Home Blog Page 4

ಸಂಪುಟದಲ್ಲಿ ರಾಯಚೂರು–ಯಾದಗಿರಿಗೆ ಪ್ರಾತಿನಿಧ್ಯ ಇಲ್ಲ; ಸಿಎಂಗೆ ರಾಜೀನಾಮೆ ಸಲ್ಲಿಸಿದ ಶಾಸಕ ಬಸನಗೌಡ ದದ್ದಲ್

ರಾಯಚೂರು: ರಾಜ್ಯ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬಸನಗೌಡ ದದ್ದಲ್, ಹಿಂದುಳಿದ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ತೀವ್ರ ಬೇಸರಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಸ್ಥಾನ ಪಡೆದಿದ್ದರೂ, ಸಚಿವ ಸಂಪುಟದಲ್ಲಿ ಜಿಲ್ಲೆಯ ಪ್ರತಿನಿಧಿಗೆ ಅವಕಾಶ ಕಲ್ಪಿಸದಿರುವ ಹಿನ್ನೆಲೆಯಲ್ಲಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ವಿವಿಧ ಜಿಲ್ಲೆಗಳ ಶಾಸಕರು ಮತ್ತು ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಬಸನಗೌಡ ದದ್ದಲ್ ಅವರ ರಾಜೀನಾಮೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಜಾರ್ಖಂಡ್ʼನಲ್ಲಿ ನೇಮಕಾತಿ ಪರೀಕ್ಷೆ ಅಕ್ರಮ ಆರೋಪ; ವಿದ್ಯಾರ್ಥಿಗಳ ಪ್ರತಿಭಟನೆಗೆ ಸೋನಂ ವಾಂಗ್ಚುಕ್ ಬೆಂಬಲ

ರಾಂಚಿ: ಜಾರ್ಖಂಡ್‌ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದೆ. ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಸಿಜೆಪಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಬೆಂಬಲ ಸೂಚಿಸಿದ್ದಾರೆ.

ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹತೋ ಕಳೆದ 12 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ವೇಳೆ ಸೋನಂ ವಾಂಗ್ಚುಕ್ ಅವರೊಂದಿಗೆ ವಿಡಿಯೊ ಕರೆ ಮೂಲಕ ಮಾತುಕತೆ ನಡೆಸಿದ ಬಳಿಕ, ಅವರ ಮನವಿಗೆ ಸ್ಪಂದಿಸಿ ನೀರು ಕುಡಿದು ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಆದರೆ, ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ.

ಪ್ರತಿಭಟನಾಕಾರರು ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಹಾಗೂ ಜಾರ್ಖಂಡ್ ಸಿಬ್ಬಂದಿ ನೇಮಕಾತಿ ಆಯೋಗ (JSSC) ನಡೆಸಿದ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. 14ನೇ JPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ರದ್ದುಪಡಿಸಿ, ಪರೀಕ್ಷೆ ನಡೆಸಿದ ಸಂಸ್ಥೆಗಳ ವಿರುದ್ಧ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹತೋ, ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇರವಾಗಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಬೇಕು. “ಭರವಸೆ ಬೇಡ, ನ್ಯಾಯ ಬೇಕು” ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಹೇಳಿದ್ದಾರೆ. ಉಪವಾಸದಿಂದ ಅವರ ಆರೋಗ್ಯದ ಬಗ್ಗೆ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮಾತನಾಡಿ, ನೇಮಕಾತಿ ಅಕ್ರಮದ ವಿರುದ್ಧ ಹೋರಾಟ ನಡೆಸುತ್ತಿರುವ ಉದ್ಯೋಗ ಆಕಾಂಕ್ಷಿಗಳಿಗೆ ತಮ್ಮ ಸಂಘಟನೆಯ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪ್ರತಿಭಟನಾಕಾರರನ್ನು ಬೆಂಬಲಿಸಲು ಸಿಜೆಪಿ ಸದಸ್ಯರು ಜಾರ್ಖಂಡ್‌ಗೆ ಮೆರವಣಿಗೆ ನಡೆಸಲಿದ್ದಾರೆ ಎಂದೂ ಘೋಷಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಐಡಿ ಈಗಾಗಲೇ 14 ಮಂದಿಯನ್ನು ಬಂಧಿಸಿದೆ. ತನಿಖೆ ಮುಂದುವರಿದಿದ್ದು, ಮಾಜಿ JPSC ಅಧ್ಯಕ್ಷರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಮತ್ತೊಂದೆಡೆ ಬಿಜೆಪಿ ಹಾಗೂ ಬಿಜೆಪಿ ಯುವ ಮೋರ್ಚಾ (BJYM) ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ರಾಜೀನಾಮೆ ಹಾಗೂ ಪ್ರಕರಣವನ್ನು ಕೇಂದ್ರ ಸಂಸ್ಥೆಯಿಂದ ತನಿಖೆ ನಡೆಸುವಂತೆ ಒತ್ತಾಯಿಸಿವೆ.

ರಾಯರ ಮಠದಲ್ಲಿ ಭಕ್ತರ ಭಕ್ತಿ ಮಹಾಪೂರ: 21 ದಿನಗಳಲ್ಲಿ ಮಂತ್ರಾಲಯ ಹುಂಡಿಗೆ 3.75 ಕೋಟಿ ರೂ. ಕಾಣಿಕೆ!

ರಾಯಚೂರು: ಕಲಿಯುಗ ಕಾಮಧೇನು ಎಂದೇ ಖ್ಯಾತಿ ಪಡೆದಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಳೆದ 21 ದಿನಗಳಲ್ಲಿ ಭಕ್ತರು ಒಟ್ಟು ₹3,75,91,531 ಕಾಣಿಕೆ ಸಲ್ಲಿಸಿದ್ದಾರೆ.

ಜುಲೈ ಹಾಗೂ ಆಗಸ್ಟ್ ತಿಂಗಳ ಅವಧಿಯಲ್ಲಿ ದೇಶ-ವಿದೇಶಗಳಿಂದ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಉದಾರವಾಗಿ ಕಾಣಿಕೆ ಸಲ್ಲಿಸಿದ್ದಾರೆ. ಇದರ ಪರಿಣಾಮವಾಗಿ ಕೇವಲ 21 ದಿನಗಳಲ್ಲೇ ಕೋಟ್ಯಂತರ ರೂಪಾಯಿ ಸಂಗ್ರಹವಾಗಿದೆ.

ಮಠದ ಆಡಳಿತ ಮಂಡಳಿ ನೀಡಿರುವ ಮಾಹಿತಿ ಪ್ರಕಾರ, ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ ₹3,65,16,531 ಕರೆನ್ಸಿ ನೋಟುಗಳ ರೂಪದಲ್ಲಿದ್ದು, ₹10,75,000 ನಾಣ್ಯಗಳ ರೂಪದಲ್ಲಿ ಸಂಗ್ರಹವಾಗಿದೆ. ಇದರ ಜೊತೆಗೆ ಭಕ್ತರು 49 ಗ್ರಾಂ ಚಿನ್ನ ಹಾಗೂ 865 ಗ್ರಾಂ ಬೆಳ್ಳಿಯನ್ನು ಕೂಡ ಕಾಣಿಕೆಯಾಗಿ ಅರ್ಪಿಸಿದ್ದಾರೆ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಕರಸೇವಕರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು ಮತ್ತು ಶ್ರೀಮಠದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ಸಂಪೂರ್ಣ ಪ್ರಕ್ರಿಯೆ ನಡೆಸಲಾಯಿತು.

ಮಂತ್ರಾಲಯಕ್ಕೆ ಪ್ರತೀ ತಿಂಗಳೂ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಅಪಾರ ಭಕ್ತಿಯಿಂದ ಹುಂಡಿಗೆ ಹೆಚ್ಚಿನ ಪ್ರಮಾಣದಲ್ಲಿ ಕಾಣಿಕೆ ಹರಿದು ಬರುತ್ತಿದೆ.

ನನಗೆ ಸಚಿವ ಸ್ಥಾನ ಸಿಗುವುದೇ ಇಲ್ಲ ಅಂದುಕೊಂಡಿದ್ದೆ: HDK ಬಗ್ಗೆ ಗುಬ್ಬಿ ಶಾಸಕ SR ಶ್ರೀನಿವಾಸ್ ಹೇಳಿದ್ದೇನು?

ತುಮಕೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್, ತಮಗೆ ಸಚಿವ ಸ್ಥಾನ ಸಿಗುವುದೇ ಇಲ್ಲ ಎಂದು ಭಾವಿಸಿ ಮನೆಯಲ್ಲೇ ಕುಳಿತಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ವತಃ ಕರೆ ಮಾಡಿ ಸಚಿವರನ್ನಾಗಿ ಮಾಡಿದ್ದರು ಎಂದು ನೆನಪಿಸಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರು ಕುಂಚಿಟಿಗ ಸಮುದಾಯದ ಕೋಟಾದಲ್ಲಿ ಮತ್ತೊಬ್ಬರಿಗೆ ಸಚಿವ ಸ್ಥಾನ ನೀಡಲು ಯೋಚಿಸಿದ್ದರು. ಆದರೆ, ಎಚ್.ಡಿ. ಕುಮಾರಸ್ವಾಮಿ ತಮ್ಮನ್ನು ಕರೆದು ಸಚಿವ ಸ್ಥಾನ ನೀಡಿದ್ದರು ಎಂದು ಹೇಳುವ ಮೂಲಕ ಹೆಚ್‌ಡಿಕೆ ನಾಯಕತ್ವವನ್ನು ಪ್ರಶಂಸಿಸಿದರು.

ತಮ್ಮ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ಕೇವಲ ಒಂದು ವಿಚಾರದಲ್ಲಿ ಮಾತ್ರ ಭಿನ್ನಾಭಿಪ್ರಾಯ ಉಂಟಾಗಿತ್ತು. ಅದನ್ನು ಹೊರತುಪಡಿಸಿ ಅವರೊಂದಿಗೆ ಯಾವುದೇ ವೈಮನಸ್ಸು ಇರಲಿಲ್ಲ ಎಂದು ಶ್ರೀನಿವಾಸ್ ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ ರಾಜೀನಾಮೆ ನೀಡಬೇಡಿ ಎಂದು ಮನವಿ ಮಾಡಿದರು ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿಯವರು ನಾಲ್ಕೈದು ಬಾರಿ ಕರೆ ಮಾಡಿದ ಬಳಿಕ ಮಾತನಾಡಿ, ಎಲ್ಲ ನಿಗಮ-ಮಂಡಳಿಗಳ ಅಧ್ಯಕ್ಷರ ರಾಜೀನಾಮೆಯನ್ನು ಸಾಮೂಹಿಕವಾಗಿ ಪಡೆಯುವ ನಿರ್ಧಾರವಿದೆ ಎಂದು ತಿಳಿಸಿದರು. ಈ ಕಾರಣದಿಂದ ತಾವು ರಾಜೀನಾಮೆ ಸಲ್ಲಿಸಿಲ್ಲ ಎಂದು ಶ್ರೀನಿವಾಸ್ ಹೇಳಿದರು.

ಇದೇ ವೇಳೆ ಸಚಿವರಾದ ಚೆಲುವರಾಯಸ್ವಾಮಿ ಹಾಗೂ ಮಾಗಡಿ ಬಾಲಕೃಷ್ಣ ಕೂಡ ಕರೆ ಮಾಡಿ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದರು ಎಂದು ಅವರು ಹೇಳಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಶ್ರೀನಿವಾಸ್, 33 ಶೇಕಡಾ ಮಹಿಳಾ ಮೀಸಲಾತಿಯ ಬಗ್ಗೆ ಮಾತನಾಡುವ ಸರ್ಕಾರ ಮಹಿಳೆಯರಿಗೆ ಸಚಿವ ಸ್ಥಾನ ನೀಡದೇ ಇರುವುದು ಸರಿಯಲ್ಲ. ಇನ್ನೂ ಕಾಲ ಮಿಂಚಿಲ್ಲ. ಮುಖ್ಯಮಂತ್ರಿ ಅವರ ಬಳಿ ಇರುವ ಒಂದು ಇಲಾಖೆಯನ್ನು ಮಹಿಳಾ ಶಾಸಕರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಬಸ್‌ನಲ್ಲೇ ಮಹಿಳೆಗೆ ಹೃದಯಾಘಾತ: ರೂಟ್ ಬದಲಿಸಿದ ಆಸ್ಪತ್ರೆಗೆ ಕರೆತಂದ KSRTC ಚಾಲಕ

0

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹಠಾತ್ ಹೃದಯಾಘಾತ ಸಂಭವಿಸಿದ ವೇಳೆ, ಸಮಯಪ್ರಜ್ಞೆ ಮೆರೆದ ಚಾಲಕ ನಿಗದಿತ ಮಾರ್ಗವನ್ನು ಬಿಟ್ಟು ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಮಹಿಳೆ ಏಕಾಏಕಿ ಅಸ್ವಸ್ಥಗೊಂಡು ಹೃದಯಾಘಾತಕ್ಕೊಳಗಾದರು. ಪರಿಸ್ಥಿತಿ ಗಂಭೀರವಾಗಿದೆ ಎಂದು ಅರಿತ ಚಾಲಕ ಕ್ಷಣಮಾತ್ರವೂ ತಡಮಾಡದೆ ತುಮಕೂರು–ಮಧುಗಿರಿ ರಸ್ತೆಯಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬಸ್ ಅನ್ನು ತಿರುಗಿಸಿದರು.

ಆಸ್ಪತ್ರೆಯ ಪ್ರವೇಶ ದ್ವಾರದವರೆಗೂ ಬಸ್ ಕೊಂಡೊಯ್ದ ಬಳಿಕ ನಿರ್ವಾಹಕ ಮತ್ತು ಸಹಪ್ರಯಾಣಿಕರ ನೆರವಿನಿಂದ ಮಹಿಳೆಯನ್ನು ತಕ್ಷಣ ವೈದ್ಯರ ವಶಕ್ಕೆ ಒಪ್ಪಿಸಲಾಯಿತು. ವೈದ್ಯಕೀಯ ಸಿಬ್ಬಂದಿ ಕೂಡಲೇ ಚಿಕಿತ್ಸೆ ಆರಂಭಿಸಿದ ಪರಿಣಾಮ ಮಹಿಳೆಗೆ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ದೊರೆಯಿತು.

ಸಾಮಾನ್ಯವಾಗಿ ನಿಗದಿತ ಮಾರ್ಗದಲ್ಲಿ ಸಂಚರಿಸುವ ಬಸ್ ಅನ್ನು ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ತಿರುಗಿಸಿದ ಚಾಲಕನ ನಿರ್ಧಾರಕ್ಕೆ ಪ್ರಯಾಣಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಾಲಕ ಹಾಗೂ ನಿರ್ವಾಹಕರ ಮಾನವೀಯ ಸೇವೆಗೆ ಸಾರ್ವಜನಿಕರಿಂದ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

ಹುಡುಗಿ ಕಾಟದಿಂದ ಬೇಸತ್ತು ರಾಯರ ಮೊರೆ ಹೋದ ಯುವಕ: ಮಠದ ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್

0

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ವೇಳೆ ಪತ್ತೆಯಾದ ಹರಕೆ ಪತ್ರವೊಂದು ಈಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ದೇವರಲ್ಲಿ ಆಶೀರ್ವಾದ, ಆರೋಗ್ಯ ಅಥವಾ ಆರ್ಥಿಕ ಸಂಕಷ್ಟ ನಿವಾರಣೆಗೆ ಬೇಡುವ ಬದಲು, “ಒಬ್ಬ ಹುಡುಗಿಯಿಂದ ಕಾಪಾಡಿ” ಎಂದು ಭಕ್ತನೊಬ್ಬ ರಾಯರಿಗೆ ಮೊರೆ ಹೋಗಿರುವುದು ಗಮನ ಸೆಳೆದಿದೆ.

ಅನಾಮಧೇಯ ಭಕ್ತ ಬರೆದಿರುವ ಪತ್ರದಲ್ಲಿ “ಓಂ ಶ್ರೀ ರಾಘವೇಂದ್ರಾಯ ನಮಃ” ಎಂದು ಆರಂಭಿಸಿ, “ರಾಯರೇ ನಮ್ಮನ್ನು ಆ ಹುಡುಗಿಯಿಂದ ಕಾಪಾಡು. ಈ ಕಷ್ಟದಿಂದ ಪಾರು ಮಾಡು. ನಿಮ್ಮ ಮೇಲಿನ ನಂಬಿಕೆಯಿಂದ ನನ್ನ ನೋವನ್ನು ಹೇಳಿಕೊಳ್ಳುತ್ತಿದ್ದೇನೆ. ಆದಿಶಕ್ತಿ ದೇವಿ, ತಂದೆ-ತಾಯಿ ಕಾಪಾಡಲಿ” ಎಂದು ಮನವಿ ಮಾಡಲಾಗಿದೆ.

ಪತ್ರದಲ್ಲಿ “ಆ ವಿಷದಿಂದ ಕಾಪಾಡು” ಎಂಬ ಉಲ್ಲೇಖವೂ ಇದ್ದು, ಭಕ್ತ ಯಾವ ಸಂಕಷ್ಟವನ್ನು ಎದುರಿಸುತ್ತಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಪತ್ರದ ಕೊನೆಯಲ್ಲಿ “ಧನ್ಯವಾದಗಳು” ಎಂದು ಬರೆದು ತನ್ನ ಪ್ರಾರ್ಥನೆಯನ್ನು ಮುಗಿಸಿದ್ದಾನೆ.

ಪತ್ರದಲ್ಲಿ ಹೆಸರು ಅಥವಾ ವಿಳಾಸವಿಲ್ಲದ ಕಾರಣ ಭಕ್ತ ಯಾರು ಎಂಬುದು ಗೊತ್ತಾಗಿಲ್ಲ. ಆದರೂ ಈ ಅಪರೂಪದ ಹರಕೆ ಪತ್ರ ಮಠದ ಸಿಬ್ಬಂದಿ ಮತ್ತು ಭಕ್ತರಲ್ಲಿ ಆಶ್ಚರ್ಯ ಮೂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಉತ್ತರ ಕನ್ನಡಕ್ಕೆ ಸಚಿವ ಸ್ಥಾನ ಇಲ್ಲ: ಕಾಂಗ್ರೆಸ್ ವಿರುದ್ಧ ಯುವ ನಾಯಕರ ಬಂಡಾಯ

ಕಾರವಾರ: ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿ ಕಾರವಾರ–ಅಂಕೋಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಘೋಷಿಸಿದ್ದಾರೆ. ಆದರೆ ಈ ರಾಜೀನಾಮೆ ನಾಟಕಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಯೇ ಹೊಸ ತಿರುವು ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದ್ದರೂ, ಶಾಸಕ ಸತೀಶ್ ಸೈಲ್, ಮಂಕಾಳು ವೈದ್ಯ, ಆರ್.ವಿ. ದೇಶಪಾಂಡೆ ಹಾಗೂ ಭೀಮಣ್ಣ ನಾಯ್ಕ ಅವರಲ್ಲಿ ಯಾರಿಗೂ ಸಚಿವ ಸ್ಥಾನ ನೀಡದಿರುವುದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷವಾಗಿ ಸತೀಶ್ ಸೈಲ್ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಹೊಂದಿದ್ದ ಕಾರ್ಯಕರ್ತರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಯುವ ಕಾಂಗ್ರೆಸ್ ಪ್ರಕಟಣೆಯಲ್ಲಿ, ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ನಿಷ್ಠೆಗೆ ಗೌರವ ಸಿಕ್ಕಿಲ್ಲ. ಜಿಲ್ಲೆಗೆ ಸಚಿವ ಸ್ಥಾನ ನೀಡದ ನಿರ್ಧಾರದಿಂದ ಕಾರ್ಯಕರ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಹೀಗಾಗಿ ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಎಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಘೋಷಿಸಿದ್ದಾರೆ.

ರಾಜೀನಾಮೆ ಪಟ್ಟಿಯಲ್ಲಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ನೂತನ ಜೈನ, ಉಪಾಧ್ಯಕ್ಷ ದರ್ಶನ್ ನಾಯ್ಕ್, ಕಾರವಾರ ಬ್ಲಾಕ್ ಅಧ್ಯಕ್ಷ ಅಭಿಷೇಕ್ ರಾಣೆ ಸೇರಿದಂತೆ ಹಲವು ಪದಾಧಿಕಾರಿಗಳ ಹೆಸರುಗಳಿವೆ.

ಆದರೆ ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಮೋದ್ (ಸುಬ್ರಹ್ಮಣ್ಯ) ಶಿರಸಿಕರ್, ರಾಜೀನಾಮೆ ನೀಡಿದವರು ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಸಂಘಟನಾ ಚಟುವಟಿಕೆಯಲ್ಲಿ ಸಕ್ರಿಯರಾಗಿರಲಿಲ್ಲ. ಮೂರು ಸಭೆಗಳಿಗೆ ಗೈರಾಗಿದ್ದ ಕಾರಣ ಅವರನ್ನು ಕಾರ್ಯಕಾರಿಣಿ ಸಭೆಯಲ್ಲಿ ಅಮಾನತುಗೊಳಿಸಲು ಈಗಾಗಲೇ ನಿರ್ಧರಿಸಲಾಗಿತ್ತು. ಈ ವಿಚಾರವನ್ನು ನಿನ್ನೆ ತಿಳಿಸಿದ ಬಳಿಕ ಇಂದು ವಾಟ್ಸಾಪ್ ಮೂಲಕ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಹೀಗಾಗಿ ಇದನ್ನು ಅಧಿಕೃತ ರಾಜೀನಾಮೆಯಾಗಿ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಉತ್ತರ ಕನ್ನಡ ಕಾಂಗ್ರೆಸ್‌ನಲ್ಲಿ ರಾಜಕೀಯ ಭಿನ್ನಮತ ಮತ್ತಷ್ಟು ಬಹಿರಂಗವಾಗಿದೆ.

ಮೋದಿ ವಿಡಿಯೋ ವಿವಾದಕ್ಕೆ ಜುಕರ್‌ಬರ್ಗ್ ಕ್ಷಮೆ: ‘ಸೇಫ್ ಹಾರ್ಬರ್’ ರದ್ದಿನ ಎಚ್ಚರಿಕೆ ಬಳಿಕ ಮೆಟಾ ಯೂ-ಟರ್ನ್

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವಿಡಿಯೋ ತಾತ್ಕಾಲಿಕವಾಗಿ ತೆಗೆದುಹಾಕಿದ ವಿವಾದದ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಿದ್ದಾರೆ. ಮಕ್ಕಳ ಲೈಂಗಿಕ ಶೋಷಣೆ (CSAM) ಸಂಬಂಧಿತ ವಿಷಯ, ಡೀಪ್‌ಫೇಕ್ ಕಂಟೆಂಟ್ ಹಾಗೂ ಪ್ಲಾಟ್‌ಫಾರ್ಮ್ ನಿರ್ವಹಣೆಯ ಲೋಪದೋಷಗಳ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅವರು, ನಿರ್ದಿಷ್ಟ ವಿಷಯಗಳಿಗೆ ಹೆಚ್ಚಿನ ಪ್ರಚಾರ (Boost) ನೀಡಲು ಹಣ ಪಾವತಿಸಲಾಗಿರುವುದನ್ನೂ ಒಪ್ಪಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ವಿಡಿಯೋವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದ ಪ್ರಕರಣದ ಹಿನ್ನೆಲೆಯಲ್ಲಿ, ಮೂರು ದಿನಗಳೊಳಗೆ ಜುಕರ್‌ಬರ್ಗ್ ವೈಯಕ್ತಿಕವಾಗಿ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲವಾದರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ ಮೆಟಾ ಪಡೆಯುತ್ತಿರುವ ‘ಸೇಫ್ ಹಾರ್ಬರ್’ ರಕ್ಷಣೆಯನ್ನು ಹಿಂಪಡೆಯಲು ಶಿಫಾರಸು ಮಾಡಲಾಗುವುದು ಎಂದು ಸಂಸದೀಯ ತಂತ್ರಜ್ಞಾನ ಸಮಿತಿ ಎಚ್ಚರಿಕೆ ನೀಡಿತ್ತು.

ಈ ಬೆಳವಣಿಗೆಯ ಬೆನ್ನಲ್ಲೇ ಜುಕರ್‌ಬರ್ಗ್ ಕ್ಷಮೆ ಕೇಳಿದ್ದು, ಪ್ಲಾಟ್‌ಫಾರ್ಮ್‌ನಲ್ಲಿ ಕಂಡುಬಂದ ದೋಷಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಸಂಸದೀಯ ತಂತ್ರಜ್ಞಾನ ಸಮಿತಿಯ ಅಧ್ಯಕ್ಷ ನಿಶಿಕಾಂತ್ ದುಬೆ, “ಕ್ಷಮೆಯಾಚನೆ ಮಾತ್ರ ಸಾಕಾಗುವುದಿಲ್ಲ. ತಪ್ಪಿಗೆ ಕಾರಣರಾದವರ ಜವಾಬ್ದಾರಿ ನಿಗದಿಯಾಗಬೇಕು” ಎಂದು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಧಾನಿ ಮೋದಿ ನೀಡಿದ್ದ ಭಾಷಣದ ವಿಡಿಯೋ ಸುಮಾರು ಐದು ಗಂಟೆಗಳ ಕಾಲ ಫೇಸ್‌ಬುಕ್‌ನಲ್ಲಿ ಕಾಣಿಸದಿದ್ದರಿಂದ ಈ ವಿವಾದ ಆರಂಭವಾಗಿತ್ತು. ಬಳಿಕ ತಾಂತ್ರಿಕ ದೋಷದಿಂದ ವಿಡಿಯೋ ತೆಗೆದುಹಾಕಲಾಗಿತ್ತು ಹಾಗೂ ನಂತರ ಮರುಸ್ಥಾಪಿಸಲಾಗಿದೆ ಎಂದು ಮೆಟಾ ಸ್ಪಷ್ಟನೆ ನೀಡಿದ್ದರೂ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ಸಂಸದೀಯ ಸಮಿತಿ ಆ ಸಮಜಾಯಿಷಿಯನ್ನು ತಿರಸ್ಕರಿಸಿತ್ತು.

ಸಂಸದೀಯ ಸಮಿತಿಯ ವಿಚಾರಣೆ ವೇಳೆ ಮೆಟಾ ಪ್ರತಿನಿಧಿಗಳಿಗೆ ತೀವ್ರ ಪ್ರಶ್ನೆಗಳ ಸುರಿಮಳೆಯಾಗಿತ್ತು. ಪ್ರಧಾನಿಯವರ ಅಧಿಕೃತ ವಿಡಿಯೋ ತೆಗೆದುಹಾಕಲು ಅನುಮತಿ ನೀಡಿದವರು ಯಾರು? ಆಕ್ಷೇಪಾರ್ಹ ವಿಷಯಗಳು ಉಳಿದಿರುವಾಗ ಅಧಿಕೃತ ವಿಡಿಯೋವನ್ನೇ ಏಕೆ ಅಳಿಸಲಾಯಿತು? ಆಲ್ಗರಿದಮ್ ತಾರತಮ್ಯದಿಂದ ಕೂಡಿದೆಯೇ? ಎಂಬ ಪ್ರಶ್ನೆಗಳನ್ನು ಸಮಿತಿ ಮುಂದಿಟ್ಟಿತ್ತು.

ಒಂದು ವೇಳೆ ಮೆಟಾದ ‘ಸೇಫ್ ಹಾರ್ಬರ್’ ರಕ್ಷಣೆ ರದ್ದಾದರೆ, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಕಟವಾಗುವ ಅಕ್ರಮ ಅಥವಾ ಆಕ್ಷೇಪಾರ್ಹ ಪೋಸ್ಟ್‌ಗಳಿಗೆ ಮೆಟಾ ಅಧಿಕಾರಿಗಳೇ ನೇರ ಕಾನೂನು ಹೊಣೆಗಾರಿಕೆಯನ್ನು ಎದುರಿಸಬೇಕಾಗುತ್ತದೆ.

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರಾಜೀನಾಮೆ ನೀಡಿದ್ದ ಯಶವಂತರಾಯ ಗೌಡ ಪಾಟೀಲ್ ಯೂ-ಟರ್ನ್!

ವಿಜಯಪುರ: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯ ಗೌಡ ಪಾಟೀಲ್ ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಕಾಂಗ್ರೆಸ್‌ನ ಹಿರಿಯ ಸಚಿವರು ಹಾಗೂ ಶಾಸಕರ ಮನವೊಲಿಕೆಯ ಬಳಿಕ ಅವರು ರಾಜೀನಾಮೆಯನ್ನು ಹಿಂಪಡೆಯಲು ಮುಂದಾಗಿದ್ದಾರೆ.

ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಪಟ್ಟಿ ಪ್ರಕಟವಾದ ತಕ್ಷಣ ಅಸಮಾಧಾನಗೊಂಡಿದ್ದ ಯಶವಂತರಾಯ ಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ರಾಜೀನಾಮೆ ಪತ್ರವನ್ನು ಹಿಂಪಡೆಯಲು ವಿಧಾನಸಭೆ ಕಾರ್ಯದರ್ಶಿಗೆ ಅಧಿಕೃತವಾಗಿ ಪತ್ರ ಬರೆದಿದ್ದಾರೆ.

ರಾಜೀನಾಮೆ ಸಲ್ಲಿಸಿದ ವೇಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ಕಾಂಗ್ರೆಸ್‌ನಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಬೆಲೆ ಇಲ್ಲ. 2023ರ ಚುನಾವಣೆಗೆ ಮುನ್ನ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದೀಗ ಆ ಭರವಸೆ ಉಳಿಸಿಕೊಳ್ಳಲಾಗಿಲ್ಲ ಎಂದು ಆರೋಪಿಸಿದ್ದರು.

ಅಲ್ಲದೆ, ಕಳೆದ ಬಾರಿ ನಿಗಮ-ಮಂಡಳಿ ಸ್ಥಾನ ನೀಡುವುದಾಗಿ ಹೇಳಿದರೂ ತಾವು ನಿರಾಕರಿಸಿದ್ದೆ. ಸ್ವಾತಂತ್ರ್ಯ ಬಂದ ನಂತರದಿಂದ ಇಂಡಿ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಹೀಗಾಗಿ ತಮ್ಮ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಹಾಗೂ ಶಾಸಕನಾಗಿ ಮುಂದುವರಿಯುವುದಿಲ್ಲ ಎಂದು ಹೇಳಿದ್ದರು. ಜಿಲ್ಲೆಯ ರಾಜಕಾರಣ ಬೀದಿಗೆ ಬಂದಿದೆ ಎಂದು ಕೂಡ ಕಿಡಿಕಾರಿದ್ದರು.

ಆದರೆ ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರು ನಡೆಸಿದ ನಿರಂತರ ಮಾತುಕತೆ ಮತ್ತು ಮನವೊಲಿಕೆಯ ನಂತರ ಯಶವಂತರಾಯ ಗೌಡ ಪಾಟೀಲ್ ತಮ್ಮ ನಿರ್ಧಾರವನ್ನು ಬದಲಿಸಿಕೊಂಡಿದ್ದು, ರಾಜೀನಾಮೆ ಹಿಂಪಡೆಯಲು ಮುಂದಾಗಿದ್ದಾರೆ.

ಇದೇ ವೇಳೆ, ಸಚಿವ ಸಂಪುಟ ವಿಸ್ತರಣೆಯ ಅಂಗವಾಗಿ ಈಗಾಗಲೇ 19 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಎಸ್ಟೀಮ್ ಮಾಲ್ʼನಿಂದ ಪಶುವೈದ್ಯಕೀಯ ಕಾಲೇಜುವರೆಗೆ ಸುರಂಗ ಮಾರ್ಗ; 893 ಮರಗಳ ಸ್ಥಳಾಂತರಕ್ಕೆ BDA ಯೋಜನೆ, ಪರಿಸರ ತಜ್ಞರಿಂದ ಎಚ್ಚರಿಕೆ

ಬೆಂಗಳೂರು: ಎಸ್ಟೀಮ್ ಮಾಲ್‌ನಿಂದ ಪಶುವೈದ್ಯಕೀಯ ಕಾಲೇಜುವರೆಗೆ ನಿರ್ಮಾಣವಾಗಲಿರುವ 2.2 ಕಿಲೋಮೀಟರ್ ಉದ್ದದ ಸುರಂಗ ಮಾರ್ಗ (ಟನಲ್) ಯೋಜನೆಯಿಂದ ಒಟ್ಟು 893 ಮರಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತಿಳಿಸಿದೆ. ಈ ಬೆಳವಣಿಗೆ ಉತ್ತರ ಬೆಂಗಳೂರಿನ ಪ್ರಮುಖ ಹಸಿರು ವಲಯದ ಭವಿಷ್ಯದ ಕುರಿತು ಪರಿಸರವಾದಿಗಳಲ್ಲಿ ಆತಂಕ ಮೂಡಿಸಿದೆ.

ಬಿಡಿಎ ಅಧಿಕಾರಿಗಳ ಮಾಹಿತಿ ಪ್ರಕಾರ, ಯೋಜನೆಯ ವ್ಯಾಪ್ತಿಗೆ ಬರುವ 893 ಮರಗಳಲ್ಲಿ ಸುಮಾರು 85 ಶೇಕಡಾ ಮರಗಳನ್ನು ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. ಈ ಮರಗಳನ್ನು ಬೆಂಗಳೂರು ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣ ಹಾಗೂ ಬಿಡಿಎಗೆ ಸೇರಿದ ಇತರೆ ಜಾಗಗಳಿಗೆ ಸ್ಥಳಾಂತರಿಸುವ ಯೋಜನೆ ರೂಪಿಸಲಾಗಿದೆ.

ಆದರೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಸುದರ್ಶನ್ ಅವರು, ಈ ಸಂಬಂಧ ಬಿಡಿಎ ಇನ್ನೂ ಫಾರ್ಮ್–1 ಅಡಿಯಲ್ಲಿ ಸಂಪೂರ್ಣ ಅರ್ಜಿಯನ್ನು ಸಲ್ಲಿಸಿಲ್ಲ ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ವರದಿ ಆಧರಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಸುರಂಗ ಮಾರ್ಗವು ಪಶುವೈದ್ಯಕೀಯ ಕಾಲೇಜು ಆವರಣ, ಹೆಬ್ಬಾಳ ಟ್ರೀ ಪಾರ್ಕ್, ಹೆಬ್ಬಾಳ ಕೆರೆಯ ಬಫರ್ ವಲಯ ಹಾಗೂ ಸುತ್ತಮುತ್ತಲಿನ ಶಿಕ್ಷಣ ಸಂಸ್ಥೆಗಳ ಆವರಣದ ಮೂಲಕ ಹಾದು ಹೋಗಲಿದೆ. ಈ ಪ್ರದೇಶಗಳು ನಗರದ ಜೀವ ವೈವಿಧ್ಯ ಸಂರಕ್ಷಣೆಗೆ ಅತ್ಯಂತ ಮಹತ್ವದ ಹಸಿರು ವಲಯಗಳಾಗಿದ್ದು, ಪಕ್ಷಿಗಳು, ಚಿಟ್ಟೆಗಳು ಹಾಗೂ ಇತರ ವನ್ಯಜೀವಿಗಳಿಗೆ ಆಶ್ರಯ ತಾಣಗಳಾಗಿ ಕಾರ್ಯನಿರ್ವಹಿಸುತ್ತಿವೆ.

ಸ್ವತಂತ್ರ ಸಂಶೋಧಕ ಹಾಗೂ ಪರಿಸರ ಶಿಕ್ಷಣ ತಜ್ಞ ಹರೀಶ್ ಎ.ಎಸ್. ಅವರ ಪ್ರಕಾರ, ಈ ಹಸಿರು ಪ್ರದೇಶಗಳು ಸುಮಾರು 10 ಕಿಲೋಮೀಟರ್ ಉದ್ದದ ನೈಸರ್ಗಿಕ ಹಸಿರು ಸಂಪರ್ಕ ಮಾರ್ಗವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದ್ದವು. ಆದರೆ ನಿರಂತರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಂದ ಈ ಪರಿಸರ ಸಂಪರ್ಕ ಈಗಾಗಲೇ ದುರ್ಬಲಗೊಂಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪರಿಸರ ಮತ್ತು ಪರಿಸರಶಾಸ್ತ್ರ ಸಂಶೋಧನಾ ಸಂಸ್ಥೆ ATREEಗೆ ಸಂಬಂಧಿಸಿದ ವಿಜ್ಞಾನಿ ಹಾಗೂ ಸಸ್ಯಶಾಸ್ತ್ರಜ್ಞ ಗಣೇಶನ್ ಅವರ ಪ್ರಕಾರ, ಪ್ರೌಢ ಮರಗಳ ಸ್ಥಳಾಂತರ ಅತ್ಯಂತ ಸಂಕೀರ್ಣ ಪ್ರಕ್ರಿಯೆಯಾಗಿದ್ದು, ವೈಜ್ಞಾನಿಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಮಾತ್ರ ಯಶಸ್ಸು ಸಾಧ್ಯ.

ಜಾತಿ ಆಧಾರಿತ ಮೌಲ್ಯಮಾಪನ, ಬೇರುಗಳ ಪೂರ್ವಸಿದ್ಧತೆ ಹಾಗೂ ಹಲವು ತಿಂಗಳ ನಿರ್ವಹಣೆ ಸೇರಿದಂತೆ ಅಗತ್ಯ ಕ್ರಮಗಳನ್ನು ಅನುಸರಿಸದಿದ್ದರೆ ಸ್ಥಳಾಂತರಗೊಂಡ ಮರಗಳು ಬದುಕುಳಿಯುವ ಸಾಧ್ಯತೆ ಕಡಿಮೆ. ಭಾರೀ ಯಂತ್ರಗಳ ಮೂಲಕ ಮರಗಳನ್ನು ಕಿತ್ತು ಸಾಗಿಸುವ ಸಂದರ್ಭದಲ್ಲಿ ಬೇರುಗಳು ಮತ್ತು ಕೊಂಬೆಗಳು ಹಾನಿಗೊಳಗಾಗುವುದರಿಂದ ಅವುಗಳ ಜೀವಂತಿಕೆ ಕುಂಠಿತವಾಗುವ ಅಪಾಯ ಹೆಚ್ಚಿರುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.