Home Blog Page 4

ಹೊನ್ನವಾಡಗೆ ರಾಜ್ಯ ಪ್ರಶಸ್ತಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಪ್ರಕೋಷ್ಟವು ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ–2026ಕ್ಕೆ ಗಜೇಂದ್ರಗಡ ತಾಲೂಕಿನ ಹಾಳಕೆರೆ ಗ್ರಾಮದ ಶಿಕ್ಷಕ ಮಹಾಂತೇಶ ಹೊನ್ನವಾಡ ಆಯ್ಕೆಯಾಗಿದ್ದಾರೆ.

ರೋಣ ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆಯ ರಾಜೀವ್ ಗಾಂಧಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅವರ ಶಿಕ್ಷಣ ಕ್ಷೇತ್ರದ ವಿಶಿಷ್ಟ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೆ. 5ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಹಕ್ಕುಪತ್ರ ನೀಡಿ 13 ವರ್ಷವಾದರೂ ನಿವೇಶನ ಹಂಚಿಕೆ ಇಲ್ಲ: ಬಡ ಕುಟುಂಬಗಳ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ರೋಣ: ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಹಕ್ಕುಪತ್ರ ಪಡೆದಿದ್ದರೂ ಕಳೆದ ಸುಮಾರು ೧೩ ವರ್ಷಗಳಿಂದ ನಿವೇಶನ ಹಂಚಿಕೆಯಾಗದೆ ನೂರಾರು ಬಡ ಕುಟುಂಬಗಳು ಸಂಕಷ್ಟದಲ್ಲಿದ್ದು, ಕೂಡಲೇ ಅರ್ಹ ಫಲಾನುಭವಿಗಳಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕೆಂದು ರೋಣ ತಾಲೂಕು ಸ್ಲಂ ಸಮಿತಿ ಆಗ್ರಹಿಸಿದೆ.

ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿಯ ಸಹಕಾರದಲ್ಲಿ ರೋಣ ತಾಲೂಕು ಸ್ಲಂ ಸಮಿತಿ ನೇತೃತ್ವದಲ್ಲಿ ನೂರಾರು ನಿವಾಸಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ರೋಣ ಪಟ್ಟಣದಲ್ಲಿ ೨೦೧೩ರಲ್ಲಿ ನೂರಾರು ಬಡ ಹಾಗೂ ಕೂಲಿ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದವು. ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಅಂದಿನ ತಹಶೀಲ್ದಾರ್ ಅವರು ದಿನಾಂಕ ೭-೨-೨೦೧೩ರಂದು ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ್ದರು. ಆದರೆ ಇಂದಿಗೂ ನಿವೇಶನಗಳನ್ನು ಹಂಚಿಕೆ ಮಾಡಿಲ್ಲ ಎಂದು ಸಮಿತಿ ಮುಖಂಡರು ಆರೋಪಿಸಿದರು.

ಹಕ್ಕುಪತ್ರವಿದೆ; ನಿವೇಶನದ ಜಾಗವೇ ಗೊತ್ತಿಲ್ಲ!

ಹಕ್ಕುಪತ್ರಗಳಲ್ಲಿ ರೋಣ ಪಟ್ಟಣದ ಯಾವ ಸರ್ವೇ ಸಂಖ್ಯೆಯಲ್ಲಿ ನಿವೇಶನ ಮಂಜೂರು ಮಾಡಲಾಗಿದೆ ಎಂಬ ವಿವರ ನಮೂದಿಸದಿರುವುದರಿಂದ ಫಲಾನುಭವಿಗಳು ಗೊಂದಲಕ್ಕೆ ಸಿಲುಕಿದ್ದಾರೆ. ಗುಡಿಸಲು ಪ್ರದೇಶಗಳು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಅನೇಕ ಕುಟುಂಬಗಳು ವಸತಿ ಸೌಲಭ್ಯಕ್ಕಾಗಿ ದಶಕಗಳಿಂದ ಕಾಯುತ್ತಿವೆ ಎಂದು ತಾಲೂಕು ಸ್ಲಂ ಸಮಿತಿ ಅಧ್ಯಕ್ಷ ಬಸವರಾಜ ಕುರಿ ತಿಳಿಸಿದರು.

ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ರೋಣ ಪಟ್ಟಣದಲ್ಲಿ ಹಲವು ದಶಕಗಳಿಂದ ಸರ್ಕಾರಿ ಹಾಗೂ ಖಾಸಗಿ ಜಾಗಗಳಲ್ಲಿ ಗುಡಿಸಲು ನಿರ್ಮಿಸಿಕೊಂಡು ನೂರಾರು ಕುಟುಂಬಗಳು ವಾಸಿಸುತ್ತಿವೆ. ಈ ಪ್ರದೇಶಗಳನ್ನು ಕರ್ನಾಟಕ ಸ್ಲಂ ಕಾಯ್ದೆ-೧೯೭೩ರ ಅಡಿಯಲ್ಲಿ ಗುರುತಿಸಿ ಅಗತ್ಯ ವಸತಿ ಹಾಗೂ ಮೂಲಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಅರ್ಹ ಕುಟುಂಬಗಳಿಗೂ ಶೀಘ್ರ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ನೂರಾರು ನಿವಾಸಿಗಳೊಂದಿಗೆ ತಹಶೀಲ್ದಾರ್ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿ ಮೂಲಕ ಎಚ್ಚರಿಸಲಾಗಿದೆ.

ಈ ಸಂದರ್ಭದಲ್ಲಿ ಎಂ.ಬಿ. ನದಾಫ್, ಪರವೀನಬಾನು ಹವಾಲ್ದಾರ, ಮೌಲಾಸಾಬ ಗಚ್ಚಿ, ಪುಷ್ಪಾ ಬಿಜಾಪೂರ, ಆರೀಫ್ ಕಾಗದಗಾರ, ಆಯಿಶಾ ನದಾಫ್, ರೆಹಮಾನಬಿ ಕೊಲಕಾರ, ಭಾಗ್ಯಬಾಳವ್ವ ಗುಣ್ಣದ, ಶಮೀದಅಲಿ ಚೌಧರಿ, ಮಾಳಮ್ಮ ಮಾದರ, ಆಶೀಫ್ ನಾಲಬಂದ, ತೌಶೀಫ್ ಮುಲ್ಲಾ ಸೇರಿದಂತೆ ವಿವಿಧ ಸ್ಲಂ ಪ್ರದೇಶಗಳ ನೂರಾರು ನಿವಾಸಿಗಳು ಉಪಸ್ಥಿತರಿದ್ದರು.

ಹಕ್ಕುಪತ್ರ ನೀಡಿ ೧೩ ವರ್ಷಗಳಾದರೂ ನಿವೇಶನ ಹಂಚಿಕೆ ಮಾಡದಿರುವುದು ಬಡ ಕುಟುಂಬಗಳಿಗೆ ಮಾಡಿದ ಅನ್ಯಾಯವಾಗಿದೆ. ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸಿ ಅರ್ಹರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು.

– ಇಮ್ತಿಯಾಜ್ ಆರ್. ಮಾನ್ವಿ, ಅಧ್ಯಕ್ಷರು, ಗದಗ ಜಿಲ್ಲಾ ಸ್ಲಂ ಸಮಿತಿ

ಗ್ರಾಹಕರ ವಿಶ್ವಾಸವೇ ಶಿವಸಂಗಮದ ಶಕ್ತಿ : ಜ.ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಶಿವಮೊಗ್ಗ: ಚಿಟ್ ಫಂಡ್ ವ್ಯವಹಾರದ ಬಗ್ಗೆ ಹಲವು ಅನುಮಾನಗಳಿರುವ ಇಂದಿನ ಕಾಲಘಟ್ಟದಲ್ಲಿಯೂ ೧೮ ವರ್ಷಗಳಿಂದ ನಿರಂತರ ಸೇವೆ ಸಲ್ಲಿಸಿ ರಾಜ್ಯದ ವಿವಿಧೆಡೆ ೨೦ ಶಾಖೆಗಳನ್ನು ವಿಸ್ತರಿಸಿರುವುದು ಶಿವಸಂಗಮ ಸಂಸ್ಥೆಯ ಪಾರದರ್ಶಕ ಹಾಗೂ ವಿಶ್ವಾಸಾರ್ಹ ವ್ಯವಹಾರಕ್ಕೆ ಸಾಕ್ಷಿಯಾಗಿದೆ ಎಂದು ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ಪೂಜ್ಯ ಜ.ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

ಗದಗದ ಪ್ರತಿಷ್ಠಿತ ಶಿವಸಂಗಮ ಸಮೂಹ ಸಂಸ್ಥೆಯ ಶಿವಸಂಗಮ ಚಿಟ್ಸ್ (ಪ್ರೈ.) ಲಿಮಿಟೆಡ್‌ನ ೨೦ನೇ ಶಾಖೆಯನ್ನು ಶಿವಮೊಗ್ಗದ ತಿಲಕನಗರದ ನೂತನ ಕಚೇರಿಯಲ್ಲಿ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಚಿಟ್ ಫಂಡ್ ವ್ಯವಹಾರದ ಬಗ್ಗೆ ಜನರಲ್ಲಿ ಸಾಮಾನ್ಯವಾಗಿ ಅನುಮಾನಗಳಿದ್ದರೂ, ೧೮ ವರ್ಷಗಳ ಸುದೀರ್ಘ ಪಯಣದಲ್ಲಿ ೨೦ ಶಾಖೆಗಳನ್ನು ಸ್ಥಾಪಿಸಿರುವುದು ಗ್ರಾಹಕರು ಸಂಸ್ಥೆಯ ಮೇಲೆ ಹೊಂದಿರುವ ಅಪಾರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು ಸಂಸ್ಥೆ ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಸಂಸ್ಥೆಯು ಕೇವಲ ಹಣಕಾಸು ವ್ಯವಹಾರಕ್ಕೆ ಸೀಮಿತವಾಗದೆ ರಕ್ತದಾನ, ನೇತ್ರದಾನ, ಆರೋಗ್ಯ ತಪಾಸಣೆ, ಕ್ಯಾನ್ಸರ್ ರೋಗಿಗಳಿಗೆ ಉಚಿತ ತಪಾಸಣೆ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳು, ಶುದ್ಧ ಕುಡಿಯುವ ನೀರು, ಆಹಾರ ಪದಾರ್ಥಗಳು ಹಾಗೂ ಸೂಪರ್ ಮಾರ್ಕೆಟ್ ಸೇರಿದಂತೆ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಸಂಸ್ಥೆ ತನ್ನ ಚಟುವಟಿಕೆ ವಿಸ್ತರಿಸಿದೆ ಎಂದು ಹೇಳಿದರು.

ಶಿವಮೊಗ್ಗ ಬಸವಕೇಂದ್ರದ ಪೂಜ್ಯ ಡಾ. ಬಸವ ಮರುಳಸಿದ್ಧ ಮಹಾಸ್ವಾಮಿಗಳು ಸಂಸ್ಥೆಯ ಪ್ರಗತಿಯನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯ ಯುವರಾಜ ಕೆ., ಗಣ್ಯ ವ್ಯಾಪಾರಿ ದೇವೇಂದ್ರಪ್ಪ, ಹೊಯ್ಸಳ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶಂಕರರಾವ್ ಹಾಗೂ ಪೂರ್ಣಪ್ರಜ್ಞ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಪರಮೇಶ್ವರ ಕೆ. ಭಾಗವಹಿಸಿದ್ದರು.

ಅಧ್ಯಕ್ಷತೆ ವಹಿಸಿದ್ದ ಶಿವಸಂಗಮ ಸಮೂಹ ಸಂಸ್ಥೆಯ ಸಂಸ್ಥಾಪಕ ಜಿ.ಎಂ. ಪಲ್ಲೇದ, ಸಂಸ್ಥೆಯ ಬೆಳವಣಿಗೆಯಲ್ಲಿ ಗ್ರಾಹಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನಿರ್ದೇಶಕರು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿವಸಂಗಮ ಸಹಕಾರಿ ಸಂಘದ ಅಧ್ಯಕ್ಷ ವಿ.ಎಸ್. ಶಿವಕಾಳಿಮಠ, ಉಪಾಧ್ಯಕ್ಷ ಎಂ.ಜಿ. ಗಾಣಿಗೇರ, ನಿರ್ದೇಶಕರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕೋಟ್

೧೮ ವರ್ಷಗಳ ಕಾಲ ಗ್ರಾಹಕರ ವಿಶ್ವಾಸ ಉಳಿಸಿಕೊಂಡು ೨೦ ಶಾಖೆಗಳಿಗೆ ವಿಸ್ತರಿಸಿರುವುದು ಸಣ್ಣ ಸಾಧನೆಯಲ್ಲ. ಪಾರದರ್ಶಕ ವ್ಯವಹಾರ ಮತ್ತು ಜನರ ನಂಬಿಕೆಯೇ ಶಿವಸಂಗಮ ಸಂಸ್ಥೆಯ ನಿಜವಾದ ಶಕ್ತಿಯಾಗಿದೆ.

– ಜ.ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು

ವಚನ ಸಾಹಿತ್ಯಕ್ಕೆ ಕಲಬುರ್ಗಿ ಕೊಡುಗೆ ಅಪಾರ : ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ಸಾಹಿತ್ಯ, ವಚನ ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರು ಸಲ್ಲಿಸಿದ ಸೇವೆ ಅಪಾರ ಮತ್ತು ಅನುಪಮವಾದದ್ದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.

ನಗರದ ತೋಂಟದಾರ್ಯ ಮಠದಲ್ಲಿ ನಡೆದ ಲಿಂಗಾಯತ ಪ್ರಗತಿಶೀಲ ಸಂಘದ 2813ನೇ ಶಿವಾನುಭವ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದ ಅವರು, ಅನೇಕ ಶರಣರ ವಚನಗಳ ಸಂಶೋಧನೆ, ಸಂಪಾದನೆ ಹಾಗೂ ಪ್ರಕಟಣೆಯ ಮೂಲಕ ಡಾ. ಕಲಬುರ್ಗಿ ಅವರು ವಚನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.

ತೋಂಟದಾರ್ಯ ಮಠದ ಪುಸ್ತಕ ಪ್ರಕಟಣೆಯ ಕಾರ್ಯದ ಹಿಂದಿನ ಪ್ರಮುಖ ಶಕ್ತಿಯಾಗಿದ್ದ ಡಾ. ಎಂ.ಎಂ. ಕಲಬುರ್ಗಿ ಅವರು ಸದಾಕಾಲ ಸ್ಮರಣೀಯರು. ಶ್ರೇಷ್ಠ ಶಿಕ್ಷಕ, ಸಂಶೋಧಕ ಹಾಗೂ ಸಮರ್ಥ ಆಡಳಿತಾಧಿಕಾರಿಯಾಗಿದ್ದ ಅವರು ವೈಚಾರಿಕ ಚಿಂತನೆಯ ಪ್ರತಿಪಾದಕರಾಗಿದ್ದರು ಎಂದು ಶ್ರೀಗಳು ಸ್ಮರಿಸಿದರು.

ಶ್ರಾವಣ ಮಾಸವು ಲಿಂಗಾಯತ ಧರ್ಮದಲ್ಲಿ ವಿಶೇಷ ಮಹತ್ವ ಹೊಂದಿದೆ. ಬಸವಾದಿ ಶರಣರ ಆದರ್ಶಗಳು ಮತ್ತು ಮಹಾತ್ಮರ ಸಂದೇಶಗಳನ್ನು ಕೇಳುವುದರೊಂದಿಗೆ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅಷ್ಟಮದ ಆರು ವೈರಿಗಳು ಹಾಗೂ ಸಪ್ತವ್ಯಸನಗಳಿಂದ ದೂರವಾಗಿ ಶರಣರ ಮಾರ್ಗದಲ್ಲಿ ಸಾಗಿದಾಗ ಜೀವನ ಪಾವನವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಡಾ. ಶರಣಬಸವ ವೆಂಕಟಾಪೂರ ಅವರು, ಆಳವಾದ ಅಧ್ಯಯನ, ಹೊಸ ವಿಷಯಗಳ ಹುಡುಕಾಟ ಮತ್ತು ಸಂಶೋಧನೆಯೇ ಡಾ. ಎಂ.ಎಂ. ಕಲಬುರ್ಗಿ ಅವರ ಜೀವನಧ್ಯೇಯವಾಗಿತ್ತು ಎಂದರು. ವಚನ ಸಾಹಿತ್ಯದ ಸಂಶೋಧನೆ, ಸಂಪಾದನೆ ಹಾಗೂ ಪ್ರಕಟಣೆಯಲ್ಲಿ ಅವರು ಮಾಡಿದ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ವಚನ ಸಾಹಿತ್ಯದ ಬೆಳವಣಿಗೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಕಲಬುರ್ಗಿ ಅವರು, ಕರ್ನಾಟಕದಲ್ಲಿ ಉದಯವಾದ ಲಿಂಗಾಯತ ಧರ್ಮವು ತನ್ನ ವಿಶಿಷ್ಟತೆಯೊಂದಿಗೆ ಸ್ವತಂತ್ರವಾಗಿ ಬೆಳೆಯಬೇಕು ಎಂಬ ಆಶಯ ಹೊಂದಿದ್ದರು ಎಂದು ಹೇಳಿದರು.

ನಾರಿ ಸಮ್ಮಾನ ಪುರಸ್ಕೃತರಿಗೆ ಗೌರವ

ಇದೇ ಸಂದರ್ಭದಲ್ಲಿ ನಾರಿ ಸಮ್ಮಾನ ಪುರಸ್ಕೃತರಾದ ಗದುಗಿನ ಶ್ರೀಮತಿ ಸುವರ್ಣ ಸದಾಶಿವಯ್ಯ ಮದರಿಮಠ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಶರಣೆ ಗಿರಿಜಕ್ಕ ಧರ್ಮರಡ್ಡಿ ಅವರು ‘ಶರಣರು ಕಂಡ ಅನಾದಿ ಬಸವಣ್ಣ’ ವಿಷಯ ಕುರಿತು ಪ್ರವಚನ ನೀಡಿದರು. ರೇವಣಸಿದ್ದಯ್ಯ ಮರಿದೇವರಮಠ ಹಾಗೂ ಬಸವರಾಜ ಗಣಪ್ಪನವರ ದಾಸೋಹ ಸೇವೆ ವಹಿಸಿದ್ದರು. ಸೂರಜ ಮರಿಗೌಡರ ಧರ್ಮಗ್ರಂಥ ಪಠಣ ನಡೆಸಿದರೆ, ಕೃತಿಕಾ ಮರಿಗೌಡ ವಚನ ಚಿಂತನ ಮಾಡಿದರು.

ವಿಜಯ ಕಿರೇಸೂರ ನಿರ್ದೇಶನದಲ್ಲಿ ಸ್ವಾತಂತ್ರ್ಯ ಸಂಗ್ರಾಮ ಕುರಿತ ಕೈಗೊಂಬೆ ಆಟವನ್ನು ಕದಾಂಪೂರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಪ್ರದರ್ಶಿಸಿದರು. ಕಾರ್ಯಕ್ರಮವನ್ನು ವಿದ್ಯಾ ಗಂಜಾಳ ನಿರೂಪಿಸಿದರು. ಡಾ. ಉಮೇಶ ಪುರದ ಸ್ವಾಗತಿಸಿದರು.

ಶಿವಾನುಭವದಲ್ಲಿ ಸಂಘದ ಉಪಾಧ್ಯಕ್ಷ ಪ್ರಭು ಗಂಜಿಹಾಳ, ಸುರೇಖಾ ಪಿಳ್ಳಿ, ಕಾರ್ಯದರ್ಶಿ ಸಿದ್ಧರಾಮ ಪಟ್ಟೇದ, ಸಹಕಾರ್ಯದರ್ಶಿ ಪ್ರತಿಭಾ ಬಡ್ನಿ, ಕೋಶಾಧ್ಯಕ್ಷ ವೀರಣ್ಣ ಗೋಟಡಕಿ, ಕೆ.ಎಸ್. ಕೋರಿಮಠ, ಸೋಮಶೇಖರ ಪುರಾಣಿಮಠ, ಆದೇಶ ಅಂಗಡಿ ಸೇರಿದಂತೆ ಶ್ರೀಮಠದ ಸದ್ಭಕ್ತರು ಭಾಗವಹಿಸಿದ್ದರು.

ವಚನ ಸಾಹಿತ್ಯವನ್ನು ಕೇವಲ ಅಧ್ಯಯನದ ವಿಷಯವಾಗಿ ನೋಡದೆ, ಅದರ ಆಳಕ್ಕೆ ಇಳಿದು ಸಂಶೋಧನೆ, ಸಂಪಾದನೆ ಮತ್ತು ಪ್ರಕಟಣೆಯ ಮೂಲಕ ಮುಂದಿನ ಪೀಳಿಗೆಗೆ ತಲುಪಿಸಿದ ಮಹತ್ವದ ಸಾಧಕರಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರು ಅಗ್ರಗಣ್ಯರು. ಅವರ ಸಾಹಿತ್ಯಿಕ ಮತ್ತು ಸಂಶೋಧನಾ ಸೇವೆ ಸದಾಕಾಲ ಸ್ಮರಣೀಯ.

— ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು

ಶರಣರ ಆದರ್ಶ ದಾಂಪತ್ಯಕ್ಕೆ ದಾರಿದೀಪ: ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ೧೨ನೇ ಶತಮಾನದ ಶರಣರ ತತ್ವಾದರ್ಶಗಳನ್ನು ನೂತನ ದಂಪತಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಗೌರವದಿಂದ ಬದುಕು ಸಾಗಿಸಬೇಕು ಎಂದು ಮುಂಡರಗಿಯ ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು ಹೇಳಿದರು.

ಇಲ್ಲಿನ ಅನ್ನದಾನೀಶ್ವರ ಶಾಖಾ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಶರಣರ ತತ್ವಚಿಂತನೆ ಪ್ರವಚನ, ಮಂಗಲೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಶಾಖಾ ಮಠ ನಿರ್ಮಾಣದ ಸಂದರ್ಭದಲ್ಲಿ ಈ ಸ್ಥಳದಲ್ಲಿ ಮೂವರು ಶರಣರ ಅಸ್ಥಿಪಂಜರಗಳು ಪತ್ತೆಯಾಗಿದ್ದು, ಸಂಶೋಧನೆಯಿಂದ ಅವು ಸುಮಾರು ೪೦೦ ವರ್ಷಗಳಷ್ಟು ಹಳೆಯವು ಎಂಬುದು ತಿಳಿದುಬಂದಿದೆ. ಹೀಗಾಗಿ ಲಕ್ಕುಂಡಿಯ ಅನ್ನದಾನೀಶ್ವರ ಶಾಖಾ ಮಠದ ಗದ್ದುಗೆ ವಿಶೇಷ ಮಹತ್ವ ಹೊಂದಿದೆ ಎಂದು ಶ್ರೀಗಳು ತಿಳಿಸಿದರು.

ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠವು ತ್ರಿವಿಧ ದಾಸೋಹ ಪರಂಪರೆಯನ್ನು ಹೊಂದಿದ್ದು, ನಾಡಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಭೂದಾನ ಹಾಗೂ ಧನಸಹಾಯ ನೀಡಿದೆ. ಈ ಹಿನ್ನೆಲೆ ಲಕ್ಕುಂಡಿ ಶಾಖಾ ಮಠದ ಅಭಿವೃದ್ಧಿಗೂ ಜನಪ್ರತಿನಿಧಿಗಳು ಅಗತ್ಯ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ಬಿ.ಆರ್. ಯಾವಗಲ್ ಮಾತನಾಡಿ, ನಾಡಿನಲ್ಲಿ ಬರಗಾಲದ ಛಾಯೆ ಆವರಿಸಿರುವ ಸಂದರ್ಭದಲ್ಲಿ ಶರಣರ ತತ್ವಬೋಧನೆಗಳನ್ನು ಸಾರುವ ಪುರಾಣ ಹಾಗೂ ಪ್ರವಚನ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ಮಾತನಾಡಿ, ಉತ್ತಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯ ಶ್ರೀಮಂತಿಕೆಯನ್ನು ಭಾರತ ಹೊಂದಿದೆ. ಅನೇಕ ಶರಣರು ತಾವು ನುಡಿದಂತೆ ನಡೆದು ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಅವರ ತತ್ವಾದರ್ಶಗಳ ಪ್ರವಚನ ಹಾಗೂ ಪುರಾಣಗಳು ಸಮಾಜದಲ್ಲಿನ ಸ್ವಾರ್ಥ ಮತ್ತು ಅಹಂಕಾರವನ್ನು ದೂರ ಮಾಡುವಲ್ಲಿ ಸಹಕಾರಿಯಾಗುತ್ತಿವೆ ಎಂದು ಹೇಳಿದರು.

ಹರ್ಲಾಪುರದ ಡಾ. ಕೊಟ್ಟೂರೇಶ್ವರ ಸ್ವಾಮೀಜಿ ಹಾಗೂ ಕುಕನೂರಿನ ಡಾ. ಮಹಾದೇವ ಸ್ವಾಮೀಜಿ ಮಾತನಾಡಿದರು. ಡಾ. ಗಿರಿಜಾ ಹಸಬಿ, ಷಡಕ್ಷರಯ್ಯ ಬದ್ನಿಮಠ ಹಾಗೂ ವೀರಣ್ಣ ಕರಿಯಲ್ಲಪ್ಪನವರ ಸಂಗೀತ ಸೇವೆ ಸಲ್ಲಿಸಿದರು.

ಶಂಕ್ರಯ್ಯ ಹಿರೇಮಠ, ಯುವ ಧುರೀಣ ವೀರಯ್ಯ ಗಂಧದ, ತಾ.ಪಂ. ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಸ್. ಪೂಜಾರ, ನಿವೃತ್ತ ಶಿಕ್ಷಕ ಅಶೋಕ ಬೂದಿಹಾಳ, ಲಕ್ಕುಂಡಿ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ ಅರಹುಣಶಿ, ನಿಂಗಪ್ಪ ಗುಂಜಳ ಹಾಗೂ ಚನ್ನಪ್ಪ ಹೂಗಾರ ವೇದಿಕೆಯಲ್ಲಿದ್ದರು.

ಪ್ರವಚನ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮುತ್ತಪ್ಪ ನೋಟಗಾರ ಸ್ವಾಗತಿಸಿದರು. ಅಂಬರೀಶ ಕರೆಕಲ್ಲ ನಿರೂಪಿಸಿದರು. ಶಿಕ್ಷಕ ಬಸವರಾಜ ಕಣವಿ ವಂದಿಸಿದರು.

ಶರಣರ ತತ್ವಾದರ್ಶಗಳು ಕೇವಲ ಮಾತಿಗೆ ಸೀಮಿತವಾಗದೆ ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ವಿಶೇಷವಾಗಿ ನೂತನ ದಂಪತಿಗಳು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದಿಂದ ಜೀವನ ನಡೆಸಿದಾಗ ದಾಂಪತ್ಯ ಬದುಕು ಸುಂದರವಾಗುತ್ತದೆ.

– ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು

ಆಹಾರದ ಅರಿವಿಲ್ಲದಿದ್ದರೆ ದೇಶದ ಭವಿಷ್ಯ ಅಭದ್ರ: ಡಾ. ಸಾವಿತ್ರಿ ಬ್ಯಾಡಗಿ

0

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚಿನ ದಿನಗಳಲ್ಲಿ ಆಹಾರ ಸಂಸ್ಕರಣೆ ಹಾಗೂ ಕಲಬೆರಕೆಯಿಂದ ಆಹಾರ ಪದಾರ್ಥಗಳು ವಿಷಕಾರಿಯಾಗುತ್ತಿರುವ ಆತಂಕಕಾರಿ ಬೆಳವಣಿಗೆ ಕಂಡುಬರುತ್ತಿದೆ. ಯುವಜನರಿಗೆ ಆರೋಗ್ಯಕರ ಆಹಾರದ ಕುರಿತು ಸೂಕ್ತ ಅರಿವು ಇಲ್ಲದಿದ್ದರೆ ದೇಶದ ಭವಿಷ್ಯವೇ ಅಭದ್ರವಾಗುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಆಹಾರ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸಾವಿತ್ರಿ ಬ್ಯಾಡಗಿ ಹೇಳಿದರು.

ನಗರದ ಐ.ಪಿ.ಇ.ಟಿ. ಸಂಸ್ಥೆಯ ಆರ್ಯಭಟ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ‘ಆಹಾರ ಸಂಸ್ಕರಣೆ ಹಾಗೂ ಕಲಬೆರಕೆ’ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಹಿಂದಿನ ತಲೆಮಾರಿನವರು ಸಾಂಪ್ರದಾಯಿಕ ಹಾಗೂ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದರು. ಆದರೆ ಇಂದು ಜಂಕ್‌ ಫುಡ್ ಮತ್ತು ಫಾಸ್ಟ್‌ ಫುಡ್‌ನ ಕ್ಷಣಿಕ ರುಚಿ ಹಾಗೂ ಆಕರ್ಷಣೆಗೆ ಮರುಳಾಗಿ ಯುವಜನರು ತಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಭವಿಷ್ಯದ ಬಗ್ಗೆ ಎಷ್ಟೇ ಕನಸುಗಳನ್ನು ಕಟ್ಟಿಕೊಂಡರೂ ಅವುಗಳನ್ನು ಸಾಕಾರಗೊಳಿಸಲು ಆರೋಗ್ಯಕರ ದೇಹ ಅಗತ್ಯ. ರುಚಿಗೆ ದಾಸರಾಗದೆ ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡಬೇಕು ಎಂದು ಡಾ. ಸಾವಿತ್ರಿ ಬ್ಯಾಡಗಿ ಕಿವಿಮಾತು ಹೇಳಿದರು.

ನವಧಾನ್ಯಗಳು, ತರಕಾರಿಗಳು ಹಾಗೂ ಹಣ್ಣುಗಳನ್ನು ಆಹಾರದಲ್ಲಿ ಹೆಚ್ಚಾಗಿ ಬಳಸಬೇಕು. ಪಾಶ್ಚಾತ್ಯ ಆಹಾರ ಪದ್ಧತಿಯನ್ನು ಅಂಧಾನುಕರಣ ಮಾಡುವ ಬದಲು ಪ್ರೋಟೀನ್, ಕಬ್ಬಿಣಾಂಶ ಹಾಗೂ ವಿಟಮಿನ್‌ಯುಕ್ತ ಸಮತೋಲಿತ ಆಹಾರ ಸೇವಿಸಬೇಕು ಎಂದರು. ಯಾವುದೇ ಆಹಾರ ಪದಾರ್ಥ ಖರೀದಿಸುವ ಮುನ್ನ ಅದರಲ್ಲಿರುವ ಪದಾರ್ಥಗಳು ಹಾಗೂ ಪೋಷಕಾಂಶಗಳ ವಿವರವನ್ನು ಪರಿಶೀಲಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಐ.ಪಿ.ಇ.ಟಿ. ಸಂಸ್ಥೆಯ ಅಧ್ಯಕ್ಷ ಶರಣ್ ರಡ್ಡೇರ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಸಲಹೆ ನೀಡಿದರು. ಜೀವಶಾಸ್ತ್ರ ಉಪನ್ಯಾಸಕಿ ಮಿಸ್ಬಾ ಶಿರಹಟ್ಟಿ ಆಹಾರ ಸಂಸ್ಕರಣೆ ಕುರಿತು ವಿಶೇಷ ಸ್ಲೈಡ್ ಶೋ ಏರ್ಪಡಿಸಿದ್ದು, ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ವಿವರಣಾತ್ಮಕ ಪ್ರದರ್ಶನಗಳನ್ನು ನೀಡಿದರು.

ಕನ್ನಡ ಉಪನ್ಯಾಸಕ ಚಿದಾನಂದಪ್ಪ ಕೊಪ್ಪಳ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪ್ರಾಚಾರ್ಯ ಸಂಗಮೇಶ ಸಿ.ಕೆ., ಉಪಪ್ರಾಚಾರ್ಯ ಪ್ರಶಾಂತಕುಮಾರ ದೊಡ್ಡಮನಿ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು.

ಮೌಲ್ಯಗಳೊಂದಿಗೆ ಸಾಧನೆ ಮಾಡಿದರೆ ಬದುಕು ಸಾರ್ಥಕ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಸಂಸ್ಕೃತಿಯ ಮೌಲ್ಯಗಳು ಜಗತ್ತಿಗೇ ಮಾದರಿಯಾಗಿದ್ದು, ಮಕ್ಕಳು ಬಾಲ್ಯದಲ್ಲಿಯೇ ಹಿರಿಯರ ಮಾರ್ಗದರ್ಶನ ಪಡೆದು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡಬೇಕು ಎಂದು ಚಿಂತಕಿ ಸುರೇಖಾ ರಾಜಣ್ಣ ಮಲ್ಲಾಡದ ಹೇಳಿದರು.

ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂ. ೧೩ರಲ್ಲಿ ಗದಗ ಜಿಲ್ಲಾ ಶರಣ ಸಂಕುಲದ ಶರಣೆ ಅಕ್ಕಮಹಾದೇವಿಯ ಕದಳಿಶ್ರೀ ವೇದಿಕೆ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿದ್ದ ‘ಅಮೃತ ಭೋಜನ-ಜ್ಞಾನ ಸಿಂಚನ’ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿ ಭೋಜನ ಹಾಗೂ ಕಲಿಕಾ ಸಾಮಗ್ರಿ ವಿತರಿಸಿ ಅವರು ಮಾತನಾಡಿದರು.

ಮಕ್ಕಳು ಕೇವಲ ಪಠ್ಯಾಭ್ಯಾಸಕ್ಕೆ ಸೀಮಿತವಾಗದೆ ಶರಣರ ನುಡಿಗಳು, ಅನುಭವಿಗಳ ನುಡಿಮುತ್ತುಗಳು ಹಾಗೂ ಮಹಾನ್ ಸಾಧಕರ ಜೀವನ ಚರಿತ್ರೆಗಳನ್ನು ಓದಿ ತಿಳಿಯಬೇಕು. ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ತಾವೂ ಸಾಧಕರಾಗಬೇಕು ಎಂದು ಸುರೇಖಾ ಮಲ್ಲಾಡದ ಕರೆ ನೀಡಿದರು.

ನಿವೃತ್ತ ಪ್ರಾಚಾರ್ಯ ವೈ.ಎಸ್. ಕೊಂಡಿ ಮಾತನಾಡಿ, ಬಾಲ್ಯದಲ್ಲಿ ಕಲಿತ ವಿಚಾರಗಳು ಜೀವನದುದ್ದಕ್ಕೂ ಉಳಿಯುವುದರಿಂದ ಮಕ್ಕಳ ವ್ಯಕ್ತಿತ್ವ ರೂಪುಗೊಳ್ಳುವಲ್ಲಿ ಬಾಲ್ಯದ ಶಿಕ್ಷಣ ಅತ್ಯಂತ ಮಹತ್ವದ್ದಾಗಿದೆ ಎಂದರು. ಈ ಹಂತದಲ್ಲಿಯೇ ಉತ್ತಮ ಹಾಗೂ ಮೌಲ್ಯಾಧಾರಿತ ಗುಣಗಳನ್ನು ಬೆಳೆಸಿಕೊಂಡು ಹಿರಿಯರಿಗೆ ಗೌರವ ನೀಡಬೇಕು ಎಂದು ಸಲಹೆ ನೀಡಿದರು.

ಅತಿಥಿ ಪಿ.ಎಸ್. ರೋಣದ ಮಾತನಾಡಿ, ಭಾರತೀಯ ಸಂಸ್ಕೃತಿ ಕೇವಲ ಉಡುಗೆ-ತೊಡುಗೆ ಮತ್ತು ಹಬ್ಬ-ಹರಿದಿನಗಳಿಗೆ ಸೀಮಿತವಾಗಿಲ್ಲ. ಪ್ರೀತಿ, ಗೌರವ, ಶಿಸ್ತು, ಸತ್ಯ, ಪ್ರಾಮಾಣಿಕತೆ ಹಾಗೂ ಪರಸ್ಪರ ಸಹಕಾರದಂತಹ ಜೀವನ ಮೌಲ್ಯಗಳೇ ನಮ್ಮ ಸಂಸ್ಕೃತಿಯ ನಿಜವಾದ ಶಕ್ತಿಯಾಗಿವೆ ಎಂದರು.

ವೇದಿಕೆಯ ಸಂಚಾಲಕಿ ಕವಿತಾ ದಂಡಿನ ಪ್ರಾಸ್ತಾವಿಕವಾಗಿ ಮಾತನಾಡಿ, ವೈವಿಧ್ಯತೆಯಲ್ಲಿನ ಏಕತೆಯೇ ಭಾರತೀಯ ಸಂಸ್ಕೃತಿಯ ಪ್ರಮುಖ ವೈಶಿಷ್ಟ್ಯವಾಗಿದೆ. ಆಧುನಿಕ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಅರಿವು ಮಕ್ಕಳಲ್ಲಿ ಮೂಡಿಸುವುದು ಅಗತ್ಯ ಎಂದರು.

ವೇದಿಕೆಯ ಮೇಲೆ ಜ್ಯೋತಿ ಉಮನಾಬಾದಿ, ನಂದೀಶ ಮಲ್ಲಾಡದ ಹಾಗೂ ಸ್ಮೀತಾ ಉಮನಾಬಾದಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅತಿಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಗೌತಮಿ ವಸಂತ ಪಡಗದ ಅವರ ಹುಟ್ಟುಹಬ್ಬದ ಅಂಗವಾಗಿ ಶುಭ ಹಾರೈಸಲಾಯಿತು.

ವಿದ್ಯಾರ್ಥಿಗಳಾದ ರೇವತಿ ಪೂಜಾರ, ಕೌಶಲ್ಯ ಗಡ್ಡದ, ಚೈತ್ರಾ ಮೆಣಸಗಿ, ರೇಣುಕಾ ಜಾಲವಾಡಗಿ ಹಾಗೂ ಪುಟ್ಟರಾಜ ವಚನ ಪ್ರಾರ್ಥನೆ ಸಲ್ಲಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸುಧಾ ಬೇವಿನಮಟ್ಟಿ ಸ್ವಾಗತಿಸಿ ನಿರೂಪಿಸಿದರು. ಶಾರದಾ ಅಂಗಡಿ ವಂದಿಸಿದರು.

Farmers Loan Waiver: ರೈತರ ಸಾಲ ಮನ್ನಾಕ್ಕೆ ಸರ್ವಪಕ್ಷ ನಿಯೋಗ ದೆಹಲಿಗೆ; ಡಿಕೆಶಿ ಮಹತ್ವದ ಘೋಷಣೆ

0

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಪರಿಹಾರ ಮತ್ತು ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ ಎಂದು ಪ್ರಧಾನಮಂತ್ರಿಗಳೇ ಹೇಳಿರುವ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಹಾಗೂ ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಎಲ್ಲ ಪಕ್ಷಗಳ ನಾಯಕರು ತಮ್ಮೊಂದಿಗೆ ದೆಹಲಿಗೆ ಆಗಮಿಸಿ ಕೇಂದ್ರ ಸರ್ಕಾರದ ಬಳಿ ರಾಜ್ಯಕ್ಕೆ ಅಗತ್ಯ ಅನುದಾನ ಹಾಗೂ ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಬೇಕು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

ಬರ ಪರಿಸ್ಥಿತಿ ಚರ್ಚೆಗೆ ವಿಶೇಷ ಅಧಿವೇಶನ:

ರಾಜ್ಯದ ಬರ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ರೈತರ ಸಮಸ್ಯೆ ಹಾಗೂ ಬರ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಚರ್ಚಿಸಲು ವಿಪಕ್ಷಗಳಿಗೆ ಆಸಕ್ತಿ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬರ ಪರಿಸ್ಥಿತಿ ಕುರಿತು ಚರ್ಚಿಸುವ ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಶಾಸಕರೇ ತಮ್ಮ ಬಳಿ ಬಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳು ಹಾಗೂ ರಾಜ್ಯದ ನೈಜ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರತ್ಯೇಕವಾಗಿ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮೂರು ದಿನಗಳ ವಿಶೇಷ ಅಧಿವೇಶನ:

ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲು ರಾಜ್ಯ ಸರ್ಕಾರ ಮೂರು ದಿನಗಳ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನದಲ್ಲಿ ರಾಜ್ಯದ ಬರ ಪರಿಸ್ಥಿತಿ, ರೈತರ ಸಮಸ್ಯೆಗಳು ಹಾಗೂ ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಕುರಿತು ರಾಜ್ಯ ಸರ್ಕಾರ ಸಲ್ಲಿಸಬೇಕಾದ ಆಕ್ಷೇಪಣೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ವಿಶೇಷ ಅಧಿವೇಶನವನ್ನು ಏಳು ದಿನಗಳಿಗೆ ವಿಸ್ತರಿಸಬೇಕೆಂಬ ವಿಪಕ್ಷಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲರ ಅಭಿಪ್ರಾಯವನ್ನು ಆಲಿಸಲಾಗುವುದು. ಎಲ್ಲ ಶಾಸಕರೂ ಜನಪ್ರತಿನಿಧಿಗಳಾಗಿದ್ದು, ಅಧಿವೇಶನದಲ್ಲಿ ಮುಕ್ತವಾಗಿ ಚರ್ಚೆ ನಡೆಯಬೇಕು ಎಂದರು.

‘ಹೊಸ ಬೆಂಗಳೂರು ನಿರ್ಮಾಣಕ್ಕೆ ನೆರವು’:

ನೀತಿ ಆಯೋಗದೊಂದಿಗಿನ ಸಭೆಯಲ್ಲಿ ರಾಜ್ಯಕ್ಕೆ ಅನುದಾನ ಹಂಚಿಕೆ ಸರಿಯಾಗಿ ಆಗಬೇಕು ಎಂದು ಒತ್ತಾಯಿಸಿರುವ ಕುರಿತು ಮಾತನಾಡಿದ ಡಿಕೆಶಿ, ‘ಹೊಸ ಬೆಂಗಳೂರು’ ನಿರ್ಮಾಣದ ಯೋಜನೆ ಕುರಿತು ನೀತಿ ಆಯೋಗದ ಉಪಾಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಹೊಸ ಬೆಂಗಳೂರು ನಿರ್ಮಾಣಕ್ಕೆ ಅಗತ್ಯವಿರುವ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಮತ್ತು ಬೆಂಗಳೂರು ದೇಶಕ್ಕೆ ಬಹಳ ಮುಖ್ಯ ಎಂದು ನೀತಿ ಆಯೋಗದ ಉಪಾಧ್ಯಕ್ಷರು ಹೇಳಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.

ಗದಗ ಜಿಲ್ಲೆಯಲ್ಲಿ 5,805 ನಾಯಿ ಕಡಿತ ಪ್ರಕರಣ : ರೇಬೀಸ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಜುಲೈವರೆಗೆ ಬರೋಬ್ಬರಿ 5,805 ನಾಯಿ ಕಡಿತ ಹಾಗೂ 213 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು, ಸಾಂಕ್ರಾಮಿಕ ಮತ್ತು ಪ್ರಾಣಿಜನ್ಯ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 2ರಂದು ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯಲ್ಲಿ ನೀರಿನಿಂದ ಹರಡುವ, ಲಸಿಕೆಯಿಂದ ತಡೆಯಬಹುದಾದ ಹಾಗೂ ಪ್ರಾಣಿಜನ್ಯ ರೋಗಗಳೊಂದಿಗೆ ಹಾವು ಕಡಿತ ಮತ್ತು ರೇಬೀಸ್ ಮರಣ ಪ್ರಕರಣಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.

ಜನವರಿಯಿಂದ ಜುಲೈವರೆಗೆ ಜಿಲ್ಲೆಯಲ್ಲಿ 2,140 ಕರಳುಬೇನೆ, 33 ಡೆಂಗ್ಯೂ, 8 ಚಿಕೂನ್‌ಗುನ್ಯಾ, 5 ಮಲೇರಿಯಾ, 10 ಆನೆಕಾಲು ರೋಗ ಹಾಗೂ 10 ಇನ್‌ಫ್ಲೂಯೆಂಜಾ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 1,319 ಇತರೆ ಪ್ರಾಣಿ ಕಡಿತ ಪ್ರಕರಣಗಳೂ ವರದಿಯಾಗಿದ್ದು, ಎರಡು ಸಂಶಯಾಸ್ಪದ ರೇಬೀಸ್ ಮರಣ ಹಾಗೂ ಮೂರು ಹಾವು ಕಡಿತ ಮರಣ ಪ್ರಕರಣಗಳು ದಾಖಲಾಗಿವೆ.

ನೀರು ಶುದ್ಧೀಕರಣ, ಪರಿಸರ ಸ್ವಚ್ಛತೆ ಹಾಗೂ ಸೊಳ್ಳೆ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಸೂಚಿಸಲಾಯಿತು. ಸಾರ್ವಜನಿಕರು ಶುದ್ಧ ಕುಡಿಯುವ ನೀರು ಬಳಸುವುದು, ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ಜ್ವರ ಕಾಣಿಸಿಕೊಂಡ ತಕ್ಷಣ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಲಾಯಿತು.

ನಾಯಿ ಅಥವಾ ಇತರೆ ಪ್ರಾಣಿ ಕಚ್ಚಿದರೆ ಗಾಯವನ್ನು ಸಾಬೂನಿನಿಂದ ಹರಿಯುವ ನೀರಿನಲ್ಲಿ ಕನಿಷ್ಠ 15 ನಿಮಿಷ ತೊಳೆದು ತಕ್ಷಣ ಆಸ್ಪತ್ರೆಗೆ ತೆರಳಬೇಕು. ಹಾವು ಕಚ್ಚಿದ ಸಂದರ್ಭದಲ್ಲಿ ನಾಟಿ ಅಥವಾ ಮಾಂತ್ರಿಕ ಚಿಕಿತ್ಸೆಗೆ ಮೊರೆ ಹೋಗದೆ ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡರ, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋಟ್

ಸಾಂಕ್ರಾಮಿಕ ರೋಗಗಳ ತಡೆಗೆ ಎಲ್ಲ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳು, ಹಾವು ಕಡಿತಕ್ಕೆ ಆ್ಯಂಟಿ ಸ್ನೇಕ್ ವೆನಮ್ ಹಾಗೂ ಪ್ರಾಣಿ ಕಡಿತಕ್ಕೆ ಆ್ಯಂಟಿ ರೇಬೀಸ್ ಲಸಿಕೆ ಮತ್ತು ಇಮ್ಯುನೊಗ್ಲೋಬ್ಯುಲಿನ್ ಸಮರ್ಪಕವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು.

-ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿಗಳು

ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಗ್ರಾಮದ ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಿಸಲಾಯಿತು.

ಧೋತಿ, ಕಿರೀಟ, ನವಿಲುಗರಿ ಧರಿಸಿ ಮುದ್ದು ಕೃಷ್ಣನ ವೇಷ ತೊಟ್ಟ ಪುಟಾಣಿಗಳು ಹಾಗೂ ಸಾಂಪ್ರದಾಯಿಕ ಉಡುಗೆಯಲ್ಲಿ ರಾಧೆ ಮತ್ತು ರುಕ್ಮಿಣಿಯರಾಗಿ ಸಿಂಗಾರಗೊಂಡ ಬಾಲಕಿಯರು ನೆರೆದವರ ಗಮನ ಸೆಳೆದರು. ಶಾಲಾ ಆವರಣದಲ್ಲಿ ಪುಟಾಣಿಗಳೇ ಬೃಂದಾವನದ ವಾತಾವರಣ ಸೃಷ್ಟಿಸಿದರು.

ಮುಖ್ಯಶಿಕ್ಷಕಿ ಜ್ಯೋತಿ ಗೌಡರ ಮಾತನಾಡಿ, ಲೋಕ ಕಲ್ಯಾಣಕ್ಕಾಗಿ ಅವತರಿಸಿದ ಶ್ರೀಕೃಷ್ಣನ ಬದುಕು, ಬೋಧನೆಗಳು ಹಾಗೂ ಧರ್ಮದ ಸಂದೇಶಗಳು ಎಲ್ಲರಿಗೂ ಆದರ್ಶಪ್ರಾಯವಾಗಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿಯರಾದ ಗೀತಾ ಕೋಲಾರ, ಶಶಿಕಲಾ ಚಟ್ಟೇರ, ಚೈತ್ರಾ ತಳಕಲ್ಲ, ಲಲಿತಾ ಬಾವಿ, ಮೇಘನಾ ಮುದಕವಿ, ಶಿಲ್ಪಾ ಶಿರೋಳ, ಮಹಾಮಾಯ ಗಂಭೀರ ಸೇರಿದಂತೆ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.