Home Blog Page 4

ಮೊಬೈಲ್‌ನಿಂದ ದೂರವಿರಿ, ಪುಸ್ತಕಕ್ಕೆ ಹತ್ತಿರವಿರಿ: ಬುಡ್ಡಿ ಬಸವರಾಜ್

0
ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಮೊಬೈಲ್‌ಗಿಂತ ಪುಸ್ತಕವೇ ಉತ್ತಮ ಸಂಗಾತಿ. ವಿದ್ಯಾರ್ಥಿಗಳು ಮೊಬೈಲ್‌ನಿಂದ ದೂರವಿದ್ದು ಓದಿನತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಬುಡ್ಡಿ ಬಸವರಾಜ್ ಹೇಳಿದರು.
ತಾಲೂಕಿನ ಕೆಚ್ಚಿನಬಂಡಿ ಗ್ರಾಮದಲ್ಲಿ ಜನಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪೋಷಕರು ಕೂಲಿ ಮಾಡಿ ಮಕ್ಕಳ ಭವಿಷ್ಯ ರೂಪಿಸಲು ಶ್ರಮಿಸುತ್ತಿದ್ದಾರೆ. ಅವರ ಕಷ್ಟವನ್ನು ಅರಿತು ವಿದ್ಯಾರ್ಥಿಗಳು ಸಂಸ್ಕಾರ, ಶಿಸ್ತು ಬೆಳೆಸಿಕೊಂಡು ಶಿಕ್ಷಕರು ಹೇಳುವ ಪಾಠದತ್ತ ಗಮನ ಹರಿಸಬೇಕು. ಸರ್ಕಾರಿ ಶಾಲೆಗಳ ಉಳಿವು-ಬೆಳವಣಿಗೆ ಗ್ರಾಮೀಣ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಹೇಳಿದರು.
ಪತ್ರಕರ್ತ ಸಿ. ಶಿವಾನಂದ್ ಮಾತನಾಡಿ, ಯಾವುದೇ ಸ್ವಾರ್ಥವಿಲ್ಲದೆ ಜನಸೇವಾ ಟ್ರಸ್ಟ್ ಕೈಗೊಂಡಿರುವ ಶಿಕ್ಷಣ ಸೇವೆ ಮಾದರಿಯಾಗಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು ಎಂದು ಕರೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಉಮಾಪತಿ ಶೆಟ್ಟರ್ ಮಾತನಾಡಿ, ಉಚಿತ ನೋಟ್‌ಬುಕ್ ವಿತರಣೆಯಂತಹ ಕಾರ್ಯಕ್ರಮಗಳು ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಸ ಉತ್ತೇಜನ ನೀಡುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಆರು ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಲ್ಲದೆ 98 ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವನಾಥ ಭಾವಿಕಟ್ಟಿ, ಕಾರ್ಯದರ್ಶಿ ರಾಜಾಹುಲಿ, ಕೋಡಿಹಳ್ಳಿ ಮಂಜುನಾಥ, ಟಿ. ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ವಿ. ಅಶೋಕ್, ಶಿವಕುಮಾರ್, ದುರುಗಪ್ಪ, ಕೆಇಬಿ ಮಲ್ಲೇಶ್, ವಿರೂಪಾಕ್ಷಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಉಪನ್ಯಾಸಕ ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು. ಮಲ್ಲೇಶ್ ವಂದಿಸಿದರು.

ಬಿದ್ದವರನ್ನು ಎತ್ತಿ ನಿಲ್ಲಿಸುವುದೇ ನಿಜವಾದ ಧರ್ಮ: ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದರು

0

ವಿಜಯಸಾಕ್ಷಿ ಸುದ್ದಿ, ಗದಗ: ಧರ್ಮವು ಯಾವುದೇ ವ್ಯಕ್ತಿ, ಜಾತಿ ಅಥವಾ ಸಮುದಾಯಕ್ಕೆ ಸೀಮಿತವಲ್ಲ. ಬಿದ್ದವರನ್ನು, ಬೀಳುತ್ತಿರುವವರನ್ನು ಹಾಗೂ ಬೀಳುವ ಸ್ಥಿತಿಯಲ್ಲಿರುವವರನ್ನು ಎತ್ತಿ ನಿಲ್ಲಿಸುವುದೇ ನಿಜವಾದ ಧರ್ಮ ಎಂದು ಕಾಶಿ ಜಂಗಮವಾಡಿಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ನಗರದ ಜಗದ್ಗುರು ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಗದಗ-ಬೆಟಗೇರಿ ಜಗದ್ಗುರು ಪಂಚಾಚಾರ್ಯ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಹಾಗೂ ‘ಶ್ರೀ ಸಿದ್ಧಾಂತ ಶಿಖಾಮಣಿ’ ಆಧ್ಯಾತ್ಮಿಕ ಪ್ರವಚನ ಮಾಲಿಕೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಯುವಕರು ಮೊಬೈಲ್ ಹಾಗೂ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಹೊರಬಂದು ಭಾರತೀಯ ಸಂಸ್ಕೃತಿ, ಸಂಸ್ಕಾರ, ಗುರು-ಹಿರಿಯರಿಗೆ ಗೌರವ ಮತ್ತು ಮಾತೃಭೂಮಿಯ ಮೇಲಿನ ಅಭಿಮಾನ ಬೆಳೆಸಿಕೊಳ್ಳಬೇಕು. ಬಾಲ್ಯದಿಂದಲೇ ಧರ್ಮ ಸಂಸ್ಕಾರಗಳನ್ನು ಬೆಳೆಸಿದಾಗ ಮಾತ್ರ ಭವ್ಯ ಭಾರತದ ನಿರ್ಮಾಣ ಸಾಧ್ಯ ಎಂದು ಕರೆ ನೀಡಿದರು.

ಸನಾತನ ಧರ್ಮವು ಶಾಶ್ವತ ಜೀವನ ಪದ್ಧತಿಯಾಗಿದ್ದು, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಅಲ್ಲ. ಸಮಾಜದಲ್ಲಿ ಭಿನ್ನಾಭಿಪ್ರಾಯ ಮೂಡಿಸುವ ಪ್ರಯತ್ನಗಳನ್ನು ತೊರೆದು ಸಮುದಾಯದ ಏಕತೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಧರ್ಮಸಭೆಯಲ್ಲಿ ನರೇಗಲ್ಲ ಹಿರೇಮಠದ ಪೂಜ್ಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಕ್ತಿಮಂದಿರದ ಪೂಜ್ಯ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದರು. ಈಶ್ವರಯ್ಯ ವಿ. ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಚಂದ್ರು ಬಾಳಿಹಳ್ಳಿಮಠ, ಕಳೆದ 28 ವರ್ಷಗಳಿಂದ ನಡೆಯುತ್ತಿರುವ ಸಿದ್ಧಾಂತ ಶಿಖಾಮಣಿ ಪ್ರವಚನ ಮಾಲಿಕೆ ಧಾರ್ಮಿಕ ಜಾಗೃತಿ ಹಾಗೂ ವೈಚಾರಿಕತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಹಲವರಿಗೆ ಗುರುರಕ್ಷೆ ನೀಡಿ ಆಶೀರ್ವದಿಸಲಾಯಿತು. ಮಹೇಶ ಕುಂದ್ರಾಳಹಿರೇಮಠ ಸಂಗೀತ ಸೇವೆ ಸಲ್ಲಿಸಿದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

“ಧರ್ಮವು ಯಾವುದೇ ಒಂದು ವ್ಯಕ್ತಿ, ಜಾತಿ ಅಥವಾ ಸಮುದಾಯಕ್ಕೆ ಸೀಮಿತವಲ್ಲ. ಬಿದ್ದವರನ್ನು ಎತ್ತಿ ನಿಲ್ಲಿಸುವುದೇ ನಿಜವಾದ ಧರ್ಮ.”

– ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದರು

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಉಸಿರಾಟದ ತೊಂದರೆ ತೀವ್ರಗೊಂಡ ಹಿನ್ನೆಲೆಯಲ್ಲಿ ಚೆನ್ನಮ್ಮ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡದ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಕುಟುಂಬಸ್ಥರು, ಆಪ್ತರು ಹಾಗೂ ವಿವಿಧ ರಾಜಕೀಯ ನಾಯಕರು ಸಂತಾಪ ಸೂಚಿಸುತ್ತಿದ್ದಾರೆ.

ಬಿಜೆಪಿ-ಜೆಡಿಎಸ್ ನಡೆಸುತ್ತಿರುವುದು ಪಾದಯಾತ್ರೆಯಲ್ಲ, ಪ್ರಾಯಶ್ಚಿತ್ತ ಯಾತ್ರೆ: ಹೆಚ್.ಸಿ. ಬಾಲಕೃಷ್ಣ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್ ನಡೆಸುತ್ತಿರುವುದು ಪಾದಯಾತ್ರೆಯಲ್ಲ, ಅದು ಪ್ರಾಯಶ್ಚಿತ್ತ ಯಾತ್ರೆ ಎಂದು ಟೀಕಿಸಿದ ಅವರು, ಈ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಈ ವಿಚಾರದಲ್ಲಿ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಹೇಳಿದರು. “ಕುಮಾರಸ್ವಾಮಿ ಅವರೇ ಈ ಯೋಜನೆಗೆ ಚಾಲನೆ ನೀಡಿದವರು. ಈಗ ರೈತರ ಪರ ಹೋರಾಟ ಮಾಡುತ್ತಿರುವಂತೆ ನಾಟಕ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಡಿಎಲ್‌ಎಫ್ ಸಂಸ್ಥೆಗೆ ಜಾಗತಿಕ ಟೆಂಡರ್ ನೀಡುವ ಸಂದರ್ಭದಲ್ಲಿ ಎಷ್ಟು ಕಿಕ್‌ಬ್ಯಾಕ್ ಪಡೆದಿದ್ದೀರಿ? ನಂತರ ಟೆಂಡರ್ ಹಿಂಪಡೆಯುವಾಗಲೂ ಎಷ್ಟು ಹಣ ಪಡೆದಿದ್ದೀರಿ ಎಂಬುದನ್ನು ಕುಮಾರಸ್ವಾಮಿ ಜನರ ಮುಂದೆ ಸ್ಪಷ್ಟಪಡಿಸಬೇಕು ಎಂದು ಅವರು ಸವಾಲು ಹಾಕಿದರು.

ಬಿಜೆಪಿ ನಾಯಕರ ಮೇಲೂ ವಾಗ್ದಾಳಿ ನಡೆಸಿದ ಬಾಲಕೃಷ್ಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಾಗೂ ಮಾಜಿ ಸಚಿವ ಜಗದೀಶ್ ಶೆಟ್ಟರ್ ಕೂಡ ಇದೇ ಯೋಜನೆಗೆ ಬೆಂಬಲ ನೀಡಿದ್ದರು ಎಂದು ಆರೋಪಿಸಿದರು. “2014ರಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಹೊಸ ನಿರ್ಧಾರ ಕೈಗೊಂಡಿರಲಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಯೋಜನೆಗೆ ವೇಗ ಸಿಕ್ಕಿತ್ತು” ಎಂದು ಹೇಳಿದರು.

ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧವೂ ತೀವ್ರ ಟೀಕೆ ವ್ಯಕ್ತಪಡಿಸಿದ ಅವರು, “ಅಂದು ನೀವು ಕಂದಾಯ ಸಚಿವರಾಗಿದ್ದಿರಿ. ಆಗ ಈ ಯೋಜನೆ ಬಗ್ಗೆ ಜ್ಞಾನ ಇರಲಿಲ್ಲವೇ? ಈಗ ರೈತರ ಪರ ಮಾತನಾಡುವುದರಿಂದ ಸತ್ಯ ಬದಲಾಗುವುದಿಲ್ಲ” ಎಂದು ಪ್ರಶ್ನಿಸಿದರು.

ಇದೇ ವೇಳೆ, ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಹೆಸರಿನಲ್ಲಿರುವ ಸುಮಾರು 36 ಎಕರೆ ಜಮೀನು ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಗೆ ಬಂದಿರುವ ವಿಚಾರವನ್ನೂ ಪ್ರಸ್ತಾಪಿಸಿದ ಅವರು, ಆ ಜಮೀನು ಖರೀದಿ ಹಾಗೂ ಮಂಜೂರಾತಿಗೆ ಸಂಬಂಧಿಸಿದ ಹಲವು ಪ್ರಶ್ನೆಗಳನ್ನು ಎತ್ತಿದರು. ಎಸ್‌ಸಿ/ಎಸ್‌ಟಿ ಜಮೀನು ವರ್ಗಾವಣೆ, ಪಿಟಿಸಿಎಲ್ ಕಾಯ್ದೆ ಹಾಗೂ ಭೂ ದಾಖಲೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ಬದಲು, ಈ ಯೋಜನೆಗೆ ಸಂಬಂಧಿಸಿದ ಹಿಂದಿನ ನಿರ್ಧಾರಗಳು ಹಾಗೂ ತಮ್ಮ ಪಾತ್ರದ ಬಗ್ಗೆ ಬಿಜೆಪಿ-ಜೆಡಿಎಸ್ ನಾಯಕರು ಮೊದಲು ಜನರಿಗೆ ಉತ್ತರ ನೀಡಬೇಕು ಎಂದು ಹೆಚ್.ಸಿ. ಬಾಲಕೃಷ್ಣ ಒತ್ತಾಯಿಸಿದರು.

ಗ್ಯಾಸ್ ಸೋರಿಕೆ ಬಳಿಕ ಭಾರೀ ಸ್ಫೋಟ: ಅಣ್ಣಿಗೇರಿಯಲ್ಲಿ ಮನೆಗೆ ಹಾನಿ, ಮೂವರು ಆಸ್ಪತ್ರೆಗೆ ದಾಖಲು

0

ಧಾರವಾಡ: ಅಣ್ಣಿಗೇರಿ ಪಟ್ಟಣದಲ್ಲಿ ಗ್ಯಾಸ್ ಗೀಸರ್‌ಗೆ ಸಂಪರ್ಕ ಕಲ್ಪಿಸಲಾಗಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದು, ಮನೆಯ ಒಂದು ಭಾಗಕ್ಕೂ ಭಾರೀ ಹಾನಿಯಾಗಿದೆ. ಘಟನೆ ಶನಿವಾರ ಮುಂಜಾನೆ ಸಂಭವಿಸಿದ್ದು, ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆಯೊಳಗೆ ಗ್ಯಾಸ್ ಸೋರಿಕೆಯ ವಾಸನೆ ಬರುತ್ತಿದ್ದುದನ್ನು ಮನೆ ಮಾಲೀಕ ಅಲ್ಲಾಬಕ್ಷ್ ಗಮನಿಸಿದ್ದರು. ಆದರೆ ಸೋರಿಕೆ ಬೇರೆ ಮೂಲದಿಂದ ಇರಬಹುದು ಎಂದು ಭಾವಿಸಿ ನಮಾಜ್‌ಗೆ ತೆರಳಿದ್ದರು. ಇದೇ ವೇಳೆ ಮನೆಯಲ್ಲಿದ್ದ ಪುತ್ರನೊಬ್ಬ ವಿದ್ಯುತ್ ದೀಪ ಹಚ್ಚುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸ್ಫೋಟದಲ್ಲಿ ಸಾಯಿರಾಬಾನು (54), ಅಬ್ಬಾಸ್ ಅಲಿ (29) ಹಾಗೂ ಹಸನ್ (26) ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯೊಳಗಿನ ವಸ್ತುಗಳು ಧ್ವಂಸಗೊಂಡಿದ್ದು, ಒಂದು ಗೋಡೆ ಕೂಡ ಕುಸಿದಿದೆ.

ಅಣ್ಣಿಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ಯಾಸ್ ಸೋರಿಕೆ ಹಾಗೂ ಸ್ಫೋಟಕ್ಕೆ ಕಾರಣವಾದ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ಕೃಷಿಗೆ ನೀರು ಬಳಸಬೇಡಿ, ಕುಡಿಯಲು ಮಾತ್ರ ನೀರು ಬಿಡಲಾಗಿದೆ: ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ಕುಡಿಯುವ ಉದ್ದೇಶಕ್ಕೆ ಮಾತ್ರ ನೀರನ್ನು ಬಳಸಬೇಕು, ಕೃಷಿಗೆ ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೈತರಿಗೆ ಮತ್ತೊಮ್ಮೆ ಮನವಿ ಹಾಗೂ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಸೇರಿದಂತೆ ಯಾವುದೇ ಜಿಲ್ಲೆಯ ರೈತರು ಸರ್ಕಾರ ಬಿಡುಗಡೆ ಮಾಡಿರುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಬಾರದು ಎಂದು ಸ್ಪಷ್ಟಪಡಿಸಿದರು.

“ಕುಡಿಯುವ ನೀರಿನ ಅಗತ್ಯಕ್ಕಾಗಿ ಮಾತ್ರ ನೀರು ಬಿಡುಗಡೆ ಮಾಡಿದ್ದೇವೆ. ಜಲಾಶಯಗಳಲ್ಲಿನ ನೀರಿನ ಲಭ್ಯತೆ ಗಮನದಲ್ಲಿಟ್ಟುಕೊಂಡು ಮಾತ್ರ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಬಿತ್ತನೆ ಮಾಡಿ, ನಾಟಿ ಮಾಡಿ ನಂತರ ನೀರು ಬಿಡುವಂತೆ ನನ್ನ ಮೇಲೆ ಒತ್ತಡ ತರಬೇಡಿ” ಎಂದು ಸಿಎಂ ಹೇಳಿದರು.

ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾದ ಬಳಿಕವೇ ಬೆಳೆಗಳಿಗೆ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಡ್ಯಾಂಗಳು ಭರ್ತಿಯಾದರೆ ರೈತರಿಗೆ ಅಗತ್ಯ ಪ್ರಮಾಣದಲ್ಲಿ ನೀರು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ತಮಿಳುನಾಡು ಕಾವೇರಿ ನೀರು ಬಿಡುಗಡೆಗೆ ಒತ್ತಡ ಹೇರುತ್ತಿರುವ ವಿಚಾರ ಪ್ರಸ್ತಾಪಿಸಿದ ಸಿಎಂ, ಈ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ಕಾವೇರಿ ನೀರಿನ ವಿಚಾರ ನಮ್ಮ ಹಕ್ಕಿನ ಪ್ರಶ್ನೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿಯಲ್ಲಿ ರಾಜ್ಯದ ಪರವಾಗಿ ನಮ್ಮ ವಾದವನ್ನು ಮಂಡಿಸುತ್ತೇವೆ. ಈ ಬಗ್ಗೆ ದೆಹಲಿಗೆ ತೆರಳಿ ರಾಜ್ಯದ ಸಂಸದರೊಂದಿಗೂ ಚರ್ಚೆ ನಡೆಸುತ್ತೇನೆ” ಎಂದು ಹೇಳಿದರು.

ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಅವರು, “ಮೇಕೆದಾಟು ಯೋಜನೆ ಕರ್ನಾಟಕಕ್ಕೆ ಮಾತ್ರವಲ್ಲ, ತಮಿಳುನಾಡಿಗೂ ಅನುಕೂಲವಾಗುವ ಯೋಜನೆಯಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತುಂಗಾ ನಾಲೆಗೆ ಹಾರಿ ಗುತ್ತಿಗೆ ನೌಕರ ಆತ್ಮಹತ್ಯೆ: ಕುಟುಂಬದ ದೂರಿನ ಮೇರೆಗೆ ತನಿಖೆ ಆರಂಭ

0

ದಾವಣಗೆರೆ: ನ್ಯಾಮತಿ ತಾಲೂಕಿನ ಹೆಚ್. ಕಡದಕಟ್ಟೆ ಗ್ರಾಮದ ಸಮೀಪ ಸರ್ವೆ ಇಲಾಖೆಯ ಗುತ್ತಿಗೆ ನೌಕರನೊಬ್ಬ ತುಂಗಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು 28 ವರ್ಷದ ಮಣಿಕಂಠ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್ ಹಾಗೂ ಕುಟುಂಬದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಣಿಕಂಠ ಅವರು ಮೂರು ತಿಂಗಳ ಹಿಂದೆ ರಾಣೇಬೆನ್ನೂರು ಮೂಲದ ಮಹಿಳೆಯನ್ನು ವಿವಾಹವಾಗಿದ್ದರು. ಬಳಿಕ ದಾಂಪತ್ಯ ಜೀವನದಲ್ಲಿ ಉಂಟಾದ ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದ ಅವರು ಮಾನಸಿಕವಾಗಿ ನೊಂದಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಜುಲೈ 17ರಂದು ಸಂಜೆ ಅವರು ತುಂಗಾ ನಾಲೆಗೆ ಹಾರಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದರು. ರಾತ್ರಿ ಪೂರ್ತಿ ನಡೆದ ಶೋಧ ಕಾರ್ಯಾಚರಣೆಯ ಬಳಿಕ ಮರುದಿನ ಬೆಳಗ್ಗೆ ಸಗಟೂರು ಗ್ರಾಮದ ಸಮೀಪ ಮೃತದೇಹ ಪತ್ತೆಯಾಯಿತು.

ಮೃತರ ಕುಟುಂಬಸ್ಥರು ಪತ್ನಿ ಹಾಗೂ ಮತ್ತೊಬ್ಬ ವ್ಯಕ್ತಿಯ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಡೆತ್‌ನೋಟ್ ಸೇರಿದಂತೆ ಲಭ್ಯವಿರುವ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಪರೇಷನ್ ಸಿಂಧೂರ್ ಬಳಿಕ ಮೊದಲ ಭಾರೀ ಗುಂಡಿನ ದಾಳಿ: ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ ಸೇನೆ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ವಲಯದಲ್ಲಿರುವ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಶುಕ್ರವಾರ ರಾತ್ರಿ ಉಗ್ರರು ಮತ್ತು ಭಾರತೀಯ ಭದ್ರತಾ ಪಡೆಗಳ ನಡುವೆ ಸುಮಾರು ಎರಡು ಗಂಟೆಗಳ ಕಾಲ ತೀವ್ರ ಗುಂಡಿನ ಚಕಮಕಿ ನಡೆದಿದೆ. ಆಪರೇಷನ್ ಸಿಂಧೂರ್ ಬಳಿಕ ಗಡಿಯಲ್ಲಿ ನಡೆದ ಮೊದಲ ಪ್ರಮುಖ ಗುಂಡಿನ ದಾಳಿಯಿದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಉಗ್ರರು ಗಡಿ ದಾಟಿ ಭಾರತಕ್ಕೆ ಒಳನುಸುಳಲು ಯತ್ನಿಸಿದ್ದು, ಗಡಿ ಕಾಯುತ್ತಿದ್ದ ಭಾರತೀಯ ಸೇನಾ ಪಡೆಗಳು ತಕ್ಷಣ ಪ್ರತಿಕ್ರಿಯೆ ನೀಡಿ ಅವರ ಪ್ರಯತ್ನವನ್ನು ವಿಫಲಗೊಳಿಸಿವೆ. ಶನಿವಾರ ಬೆಳಿಗ್ಗೆ ಸುಮಾರು 9.50ರ ವೇಳೆಗೆ ಪಾಕಿಸ್ತಾನದ ಕಡೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಸೇನೆಯೂ ಸಮರ್ಪಕ ಪ್ರತಿದಾಳಿ ನಡೆಸಿದೆ.

ಈ ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಬಳಿಕ ಶನಿವಾರ ಬೆಳಿಗ್ಗೆಯಿಂದಲೇ ಸೇನೆ ಮತ್ತು ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ರಾಜೌರಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಉಗ್ರರ ಚಲನವಲನದ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭದ್ರತಾ ತಜ್ಞರ ಪ್ರಕಾರ, ಪ್ರಾದೇಶಿಕ ಪರಿಸ್ಥಿತಿಯಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಪಾಕಿಸ್ತಾನ ಎಲ್‌ಒಸಿ ಉದ್ದಕ್ಕೂ ಗುಂಡಿನ ದಾಳಿಗೆ ಮುಂದಾಗಿರುವ ಸಾಧ್ಯತೆಯಿದೆ.

ಗಮನಾರ್ಹವಾಗಿ, 2025ರ ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಮೇ 7ರಿಂದ 10ರವರೆಗೆ ‘ಆಪರೇಷನ್ ಸಿಂಧೂರ್’ ನಡೆಸಿತ್ತು.

ಸುಮಾರು 22 ನಿಮಿಷಗಳ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಎಲ್‌ಒಸಿ ದಾಟದೇ ಒಂಬತ್ತು ಉಗ್ರರ ನೆಲೆಗಳ ಮೇಲೆ ನಿಖರ ಕ್ಷಿಪಣಿ ದಾಳಿ ನಡೆಸಿತ್ತು. ಈ ವೇಳೆ 26 ನಿಖರ ಕ್ಷಿಪಣಿಗಳನ್ನು ಬಳಸಲಾಗಿದ್ದು, ಮುರಿದ್ಕೆಯಲ್ಲಿದ್ದ ಲಷ್ಕರ್-ಎ-ತೈಬಾ ಕೇಂದ್ರ ಹಾಗೂ ಬಹಾವಲ್ಪುರದಲ್ಲಿದ್ದ ಜೈಶ್-ಎ-ಮೊಹಮ್ಮದ್ ಮುಖ್ಯ ಕಚೇರಿಗಳನ್ನು ಗುರಿಯಾಗಿಸಿ ಧ್ವಂಸಗೊಳಿಸಲಾಗಿತ್ತು.

ಅನಿತಾ, ನಿಖಿಲ್ ಕುಮಾರಸ್ವಾಮಿ ಹೆಸರಿನ ಭೂಮಿಯೂ ಸ್ವಾಧೀನಕ್ಕೆ: ಜೆಡಿಎಸ್ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕುಟುಂಬಕ್ಕೆ ಸೇರಿದ ಭೂಮಿಗೂ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಬಿಡದಿ ಹೋಬಳಿಯ ಹೊಸೂರು ಹಾಗೂ ಬನ್ನಿಗಿರಿ ಗ್ರಾಮಗಳ ಸರ್ವೇ ಸಂಖ್ಯೆಗಳಲ್ಲಿರುವ ಕುಮಾರಸ್ವಾಮಿ ಕುಟುಂಬದ ಒಟ್ಟು 35 ಎಕರೆ ಭೂಮಿ ಯೋಜನೆಯ ವ್ಯಾಪ್ತಿಗೆ ಬಂದಿದೆ. ಇದರಲ್ಲಿ ಅನಿತಾ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ 31 ಎಕರೆ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಹೆಸರಿನಲ್ಲಿರುವ 4 ಎಕರೆ ಜಮೀನಿಗೂ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಈ ಬೆಳವಣಿಗೆಯನ್ನು ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು, ಕುಮಾರಸ್ವಾಮಿ ಕುಟುಂಬದ ಭೂ ದಾಖಲೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಪ್ರಸ್ತುತ ಬಿಡದಿ ಟೌನ್‌ಶಿಪ್ ಯೋಜನೆಗೆ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿದೆ. ಆದರೆ, ಕಾಂಗ್ರೆಸ್ ಈ ನಿಲುವನ್ನು ಪ್ರಶ್ನಿಸಿ, ಜೆಡಿಎಸ್‌ನ ವಿರೋಧದ ಹಿಂದೆ ರೈತರ ಹಿತಾಸಕ್ತಿಗಿಂತ ಕುಟುಂಬದ ಭೂಮಿಯ ಹಿತಾಸಕ್ತಿಯೇ ಪ್ರಮುಖ ಕಾರಣ ಎಂದು ಆರೋಪಿಸಿದೆ.

“ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದ 35 ಎಕರೆ ಭೂಮಿಯೂ ಯೋಜನೆಗೆ ಒಳಪಟ್ಟಿರುವುದರಿಂದಲೇ ಅವರು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಇದು ರೈತರ ಪರ ಹೋರಾಟವಲ್ಲ, ತಮ್ಮ ಕುಟುಂಬದ ಆಸ್ತಿಯನ್ನು ಉಳಿಸಿಕೊಳ್ಳುವ ಪ್ರಯತ್ನ” ಎಂದು ಕಾಂಗ್ರೆಸ್ ಟೀಕಿಸಿದೆ.

ಕೊಡಚಾದ್ರಿ ಏರುವ ಕನಸು ಅರ್ಧದಲ್ಲೇ ಅಂತ್ಯ: ಸ್ನೇಹಿತರ ಕಣ್ಮುಂದೆಯೇ ಯುವಕ ಹೃದಯಾಘಾತದಿಂದ ಸಾವು

0

ಶಿವಮೊಗ್ಗ: ವಾರಾಂತ್ಯದ ಪ್ರವಾಸದ ಸಂಭ್ರಮ ಕ್ಷಣಾರ್ಧದಲ್ಲೇ ಶೋಕವಾಗಿ ಮಾರ್ಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಟ್ಟಿನಹೊಳೆ ಗ್ರಾಮದಲ್ಲಿ ನಡೆದಿದೆ. ಕೊಡಚಾದ್ರಿ ಶಿಖರಕ್ಕೆ ತೆರಳುವ ಸಿದ್ಧತೆಯಲ್ಲಿದ್ದ ಬೆಂಗಳೂರಿನ 28 ವರ್ಷದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದು, ಸ್ನೇಹಿತರಲ್ಲಿ ಆಘಾತ ಮೂಡಿಸಿದೆ.

ಬೆಂಗಳೂರು ಮೂಲದ ಶ್ರೀಕಾಂತ್ ಮೂವರು ಸ್ನೇಹಿತರೊಂದಿಗೆ ಶುಕ್ರವಾರ ಕೊಡಚಾದ್ರಿ ಪ್ರವಾಸಕ್ಕೆ ತೆರಳಿ, ಕಟ್ಟಿನಹೊಳೆ ಗ್ರಾಮದ ಸ್ನೇಹಿತನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಬೆಳಗ್ಗೆ ಟ್ರೆಕ್ಕಿಂಗ್ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾತ್ರಿ ಏಕಾಏಕಿ ಆರೋಗ್ಯ ಹದಗೆಟ್ಟು ಅವರು ಕುಸಿದು ಬಿದ್ದಿದ್ದಾರೆ.

ತಕ್ಷಣ ಸ್ನೇಹಿತರು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸರು ಸಾವಿನ ಕುರಿತು ತನಿಖೆ ಮುಂದುವರಿಸಿದ್ದಾರೆ.