Home Blog Page 38

18 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ: ತೆಲಂಗಾಣದ ಉನ್ನತ ಅಧಿಕಾರಿ ಬಂಧನ

0

ಹೈದರಾಬಾದ್: ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ ಆರೋಪದಡಿ ತೆಲಂಗಾಣ ರಸ್ತೆ ಮತ್ತು ಕಟ್ಟಡಗಳ ಇಲಾಖೆಯ ಮುಖ್ಯ ಇಂಜಿನಿಯರ್ ಮೋಹನ್ ನಾಯ್ಕ್ ಜಾರುಪ್ಲ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

ಸರ್ಕಾರಿ ಸೇವೆಯ ಅವಧಿಯಲ್ಲಿ ಕಾನೂನುಬಾಹಿರವಾಗಿ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಕುರಿತು ಬಂದ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇದರ ಭಾಗವಾಗಿ ಮೋಹನ್ ನಾಯ್ಕ್ ಅವರ ಕಚೇರಿ, ನಿವಾಸ ಸೇರಿದಂತೆ ಸಂಬಂಧಿಕರು ಮತ್ತು ಆಪ್ತರಿಗೆ ಸೇರಿದ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದರು.

ದಾಳಿಯ ವೇಳೆ ಅಧಿಕಾರಿಗಳು ಭಾರೀ ಪ್ರಮಾಣದ ಚರ ಹಾಗೂ ಸ್ಥಿರ ಆಸ್ತಿಗಳನ್ನು ಪತ್ತೆಹಚ್ಚಿದ್ದಾರೆ. ನಿಜಾಮಾಬಾದ್ ಜಿಲ್ಲೆಯ ದಿಚ್ಪಲ್ಲಿ ಮಂಡಲದ ಮುಲ್ಲಂಗಿ ಗ್ರಾಮದಲ್ಲಿ 19.38 ಎಕರೆ ವ್ಯಾಪ್ತಿಯ ಐದು ಕೃಷಿ ಭೂಮಿಗಳ ದಾಖಲೆಗಳು ಪತ್ತೆಯಾಗಿದ್ದು, ಅವುಗಳ ಸರ್ಕಾರಿ ಮೌಲ್ಯ ಸುಮಾರು ₹82.9 ಲಕ್ಷ ಎಂದು ಅಂದಾಜಿಸಲಾಗಿದೆ.

ಇದರ ಜೊತೆಗೆ ಕೊಂಪಲ್ಲಿಯಲ್ಲಿ ಮೂರು ಹಾಗೂ ಗಚಿಬೌಲಿಯಲ್ಲಿ ನಾಲ್ಕು ಫ್ಲ್ಯಾಟ್‌ಗಳು ಸೇರಿದಂತೆ ಒಟ್ಟು ಏಳು ಫ್ಲ್ಯಾಟ್‌ಗಳು ಪತ್ತೆಯಾಗಿದ್ದು, ಅವುಗಳ ಸರ್ಕಾರಿ ಮೌಲ್ಯ ಸುಮಾರು ₹7.35 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಮಿಯಾಪುರದಲ್ಲಿ ₹2.5 ಕೋಟಿ ಮೌಲ್ಯದ ಟ್ರಿಪ್ಲೆಕ್ಸ್ ವಿಲ್ಲಾ, ಕೂಕಟ್ಪಲ್ಲಿಯಲ್ಲಿ ಹೊಸದಾಗಿ ನಿರ್ಮಿಸಲಾದ ಮನೆ ಹಾಗೂ ನಿಜಾಂಪೇಟೆಯಲ್ಲಿ ಮತ್ತೊಂದು ವಿಲ್ಲಾ ಖರೀದಿಗೆ ₹1 ಕೋಟಿ ಮುಂಗಡ ಪಾವತಿ ಮಾಡಿರುವ ದಾಖಲೆಗಳೂ ಲಭ್ಯವಾಗಿವೆ.

ಶೋಧ ಕಾರ್ಯದ ವೇಳೆ ₹55 ಲಕ್ಷ ನಗದು, ವಿವಿಧ ಬ್ಯಾಂಕ್‌ಗಳಲ್ಲಿ ಇರಿಸಲಾಗಿದ್ದ ₹1.44 ಕೋಟಿ ಠೇವಣಿ ದಾಖಲೆಗಳು, ಸುಮಾರು 2.5 ಕೆಜಿ ಚಿನ್ನಾಭರಣ, 6 ಕೆಜಿ ಬೆಳ್ಳಿ ಆಭರಣಗಳು, ಐಷಾರಾಮಿ ವಾಹನಗಳು ಹಾಗೂ ಎಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಪತ್ತೆಯಾಗಿರುವ ಆಸ್ತಿಗಳ ಅಧಿಕೃತ ಮೌಲ್ಯ ಸುಮಾರು ₹17.95 ಕೋಟಿ ಎಂದು ಅಂದಾಜಿಸಲಾಗಿದೆ. ಆದರೆ ಹೈದರಾಬಾದ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಾರುಕಟ್ಟೆ ದರಗಳನ್ನು ಪರಿಗಣಿಸಿದರೆ ಈ ಆಸ್ತಿಗಳ ನೈಜ ಮೌಲ್ಯ ₹100 ಕೋಟಿಗೂ ಅಧಿಕ ಇರಬಹುದೆಂದು ಎಸಿಬಿ ಅಧಿಕಾರಿಗಳು ಶಂಕಿಸಿದ್ದಾರೆ.

ಉದ್ಯಮಿ ಮನೆಯಲ್ಲಿ ₹25 ಲಕ್ಷ ಕಳವು; ನೇಪಾಳ ಮೂಲದ ದಂಪತಿ ಬಂಧನ

0

ಬೆಂಗಳೂರು: ಮನೆ ಕೆಲಸದ ನೆಪದಲ್ಲಿ ಉದ್ಯಮಿಯ ನಿವಾಸಕ್ಕೆ ಸೇರಿದ್ದ ದಂಪತಿ, ₹25 ಲಕ್ಷ ನಗದು ಕಳವು ಮಾಡಿ ಪರಾರಿಯಾಗಿದ್ದ ಪ್ರಕರಣವನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ನೇಪಾಳ ಮೂಲದ ದಂಪತಿಯನ್ನು ಬಂಧಿಸಿ, ಕಳವು ಮಾಡಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಎಂದು ಗುರುತಿಸಲಾಗಿದೆ. ಆರೋಪಿಗಳು ಸುಮಾರು ಒಂದು ತಿಂಗಳ ಹಿಂದೆ ಅಮೃತಹಳ್ಳಿ ವ್ಯಾಪ್ತಿಯ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು.

ತನಿಖೆ ವೇಳೆ ಬೆಳಕಿಗೆ ಬಂದ ಮಾಹಿತಿಯ ಪ್ರಕಾರ, ಮನೆಯ ಮಾಲೀಕರು ಸಿಬ್ಬಂದಿಗೆ ಸಂಬಳ ನೀಡುವ ಉದ್ದೇಶದಿಂದ ಬ್ಯಾಂಕ್‌ನಿಂದ ₹25 ಲಕ್ಷ ಹಣವನ್ನು ಡ್ರಾ ಮಾಡಿ ಮನೆಯ ಕಬೋರ್ಡ್‌ನಲ್ಲಿ ಇಟ್ಟು ಲಾಕ್ ಮಾಡಿದ್ದರು. ಕಬೋರ್ಡ್‌ನ ಕೀಲಿಯನ್ನು ಮತ್ತೊಂದು ಕಬೋರ್ಡ್‌ನಲ್ಲಿ ಇರಿಸಲಾಗಿತ್ತು.

ಈ ಮಾಹಿತಿ ಆರೋಪಿಗಳಿಗೆ ತಿಳಿದಿದ್ದು, ಮನೆಯ ಮಾಲೀಕರು ಇಲ್ಲದ ಸಮಯವನ್ನು ಬಳಸಿಕೊಂಡು ಕಬೋರ್ಡ್‌ನಲ್ಲಿದ್ದ ₹25 ಲಕ್ಷ ನಗದು ಹಣವನ್ನು ಕಳವು ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಳವು ಮಾಡುವ ಉದ್ದೇಶದಿಂದಲೇ ಕಡಿಮೆ ಸಂಬಳಕ್ಕೆ ಮನೆ ಕೆಲಸಕ್ಕೆ ಸೇರಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ. ಕಳವು ನಡೆದ ತಕ್ಷಣ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು.

ತಾಂತ್ರಿಕ ಮಾಹಿತಿ ಮತ್ತು ತನಿಖೆಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳು ಬೆಂಗಳೂರು ತೊರೆಯುವ ಮುನ್ನವೇ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳವು ಮಾಡಿದ್ದ ₹25 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರು–ಬೀದರ್ ವಿಮಾನ ವೇಳಾಪಟ್ಟಿ ಬದಲಾವಣೆಗೆ ಈಶ್ವರ ಖಂಡ್ರೆ ಆಕ್ಷೇಪ

ಬೆಂಗಳೂರು: ಸ್ಟಾರ್ ಏರ್ ಸಂಸ್ಥೆ ಬೆಂಗಳೂರು–ಬೀದರ್–ಬೆಂಗಳೂರು ನಡುವಿನ ವಿಮಾನ ವೇಳಾಪಟ್ಟಿಯನ್ನು ನಾಳೆಯಿಂದ ಅನ್ವಯವಾಗುವಂತೆ ಬದಲಾಯಿಸಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಿಗೆ ಪತ್ರ ಬರೆದು, ಈ ಹಿಂದೆ ಇದ್ದ ಬೆಳಗಿನ ವೇಳಾಪಟ್ಟಿ ಪ್ರಯಾಣಿಕರಿಗೆ ಅತ್ಯಂತ ಅನುಕೂಲಕರವಾಗಿತ್ತು ಎಂದು ತಿಳಿಸಿದ್ದಾರೆ. ಬೆಳಗ್ಗೆ 6:30ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನ 7:45ಕ್ಕೆ ಬೀದರ್ ತಲುಪಿ, 8:15ಕ್ಕೆ ಬೀದರ್‌ನಿಂದ ಹೊರಟು 9:30ಕ್ಕೆ ಮತ್ತೆ ಬೆಂಗಳೂರಿಗೆ ಆಗಮಿಸುತ್ತಿತ್ತು ಎಂದು ವಿವರಿಸಿದ್ದಾರೆ.

ಈ ಬೆಳಗಿನ ವೇಳಾಪಟ್ಟಿ ಬೀದರ್ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಪ್ರಯಾಣಿಕರು, ವ್ಯಾಪಾರಿಗಳು ಮತ್ತು ತೆಲಂಗಾಣ ಭಾಗದ ಪ್ರಯಾಣಿಕರಿಗೆ ಸಹಾಯಕವಾಗಿತ್ತು ಎಂದು ಅವರು ಹೇಳಿದ್ದಾರೆ.

ಆದರೆ ಹೊಸ ವೇಳಾಪಟ್ಟಿಯಂತೆ ಜೂನ್ 10ರಿಂದ ವಿಮಾನ ಮಧ್ಯಾಹ್ನ 12:30ಕ್ಕೆ ಬೆಂಗಳೂರಿನಿಂದ ಹೊರಟು 1:45ಕ್ಕೆ ಬೀದರ್ ತಲುಪಲಿದೆ. ಬಳಿಕ 2:30ಕ್ಕೆ ಬೀದರ್‌ನಿಂದ ಹೊರಟು 3:30ಕ್ಕೆ ಬೆಂಗಳೂರಿಗೆ ಮರಳಲಿದೆ.

ಈ ಬದಲಾವಣೆಯಿಂದ ಪ್ರಯಾಣಿಕರ ಅನುಕೂಲತೆ ಕಡಿಮೆಯಾಗುವ ಸಾಧ್ಯತೆ ಇದ್ದು, ಪ್ರಯಾಣಿಕರ ಸಂಖ್ಯೆಯಲ್ಲಿಯೂ ಇಳಿಕೆ ಉಂಟಾಗಬಹುದು ಎಂದು ಸಚಿವರು ಎಚ್ಚರಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಮತ್ತು ಕೆಕೆಆರ್‌ಡಿಬಿಯಿಂದ ನೀಡಲಾಗುತ್ತಿರುವ ವಿಜಯಬಿಲಿಟಿ ಗ್ಯಾಪ್ ಫಂಡ್ (ವಿಜಿಎಫ್) ಬಳಕೆ ಸಹ ಪರಿಣಾಮಕಾರಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಉಡಾನ್ ಯೋಜನೆಯಡಿ ಕೇಂದ್ರ ಸಬ್ಸಿಡಿ ಸ್ಥಗಿತಗೊಂಡ ನಂತರ ಸೇವೆ ಹಲವು ಬಾರಿ ನಿಲ್ಲಿಸಿ ಮತ್ತೆ ಆರಂಭಿಸಲಾಗಿದ್ದು, ರಾಜ್ಯ ಸರ್ಕಾರದ ಸಹಾಯಧನದಿಂದ ಮಾತ್ರ ಈ ಮಾರ್ಗ ನಿರ್ವಹಣೆಯಾಗುತ್ತಿದೆ ಎಂದು ಅವರು ಪತ್ರದಲ್ಲಿ ಸ್ಮರಿಸಿದ್ದಾರೆ.

ಮಳೆ ಅಬ್ಬರಕ್ಕೆ ವಿಭೂತಿ ಫಾಲ್ಸ್ ಬಂದ್: ಅಪಾಯ ತಪ್ಪಿಸಲು ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಅಂಕೋಲ ತಾಲೂಕಿನ ಜನಪ್ರಿಯ ಪ್ರವಾಸಿ ತಾಣವಾದ ವಿಭೂತಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ.

ಯಾಣ ಪ್ರವಾಸಿ ವಲಯದ ಭಾಗವಾಗಿರುವ ವಿಭೂತಿ ಫಾಲ್ಸ್‌ಗೆ ಮಳೆಗಾಲದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ನಿರಂತರ ಮಳೆಯಿಂದ ಜಲಪಾತದಲ್ಲಿ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗುವ ಹಾಗೂ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯ ಕ್ರಮವಾಗಿ ನಿರ್ಬಂಧ ಹೇರಿದೆ.

ಜಿಲ್ಲಾಡಳಿತದ ನಿರ್ದೇಶನದಂತೆ ಹೊಸಕಂಬಿ ಅರಣ್ಯ ಇಲಾಖೆ ಪ್ರವೇಶ ನಿಷೇಧ ಆದೇಶ ಜಾರಿಗೊಳಿಸಿದ್ದು, ಜಲಪಾತ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಈ ಹಿಂದೆ ಭಾರೀ ಮಳೆಯ ಸಂದರ್ಭದಲ್ಲಿ ಏಕಾಏಕಿ ನೀರಿನ ಹರಿವು ಹೆಚ್ಚಾಗಿ ಪ್ರವಾಸಿಗರ ಜೀವಕ್ಕೆ ಅಪಾಯ ಎದುರಾದ ಘಟನೆಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಹೆಚ್ಚಿನ ಮಹತ್ವ ದೊರೆತಿದೆ.

ಮಳೆಗಾಲದಲ್ಲಿ ಅಪಾಯದ ಪ್ರಮಾಣ ಹೆಚ್ಚಾಗುವ ಕಾರಣ ಪ್ರತಿ ವರ್ಷ ಜೂನ್ ತಿಂಗಳಲ್ಲಿ ನಿರ್ಬಂಧ ಜಾರಿಗೊಳಿಸಲಾಗುತ್ತದೆ. ಈ ವರ್ಷವೂ ಸುರಕ್ಷತೆಯ ದೃಷ್ಟಿಯಿಂದ ಜೂನ್ ಎರಡನೇ ವಾರದಲ್ಲೇ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಆದೇಶದವರೆಗೆ ಪ್ರವಾಸಿಗರು ವಿಭೂತಿ ಜಲಪಾತಕ್ಕೆ ಭೇಟಿ ನೀಡದಂತೆ ಅರಣ್ಯ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ.

ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ: ಹಾಸನ, ಮಂಡ್ಯ, ಮೈಸೂರು ರೈತರಲ್ಲಿ ಆತಂಕ

0

ಹಾಸನ: ಮುಂಗಾರು ಆರಂಭವಾದರೂ ಮಳೆಯ ಕೊರತೆಯಿಂದ ಹೇಮಾವತಿ ಜಲಾಶಯದಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದ್ದು, ಹಾಸನ ಸೇರಿದಂತೆ ನಾಲ್ಕು ಜಿಲ್ಲೆಗಳ ರೈತರಲ್ಲಿ ಆತಂಕ ಮನೆ ಮಾಡಿದೆ. ಜಲಾಶಯದಲ್ಲಿ ಸದ್ಯ 14.552 ಟಿಎಂಸಿ ನೀರು ಇದ್ದರೂ, ಬಳಕೆಗೆ ಲಭ್ಯವಿರುವುದು ಕೇವಲ 10.185 ಟಿಎಂಸಿ ಮಾತ್ರ.

37.105 ಟಿಎಂಸಿ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ 4.372 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿರುವುದರಿಂದ ನೀರಿನ ಲಭ್ಯತೆ ಮತ್ತಷ್ಟು ಸೀಮಿತವಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 24.482 ಟಿಎಂಸಿ ನೀರು ಸಂಗ್ರಹವಾಗಿದ್ದರೆ, ಈ ಬಾರಿ ಆ ಪ್ರಮಾಣ ಅರ್ಧಕ್ಕಿಂತಲೂ ಕಡಿಮೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹೇಮಾವತಿ, ಹಾಸನದ ಜೊತೆಗೆ ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳ ಕೃಷಿ ಹಾಗೂ ಕುಡಿಯುವ ನೀರಿನ ಪ್ರಮುಖ ಆಧಾರವಾಗಿದೆ. ಹೀಗಾಗಿ ಜಲಾಶಯ ಭರ್ತಿಯಾಗದಿದ್ದರೆ ಈ ಜಿಲ್ಲೆಗಳ ರೈತರು ಹಾಗೂ ಜನಸಾಮಾನ್ಯರು ಗಂಭೀರ ಸಂಕಷ್ಟ ಎದುರಿಸಬೇಕಾಗುತ್ತದೆ.

ಇಂತಹ ಪರಿಸ್ಥಿತಿಯ ನಡುವೆಯೂ ನಾಲೆಗಳಿಗೆ 300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಮಲೆನಾಡು ಭಾಗಗಳಾದ ಮೂಡಿಗೆರೆ, ಸಕಲೇಶಪುರ ಹಾಗೂ ಆಲೂರಿನಲ್ಲಿ ಮಳೆ ಚುರುಕುಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ಕೃಷಿ ಚಟುವಟಿಕೆಗಳು ಈಗಾಗಲೇ ನಿಧಾನಗೊಂಡಿದ್ದು, ಎಲ್ಲರ ಚಿತ್ತ ಈಗ ಮುಂಗಾರು ಮಳೆಯತ್ತ ನೆಟ್ಟಿದೆ.

ಬಾಲಕಿಯರ ಹಾಸ್ಟೆಲ್‌ಗೆ ಪದೇಪದೇ ನುಗ್ಗುತ್ತಿದ್ದ ಕಾರ್ಮಿಕ: ಕೊನೆಗೂ ಪೊಲೀಸರ ಬಲೆಗೆ

ಚಿಕ್ಕಮಗಳೂರು: ಸರ್ಕಾರಿ ಮೆಡಿಕಲ್ ಕಾಲೇಜಿನ ಬಾಲಕಿಯರ ಹಾಸ್ಟೆಲ್‌ನಲ್ಲಿ ಮತ್ತೊಮ್ಮೆ ಭದ್ರತಾ ಲೋಪ ಬಯಲಾಗಿದ್ದು, ಮಧ್ಯರಾತ್ರಿ ಯುವಕನೊಬ್ಬ ವಸತಿ ನಿಲಯಕ್ಕೆ ನುಗ್ಗಿದ ಘಟನೆ ವಿದ್ಯಾರ್ಥಿನಿಯರಲ್ಲಿ ಭೀತಿ ಮೂಡಿಸಿದೆ. ಪ್ರಕರಣ ಸಂಬಂಧ ಉತ್ತರ ಪ್ರದೇಶದ ರಾಕೇಶ್ (30) ಎಂಬಾತನನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ ನಡೆದ ಘಟನೆಯಲ್ಲಿ ಹಾಸ್ಟೆಲ್ ಒಳಗೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯನ್ನು ವಿದ್ಯಾರ್ಥಿನಿಯರು ಗುರುತಿಸಿದ್ದಾರೆ. ಆತನನ್ನು ಪ್ರಶ್ನಿಸಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ, ವಿದ್ಯಾರ್ಥಿನಿಯರೇ ಧೈರ್ಯ ತೋರಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ರಾಕೇಶ್ ಮೆಡಿಕಲ್ ಕಾಲೇಜಿನ ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಾಗಿದ್ದು, ಈ ಹಿಂದೆಯೂ ಹಾಸ್ಟೆಲ್ ಆವರಣಕ್ಕೆ ನುಗ್ಗಿದ್ದ ಮಾಹಿತಿ ತನಿಖೆಯಲ್ಲಿ ಪತ್ತೆಯಾಗಿದೆ. ಹೀಗಿದ್ದರೂ ಸೂಕ್ತ ಭದ್ರತಾ ಕ್ರಮ ಕೈಗೊಳ್ಳದ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ವಿದ್ಯಾರ್ಥಿನಿಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯರ ಸುರಕ್ಷತೆ ಪ್ರಶ್ನಾರ್ಥಕವಾಗಿರುವ ಹಿನ್ನೆಲೆಯಲ್ಲಿ ಕಾಲೇಜು ಡೀನ್ ಪೊಲೀಸರಿಗೆ ದೂರು ನೀಡಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ವಿಚಾರಣೆ ವೇಳೆ ಕಳ್ಳತನದ ಉದ್ದೇಶದಿಂದ ಹಾಸ್ಟೆಲ್‌ಗೆ ತೆರಳಿದ್ದಾಗಿ ಆರೋಪಿ ಹೇಳಿಕೊಂಡಿದ್ದರೂ, ಆತ ಹಾಸ್ಟೆಲ್‌ಗೆ ಏಕೆ ಪದೇ ಪದೇ ಪ್ರವೇಶಿಸುತ್ತಿದ್ದ ಎಂಬುದರ ಕುರಿತು ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ.

ಘಟನೆಯ ಬಳಿಕ ಮೆಡಿಕಲ್ ಕಾಲೇಜು ಹಾಸ್ಟೆಲ್‌ಗಳ ಭದ್ರತೆ ಮತ್ತು ವಿದ್ಯಾರ್ಥಿನಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ದರ್ಶನ್ʼಗೆ ಮತ್ತೆ ಕಿರುಕುಳ!

ಬೆಂಗಳೂರು: ನಟ ದರ್ಶನ್  ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಕಿರುಕುಳ ನೀಡಲಾಗುತ್ತಿರುವ ಆರೋಪ ಕೇಳಿಬಂದಿದೆ. ಕೆಲವು ದುಷ್ಕರ್ಮಿಗಳು ನಕಲಿ ಖಾತೆಗಳನ್ನು ಸೃಷ್ಟಿಸಿ, ಅವರ ವಿರುದ್ಧ ಅವಹೇಳನಕಾರಿ ಹಾಗೂ ಅಸಭ್ಯ ಕಾಮೆಂಟ್‌ಗಳನ್ನು ಮಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬಂದಿದೆ.

‘ಜಲಗಾರ ಯುನಿವರ್ಸಿಟಿ’ ಎಂಬ ಹೆಸರಿನ ನಕಲಿ ಖಾತೆಗಳ ಮೂಲಕ ವಿಜಯಲಕ್ಷ್ಮಿ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ನಿಂದನಾತ್ಮಕ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳನ್ನು ಮಾಡಲಾಗುತ್ತಿದೆ.

ವಿಜಯಲಕ್ಷ್ಮಿ ಸಿನಿಮಾ ನೋಡಲು ಹೋದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ಇವರೇ ನೋಡಿ ಕ್ರಿಮಿನಲ್ ದರ್ಶನ್ ಹೆಂಡತಿ”, “ಅವಳ ಬಾಯ್‌ಫ್ರೆಂಡ್, ಗಂಡ ಜೈಲಿನಲ್ಲಿ” ಎಂದು ಆಕ್ಷೇಪಾರ್ಹವಾಗಿ ನಿಂದಿಸಿದ್ದಾರೆ. “ಇವಳು ‘Rapid Driver’ ಕಾರಿನಲ್ಲಿ ಓಡಾಡುತ್ತಾಳೆ” ಎಂಬಂತಹ ಸಂದೇಶಗಳನ್ನೂ ಸಹ ಹರಡಲಾಗಿದೆ.

ಈ ರೀತಿ ಅತೀ ಕೆಟ್ಟದಾಗಿ ಕಾಮೆಂಟ್‌ಗಳನ್ನು ಮಾಡುವ ಜೊತೆಗೆ, ವಿಜಯಲಕ್ಷ್ಮಿ ಅವರು ದೂರು ನೀಡದಂತೆ ‘ವಿಜಿಗೆ ಕಂಪ್ಲೇಂಟ್ ಕೊಡಬೇಡ ಅಂತ ಹೇಳಿ ಪ್ಲೀಸ್’ ಎಂದು ಮನವಿ ಮಾಡುವ ರೀತಿಯಲ್ಲಿ ಒತ್ತಡ ಹೇರಲಾಗುತ್ತಿದೆ.

ಈ ಕುರಿತು ವಿಜಯಲಕ್ಷ್ಮಿ ಅಥವಾ ಅವರ ಕುಟುಂಬದವರು ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಈ ರೀತಿಯ ಕಿರುಕುಳದ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಲೋಪ: ಮೃತರ ಖಾತೆಗೂ ಹಣ ಜಮೆ, ಸರ್ಕಾರದಿಂದ ಪರಿಷ್ಕರಣೆಗೆ ಸಿದ್ಧತೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪ ಹಾಗೂ ಹಣ ದುರ್ಬಳಕೆಯ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಸಮಗ್ರವಾಗಿ ಪರಿಷ್ಕರಿಸಲು ಸರ್ಕಾರ ಮುಂದಾಗಿದೆ.

ಯೋಜನೆಯಡಿ ನೋಂದಾಯಿಸಿಕೊಂಡಿದ್ದ ಹಲವು ಫಲಾನುಭವಿಗಳು ಮೃತಪಟ್ಟಿದ್ದರೂ, ಅವರ ಹೆಸರಿನ ಬ್ಯಾಂಕ್ ಖಾತೆಗಳಿಗೆ ಕಳೆದ ಕೆಲವು ತಿಂಗಳುಗಳಿಂದ ಹಣ ಜಮೆಯಾಗುತ್ತಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ನಡೆಸಿದ ಪರಿಶೀಲನೆ ಮತ್ತು ತಾಂತ್ರಿಕ ಆಡಿಟ್ ವೇಳೆ, ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ₹2,000 ನೆರವು ಹಣ ಜಮೆಯಾಗಿರುವ ಮಾಹಿತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕ್ರಿಯೆಯಿಂದ ಸಾರ್ವಜನಿಕ ಹಣದ ದುರ್ಬಳಕೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಕೆಲವು ಪ್ರಕರಣಗಳಲ್ಲಿ ಮೃತ ಫಲಾನುಭವಿಗಳ ಸಂಬಂಧಿಕರು ಎಟಿಎಂ ಮತ್ತು ಯುಪಿಐ ಮೂಲಕ ಹಣವನ್ನು ವಿತ್‌ಡ್ರಾ ಮಾಡಿಕೊಂಡಿರುವ ಸಾಧ್ಯತೆಯೂ ಪರಿಶೀಲನೆಯಲ್ಲಿದೆ.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಸಂಪೂರ್ಣವಾಗಿ ಪರಿಷ್ಕರಿಸುವಂತೆ ಸೂಚಿಸಿದ್ದಾರೆ.

ಪರಿಶೀಲನೆ ವೇಳೆ ಮತ್ತೊಂದು ತಾಂತ್ರಿಕ ಸಮಸ್ಯೆಯೂ ಬೆಳಕಿಗೆ ಬಂದಿದ್ದು, ಕೆಲವಡೆ ಬ್ಯಾಂಕ್ ಖಾತೆ ಹೊಂದಿರುವ ವ್ಯಕ್ತಿ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆ ಹೊಂದಿರುವ ವ್ಯಕ್ತಿ ಬೇರೆಬೇರೆಯಾಗಿರುವುದು ಕಂಡುಬಂದಿದೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಹಣ ತಲುಪುವಲ್ಲಿ ತೊಂದರೆ ಉಂಟಾಗುತ್ತಿರುವ ಬಗ್ಗೆ ಅಧಿಕಾರಿಗಳು ಗಮನಸೆಳೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ಫಲಾನುಭವಿಗಳ ಪಟ್ಟಿಯನ್ನು ತಾತ್ಕಾಲಿಕವಾಗಿ ಮರುಪರಿಶೀಲನೆಗೆ ಒಳಪಡಿಸಿ, ಅರ್ಹ ಮಹಿಳೆಯರಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಇದೇ ವೇಳೆ, ಇ-ಜನ್ಮ ಪೋರ್ಟಲ್ ಮೂಲಕ ಮರಣ ಪ್ರಮಾಣಪತ್ರಗಳನ್ನು ಬ್ಯಾಂಕ್ ಖಾತೆಗಳೊಂದಿಗೆ ಸಂಪರ್ಕಿಸುವುದು, ಫಲಾನುಭವಿಗಳ ಜೀವಿತ ಸ್ಥಿತಿಯನ್ನು ವಾರ್ಷಿಕವಾಗಿ ದೃಢೀಕರಿಸುವ ‘ಜೀವಿತ ಪ್ರಮಾಣ ಪತ್ರ’ ಅಥವಾ ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ಕುರಿತು ಸರ್ಕಾರ ಚರ್ಚೆ ನಡೆಸುತ್ತಿದೆ.

ಆಗುಂಬೆ ಘಾಟಿಗೆ ಶಾಶ್ವತ ಪರಿಹಾರಕ್ಕೆ ಹೆಜ್ಜೆ: ಸುರಂಗ ಮಾರ್ಗ, ಡಬಲ್ ರಸ್ತೆ ಯೋಜನೆಗೆ ಟೆಂಡರ್ ಪ್ರಕ್ರಿಯೆ ಆರಂಭ

0

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್, ಭೂಕುಸಿತದ ಆತಂಕ ಹಾಗೂ ರಸ್ತೆ ಸುರಕ್ಷತಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳು ಆರಂಭವಾಗಿವೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಘಾಟಿಯ ಅಪಾಯಕಾರಿ ತಿರುವುಗಳನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಹುಲಿಕಲ್ ಘಾಟಿಯಲ್ಲಿ ನಿರ್ಬಂಧ ಹೇರಿರುವ ಕಾರಣ ಆಗುಂಬೆ ಮಾರ್ಗದಲ್ಲಿ ವಾಹನ ದಟ್ಟಣೆ ಗಣನೀಯವಾಗಿ ಏರಿಕೆಯಾಗಿದೆ. ಅದರಲ್ಲೂ ಭಾರೀ ತೂಕದ ವಾಹನಗಳು ಮತ್ತು ಜಲ್ಲಿಕಲ್ಲು ಸಾಗಣೆ ವಾಹನಗಳ ನಿರಂತರ ಸಂಚಾರದಿಂದ ಘಾಟಿಯ ತಿರುವು ಭಾಗಗಳಲ್ಲಿ ಭೂ ಕುಸಿತದ ಅಪಾಯ ಹೆಚ್ಚಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಸಂಸದರು ಪ್ರಯಾಣಿಕರ ಸುರಕ್ಷತೆಗಾಗಿ ತಿರುವುಗಳ ಅಪಾಯಕಾರಿ ದಂಡೆ ಭಾಗದಲ್ಲಿ ಸುಮಾರು ಸಾವಿರ ಮೀಟರ್ ತಡೆಬೇಲಿ ನಿರ್ಮಿಸಲು ಸೂಚಿಸಿದ್ದಾರೆ. ಅಲ್ಲದೇ ರಸ್ತೆ ದುರಸ್ತಿ ಹಾಗೂ ಕುಸಿತ ತಡೆ ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಈಗಾಗಲೇ 15 ಕೋಟಿ ರೂಪಾಯಿ ಮಂಜೂರು ಮಾಡಿದ್ದು, ಮಳೆಗಾಲದ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಆಗುಂಬೆ ಘಾಟಿಯ ಭವಿಷ್ಯದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸುರಂಗ ಮಾರ್ಗ ನಿರ್ಮಾಣ ಹಾಗೂ ರಸ್ತೆ ದ್ವಿಪಥೀಕರಣ ಯೋಜನೆಗೂ ವೇಗ ನೀಡಲಾಗಿದೆ. ಈ ಸಂಬಂಧ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಸಾಧ್ಯತಾ ವರದಿ ಆಧರಿಸಿ ಶೀಘ್ರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ಘಾಟಿ ರಸ್ತೆಯ ಸ್ಥಿರತೆ ಕಾಪಾಡಲು ಭಾರೀ ವಾಹನಗಳ ನಿಯಂತ್ರಣ ಅಗತ್ಯವಾಗಿದ್ದು, ಮಳೆಗಾಲದಲ್ಲಿ ಯಾವುದೇ ಅಪಾಯ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಹೆದ್ದಾರಿ ಇಲಾಖೆ ಸಮನ್ವಯದಿಂದ ಕ್ರಮ ಕೈಗೊಳ್ಳಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉಡುಪಿಯಲ್ಲಿ ಕಾರಿಗೆ ಸೈಡ್ ಕೊಡುವ ವಿಚಾರಕ್ಕೆ ಮಾರಾಮಾರಿ: ಪ್ರವಾಸಿಗರು-ಸ್ಥಳೀಯರ ನಡುವೆ ಘರ್ಷಣೆ

ಉಡುಪಿ: ಜಿಲ್ಲೆಯ ಪ್ರಸಿದ್ಧ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ತಡರಾತ್ರಿ ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯೊಬ್ಬರ ನಡುವೆ ಭಾರೀ ಗಲಾಟೆ ನಡೆದಿರುವ ಘಟನೆ ವರದಿಯಾಗಿದೆ.

ಆಂಧ್ರಪ್ರದೇಶದ ಹೈದರಾಬಾದ್ ಮೂಲದ ಪ್ರವಾಸಿಗರು ಹಾಗೂ ಉಡುಪಿಯ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ನಡುವೆ ಈ ಘರ್ಷಣೆ ಸಂಭವಿಸಿದೆ ಎನ್ನಲಾಗಿದೆ.

ಮಹಿಳೆಯರು ಮತ್ತು ಮಕ್ಕಳೊಂದಿಗೆ ಮಠದ ದರ್ಶನಕ್ಕೆ ಬಂದಿದ್ದ ಪ್ರವಾಸಿಗರು, ಕಾರು ನಿಧಾನವಾಗಿ ಚಲಾಯಿಸುವಂತೆ ಸೂಚಿಸಿದ್ದರಿಂದ ಮಾತಿನ ಚಕಮಕಿ ಆರಂಭವಾಗಿದೆ ಎಂದು ತಿಳಿದುಬಂದಿದೆ. ಬಳಿಕ ವಾಗ್ವಾದ ತೀವ್ರಗೊಂಡು ಹಲ್ಲೆ ಹಂತಕ್ಕೆ ತಲುಪಿದೆ.

ಪ್ರವಾಸಿಗರ ಆರೋಪದ ಪ್ರಕಾರ, ಸ್ಥಳೀಯ ವ್ಯಕ್ತಿ ಕಾರು ಹಾಯಿಸಲು ಯತ್ನಿಸಿದ್ದು, ಬಳಿಕ ಕಂಬಳದ ಕೋಲಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ.

ಇನ್ನೊಂದೆಡೆ, ಸ್ಥಳೀಯ ವ್ಯಕ್ತಿ ಕೂಡ ಪ್ರತಿದೂರು ನೀಡಿದ್ದು, ಪ್ರವಾಸಿಗರೇ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಾರ್ವಜನಿಕರು ಧಾವಿಸಿ ಗಲಾಟೆಯನ್ನು ನಿಯಂತ್ರಿಸಿದ್ದು, ಬಳಿಕ ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಎರಡೂ ಪಕ್ಷಗಳ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!