Home Blog Page 4

ತಂತ್ರಜ್ಞಾನವನ್ನು ವಿವೇಚನೆಯಿಂದ ಬಳಸುವ ಜ್ಞಾನ ಅಗತ್ಯ: ಶಂಭುಲಿಂಗಯ್ಯ ಕಲ್ಮಠ

0

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಒಳ್ಳೆಯದು ಮತ್ತು ಕೆಟ್ಟದ್ದರ ನಡುವಿನ ವ್ಯತ್ಯಾಸ ಅರಿಯುವ ವಿವೇಕ ಬೆಳೆಸಿಕೊಳ್ಳಬೇಕು ಎಂದು ಚಿಂತಕ ಶಂಭುಲಿಂಗಯ್ಯ ಕಲ್ಮಠ ಹೇಳಿದರು.

ಗದುಗಿನ ಸರ್ಕಾರಿ ಪ್ರಾಥಮಿಕ ಶಾಲೆ ನಂ.6 ಹಾಗೂ ಉರ್ದು ಪ್ರಾಥಮಿಕ ಶಾಲೆ ನಂ.3ರಲ್ಲಿ ಗದಗ ಜಿಲ್ಲಾ ಶರಣ ಸಂಕುಲದ ಶರಣೆ ಅಕ್ಕಮಹಾದೇವಿಯ ಕದಳಿಶ್ರೀ ವೇದಿಕೆಯಿಂದ ಹಮ್ಮಿಕೊಂಡಿದ್ದ ‘ಅಮೃತಭೋಜನ-ಜ್ಞಾನಸಿಂಚನ’ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿ ಭೋಜನ ವಿತರಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಮೌಲ್ಯಯುತ ಬದುಕಿನ ದಾರಿ ತೋರಿಸುವುದು ದೊಡ್ಡ ಆಸ್ತಿಯಾಗಿದ್ದು, ಹಿರಿಯರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು.

ಮುಖ್ಯ ಅತಿಥಿ ಚಂಪಾ ಪಾಟೀಲ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿ, ಮಾನವೀಯತೆ, ಸಹಕಾರ ಹಾಗೂ ದೇಶಪ್ರೇಮವನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು. ಸುಮತಿ ಗದಗಿನಮಠ ಅವರು ಶರಣರ ವಚನಗಳನ್ನು ಓದಿ ಅವುಗಳ ತತ್ವದಂತೆ ಬದುಕಬೇಕು ಎಂದರು.

ವೇದಿಕೆಯ ಸಂಚಾಲಕಿ ಕವಿತಾ ದಂಡಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯಿನಿ ಎಂ.ಎ. ಕಂದಗಲ್ಲ ಸ್ವಾಗತಿಸಿದರು. ಎಸ್.ಎಸ್. ಕುಷ್ಟಗಿ ನಿರೂಪಿಸಿದರು. ಎ.ಎಸ್. ಮಸೂತಿ ವಂದಿಸಿದರು.

ಅಕ್ಷತಾ ವಿಲ್ಲಾಯತ್, ಎಂ.ಐ. ಜಮಾಲಸಾಬನವರ, ಬಿ. ಹೂಗಾರ, ಸಾವಿತ್ರಿ ಬಳ್ಳಾರಿ, ಮಹೇಶ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿಭಟನೆ ಸಾಕು… ಮೊದಲು ರೈತರ ಸಾಲ ಮನ್ನಾ ಮಾಡಿಸಿ ತೋರಿಸಿ: ಸೈಯದ್ ಖಾಲಿದ್ ಕೊಪ್ಪಳ ಸವಾಲು

0

ವಿಜಯಸಾಕ್ಷಿ ಸುದ್ದಿ, ಗದಗ: ಬರಗಾಲದ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮೊದಲು ಕೇಂದ್ರ ಸರ್ಕಾರದಿಂದ ರೈತರ ಸಾಲ ಮನ್ನಾ ಮಾಡಿಸಿ, ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಾಗೂ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಿ ಎಂದು ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಸವಾಲು ಹಾಕಿದ್ದಾರೆ.

ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೇವಲ ಪ್ರತಿಭಟನೆ ನಡೆಸಿ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ರೈತರಿಗೆ ನಿಜವಾದ ನೆರವು ದೊರೆಯಬೇಕಾದರೆ ಕೇಂದ್ರ ಸರ್ಕಾರದಿಂದ ಅಗತ್ಯ ಅನುದಾನ ಹಾಗೂ ಪರಿಹಾರ ಬಿಡುಗಡೆ ಮಾಡಿಸುವಂತೆ ಬಿಜೆಪಿ ನಾಯಕರು ಒತ್ತಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರೈತರ ಸಾಲ ಮನ್ನಾ ವಿಚಾರದಲ್ಲಿಯೂ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ರೈತರ ಪರವಾಗಿ ಮಾತನಾಡುವ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮಟ್ಟದಲ್ಲಿ ರೈತರಿಗೆ ಅಗತ್ಯ ನೆರವು, ಪರಿಹಾರ ಹಾಗೂ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ವಿವಿಧ ಜನಪರ ಯೋಜನೆಗಳ ಮೂಲಕ ರೈತರು, ಮಹಿಳೆಯರು ಹಾಗೂ ಸಾಮಾನ್ಯ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ರೈತರ ಕಲ್ಯಾಣ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳು ಜನಜೀವನಕ್ಕೆ ಸಹಕಾರಿಯಾಗುತ್ತಿವೆ ಎಂದು ತಿಳಿಸಿದ್ದಾರೆ.

ಮಾಜಿ ಸಚಿವ ಎಚ್.ಕೆ. ಪಾಟೀಲ ಅವರಂತಹ ನಾಯಕರು ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಶಿಕ್ಷಣ ಕ್ಷೇತ್ರದ ಪ್ರಗತಿ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ಅವರು ನಿರಂತರವಾಗಿ ಜನಪರ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸೈಯದ್ ಖಾಲಿದ್ ಕೊಪ್ಪಳ ತಿಳಿಸಿದ್ದಾರೆ.

ಬರಗಾಲದ ಹೆಸರಿನಲ್ಲಿ ರಾಜಕೀಯ ಮಾಡುವುದಕ್ಕಿಂತ ರೈತರ ನೆರವಿಗೆ ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ ಸಾಲ ಮನ್ನಾ ಮಾಡಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ರೈತರ ಹಿತಾಸಕ್ತಿಯೇ ಎಲ್ಲ ರಾಜಕೀಯಕ್ಕಿಂತ ಮುಖ್ಯ ಎಂದು ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ನಾಡಿಮಿಡಿತದಿಂದಲೇ ರೋಗ ಪತ್ತೆಹಚ್ಚಿ ಗುಣಪಡಿಸುತ್ತಿದ್ದರು: ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪದ ಲಿಂ. ಡಾ. ಎಸ್.ಎಫ್. ಹಿರೇಮಠ ಅವರು ರೋಗಿಗಳ ನಾಡಿಮಿಡಿತದಿಂದಲೇ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡುವ ಅಪರೂಪದ ಕಲೆ ಹೊಂದಿದ್ದರು. ವಿಷಜಂತುಗಳ ಕಡಿತಕ್ಕೊಳಗಾದ ರೋಗಿಗಳನ್ನೂ ಗುಣಪಡಿಸುತ್ತಿದ್ದ ಅವರು ಈ ಭಾಗದ ನಡೆದಾಡುವ ವೈದ್ಯ ದೇವರೆಂದೇ ಪ್ರಖ್ಯಾತಿ ಹೊಂದಿದ್ದರು ಎಂದು ಬನ್ನಿಕೊಪ್ಪದ ಬೃಹನ್ಮಠ ಹಾಗೂ ಮೈಸೂರಿನ ಜಪದಕಟ್ಟೆ ಅರಮನೆಯ ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅವರು ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಲಿಂ. ಡಾ. ಎಸ್.ಎಫ್. ಹಿರೇಮಠ ಅವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷವೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸುವ ಮೂಲಕ ಲಿಂ. ಡಾ. ಹಿರೇಮಠ ಅವರಿಗೆ ಗೌರವ ಸಲ್ಲಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ವಿರುಪಾಪುರದ ಸ್ವಾಮೀಜಿ ಹಾಗೂ ಬೆಳ್ಳಟ್ಟಿಯ ಬಸವರಾಜ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಶಾಸಕ ಡಾ. ಚಂದ್ರು ಲಮಾಣಿ, ಶಿವಪ್ರಕಾಶ ಮಹಾಜನಶೆಟ್ಟರ, ಕೊಟ್ರಯ್ಯ ಹೊಂಬಾಳಿಮಠ, ಬಾಬಣ್ಣ ಕಲಾಲ, ಜಂಬಯ್ಯ ಹಿರೇಮಠ, ವೈ.ಬಿ. ಹೊಸೂರ, ಆರ್.ಆರ್. ಗಡ್ಡದ್ದೇವರಮಠ, ಡಾ. ಪ್ರಕಾಶ ಹೊಸಮನಿ, ಡಾ. ಶಂಭು ಪುರದ, ಡಾ. ಪ್ರಭುಗೌಡರ, ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ, ಮಹೇಶ ಬಡ್ನಿ, ಶಂಕರ ಮೇಟಿ, ಶಂಭು ಮಠದ, ಎಂ.ಸಿ. ಮರಡೂರಮಠ, ಅಶೋಕ ಹಿರೇಹೊಳಿ, ಗಿರೀಶ ಕೊಡಬಾಳ, ಅಶೋಕ ನಾವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಲಿಂ. ಡಾ. ಎಸ್.ಎಫ್. ಹಿರೇಮಠ ಅವರು ಹೊಂದಿದ್ದ ವೈದ್ಯಕೀಯ ಸೇವಾ ಮನೋಭಾವ ಮತ್ತು ಅಪರೂಪದ ಚಿಕಿತ್ಸಾ ಕಲೆ ಇಂದಿನ ಪೀಳಿಗೆಗೆ ಆದರ್ಶವಾಗಿದೆ. ಅವರ ಸ್ಮರಣಾರ್ಥ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ.

ಡಾ. ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ

ಶಿರಹಟ್ಟಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸಮರ್ಪಕ ಬೆಳೆ ಪರಿಹಾರ, ಸಾಲದ ನೆರವು ಹಾಗೂ ಜಾನುವಾರುಗಳ ರಕ್ಷಣೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ತಾಲೂಕು ಘಟಕದ ವತಿಯಿಂದ ಸೋಮವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಚನಬಸವಗೌಡ ಪಾಟೀಲ ಹಾಗೂ ರಮೇಶ ಕೋಳಿವಾಡ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಗದಗ ಜಿಲ್ಲೆಯಲ್ಲಿ ಮಾತ್ರ ಕೇವಲ ಒಂದು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಶಿರಹಟ್ಟಿ ತಾಲೂಕು ಕೂಡ ಬರದ ಸಂಕಷ್ಟವನ್ನು ಎದುರಿಸುತ್ತಿದ್ದು, ಕೆರೆ–ಕಟ್ಟೆಗಳು ಹಾಗೂ ಇತರೆ ಜಲಮೂಲಗಳಲ್ಲಿನ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಕೃಷಿ ಚಟುವಟಿಕೆ ಸಂಪೂರ್ಣ ಹಿನ್ನಡೆ ಕಂಡಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.

ಆದ್ದರಿಂದ ಸರ್ಕಾರ ಕೂಡಲೇ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಬೆಳೆ ನಷ್ಟದ ಪರಿಹಾರ ವಿತರಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ಸಾಲದ ನೆರವು ನೀಡುವುದರೊಂದಿಗೆ ಜಾನುವಾರುಗಳ ರಕ್ಷಣೆಗಾಗಿ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಫಕ್ಕೀರೇಶ ಕಟ್ಟಿಮನಿ, ಎಸ್.ವಿ. ನೆಲಗುಡ್ಡದ, ಫಕ್ಕೀರೇಶ ಹೊಸಮನಿ, ಕೃಷ್ಣಸಾಬ ದೊಡ್ಡಮನಿ, ಪೀರಸಾಬ ನದಾಫ, ಎಸ್.ಎನ್. ದಲಾಲಿ, ವೀರಣ್ಣ ಮಜ್ಜಗಿ, ಸುರೇಶ ಸೂರಣಗಿ, ರಾಮನಗೌಡ ಪಾಟೀಲ, ವೀರೇಶ ಶಿವಶಿಂಪಿ, ಫಕ್ಕೀರಗೌಡ ಪಾಟೀಲ, ದೇವಪ್ಪ ಉಪ್ಪಾರ, ಜಿ.ಬಿ. ಹೊಸಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿರಹಟ್ಟಿ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆ–ಕಟ್ಟೆಗಳ ನೀರಿನ ಮಟ್ಟ ಕುಸಿದಿದ್ದು, ಕೃಷಿ ಚಟುವಟಿಕೆ ಹಿನ್ನಡೆ ಕಂಡಿದೆ. ರೈತರ ಸಂಕಷ್ಟವನ್ನು ಪರಿಗಣಿಸಿ ತಾಲೂಕನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ಪರಿಹಾರ ನೀಡಬೇಕು.

ಚನಬಸವಗೌಡ ಪಾಟೀಲ ಹಾಗೂ ರಮೇಶ ಕೋಳಿವಾಡ, ರೈತ ಮುಖಂಡರು

ಬರ ಘೋಷಣೆಯಲ್ಲಿ ತಾರತಮ್ಯ ಆರೋಪ: ಸಿಎಂ ಡಿ.ಕೆ. ಶಿವಕುಮಾರರಿಗೆ ಕಪ್ಪು ಭಾವುಟದ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ತೀವ್ರ ಬರಗಾಲದಿಂದ ಗದಗ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದರೂ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಸೆಪ್ಟೆಂಬರ್ 1ರಂದು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ ಎಚ್ಚರಿಸಿದರು.

ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಬರ ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಿಲ್ಲ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಮೇವು ಮತ್ತು ನೀರಿನ ಕೊರತೆಯಿಂದ ಜಾನುವಾರುಗಳು ಸಂಕಷ್ಟಕ್ಕೀಡಾಗಿದ್ದು, ಬೆಳೆ ಹಾನಿಯಿಂದ ರೈತರು ಆತಂಕದಲ್ಲಿದ್ದಾರೆ. ಕೂಡಲೇ ಜಿಲ್ಲೆಯ ಎಲ್ಲ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಒಂದು ವಾರದೊಳಗೆ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಎಚ್ಚರಿಸಿದ ಅವರು, ರೈತರ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡಬೇಕು ಎಂದರು.

ರೈತರ ಪರವಾಗಿ ನಿಲ್ಲದ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಗಿರೀಶ್ ಹೊಸಮನಿ, ನಾಗರಾಜ ಕಳ್ಳಿಹಾಳ, ರಾಮಣ್ಣ ಕಮ್ಮಾರ, ಬಸವರಾಜ ಮರಾಠೆ, ಶರಣಪ್ಪ ಕಮ್ಮಾರ, ರವಿ ವಗ್ಗನವರ್ ಸೇರಿದಂತೆ ರೈತ ಸಂಘದ ಮುಖಂಡರು ಉಪಸ್ಥಿತರಿದ್ದರು.

ತೀವ್ರ ಬರಗಾಲದಿಂದ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಕೇವಲ ಗಜೇಂದ್ರಗಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಿರುವುದು ಖಂಡನೀಯ. ಕೂಡಲೇ ಜಿಲ್ಲೆಯ ಎಲ್ಲ ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಇಲ್ಲವಾದರೆ ಮುಖ್ಯಮಂತ್ರಿ ಅವರಿಗೆ ಕಪ್ಪು ಭಾವುಟ ಪ್ರದರ್ಶಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು.

ಶಂಕರಗೌಡ ಜಾಯನಗೌಡ್ರ, ಅಧ್ಯಕ್ಷರು, ರೈತ ಸಂಘ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಮರಲಿಂಗ ಬಸವೇಶ್ವರ ಮಹಾರಥೋತ್ಸವ ವೈಭವ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಡಿ.ಎಸ್. ಹಡಗಲಿ ಗ್ರಾಮದ ಶ್ರೀ ಅಮರಲಿಂಗ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ಮಹಾರಥೋತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿತು.

ಗ್ರಾಮದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಶ್ರೀ ಅಮರಲಿಂಗ ಬಸವೇಶ್ವರರ ದರ್ಶನ ಪಡೆದು, ಭಕ್ತಿಭಾವದಿಂದ ಮಹಾರಥೋತ್ಸವದಲ್ಲಿ ಪಾಲ್ಗೊಂಡರು. ಜೈಕಾರ, ಭಜನೆ ಹಾಗೂ ಧಾರ್ಮಿಕ ಘೋಷಣೆಗಳ ಮಧ್ಯೆ ರಥೋತ್ಸವ ಸಾಗಿದ್ದು, ಗ್ರಾಮದಲ್ಲಿ ಭಕ್ತಿಯ ಸಂಭ್ರಮ ಮನೆಮಾಡಿತ್ತು.

ಸೆ.1ರಂದು ಗದಗಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

0

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಿದ್ದಾರೆ.

ಸೆ.1ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು, ಬೆಳಿಗ್ಗೆ 10.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಗದಗಕ್ಕೆ ಆಗಮಿಸುವ ಮುಖ್ಯಮಂತ್ರಿ ಅವರು ಬೆಳಿಗ್ಗೆ 11.15ಕ್ಕೆ ಗದಗ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಲಿದ್ದಾರೆ. ಬಳಿಕ ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಮಧ್ಯಾಹ್ನ 1.15ಕ್ಕೆ ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಅವರು ಕೃಷಿ ವಿಜ್ಞಾನಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ನಂತರ ಮಧ್ಯಾಹ್ನ 2.30ಕ್ಕೆ ಗದಗ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಹಾಗೂ ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಗದಗ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೆಲಿಕಾಪ್ಟರ್ ಮೂಲಕ ಲಕ್ಷ್ಮೇಶ್ವರದ ಉಮಾ ಪಿಯು ಕಾಲೇಜು ಆವರಣಕ್ಕೆ ತೆರಳಲಿದ್ದಾರೆ.

ಬಳಿಕ 3.50ಕ್ಕೆ ಶ್ರೀ ಮುಕ್ತಿ ಮಂದಿರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಅವರು ನಂತರ ಲಕ್ಷ್ಮೇಶ್ವರಕ್ಕೆ ಆಗಮಿಸಲಿದ್ದಾರೆ.

ಅಲ್ಲಿಂದ ಸಂಜೆ 4.30ಕ್ಕೆ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಸಂಜೆ 5.05ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಾಫಿ ಎಸ್ಟೇಟ್‌ನಲ್ಲಿ ದುರಂತ: ಬಂದೂಕಿನಿಂದ ಗುಂಡು ಸಿಡಿದು 61 ವರ್ಷದ ರೈತ ಸಾವು

0

ಹಾಸನ: ಕಾಫಿ ಎಸ್ಟೇಟ್‌ನಲ್ಲಿ ಗುಂಡೇಟಿನಿಂದ ಕಾಫಿ ಬೆಳೆಗಾರನೊಬ್ಬ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಬಂದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ಕೇಶವಶೆಟ್ಟಿ (61) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಬಂದೂಕು ಹಿಡಿದು ಕಾಫಿ ತೋಟಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಕೈಯಲ್ಲಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳದಿಂದ ಸುಮಾರು 300 ಮೀಟರ್ ದೂರದಲ್ಲಿ ಕೇಶವಶೆಟ್ಟಿ ಅವರ ಮೃತದೇಹ ಪತ್ತೆಯಾಗಿದೆ. ಗುಂಡು ಸಿಡಿದ ಬಳಿಕ ಗಾಯಗೊಂಡ ಅವರು ಕೆಲ ದೂರ ನಡೆದುಕೊಂಡು ಬಂದು ನಂತರ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಗುಂಡು ಸಿಡಿದ ಸ್ಥಳದಲ್ಲಿ ಅವರ ಮೊಬೈಲ್ ಪತ್ತೆಯಾಗಿದ್ದು, ಮೃತದೇಹ ಬಿದ್ದಿದ್ದ ಸ್ಥಳದಿಂದ ಕೆಲ ಮೀಟರ್ ಹಿಂದೆ ಬಂದೂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ SOCO ತಂಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಅರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಂಜುನಾಥ ನಗರಕ್ಕೆ ₹1 ಕೋಟಿ ಮೂಲಸೌಕರ್ಯದ ಕೊಡುಗೆ

0

ವಿಜಯಸಾಕ್ಷಿ ಸುದ್ದಿ, ಗದಗ: ಬಡವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಗದಗ-ಬೆಟಗೇರಿ ನಗರದ 4ನೇ ವಾರ್ಡ್‌ನ ಮಂಜುನಾಥ ನಗರದ ಜನರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯವನ್ನು ಸರ್ಕಾರ ಪ್ರಾಮಾಣಿಕವಾಗಿ ಕೈಗೊಂಡಿದ್ದು, ಜನರ ಅನುಕೂಲಕ್ಕಾಗಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಿಮೆಂಟ್ ರಸ್ತೆಗಳು ಹಾಗೂ ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಹಿರಿಯ ಶಾಸಕ ಎಚ್.ಕೆ. ಪಾಟೀಲ ಹೇಳಿದರು.

ಬೆಟಗೇರಿಯ 4ನೇ ವಾರ್ಡ್‌ನ ಮಂಜುನಾಥ ನಗರದಲ್ಲಿ ಲೆಕ್ಕ ಶೀರ್ಷಿಕೆ 8443 ಠೇವಣಿ ವಂತಿಕೆ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಒಂದು ಕೋಟಿ ರೂ. ವೆಚ್ಚದ ಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗದಗ-ಬೆಟಗೇರಿ ನಗರಸಭೆಯ ಸದಸ್ಯೆ ಶ್ರೀಮತಿ ಶಕುಂತಲಾ ಅಕ್ಕಿ ಅವರು ವಾರ್ಡ್‌ನ ಬಡ ಜನರಿಗೆ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ನಗರಸಭೆಯಿಂದ ಹೆಚ್ಚುವರಿಯಾಗಿ 27 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಿರುವುದು, ತಮ್ಮ ವಾರ್ಡ್‌ನ ಜನತೆಯ ಮೇಲಿರುವ ಅವರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಎಚ್.ಕೆ. ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ವಾರ್ಡ್‌ನ ಹಲವೆಡೆ ಬೋರ್‌ವೆಲ್ ಕೊರೆಸಿ ಜನರಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವುದು ಹಾಗೂ ಹಲವು ರಸ್ತೆಗಳನ್ನು ನಿರ್ಮಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಈ ಭಾಗದ ಜನರ ಮನ ಮೆಚ್ಚುವಂತೆ ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಂಬರುವ ಜನವರಿ ತಿಂಗಳೊಳಗೆ ಎಲ್ಲ ಕಾಮಗಾರಿಗಳು ಪೂರ್ಣಗೊಂಡು ಉದ್ಘಾಟನೆಯಾಗಬೇಕು ಹಾಗೂ ಜನರಿಗೆ ಅಗತ್ಯ ಸೌಲಭ್ಯಗಳು ದೊರೆಯುವಂತಾಗಬೇಕು ಎಂದು ಎಚ್.ಕೆ.ಪಾಟೀಲ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾರ್ಡ್ ಸದಸ್ಯೆ ಶ್ರೀಮತಿ ಶಕುಂತಲಾ ಹೊಳಬಸಪ್ಪ ಅಕ್ಕಿ ಮಾತನಾಡಿ, ತಮ್ಮನ್ನು ಆಯ್ಕೆ ಮಾಡಿದ ವಾರ್ಡ್‌ನ ಜನತೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ನಿರಂತರ ಸಹಕಾರ ನೀಡುತ್ತಿರುವ ಶಾಸಕ ಎಚ್.ಕೆ. ಪಾಟೀಲ ಅವರನ್ನು ಸ್ಮರಿಸಿದರು.

ವಾರ್ಡ್‌ನ ಜನತೆಗೆ ಸರ್ಕಾರ ಹಾಗೂ ನಗರಸಭೆಯಿಂದ ಇನ್ನೂ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಈ ಭಾಗದ ಜನರ ಸಹಕಾರ ಮನೋಭಾವವನ್ನು ಅವರು ಶ್ಲಾಘಿಸಿದರು.

ಮಂಜುನಾಥ ನಗರದ ಫಾರೂಕ್ ಮಸೀದಿಯಿಂದ ಗೌರಿಗಣೇಶ ಶಾಲೆಯವರೆಗೆ ಗುಣಮಟ್ಟದ ಸಿಮೆಂಟ್ ರಸ್ತೆ ಹಾಗೂ ರಸ್ತೆಯ ಎರಡೂ ಬದಿಗಳಲ್ಲಿ ಸಿ.ಸಿ. ಚರಂಡಿ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ 348 ಮೀಟರ್ ಉದ್ದದ ಐದು ಸಿ.ಸಿ. ರಸ್ತೆಗಳು, 1,137 ಮೀಟರ್ ಉದ್ದದ ಸಿ.ಸಿ. ಚರಂಡಿಗಳು ಹಾಗೂ ಹೈಮಾಸ್ಟ್ ವಿದ್ಯುತ್ ದೀಪಗಳ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯಲಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಪ್ರಕಾಶ ವೆರ್ಣೆಕರ, ಶಂಕರಸಿಂಗ್ ರಜಪೂತ, ಹೀರಾಲಾಲಸಾ ಮೇರವಾಡೆ, ಶಿವಯ್ಯ ಶಿವಪ್ಪಯ್ಯಮಠ, ಸೂರಜ್ ಜಮಾದಾರ, ಮಹ್ಮದ ಶಾಲಗಾರ, ಶೇಡುಸಿಂಗ್ ಜಮಾದಾರ ಹಾಗೂ ಬಸವರಾಜ ಕುಂದಗೋಳ ಪಾಲ್ಗೊಂಡಿದ್ದರು.

ಸಿದ್ದಣ್ಣ ಮೇಳನವರ ಸ್ವಾಗತಿಸಿದರು. ವಾಸುದೇವ ಹುಣಸಿಮರದ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹೊಳಬಸಪ್ಪ ಅಕ್ಕಿ, ಸುದೀಪ ಕಣವಿ, ಹುಲ್ಲೇಶ ಬಜಂತ್ರಿ, ನಿಂಗಪ್ಪ ಕರಮುಡಿ ಸೇರಿದಂತೆ ಗಣ್ಯರು, ಈ ಭಾಗದ ನಾಗರಿಕರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

ಬಡವರು ವಾಸಿಸುವ ಪ್ರದೇಶಗಳಿಗೂ ಗುಣಮಟ್ಟದ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಮಂಜುನಾಥ ನಗರದಲ್ಲಿ ಆರಂಭವಾಗಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು.

ಎಚ್.ಕೆ. ಪಾಟೀಲ, ಶಾಸಕ

ಶಿವಮೊಗ್ಗ: ಓದು ಎಂದಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

0

ಶಿವಮೊಗ್ಗ: ಓದಿನ ವಿಚಾರದಲ್ಲಿ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಮನನೊಂದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ (14) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಚೆನ್ನಾಗಿ ಓದುವಂತೆ ಪೋಷಕರು ಪದೇಪದೇ ಬುದ್ಧಿವಾದ ಹೇಳುತ್ತಿದ್ದ ಹಿನ್ನೆಲೆಯಲ್ಲಿ ಆಕೆ ಮನನೊಂದಿದ್ದಳು ಎನ್ನಲಾಗಿದೆ.

ಪೋಷಕರು ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೂಜೆ ಮುಗಿಸಿ ಪೋಷಕರು ಮನೆಗೆ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಓದಿನ ವಿಚಾರವಾಗಿ ಪೋಷಕರು ಪದೇಪದೇ ಹೇಳುತ್ತಿದ್ದ ಮಾತುಗಳಿಂದ ಮನನೊಂದಿರುವುದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ.

ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.