಅದನ್ನು ಆತ್ಮಹತ್ಯೆ ಪ್ರಕರಣವೆಂದು ಮುಚ್ಚಿಹಾಕಲು ಕುಟುಂಬಸ್ಥರು ಪ್ರಯತ್ನಿಸಿದ್ದರು.

ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ದೃಢಪಟ್ಟಿತ್ತು. ಮಹಿಳೆ ಮಲಗಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎಂದು ವೈದ್ಯರು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಮಹಿಳೆಯ ತಂದೆ ಚಂದ್ರಶ್ರೀನು ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ. ಪೊಲೀಸ್ ಅಧಿಕಾರಿ ಮಹಿಳೆಯ ಪೋಷಕರಿಂದ ಲಂಚ ಪಡೆದು ಅವರನ್ನು ರಕ್ಷಿಸಲು ಪ್ರಯತ್ನಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಬ್ಯಾಂಕ್ ದಾಖಲೆಗಳನ್ನು ಮತ್ತು ಕುಟುಂಬದಿಂದ ದೊಡ್ಡ ಪ್ರಮಾಣದ ನಗದು ವಿತ್‌ಡ್ರಾ ಮಾಡಿರುವ ಬಗ್ಗೆ ಪರಿಶೀಲಿಸುತ್ತಿದ್ದಾರೆ ಸರ್ಕಲ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ.

ಬೈ ಎಲೆಕ್ಷನ್| ಗ್ಯಾರಂಟಿಗಳು ಜನರಿಗೆ ತಲುಪಿದ್ದರೆ ಪ್ರಚಾರ ಅಗತ್ಯ ಇತ್ತಾ!? ಕಾಂಗ್ರೆಸ್ ವಿರುದ್ಧ ಹೆಚ್ ಡಿಕೆ ಕಿಡಿ

ಬಾಗಲಕೋಟೆ:- ರಾಜ್ಯದಲ್ಲಿ ಉಪ ಚುನಾವಣೆ ಕಾವು ರಂಗೇರಿದೆ. ಅದರಂತೆ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಬಾಗಲಕೋಟೆಗೆ ಆಗಮಿಸಿದರು. ಈ ವೇಳೆ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ಮಾಡಿದ್ದಾರೆ. ಈ ಎರಡೂ ಚುನಾವಣಾ ಫಲಿತಾಂಶಕ್ಕಾಗಿ ಕಾಂಗ್ರೆಸ್ ನಾಯಕರು, ವಿಧಾನಸೌಧವನ್ನು ಬಿಕೋ ಎನ್ನುವಂತೆ ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿಗಳು ಜನರಿಗೆ ತಲುಪಿದ್ದರೆ ಇಷ್ಟೊಂದು ಪ್ರಚಾರ ಮಾಡುವ ಅಗತ್ಯ ಏನು ಎಂದು ಪ್ರಶ್ನಿಸಿದರು.

ನೀವು 2018 ರಲ್ಲಿ ಬಾದಾಮಿಯಿಂದ ಕೆಲವೇ ಮತಗಳಿಂದ ಗೆದ್ದಿದ್ದೀರಿ. ಗೆದ್ದ ನಂತರ ಬಾದಾಮಿಯನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದಿರಿ. ಭರವಸೆ ಮಾತ್ರ ನೀಡಿ ಯಾವುದೇ ಕೆಲಸ ಮಾಡಿಲ್ಲ ಎಂದು ಸಿದ್ದರಾಮಯ್ಯ ಅವರನ್ನು ದೂರಿದರು. ರಾಜ್ಯ ಸರ್ಕಾರ ಗ್ಯಾರಂಟಿ ಖರ್ಚಿಗಿಂತ ಸಾಲ ಹೆಚ್ಚು ಮಾಡಿದ್ದಾರೆ. ಖಜಾನೆ ತುಂಬಿಸುತ್ತೇನೆ ಎಂದು ಗ್ಯಾರಂಟಿಗೆ ಹಣ ನೀಡಿದ್ದಾರೆ. ಈ ದೇಶದ ಇತಿಹಾಸದಲ್ಲಿ ಈ ರೀತಿಯ ಬಜೆಟ್‌ ಯಾರೂ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

183 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆಲಕಾಲ ಆತಂಕದ ವಾತಾವರಣ!

ಬೆಂಗಳೂರು: 183 ಪ್ರಯಾಣಿಕರಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜರುಗಿದೆ.

ಕೂಡಲೇ ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.

ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ ನಂತರ, ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ವಿಮಾನವು ನಂತರ ದೆಹಲಿಗೆ ಸುರಕ್ಷಿತವಾಗಿ ಪ್ರಯಾಣ ಮುಂದುವರಿಸಿದೆ.

ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಫೀಸ್ ಮಿಯಾನ್ನವರ್ ಗೆ 14 ದಿನ ನ್ಯಾಯಾಂಗ ಬಂಧಿಸಿ ಕೋರ್ಟ್ ಆದೇಶಿಸಿದೆ.

ಎಸ್, ಆರೋಪಿ ಮುಸ್ಲಿಂ ಯುವಕ ಮುಫೀಸ್ ಮಿಯಾನ್ನವರ್ ಹಿಂದೂ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಧಾರವಾಡದಲ್ಲಿ ರಿಜಿಸ್ಟರ್ ಮದುವೆ ಆಗಲು ತಯಾರಿ ನಡೆಸಿದ್ದ. ಅಷ್ಟರಲ್ಲಿ ವಿಷಯ ತಿಳಿದ ಯುವತಿ ಕುಟುಂಬಸ್ಥರು ಮದುವೆ ನಿಲ್ಲಿಸಿದ್ದಾರೆ. ಇದಾದ ಬಳಿಕ ಮುಫೀಸ್ ಯುವತಿಗೆ ಬ್ಲ್ಯಾಕ್ ಮೇಲ್ ಮಾಡೋಕೆ ಶುರು ಮಾಡಿದ್ದಾನೆ. ತನ್ನ ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಮನೆಯಲ್ಲಿ ಒಂಟಿಯಾಗಿದ್ದಾಗ, ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ.

ಈ ವಿಷಯ ಯಾರಿಗಾದ್ರೂ ತಿಳಿಸಿದ್ರೆ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ. ಯುವತಿ ದೂರು ಆಧರಿಸಿ ಆರೋಪಿ ಮುಫೀಸ್ ಮಿಯಾನ್ನವರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿ ಮುಫೀಸ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

error: Content is protected !!