Home Blog Page 39

ಒಡಿಶಾದ ಎಸ್‌ಸಿಬಿ ಆಸ್ಪತ್ರೆಯಲ್ಲಿ ಬೆಂಕಿ ದುರಂತ; 10 ರೋಗಿಗಳ ದುರ್ಮರಣ, 11 ಸಿಬ್ಬಂದಿಗೆ ಗಾಯ!

0

ಭುವನೇಶ್ವರ: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಘಾತ ಆರೈಕೆ ಘಟಕದ ತೀವ್ರ ನಿಗಾ ವಿಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 10 ರೋಗಿಗಳು ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಕನಿಷ್ಠ 11 ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ.

ಮಾಹಿತಿಯ ಪ್ರಕಾರ, ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಐಸಿಯುನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತು. ಆ ವೇಳೆಗೆ ಅಲ್ಲಿದ್ದ ಹಲವರು ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆ ಸಿಬ್ಬಂದಿ ಹಾಗೂ ತುರ್ತು ಸೇವಾ ತಂಡಗಳು ಎಚ್ಚೆತ್ತುಕೊಂಡು ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ಆರಂಭಿಸಿದವು.

ಘಟನಾ ಸ್ಥಳಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು. ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಶ್ರಮವಹಿಸಿದ್ದು, ಆಸ್ಪತ್ರೆಯೊಳಗಿದ್ದ ರೋಗಿಗಳನ್ನು ತುರ್ತಾಗಿ ಬೇರೆ ವಿಭಾಗಗಳು ಮತ್ತು ವಾರ್ಡ್‌ಗಳಿಗೆ ಸ್ಥಳಾಂತರಿಸಲಾಯಿತು.

ಒಟ್ಟು 23 ರೋಗಿಗಳನ್ನು ಇತರ ವಿಭಾಗಗಳಿಗೆ ಕಳುಹಿಸಲಾಯಿತು. ಆದರೆ ಸ್ಥಳಾಂತರಿಸುವ ವೇಳೆ ಗಂಭೀರ ಸ್ಥಿತಿಯಲ್ಲಿದ್ದ ಏಳು ರೋಗಿಗಳು ಪ್ರಾಣ ಕಳೆದುಕೊಂಡರು. ಬಳಿಕ ಇನ್ನೂ ಮೂವರು ರೋಗಿಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 10ಕ್ಕೆ ಏರಿದೆ.

ರೋಗಿಗಳನ್ನು ರಕ್ಷಿಸುವ ವೇಳೆ ಆಸ್ಪತ್ರೆಯ ಕನಿಷ್ಠ 11 ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಕಿ ಕಾಣಿಸಿಕೊಂಡ ಕ್ಷಣದಿಂದಲೇ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರೋಗಿಗಳ ಬಂಧುಗಳು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಗೊಂದಲ ಉಂಟಾಯಿತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಗಾಯಗೊಂಡ ರೋಗಿಗಳು ಮತ್ತು ಸಿಬ್ಬಂದಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವುದಾಗಿ ಅವರು ತಿಳಿಸಿದ್ದಾರೆ.

ಘಟನೆಯ ನಂತರ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಖೇಶ್ ಮಹಾಲಿಂಗ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಲ್ಲದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರ ರೋಗಿಗಳ ಆರೋಗ್ಯ ಸ್ಥಿತಿಯನ್ನೂ ವಿಚಾರಿಸಿದರು.

ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಒಡಿಶಾದ ಪ್ರಮುಖ ಸರ್ಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಒಂದಾಗಿದ್ದು, ಇಲ್ಲಿ ಸಂಭವಿಸಿರುವ ಈ ದುರಂತ ರಾಜ್ಯವ್ಯಾಪಿ ಆತಂಕಕ್ಕೆ ಕಾರಣವಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಹಿನ್ನೆಲೆಯಲ್ಲಿ ಘಟನೆ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ಬೆಂಕಿ ಅವಘಡದ ಹಿನ್ನೆಲೆ ಹಾಗೂ ನಿರ್ಲಕ್ಷ್ಯದ ಅಂಶಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಯಲಿದೆ.

ದುಬೈ ಏರ್‌ಪೋರ್ಟ್‌ ಸಮೀಪ ಇರಾನ್ ಡ್ರೋನ್ ದಾಳಿ; ಭಾರಿ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ!

0

ದುಬೈ: ಇರಾನ್ ಡ್ರೋನ್ ದಾಳಿಯಿಂದ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ದುಬೈ ಅಧಿಕಾರಿಗಳ ಪ್ರಕಾರ, ಸೋಮವಾರ ದುಬೈ ವಿಮಾನ ನಿಲ್ದಾಣದ ಸಮೀಪದ ಇಂಧನ ಟ್ಯಾಂಕ್‌ಗೆ ಡ್ರೋನ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯ ತಕ್ಷಣ ತುರ್ತು ಸೇವಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿವೆ. ದುಬೈ ನಾಗರಿಕ ರಕ್ಷಣಾ ಸಿಬ್ಬಂದಿಯನ್ನು ಕೂಡ ತಕ್ಷಣ ನಿಯೋಜಿಸಲಾಗಿದ್ದು, ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷತಾ ಕ್ರಮಗಳ ಭಾಗವಾಗಿ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಎಮಿರೇಟ್ಸ್ ಏರ್‌ಲೈನ್ ಕೂಡ ಹಾರಾಟ ಸ್ಥಗಿತಗೊಂಡಿರುವುದನ್ನು ದೃಢಪಡಿಸಿದೆ ಎಂದು ವರದಿಗಳು ತಿಳಿಸಿವೆ. ಈ ಘಟನೆಯಲ್ಲಿ ಯಾವುದೇ ಜೀವಹಾನಿ ಅಥವಾ ಗಾಯಗಳ ವರದಿ ಇಲ್ಲ ಎಂದು ದುಬೈ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ದುಬೈ ಮಾಧ್ಯಮ ಕಚೇರಿಯ ಮಾಹಿತಿ ಪ್ರಕಾರ, ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಇಂಧನ ಟ್ಯಾಂಕ್‌ಗಳಲ್ಲಿ ಒಂದರ ಮೇಲೆ ಡ್ರೋನ್ ದಾಳಿಯ ಪರಿಣಾಮ, ನಾಗರಿಕ ರಕ್ಷಣಾ ತಂಡಗಳು ತಕ್ಷಣ ಸ್ಪಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ.

 

ಬೆಂಗಳೂರಿನಲ್ಲಿ ಪತ್ನಿಯ ಬರ್ಬರ ಹತ್ಯೆ: ಕತ್ತು ಕುಯ್ದು ಗಂಡ ಪರಾರಿ!

0

ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳೇಕಲ್ಲಹಳ್ಳಿ ಸಮೀಪ ಗಂಡನೊಬ್ಬ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಗೌರಮ್ಮ (45) ಕೊಲೆಯಾದ ಮಹಿಳೆ. ಈ ಕೃತ್ಯವನ್ನು ಆಕೆಯ ಗಂಡ ನಾಗರಾಜ್ ನಡೆಸಿರುವ ಆರೋಪ ಕೇಳಿಬಂದಿದೆ.

ಮೂಲತಃ ದಾವಣಗೆರೆ ಜಿಲ್ಲೆಯ ಜಗಳೂರು ಭಾಗದವರಾದ ಈ ದಂಪತಿ, ಜೀವನೋಪಾಯಕ್ಕಾಗಿ ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಇಲ್ಲಿ ನಾಗರಾಜ್ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರೆ, ಗೌರಮ್ಮ ಮನೆ ಕೆಲಸ ಮಾಡಿಕೊಂಡು ಕುಟುಂಬವನ್ನು ಸಾಗಿಸುತ್ತಿದ್ದರು. ದಂಪತಿಗೆ ಮೂವರು ಮಕ್ಕಳಿದ್ದು, ಅವರು ಕ್ಯಾಟರಿಂಗ್ ಕೆಲಸದಲ್ಲಿ ತೊಡಗಿಕೊಂಡಿದ್ದರು ಎನ್ನಲಾಗಿದೆ.

ಗಂಡ-ಹೆಂಡತಿಯ ನಡುವೆ ಕೆಲಕಾಲದಿಂದಲೇ ಗಲಾಟೆಗಳು ನಡೆಯುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ವಿಶೇಷವಾಗಿ ನಾಗರಾಜ್ ಪ್ರತಿದಿನವೂ ಮದ್ಯಪಾನ ಮಾಡಿ ಮನೆಗೆ ಬಂದು ಜಗಳ ಮಾಡುತ್ತಿದ್ದನು ಎನ್ನಲಾಗಿದೆ. ಇದೇ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಹೇಳಲಾಗಿದೆ.

ನಿನ್ನೆ ರಾತ್ರಿ ಕೂಡ ನಾಗರಾಜ್ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಮನೆಗೆ ಬಂದಿದ್ದಾನೆ. ಈ ವೇಳೆ ಗೌರಮ್ಮ ಜೊತೆ ಮತ್ತೆ ಜಗಳ ಆರಂಭವಾಗಿದ್ದು, ಮಾತಿನ ಚಕಮಕಿ ತಾರಕಕ್ಕೇರಿದೆ. ಕೋಪೋದ್ರಿಕ್ತನಾದ ನಾಗರಾಜ್, ಗೌರಮ್ಮನ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಬಳಿಕ ನಾಗರಾಜ್ ಸ್ಥಳದಿಂದ ಪರಾರಿಯಾಗಿದ್ದು, ಮಾಹಿತಿ ತಿಳಿದು ಮೈಕೋ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ನಾಗರಾಜ್ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಆಸ್ತಿ ಕಲಹಕ್ಕೆ ಅಣ್ಣನ ಹತ್ಯೆ; ತಮ್ಮ ಸೇರಿ ಇಬ್ಬರು ಅರೆಸ್ಟ್!

0

ವಿಜಯನಗರ: ಆಸ್ತಿ ಕಲಹದ ಹಿನ್ನೆಲೆ ತಮ್ಮನೇ ಸಂಬಂಧಿಯೊಂದಿಗೆ ಸೇರಿ ಅಣ್ಣನನ್ನು ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಹಗರಿಶಿರಹಳ್ಳಿ ಗ್ರಾಮದ ಮರುಳಸಿದ್ದೇಶ್ (26) ಕೊಲೆಯಾದ ಯುವಕ.

ಈ ಪ್ರಕರಣದಲ್ಲಿ ಮರುಳಸಿದ್ದೇಶ್‌ನ ತಮ್ಮ ಪತ್ರಿಗೌಡ (24) ಹಾಗೂ ಸಂಬಂಧಿ ನಾರಪ್ಪ (29) ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಪತ್ರಿಗೌಡ ಮದ್ಯ ವ್ಯಸನಿಯಾಗಿದ್ದು, ಆಸ್ತಿಯಲ್ಲಿ ಪಾಲು ಬೇಕೆಂದು ಕೆಲ ದಿನಗಳಿಂದ ತಾಯಿ ಜೊತೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಬೆಂಗಳೂರಿಗೆ ಕೆಲಸಕ್ಕೆ ಹೋಗುವ ವಿಷಯದಲ್ಲೂ ಮನೆಯಲ್ಲಿ ಗಲಾಟೆ ನಡೆದಿತ್ತು ಎಂದು ತಿಳಿದುಬಂದಿದೆ.

ಆಸ್ತಿ ಸಂಪೂರ್ಣ ತನ್ನದಾಗಬೇಕು ಎಂಬ ಉದ್ದೇಶದಿಂದ ಪತ್ರಿಗೌಡ, ಸಂಬಂಧಿ ನಾರಪ್ಪನ ಜೊತೆ ಸೇರಿ ಅಣ್ಣ ಮರುಳಸಿದ್ದೇಶ್‌ನ ಹತ್ಯೆ ನಡೆಸಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

ಕಬ್ಬಿನ ತೋಟದಲ್ಲಿ ಮಹಿಳೆ ಬರ್ಬರ ಹತ್ಯೆ; ಆಸ್ತಿಗಾಗಿ ಪ್ರಿಯಕರನಿಂದ ಕೊಲೆ ಆರೋಪ?

0

ಚಿಕ್ಕೋಡಿ: ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5ರಂದು ಅಥಣಿ ಪಟ್ಟಣ ಸಮೀಪದ ಪ್ರದೀಪ್ ಗುಂಡಾ ಎಂಬುವವರ ಕಬ್ಬಿನ ತೋಟದಲ್ಲಿ ಈ ಕೊಲೆ ನಡೆದಿರುವುದಾಗಿ ತಿಳಿದುಬಂದಿದೆ. ಮೃತ ಸುಜಾತಾ, ಹಾರೂಗೇರಿಯಲ್ಲಿ ವಾಸವಿದ್ದ ಗಂಡನೊಂದಿಗೆ ಸಂಬಂಧ ಕಡಿದುಕೊಂಡು ತವರು ಮನೆ ಅಥಣಿಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ.

ಈ ನಡುವೆ ಕುಮಾರ ಹವಾಲ್ದಾರ್ ಎಂಬಾತನೊಂದಿಗೆ ಸುಜಾತಾಳಿಗೆ ಸಂಬಂಧ ಬೆಳೆದುಬಂದಿತ್ತು. ಮಹಿಳೆಯ ಆಸ್ತಿ ಕಬಳಿಸುವ ಉದ್ದೇಶದಿಂದಲೇ ಕುಮಾರ ಈ ಕೃತ್ಯ ಎಸಗಿದ್ದಾನೆ ಎಂಬುದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ.

ಮಾರ್ಚ್ 5ರಂದು ಮಧ್ಯಾಹ್ನ ಆರೋಪಿ ಕುಮಾರ, ಸುಜಾತಾಳನ್ನು ಬೈಕ್‌ನಲ್ಲಿ ಕರೆದೊಯ್ದು ಕಬ್ಬಿನ ತೋಟದಲ್ಲಿ ಆಕೆಯ ಕುತ್ತಿಗೆಗೆ ಬಟ್ಟೆ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಬ್ಯಾರೇಜ್‌ʼಗೆ ಹಾರಿ ಮಹಿಳೆ ಆತ್ಮಹತ್ಯೆ!

0

ಯಾದಗಿರಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆಯೊಬ್ಬರು ಬ್ಯಾರೇಜ್ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲ್ಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ.

ಯಾದಗಿರಿ ನಗರದ ಹೊರಭಾಗದ ಗಿರಿನಗರ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಸಂಬಂಧ ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯಕ್ಕೆ ಸೇರಿದವರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ ಸಂಬಂಧದ ಆರೋಪ ಕೇಳಿಬಂದ ಹಿನ್ನೆಲೆ, ತಮ್ಮದೇ ಸಮಾಜದ ಮುಖಂಡರು ಇಡೀ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ವಿಧಿಸಿದ್ದರು ಎನ್ನಲಾಗಿದೆ. ಇದರಿಂದಾಗಿ ಕುಟುಂಬಕ್ಕೆ ಮೀನುಗಾರಿಕೆ ಮತ್ತು ಮೀನು ಮಾರಾಟಕ್ಕೂ ಅವಕಾಶ ನೀಡಲಾಗಿರಲಿಲ್ಲ ಎಂದು ತಿಳಿದುಬಂದಿದೆ.

ಈ ಘಟನೆಗಳಿಂದ ಮನನೊಂದ ಕಮಲಮ್ಮ, ಮಗಳ ಊರಾದ ಜೋಳದಡಗಿ ಗ್ರಾಮಕ್ಕೆ ತೆರಳಿ ಬ್ಯಾರೇಜ್ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮೊದಲು  ತಮ್ಮ ಮಾಂಗಲ್ಯ ಸರವನ್ನು ಬ್ಯಾರೇಜ್ ಮೇಲೆ ತೆಗೆದು ಇಟ್ಟಿದ್ದರು ಎಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಚುಂಚನಗಿರಿ ಶ್ರೀಗಳ ಕುರಿತು ಹೇಳಿಕೆ: ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ – ಶಾಸಕ ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ: ಚುಂಚನಗಿರಿ ಶ್ರೀಗಳ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸ್ಪಷ್ಟನೆ ನೀಡಿದ್ದಾರೆ. ನನ್ನ ಮಾತಿನಿಂದ ಶ್ರೀಗಳಿಗೆ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಚುಂಚನಗಿರಿ ಮಠವನ್ನು ಸ್ವಾಮೀಜಿಗಳು ಅತ್ಯಂತ ಗೌರವದಿಂದ ನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ಟಿವಿ ವಾಹಿನಿಗಳ ಮುಖ್ಯಸ್ಥರು ತಮ್ಮ ಬಳಿ ಹೇಳಿದ್ದರು ಎಂದು ತಿಳಿಸಿದರು.

ವೇದಿಕೆಯಲ್ಲಿ ಮಾತನಾಡುವ ವೇಳೆ ಬಾಲಗಂಗಾಧರ ಶ್ರೀಗಳು ನಿರ್ಮಿಸಿರುವ ಸಂಸ್ಥೆಗಳನ್ನು ನಿರ್ಮಲಾನಂದ ಶ್ರೀಗಳು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಎಂದು ಮಾತ್ರ ಹೇಳಿದ್ದೇನೆ. ಶ್ರೀಗಳು ಮಠವನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಚುಂಚನಗಿರಿ ಶ್ರೀಗಳ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನು ಅಲ್ಲ. ನನ್ನ ಮಾತುಗಳಿಂದ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಮಾತುಗಳನ್ನು ಶ್ರೀಗಳು ತಪ್ಪಾಗಿ ಅರ್ಥ ಮಾಡಿಕೊಳ್ಳಬಾರದು. ಒಂದು ವೇಳೆ ಅವರಿಗೆ ಬೇಸರವಾಗಿದ್ದರೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ರಮೇಶ್ ಬಂಡಿಸಿದ್ದೇಗೌಡ ಹೇಳಿದರು.

ಬಿಡದಿ ರೆಸಾರ್ಟ್‌ʼನಲ್ಲಿ ಒಡಿಶಾ ಕಾಂಗ್ರೆಸ್ ಶಾಸಕರಿಗೆ 5 ಕೋಟಿ ಆಫರ್ ಆರೋಪ: ಇಬ್ಬರು ವಶಕ್ಕೆ

ರಾಮನಗರ: ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಮನಗರ ಜಿಲ್ಲೆಯ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಒಡಿಶಾ ಕಾಂಗ್ರೆಸ್ ಶಾಸಕರಿಗೆ ಹಣದ ಆಫರ್ ನೀಡಲು ಯತ್ನಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಶಾಸಕರ ಖರೀದಿಗೆ ಬಂದಿದ್ದ ಇಬ್ಬರು ಒಡಿಶಾ ಮೂಲದ ವ್ಯಕ್ತಿಗಳು ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಶಾಸಕರಿಗೆ 5 ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಆಪರೇಷನ್ ಕಮಲದ ಆತಂಕ ಹಿನ್ನೆಲೆ ಮಾರ್ಚ್ 12ರಂದು ಒಡಿಶಾದಿಂದ ಕಾಂಗ್ರೆಸ್ ಶಾಸಕರು ರಾಮನಗರದ ಬಿಡದಿ ವಂಡರ್ ಲಾ ರೆಸಾರ್ಟ್‌ಗೆ ಬಂದು ವಾಸ್ತವ್ಯ ಹೂಡಿದ್ದರು. ಈ ವೇಳೆ ಇಂದು ಬೆಳಿಗ್ಗೆ ಒಡಿಶಾದಿಂದ ಮೂವರು ವ್ಯಕ್ತಿಗಳು ಸ್ಥಳೀಯ ಒಬ್ಬ ವ್ಯಕ್ತಿಯೊಂದಿಗೆ ಸೇರಿ ಶಾಸಕರನ್ನು ಸಂಪರ್ಕಿಸಲು ಮುಂದಾಗಿದ್ದರು.

ಶನಿವಾರ ರಾತ್ರಿ ಹೋಟೆಲ್‌ನಲ್ಲಿ ರೂಂ ಬುಕ್ ಮಾಡಿದ್ದ ನಾಲ್ವರು ವ್ಯಕ್ತಿಗಳು ಬೆಳಿಗ್ಗೆ ಒಬ್ಬ ಶಾಸಕನೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಅವರೊಂದಿಗೆ ಫೋಟೋ ತೆಗೆದುಕೊಳ್ಳುವುದು ಮತ್ತು ಕೈಯಲ್ಲಿ ಚೆಕ್ ಬುಕ್ ಹಿಡಿದು ಮಾತನಾಡುತ್ತಿರುವುದು ಕಂಡು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅನುಮಾನ ಮೂಡಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಅವರನ್ನು ತಡೆದು ವಿಚಾರಣೆ ನಡೆಸಿದ ವೇಳೆ ಇಬ್ಬರು ಪರಾರಿಯಾಗಿದ್ದು, ಇಬ್ಬರು ಸಿಕ್ಕಿಬಿದ್ದಿದ್ದಾರೆ. ಬಿರೇಂದ್ರ ಪ್ರಸಾದ್ ಮತ್ತು ಅಜಿತ್ ಕುಮಾರ್ ಸಾಹು ಎಂಬವರು ಪೊಲೀಸರ ವಶದಲ್ಲಿದ್ದು, ಬಿಡದಿ ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಚನ್ನರಾಯಪಟ್ಟಣ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ!

0

ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಗರದ ನಿವಾಸಿ ಲೋಕೇಶ್ (45) ಮೃತ ದುರ್ಧೈವಿಯಾಗಿದ್ದು, ಅವರು ಹಾಸನದ ಗುಡ್ಡೇನಹಳ್ಳಿಯಲ್ಲಿ ಇರುವ ಎರಡು ಹಾಸ್ಟೆಲ್‌ಗಳಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಮ್ಯಾನೇಜರ್ ಹುದ್ದೆಗೆ ಬಡ್ತಿ ಹೊಂದಿದ್ದರು. ನಂತರ ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶನಿವಾರ ರಾತ್ರಿ ದಾಸರಕೊಪ್ಪಲಿನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾಸನ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ: ಏಪ್ರಿಲ್ʼನಲ್ಲಿ ಮತದಾನ, ಮೇ 4ಕ್ಕೆ ಫಲಿತಾಂಶ

0

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸೋಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭಾ ಚುನಾವಣೆಗಳ ಜೊತೆಗೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ತಮಿಳುನಾಡು, ಕೇರಳ, ಅಸ್ಸೋಂ ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.

ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಪುದುಚೇರಿ, ಕೇರಳ ಮತ್ತು ಅಸ್ಸೋಂನಲ್ಲಿ ಏಪ್ರಿಲ್ 9 ರಂದು ಮತದಾನ ನಡೆಯಲಿದೆ.

ಇದೇ ವೇಳೆ, ಕರ್ನಾಟಕದ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9 ರಂದು ಉಪಚುನಾವಣೆ ನಡೆಯಲಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಹೆಚ್.ವೈ. ಮೇಟಿ ಅವರ ಅಗಲಿಕೆಯಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಭಾರತದ ಮುಖ್ಯ ಚುನಾವಣಾಧಿಕಾರಿ ಗ್ಯಾನೇಶ್ ಕುಮಾರ್ ಭಾನುವಾರ ಘೋಷಿಸಿದ್ದಾರೆ.

error: Content is protected !!